ನೆಲದನಿ
ಅಯೋಧ್ಯೆ ತೀರ್ಪು : ಗೆದ್ದಿದ್ದು ಧರ್ಮವಲ್ಲ, ಸೋತಿದ್ದು ಅನ್ಯಾಯವಲ್ಲ..!
- ಡಾ.ಕೆ.ಎ.ಓಬಳೇಶ್
ಭಾರತದ ನೆಲದಲ್ಲಿ ಸನಾತನವಾದಿಗಳ ಅಸಮಾನತೆಯ ಸಿದ್ಧಾಂತಕ್ಕೆ ಧಕ್ಕೆಯಾದಾಗಲೆಲ್ಲ ತನ್ನ ಅಸ್ತಿತ್ವದ ಉಳಿವಿಗಾಗಿ ಒಂದಿಲ್ಲೊಂದು ತಂತ್ರಗಳನ್ನು ರೂಪಿಸುತ್ತಲೇ ಬಂದಿದ್ದಾರೆ. ಇಂತಹ ತಂತ್ರಗಾರಿಯನ್ನು ಹುಡುಕುತ್ತ ಹೋದರೆ ಪುರಾಣಗಳ ಕಾಲದಿಂದಲೇ ಇದರ ಕುರುಹುಗಳು ದೊರೆಯುತ್ತವೆ. ಇದಕ್ಕೆ ಪೂಕರವಾಗಿ ನಿರ್ಮಾಣವಾಗಿದ್ದೆ ಬಾಬರಿ ಮಸಿದಿಯ ದ್ವಂಸ ಪ್ರಕರಣ. ಈ ಬಾಬರಿ ಮಸಿದಿ ಪ್ರಕರಣ ಇವರಿಗೆ ಒಂದು ನೆಪ ಮಾತ್ರ. ವಾಸ್ತವವಾಗಿ ಇವರಿಗೆ ರಾಮನ ಮೇಲೆ ಎಳ್ಳಷ್ಟು ಕಾಳಜಿ ಇಲ್ಲ.
ಆದರೆ ಇವರಿಗೆ ಬೇಕಾಗಿರುವುದು ಅಸಮಾನತೆಯ ವರ್ಣಾಶ್ರಮದ ಬೇರುಗಳು. ಸನಾತನವಾದದ ಈ ಅಸಮಾನತೆಯ ಬೇರುಗಳು ಬ್ರಿಟಿಷರಿಂದ ಸ್ವಾತಂತ್ರ್ಯ ಲಭಿಸುವವರೆಗೂ ಭದ್ರವಾಗಿದ್ದವು. ಈ ನಡುವೆ ಬುದ್ಧನ ಕಾಲದಿಂದಲೂ ಈ ವರ್ಣಾಶ್ರಮದ ಬೇರುಗಳಿಗೆ ಧಕ್ಕೆಯಾದಗಲೆಲ್ಲ ಏನೆಲ್ಲಾ ತಂತ್ರಗಳನ್ನು ಮಾಡಿ, ಬಣ್ಣ ಬದಲಾಯಿಸಿಕೊಂಡು ತಮ್ಮ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿದ್ದಾರೆ ಎಂಬುದಕ್ಕೆ ಚರಿತ್ರೆಯಲ್ಲಿ ಸಾಕಷ್ಟು ನಿದರ್ಶನಗಳು ಕಂಡುಬರುತ್ತವೆ.
ಆದರೆ ಅದನ್ನು ಇಲ್ಲಿ ಚರ್ಚಿಸುವುದಕ್ಕೆ ಅವಕಾಶವಿಲ್ಲ. ಆದರೆ ಭಾರತದ ನೆಲದಲ್ಲಿ ವೈದಿಕತೆಯ ವಿರುದ್ಧ ಸಮರ ಸಾರಿದ ಎಲ್ಲ ಅವೈದಿಕ ಶ್ರಮಣಧಾರೆಗಳನ್ನು ಸನಾತನವಾದಿಗಳುವೈದಿಕೀಕರಣಗೊಳಿಸಿರುವುದು ಮಾತ್ರ ಸತ್ಯ. ಇದಕ್ಕೆ ನಿದರ್ಶನವಾಗಿ ಸಮಾನತೆಯ ಜೀವಪರ ಮೌಲ್ಯಗಳನ್ನು ಎತ್ತಿಹಿಡಿದ ಬುದ್ಧ, ಬಸವಣ್ಣನಂತಹ ದಾರ್ಶನಿಕರು ಇಂದು ದೇವರಾಗಿ ಪೂಜೆಗೊಳ್ಳುತ್ತಿದ್ದಾರೆ. ಆದರೆ ಈ ಎಲ್ಲಾ ದಾರ್ಶನಿಕರ ಜೀವಪರ ನಿಲುವುಗಳನ್ನು ತಿಂದು ಜೀರ್ಣಿಸಿಕೊಂಡಿದ್ದ ಸನಾತನವಾದಿಗಳಿಗೆ ನುಂಗಲಾರದ ತುತ್ತಾಗಿದ್ದು ಮಾತ್ರ ಬಾಬಾಸಾಹೇಬ್ ಅಂಬೇಡ್ಕರ್ ನೀಡಿದ ಅತ್ಯಮೂಲ್ಯವಾದ ಸಂವಿಧಾನ.
ಭಾರತವನ್ನು ಬ್ರಿಟಿಷರ ದಾಸ್ಯದಿಂದ ಬಿಡಿಸಿಕೊಂಡು ಮತ್ತೇ ಮನುವಾದಿ ಭಾರತವನ್ನು ನಿರ್ಮಿಸಬೇಕು ಎಂಬುದು ಸನಾತನವಾದಿಗಳ ಆಶಯವಾಗಿತ್ತು. ಆದರೆ ಬಾಬಾಸಾಹೇಬ ಕನಸ್ಸಿನ ಪ್ರಬುದ್ಧ ಭಾರತವು ಮನುವಾದಿಗಳಿಗೆ ಸಹಿಸದ ತುತ್ತಾಗಿತ್ತು. ಅಷ್ಟೇ ಅಲ್ಲದೇ ಶತ ಶತಮಾನಗಳಿಂದ ಕಾಪಾಡಿಕೊಂಡು ಬಂದಿದ್ದ ತಮ್ಮ ಅಸಮಾನತೆಯ ಗೊಡ್ಡು ಸಂಪ್ರದಾಯಗಳಿಗೆ ಬಾಬಾಸಾಹೇಬರು ತಿಲಾಂಜಲಿಯನ್ನು ಇಟ್ಟು ಸಮಾನತೆ ನಾಡಿಗಾಗಿ ಶ್ರಮಿಸಿದರು.
ಸಂವಿಧಾನದ ಜಾರಿಯಿಂದ ತಮಗೆ ಅಸ್ತಿತ್ವವಿಲ್ಲವೆಂದು ತಿಳಿದ ಮನುವಾದಿಗಳು ಕೋಮುವಾದವನ್ನು ಹುಟ್ಟಿಹಾಕುವ ಮೂಲಕ ಸಾಮಾನ್ಯ ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನಕ್ಕೆ ಮುಂದಾದರು. ಹಿಂದೂ-ಮುಸಲ್ಮಾನ್-ಕ್ರೈಸ್ತರಲ್ಲಿ ವಿಷಬೀಜ ಬಿತ್ತುವ ತಂತ್ರಗಳಿಗೆ ಮುಂದಾದರು. ಇಂತಹ ಸಂದರ್ಭದಲ್ಲಿ ಇವರಿಗೆ ಸಿಕ್ಕಿದ್ದೆ ಬಾಬರಿ ಮಸಿದಿ. ತಮ್ಮದಲ್ಲದ ಜಾಗದಲ್ಲಿ ರಾತ್ರೋರಾತ್ರಿ ರಾಮನ ವಿಗ್ರಹ ಸ್ಥಾಪನೆ ಮಾಡಿದ ಸನಾತನವಾದಿಗಳು ಒಂದಿಲ್ಲ ಒಂದು ರೀತಿಯಲ್ಲಿ ಗಲಭೆಗಳನ್ನು ಸೃಷ್ಟಿಸುತ್ತಲೆ ಬಂದರು.
ಕೊನೆಗೆ ರಾಮ ಇದೇ ಜಾಗದಲ್ಲಿ ಜನ್ಮತಳೆದಿದ್ದ, ಈ ಹಿಂದೆ ಇಲ್ಲಿ ರಾಮ ಮಂದಿರವಿತ್ತು. ಬಾಬರ್ ಅದನ್ನು ದ್ವಂಸ ಮಾಡಿ ಮಸಿದಿ ನಿರ್ಮಾಣ ಮಾಡಿದ್ದಾನೆ ಎಂಬ ಕಟ್ಟುಕಥೆಗಳು ನಿರ್ಮಾಣವಾದವು. ನಂತರ ಕೋಮುವಾದಿಗಳ ತಂತ್ರಕ್ಕೆ ಬಲಿಯಾಗಿ ಮಸಿದಿಯು ನೆಲಸಮವಾಯಿತು. ಅಂದಿನಿಂದ ಇಂದಿನವರೆಗೂ ಒಂದಿಲ್ಲ ಒಂದು ರೀತಿಯಲ್ಲಿ ಕೋಮುಗಲಭೆಗಳು ನಡೆಯುತ್ತಲೆ ಇದ್ದವು. ಕೋರ್ಟಿನಲ್ಲಿ ಯಾರ ಪರವಾಗಿಯೂ ಯಾರ ವಿರುದ್ಧವಾಗಿಯೂ ತೀರ್ಪು ನೀಡಲಾಗದ ನ್ಯಾಯಾಲಯವು ಈ ಪ್ರಕರಣವನ್ನು ಮುಂದೂಡುತ್ತಲೆ ಬರಲಾಗಿತ್ತು. ನ್ಯಾಯಾಲಯವು ಹೀಗೆ ಸಮಯವನ್ನು ಮುಂದೂಡುವುದಕ್ಕೆ ಕಾರಣವು ಇತ್ತು.
ಸನಾತನವಾದಿಗಳು ಹುಸಿ ದೇಶಭಕ್ತಿ ಹಾಗೂ ದೇಶಪ್ರೇಮದ ಅಡಿಯಲ್ಲಿ ಸೃಷ್ಟಿಸಿದ ಈ ಪ್ರಕರಣವನ್ನೇ ತನ್ನ ಬಂಡವಾಳ ಮಾಡಿಕೊಂಡ ಸಂಘಪರಿವಾರದ ರಾಜಕೀಯ ಮುಖವಾದ ಬಿ.ಜೆ.ಪಿ ಸರ್ಕಾರವು ತನ್ನ ರಾಜಕೀಯ ವೈಭೋಗಕ್ಕೆ ಈ ಪ್ರಕರಣವನ್ನು ಬಳಸಿಕೊಂಡಿತು. ಈ ಪ್ರಕರಣವನ್ನು ಬಿ.ಜೆಪಿ ಸರ್ಕಾರವು ಎಷ್ಟರ ಮಟ್ಟಿಗೆ ಬಳಸಿಕೊಂಡಿತು ಎಂದರೆ ದೇಶದ ಆರ್ಥಿಕತೆ ಬೆತ್ತಲಾಗಿ, ನಿರುದ್ಯೋಗ ಗಗನ ಮುಟ್ಟಿದರೂ, ಜಿ.ಎಸ್ಟಿಯಂತಹ ತೆರಿಗೆಗಳು ಸಾಮಾನ್ಯ ಜನರು ತಿನ್ನುವ ಅನ್ನವನ್ನು ಕಸಿದುಕೊಂಡರು ಜನರು ಮಾತ್ರ ಮೋದಿಗೆ ಜೈಕಾರ ಹಾಕುವುದು ತಪ್ಪಲಿಲ್ಲ.
ಇದಕ್ಕೆ ಕಾರಣ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಮ ಮಂದಿರವನ್ನು ಕಟ್ಟುತ್ತದೆ ಎಂಬ ಆಶಾ ಭಾವನೆಯಾಗಿತ್ತು. ಆದರೆ ಮೋದಿ ಸರ್ಕಾರ ಇದನ್ನೇ ಬಂಡವಾಳ ಮಾಡಿಕೊಂಡು ಎರಡನೇ ಭಾರಿ ಅಧಿಕಾರ ಹಿಡಿಯುವ ಸಂದರ್ಭಕ್ಕಾಗಲೇ ಭಾರತೀಯರನ್ನು ಬೆತ್ತಲೆಗೊಳಿಸಿಯಾಗಿತ್ತು. ಈ ಸಂದರ್ಭದಲ್ಲಿ ಜನರು ತಮ್ಮ ಸರ್ಕಾರವನ್ನು ವಿರೋಧಿಸದಂತೆ ಬಾಯಿ ಮುಚ್ಚಿಸುವ ತಂತ್ರವಾಗಿ ಅಯೋಧ್ಯ ತೀರ್ಪು ಹಿಂದುಗಳ ಪರವಾಗಿ ಬರುವಂತೆ ನೋಡಿಕೊಂಡರು.
ಆದರೆ ಸರ್ವೋಚ್ಚ ನ್ಯಾಯಾಲಯ ನೀಡಿದೆ ಎನ್ನುವ ಕಾರಣಕ್ಕಾಗಿ ಎಲ್ಲರೂ ಈ ತೀರ್ಪಿಗೆ ತಲೆಭಾಗಿದರೇ ಹೊರತು, ಇದಕ್ಕೆ ಬಹುತೇಕ ಬುದ್ಧಿಜೀವಿಗಳು ಅಸಮಾಧಾನವನ್ನು ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಹಲವಾರು ನಿವೃತ್ತ ನ್ಯಾಯಾಧೀಶರು ಕೂಡ ಈ ತೀರ್ಪಿನ ಬಗ್ಗೆ ಸಂವಿಧಾನಿಕ ಚೌಕಟ್ಟಿನಲ್ಲಿ ವಿರೋಧವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರಮುಖ ಕಾರಣವೆಂದರೆ ಧರ್ಮದ ಹೆಸರಿನ ಮೇಲೆ ಹೊರಬಂದ ತೀರ್ಪಿನಲ್ಲಿ ನಿಜವಾದ ಧರ್ಮ ಸೋತಿತ್ತು. ಅಧರ್ಮ ತಲೆ ಎತ್ತಿ ನಿಂತಿತ್ತು.
ಚರಿತ್ರೆಯ ಪುಟಗಳಲ್ಲಿ ಒಬ್ಬ ರಾಜ ತನ್ನ ಧರ್ಮದ ಸಂಕೇತವಾಗಿ ನಿರ್ಮಾಣ ಮಾಡಿದ ಧಾರ್ಮಿಕ ಕೇಂದ್ರವು ನಮ್ಮ ಕಣ್ಣ ಮುಂದೆಯೇ ಇದೆ. ಆದರೆ ಇದನ್ನು ಕೆಡವಿರುವುದು ಅಕ್ಷಮ್ಯ ಅಪರಾಧ ಎನ್ನುವುದು ಕೂಡ ನ್ಯಾಯಾಲಯಕ್ಕೆ ಸ್ಪಷ್ಟವಾಗಿ ಗೊತ್ತಿದೆ. ಹೀಗಿದ್ದರೂ ತನ್ನ ತೀರ್ಪಿನಲ್ಲಿ ಮಸಿದಿಯನ್ನು ಕೆಡವಿದ್ದು ಅಪರಾಧ ಎಂದು ಬಿಂಬಿಸಿದರೂ ಕೂಡ, ತೀರ್ಪು ಬಂದಿದ್ದು ಕಟ್ಟು ಕಥೆಯನ್ನು ಕಟ್ಟಿದವರ ಪರವಾಗಿಯೇ.
ನ್ಯಾಯಲಯ ನೀಡಿದ ಈ ತೀರ್ಪು ನಿಜವಾದ ನ್ಯಾಯಧರ್ಮಕ್ಕೆ ಮಾಡಿದ ಅಪಚಾರದಂತಿದೆ.ಅಯೋಧ್ಯೆಯಲ್ಲಿ ಮಸಿದೆ ಇತ್ತು ಎಂಬುದು ನಮ್ಮ ಕಣ್ಣ ಮುಂದಿನ ಸತ್ಯ. ಆದರೆ ಅಲ್ಲಿ ರಾಮಜನ್ಮ ತಳೆದಿದ್ದ ಎಂಬುದು ಕೇವಲ ಕಟ್ಟು ಕಥೆಯಾಗಿದೆ. ನ್ಯಾಯಾಲಯಕ್ಕೆ ಕಟ್ಟುಕಥೆಗಳು ಸಾಕ್ಷ್ಯಗಳಾಗಲು ಸಾಧ್ಯವೇ ಇಲ್ಲ. ಆದರೆ ರಾಜಕೀಯ ಪ್ರೇರಿತವಾದ ಕಾರಣದಿಂದಾಗಿ ಚರಿತ್ರೆಯ ಕುರುಹುಗಳನ್ನು ಕಡೆಗಣಿಸಿ, ದಂತಕಥೆಗೆ ನ್ಯಾಯ ಕಲ್ಪಿಸಿದ್ದು ಮಾತ್ರ ಅನ್ಯಾಯಕ್ಕೆ ಸಿಕ್ಕ ಜಯ ಎಂಬುದರಲ್ಲಿ ಎರಡು ಮಾತಿಲ್ಲ.
ಹಿಂದೂಗಳ ಪರವಾದ ತೀರ್ಪು ಬಂದಾಯ್ತು ನಿಜ. ಆದರೆ ಹಿಂದೂಧರ್ಮದಲ್ಲಿ ಮನೆ ಮಾಡಿಕೊಂಡಿದ್ದ ಎಲ್ಲಾ ಅನಿಷ್ಟಗಳು ರಾಮಮಂದಿರ ನಿರ್ಮಾಣದಿಂದ ದೂರವಾಗುತ್ತವೆ ಎಂದು ಆಶಾಭಾವನೆಯನ್ನು ತಳೆಯೊಣವೇ ಹಾಗಾದರೆ..! ಇಲ್ಲ, ನಿಜವಾದ ಸಮಸ್ಯೆಗಳು ಎದುರಾಗುವುದೇ ಇಲ್ಲಿ.
ಹಿಂದುತ್ವವನ್ನು ಕಾಪಾಡುತ್ತೇವೆ ಎಂದು ಹೇಳುತ್ತಲೇ ರಾಜಕಿಯ ಚುಕ್ಕಾಣಿ ಹಿಡಿದಿರುವ ಪಕ್ಷವು ದೇಶವನ್ನೇ ದಿವಾಳಿತನಕ್ಕೆ ತಳ್ಳುತ್ತಿದೆ.ದೀನ ದಲಿತರು ಧರ್ಮದ ಹೆಸರಿನಲ್ಲಿ ಬಲಿ ಪಶುಗಳಾಗುತ್ತಿದ್ದಾರೆ. ದೀನ ದಲಿತರ ಹೆಣ್ಣುಮಕ್ಕಳಿಗೆ ಅಭದ್ರತೆ ಎದ್ದು ಕಾಡುತ್ತಿದೆ. ನಿರುದ್ಯೋಗ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ. ಇದಕ್ಕೆ ಕಾಶ್ಮೀರವೇ ಜ್ವಲಂತ ಸಾಕ್ಷಿಯಾಗಿದೆ.
ಇಷ್ಟೆಲ್ಲ ಸಂಕಷ್ಟದ ನಡುವೆಯೂ ಮೋದಿಯ ಜೈಕಾರ ಜ್ವಾಲೆ ಮಾತ್ರ ಮುಗಿಲು ಮುಟ್ಟುತ್ತಿದೆ. ಆ ಜ್ವಾಲೆ ಮುಂದೆ ಕೂಗುವವರು ಹಿಂದೆ ತಮ್ಮನ್ನು ಸುಡುತ್ತದೆ ಎಂಬ ಅರಿವಿಲ್ಲದೆ ನಿಂತಿದ್ದಾರೆ. ಮುಂದೊಂದು ದಿನ ಈ ಪರಿಸ್ಥಿತಿಯು ಸಾಮಾನ್ಯ ಜನರನ್ನು ಯಾವ ಹಂತಕ್ಕೆ ತೆಗೆದುಕೊಂಡು ಹೋಗುತ್ತದೆಯೋ ಗೊತ್ತಿಲ್ಲ. ಆದರೆ ಒಂದಂತು ಸತ್ಯ, ಸರ್ವರು ಸಮಾನರೆಂದು ಸಾರಿದ ಭಾರತದ ಸಂವಿಧಾನದ ಆಶಯಗಳನ್ನು ಒಂದೊಂದಾಗಿಯೇ ಸಡಿಲಗೊಳಿಸುವ ಕಾರ್ಯವಂತೂ ನಿಧಾನವಾಗಿ ಸಾಗುತ್ತಲೆ ಇದೆ.
ಇದಕ್ಕೆ ದಮನಿತ ಸಮುದಾಯದ ಪ್ರಬಲರೂ ಬೆಂಬಲವಾಗಿ ನಿಂತಿರುವುದು ಮತ್ತೊಂದು ದುರಂತವಾಗಿದೆ. ಈ ಎಲ್ಲರದ ನಡುವೆ ಧರ್ಮ ಸೋತು, ಅಧರ್ಮ ತಾಂಡವವಾಡುತ್ತಿದೆ. ಮುಂದೊಂದು ಇಂತಹ ಅಪಾಯಕಾರಿ ತೀರ್ಪು ಭಾರತೀಯರೆಲ್ಲರನ್ನು ಸಮಾನವಾಗಿ ಕಾಣುವಂತಹ ಸಂವಿಧಾನವನ್ನೇ ಬಲಿ ತೆಗೆದುಕೊಳ್ಳುವ ಸಂದರ್ಭ ನಮ್ಮ ಮುಂದಿದೆ. ಇದಕ್ಕೆ ನಿದರ್ಶನವಾಗಿ ಅಯೋಧ್ಯೆ ತೀರ್ಪು ನಮ್ಮ ಮುಂದಿದೆ.
ಯಾರು ಕಂಡಿರದ, ನೋಡಿರದ ಕಾಲದಲ್ಲಿ ರಾಮ ಜನಿಸಿದ ಎಂಬ ಕಟ್ಟುಕಥೆಗೆ ಮಹತ್ವ ನೀಡಿ, ನಮ್ಮ ಕಣ್ಣ ಮುಂದೆ ನಡೆದ ಮಸಿದಿಯನ್ನು ಮುಚ್ಚಿ ಹಾಕಲಾಯಿತು. ಮುಂದೊಂದು ದಿನ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಬಾಬಾಸಾಹೇನ್ ಅಂಬೇಡ್ಕರ್ ಅವರು ಮನುವಾದವನ್ನು ತುಳಿದು ಸಂವಿಧಾನ ರಚಿಸಿದ್ದಾರೆ.
ಇದರಿಂದ ಹಿಂದುಗಳಿಗೆ ಮತ್ತು ಹಿಂದುತ್ವದ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ ನಮಗೆ ಸಂವಿಧಾನ ಬೇಡ ಮನುವಾದ ಬೇಕು ಎಂಬ ವಾದವು ನ್ಯಾಯಾಲಯದ ಮೆಟ್ಟಲೇರಿದರೂ ಆಶ್ಚರ್ಯಪಡಬೇಕಿಲ್ಲ. ಆಗ ದೇಶದ ಚುಕ್ಕಾಣಿಯು ಇಂತಹ ಕೋಮುವಾದಗಳ ಕೈಯಲ್ಲಿದ್ದರೆ ನ್ಯಾಯಾಲಯದ ತೀರ್ಪು ಯಾವುದರ ಪರವಾಗಿ ಬರುತ್ತದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ19 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ22 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ23 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ19 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

