Connect with us

ರಾಜಕೀಯ

ದಾದಾಸಾಹೇಬ್ ಕಾನ್ಷೀರಾಮ್ : ಕೆಲವು ವಿಚಾರಗಳು | ಅಂಬೇಡ್ಕರ್ ಜಯಂತಿಗೆ ರಜೆ ಕ್ಯಾನ್ಸಲ್ ಮಾಡಿದ್ದಕ್ಕೆ ಬಿಎಸ್‍ಪಿ ಹುಟ್ಟಿಕೊಂಡಿತು..!

Published

on

  • ಆರ್ ಹೆಚ್ ಬಿ

ಅಂಬೇಡ್ಕರ್ ಜಯಂತಿ ದಲಿತರಿಗೆ ಅದೆಷ್ಟು ಮಹತ್ವದ್ದು? ಬಹುಶಃ ಅದು ವರ್ಣಿಸಲಸದಳ. ಅದಕ್ಕೆ ರಜೆ ನೀಡದ್ದಕ್ಕೆ, ನೀಡಿದ್ದ ರಜೆಯನ್ನು ರದ್ದುಮಾಡಿದ್ದಕ್ಕೆ ಒಂದು ಬೃಹತ್ ರಾಜಕೀಯ ಪಕ್ಷವೇ ಹುಟ್ಟಿಕೊಂಡಿತೆಂದರೆ…! ಹೌದು, ಇದು ಸತ್ಯ. ಇತಿಹಾಸಕಾರರು ಗುರುತಿಸಿರುವಂತೆ 1964ರಲ್ಲಿ ಕಾನ್ಷೀರಾಮ್ ರವರು ಅಧಿಕಾರಿಯಾಗಿದ್ದ DRDO ಕಚೇರಿಯಲ್ಲಿ ಆ ವರ್ಷ ಇದ್ದಕ್ಕಿದ್ದಂತೆ ಅಂಬೇಡ್ಕರ್ ಜಯಂತಿ, ಬುದ್ಧ ಜಯಂತಿ ಮತ್ತು ವಾಲ್ಮೀಕಿ ಜಯಂತಿಗಳಿಗೆ ರಜೆ ಕ್ಯಾನ್ಸಲ್ ಮಾಡಲಾಗಿತ್ತು. ಅದರ ಬದಲು ಬೇರೆ ಹಿಂದೂ ಹಬ್ಬಗಳಿಗೆ ರಜೆ ನೀಡಲಾಗಿತ್ತು. ಇದರ ವಿರುದ್ಧ ಸಿಡಿದು ನಿಂತ ಕಾನ್ಷೀರಾಮ್‍ರವರು ‘ತಮ್ಮ ಕಚೇರಿಯಲ್ಲೇ ಅಂಬೇಡ್ಕರ್ ಜಯಂತಿ ರಜೆ ರದ್ದು ಮಾಡಿದರೆ?’ ಎಂದು ನೌಕರರ ಮುಂದಾಳತ್ವ ವಹಿಸಿ ದೊಡ್ಡ ಹೋರಾಟ ರೂಪಿಸಿದರು. ಪರಿಣಾಮ BAMCEF ನಂತಹ ಬೃಹತ್ ನೌಕರರ ಸಂಘಟನೆ, DS4 ನಂತಹ ಬೃಹತ್ ಹೋರಾಟದ ಹಾದಿ, ಬಿಎಸ್‍ಪಿಯಂತಹ ರಾಜಕೀಯ ಪಕ್ಷ ಹುಟ್ಟಿಕೊಂಡಿತು. ಈ ನಿಟ್ಟಿನಲ್ಲಿ 1964ರಲ್ಲಿ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಗೊಳಿಸಿಲ್ಲದಿದ್ದರೆ ಕಾನ್ಷೀರಾಮ್ ರವರು ಮದುವೆಯಾಗಿ, ಡಿಆರ್‍ಡಿಒದಲ್ಲಿ ಓರ್ವ ಸಾಮಾನ್ಯ ಸಂಶೋಧಕನಾಗಿ ಸಾಮಾನ್ಯ ಜೀವನ ನಡೆಸುತ್ತ ಇದ್ದುಬಿಡುತ್ತಿದ್ದರು! ಆದರೆ ಅಂಬೇಡ್ಕರ್ ಜಯಂತಿಗೆ ರಜೆ ರದ್ದುಮಾಡಿದ್ದರಿಂದ ಕಾನ್ಷೀರಾಮ್‍ರೊಳಗೊಬ್ಬ ಹೋರಾಟಗಾರ, ಅಪ್ರತಿಮ ನಾಯಕ ಎದ್ದು ನಿಂತಿದ್ದ. So, that is the power of  Ambedkar Jayanthi and power of Kanshiram!

ಪ್ರವಾದಿ ಮಾದರಿಯ ಹುರುಪು

ಕಾನ್ಷೀರಾಮ್‍ರವರು BAMCEF ಹೆಸರಿನಲ್ಲಿ ನೌಕರರನ್ನು ಸಂಘಟಿಸಿದ್ದು ಎಲ್ಲರಿಗೂ ತಿಳಿದಿದೆ. ತಮ್ಮ ಕನಸನ್ನು ನನಸುಗೊಳಿಸಲು ಸರ್ಕಾರಿ ನೌಕರರನ್ನು ಬಳಸಿಕೊಳ್ಳಬೇಕು ಎಂಬ ಐಡಿಯಾ ಸಾಹೇಬರಿಗೆ ಬಂದದ್ದು 1973ರಲ್ಲಿ. ಆದರೆ ಅದು ಸಾಕಾರಗೊಳ್ಳಲು ಸುಮಾರು ಐದು ವರ್ಷಗಳು ಬೇಕಾಯಿತು. ಈ ಸಂದರ್ಭದಲ್ಲಿ ಸಾಹೇಬರು ನೌಕರರನ್ನು ಸಂಘಟಿಸುವ ಪರಿ ಹೇಗಿತ್ತು? ದಾದಾಸಾಹೇಬರೇ ನೆನೆಪಿಸಿಕೊಳ್ಳುವಂತೆ “ಆಗಾಗ ನಾನು ಸರ್ಕಾರಿ ಕಚೇರಿಗಳಿಗೆ ಭೇಟಿಕೊಡಲು ಹೋದಾಗ ಜನ ನನ್ನನ್ನು ನೋಡಿ ಓ! ಹುಚ್ಚ ಬಂದ ಎಂದು ಓಡಿಹೋಗುತ್ತಿದ್ದರು!” (Views and Interviews of Kanshiram by N.Manohara Prasad, Pp.126) ಆದರೆ ದಾದಾಸಾಹೇಬರ ಪ್ರವಾದಿ ಮಾದರಿಯ ಹುರುಪು ಅವರ ಅನುಯಾಯಿಗಳನ್ನು ಅವರತ್ತ ಸೆಳೆಯಲು ಪ್ರಾರಂಭಿಸಿತು!

ನೌಕರರು ಮೆದುಳಿನ ಬ್ಯಾಂಕುಗಳು!

ಕಾನ್ಷೀರಾಮ್ ರವರು ನೌಕರರಲ್ಲಿ ತಪ್ಪಿತಸ್ಥ ಭಾವನೆಯನ್ನು ತುಂಬಿದರು. ತಾನೆಲ್ಲ ಪಡೆದೆ ತಾನು ಸಮಾಜಕ್ಕೆ ಏನು ಕೊಟ್ಟೆ? ಎಂಬ ಭಾವವದು.  ನೌಕರರು ಬರೇ ಹಣಕಾಸು ನೀಡುವುದಷ್ಟೆ ಅಲ್ಲ, ಮುಖ್ಯವಾಗಿ ಕಾನ್ಷೀರಾಮ್‍ರವರು ನೌಕರರ talent(ಪ್ರತಿಭೆ)ಗಳನ್ನು ಬಳಸಿದರು. ಈ ಬಗ್ಗೆ ಸ್ವತಃ ಕಾನ್ಷೀರಾಮ್‍ರವರು ಒಂದೆಡೆ “we use them as brain banks”  ಎನ್ನುತ್ತಾರೆ. ಅಂದರೆ “ನಾನು ಅವರನ್ನು ಮೆದುಳಿನ ಬ್ಯಾಂಕ್ ಥರ ಬಳಸಿದೆ” ಎಂದರ್ಥ! ಇದಕ್ಕೆ ಅವರು ಕೊಡುವ ವಿವರಣೆ “ಅವರು (ನೌಕರರು) ದೇಶಾದ್ಯಂತ ಹರಡಿದ್ದಾರೆ. ಅವರ ಹಣಕಾಸು ಶಕ್ತಿ ಮತ್ತು ಬುಧ್ಧಿಶಕ್ತಿ ಎರಡೂ ಬೆಲೆಕಟ್ಟಲಾಗದ್ದು”. ಹೌದು, ಕಾನ್ಷೀರಾಮ್‍ರವರು ಹೇಳಿದ ಮೆದುಳಿನ ಬ್ಯಾಂಕ್; ಶೋಷಿತ ಸಮುದಾಯದ ನೌಕರರ ಬಳಿ ದುಡ್ಡಿದೆ, ಹಾಗೆ ಮೆದುಳಿನಲ್ಲಿ ಅಪಾರ ಬುದ್ಧಿಶಕ್ತಿ ಇದೆ. ಆ ಬುದ್ದಿಶಕ್ತಿಯ ಕಾರಣಕ್ಕೆ ಅವರು ಸರ್ಕಾರಿ ಕಚೇರಿಗಳಿಗೆ ನೌಕರರಾಗಿ ಬಂದಿರುವುದು. ಅಂದಹಾಗೆ ಬುದ್ಧಿಶಕ್ತಿ, ಅದು ಮಾತನಾಡುವ ಶಕ್ತಿ ಇರಬಹುದು, ಸಂಘಟನಾ ಶಕ್ತಿ ಇರಬಹುದು, ಬರೆಯುವ ಶಕ್ತಿ ಇರಬಹುದು, ಇದನ್ನೆಲ್ಲ ಸಮುದಾಯಕ್ಕೆ ವಾಪಸ್ ಕೊಡುವಂತೆ ಸಾಹೇಬರು ಹೇಳಿದರು. ಅದನ್ನೆ pay back to society ಎಂದರು.

ಶಿಕ್ಷಕನ ಕೈಕೆಳಗೆ ಐಎಎಸ್ ಅಧಿಕಾರಿಗಳು!

BAMCEF ಸಂಘಟನೆಯಲ್ಲಿದ್ದಾಗ ಅಲ್ಲಿ ನೌಕರರ ಕೇಡರ್ ಬಗ್ಗೆ ಅಂದರೆ ದರ್ಜೆಯ ಬಗ್ಗೆ ಯಾವುದೇ ತಾರತಮ್ಯವಿರಲಿಲ್ಲ. ಲಕ್ನೋದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “ಕಾನ್ಷೀರಾಮ್ ರವರು ವಿವಿಧ ದರ್ಜೆಯ ನೌಕರರ ನಡುವೆ ಇದ್ದ ಸೇವಾ ಅಂದರೆ ನಾನು ಮೇಲ್ಮಟ್ಟದ ನೌಕರ ಅವನು ತಳಮಟ್ಟದ ನೌಕರ ಎಂಬ ಬೇಲಿಯನ್ನು ಮುರಿದರು. ಹೇಗೆಂದರೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ “BAMCEF ನ ಸ್ಥಳೀಯ ಸಂಯೋಜಕನಾದ ಓರ್ವ ಶಿಕ್ಷಕನ ಮನೆಯಲ್ಲಿ ಐಎಎಸ್ ಅಧಿಕಾರಿಗಳೂ ಸೇರಿದಂತೆ ಕಚೇರಿಯ ಹಿರಿಯ ಅಧಿಕಾರಿಗಳೆಲ್ಲ ಆತ್ಮೀಯತೆಯಿಂದ ಸಭೆ ಸೇರುತ್ತಿದ್ದೆವು”.

ಭಾಷಣ ಕೇಳಲೂ ಹಣ ಕೊಡಬೇಕು!

ಕಾನ್ಷೀರಾಮ್‍ವರಿಗೆ ಪಕ್ಷ ಕಟ್ಟಲು ಇಷ್ಟೊಂದು ದುಡ್ಡು ಎಲ್ಲಿ ಬರುತ್ತದೆ? ಎಂಬುದು ಅಂದಿನ ಪತ್ರಕರ್ತರ ಸಂದೇಹವಾಗಿತ್ತು. ಆಗ ಕೆಲವು ಪತ್ರಕರ್ತರು ಕಾನ್ಷೀರಾಮ್ ರವರು ಅಂದಿನ ಉತ್ತರಪ್ರದೇಶದ ದೊಡ್ಡ ಬಿಸಿನೆಸ್‍ಮನ್ ಹಾಜಿ ಮಸ್ತಾನ್ ಮಿರ್ಝಿಯವರ ಜೊತೆ ಸಂಪರ್ಕದಲ್ಲಿದ್ದಾರೆ. ಅವರೇ ಇವರಿಗೆ ಹಣ ಕೊಡುವುದು ಎಂದು ಗುಲ್ಲೆಬ್ಬಿಸಿದರು. (ಯಾಕೆಂದರೆ 90ರ ದಶಕದಲ್ಲೇ ಲಕ್ನೋದಲ್ಲಿ ನಡೆದ ರ್ಯಾಲಿಯೊಂದರಲ್ಲಿ ದಾದಾಸಾಹೇಬರು ಜನರನ್ನು ಕರೆತರಲು ಬರೇ ಬಸ್ಸುಗಳಿಗೆ ಖರ್ಚು ಮಾಡಿದ್ದ ಹಣವೇ 22 ಲಕ್ಷ!) ಆಗ ಈ ಹಾಜಿ ಮಸ್ತಾನ್ ಮಿರ್ಝಿಯ ಕಥೆಗೆ ಸಾಹೇಬರು ಹೇಳಿದ್ದು “ಹಾಜಿ ಮಸ್ತಾನ್ ಸಣ್ಣ ವ್ಯಾಪಾರಿ. ಆತ ನನಗೆ ಎಷ್ಟು ಅಂತ ಕೊಡಲಿಕ್ಕೆ ಸಾಧ್ಯ? ನಿಜ ಹೇಳಬೇಕೆಂದರೆ ಭಾರತದ ಯಾವುದೇ ರಾಜಕೀಯ ಪಕ್ಷವೂ ಇಷ್ಟು ಹಣ ಖರ್ಚು ಮಾಡಿಲ್ಲ. ಅಷ್ಟು ಹಣವನ್ನು ನಾನು ಖರ್ಚು ಮಾಡಿದ್ದೇನೆ”. ಹಾಗಿದ್ದರೆ ಇದಕ್ಕೆಲ್ಲ ಹಣ? ಅದಕ್ಕೆ ದಾದಾಸಾಹೇಬರು ಹೇಳುವುದು “ನನಗೆ ವಿವಿಧ ಮೂಲಗಳಿಂದ ಹಣ ಬರುತ್ತದೆ. ಅಂದಹಾಗೆ ಆ ಮೂಲಗಳು ಎಂದೂ ಬತ್ತುವುದೇ ಇಲ್ಲ. ಮುಖ್ಯವಾಗಿ ಸದಸ್ಯತ್ವ ಶುಲ್ಕ ಮತ್ತು ಕಾಲಕಾಲಕ್ಕೆ ಕಾರ್ಯಕರ್ತರು ನೀಡುವ ದೇಣಿಗೆಯಿಂದ ಹಣ ಬರುತ್ತದೆ”. ಇದಲ್ಲದೆ ತಮ್ಮ ಭಾಷಣಗಳಿಗೆ ಕಡೇ ಪಕ್ಷ 52000 ಜನ ಸೇರಲೇಬೇಕು ಎಂದು ತಾಕೀತು ಮಾಡುತ್ತಿದ್ದ ಕಾನ್ಷೀರಾಮ್‍ರವರು ಕಡ್ಡಾಯವಾಗಿ ತಲಾ ಒಬ್ಬೊಬ್ಬರಿಂದ 1 ರೂನಂತೆ 52000 ಶುಲ್ಕ ವಸೂಲಿ ಮಾಡಿಸುತ್ತಿದ್ದರು! ಇದರ ಬಗ್ಗೆ ಜೋಕ್ ಕಟ್ ಮಾಡುತ್ತಿದ್ದ ಅವರು “ಈ ಮೊತ್ತವನ್ನು ಶೀಘ್ರದಲ್ಲೇ 1 ಲಕ್ಷಕ್ಕೆ ಏರಿಸಬೇಕೆಂದಿದ್ದೇನೆ” ಎನ್ನುತ್ತಿದ್ದರು. ಅಂದರೆ ಅವರು ಏರಿಸುತ್ತಿದ್ದದ್ದು ಬರೇ ಹಣವನ್ನಷ್ಟೆ ಅಲ್ಲ, ಜನರನ್ನೂ ಕೂಡ ಎಂಬುದು ಅಲ್ಲಿ ತಿಳಿಯಬೇಕಾದ ಅಂಶ!

ದಾದಾಸಾಹೇಬರನ್ನು ಸಿಐಎ ಏಜೆಂಟ್ ಎಂದ ಅಂದಿನ ಸರ್ಕಾರ!

ಅಬ್ಬಾ, 1987ರಲ್ಲಿ ಕಾನ್ಷೀರಾಮ್‍ರವರು ಉತ್ತರಪ್ರದೇಶದ ಬಿಜ್ನೋರ್ ನಿಂದ ಲೋಕಸಭೆಗೆ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಬಿಜ್ನೋರ್ ಜಿಲ್ಲೆ ಪೂರ್ತಿ ಒಂದು ಕರಪತ್ರ ಹಂಚಲಾಗಿತ್ತು ಮತ್ತು ಆ ಕರಪತ್ರದಲ್ಲಿದ್ದದ್ದು ಏನು ಗೊತ್ತೆ? ಕಾನ್ಷೀರಾಮ್ ಸಿಐಎ ಏಜೆಂಟ್ ಎಂದು! ಸಿಐಎ(ಸೆಂಟ್ರಲ್ ಇಂಟೆಲ್ಲೆಜೆನ್ಸಿ ಆಫ್ ಅಮೆರಿಕಾ) ಅದು ಭಾರತದ ‘ರಾ’ ಮತ್ತು ಪಾಕಿಸ್ತಾನದ ಐಎಎಸ್‍ಐ ನಂತೆ ಅಮೆರಿಕಾದ ಗುಪ್ತಚರ ಇಲಾಖೆ. ಅಂದರೆ ಭಾರತವನ್ನು ದುರ್ಬಲಗೊಳಿಸಲು ಅಮೆರಿಕಾ ಕಳುಹಿಸಿರುವ ಗುಪ್ತಚರ ಇಲಾಖೆಯ ಏಜೆಂಟ್ ಕಾನ್ಷೀರಾಮ್ ಎಂದು ಆ ಕರಪತ್ರದಲ್ಲಿ ಮುದ್ರಿಸಲಾಗಿತ್ತು! ಮತ್ತು ಚುನಾವಣಾ ಆ ಸಮಯದಲ್ಲಿ ಅದನ್ನು ಹಂಚಲಾಗಿತ್ತು. ಈ ಬಗ್ಗೆ ಆಕ್ರೋಶಭರಿತರಾಗಿ ಕಾನ್ಷೀರಾಮ್‍ರವರು ಹೇಳಿದ್ದು “ನಾನು ಸಿಐಎ ಏಜೆಂಟ್ ಆಗಿದ್ದರೆ ಈ ಸರ್ಕಾರವೇಕೆ ನನ್ನ ವಿರುದ್ಧ ಕ್ರಮ ಜರುಗಿಸಿಲ್ಲ? ಇದು ತೋರಿಸುವುದೇನೆಂದರೆ ಇದು ಹಿಜಡಾಗಳ ಸರ್ಕಾರ!” ಎಂದು.

ಜಾತಿಗಳನ್ನು ಒಗ್ಗೂಡಿಸುವವರು ಜಾತಿವಾದಿಯಾಗಲು ಹೇಗೆ ಸಾಧ್ಯ?

ಒಮ್ಮೆ ಪತ್ರಕರ್ತರು ದಾದಾಸಾಹೇಬರನ್ನು ಕೇಳಿದ್ದು “ಜಾತಿವಾದಿ ಪಕ್ಷವೊಂದನ್ನು ಕಟ್ಟಿರುವ ನಿಮ್ಮಿಂದ ಜಾತಿ ನಿರ್ಮೂಲನೆ ಹೇಗೆ ಸಾಧ್ಯ?” ಎಂದು. ಅದಕ್ಕೆ ಸಾಹೇಬರು ಕೊಟ್ಟ ಉತ್ತರ “ಬಿಎಸ್‍ಪಿ ಜಾತಿವಾದಿ ಪಕ್ಷವಲ್ಲ. ನಾವು ಈ ದೇಶದ 6000 ಜಾತಿಗಳನ್ನು ಒಗ್ಗೂಡಿಸುತ್ತಿದ್ದೇವೆ ಮತ್ತು ಹೀಗಿರುವಾಗ ನಮ್ಮನ್ನು ನೀವು ಯಾವ ಅರ್ಥದಲ್ಲಿ ಜಾತಿವಾದಿ ಎನ್ನುವಿರಿ?”. ಹೌದು, ದಾದಾಸಾಹೇಬರ ಮಾತಿನಂತೆ ಈ ದೇಶದ ಎಲ್ಲ ಜಾತಿಗಳೂ ಒಗ್ಗೂಡದೆ ಭವ್ಯ ಭಾರತ ನಿರ್ಮಾಣ ಸಾಧ್ಯವಿಲ್ಲ.

ಯತಾಸ್ಥಿತಿವಾದಿ ಗಾಂಧಿ

ಒಮ್ಮೆ ಪತ್ರಕರ್ತರು ಸಾಹೇಬರಿಗೆ “ನಿಮ್ಮ ಕಾರ್ಯಕರ್ತರು ಗಾಂಧಿ ಬಗ್ಗೆ ಇಷ್ಟೊಂದು ಹಗೆತನ ಸಾಧಿಸಲು ಏನು ಕಾರಣ?” ಎಂದರು. ಅದಕ್ಕೆ ದಾದಾಸಾಹೇಬರು ಹೇಳುತ್ತಾರೆ “ಗಾಂಧಿ ಈ ದೇಶದ ಪ್ರತಿಯೊಂದರ ಮೂಲ! ನನಗೆ ಬದಲಾವಣೆ ಬೇಕು, ಡಾ.ಅಂಬೇಡ್ಕರ್‍ರವರು ಕೂಡ ಬದಲಾವಣೆ ಬಯಸಿದ್ದರು. ಆದರೆ ಗಾಂಧಿ ಯತಾಸ್ಥಿತಿವಾದದ ವಾರಸುದಾರರು. ಅವರಿಗೆ ಶೂದ್ರ ಶೂದ್ರನಾಗೇ ಉಳಿಯಬೇಕು. ಅಂದಹಾಗೆ ಗಾಂಧಿ ಈ ದೇಶವನ್ನು ಇಬ್ಬಾಗಗೊಳಿಸಲು ಏನೇನುಮಾಡಬೇಕೋ ಅದೆಲ್ಲವನ್ನೂ ಮಾಡಿದರು. ಈ ನಿಟ್ಟಿನಲ್ಲಿ ಹೇಳುವುದಾದರೆ ನಾವು ಈ ದೇಶವನ್ನು ಒಗ್ಗೂಡಿಸುವ ದಿಸೆಯಲ್ಲಿ ಕೆಲಸಮಾಡುತ್ತಿದ್ದೇವೆ ಮತ್ತು ಎಲ್ಲ ರೀತಿಯ ಮಾನವ ನಿರ್ಮಿತ ವಿಭಜನೆಗಳನ್ನು ತೊಲಗಿಸುತ್ತೇವೆ”!

ಬಹುಜನ ಸಮಾಜ ಪಕ್ಷವೇ ಯಾಕೆ?

ಈ ಪ್ರಶ್ನೆಗೆ ಕಾನ್ಷೀರಾಮ್ ರವರು ಬರೆಯುತ್ತಾರೆ “ಇಂದು ಭಾರತದಲ್ಲಿ ಏಳು ರಾಷ್ಟ್ರೀಯ ಪಕ್ಷಗಳಿವೆ. ಈ ಎಲ್ಲ ಏಳು ರಾಷ್ಟ್ರೀಯ ಪಕ್ಷಗಳು ಪ್ರಬಲ ಹಿಂದೂ ಜಾತಿಗಳ ಕೈಯಲ್ಲಿವೆ. ಆ ಪ್ರಬಲ ಜಾತಿಗಳವರು ತಮ್ಮ ಆಳ್ವಿಕೆ ಮುಂದುವರೆಸಲು ಮತ್ತು ಹಿತಾಸಕ್ತಿ ಕಾಪಾಡಿಕೊಳ್ಳಲು ಈ ಏಳೂ ಪಕ್ಷಗಳನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ದಲಿತ-ಶೋಷಿತ ಸಮಾಜ ತನ್ನ ಬಳಿ ಶೇ.85 ಮತ ಬ್ಯಾಂಕ್ ಇದ್ದರೂ ಕೂಡ ಅಸಹಾಯಕ ಪರಿಸ್ಥಿತಿಯಲ್ಲಿದೆ. ಇದಕ್ಕಾಗಿ ನನಗೆ ಅನಿಸಿದ್ದೆಂದರೆ ನಾವು ನಮ್ಮದೇ ಆದ ಸ್ವಂತ ರಾಜಕೀಯ ಪಕ್ಷ ಹೊಂದಬೇಕು” ಎಂಬುದು.

ತ್ಯಾಗಕ್ಕೆ ಮತ್ತೊಂದು ಹೆಸರೇ ಕಾನ್ಷೀರಾಮ್

ತ್ಯಾಗ; ಬಹುಶಃ ಈ ಪದ ಕಾನ್ಷೀರಾಮ್ ರವರಿಗೆ ಅನ್ವರ್ಥವಾಗುತ್ತದೆ. ಮಹಾಭಾರತದಲ್ಲಿ ಕರ್ಣ ತನ್ನ ಕಲಶ ಕುಂಡಲಿಗಳನ್ನು ಕೊಟ್ಟು ತನ್ನ ಪ್ರಾಣ ತ್ಯಾಗ ಮಾಡಿದ. ಆದರೆ ದಾದಾಸಾಹೇಬರು? ತಮ್ಮ ನೌಕರಿ, ತಮ್ಮ ಕುಟುಂಬ, ತಮ್ಮ ಬಳಿಯಿದ್ದ ನೌಕರಿಯಿಂದ ಸಂಪಾದಿಸಿದ್ದ ಆ ಹಣ ಮತ್ತು ಆ ನೌಕರಿಯಿಂದ ಮಜಾ ಮಾಡಬಹುದಾಗಿದ್ದ ಆ ಅಮೂಲ್ಯ ಸಮಯ ಎಲ್ಲವನ್ನೂ ತ್ಯಾಗಮಾಡಿದರು. ಸರ್ಕಾರಿ ನೌಕರರಾಗಲು ಎಲ್ಲರೂ ಹಪಹಪಿಸುವುದನ್ನು ನೋಡುತ್ತೇವೆ. ಅದೂ ದಾದಾಸಾಹೇಬರು ಆ ಕಾಲದಲ್ಲೇ ಬಿಎಸ್ಸಿ ಮಾಡಿ ಡಿಆರ್‍ಡಿಒದಂಥ ಉನ್ನತ ಸಂಸ್ಥೆ ಸೇರಿದ್ದರು. ನಿವೃತ್ತಿಯಾಗುವ ಹೊತ್ತಿಗೆ ಅವರು ಈ ದೇಶದ ದೊಡ್ಡ ವಿಜ್ಞಾನಿಯಾಗಿ ಲಕ್ಷ ಲಕ್ಷ ಗಳಿಸಿ ವೈಭವೋಪೇತ ಜೀವನ ನಡೆಸಬಹುದಿತ್ತು. ಆದರೆ ಶೋಷಿತ ಸಮುದಾಯಕ್ಕೋಸ್ಕರ ಅದನ್ನು ಬಿಟ್ಟದ್ದು, ಶೋಷಿತ ಬಹುಜನರ ಏಳಿಗೆಗಾಗಿ ತಾನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಶಪಥಗೈದದ್ದು, ಅಂತೆಯೇ ನುಡಿದಂತೆ ನಡೆದದ್ದು, ಅಗಾಧವನ್ನು ಸಾಧಿಸಿದ್ದು, ಬಹುಶಃ ಆ ತ್ಯಾಗಕ್ಕೆ ಎಣೆಯಿಲ್ಲ. ವರ್ಣಿಸಲು ಪದಗಳಿಲ್ಲ. ತನ್ನ ಪರಿಮಳವನ್ನು ಪ್ರಪಂಚಕ್ಕೆ ನೀಡಿ ತಾನು ಬಾಡುವ ಸುಂದರ ಹೂವು ಕಾನ್ಷೀರಾಮ್‍ರವರು. ನಿಂತುಹೋಗಿದ್ದ ಅಂಬೇಡ್ಕರ್ ರಥವನ್ನು 40 ವರ್ಷಗಳ ಕಾಲ ಮುನ್ನಡೆಸಿದರು. ಮರೆತುಹೋಗಬಹುದಾಗಿದ್ದ ಜೈಭೀಮ್ ಅನ್ನು ಬಾನೆತ್ತರಕೆ ಮೊಳಗಿಸಿದರು. ಅವರು ಇಂದು ನಮ್ಮ ನಡುವೆ ಇಲ್ಲದಿರಬಹುದು (ನಿಧನ; ಅಕ್ಟೋಬರ್ 9, 2006). ಆದರೆ ಅವರ ಅಮರ ತ್ಯಾಗ ನಮ್ಮ ನಡುವೆ ಉಳಿಯುತ್ತದೆ… ನಮ್ಮನ್ನು ಸದಾ ಕಾಡುತ್ತದೆ… ಅಶ್ರುತರ್ಪಣದೊಂದಿಗೆ…
ಜೈಭೀಮ್… ಜೈಭಾರತ್… ಜೈಕಾನ್ಷೀರಾಮ್…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

Published

on

ಮೇಲ್ಭದ್ರ ನೀರಿಗಾಗಿ ದಾವಣಗೆರೆ ಬಂದ್‌: ಗುಟ್ಕಾ–ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ, ನಗರದಲ್ಲಿ ಪ್ರತಿಭಟನೆ ಕಾವು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.

http://Visit : www.suddidina.com

davangere-bandh-upper-bhadra-water-release-gutka-pan-masala-ban-protest-renukacharya

ಗುಟ್ಕಾ, ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ

ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್‌ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.

https://x.com/ians_india/status/2094602342230528256

ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ

ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.

ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?

ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.

ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್‌ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.

ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್‌ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್‌ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

Published

on

Prajaseva Abhiyana: ಇನ್ಮುಂದೆ ಕಚೇರಿಗೆ ಅಲೆದಾಟ ಬೇಡ; ಜನರ ಮನೆ ಬಾಗಿಲಿಗೇ ಸರ್ಕಾರ, ಸೆ.5ರಿಂದ ‘ಪ್ರಜಾಸೇವಾ’ಗೆ ಚಾಲನೆ!

ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.

ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.

ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ

  • ಸೆಪ್ಟೆಂಬರ್ 5ರಿಂದ ಕೂಡ್ಲಿಗಿಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ
  • ಪ್ರತಿ ಶನಿವಾರ ತಾಲ್ಲೂಕು/ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ
  • ಬುಧವಾರ ತಾಲ್ಲೂಕು, ಉಪವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿ ಮೂರು ಹಂತದ ಪರಿಶೀಲನೆ
  • ಗ್ರಾಮ ಒನ್ ಕೇಂದ್ರ ಹಾಗೂ ಸಭಾ ಸ್ಥಳದಲ್ಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ
  • 1902 ಸಹಾಯವಾಣಿ ಮತ್ತು IPGRS ಮೂಲಕ ಕುಂದುಕೊರತೆ ದಾಖಲಿಸುವ ಅವಕಾಶ

http://Visit : www.suddidina.com

ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ

ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.

ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.

ಗ್ರಾಮ ಒನ್‌ನಲ್ಲೇ ಅರ್ಜಿ ಸಲ್ಲಿಕೆ

ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.

ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.

ಬುಧವಾರ ಮೂರು ಹಂತದ ಪರಿಶೀಲನೆ

ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.

ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.

ಸ್ಥಳದಲ್ಲೇ ಮಂಜೂರಾತಿ, ಆನ್‌ಲೈನ್‌ನಲ್ಲಿ ಸ್ಥಿತಿ

ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.

ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.

ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ

ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

Continue Reading

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading

Trending