Connect with us

ಲೈಫ್ ಸ್ಟೈಲ್

ಜಾನುವಾರುಗಳ ಗೆರಸಲು(ಕಾಲು-ಬಾಯಿ ಜ್ವರ) ರೋಗವೂ,.. ಕರುವುಗಲ್ಲಮ್ಮ ದೇವತೆಯೂ..

Published

on

ರೈತರ ಮಕ್ಕಳು ದಯಮಾಡಿ ಈ ಲೇಖನವನ್ನು ತಪ್ಪದೇ ಓದಿರಿ…

  • ಡಾ.ವಡ್ಡಗೆರೆ ನಾಗರಾಜಯ್ಯ

ಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು. ಅವುಗಳನ್ನು ನಾವು ಸಾಕುತ್ತಿದ್ದೆವು ಎಂಬುದಕ್ಕಿಂತಲೂ ಆ ‘ಜೀವಧನ’ಗಳು ನಮ್ಮನ್ನು ಸಾಕುತ್ತಿದ್ದವು ಎಂದು ಹೇಳಿದರೆ ಸರಿಯಾದೀತು. ಜಾನುವಾರುಗಳನ್ನು ನಮ್ಮ ಪೂರ್ವಿಕರು ‘ಜೀವಧನ’ ಎಂದು ಕರೆದಿರುವುದು ಅನ್ವರ್ಥಕವಾಗಿದೆ.

ಜೀವಧನ ಎಂದರೆ ಜೀವಂತ ಹಣ! ಈ ಜೀವಧನಗಳು ಜೀವಂತ ಹಣ ಮಾತ್ರವಾಗಿರದೆ ಹಣಕ್ಕಿಂತಲೂ ಮಿಗಿಲಾಗಿ ನಮ್ಮ ಜೀವಭಾವದೊಂದಿಗೆ ನಂಟು ಬೆಸೆದುಕೊಂಡಿರುತ್ತಿದ್ದವು. ಜಾನುವಾರುಗಳನ್ನು ನೋಟುಗಳ ರೂಪದ ಆರ್ಥಿಕ ದೃಷ್ಟಿಯಿಂದ ನೋಡುವುದೇ ಅಮಾನವೀಯ ಅನ್ನಿಸುತ್ತದೆ.

ಪುರಾತನ ಕಾಲದ ಚೇಗಿದ ಮರವೊಂದನ್ನು ನಾವು ಹಣದ ರೂಪದಲ್ಲಿ ಬೆಲೆಕಟ್ಟಲು ಹೋದರೆ, ಆ ಮರವು ಇಷ್ಟೂ ದೀರ್ಘ ವರ್ಷಗಳ ಕಾಲ ನೀಡಿದ ನೆರಳು, ಒದಗಿಸಿದ ಆಶ್ರಯ, ಕಣ್ಮನಗಳಿಗೆ ತಂಪು ತುಂಬಿದ ಸೌಂದರ್ಯ, ಪಸರಿಸಿದ ಗಾಳಿಗಮಲು, ಕರುಣಿಸಿದ ಹಣ್ಣುಹಂಪಲು ಮುಂತಾದವುಗಳಿಗೆ ಯಾವ ಬೆಲೆ ಕಟ್ಟಲು ಸಾಧ್ಯ?

ದನಕರು ಕುರಿಮೇಕೆ ಕೋಳಿಗಳನ್ನು ಸಾಕುತ್ತಾ ಅವುಗಳೊಂದಿಗೆ ನಾವು ಬದುಕು ಕಟ್ಟಿಕೊಂಡಿದ್ದೆವು. ಅವುಗಳು ಖಾಯಿಲೆ-ಕಸಾಲೆ ಮುಂತಾದ ಕಾರಣಗಳಿಂದ ಅಕಾಲ ಮರಣಕ್ಕೀಡಾದರೆ ನಮ್ಮದೇ ಕಳ್ಳುಬಳ್ಳಿಯನ್ನು ಕಳೆದುಕೊಂಡಂತೆ ತೀವ್ರ ದುಃಖ ನಮ್ಮನ್ನು ಆವರಿಸುತ್ತಿತ್ತು.

ಜಾನುವಾರುಗಳಿಗೆ ಬಾಧಿಸುವ ಗೆರಸಲು ರೋಗ (ಕಾಲು – ಬಾಯಿ ಜ್ವರ), ಕುಂದು, ಚಪ್ಪೆರೋಗ ಮುಂತಾದವು ಕಾಣಿಸಿಕೊಂಡರಂತೂ ನಮ್ಮ ಕರುಳು ಬಾಯಿಗೆ ಬಂದಂತೆ ನಡುಗಿಹೋಗುತ್ತಿದ್ದೆವು. ಅವುಗಳ ನರಳಾಟ ನೋಡಿ ಕಣ್ಣೀರಾಕುತ್ತಿದ್ದ ನನ್ನ ಅಪ್ಪ, ಊಟ ನೀರು ನಿದ್ದೆ ಎಲ್ಲವನ್ನೂ ಬಿಟ್ಟು ಒದ್ದಾಡುತ್ತಿದ್ದ. ತನಗೆ ತೋಚಿದ ಗಿಡಮೂಲಿಕೆ ಮುಂತಾದ ಮುದ್ದುಗಳನ್ನು ಬಳಸುವುದರ ಜೊತೆಗೆ, ರೋಗಪೀಡಿತ ದನಗಳಿಗೆ ನಾಟಿ ಔಷಧ ನೀಡುವ ಪಂಡಿತರನ್ನು ಹುಡುಕಾಡಿಕೊಂಡು ಅಲೆದಾಡುತ್ತಿದ್ದ.

ತಿಗಳರ ಬೈಲಪ್ಪ, ಬುಡ್ಡೆ ಈರಣ್ಣ, ಮಂತ್ರವಾದಿ ವೆಂಕಟಸ್ವಾಮಯ್ಯ, ಬಡಗಿ ಮುದ್ಧಣ್ಣ ಮುಂತಾದ ಪಂಡಿತರು ನಮ್ಮೂರ ದನಗಳಿಗೆ ನಾಟಿಮದ್ದು ನೀಡುತ್ತಿದ್ದರು. ನಾಟಿಮದ್ದು ಕೊಡಿಸುವುದರ ಜೊತೆಗೆ ಇಂಗ್ಲೀಷ್ ಔಷಧವನ್ನೂ ಕೊಡಿಸಬೇಕೆಂದು ಆಲೋಚಿಸುತ್ತಿದ್ದ ನಾನು, ನಮ್ಮೂರಿನಲ್ಲಿಯೇ ಇದ್ದ ಪಶುಸಂಗೋಪನೆ ಇಲಾಖೆಯ ಸರ್ಕಾರಿ ಪಶು ಚಿಕಿತ್ಸಾಲಯದ ‘ದನಿನ ಡಾಕ್ಟರ್’ ಡಾ.ಹುಲಿಯಪ್ಪನ ಬರುವಿಕೆಗಾಗಿ ದಾರಿ ಕಾಯುತ್ತಾ ಆಸ್ಪತ್ರೆಯ ಬಾಗಿಲಲ್ಲಿ ನಿಲ್ಲುತ್ತಿದ್ದೆ.

ಪುಟಗೋಸಿ ಬಿಗಿಮಾಡಿಕೊಂಡು ಲಾಡಿದಾರದಲ್ಲಿಯೋ ಉಡುದಾರದಲ್ಲಿಯೋ ಕಟ್ಟಿಕೊಂಡಿದ್ದ ಪುಡಿಕಾಸನ್ನು ಔಷಧ ಇಂಜೆಕ್ಷನ್ ಪೌಡರ್ ಮುಂತಾದವುಗಳಿಗಾಗಿ ಅಪ್ಪ ಸುರಿಯುತ್ತಿದ್ದ. ಅಮ್ಮನೂ ತನ್ನ ಕೂಲಿನಾಲಿಯ ದುಡ್ಡನ್ನು ಎಲೆಅಡಕೆಯ ಸಂಚಿಯಿಂದ ತೆಗೆದು ಕೊಡುತ್ತಿದ್ದಳು. ದಿಕ್ಕುದೇವರುಗಳಿಗೆಲ್ಲಾ ಕಾಸಿನ ಮುಡುಪು ಕಟ್ಟಿ ಹರಕೆ ಹೊರುತ್ತಿದ್ದಳು.

ವಿಶೇಷವಾಗಿ ಮುದುಗೆರೆ ಸಪ್ಪಲಮ್ಮ ಹಾಗೂ ಮಚ್ಚೇನಹಳ್ಳಿ(ದನಿನ) ಮಾರಮ್ಮ ದೇವರ ಹೆಸರುಗಳಲ್ಲಿ ಹರಿಷಿಣದ ಬಟ್ಟೆಯಲ್ಲಿ ಮುಡುಪು ಕಟ್ಟಿದ ಕಾಸನ್ನು ದೇವರ ಪಟದ ಮುಂದಿನ ಮೊಳೆ ಅಥವಾ ನಿಲದ(ನೆಲುವು) ನೇಕೆಹುರಿಗಳಿಗೆ ಗಂಟು ಹೂಡುತ್ತಿದ್ದಳು.ಸ್ಥಳೀಯ ದೇವರ ಗುಡಿಗಳಿಗೆ ಹೋಗಿ ಪೂಜೆ ಮಾಡಿಸಿ ತೆಂಗಿನಕಾಯಿಯ ತೀರ್ಥವನ್ನು ದನಗಳ ಮೈಮೇಲೆ, ನಮಗೆ ಮತ್ತು ಕೊಟ್ಟಿಗೆಗೆ ಚುಮುಕಿಸಿ ಎಲ್ಲರ ಹಣೆಗಳಿಗೂ ಬೊಟ್ಟಿಕ್ಕುತ್ತಿದ್ದಳು.

ಗೆರಸಲು ರೋಗ ಅಥವಾ ಕಾಲು- ಬಾಯಿ ಜ್ವರ ಎಂಬ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಂದು ರೋಗಗ್ರಸ್ತ ರಾಸಿನಿಂದ ಇನ್ನೊಂದು ಆರೋಗ್ಯವಂತ ರಾಸಿಗೆ ನೇರ ಸಂಪರ್ಕದಿಂದಲೂ, ಮೂತ್ರ ಗಂಜಳದ ವಾಸನೆ ತುಂಬಿಕೊಂಡ ಗಾಳಿಯ ಮೂಲಕವೂ ಹರಡಿಕೊಂಡು ಇಡೀ ಊರಿನ ಜಾನುವಾರುಗಳಿಗೆ ಅತೀ ಶೀಘ್ರವಾಗಿ ಹಬ್ಬಿಬಿಡುತ್ತಿತ್ತು.

ಕಲುಷಿತಗೊಂಡ ಮೇವು ಮತ್ತು ಮಲೆತ ನೀರನ್ನು ಸೇವಿಸುವುದರ ಮೂಲಕವೂ ಗೆರಸಲು ರೋಗಾಣುಗಳು ಹರಡುತ್ತವೆಂಬ ವೈಜ್ಞಾನಿಕ ತಿಳಿವಳಿಕೆ ಇರದಿದ್ದ ನಮ್ಮ ಪೂರ್ವಿಕರು, ಇವೆಲ್ಲವೂ ದೇವರುಗಳೇ ತಂದೊಡ್ಡುವ ದೊಡ್ಡ ರೋಗಗಳೆಂದು ನಂಬಿದ್ದರು.

ನಮ್ಮದು ಚಿಕ್ಕ ಮನೆ. ದನಗಳ ಗ್ವಾಂದಿಗೆ ಎದುರಿನಲ್ಲಿಯೇ ನಾವು ರಾತ್ರಿ ಹೊತ್ತು ಮಲಗಿರುತ್ತಿದ್ದೆವು. ದನಗಳು ಒಮ್ಮೊಮ್ಮೆ ಹಾಯ್ದಾಡುತ್ತಾ ಕೊಂಬುಗಳಿಂದ ಬಡಿದಾಡಿಕೊಂಡರೆ ಸಾಕು ಅಪ್ಪ ದಡಕ್ಕನೆ ಎದ್ದು ಕೂರುತ್ತಿದ್ದ. ಹಾಯ್ದಾಡುವ ದನಗಳನ್ನು ನಾವು ಸಾಕಿದ್ದೇ ಅಪರೂಪ. ನಮ್ಮ ಮನೆಯಲ್ಲಿದ್ದದ್ದು ಹಸುಮಕ್ಕಳಂತಹ ದನಗಳು.

ನಾನು ಒಮ್ಮೊಮ್ಮೆ ನೇರವಾಗಿ ಹಸುವಿನ ಕೆಚ್ಚಲಿಗೆ ಬಾಯಿಹಾಕಿ ಹಾಲು ಕುಡಿಯುತ್ತಿದ್ದೆನು. ನಮ್ಮ ಮನೆಯಲ್ಲಿದ್ದ ದನಗಳು ಅಂತಹ ಸಾಧುಜೀವಿಗಳಾಗಿದ್ದವು. ಇಂಥಾ ಹಸುಗಳಿಗೆ ಗೆರಸಲು ರೋಗ ತಗುಲಿದಾಗ ರೋಗಗ್ರಸ್ತ ರಾಸಿನಲ್ಲಿ ಮೊದಲಿಗೆ ತೀವ್ರ ಜ್ವರ ಕಾಣಿಸುಕೊಂಡು ಮೇವು ತಿನ್ನುವುದನ್ನು ನಿಲ್ಲಿಸಿಬಿಡುತ್ತಿತ್ತು. ಬಾಯಲ್ಲಿ ನೊರೆ ಎಂಜಲು ಸುರಿಸಿಕೊಂಡು ಮೂಗಿನಲ್ಲಿ ಸಿಂಬಳ ಸುರಿಸಿಕೊಂಡು ನೀರನ್ನೂ ಕೂಡಾ ಮುಟ್ಟದೆ ಮೈಕೂದಲು ಮುಳ್ಳೆದ್ದು ನಿಂತುಬಿಡುತ್ತಿತ್ತು.

ನಾವು ಹಾಲಿಂಡುವ ಮಾತಿರಲಿ ಕರುವಿಗೂ ಹಾಲೂಡುವುದನ್ನು ನಿಲ್ಲಿಸುತ್ತಿದ್ದ ಹಸುವಿಗೆ ನೋಡನೋಡುತ್ತಲೇ ಕಾಲು ಕುಂಟು ಬೀಳುತ್ತಿತ್ತು. ಮುಸುಡಿಯ ಮೇಲೆ ಚಿಕ್ಕ ಚಿಕ್ಕ ಗುಳ್ಳೆಗಳೆದ್ದು ಆ ಗುಳ್ಳೆಗಳೊಡೆದು ಬಾಯಿಯ ಜೊಲ್ಲು ವಾಸನೆ ನಮ್ಮ ಮನೆ ತುಂಬಾ ಹರಡಿಕೊಳ್ಳುತ್ತಿತ್ತು. ನನ್ನ ಅಪ್ಪನು ಹಸುವಿನ ಬಾಯಿಯನ್ನು ಭದ್ರವಾಗಿ ಹಿಡಿದು ಕೈಗಳಿಂದ ಮುಸುಡಿಯನ್ನು ವಸಡುಗಳನ್ನೂ ಅಗಲವಾಗಿ ತೆಗೆದು ಬಾಯಿಯ ಮತ್ತು ನಾಲಗೆಯ ಹುಣ್ಣುಗಳನ್ನು ಗಮನಿಸುತ್ತಿದ್ದ.

ವಸಡು ನಾಲಗೆ ಮುಸುಡಿಯ ಮೇಲೆಲ್ಲಾ ಅಲ್ಸರ್ ಬೊಬ್ಬೆಗಳೆದ್ದು ಈರುಳ್ಳಿ ಪೊರೆ ತೆಗೆದಂತೆ ಅಲ್ಸರ್ ಪೊರೆಯುದುರಿದ ಜಾಗಗಳೆಲ್ಲಾ ಕೆಂಪಗೆ ಕಾಣಿಸುತ್ತಿದ್ದವು. ಚಿಕ್ಕ ಮಕ್ಕಳಾಗಿದ್ದ ನಾವು, ನಮ್ಮ ಹಸುವಿಗೆ ಒದಗಿದ ಪಾಡನ್ನು ಕಂಡು ಮನೆ ತುಂಬಾ ಅಳುತ್ತಿದ್ದೆವು. ನಾವು ಎಷ್ಟೇ ಪ್ರಯತ್ನಸಿದರೂ ಆ ಹಸು ಮೇವು ತಿನ್ನಲು ನೀರು ಕುಡಿಯಲು ನಿರಾಕರಿಸುತ್ತಿತ್ತು. ಪಾದಗಳ ಗೊರಸಿನ ಸೀಳುಗಳಲ್ಲಿಯೂ ಹುಣ್ಣುಗಳಾಗಿ ನೊಣ ಸೊಳ್ಳೆ ಜೀರುಂಡೆಗಳು ಕುಳಿತು ಹುಣ್ಣುಗಳು ದೊಡ್ಡ ವ್ರಣಗಳಾಗಿ ಹುಳುಗಳು ಬೀಳುತ್ತಿದ್ದವು. ಕೆಲವೊಮ್ಮೆ ಮೊಲೆತೊಟ್ಟು ಮತ್ತು ಕೆಚ್ಚಲಿಗೂ ಗುಳ್ಳೆಗಳು ಹಬ್ಬುತ್ತಿದ್ದವು.

ಅಪ್ಪನು ಬೆಟ್ಟ ಗುಡ್ಡ ಬಯಲು ಅಲೆದಾಡಿ ಲೋಳೆಸರ (ಆಲೋವೆರಾ) ತಂದು ಬೆಂಬೂದಿಯಲ್ಲಿ ಸುಟ್ಟು, ಹಿಂಡಿ ತೆಗೆದ ರಸವನ್ನು ದನಗಳ ಬಾಯಿ ನಾಲಗೆ ವಸಡು ಗೊರಸುಗಳ ಮೇಲೆ ಸವರಿ ಬಿಳಿ ಪಾವುಡದಲ್ಲಿ ಒರೆಸುತ್ತಿದ್ದ. ಗೊರಸಿನ ಗಾಯಗಳನ್ನು ಬಿಸಿನೀರಿನಲ್ಲಿ ತೊಳೆದು, ಸೀಳುಗಳಿಗೆ ಹೊಂಗೆಣ್ಣೆ, ಹಿಪ್ಪೆ ಎಣ್ಣೆ ಅಥವಾ ಬೇವಿನೆಣ್ಣೆ ಸುರಿಯುತ್ತಿದ್ದೆವು ಕೋಳಿಪುಕ್ಕ ಅಥವಾ ಗರಿಕೆ ಎಸಳನ್ನು ಬೇವಿನೆಣ್ಣೆಯಲ್ಲಿ ಅದ್ದಿ ಸೀಳುಸೀಳಿಗೂ ಹಚ್ಚಿದರೆ ನೊಣ ಕೂರುತ್ತಿರಲಿಲ್ಲ.

ಗುಡಾಣದಲ್ಲಿ ಬಿಸಿನೀರು ಕಾಯಿಸಿ ಮೈತೊಳೆಯುತ್ತಿದ್ದೆವು. ಬಲು ಎಚ್ಚರದಿಂದ ದನದ ಕೊಟ್ಟಿಗೆಯಲ್ಲಿ ತೆಂಗಿನ ಗರಿಗಳಿಗೆ ಬೆಂಕಿ ಹಚ್ಚಿ ಧಗಧಗಿಸುವ ಜ್ವಾಲೆಯ ಮೇಲೆ ಬೇವಿನಸೊಪ್ಪು ಲಕಲಿಸೊಪ್ಪು ತಂಗಡಿಸೊಪ್ಪು ಕಕ್ಕೆಸೊಪ್ಪು ಮುಂತಾದ ನಾಲ್ಕಾರು ಬಗೆಯ ಹಸಿರು ತೊಪ್ಪಲು ಹಾಕಿ ಉರಿಸಿ ಹೊಗೆ ತುಂಬಿಸಿ, ಹಸಿರೆಲೆ ಹೊಗೆಯ ಕಾವಿನಲ್ಲಿ ದನಗಳನ್ನು ನಿಲ್ಲಿಸುತ್ತಿದ್ದೆವು.

ಗೆರಸಲು ರೋಗದಿಂದ ನಮ್ಮ ಹಸುಗಳು ನರಳುವಾಗ ಅಮ್ಮನು ಮೂರ್ನಾಲ್ಕು ಸೇರಿನಷ್ಟು ಹುರುಳಿಕಾಳನ್ನು ನೀರಿನಲ್ಲಿ ನೆನೆಸಿ, ರುಬ್ಬು ಗುಂಡಿನಿಂದ ರುಬ್ಬಿ ಹುರುಳಿಕಾಳಿನ ಹಾಲನ್ನು ಸೋಸಿಕೊಡುತ್ತಿದ್ದಳು. ಕೆಲವೊಮ್ಮೆ ರಾಗಿ ಅಂಬಲಿಯನ್ನು ಕಾಯಿಸಿ ತಂದುಕೊಡುತ್ತಿದ್ದಳು. ಅಪ್ಪ ಅದೆಲ್ಲವನ್ನೂ ಬಿದಿರಿನ ಗೊಟ್ಟದಿಂದ ದನಗಳಿಗೆ ಕುಡಿಸುತ್ತಿದ್ದ. ಸ್ವಲ್ಪ ಚೇತರಿಕೆ ಕಾಣಿಸಿದಾಗ ಹಸಿ ಹುಲ್ಲು, ಹುರುಳಿ ಹೊಟ್ಟು, ತೊಗರಿ ಹೊಟ್ಟು, ಅವರೆ ಹೊಟ್ಟು, ಸಾವೆ ಹುಲ್ಲು, ಆರಕದ ಹುಲ್ಲು, ಕೊರಲೆ ಹುಲ್ಲು ಮುಂತಾದ ಮೆತ್ತನೆ ಮೇವನ್ನು ತಿನ್ನಿಸುತ್ತಿದ್ದ.

ನಾನು ನನ್ನ ಅಕ್ಕ ಮತ್ತು ತಮ್ಮಂದಿರು ಹಸಿ ಹುಲ್ಲನ್ನು ಹೊಲಮಾಳದಲ್ಲಿ ಕಿತ್ತು ತರುತ್ತಿದ್ದೆವು. ಅಂತೂ ಇಂತೂ ನಾಟಿಮದ್ದು, ಇಂಗ್ಲೀಷ್ ಮದ್ದು, ದೇಶಿಜ್ಞಾನದ ಚಿಕಿತ್ಸೆ, ಮೆತ್ತನೆಯ ಮೇವು ಮುಂತಾದ ಆರೈಕೆಗಳು ಫಲಿಸಿ ನಮ್ಮ ದನಗಳು ಮತ್ತೆ ಹೊಸ ಜೀವಕಳೆ ತುಂಬಿಕೊಳ್ಳುತ್ತಿದ್ದವು.ನಮ್ಮ ಮುಖದಲ್ಲೂ ನಗು ತರಿಸಿ ಬದುಕಿಗೆ ಕಳೆ ತುಂಬುತ್ತಿದ್ದವು.

ಇಲ್ಲಿ ನನ್ನದೇ ಅನುಭವಗಳನ್ನು ದಾಖಲಿಸಲು ನನಗೆ ಪ್ರೇರಣೆ ನೀಡಿದ್ದು ನಾನು ಇತ್ತೀಚೆಗೆ ಸಂಶೋಧಿಸಿದ ಒಂದು ಜಾನಪದ ಸ್ಥಳಪುರಾಣ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ದೇವರತೋಪು ಎಂಬ ಗ್ರಾಮದಲ್ಲಿರುವ ಕರುವುಗಲ್ಲಮ್ಮ ಎಂಬ ಗೋಕಲ್ಲನ್ನು ಕುರಿತ ಈ ಸ್ಥಳಪುರಾಣವು ಹದಿಮೂರು ಶತಮಾನಗಳಷ್ಟು ಹಿಂದಕ್ಕೆ ಸರಿಯುತ್ತದೆ. ಜಯಮಂಗಲಿ ನದಿಯ ತಟದಲ್ಲಿರುವ ದೇವರತೋಪು ಗ್ರಾಮದ ಪುರಾತನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅಂಗಳದಲ್ಲಿರುವ ಕರುವುಗಲ್ಲು ಆ ಊರಿನ ಹುಟ್ಟಿನ ಕಥೆಯನ್ನು ಹೇಳುತ್ತದೆ.

ಸೀಮಾಂಧ್ರದ ರಾಯಲಸೀಮಾ ಕರ್ನೂಲು ಜಿಲ್ಲೆಯ ಆಹೋಬಲಂ ಮೂಲದ ವೈಷ್ಣವ ಪಂಥೀಯ ಕಾಪುರೆಡ್ಡಿ ಸಮುದಾಯದ ಕೆಲವು ಕುಟುಂಬಗಳು ಆರು ಎತ್ತಿನ ಬಂಡಿಗಳನ್ನು ಕಟ್ಟಿಕೊಂಡು ದಕ್ಷಿಣ ಮಾರ್ಗವಾಗಿ ಮಧುಗಿರಿ ಸೀಮೆಗೆ ವಲಸೆ ಬಂದರು. ಕಡಪ – ಕದಿರಿ ಮಾರ್ಗವಾಗಿ ಪಿನಾಕಿನಿ ನದಿಯ ತೋಳುಗಳನ್ನಿಡಿದು ತಮ್ಮ ವಲಸೆ ದಾರಿಯನ್ನು ಮುಂದುವರೆಸಿ ನಡೆಯುತ್ತಿರುವಾಗ ಪಿನಾಕಿನಿಯು ಮೈದುಂಬಿದಳು.

ಕುಲದೇವತೆಯಾದ ಆಹೋಬಲ ನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿದ ಅವರು, ಪಿನಾಕಿನಿಯನ್ನು ಪ್ರಾರ್ಥಿಸಲು ಮೈದುಂಬಿ ಹರಿಯುತ್ತಿದ್ದ ಅವಳು ಬಂಡಿಜಾಡಿನಷ್ಟು ಓಣಿಯನ್ನು ಬಿಟ್ಟು ಹರಿದಳು. ಬಂಡಿಗಳು ಸಾಗಲು ಬಂಡಿಜಾಡಿನಷ್ಟು ಅಗಲ ಅವಕಾಶ ನೀಡಿದ ಪಿನಾಕಿನಿಗೆ ಕೈಮುಗಿದು ಪ್ರಯಾಣ ಮುಂದುವರೆಸಿದ ಕಾಪುರೆಡ್ಡಿಗಳು ದೊಡ್ಡದಾಳವಟ್ಟ ಎಂಬ ಊರಿನ ಸಮೀಪಕ್ಕೆ ಬಂದು ತಲುಪಿದಾಗ ಸಂಜೆಯಾಗಿತ್ತು.

ಬಂಡಿಗೆ ಹೂಡಿದ್ದ ಬಿಳಿ ಎತ್ತೊಂದು ಸತ್ತ ಕಾರಣ ಬಿಳಿ ಎತ್ತುಗಳ ಬಂಡಿಗಳಲ್ಲಿದ್ದ ಕುಟುಂಬದವರೆಲ್ಲರೂ ಅಲ್ಲಿಯೇ ಹಳ್ಳದ ದಿಡ್ಡೆಯಲ್ಲಿ ನೆಲೆಸಬೇಕೆಂದು ಹಾಗೂ ಕರಿ ಎತ್ತಿನ ಬಂಡಿಗಳ ಕುಟುಂಬಗಳು ತಮ್ಮ ಪ್ರಯಾಣವನ್ನು ಮುಂದಕ್ಕೆ ಬೆಳೆಸಬೇಕೆಂದು ತೀರ್ಮಾನಿಸಲಾಯಿತು. ಬಿಳಿ ಎತ್ತಿನ ಬಂಡಿಯ ಕುಟುಂಬಗಳು ಅಲ್ಲಿಯೇ ನೆಲೆಸಿ ತಮ್ಮ ಕುಲದೇವತೆ ನರಸಿಂಹಸ್ವಾಮಿಯ ಗುಡಿಯನ್ನು ಕಟ್ಟಿಕೊಂಡರು.

ಕರಿ ಎತ್ತಿನ ಬಂಡಿಯಲ್ಲಿದ್ದ ಕಾಪುರೆಡ್ಡಿ ಕುಟುಂಬದವರು ಕೊಡಿಗೇನಹಳ್ಳಿ ಹತ್ತಿರದ ತೋಪಿಗೆ ಬಂದಾಗ ಜಯಮಂಗಲಿಯು ಮೈದುಂಬಿ ಹರಿಯುತ್ತಿದ್ದಳು. ಆ ರಾತ್ರಿ ಅಲ್ಲಿಯೇ ಒಲೆಗುಂಡು ಹೂಡಿ ಅಟ್ಟುಂಡು ಬೆಳಗಾದಾಗ ಪ್ರಯಾಣ ಮುಂದುವರಿಸಲೆಂದು ಬಂಡಿಹೂಡಲು ಹೋದಾಗ ಕರಿ ಎತ್ತೊಂದು ತಾನು ಕಳೆದುಕೊಂಡ ಬಿಳಿ ಎತ್ತನ್ನು ನೆನೆದು ದುಃಖಿಸುತ್ತಾ ಮೇವು ನೀರು ಸೇವಿಸುವುದನ್ನು ನಿರಾಕರಿಸಿತು.

ಜ್ವರ ಬಂದು ಬಂಡಿಯ ನೊಗಕ್ಕೆ ಹೆಗಲು ಕೊಡಲೊಪ್ಪದೆ ಪಡಾವು ಮಲಗಿಬಿಟ್ಟಿತು. ಆಗ ಬಿಳಿ ಎತ್ತಿನ ನೆನಪಿಗಾಗಿ ಬೆಣಚುಕಲ್ಲಿನ ಬಿಳಿ ಗೋಕಲ್ಲನ್ನು ತಂದು ನಿಲ್ಲಿಸಲು ದುಃಖ ಮರೆತ ಆ ಎತ್ತು ಲವಲವಿಕೆಯಿಂದ ಮೇವುಕಚ್ಚಿ ನೊಮರು ಹಾಕಿತು. ಮೈದುಂಬಿ ಹರಿಯುತ್ತಿದ್ದ ಜಯಮಂಗಲಿ ನದಿಯ ದಂಡೆಯಲ್ಲಿ ತಮ್ಮ ಕುಲದೇವತೆಯಾದ ಲಕ್ಷ್ಮೀನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿ ಅವನಿಗೊಂದು ಗುಡಿಯನ್ನು ಕಟ್ಟಿ ಅಲ್ಲಿಯೇ ನೆಲೆಸಿದರು.

ಮುಂದೆ ಕರಿ ಎತ್ತು ತೀರಿಕೊಂಡಾಗ ಅದನ್ನು ಅಲ್ಲಿಯೇ ಸಮಾಧಿ ಮಾಡಿದರು. ಅಂದು ಸಮಾಧಿಗುಡ್ಡೆಯ ಗುರುತಿಗೆ ನೆಟ್ಟ ಗೋಕಲ್ಲು ಅಂದಿನಿಂದಲೂ ಕರುವುಗಲ್ಲಮ್ಮ ಎಂಬ ಹೆಸರಿನಲ್ಲಿ ಪೂಜಿಸಲ್ಪಡುತ್ತಿದೆ. ಇಲ್ಲಿನ ಸುತ್ತೇಳು ಊರುಗಳ ರೈತಾಪಿಗಳು ತಮ್ಮ ಜಾನುವಾರುಗಳಿಗೆ ಶ್ರೇಯಸ್ಕರವಾಗಲೆಂದು ಹಾಗೂ ಜಾನುವಾರುಗಳಿಗೆ ರೋಗರುಜಿನಗಳು ಬಂದಾಗ ಈ ಗೋಕಲ್ಲಿಗೆ ಹರಕೆ ಹೊತ್ತು ಪೂಜಿಸುತ್ತಿದ್ದಾರೆ. ಕರಿ ಗೋಕಲ್ಲಿನ ಪಕ್ಕದಲ್ಲಿಯೇ ಬಿಳಿ ಗೋಕಲ್ಲು ಕೂಡಾ ಇದೆ. ಇದು ಸ್ಥಳಪುರಾಣ.

ದಕ್ಷಿಣ ಕರ್ನಾಟಕದ ಬಹುತೇಕ ಊರುಗಳಲ್ಲಿ ಕರುವುಗಲ್ಲಮ್ಮ ಹೆಸರಿನಿಂದ ಪೂಜಿಸುವ ಗೋಕಲ್ಲುಗಳಿವೆ. ಜಾನುವಾರುಗಳಿಗೆ ಗೆರಸು ರೋಗ (ಕಾಲು – ಬಾಯಿ ಜ್ವರ) ಬಂದಾಗ, ಪ್ರತಿ ಕುಟುಂಬದ ರೈತರು ಕರುವುಗಲ್ಲಮ್ಮನ ಮೇಲೆ ಕೊಡಗಟ್ಟಲೆ ನೀರು ಸುರಿದು ಪೂಜಿಸುತ್ತಾರೆ. ನೀರು ಹರಿದ ದಾರಿಗುಂಟ ಬುರುದೆಯಲ್ಲಿ ತಮ್ಮ ಜಾನುವಾರುಗಳನ್ನು ಮೂರು ಸುತ್ತು ಓಡಾಡಿಸುತ್ತಾರೆ.

ಆಶ್ಚರ್ಯವೆಂಬಂತೆ ಗೊರಸಿನ ಸಂದಿಯಲ್ಲಿ ಹುಣ್ಣುಗಳಾಗಿ ಹುಳು ತುಂಬಿದ ಗೋಪಾದಗಳು ಬುರುದೆ ತುಂಬಿಕೊಂಡು ಹುಳು-ಹುಣ್ಣು ನೀಗಿಕೊಂಡು ಗೆಲುವಾಗುತ್ತಿದ್ದವು. ಮುಸುಡಿಮೂತಿ ನಾಲಗೆಯ ಹುಣ್ಣುಗಳೂ ವಾಸಿಯಾಗಿ ಮೇವು ತಿಂದು ಲವಲವಿಕೆಯಿಂದ ನೊಮರು ಹಾಕುತ್ತಿದ್ದವು. ಪಶು ಸಂಗೋಪನೆ ಇಲಾಖೆಯ ‘ದನಿನ ಡಾಕ್ಟರ್’ ದೇವತೆಗಳಿಗೂ ಸ್ಥಳೀಯ ನಾಟಿಔಷಧಿ ಪಂಡಿತ ದೇವತೆಗಳಿಗೂ ನಮಸ್ಕಾರ. ಈಗಿನ ಖಾಯಿಲೆ ಮತ್ತು ದೇವರ ಸ್ವರೂಪ ಬೇರೆ ಬೇರೆಯೇ ಆಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

ದಿನದ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

Published

on

ಸೆಪ್ಟೆಂಬರ್ ಅಂತ್ಯಕ್ಕೆ ಹೊಸ ಸೇವೆ ಜಾರಿ; ಮುಂದಿನ ವಾರವೇ `ನಮ್ಮ ಬಿಎಂಟಿಸಿ 2.0' ಆ್ಯಪ್ ಲೋಕಾರ್ಪಣೆ, 200 ಹೊಸ ಮಿನಿ ಡೀಸೆಲ್ ಬಸ್ ಖರೀದಿಗೆ ಸಿದ್ಧತೆ

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

http://Visit : www.suddidina.com

ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?

ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.

ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ: 

ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

200 ಹೊಸ ಮಿನಿ ಬಸ್‌ಗಳ ಖರೀದಿ:

ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.

ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:

ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

Continue Reading

ದಿನದ ಸುದ್ದಿ

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

Published

on

ಕರ್ನಾಟಕ – ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.

http://Visit : www.suddidina.com

ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.

ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.

ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.

ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

Continue Reading

Trending