ರಾಜಕೀಯ
ದಾದಾಸಾಹೇಬ್ ಕಾನ್ಷೀರಾಮ್ : ಕೆಲವು ವಿಚಾರಗಳು | ಅಂಬೇಡ್ಕರ್ ಜಯಂತಿಗೆ ರಜೆ ಕ್ಯಾನ್ಸಲ್ ಮಾಡಿದ್ದಕ್ಕೆ ಬಿಎಸ್ಪಿ ಹುಟ್ಟಿಕೊಂಡಿತು..!
- ಆರ್ ಹೆಚ್ ಬಿ
ಅಂಬೇಡ್ಕರ್ ಜಯಂತಿ ದಲಿತರಿಗೆ ಅದೆಷ್ಟು ಮಹತ್ವದ್ದು? ಬಹುಶಃ ಅದು ವರ್ಣಿಸಲಸದಳ. ಅದಕ್ಕೆ ರಜೆ ನೀಡದ್ದಕ್ಕೆ, ನೀಡಿದ್ದ ರಜೆಯನ್ನು ರದ್ದುಮಾಡಿದ್ದಕ್ಕೆ ಒಂದು ಬೃಹತ್ ರಾಜಕೀಯ ಪಕ್ಷವೇ ಹುಟ್ಟಿಕೊಂಡಿತೆಂದರೆ…! ಹೌದು, ಇದು ಸತ್ಯ. ಇತಿಹಾಸಕಾರರು ಗುರುತಿಸಿರುವಂತೆ 1964ರಲ್ಲಿ ಕಾನ್ಷೀರಾಮ್ ರವರು ಅಧಿಕಾರಿಯಾಗಿದ್ದ DRDO ಕಚೇರಿಯಲ್ಲಿ ಆ ವರ್ಷ ಇದ್ದಕ್ಕಿದ್ದಂತೆ ಅಂಬೇಡ್ಕರ್ ಜಯಂತಿ, ಬುದ್ಧ ಜಯಂತಿ ಮತ್ತು ವಾಲ್ಮೀಕಿ ಜಯಂತಿಗಳಿಗೆ ರಜೆ ಕ್ಯಾನ್ಸಲ್ ಮಾಡಲಾಗಿತ್ತು. ಅದರ ಬದಲು ಬೇರೆ ಹಿಂದೂ ಹಬ್ಬಗಳಿಗೆ ರಜೆ ನೀಡಲಾಗಿತ್ತು. ಇದರ ವಿರುದ್ಧ ಸಿಡಿದು ನಿಂತ ಕಾನ್ಷೀರಾಮ್ರವರು ‘ತಮ್ಮ ಕಚೇರಿಯಲ್ಲೇ ಅಂಬೇಡ್ಕರ್ ಜಯಂತಿ ರಜೆ ರದ್ದು ಮಾಡಿದರೆ?’ ಎಂದು ನೌಕರರ ಮುಂದಾಳತ್ವ ವಹಿಸಿ ದೊಡ್ಡ ಹೋರಾಟ ರೂಪಿಸಿದರು. ಪರಿಣಾಮ BAMCEF ನಂತಹ ಬೃಹತ್ ನೌಕರರ ಸಂಘಟನೆ, DS4 ನಂತಹ ಬೃಹತ್ ಹೋರಾಟದ ಹಾದಿ, ಬಿಎಸ್ಪಿಯಂತಹ ರಾಜಕೀಯ ಪಕ್ಷ ಹುಟ್ಟಿಕೊಂಡಿತು. ಈ ನಿಟ್ಟಿನಲ್ಲಿ 1964ರಲ್ಲಿ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಗೊಳಿಸಿಲ್ಲದಿದ್ದರೆ ಕಾನ್ಷೀರಾಮ್ ರವರು ಮದುವೆಯಾಗಿ, ಡಿಆರ್ಡಿಒದಲ್ಲಿ ಓರ್ವ ಸಾಮಾನ್ಯ ಸಂಶೋಧಕನಾಗಿ ಸಾಮಾನ್ಯ ಜೀವನ ನಡೆಸುತ್ತ ಇದ್ದುಬಿಡುತ್ತಿದ್ದರು! ಆದರೆ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಮಾಡಿದ್ದರಿಂದ ಕಾನ್ಷೀರಾಮ್ರೊಳಗೊಬ್ಬ ಹೋರಾಟಗಾರ, ಅಪ್ರತಿಮ ನಾಯಕ ಎದ್ದು ನಿಂತಿದ್ದ. So, that is the power of Ambedkar Jayanthi and power of Kanshiram!
ಪ್ರವಾದಿ ಮಾದರಿಯ ಹುರುಪು
ಕಾನ್ಷೀರಾಮ್ರವರು BAMCEF ಹೆಸರಿನಲ್ಲಿ ನೌಕರರನ್ನು ಸಂಘಟಿಸಿದ್ದು ಎಲ್ಲರಿಗೂ ತಿಳಿದಿದೆ. ತಮ್ಮ ಕನಸನ್ನು ನನಸುಗೊಳಿಸಲು ಸರ್ಕಾರಿ ನೌಕರರನ್ನು ಬಳಸಿಕೊಳ್ಳಬೇಕು ಎಂಬ ಐಡಿಯಾ ಸಾಹೇಬರಿಗೆ ಬಂದದ್ದು 1973ರಲ್ಲಿ. ಆದರೆ ಅದು ಸಾಕಾರಗೊಳ್ಳಲು ಸುಮಾರು ಐದು ವರ್ಷಗಳು ಬೇಕಾಯಿತು. ಈ ಸಂದರ್ಭದಲ್ಲಿ ಸಾಹೇಬರು ನೌಕರರನ್ನು ಸಂಘಟಿಸುವ ಪರಿ ಹೇಗಿತ್ತು? ದಾದಾಸಾಹೇಬರೇ ನೆನೆಪಿಸಿಕೊಳ್ಳುವಂತೆ “ಆಗಾಗ ನಾನು ಸರ್ಕಾರಿ ಕಚೇರಿಗಳಿಗೆ ಭೇಟಿಕೊಡಲು ಹೋದಾಗ ಜನ ನನ್ನನ್ನು ನೋಡಿ ಓ! ಹುಚ್ಚ ಬಂದ ಎಂದು ಓಡಿಹೋಗುತ್ತಿದ್ದರು!” (Views and Interviews of Kanshiram by N.Manohara Prasad, Pp.126) ಆದರೆ ದಾದಾಸಾಹೇಬರ ಪ್ರವಾದಿ ಮಾದರಿಯ ಹುರುಪು ಅವರ ಅನುಯಾಯಿಗಳನ್ನು ಅವರತ್ತ ಸೆಳೆಯಲು ಪ್ರಾರಂಭಿಸಿತು!
ನೌಕರರು ಮೆದುಳಿನ ಬ್ಯಾಂಕುಗಳು!
ಕಾನ್ಷೀರಾಮ್ ರವರು ನೌಕರರಲ್ಲಿ ತಪ್ಪಿತಸ್ಥ ಭಾವನೆಯನ್ನು ತುಂಬಿದರು. ತಾನೆಲ್ಲ ಪಡೆದೆ ತಾನು ಸಮಾಜಕ್ಕೆ ಏನು ಕೊಟ್ಟೆ? ಎಂಬ ಭಾವವದು. ನೌಕರರು ಬರೇ ಹಣಕಾಸು ನೀಡುವುದಷ್ಟೆ ಅಲ್ಲ, ಮುಖ್ಯವಾಗಿ ಕಾನ್ಷೀರಾಮ್ರವರು ನೌಕರರ talent(ಪ್ರತಿಭೆ)ಗಳನ್ನು ಬಳಸಿದರು. ಈ ಬಗ್ಗೆ ಸ್ವತಃ ಕಾನ್ಷೀರಾಮ್ರವರು ಒಂದೆಡೆ “we use them as brain banks” ಎನ್ನುತ್ತಾರೆ. ಅಂದರೆ “ನಾನು ಅವರನ್ನು ಮೆದುಳಿನ ಬ್ಯಾಂಕ್ ಥರ ಬಳಸಿದೆ” ಎಂದರ್ಥ! ಇದಕ್ಕೆ ಅವರು ಕೊಡುವ ವಿವರಣೆ “ಅವರು (ನೌಕರರು) ದೇಶಾದ್ಯಂತ ಹರಡಿದ್ದಾರೆ. ಅವರ ಹಣಕಾಸು ಶಕ್ತಿ ಮತ್ತು ಬುಧ್ಧಿಶಕ್ತಿ ಎರಡೂ ಬೆಲೆಕಟ್ಟಲಾಗದ್ದು”. ಹೌದು, ಕಾನ್ಷೀರಾಮ್ರವರು ಹೇಳಿದ ಮೆದುಳಿನ ಬ್ಯಾಂಕ್; ಶೋಷಿತ ಸಮುದಾಯದ ನೌಕರರ ಬಳಿ ದುಡ್ಡಿದೆ, ಹಾಗೆ ಮೆದುಳಿನಲ್ಲಿ ಅಪಾರ ಬುದ್ಧಿಶಕ್ತಿ ಇದೆ. ಆ ಬುದ್ದಿಶಕ್ತಿಯ ಕಾರಣಕ್ಕೆ ಅವರು ಸರ್ಕಾರಿ ಕಚೇರಿಗಳಿಗೆ ನೌಕರರಾಗಿ ಬಂದಿರುವುದು. ಅಂದಹಾಗೆ ಬುದ್ಧಿಶಕ್ತಿ, ಅದು ಮಾತನಾಡುವ ಶಕ್ತಿ ಇರಬಹುದು, ಸಂಘಟನಾ ಶಕ್ತಿ ಇರಬಹುದು, ಬರೆಯುವ ಶಕ್ತಿ ಇರಬಹುದು, ಇದನ್ನೆಲ್ಲ ಸಮುದಾಯಕ್ಕೆ ವಾಪಸ್ ಕೊಡುವಂತೆ ಸಾಹೇಬರು ಹೇಳಿದರು. ಅದನ್ನೆ pay back to society ಎಂದರು.
ಶಿಕ್ಷಕನ ಕೈಕೆಳಗೆ ಐಎಎಸ್ ಅಧಿಕಾರಿಗಳು!
BAMCEF ಸಂಘಟನೆಯಲ್ಲಿದ್ದಾಗ ಅಲ್ಲಿ ನೌಕರರ ಕೇಡರ್ ಬಗ್ಗೆ ಅಂದರೆ ದರ್ಜೆಯ ಬಗ್ಗೆ ಯಾವುದೇ ತಾರತಮ್ಯವಿರಲಿಲ್ಲ. ಲಕ್ನೋದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “ಕಾನ್ಷೀರಾಮ್ ರವರು ವಿವಿಧ ದರ್ಜೆಯ ನೌಕರರ ನಡುವೆ ಇದ್ದ ಸೇವಾ ಅಂದರೆ ನಾನು ಮೇಲ್ಮಟ್ಟದ ನೌಕರ ಅವನು ತಳಮಟ್ಟದ ನೌಕರ ಎಂಬ ಬೇಲಿಯನ್ನು ಮುರಿದರು. ಹೇಗೆಂದರೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “BAMCEF ನ ಸ್ಥಳೀಯ ಸಂಯೋಜಕನಾದ ಓರ್ವ ಶಿಕ್ಷಕನ ಮನೆಯಲ್ಲಿ ಐಎಎಸ್ ಅಧಿಕಾರಿಗಳೂ ಸೇರಿದಂತೆ ಕಚೇರಿಯ ಹಿರಿಯ ಅಧಿಕಾರಿಗಳೆಲ್ಲ ಆತ್ಮೀಯತೆಯಿಂದ ಸಭೆ ಸೇರುತ್ತಿದ್ದೆವು”.
ಭಾಷಣ ಕೇಳಲೂ ಹಣ ಕೊಡಬೇಕು!
ಕಾನ್ಷೀರಾಮ್ವರಿಗೆ ಪಕ್ಷ ಕಟ್ಟಲು ಇಷ್ಟೊಂದು ದುಡ್ಡು ಎಲ್ಲಿ ಬರುತ್ತದೆ? ಎಂಬುದು ಅಂದಿನ ಪತ್ರಕರ್ತರ ಸಂದೇಹವಾಗಿತ್ತು. ಆಗ ಕೆಲವು ಪತ್ರಕರ್ತರು ಕಾನ್ಷೀರಾಮ್ ರವರು ಅಂದಿನ ಉತ್ತರಪ್ರದೇಶದ ದೊಡ್ಡ ಬಿಸಿನೆಸ್ಮನ್ ಹಾಜಿ ಮಸ್ತಾನ್ ಮಿರ್ಝಿಯವರ ಜೊತೆ ಸಂಪರ್ಕದಲ್ಲಿದ್ದಾರೆ. ಅವರೇ ಇವರಿಗೆ ಹಣ ಕೊಡುವುದು ಎಂದು ಗುಲ್ಲೆಬ್ಬಿಸಿದರು. (ಯಾಕೆಂದರೆ 90ರ ದಶಕದಲ್ಲೇ ಲಕ್ನೋದಲ್ಲಿ ನಡೆದ ರ್ಯಾಲಿಯೊಂದರಲ್ಲಿ ದಾದಾಸಾಹೇಬರು ಜನರನ್ನು ಕರೆತರಲು ಬರೇ ಬಸ್ಸುಗಳಿಗೆ ಖರ್ಚು ಮಾಡಿದ್ದ ಹಣವೇ 22 ಲಕ್ಷ!) ಆಗ ಈ ಹಾಜಿ ಮಸ್ತಾನ್ ಮಿರ್ಝಿಯ ಕಥೆಗೆ ಸಾಹೇಬರು ಹೇಳಿದ್ದು “ಹಾಜಿ ಮಸ್ತಾನ್ ಸಣ್ಣ ವ್ಯಾಪಾರಿ. ಆತ ನನಗೆ ಎಷ್ಟು ಅಂತ ಕೊಡಲಿಕ್ಕೆ ಸಾಧ್ಯ? ನಿಜ ಹೇಳಬೇಕೆಂದರೆ ಭಾರತದ ಯಾವುದೇ ರಾಜಕೀಯ ಪಕ್ಷವೂ ಇಷ್ಟು ಹಣ ಖರ್ಚು ಮಾಡಿಲ್ಲ. ಅಷ್ಟು ಹಣವನ್ನು ನಾನು ಖರ್ಚು ಮಾಡಿದ್ದೇನೆ”. ಹಾಗಿದ್ದರೆ ಇದಕ್ಕೆಲ್ಲ ಹಣ? ಅದಕ್ಕೆ ದಾದಾಸಾಹೇಬರು ಹೇಳುವುದು “ನನಗೆ ವಿವಿಧ ಮೂಲಗಳಿಂದ ಹಣ ಬರುತ್ತದೆ. ಅಂದಹಾಗೆ ಆ ಮೂಲಗಳು ಎಂದೂ ಬತ್ತುವುದೇ ಇಲ್ಲ. ಮುಖ್ಯವಾಗಿ ಸದಸ್ಯತ್ವ ಶುಲ್ಕ ಮತ್ತು ಕಾಲಕಾಲಕ್ಕೆ ಕಾರ್ಯಕರ್ತರು ನೀಡುವ ದೇಣಿಗೆಯಿಂದ ಹಣ ಬರುತ್ತದೆ”. ಇದಲ್ಲದೆ ತಮ್ಮ ಭಾಷಣಗಳಿಗೆ ಕಡೇ ಪಕ್ಷ 52000 ಜನ ಸೇರಲೇಬೇಕು ಎಂದು ತಾಕೀತು ಮಾಡುತ್ತಿದ್ದ ಕಾನ್ಷೀರಾಮ್ರವರು ಕಡ್ಡಾಯವಾಗಿ ತಲಾ ಒಬ್ಬೊಬ್ಬರಿಂದ 1 ರೂನಂತೆ 52000 ಶುಲ್ಕ ವಸೂಲಿ ಮಾಡಿಸುತ್ತಿದ್ದರು! ಇದರ ಬಗ್ಗೆ ಜೋಕ್ ಕಟ್ ಮಾಡುತ್ತಿದ್ದ ಅವರು “ಈ ಮೊತ್ತವನ್ನು ಶೀಘ್ರದಲ್ಲೇ 1 ಲಕ್ಷಕ್ಕೆ ಏರಿಸಬೇಕೆಂದಿದ್ದೇನೆ” ಎನ್ನುತ್ತಿದ್ದರು. ಅಂದರೆ ಅವರು ಏರಿಸುತ್ತಿದ್ದದ್ದು ಬರೇ ಹಣವನ್ನಷ್ಟೆ ಅಲ್ಲ, ಜನರನ್ನೂ ಕೂಡ ಎಂಬುದು ಅಲ್ಲಿ ತಿಳಿಯಬೇಕಾದ ಅಂಶ!
ದಾದಾಸಾಹೇಬರನ್ನು ಸಿಐಎ ಏಜೆಂಟ್ ಎಂದ ಅಂದಿನ ಸರ್ಕಾರ!
ಅಬ್ಬಾ, 1987ರಲ್ಲಿ ಕಾನ್ಷೀರಾಮ್ರವರು ಉತ್ತರಪ್ರದೇಶದ ಬಿಜ್ನೋರ್ ನಿಂದ ಲೋಕಸಭೆಗೆ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಬಿಜ್ನೋರ್ ಜಿಲ್ಲೆ ಪೂರ್ತಿ ಒಂದು ಕರಪತ್ರ ಹಂಚಲಾಗಿತ್ತು ಮತ್ತು ಆ ಕರಪತ್ರದಲ್ಲಿದ್ದದ್ದು ಏನು ಗೊತ್ತೆ? ಕಾನ್ಷೀರಾಮ್ ಸಿಐಎ ಏಜೆಂಟ್ ಎಂದು! ಸಿಐಎ(ಸೆಂಟ್ರಲ್ ಇಂಟೆಲ್ಲೆಜೆನ್ಸಿ ಆಫ್ ಅಮೆರಿಕಾ) ಅದು ಭಾರತದ ‘ರಾ’ ಮತ್ತು ಪಾಕಿಸ್ತಾನದ ಐಎಎಸ್ಐ ನಂತೆ ಅಮೆರಿಕಾದ ಗುಪ್ತಚರ ಇಲಾಖೆ. ಅಂದರೆ ಭಾರತವನ್ನು ದುರ್ಬಲಗೊಳಿಸಲು ಅಮೆರಿಕಾ ಕಳುಹಿಸಿರುವ ಗುಪ್ತಚರ ಇಲಾಖೆಯ ಏಜೆಂಟ್ ಕಾನ್ಷೀರಾಮ್ ಎಂದು ಆ ಕರಪತ್ರದಲ್ಲಿ ಮುದ್ರಿಸಲಾಗಿತ್ತು! ಮತ್ತು ಚುನಾವಣಾ ಆ ಸಮಯದಲ್ಲಿ ಅದನ್ನು ಹಂಚಲಾಗಿತ್ತು. ಈ ಬಗ್ಗೆ ಆಕ್ರೋಶಭರಿತರಾಗಿ ಕಾನ್ಷೀರಾಮ್ರವರು ಹೇಳಿದ್ದು “ನಾನು ಸಿಐಎ ಏಜೆಂಟ್ ಆಗಿದ್ದರೆ ಈ ಸರ್ಕಾರವೇಕೆ ನನ್ನ ವಿರುದ್ಧ ಕ್ರಮ ಜರುಗಿಸಿಲ್ಲ? ಇದು ತೋರಿಸುವುದೇನೆಂದರೆ ಇದು ಹಿಜಡಾಗಳ ಸರ್ಕಾರ!” ಎಂದು.
ಜಾತಿಗಳನ್ನು ಒಗ್ಗೂಡಿಸುವವರು ಜಾತಿವಾದಿಯಾಗಲು ಹೇಗೆ ಸಾಧ್ಯ?
ಒಮ್ಮೆ ಪತ್ರಕರ್ತರು ದಾದಾಸಾಹೇಬರನ್ನು ಕೇಳಿದ್ದು “ಜಾತಿವಾದಿ ಪಕ್ಷವೊಂದನ್ನು ಕಟ್ಟಿರುವ ನಿಮ್ಮಿಂದ ಜಾತಿ ನಿರ್ಮೂಲನೆ ಹೇಗೆ ಸಾಧ್ಯ?” ಎಂದು. ಅದಕ್ಕೆ ಸಾಹೇಬರು ಕೊಟ್ಟ ಉತ್ತರ “ಬಿಎಸ್ಪಿ ಜಾತಿವಾದಿ ಪಕ್ಷವಲ್ಲ. ನಾವು ಈ ದೇಶದ 6000 ಜಾತಿಗಳನ್ನು ಒಗ್ಗೂಡಿಸುತ್ತಿದ್ದೇವೆ ಮತ್ತು ಹೀಗಿರುವಾಗ ನಮ್ಮನ್ನು ನೀವು ಯಾವ ಅರ್ಥದಲ್ಲಿ ಜಾತಿವಾದಿ ಎನ್ನುವಿರಿ?”. ಹೌದು, ದಾದಾಸಾಹೇಬರ ಮಾತಿನಂತೆ ಈ ದೇಶದ ಎಲ್ಲ ಜಾತಿಗಳೂ ಒಗ್ಗೂಡದೆ ಭವ್ಯ ಭಾರತ ನಿರ್ಮಾಣ ಸಾಧ್ಯವಿಲ್ಲ.
ಯತಾಸ್ಥಿತಿವಾದಿ ಗಾಂಧಿ
ಒಮ್ಮೆ ಪತ್ರಕರ್ತರು ಸಾಹೇಬರಿಗೆ “ನಿಮ್ಮ ಕಾರ್ಯಕರ್ತರು ಗಾಂಧಿ ಬಗ್ಗೆ ಇಷ್ಟೊಂದು ಹಗೆತನ ಸಾಧಿಸಲು ಏನು ಕಾರಣ?” ಎಂದರು. ಅದಕ್ಕೆ ದಾದಾಸಾಹೇಬರು ಹೇಳುತ್ತಾರೆ “ಗಾಂಧಿ ಈ ದೇಶದ ಪ್ರತಿಯೊಂದರ ಮೂಲ! ನನಗೆ ಬದಲಾವಣೆ ಬೇಕು, ಡಾ.ಅಂಬೇಡ್ಕರ್ರವರು ಕೂಡ ಬದಲಾವಣೆ ಬಯಸಿದ್ದರು. ಆದರೆ ಗಾಂಧಿ ಯತಾಸ್ಥಿತಿವಾದದ ವಾರಸುದಾರರು. ಅವರಿಗೆ ಶೂದ್ರ ಶೂದ್ರನಾಗೇ ಉಳಿಯಬೇಕು. ಅಂದಹಾಗೆ ಗಾಂಧಿ ಈ ದೇಶವನ್ನು ಇಬ್ಬಾಗಗೊಳಿಸಲು ಏನೇನುಮಾಡಬೇಕೋ ಅದೆಲ್ಲವನ್ನೂ ಮಾಡಿದರು. ಈ ನಿಟ್ಟಿನಲ್ಲಿ ಹೇಳುವುದಾದರೆ ನಾವು ಈ ದೇಶವನ್ನು ಒಗ್ಗೂಡಿಸುವ ದಿಸೆಯಲ್ಲಿ ಕೆಲಸಮಾಡುತ್ತಿದ್ದೇವೆ ಮತ್ತು ಎಲ್ಲ ರೀತಿಯ ಮಾನವ ನಿರ್ಮಿತ ವಿಭಜನೆಗಳನ್ನು ತೊಲಗಿಸುತ್ತೇವೆ”!
ಬಹುಜನ ಸಮಾಜ ಪಕ್ಷವೇ ಯಾಕೆ?
ಈ ಪ್ರಶ್ನೆಗೆ ಕಾನ್ಷೀರಾಮ್ ರವರು ಬರೆಯುತ್ತಾರೆ “ಇಂದು ಭಾರತದಲ್ಲಿ ಏಳು ರಾಷ್ಟ್ರೀಯ ಪಕ್ಷಗಳಿವೆ. ಈ ಎಲ್ಲ ಏಳು ರಾಷ್ಟ್ರೀಯ ಪಕ್ಷಗಳು ಪ್ರಬಲ ಹಿಂದೂ ಜಾತಿಗಳ ಕೈಯಲ್ಲಿವೆ. ಆ ಪ್ರಬಲ ಜಾತಿಗಳವರು ತಮ್ಮ ಆಳ್ವಿಕೆ ಮುಂದುವರೆಸಲು ಮತ್ತು ಹಿತಾಸಕ್ತಿ ಕಾಪಾಡಿಕೊಳ್ಳಲು ಈ ಏಳೂ ಪಕ್ಷಗಳನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ದಲಿತ-ಶೋಷಿತ ಸಮಾಜ ತನ್ನ ಬಳಿ ಶೇ.85 ಮತ ಬ್ಯಾಂಕ್ ಇದ್ದರೂ ಕೂಡ ಅಸಹಾಯಕ ಪರಿಸ್ಥಿತಿಯಲ್ಲಿದೆ. ಇದಕ್ಕಾಗಿ ನನಗೆ ಅನಿಸಿದ್ದೆಂದರೆ ನಾವು ನಮ್ಮದೇ ಆದ ಸ್ವಂತ ರಾಜಕೀಯ ಪಕ್ಷ ಹೊಂದಬೇಕು” ಎಂಬುದು.
ತ್ಯಾಗಕ್ಕೆ ಮತ್ತೊಂದು ಹೆಸರೇ ಕಾನ್ಷೀರಾಮ್
ತ್ಯಾಗ; ಬಹುಶಃ ಈ ಪದ ಕಾನ್ಷೀರಾಮ್ ರವರಿಗೆ ಅನ್ವರ್ಥವಾಗುತ್ತದೆ. ಮಹಾಭಾರತದಲ್ಲಿ ಕರ್ಣ ತನ್ನ ಕಲಶ ಕುಂಡಲಿಗಳನ್ನು ಕೊಟ್ಟು ತನ್ನ ಪ್ರಾಣ ತ್ಯಾಗ ಮಾಡಿದ. ಆದರೆ ದಾದಾಸಾಹೇಬರು? ತಮ್ಮ ನೌಕರಿ, ತಮ್ಮ ಕುಟುಂಬ, ತಮ್ಮ ಬಳಿಯಿದ್ದ ನೌಕರಿಯಿಂದ ಸಂಪಾದಿಸಿದ್ದ ಆ ಹಣ ಮತ್ತು ಆ ನೌಕರಿಯಿಂದ ಮಜಾ ಮಾಡಬಹುದಾಗಿದ್ದ ಆ ಅಮೂಲ್ಯ ಸಮಯ ಎಲ್ಲವನ್ನೂ ತ್ಯಾಗಮಾಡಿದರು. ಸರ್ಕಾರಿ ನೌಕರರಾಗಲು ಎಲ್ಲರೂ ಹಪಹಪಿಸುವುದನ್ನು ನೋಡುತ್ತೇವೆ. ಅದೂ ದಾದಾಸಾಹೇಬರು ಆ ಕಾಲದಲ್ಲೇ ಬಿಎಸ್ಸಿ ಮಾಡಿ ಡಿಆರ್ಡಿಒದಂಥ ಉನ್ನತ ಸಂಸ್ಥೆ ಸೇರಿದ್ದರು. ನಿವೃತ್ತಿಯಾಗುವ ಹೊತ್ತಿಗೆ ಅವರು ಈ ದೇಶದ ದೊಡ್ಡ ವಿಜ್ಞಾನಿಯಾಗಿ ಲಕ್ಷ ಲಕ್ಷ ಗಳಿಸಿ ವೈಭವೋಪೇತ ಜೀವನ ನಡೆಸಬಹುದಿತ್ತು. ಆದರೆ ಶೋಷಿತ ಸಮುದಾಯಕ್ಕೋಸ್ಕರ ಅದನ್ನು ಬಿಟ್ಟದ್ದು, ಶೋಷಿತ ಬಹುಜನರ ಏಳಿಗೆಗಾಗಿ ತಾನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಶಪಥಗೈದದ್ದು, ಅಂತೆಯೇ ನುಡಿದಂತೆ ನಡೆದದ್ದು, ಅಗಾಧವನ್ನು ಸಾಧಿಸಿದ್ದು, ಬಹುಶಃ ಆ ತ್ಯಾಗಕ್ಕೆ ಎಣೆಯಿಲ್ಲ. ವರ್ಣಿಸಲು ಪದಗಳಿಲ್ಲ. ತನ್ನ ಪರಿಮಳವನ್ನು ಪ್ರಪಂಚಕ್ಕೆ ನೀಡಿ ತಾನು ಬಾಡುವ ಸುಂದರ ಹೂವು ಕಾನ್ಷೀರಾಮ್ರವರು. ನಿಂತುಹೋಗಿದ್ದ ಅಂಬೇಡ್ಕರ್ ರಥವನ್ನು 40 ವರ್ಷಗಳ ಕಾಲ ಮುನ್ನಡೆಸಿದರು. ಮರೆತುಹೋಗಬಹುದಾಗಿದ್ದ ಜೈಭೀಮ್ ಅನ್ನು ಬಾನೆತ್ತರಕೆ ಮೊಳಗಿಸಿದರು. ಅವರು ಇಂದು ನಮ್ಮ ನಡುವೆ ಇಲ್ಲದಿರಬಹುದು (ನಿಧನ; ಅಕ್ಟೋಬರ್ 9, 2006). ಆದರೆ ಅವರ ಅಮರ ತ್ಯಾಗ ನಮ್ಮ ನಡುವೆ ಉಳಿಯುತ್ತದೆ… ನಮ್ಮನ್ನು ಸದಾ ಕಾಡುತ್ತದೆ… ಅಶ್ರುತರ್ಪಣದೊಂದಿಗೆ…
ಜೈಭೀಮ್… ಜೈಭಾರತ್… ಜೈಕಾನ್ಷೀರಾಮ್…
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತರ ಉದ್ಘಾಟನೆಗಳು
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ
ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್ಗಾರ್ಡ್ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್ಗಳನ್ನು ಒದಗಿಸಲಾಗುವುದು.
ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ15 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ15 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

