Connect with us

ದಿನದ ಸುದ್ದಿ

ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ವರ್ತಕರು ಧಾನ್ಯಗಳನ್ನು ಕೊಳ್ಳಬಾರದು : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಕೃಷಿ ಉತ್ಪನ್ನಗಳ ಧಾರಣೆಗಳು ಯಾವಾಗಲು ಸ್ಥಿರವಾಗಿರಲಿ ಇದರಿಂದ ಬೆಳೆ ಬೆಳೆದ ರೈತರು ಹಾಗೂ ವರ್ತಕರಿಗೂ ಅನುಕೂಲವಾಗಲಿದೆ. ಯಾವುದೇ ಕಾರಣಕ್ಕೂ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ವರ್ತಕರು ಧಾನ್ಯಗಳನ್ನು ಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿಂದು ನಡೆದ ಕೃಷಿ ಉತ್ಪನ್ನಗಳ ಧಾರಣೆ ಸ್ಥಿರತೆ ಕುರಿತ ಸಭೆಯಲ್ಲಿ ರೈತರು, ವರ್ತಕರು ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು ಯಾವುದೇ ಕೃಷಿ ಉತ್ಪನ್ನ ಕೊಳ್ಳಲು ರೈತರಿಗೆ ನೀಡಿರುವ ‘ಪ್ರೂಟ್ಸ್’ ತಂತ್ರಾಂಶದಲ್ಲಿ ನೀಡಲಾಗುವ ದಾಖಲಾತಿ ಇದ್ದರೆ ಸಾಕು.

ಅದನ್ನು ಕೃಷಿ ಇಲಾಖೆ ಆ ಹಂಗಾಮಿಗೆ ದೃಢೀಕರಣ ನೀಡಿರುತ್ತದೆ.ಮತ್ತೆ ಬೇರೆ ದಾಖಲೆಗಳ ಅಗತ್ಯವಿರುವುದಿಲ್ಲ. ರೈತರು ಕೂಡ ಯೋಗ್ಯ ಉತ್ಪನ್ನಗಳನ್ನು ವರ್ತಕರಿಗೆ ನೀಡಬೇಕು ಈ ಹಿಂದಿನ ವರ್ಷಗಳಲ್ಲಿ ಹಲವಾರು ರೈಸ್ ಮಿಲ್ ಮಾಲೀಕರು ಭತ್ತ ಖರೀದಿಸಿ ರೈತರಿಗೆ ಹಣ ಪಾವತಿಸಿಲ್ಲ ಎಂಬ ದೂರುಗಳಿವೆ.

ಸುಮಾರು 4-5 ಕೋಟಿಗಳಷ್ಟು ಮೋಸವಾಗಿದೆ ಎಂದು ತಿಳಿದು ಬಂದಿದೆ. ಒಂದು ವೇಳೆ ಅಂತಹ ಪ್ರಕರಣಗಳು ಕಂಡು ಬಂದರೆ ಸಂಬಂಧಿಸಿದವರ ಆಸ್ತಿ ಜಪ್ತಿ ಮಾಡಿ ರೈತರಿಗೆ ಹಣ ಕೊಡಿಸಲು ಹಿಂದು-ಮುಂದು ನೋಡುವುದಿಲ್ಲ ಎಂದರು.

ವರ್ತಕರ ಸಂಘದ ಪ್ರತಿನಿದಿ ಮಾತನಾಡಿ ಸುಗ್ಗಿ ಕಾಲದಲ್ಲಿ ಧಾನ್ಯಗಳಲ್ಲಿ 25 ರಿಂದ 26 ರಷ್ಟು ತೇವಾಂಶವಿರುತ್ತದೆ. ಹಾಗಾಗಿ ಅಂತಹ ದಿನಗಳಲ್ಲಿ ಮಾರುಕಟ್ಟೆ ಬೆಲೆಗೆ ಕೊಂಡರೆ ಅದು ಒಣಗುವಷ್ಟರಲ್ಲಿ ಮಾಲೀಕರಿಗೆ ಹಾನಿಯಾಗುತ್ತದೆ.

ಹಾಗಾಗಿ ಕೊನೆ ಪಕ್ಷ 15 ರಿಂದ 16 ರಷ್ಟು ತೇವಾಂಶ ಇದ್ದರೆ ಪರವಾಗಿಲ್ಲ ಎಂದರು. ಅದಕ್ಕೆ ಜಿಲ್ಲಾಧಿಕಾರಿಗಳು ಹೌದು ರೈತರು ಕೂಡ ತಮ್ಮ ಉತ್ಪನನಗಳನ್ನು ಚೆನ್ನಾಗಿ ಒಣಗಿಸಿ ನೀಡಬೇಕು. ರಾಗಿ ಕನಿಷ್ಠ 12 ರಷ್ಟು ತೇವಾಂಶಕ್ಕಿಂತ ಹೆಚ್ಚಿರಬಾರದು ಎಂದರು.

ರೈತ ಮುಖಂಡ ಬಲ್ಲೂರು ರವಿಕುಮಾರ್ ಮಾತನಾಡಿ ಈಗಾಗಲೇ ಎಲ್ಲರೂ ಕೃಷಿ ಉತ್ಪನ್ನಗಳನ್ನು ಒಣಗಿಸಲು ಡ್ರೈಯರ್‍ಗಳನ್ನು ಅಳವಡಿಸಿಕೊಂಡಿದ್ದಾರೆ. ಅವುಗಳ ಮೂಲಕ ಧಾನ್ಯಗಳನ್ನು ಒಣಗಿಸುತ್ತಾರೆ. ಹಾಗಾಗಿ ಅಷ್ಟೊಂದು ತೇವಾಂಶವಿರುವುದಿಲ್ಲ.

ಕೃಷಿ ಬೆಲೆ ಆಯೋಗವು ಭತ್ತ ಬೆಳೆದ ರೈತರಿಗೆ ಕ್ವಿಂಟಾಲ್ 1 ಕ್ಕೆ 2250/- ರೂ ಖರ್ಚು ಬರಲಿದೆ ಎಂದು ತಿಳಿಸಿದೆ. ಆದರೆ ಮಾರುಕಟ್ಟೆಯಲ್ಲಿ ಆ ಸಮಯದಲ್ಲಿ 1800 ರಿಂದ 1900 ರೂ ಗಳಷ್ಟು ಬೆಲೆ ಇರುತ್ತದೆ. ಹಾಗಿದ್ದಾಗ ಈ ಬೆಲೆಗಿಂತ ಕಡಿಮೆ ಬೆಲೆಗೆ ಮಾರಿದರೆ ರೈತರಿಗೆ ನಷ್ಟವಾಗುತ್ತದೆ ಎಂದರು.

ಮತ್ತೋರ್ವ ರೈತ ಮುಖಂಡರು ಮಾತನಾಡಿ ರೈತರ ಹೊಲಗಳಿಗೆ ಬಂದು ಬೆಳೆ ಖರೀದಿಸುವುದಕ್ಕಿಂತ ಎಪಿಎಂಸಿ ಆವರಣದಲ್ಲಿ ಟೆಂಡರ್ ಮುಖಾಂತರ ಖರೀದಿಸುವುದು ಒಳ್ಳೆಯದು ಹಾಗೂ ಇದರಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದೆ ಎಂದರು.

ಜಿಲ್ಲಾಧಿಕಾರಿಗಳು ಕೇವಲ ಸ್ಯಾಂಪಲ್ ಅಷ್ಟೇ ಎಪಿಎಂಸಿ ಗಳಿಗೆ ತರುವ ಬದಲು ಸಂಪೂರ್ಣ ಬೆಳೆದ ಬೆಳೆಗಳನ್ನು ಎಪಿಎಂಸಿ ಮಾರುಕಟ್ಟೆಗೆ ತಂದರೆ ಹರಾಜು ಪ್ರಕ್ರಿಯೆ ಮಾಡಬಹುದು ಎಂದು ತಿಳಿಸಿದರು. ಹಾಗೂ ಸರ್ಕಾರ ಬೆಳೆಗಳಿಗೆ ಏನು ಬೆಲೆ ನಿಗದಿ ಮಾಡಿದೆಯೋ ಅದಕ್ಕಿಂತ 1 ರೂ ಆದರೂ ಹೆಚ್ಚಿಗೆ ಸಿಗಬೇಕು ಎಂದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದುಗಲ್, ಎಪಿಎಂಸಿ ಸಹಾಯಕ ನಿರ್ದೇಶಕ ಸೋಮಶೇಖರ್, ಕಾರ್ಯದರ್ಶಿ ಪ್ರಭು, ರೈತ ಮುಖಂಡರುಗಳಾದ ಕೆಂಗೋ ಹನುಮಂತಪ್ಪ, ಬಸವರಾಜಪ್ಪ, ಪಾಮೇನಹಳ್ಳಿ ಲಿಂಗರಾಜು, ದಿಳ್ಯಪ್ಪ ಮುಂತಾದವರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending