Connect with us

ರಾಜಕೀಯ

ಹರತಾಳು ಹಾಲಪ್ಪ ಕಂಡಂತೆ ಯಡಿಯೂರಪ್ಪ..!

Published

on

ನಿಷ್ಕಲ್ಮಶ ನಗುವಿನಲ್ಲಿ ಅದೆಷ್ಟು ಹೋರಾಟಗಳಿವೆಯೋ, ಅದೆಷ್ಟು ನೋವು- ಅನುಭವಿಸಿದ ಮೋಸಗಳಿವೆಯೋ ಹೇಳತೀರದು. ಗೆದ್ದಲು ಕಟ್ಟಿದ ಹುತ್ತದೊಳಗೆ ಹಾವುಗಳು ಬಂದು ಸೇರಿಕೊಳ್ಳುವಂತೆ ಅನೇಕರು ಕಟ್ಟಿ ಬೆಳೆಸಿದ ಪಕ್ಷದೊಳೆಗೆ ಇನ್ಯಾರೋ ಬಂದು ಅಧಿಕಾರ ಚಲಾಯಿಸುತ್ತಾರೆ.

ದಕ್ಷಿಣ ಭಾರತದಲ್ಲಿ (ಕರ್ನಾಟಕ) ಜನಸಂಘ -ಬಿಜೆಪಿ ಎಂಬ ಸಸಿ ಆಗಿನ್ನೂ ಮೊಳಕೆಯೋಡಿಯುತ್ತಿದ್ದ ಸಮಯದಲ್ಲಿ ಅದಕ್ಕೆ ಸಿಕ್ಕಂತಹ ತಾಯಿಬೇರು ಯಡಿಯೂರಪ್ಪ ಎಂಬ ಹೆಸರಾದರೆ, ಕಾರಣವಾಗಿದ್ದು ಅನಂತ ಕುಮಾರ್. ಕಾರ್ಯಕರ್ತರನ್ನು ಬಡಿದೆಬ್ಬಿಸಿ ಅನ್ಯಾಯ ಕಂಡಲ್ಲಿ ಹೋರಾಟ ಮಾಡುತ್ತಾ ಜನರಿಗೆ ಸ್ಥರ್ಯ ತುಂಬಿ,ನ್ಯಾಯ ದೊರಕಿಸುತ್ತ ಸಹಜ ಹೋರಟಗಾರನಾಗಿ ಜನರ ಮನಸಿನಲ್ಲಿ ಅಚ್ಚಳಿಯದಂತೆ ಉಳಿದ ಹೆಸರು ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಎಂಬ ಛಲದಂಕಮಲ್ಲ.

ದೇವರಾಜ್ ಅರಸು, ಗುಂಡುರಾವ್, ರಾಮಕೃಷ್ಣ ಹೆಗ್ಡೆ,ನಿಜಲಿಂಗಪ್ಪ,ಜೆ.ಹೆಚ್.ಪಟೇಲ್,ಬಂಗಾರಪ್ಪ,ದೇವೇಗೌಡ. ಎಂಬ ರಾಜಕೀಯ ಮೇರು ಪರ್ವತಗಳ ಎದುರು ತನ್ನದೆಯಾದ ಕಾರ್ಯಕರ್ತರ ಸಾಮ್ರಾಜ್ಯ ಕಟ್ಟುತ್ತಾ ತಳ ಹಂತದಿಂದ ಪಕ್ಷಕಟ್ಟಿ ಯಾವತ್ತೂ ಅವಕಾಶವಾದಿ ರಾಜಕಾರಣ ಮಾಡದೆ, ಮೊದಲಬಾರಿಗೆ 2 ಅಂಕಿಯಿಂದ ಪ್ರಾರಂಭವಾದ ಬಿಜೆಪಿಯ ಗೆಲುವಿನ ಅಭಿಯಾನ 40ರ ಗಡಿಗೆ ಬಂದು ನಿಂತಾಗ, 2004 ರಲ್ಲಿ ಬಂಗಾರಪ್ಪ ನವರು ಬಿಜೆಪಿ ಸೇರ್ಪಡೆಯಾದಾಗ 79 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಆ 79 ಶಾಸಕರಲ್ಲಿ ನಾನು ಒಬ್ಬನಾಗಿದ್ದೆ ಬಂಗಾರಪ್ಪ ನವರು ಬಿಜೆಪಿ ಪಕ್ಷ ತೊರೆದಾಗ ಇನ್ನೇನು ಬಿಜೆಪಿ ಸ್ಥಿತಿ ಡೋಲಾಯಮಾನವಾಗಿ ಹೋಯ್ತು, ಇನ್ನು ಬಿಜೆಪಿ ನೆಲ ಕಚ್ಚಿತ್ತು ಎಂಬ ಮಾತುಗಳು ಆರಂಭವಾದಾಗ,

ಸಮಿಶ್ರ ಸರ್ಕಾರದ ಭಾಗವಾಗಿ ಉಪಮುಖ್ಯಮಂತ್ರಿ ಗಳಾದ ಯಡಿಯೂರಪ್ಪ ನವರು, ನಂತರ 20-20 ಸರ್ಕಾರದ ಕೊನೆ ಅವಧಿಗೆ ಮುಖ್ಯಮಂತ್ರಿ ಗಳಾದರು ಜೆಡಿಎಸ್ ನವರ ಮೋಸಕ್ಕೆ ಬೇಸತ್ತು ಮೈತ್ರಿಯಿಂದ ಹೊರಬಂದು ಪಕ್ಷಕ್ಕೆ ಯಾವುದೇ ಕುಂದು ಬಾರದಂತೆ ಪಕ್ಷವನ್ನು ತನ್ನ ಸದೃಢ ನಾಯಕತ್ವದಲ್ಲಿ ಮುನ್ನೆಡೆಸಿ 2008 ರ ಚುನಾವಣೆಯಲ್ಲಿ 110 ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ತನ್ನ ರಾಜಕೀಯ ಚಾಣಾಕ್ಷತೆ, ತನ್ನ ಸಾಮರ್ಥ್ಯವನ್ನು ನಿರೂಪಿಸಿ, ಸರ್ಕಾರ ಸುಭದ್ರವಾಗಲು ಮತ್ತೆ ನೆಡೆದ ಉಪಚುನಾವಣೆಗಳಲ್ಲಿ ಗೆದ್ದು ಬಹುಮತದ ಸರ್ಕಾರ ರಚಿಸಿದರು.

ತಮ್ಮ ಸಂಪುಟದಲ್ಲಿ ನನ್ನನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಂತ್ರಿಯನ್ನಾಗಿಸಿದ್ದು ಯಡಿಯೂರಪ್ಪ ನವರ ಜಾತ್ಯತೀತ ನಿಲುವಿಗೆ ಹಾಗೂ ಸಣ್ಣ ಸಮುದಾಯಗಳನ್ನು ಮುನ್ನೆಲೆಗೆ ತರುವ ರಾಜಕೀಯ ಇಚ್ಛಾಶಕ್ತಿ ಗೆ ಹಿಡಿದ ಕೈಗನ್ನಡಿಯಾಗಿದೆ.

ಆನಂತರ ನೆಡೆದ ರಾಜಕೀಯ ವಿಪ್ಲವಗಳಿಂದ ಮನನೊಂದು ತಾನು ಬೆವರು ಸುರಿಸಿ ಬೆಳೆಸಿದ ಪಕ್ಷದಿಂದ ಹೊರಬಂದು ಕೆ.ಜೆ.ಪಿ ಸ್ಥಾಪಿಸಿ ಕೆಲ ತಿಂಗಳುಗಳಲ್ಲಿ ನೆಡೆದ ಚುನಾವಣೆಯಲ್ಲಿ ಶೇ 10% ಮತಗಳನ್ನು ಪಡೆದು ತನ್ನ ಸಾಮರ್ಥ್ಯವನ್ನು ನಿರೂಪಿಸಿದನ್ನು ರಾಜಕೀಯ ಎನ್ನುವ ಪುಸ್ತಕದಲ್ಲಿ ಬರೆದಿಡುವಂತಹ ಸಾಧನೆ ಮಾಡಿದ್ದು ವಿರೋಧಿಗಳ ಎದೆಯಲ್ಲಿ ಇನ್ನು ಮಾಸದಂತೆ ಅಚ್ಚುಳಿದಿದೆ. ನಂತರ ಬಿಜೆಪಿ ಸೇರ್ಪಡೆಯಾಗಿ 2014 ರ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಿಸಿಕೊಡುವ ಮೂಲಕ ಮೋದಿಯ ನಾಯಕತ್ವವೇ ಸೂಕ್ತ ಎಂದು ಮೊಟ್ಟ ಮೊದಲು ಉಚ್ಚರಿಸಿದ ನಾಯಕ BSY.

76 ರ ಹರೆಯದಲ್ಲಿ ಯುವಕರು ನಾಚಿಸುವಂತ ಓಡಾಟ ಸದಾ ಅಭಿವೃದ್ಧಿ ಪರ ಚಿಂತನೆಗಳು, ರೈತ ಪರ ನಿಲುವುಗಳು 2018 ರ ಚುನಾವಣೆಯಲ್ಲಿ ಮತ್ತೆ ಯಡಿಯೂರಪ್ಪ ನವರನ್ನು ಮುಖ್ಯಮಂತ್ರಿ ಯನ್ನಾಗಿ ನೋಡಬೇಕೆನ್ನುವ ಜನರು ಹಂಬಲಿಸುತ್ತಿದ್ದರು. ತನ್ನನ್ನು ನಂಬಿದವರನ್ನು ಎಂದು ಕೈಬಿಡದ ಯಡಿಯೂರಪ್ಪ ನವರು ಸಾಗರ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸವಿಟ್ಟು ಹಲವರ ವಿರೋದದ ನಡುವೆ ಟಿಕೆಟ್ ನೀಡಿ ನನ್ನ ಕೈ ಹಿಡಿದರು. ರಾಜ್ಯದಲ್ಲಿ ಅಂದಿನ ಚುನಾವಣಾ ಫಲಿತಾಂಶ ಬಿಜೆಪಿಯನ್ನು ಅದಿಕಾರದ ಹೊಸ್ತಿಲಿಗೆ ತಂದು ನಿಲ್ಲಿಸಿತು. ( ಯಡಿಯೂರಪ್ಪ ನವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದಾರೆ ಒಂದೂವರೆ ವರ್ಷ ವಿರೋಧಪಕ್ಷದಲ್ಲಿ ಕೂರುವ ಸ್ಥಿತಿ ಬರುತ್ತಿರಲಿಲ್ಲ )

ಅನಂತರ ನೆಡೆದ ರಾಜಕೀಯ ಪಗಡೆಯಾಟದಲ್ಲಿ #ವಾಚಾಮಗೋಚರವಾಗಿ ಬೈದಾಡಿಕೊಂಡಿದ್ದವರು ಸರ್ಕಾರ ರಚಿಸಿ ಜನರ ಭಾವನೆಗಳಿಗೆ ಧಕ್ಕೆ ತಂದರು. ಇವರ ಉಪಟಳಗಳನ್ನು ಸಹಿಸದ ಕೆಲ ಶಾಸಕರು ಬಂಡಾಯವೇದ್ದು ಸರ್ಕಾರ ಕೆಡವಿದರು. ತನ್ನ ಅವಕಾಶವಾಧಿ ರಾಜಕಾರಣದಿಂದ ಸ್ವಯಂ ಘೋಷಿತ ಸಭ್ಯಸ್ತರು ಅನರ್ಹರು ಎಂಬ ಹಣೆಪಟ್ಟಿ ನೀಡಿದರು. ನಂತರದ ಘಟನೆಗಳು ಜನರ ಕಣ್ಮುಂದಿದೆ, 4ನೇ ಬಾರಿ ಮುಖ್ಯಮಂತ್ರಿಯಾಗಿ ಎದುರಿಸಿದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದು ವಿರೋಧಿಗಳನ್ನು ರಾಜ್ಯದ ಜನತೆ ಎದುರು ಬೆತ್ತಲೆ ನಿಲ್ಲಿಸಿ ಇತಿಹಾಸ ನಿರ್ಮಿಸಿದ ಕೀರ್ತಿ ಯಡಿಯೂರಪ್ಪ ನವರದ್ದು …ಗಾಡ್ ಫಾದರ್ ಇಲ್ಲದೆ ಬೆಳೆದು ಬಂದು, ನನ್ನಂತಹ ಅನೇಕ ರಾಜಕಾರಣಿಗಳ ಬಾಳಿಗೆ ಗಾಡ್ ಆದ ಯಡಿಯೂರಪ್ಪ ನವರ ಯಶಸ್ಸಿನ ಜೀವನ ಘಾತೆ.

2009ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಕಳಪೆ ಪ್ರದರ್ಶನ ಮಾಡಿದ್ದಾಗ ಕರ್ನಾಟಕದಿಂದ 19 ಸಂಸದರನ್ನು ಕಳುಹಿಸಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಅಂದು ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಂದ ತುಂಬಿದ ಸಭೆಯಲ್ಲಿ
ಪುಷ್ಪಗುಚ್ಚ ನೀಡಿ ವಿಶೇಷ ಸನ್ಮಾನಿಸಿದ್ದರ.

2019 ರ ಲೋಕಸಭೆಯಲ್ಲಿ 25 ಹಾಗೂ ವಿಧಾನಸಭಾ ಉಪಚುನಾವಣೆಯಲ್ಲಿ ಒಂಟಿಯಾಗಿ ಸಮರ್ಥ ನಾಯಕತ್ವದಲ್ಲಿ 12 ಸ್ಥಾನ ಗೆಲ್ಲಿಸಿದಕ್ಕಾಗಿ ಇಂದು ನರೇಂದ್ರ ಮೋದಿಯವರಿಂದ “ಸ್ಟ್ಯಾಂಡಿಂಗ್ ಓವೇಷನ್”, ಮೂಲಕ ಯಡಿಯೂರಪ್ಪನವರಿಗೆ ಎಲ್ಲಾ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟಿ‌ ಗೌರವಿಸಿದ್ದಾರೆ. ಈಗ ಹೇಳಿ ರಾಜ್ಯ ಆಳೋಕೆ ವಯಸ್ಸು ಬೇಡ, ಸಮರ್ಥ ನಾಯಕತ್ವ ಸಂಘಟನೆ ಚತುರತೆ ಇದ್ದರೆ ಸಾಕು.

ಇನ್ನಾದರೂ ವಿರೋಧಿಸುವವರು,ವಿಪಕ್ಷಗಳು, ದುರಹಂಕಾರಿ ಮಾತುಗಳಾಡುವವರು ಅರಿತು ನೆಡೆದರೆ ಒಳ್ಳೆಯದು.

ಹೆಚ್.ಹಾಲಪ್ಪ ಹರತಾಳು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending