ಬಹಿರಂಗ
ಸಂವಿಧಾನ ಸೃಷ್ಟಿಯ ಕತೆ
- ರಘೋತ್ತಮ ಹೊ.ಬ
Constituent Assembly ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ; 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿದರು. ಆ ಸಮಿತಿಯ ಹೆಸರು ‘ಕ್ಯಾಬಿನೆಟ್ ಮಿಷನ್ ಆಯೋಗ’. ಸದರಿ ಆಯೋಗವು 1946 ಮಾರ್ಚ್ 16 ರಂದು ‘ಭವಿಷ್ಯದ ಭಾರತದ ಸರ್ಕಾರಕ್ಕಾಗಿ ಒಂದು ಸಂವಿಧಾನ ರಚಿಸಲು ಸಂವಿಧಾನ ಸಭೆಯೊಂದನ್ನು ರಚಿಸುವ ಅಗತ್ಯವಿದೆ’ ಎಂದು ಘೋಷಿಸಿತು. ಅಂತೆಯೇ ಆ ಸಭೆ ಪ್ರಜಾಸತ್ತಾತ್ಮಕವಾಗಿರಬೇಕೆಂಬ ನಿಟ್ಟಿನಲ್ಲಿ ವಿವಿಧ ಪ್ರಾಂತ್ಯಗಳ ಅಸೆಂಬ್ಲಿಗಳ ಮೂಲಕ ಸದಸ್ಯರನ್ನು ಆರಿಸಲಾಯಿತು. ಅಂದಹಾಗೆ ಆ ಸಭೆಗೆ ಭಾರತದ ಪಶ್ಚಿಮದ ತುದಿ ಬಾಂಬೆ ಪ್ರಾಂತ್ಯದಿಂದ ಸ್ಪರ್ಧಿಸಿದ್ದ ಅಂಬೇಡ್ಕರರು ಕಾಂಗ್ರೆಸ್ಸಿನ ಅವಿಚ್ಛಿನ್ನ ವಿರೋಧದಿಂದ ಸೋಲಬೇಕಾಯಿತು. ಆದರೂ, ಎದೆಗುಂದದೆ ಪೂರ್ವದ ದೂರದ ಬಂಗಾಳದಿಂದ ಅಲ್ಲಿಯ ಪರಿಶಿಷ್ಟ ಜಾತಿಯ ನಾಯಕ ಜೋಗೇಂದ್ರನಾಥ ಮಂಡಲ್ರ ಬೆಂಬಲದ ಮೂಲಕ ಅವರು ಸಂವಿಧಾನ ಸಭೆಗೆ ಆರಿಸಿಬರುವಲ್ಲಿ ಸಫಲರಾರದು. ಒಟ್ಟಾರೆ 296 ಸದಸ್ಯ ಬಲದ ಮೂಲಕ ಸಂವಿಧಾನ ಸಭೆ ತನ್ನ ಪ್ರಥಮ ಸಭೆಯನ್ನು 1946 ಡಿಸೆಂಬರ್ 6ರ ಬೆಳಿಗ್ಗೆ 11ಗಂಟೆಗೆ ನವದೆಹಲಿಯ ಕಾನ್ಸ್ಟಿಟ್ಯೂಶನ್ ಹಾಲ್ನಲ್ಲಿ ಆರಂಭಿಸಿತು.
ಸಭೆ ಆರಂಭವಾದಾಗ ಒಟ್ಟು 296 ಸದಸ್ಯರಲ್ಲಿ ಭಾಗವಹಿಸಿದ್ದು 207 ಮಂದಿಯಷ್ಟೆ. ಇನ್ನುಳಿದ ಮಂದಿ ಅಂದಿನ ಮುಸ್ಲಿಂಲೀಗ್ಗೆ ಸೇರಿದವರಾಗಿದ್ದು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿ ಅವರೆಲ್ಲ ಗೈರುಹಾಜರಾಗಿದ್ದರು. ಹೀಗಿದ್ದರೂ ಪಂಡಿತ್ ಜವಹರಲಾಲ್ ನೆಹರೂ “ಭಾರತ ಸಾರ್ವಭೌಮ ಸ್ವತಂತ್ರ ಗಣರಾಜ್ಯವಾಗಲು ತನ್ನ ಭವಿಷ್ಯದ ಸರ್ಕಾರಕ್ಕಾಗಿ ಅದು ತನ್ನದೇ ಆದಂತಹ ಸಂವಿಧಾನವೊಂದನ್ನು ಹೊಂದುವುದನ್ನು ಬಯಸುತ್ತದೆ” ಎಂದು ಗೊತ್ತುವಳಿಯೊಂದನ್ನು ಮಂಡಿಸಿದರು. ಆದರೆ ಸದಸ್ಯರಾದ ಎಂ.ಆರ್.ಜಯಕರ್ “ಸಭೆಗೆ ಮುಸ್ಲಿಂ ಲೀಗ್ ಮತ್ತು ಇತರೆ ರಾಜ ಸಂಸ್ಥಾನಗಳ ಸದಸ್ಯರು ಗೈರುಹಾಜರಾಗಿರುವುದರಿಂದ ಅವರೆಲ್ಲ ಭಾಗವಹಿಸುವಂತಾಗಲು ಈ ಸಭೆಯನ್ನು ಮುಂದೂಡಬೇಕು” ಎಂದು ತಮ್ಮ ಆಕ್ಷೇಪವ್ಯಕ್ತಪಡಿಸಿದರು ಮತ್ತು ನೆಹರೂರವರು ಮಂಡಿಸಿದ್ದ ಆ ಗೊತ್ತುವಳಿಯ ಚರ್ಚೆಯನ್ನು ಮುಂದೂಡಲು ಸಭೆಯ ಕಲಾಪಕ್ಕೆ ತಿದ್ದುಪಡಿಯೊಂದನ್ನು ಮಂಡಿಸಿದರು. ಅಂದಹಾಗೆ ಗೌರವಾನ್ವಿತ ಸದಸ್ಯರ ಇಂತಹ ಆಕ್ಷೇಪ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಆಶ್ಚರ್ಯವೆಂದರೆ ಈ ಸಮಯದಲ್ಲಿ ಇಂತಹ ಅನಿರೀಕ್ಷಿತ ಕೋಲಾಹಲದ ನಡುವೆ ಮುಂದುವರಿದ ಸಭೆಯಲ್ಲಿ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದ್ರವರು ಡಿಸೆಂಬರ್ 17ರಂದು ಡಾ.ಅಂಬೇಡ್ಕರರನ್ನು ಸಭೆಯನ್ನುದೇಶಿಸಿ ಮಾತನಾಡಲು ಆಹ್ವಾನಿಸಿದರು.
ಸತ್ಯ ಹೇಳಬೇಕೆಂದರೆ ಯಾವ ಸಂವಿಧಾನ ಸಭೆ ನಿಂತುಹೋಗಬೇಕಿತ್ತೋ, ಅನಿರ್ದಿಷ್ಟ ಅವಧಿಗೆ ಮುಂದೂಡಬೇಕಾಗಿತ್ತೋ ಅದು ಮುಂದುವರಿಯಿತು! ಹೋಲಿಕೆ ಮಾಡುವುದಾದರೆ ಭಾರತದ ಸಂವಿಧಾನದ ಚಕ್ರ ಅಂಬೇಡ್ಕರರ ಮೂಲಕ ಉರುಳಲಾರಂಭಿಸಿತು! ಯಾಕೆಂದರೆ ತಮ್ಮ ಭಾಷಣದಲ್ಲಿ ಅಂಬೇಡ್ಕರರು ನೆಹರೂರವರು ಮಂಡಿಸಿದ್ದ ಗೊತ್ತುವಳಿಯ 8 ಅಂಶಗಳನ್ನು ಪದಪದವಾಗಿ, ಪದರು ಪದರಾಗಿ ಬಿಡಿಸಿ ಸಂವಿಧಾನ ಎತ್ತ ಸಾಗಬೇಕು, ಹೇಗಿರಬೇಕು ಎಂದು ವಿವಿಧ ರಾಷ್ಟ್ರಗಳ ಸಂವಿಧಾನಗಳನ್ನು ಉಲ್ಲೇಖಿಸುತ್ತಾ ಮಾರ್ಗ ತೋರಿಸಲಾಂಭಿಸಿ ಸಭೆಯನ್ನು ಗಂಭೀರತೆಯೆಡೆಗೆ ತಂದರು. ಮುಸ್ಲಿಂಲೀಗ್ ಸದಸ್ಯರು ಗೈರಾಗಿದ್ದಕ್ಕೆ ಮುಂದಿನ ಸಭೆಯಲ್ಲಿ ಅವರು ಭಾಗವಹಿಸುತ್ತಾರೆ ಎಂಬ ಏಕತೆಯ ಆಶಾಭಾವ ವ್ಯಕ್ತಪಡಿಸುತ್ತಾ ಅಂಬೇಡ್ಕರರು “ವಿವಿಧ ಜಾತಿ-ಜನಾಂಗಗಳಾಗಿದ್ದಾಗ್ಯೂ ನಾವೆಲ್ಲಾ ಸದಾ ಒಂದಾಗಿರುವುದರಲ್ಲಿ ನನಗೆ ಯಾವ ಸಂಶಯವೂ ಇಲ್ಲ” ಎಂದರು.
ಹೀಗೆ ತನ್ನ ಆರಂಭಿಕ ದಿನಗಳನ್ನು ಪ್ರಾರಂಭಿಸಿದ ಸಂವಿಧಾನಸಭೆ ಸರ್ದಾರ್ ಪಟೇಲರ ನೇತೃತ್ವದಲ್ಲಿ 1947 ಜನವರಿ 24 ರಂದು ಅಂಬೇಡ್ಕರರನ್ನು ಒಳಗೊಂಡಂತೆ 50ಜನ ಸದಸ್ಯರ ಸಲಹಾ ಸಮಿತಿಯೊಂದನ್ನು ನೇಮಿಸಿತು. ಆ ಸಮಿತಿ ಇತರೆ 4 ಪ್ರಮುಖ ಉಪಸಮಿತಿಗಳನ್ನು ನಿಯುಕ್ತಿಗೊಳಿಸಿತು. ಅವುಗಳಲ್ಲಿ ಬಹುಮುಖ್ಯದ್ದೆಂದರೆ ಮೂಲಭೂತ ಹಕ್ಕುಗಳ ಉಪಸಮಿತಿ ಮತ್ತು ಅಲ್ಪಸಂಖ್ಯಾತರ ಉಪಸಮಿತಿ. ಅಂಬೇಡ್ಕರರು ಈ ಎರಡೂ ಪ್ರಮುಖ ಸಮಿತಿಗಳ ಸದಸ್ಯರಾದರು. ಮುಂದುವರಿದು ಸಭೆ ಇನ್ನೂ 3 ಕಾರ್ಯಾಚರಣಾ ಸಮಿತಿಗಳನ್ನು ರಚಿಸಿತು. ಅವುಗಳೆಂದರೆ
- ಕೇಂದ್ರ ಅಧಿಕಾರ ಸಮಿತಿ
- ಕೇಂದ್ರ ಸಂವಿಧಾನ ಸಮಿತಿ
- ಪ್ರಾಂತ್ಯಗಳ ಸಂವಿಧಾನ ಸಮಿತಿ
ಇಲ್ಲಿಯೂ ಅಷ್ಟೆ ಅಂಬೇಡ್ಕರ್ ಕೇಂದ್ರ ಸಂವಿಧಾನ ಸಮಿತಿಯ ಸದಸ್ಯರಾದರು. ಹೀಗೆ ಅವರು ಪ್ರಮುಖ ಸಮಿತಿಗಳ ಸದಸ್ಯರಾಗುವುದಕ್ಕೆ ಕಾರಣವೂ ಇತ್ತು. ಯಾಕೆಂದರೆ ಮುಂದೆ ಸಂವಿಧಾನ ಅರ್ಪಿಸುವ ಸಮಯದಲ್ಲಿ ಅವರೇ ಹೇಳಿಕೊಂಡಿರುವಂತೆ “ಪರಿಶಿಷ್ಟ ಜಾತಿಗಳ ಹಿತ ಕಾಯುವ ಮಹದಾಸೆ ಹೊತ್ತಷ್ಟೆ ತಾನು ಸಂವಿಧಾನ ಸಭೆಗೆ ಬಂದೆ…”. ಹೌದು, ಡಾ.ಅಂಬೇಡ್ಕರರು ಪರಿಶಿಷ್ಟರ ಹಿತ ಕಾಯುವ ನೆಪ ಮಾತ್ರಕ್ಕೆ ಬಂದರೂ ತಮಗರಿವಿಲ್ಲದಂತೆ ಅವರು ಇಡೀ ದೇಶದ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು! ಯಾವ ಪರಿ ಎಂದರೆ ಇಡೀ ಸಂವಿಧಾನ ರಚನಾ ಪ್ರಕ್ರಿಯೆಯಲ್ಲಿ ಸಕ್ರಿಯರಾಗುವಮಟ್ಟಿಗೆ. ಅದೂ ಅದೆಂತಹ ಸಕ್ರಿಯತೆಯೆಂದರೆ ಶತೃಗಳೂ ಮೆಚ್ಚಿ ಅಹುದಹುದು ಎನ್ನುವ ಮಟ್ಟಿಗೆ! ಏಕೆಂದರೆ ಸಂವಿಧಾನ ರಚನೆಯ ಇಂತಹ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂಡು ಸ್ವಾತಂತ್ರ್ಯದ ಸಮಯದಲ್ಲಿ ದೇಶ ವಿಭಜನೆಯ ಸಂದರ್ಭ ಬಂದಾಗ ಅಂಬೇಡ್ಕರರು ಗೆದ್ದಿದ್ದ ಬಂಗಾಳದ ಕ್ಷೇತ್ರ ಕಾಂಗ್ರೆಸ್ಸಿಗರ ತಂತ್ರದಿಂದಾಗಿ ಪೂರ್ವಪಾಕಿಸ್ತಾನಕ್ಕೆ ಸೇರಲ್ಪಟ್ಟು ಅವರ ಸದಸ್ಯತ್ವ ರದ್ದಾಯಿತು. ಸೋಜಿಗವೆಂದರೆ ಈ ಸಮಯದಲ್ಲಿ ಅಂಬೇಡ್ಕರರ ಸಂವಿಧಾನ ರಚನಾ ಚಾಕಚಕ್ಯತೆ ಕೆಲಸ ಮಾಡಿತು! ಹೇಗೆಂದರೆ ಸ್ವತಃ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದರು 1947 ಜೂನ್ 30 ರಂದು ಬಾಂಬೆ ಪ್ರಾಂತ್ಯದ ಅಂದಿನ ಪ್ರಧಾನಿ ಡಾ.ಬಿ.ಜಿ.ಖೇರ್ರವರಿಗೆ ಪತ್ರ ಬರೆದು “ಬೇರೆ ವಿಷಯಗಳೇನೆ ಇರಲಿ, ಸಂವಿಧಾನ ಸಭೆ ಮತ್ತದರ ವಿವಿಧ ಉಪಸಮಿತಿಗಳಲ್ಲಿ ಅಂಬೇಡ್ಕರರ ಕಾರ್ಯ ಎಂತಹ ಮಟ್ಟದ್ದೆಂದರೆ, ಖಂಡಿತ ಅವರ ಸೇವೆಯನ್ನು ನಾವು ಕಳೆದುಕೊಳ್ಳಬಾರದು. ಅದಕ್ಕಾಗಿ ಜುಲೈ 14ರ ಮುಂದಿನ ಸಭೆಯೊಳಗೆ he should be relected”ಎಂದರು! (Dr.Ambedkar: The Principal Architect of The Constitution of India, Published by Government of India. Pp.26)
ಹೌದು, ಬಾಬಾಸಾಹೇಬರು ತಕ್ಷಣ ಮರುಆಯ್ಕೆಯಾದರು. ಹಾಗೇ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ಕೂಡ ಸಿಕ್ಕಿತು ಮತ್ತು ಅವರು ಸ್ವತಂತ್ರ ಭಾರತದಲ್ಲಿ ನೆಹರೂ ಸಂಪುಟದಲ್ಲಿ ಕಾನೂನು ಸಚಿವರಾಗಿ ಕೂಡ ನೇಮಕಗೊಂಡರು. ಆಶ್ಚರ್ಯವೆಂದರೆ ಆಗಸ್ಟ್ 29ರಂದು ಮರುಸಮಾವೇಶಗೊಂಡ ಸಂವಿಧಾನಸಭೆ ಡಾ.ಅಂಬೇಡ್ಕರರನ್ನು “ಸಂವಿಧಾನ ಪ್ರತಿ ರಚಿಸುವ ಸಮಿತಿ (drafting committee)”ಯ ಅಧ್ಯಕ್ಷರನ್ನಾಗಿಯೂ ಆರಿಸಿತು! ಜೊತೆಗೆ ಆರು ಮಂದಿ ಸದಸ್ಯರ ತಂಡ. ಒಟ್ಟಾರೆ ಸಂವಿಧಾನ ಸಭೆಯ ಇಂತಹ ನಡಾವಳಿಗಳ ಮೂಲಕ ಭಾರತದ ಭವಿಷ್ಯ ಬರೆವ ಕೆಲಸ ಬಾಬಾಸಾಹೇಬರ ಮುಡಿಗೇರಿತು.
ಸಂವಿಧಾನ ರಚನೆಯ ಜವಾಬ್ದಾರಿಯೇನೋ ಅಂಬೇಡ್ಕರರ ಮುಡಿಗೇರಿತು. ಆದರೆ ಆ ಜವಾಬ್ದಾರಿಯನ್ನು ಅವರು ನಿರ್ವಹಿಸಿದ ಪರಿ? ಖಂಡಿತ, ಅಂಬೇಡ್ಕರರು ಮತ್ತವರ ಸಂವಿಧಾನ ಕಾರ್ಯಕ್ಷಮತೆಯ ಬಗ್ಗೆ ಸ್ವತಃ ಅವರು ಮತ್ತು ಇತರರು ಸಂವಿಧಾನ ಸಭೆಗಳಲ್ಲಿ ಮಾಡಿದ ಭಾಷಣಗಳಲ್ಲಿ ನಮಗೆ ಉಲ್ಲೇಖ ಸಿಗುತ್ತದೆ. 1948 ನವೆಂಬರ್ 25 ರಂದು ಡಾ.ಅಂಬೇಡ್ಕರರು ಸಂವಿಧಾನ ಸಮರ್ಪಿಸುತ್ತಾ ಮಾಡಿದ ಅಂತಿಮ ಭಾಷಣವನ್ನು ಉಲ್ಲೇಖಿಸುವುದಾದರೆ “ಮಾನ್ಯರೆ, ಸಂವಿಧಾನ ಸಭೆಯ ಕಾರ್ಯಕಲಾಪದ ಬಗ್ಗೆ ಹಿನ್ನೋಟ ನೋಡುವುದಾದರೆ 1946 ಡಿಸೆಂಬರ್ 9ರಿಂದ ಇಲ್ಲಿಯವರೆಗೆ ಸಂವಿಧಾನ ಸಭೆ ಸಮಾವೇಶಗೊಂಡು 2 ವರ್ಷ, 11 ತಿಂಗಳು, 17ದಿನಗಳು ಕಳೆಯುತ್ತಿವೆ. ಇದುವರೆಗೆ ಸಭೆ 11 ಸಮಾವೇಶಗಳನ್ನು ನಡೆಸಿದೆ. ಈ 11 ಸಮಾವೇಶಗಳು 165 ದಿನಗಳನ್ನು ಬಳಸಿಕೊಂಡಿದೆ. ಈ 165 ದಿನಗಳಲ್ಲಿ 114 ದಿನಗಳನ್ನು ಸಭೆ ಕರಡು ಸಂವಿಧಾನವನ್ನು ಪರಿಗಣಿಸಲು ತೆಗೆದುಕೊಂಡಿದೆ. ಇನ್ನು ಕರಡು ಸಮಿತಿ ಅಥವಾ ಸಂವಿಧಾನ ರಚನಾ ಸಮಿತಿಯ ಬಗ್ಗೆ ಹೇಳುವುದಾದರೆ 1947 ಆಗಸ್ಟ್ 29 ರಂದು ಅದನ್ನು ಆಯ್ಕೆಮಾಡಲಾಯಿತು ಮತ್ತು ಅದು ತನ್ನ ಪ್ರಥಮ ಸಭೆಯನ್ನು 30ನೇ ಆಗಸ್ಟ್ ರಂದು ನಡೆಸಿತು.
ಆಗಸ್ಟ್ 30 (1947) ರಿಂದ ಇಲ್ಲಿಯವರೆಗೆ ಸಮಿತಿ 141 ದಿನಗಳು ಸಭೆ ನಡೆಸಿ ಒಟ್ಟು ಈ ಅವಧಿಯನ್ನು ಕರಡು ಸಂವಿಧಾನವನ್ನು ತಯಾರಿಸಲು ಬಳಸಿಕೊಂಡಿದೆ” ಹೀಗೆ ವಿವರಿಸುತ್ತಾ ಹೋಗುತ್ತಾರೆ. ಅಂದಹಾಗೆ ಬಾಬಾಸಾಹೇಬರ ನೇತೃತ್ವದ ಸಮಿತಿ ಸಿದ್ಧಪಡಿಸಿದ ಈ ಸಂವಿಧಾನ 1948 ಫೆಬ್ರವರಿ 26ರಂದು ಭಾರತ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಗೊಂಡಿತು ಮತ್ತು ಹಾಗೆ ಗೆಜೆಟ್ನಲ್ಲಿ ಪ್ರಕಟಗೊಂಡ ಸಂವಿಧಾನದ ಆ ಪ್ರತಿ ತನ್ನ ಆರಂಭದ ಪುಟದಲ್ಲಿ ರಚನಾ ಸಮಿತಿಯ ಅಧ್ಯಕ್ಷರಾದ ಅಂಬೇಡ್ಕರರು ಸಭೆಯ ಅಧ್ಯಕ್ಷರಿಗೆ ಬರೆದ ಪತ್ರವೊಂದನ್ನೂ ಕೂಡ ಒಳಗೊಂಡಿತ್ತು. ಆ ಪತ್ರದ ಪ್ರಾರಂಭದ ಒಕ್ಕಣೆಯನ್ನು ಉಲ್ಲೇಖಿಸುವುದಾದರೆ “Dear Sir, On behalf of the Drafting Committee… I submit herewith the Draft of the new Constitution of India… I have been authorized to sign the Draft… Yours truly, B.R.AMBEDKAR.”
ಖಂಡಿತ, ಹೀಗೆ ಪುಟಪುಟವನ್ನೂ ಉಲ್ಲೇಖಿಸುವ ಅಗತ್ಯವಿಲ್ಲ. ಆದರೂ ಕೆಲವು ಕೋಮುವಾದಿ ಕಿತಾಪತಿಗಳಿಸ್ಕೋರ ಇದನ್ನು ಉಲ್ಲೆಖಿಸಬೇಕಿದೆ. ಅಲ್ಲದೆ ಮತ್ತೊಂದು ಅಂಶವನ್ನು ಇಲ್ಲಿ ದಾಖಲಿಸಬೇಕಿದೆ. ಅದೆಂದರೆ ಫೆಬ್ರವರಿ 26, 1948 ರಂದು ಗೆಜೆಟ್ನಲ್ಲಿ ಪ್ರಕಟಗೊಂಡ ಭಾರತ ಸಂವಿಧಾನದ ಕರಡು ಪ್ರತಿ ಅಂಬೇಡ್ಕರರು ವಯಕ್ತಿಕವಾಗಿ ಸಂವಿಧಾನ ಸಭೆಯ ಮೂಲಭೂತ ಹಕ್ಕುಗಳ ಸಮಿತಿಗೆ ತಮ್ಮ ಪಕ್ಷ ‘ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಪರವಾಗಿ ಮಾರ್ಚ್ 15, 1947 ರಂದು ಸಲ್ಲಿಸಿದ ಮನವಿಯ ಡಿಟೋ ಕಾಪಿಯಂತೇ ಇದೆ ಎಂಬುದು! ಈ ನಿಟ್ಟಿನಲ್ಲಿ ಆಸಕ್ತರು ಅಂಬೇಡ್ಕರರ ಆ ಮನವಿಯನ್ನು ಅವರ ಬರಹಗಳು ಭಾಷಣಗಳ ಸಂಪುಟ 1ರಲ್ಲಿ ‘ರಾಜ್ಯಗಳು ಮತ್ತು ಅಲ್ಪಸಂಖ್ಯಾತರು’ ಎಂಬ ಶೀರ್ಷಿಕೆಯಲ್ಲಿ ಪ್ರಕಟಗೊಂಡಿರುವುದನ್ನು ಗಮನಿಸಬಹುದು. ಈ ಹಿನ್ನೆಲೆಯಲ್ಲಿ ಸ್ಪಷ್ಟವಾಗಿ ಹೇಳಬಹುದು ಭಾರತದ ಸಂವಿಧಾನ ಅಂಬೇಡ್ಕರರ ಮೆದುಳಿನ ಕೂಸು ಎಂದು.
ಪ್ರಶ್ನೆಯೇನೆಂದರೆ ಗೆಜೆಟ್ನಲ್ಲಿ ಪ್ರಕಟಗೊಂಡ ಸಂವಿಧಾನ ಫೆಬ್ರವರಿ 26, 1948 ರಂದೇ ಜಾರಿಯಾಯಿತೇ? ಖಂಡಿತ ಇಲ್ಲ. ಯಾಕೆಂದರೆ ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಈ ದಿಸೆಯಲ್ಲಿ ಪ್ರಜೆಗಳ ಪ್ರತಿನಿಧಿಗಳ ನಡುವೆ ಅದು ಅಂದರೆ ಸಂವಿಧಾನ ಚರ್ಚೆಗೆ ಬರುವುದು ಬೇಡವೆ? ಹೌದು, 15 ನವೆಂಬರ್ 1948ರಲ್ಲಿ ಅನುಚ್ಛೇದ 1ರಿಂದ ಪ್ರಾರಂಭಿಸಿ 17 ಅಕ್ಟೋಬರ್ 1949ರವರೆಗೆ ಕೊನೆಯ ಅನುಚ್ಛೇದ ಅಂದರೆ ಅನುಚ್ಛೇದ 395ರವರೆಗೆ ಸಂವಿಧಾನ ಸಭೆ ಇಡೀ ಕರಡು ಸಂವಿಧಾನದ ಬಗ್ಗೆ ಭರಪೂರ ಚರ್ಚೆ ನಡೆಸಿತು. ಆಶ್ಚರ್ಯ ಬೇಡ, ಈ ಇಷ್ಟೂ ದಿನಗಳಲ್ಲಿ ಪ್ರತಿಯೊಂದೂ ಅನುಚ್ಛೇದದ ಚರ್ಚೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಅಂಬೇಡ್ಕರರು ಗೌರವಾನ್ವಿತ ಸದಸ್ಯರ ಪ್ರತಿಯೊಂದು ಸಲಹೆಗೂ ಕಿವಿಯಾದರು ಮತ್ತು ಸಂಬಂಧಪಟ್ಟ ಅನುಚ್ಛೇದದ ಪದಪದದ ವಿವರಣೆ ನೀಡಿ ಸದಸ್ಯರ ಸಲಹೆಗಳನ್ನು ಗೌರವಯುತವಾಗಿ ಸ್ವೀಕರಿಸಿ ಅಗತ್ಯ ತಿದ್ದುಪಡಿಗಳನ್ನು ಅಂಗೀಕರಿಸಿದರು. ಈ ಸಂಬಂಧ ಅಂಬೇಡ್ಕರರು ನೀಡಿರುವ ಮಾಹಿತಿಯನ್ನೇ ದಾಖಲಿಸುವುದಾದರೆ “ಕರಡು ಸಂವಿಧಾನಕ್ಕೆ ಸೂಚಿಸಲಾದ ಒಟ್ಟು ತಿದ್ದುಪಡಿಗಳು 7635. ಅವುಗಳಲ್ಲಿ ಅಂಗೀಕಾರಗೊಂಡಂತಹವು 2473”. ಒಟ್ಟಾರೆ ಇಂತೆಲ್ಲ ತಿದ್ದುಪಡಿಗಳ ನಂತರ 1949 ನವೆಂಬರ್ 17ರಂದು ಅಂತಿಮವಾಗಿ ಸಮಾವೇಶಗೊಂಡ ಸಂವಿಧಾನ ಸಭೆಯಲ್ಲಿ ಡಾ.ಅಂಬೇಡ್ಕರರು “ಅಧ್ಯಕ್ಷ ಮಹೋದಯರೇ, ಈ ಸಭೆ ಸ್ಥಿರೀಕರಿಸಿರುವ ಈ ಸಂವಿಧಾನವನ್ನು ಅಂಗೀಕರಿಸಬೇಕೆಂಬ ನಿರ್ಣಯವನ್ನು ನಾನು ಮಂಡಿಸುತ್ತೇನೆ” ಎನ್ನುತ್ತಿದ್ದಂತೆ ಇಡೀ ಸಭೆ ಹರ್ಷದ ಹೊನಲು ಹರಿಸಿ ಕರತಾಡನದೊಂದಿಗೆ ತನ್ನ ಒಪ್ಪಿಗೆ ಸೂಚಿಸಿತು. ಹಾಗೆಯೇ ಅಂಬೇಡ್ಕರರಿಗೆ ಅಭಿನಂದನೆಯ ಸುರಿಮಳೆಗಳು.
ಅವುಗಳಲ್ಲಿ ಒಂದಷ್ಟನ್ನು ದಾಖಲಿಸುವುದಾದರೆ ಮದ್ರಾಸಿನ ಮುನಿಸ್ವಾಮಿ ಪಿಳ್ಳೈ ಎಂಬುವವರು “ಪರಿಶಿಷ್ಟ ಜಾತಿಯು ನಂದನಾರ್, ತಿರುಪಳನಾಳ್ವರ್, ತಿರುವಳ್ಳುವರ್ ಹೀಗೆ ಶ್ರೇಷ್ಠ ಸಂತರನ್ನು, ಜ್ಞಾನಿಗಳನ್ನು ನೀಡಿದೆ. ನಿಸ್ಸಂಶಯವಾಗಿ ಡಾ.ಅಂಬೇಡ್ಕರರು ಅಂತಹವರ ಸಾಲಿಗೆ ಸೇರ್ಪಡೆಯಾಗುತ್ತಾರೆ. ಯಾಕೆಂದರೆ ಅವಕಾಶ ಸಿಕ್ಕರೆ ಪರಿಶಿಷ್ಟರು ಎಷ್ಟು ಎತ್ತರಕ್ಕೆ ಏರಬಲ್ಲರು ಎಂಬುದನ್ನು ಅಂಬೇಡ್ಕರರು (ತಮ್ಮ ಈ ಸಾಧನೆಯ ಮೂಲಕ) ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟಿದ್ದಾರೆ”. ಇನ್ನು ಸೇಠ್ ಗೋವಿಂದದಾಸ್ ಎನ್ನುವವರು “ಡಾ.ಅಂಬೇಡ್ಕರರನ್ನು ‘ವರ್ತಮಾನ ಕಾಲದ ಮನು’ ಎನ್ನಬಹುದು” ಎನ್ನುತ್ತಾರೆ! ಎಂ.ಅನಂತಶಯನಂ ಅಯ್ಯಂಗಾರ್ ಎನ್ನುವವರಂತೂ “ಯಾವ ವ್ಯಕ್ತಿ ನಮ್ಮನ್ನು ಟೀಕಿಸುವ ಮತ್ತು ಅನುಮಾನದಿಂದ ನೋಡುವ ಉದ್ದೇಶದಿಂದ ಸಭೆಗೆ ಬಂದರೋ, ಕಡೆಗೆ ಅವರೇ ಸಂವಿಧಾನದ ಹೊಣೆಹೊತ್ತುಕೊಂಡರು ಮತ್ತು ಅದನ್ನು ರಚಿಸಿದರು” ಎಂದರು! ಹಾಗೆ ಪಂಡಿತ್ ಠಾಕೂರ್ ದಾಸ್ ಭಾರ್ಗವ ಎಂಬುವವರು ಮಾತನಾಡುತ್ತಾ “ಡಾ.ಅಂಬೇಡ್ಕರರು ನಮ್ಮ ಹೃದಯಗಳಲ್ಲಿ ಇಂದು ಉನ್ನತ ಸ್ಥಾನ ಅಲಂಕರಿಸಿದ್ದಾರೆ” ಎನ್ನುವ ಮೂಲಕ ತಮ್ಮ ಅಭೂತಪೂರ್ವ ಪ್ರೀತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದುವರಿದು ಮತ್ತೋರ್ವ ಸದಸ್ಯರಾದ ಟಿ.ಪ್ರಕಾಶಂ‘”ತಮ್ಮ ಈ ಕಾರ್ಯದ ಮೂಲಕ ಡಾ.ಅಂಬೇಡ್ಕರರು ತಾವು ಗ್ರೇಟ್ ಬ್ರಿಟನ್ನಿನ ರಾಜನ ಸಲಹೆಗಾರನಾಗಿ ಅಲ್ಲಿಯ ಆಸ್ಥಾನ ವೂಲ್ಸ್ಯಾಕ್ನಲ್ಲಿ ಕುಳಿತುಕೊಳ್ಳುವಷ್ಟು ಸಮರ್ಥರು” ಎಂದು ತೋರಿಸಿಕೊಟ್ಟಿದ್ದಾರೆ ಎನ್ನುತ್ತಾರೆ.
ಕಡೆಯದಾಗಿ ಶ್ರೀ ಹೆಚ್.ಜೆ.ಖಾಂಡೇಕರ್ ಎಂಬುವವರ ಹೇಳಿಕೆಯನ್ನು ದಾಖಲಿಸುವುದಾದರೆ “ಮಾನ್ಯರೆ, ನಾವು ಅಂಬೇಡ್ಕರರಂತಹ ಪ್ರತಿಭಾಶಾಲಿಯಿಂದ ರೂಪಿತಗೊಂಡ ಕಾನೂನನ್ನು ಸ್ವತಂತ್ರ ಭಾರತದಲ್ಲಿ ಇಂದು ಕಾರ್ಯಾಚರಣೆಗಿಳಿಸುತ್ತಿದ್ದೇವೆ. ಹಾಗೆ ಈ ಕಾನೂನನ್ನು ನಾನು ಮಹಾರ್ ಕಾನೂನು ಎನ್ನಲಿಚ್ಚಿಸುತ್ತೇನೆ ಯಾಕೆಂದರೆ ಡಾ.ಅಂಬೇಡ್ಕರರು ಮಹಾರ್ ಸಮುದಾಯದವರು ಮತ್ತು ಮುಂದೆ 1950 ಜನವರಿ 26ರಂದು ಈ ಕಾನೂನು ಉದ್ಘಾಟನೆಗೊಂಡಾಗ ನಾವು ಮನುವಿನ ಕಾನೂನಿನ ಬದಲು ಮಹಾರರ ಕಾನೂನನ್ನು ಹೊಂದುತ್ತೇವೆ. ಮನುವಿನ ಕಾನೂನಿನ ಅಡಿಯಲ್ಲಿ ಈ ದೇಶದಲ್ಲಿ ಸುಖ ನೆಮ್ಮದಿಯೇ ಇರಲಿಲ್ಲ, ಆದರೆ ಮಹಾರರ ಕಾನೂನು, ಖಂಡಿತ ಈ ದೇಶವನ್ನು ಸ್ವರ್ಗವನ್ನಾಗಿ ಮಾಡುತ್ತದೆ… ನನಗೆ ಭರವಸೆ ಆ ಇದೆ”.
ಖಂಡಿತ, ಗಣರಾಜ್ಯದ ಈ ಶುಭ ದಿನದಂದು ಡಾ.ಖಾಂಡೇಕರರ ಭರವಸೆ ಎಲ್ಲರದ್ದಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ23 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


