Connect with us

ನೆಲದನಿ

ಕೋರೆಗಾವ ವಿಜಯ : ದಲಿತ ಸ್ವಾಭಿಮಾನ ದಿನ

Published

on

  • ಡಾ.ಸಿದ್ರಾಮ ಕಾರಣಿಕ, ಧಾರವಾಡ, ಮೊ:9035343031

ಜನೇವರಿ 1…
ಇದು ದಲಿತ ಸ್ವಾಭಿಮಾನದ ದಿನ ! ದಲಿತರಾದವರೆಲ್ಲ ಮರೆಯದೇ ನೆನಪಿಡಬೇಕಾದ ದಿನ. ಇಡೀ ದೇಶದಲ್ಲಿಯೇ ವರ್ಣಧರ್ಮವನ್ನು ಪಾಲಿಸಿ, ದಲಿತರನ್ನು ನಿರಂತರವಾಗಿ ಶೋಷಣೆ ಮಾಡುತ್ತ, ಅವರ ಮೇಲೆ ದಿನನಿತ್ಯ ಅನ್ಯಾಯವೆಸಗುತ್ತ ಬಂದಿದ್ದ ಮಹಾರಾಷ್ಟ್ರದ ಪೇಶ್ವೆಗಳ ಸೊಕ್ಕಡಗಿಸಿ ಪೇಶ್ವಾಯಿ ಸಾಮ್ರಾಜ್ಯವನ್ನು ಇನ್ನಿಲ್ಲದಂತೆ ಮಾಡಿದ ಐತಿಹಾಸಿಕ ದಿನವಿದು. ಸುಮಾರು ನಲವತ್ತು ಸಾವಿರದಷ್ಟಿದ್ದ ಪೇಶ್ವೆ ಸೈನಿಕರನ್ನು ಕೇವಲ ಐದು ನೂರು ವೀರ ಯೋಧರು ಮಣ್ಣುಮುಕ್ಕಿಸಿದ ದಿನವಿದು.

ಹೌದು !
ಹಿಂದೂ ಧರ್ಮದ ಅನಾಚಾರಗಳನ್ನೆಲ್ಲ ದಲಿತರ ಮೇಲೆ ಹೇರಿ, ನಿರ್ದಯಿಯಾಗಿ ವರ್ತಿಸಿದ್ದ ಪೇಶ್ವೆಗಳಿಗೆ ಇಂಥದ್ದೊಂದು ಅಂತ್ಯ ತೋರಿಸುವ ಅವಶ್ಯಕತೆ ಇತ್ತು. ಅದನ್ನು ಸಾಧ್ಯ ಮಾಡಿ ತೋರಿಸಿದವರು ಬ್ರಿಟಿಷ್ ಸೇನೆಯಲ್ಲಿದ್ದ ದಲಿತ ಯೋಧರು.

ಪುಣೆ-ಅಹಮದಾನಗರ ಮಾರ್ಗದಲ್ಲಿ ಭೀಮಾನದಿಯ ತೀರದಲ್ಲಿ ಕೋರೆಗಾವ ಹೆಸರಿನ ಒಂದು ಸಣ್ಣ ಹಳ್ಳಿಯಿದೆ. ಹಳ್ಳಿ ಸಣ್ಣದಿದ್ದರೂ ಭೀಮಾ ತೀರದ ಆ ಹಳ್ಳಿಯಲ್ಲಿ ಅಡಗಿರುವ ಇತಿಹಾಸ ತುಂಬ ದೊಡ್ಡದು. ಅಷ್ಟೇ ಅಲ್ಲ ಅದು ಸ್ಫೂರ್ತಿದಾಯಕವಾದುದ್ದೂ ಹೌದು ! ಅದೊಂದು ನಮ್ಮನ್ನು ಹುರಿದುಂಬಿಸುವ ಮತ್ತು ಅಭಿಮಾನ ಪಡುವಂತೆ ಮಾಡುವ ಇತಿಹಾಸವೇ ಸರಿ.

ದಲಿತ ವರ್ಗದಿಂದ ಬಂದವರು ಯಾವುದೇ ಕೆಲಸದಲ್ಲಿದ್ದರೂ ನಿಷ್ಠೆಗೆ ಹೆಸರಾದವರು. ವರ್ಣವ್ಯವಸ್ಥೆಯಿಂದ ವ್ಯತಿತರಾಗಿ ನಲುಗಿ ಹೋದ ಅವರು, ಸೇನೆ ಸೇರಿ ಸಾಧಿಸಿದ ಸಿದ್ಧಿಗಳು ಒಂದೆರಡರಲ್ಲ. ಅವುಗಳನ್ನು ಒಂದೊಂದಾಗಿ ಮೆಲುಕು ಹಾಕಿದಾಗ ಮುಚ್ಚಿಟ್ಟ ಅಥವಾ ಮರೆತು ಹೋದ ಇತಿಹಾಸದ ದೊಡ್ಡದೊಂದು ಅಧ್ಯಾಯ ತೆರೆದುಕೊಳ್ಳುತ್ತದೆ.

ಅಸಹ್ಯವೆನ್ನಿಸುವಂತಹ ಅಸ್ಪøಶ್ಯತೆಯನ್ನು ಹೇರಿ ಪ್ರತಿಕ್ಷಣವೂ ಸಂಶಯಿತ ದೃಷ್ಟಿಯಿಂದ ನೋಡುವ ಪೇಶ್ವೆಗಳ ನಡೆಯನ್ನು ವಿರೋಧಿಸಿ, ಅದಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲು ತಮಗಾದ ಅವಮಾನವನ್ನು ಹೊಟ್ಟೆಯೊಳಗಿಟ್ಟುಕೊಂಡಿದ್ದ ಮಹಾರರು ಸ್ವಾಭಿಮಾನದಿಂದ ಪುಟಿದೆದ್ದು ಗೆಲುವು ಸಾಧಿಸುವುದಕ್ಕೆ ಐತಿಹಾಸಿಕವಾದ ಕೋರೆಗಾವ ಕದನ ಅವಕಾಶ ನೀಡಿತು.

ಬ್ರಿಟಿಷರು ಅಸ್ಪøಶ್ಯತೆಯ ವಿಚಾರದಿಂದ ದೂರವುಳಿದು ಕೇವಲ ವೀರತನವನ್ನೇ ಮುಖ್ಯವಾಗಿಟ್ಟುಕೊಂಡು ತಮ್ಮ ಸೇನೆಯಲ್ಲಿ ಮಹಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶ ನೀಡಿ, ಅವರಿಗೆ ಸೇನಾ ಶಿಕ್ಷಣ ನೀಡಿದರು. ಈ ಮಹಾರರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾವ ಕದನವನ್ನು ಗೆಲ್ಲಲು ಸಾಧ್ಯವಾಯಿತು. ಇತಿಹಾಸದ ಯಾವುದೇ ಪ್ರಸಂಗಗಳು ಮಹಾರರ ಈ ಕಲಿತನಕ್ಕೆ ಸರಿಸಾಟಿಯಾಗಿ ನಿಲ್ಲಲಾರವು.

ಕೋರೆಗಾವದಲ್ಲಿ ಅಖಂಡವಾಗಿ ನಿಂತಿರುವ ವಿಜಯಸ್ತಂಭ ಇಂದಿಗೂ ಆ ವೀರ ಮಹಾರರ ನೆನಪನ್ನು ಹಚ್ಚ ಹಸಿರಾಗಿಟ್ಟಿದೆ.ಢೋಂಗಿ, ಪಾಖಂಡಿ, ಸಮಯಸಾಧಕತನ ಮತ್ತು ದೇವರು-ಧರ್ಮದ ಹೆಸರಿನಲ್ಲಿ ಮಹಾರರ ಬದುಕನ್ನೇ ಹರಾಮ ಮಾಡಿದ, ಸೂತ್ರದ ಗೊಂಬೆಯನ್ನಾಗಿಸಿದ ಈ ಸಮಾಜಕ್ಕೆ ಮಹಾರ ರಕ್ತದಲ್ಲಿರುವ ಉಮೇದಿನ ಝಲಕ್ ತೋರಿಸುವ ಸಂಧಿ ಸಿಕ್ಕಿತೆಂಬ ಒಂದೇ ಒಂದು ಕಾರಣದಿಂದ ಕೋರೆಗಾವ ಕದನ ನಡೆಯಿತು.

ಮಹಾರರ ಸ್ವಾಭಿಮಾನವನ್ನೇ ಹಾಳು ಮಾಡಿದ ಪೇಶ್ವೆಗಳ ವಿರುದ್ಧ ಹೋರಾಟ ಮಾಡಿದ ಕೋರೆಗಾವ ಕದನದಲ್ಲಿ ಬ್ರಿಟಿಷ್ ಸರಕಾರ ಜಯ ಗಳಿಸಲು ಮಹಾರ ವೀರರ ಪರಾಕ್ರಮವೇ ಕಾರಣ ಎಂಬುದನ್ನು ಮರೆಯಬಾರದು.

ಯಾರಿಗೆ ಮನುಷ್ಯರೆಂದು ಬದುಕಲು ಅವಕಾಶವನ್ನೇ ನೀಡಿರಲಿಲ್ಲವೋ, ಯಾರಿಗೆ ಒಳ್ಳೆಯ ಬಟ್ಟೆ ಅಥವಾ ಪಾತ್ರೆ ಬಳಸುವುದಕ್ಕೆ ನಿರ್ಬಂಧವಿತ್ತೋ, ಯಾರಿಗೆ ಬೀದಿಗಳಲ್ಲಿ ಅಡ್ಡಾಡಲೂ ಅವಕಾಶವಿರಲಿಲ್ಲವೋ, ಯಾರ ವೀರತ್ವ ಮತ್ತು ಶೌರ್ಯತ್ವಕ್ಕೆ ಅವಕಾಶ ದೊರೆಯುತ್ತಿರಲಿಲ್ಲವೋ, ಯಾರಿಗೆ ಅವಮಾನಿತರಾಗಿ ಬದುಕುವ ಅನಿವಾರ್ಯತೆಯನ್ನು ಸೃಷ್ಟಿಸಲಾಗಿತ್ತೋ ಅವರು ಅಂಥವುಗಳನ್ನೆಲ್ಲ ವಿರೋಧಿಸುವುದಕ್ಕಾಗಿಯೇ ಬ್ರಿಟಿಷ್ ಸೇನೆಯನ್ನು ಸೇರಿ ತಮ್ಮ ಪರಾಕ್ರಮದ ಒಂದು ಝಲಕ್‍ನ್ನು ತೋರಿಸುವುದಕ್ಕೆ ಸಾಧ್ಯವಾಯಿತು.

ಶಿರೂರದಿಂದ 27 ಮೈಲುಗಳ ಸತತ ಕಾಲ್ನಡಿಗೆ ಮತ್ತು ಹಸಿವು-ನೀರಡಿಕೆಗಳಿಂದ ವ್ಯಾಕುಲಗೊಂಡಿದ್ದರೂ ಬೆರಳೆಣಿಕೆಯಷ್ಟಿದ್ದ ಸ್ವಾಭಿಮಾನಿ ಮಹಾರ ಯೋಧರು ತಮಗಿಂತ 40 ಪಟ್ಟು ಹೆಚ್ಚಿದ್ದ ಸರ್ವಶಸ್ತ್ರಸಜ್ಜಿತ ಪೇಶ್ವೆ ಸೇನೆಯನ್ನು 12 ಗಂಟೆಗಳ ಕಾಲದ ಕದನದಲ್ಲಿ ದಾರುಣವಾಗಿ ಪರಾಭವಗೊಳಿಸಿ ಪೇಶ್ವೆಯ ಶಾಹಿತನವನ್ನು ಧೂಳಿಪಟ ಮಾಡಿದರು.

ಈ ಕದನದಲ್ಲಿ ಮೊದಲನೇ ಹಾಗೂ ಎರಡನೇ ರೆಜಿಮೆಂಟಿನ ಒಟ್ಟು 50 ಯೋಧರು ವೀರ ಮರಣವನ್ನಪ್ಪಿದರು. 205 ಯೋಧರು ಗಾಯಾಳುಗಳಾದರು. ಹುತಾತ್ಮರಾದವರಲ್ಲಿ 22 ಮಹಾರರು, 16 ಮರಾಠರು, 8 ರಜಪೂತರು ಇಬ್ಬರು ಹಿಂದೂಗಳು ಹಾಗೂ ತಲಾ ಒಬ್ಬೊಬ್ಬ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಯೋಧರು ಸೇರಿದ್ದಾರೆ.

ಇದಕ್ಕೆಲ್ಲ ಪೂರ್ವಿಕರು ಸ್ಫೂರ್ತಿಯೂ ಕಾರಣವಾಗಿತ್ತು. ಹಿಂದೆ ಶಿವಾಜಿ ಕಾಲದಿಂದಲೂ ಮಹಾರರು ತಮ್ಮ ವೀರ-ಶೌರ್ಯ-ಸಾಹಸಗಳಿಂದ ಪ್ರಖ್ಯಾತರಗಿದ್ದಾರೆ. ಪಾಚಗಡದ ರಾಯನಾಕ, ಸುಭನಾಕ ವಾಘನಾಕ, ಮದನಾಕ ಏಸನಾಕ, ಧೋಂಡನಾಕ ಪುಂಡನಾಕ, ಮೊದಲು ಸಾತಾರಕ್ಕೆ ಸೇರಿದ್ದ ಸಾಂಗ್ಲಿ ಜಿಲ್ಲೆಯ ತಾಸಗಾವ ತಾಲೂಕಿನ ಕಾಳಂಬಿ ಗ್ರಾಮದ ಜಾಗೀರದಾರನಾಗಿದ್ದ ಶೂರ ಮೊದಲನೆ ಶಿದನಾಕ, ರಾಯನಾಕ ಮಹಾರ ಮೊದಲಾದವರ ಪಟ್ಟಿಯೇ ಇದೆ. ಇದರ ಮುಂದುವರಿಕೆಯಾಗಿ ಕೋರೆಗಾವ ಕದನ ಕಲಿಗಳಾದ ಮಹಾರ ಯೋಧರು ಕಾಣಿಸಿಕೊಳ್ಳುತ್ತಾರೆ.

1822 ರಲ್ಲಿ ಕೋರೆಗಾವದಲ್ಲಿ ಭೀಮಾ ನದಿಯ ದಂಡೆಯ ಮೇಲೆ ವಿಜಯಸ್ತಂಭವನ್ನು ನಿರ್ಮಿಸಲಾಗಿದೆ. ವಿಜಯಸ್ತಂಭದ ಮೇಲೆ “One of the proudest triumphs of the British Army in the East” ಎಂದು ಬರೆಯಲಾಗಿದೆ. ಅಂದರೆ ಭಾರತದ ಪೂರ್ವ ಪ್ರದೇಶಗಳಲ್ಲಿ ತನ್ನದಾಗಿಸಿಕೊಂಡಿರುವ ಹಲವಾರು ವಿಜಯಗಳಲ್ಲಿಯೇ ಈ ವಿಜಯವು ಬ್ರಿಟಿಷ ಸೇನೆ ಹೆಮ್ಮೆ ಪಡುವಂತಿದೆ ಎಂಬುದು ಅಲ್ಲಿ ಉಲ್ಲೇಖಿತವಾಗಿದೆ.

ಸ್ತಂಭದ ಬದಿಗಳಲ್ಲಿ ಇಂಗ್ಲೀಷ್ ಮತ್ತು ದೇವನಾಗರಿ ಲಿಪಿಯಲ್ಲಿ ಹುತಾತ್ಮರದ ವೀರಯೋಧರ ಹೆಸರುಗಳು ಕೆತ್ತಲ್ಪಟ್ಟಿವೆ. ಸೀನನಾಕ ಕಮಲನಾಕ, ರಾಮನಾಕ ಏಸನಾಕ, ಗೋಂದನಾಕ ಕೋಢೆನಾಕ, ರಾಮನಾಕ ಏಸನಾಕ, ಭಾಗನಾಕ ಹರನಾಕ, ಅಂಬರನಾಕ ಕಾನನಾಕ, ರೂಪನಾಕ ಲಖನಾಕ, ಗಣನಾಕ ಬಾಳನಾಕ, ಕಾಳನಾಕ ಕೋಂಡನಾಕ, ವಪನಾಕ ರಾಮನಾಕ, ವಿಟನಾಕ ಧಾಮನಾಕ, ರಾಜನಾಕ ಗಣನಾಕ, ವಪನಾಕ ಹರನಾಕ, ರೈನಾಕ ವಾನನಾಕ, ಗಣನಾಕ ಧರಮನಾಕ, ದೇವನಾಕ ಆನನಾಕ, ಗೋಪಾಳನಾಕ ಬಾಳನಾಕ, ಹರನಾಕ ಹೀರನಾಕ, ಜೇಠನಾಕ ದೈನಾಕ, ಗಣನಾಕ ಲಖನಾಕ ಎಂಬ ಅಲ್ಲಿಯ ಹೆಸರುಗಳೇ ನಮ್ಮ ಮೈ ಮನಗಳನ್ನು ರೋಮಾಂಚಿತಗೊಳಿಸುತ್ತವೆ. ಮರೆತು ಹೋದ ಇತಿಹಾಸವನ್ನು ಕಣ್ಮುಂದೆ ಕಟ್ಟಿ ಕೊಡುತ್ತವೆ.
ಬಹುಶಃ ಇಂತಹ ಮಹಾರ ವೀರರನ್ನು ಕಂಡೇ ಸಂತ ತುಕಾರಾಮರು, “ಮಹಾರಾಸಿ ಶಿವೆ / ಕೋಪೆ ತೋ ಬ್ರಾಹ್ಮಣ ನವ್ಹೆ/” ಎಂದು ತಮ್ಮ ಅಭಂಗದಲ್ಲಿ ಹೇಳಿದ್ದಾರೆ. ಅಂದರೆ ಬ್ರಾಹ್ಮಣರಿಗಿಂತ ಮಹಾರರು ಮಹಾಮಹಿಮರು ಎಂಬುದೇ ಇಲ್ಲಿಯ ಭಾವ.

ಡಾ. ಬಾಬಾಸಾಹೇಬ ಅಂಬೇಡ್ಕರರು ತಮ್ಮ ಅನುಯಾಯಿಗಳೊಂದಿಗೆ ಶಿರೂರ ಸಮೀಪದ ಭೀಮಾ-ಕೋರೆಗಾವಕ್ಕೆ ಬಂದು ವೀರ-ಪರಾಕ್ರಮದದ ಗತ ಸಾಹಸವನ್ನು ಸಾರುವ ವಿಜಯ ಸ್ತಂಭಕ್ಕೆ 1ನೇ ಜನೇವರಿ 1927 ರಂದು ಗೌರವ ವಂದನೆ ಸಲ್ಲಿಸಿದರು. ಆ ದಿನವನ್ನು ಕೋರೆಗಾವ ಕದನದ ಮಹಾರ ಕಲಿಗಳ ಸ್ಮøತಿದಿನವನ್ನಾಗಿ ಆಚರಿಸಿದರು. ಇದಕ್ಕಿಂತ ಮೊದಲು ಇತಿಹಾಸದಲ್ಲಿ ಮುಚ್ಚಿಹೋಗಿದ್ದ ಅಥವಾ ಮುಚ್ಚಿ ಹಾಕಲ್ಪಟ್ಟ ವಿಜಯ ಸ್ತಂಭದತ್ತ ಯಾರೂ ಹಾಯುತ್ತಿರಲಿಲ್ಲ ಕೂಡ.

ಆದರೆ ಯಾವಾಗ ಡಾ. ಬಾಬಾಸಾಹೇಬ ಅಂಬೇಡ್ಕರರು ಸ್ಮøತಿದಿನವನ್ನು ಆಚರಿಸಿದರೋ ಅಂದಿನಿಂದ ಇಂದಿನವರೆಗೆ ಪ್ರತಿವರ್ಷ ಜನೇವರಿ 1 ರಂದು ದೇಶದ ವಿವಿಧ ಭಾಗಗಳಿಂದ ಬರುವ ಅಸಂಖ್ಯಾತ ಜನ ಸಮೂಹ ಸ್ಮøತಿ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.. ಡಾ. ಬಾಬಾಸಾಹೇಬ ಅಂಬೇಡ್ಕರರು ಯಾವುದೇ ಮಹತ್ವದ ಕೆಲಸವಿದ್ದರೂ ಅದನ್ನೆಲ್ಲ ಬದಿಗೊತ್ತಿ ಜನೇವರಿ ಒಂದರಂದು ಕೋರೆಗಾವಕ್ಕೆ ಬಂದು ವಿಜಯ ಸ್ತಂಭಕ್ಕೆ ಗೌರವ ವಂದನೆ ಸಲ್ಲಿಸುತ್ತಿದ್ದರು.

ಹೀಗೆಲ್ಲ ಇದ್ದರೂ ಕೂಡ ಕೆಲವು ಸಮಯಸಾಧಕರು ಕೋರೆಗಾವ ಕದನದ ಬಗ್ಗೆ ಹೇಳುವುದೇನೆಂದರೆ `ಈ ಕದನ ನಮ್ಮದೇ ದೇಶದಲ್ಲಿಯ ನಮ್ಮದೇ ಬಂಧುಗಳ ವಿರುದ್ಧವಾಗಿತ್ತು ! ಆ ಕದನದ ಫಲವಾದರೂ ಏನು ?’ ಹೀಗೆ ಹೇಳುವವರಿಗೆ ಒಂದು ಸವಾಲನ್ನು ಈ ಸಂದರ್ಭದಲ್ಲಿ ಹಾಕಲೇಬೇಕೆನಿಸುತ್ತದೆ ; ಅಲ್ಲ ಸ್ವಾಮಿ, ತಮ್ಮ ಬಂಧುಗಳನ್ನು ಯಾರಾದರೂ ಗುಲಾಮರನ್ನಾಗಿ ಮಾಡಿಕೊಳ್ಳುತ್ತಾರೆಯೇ ? ತಮ್ಮ ಬಂಧುವಿನ ಹೆಣ್ಣುಮಗಳೊಬ್ಬಳ ಮಾನವನ್ನು ಕಳೆಯುತ್ತಾರೆಯೇ ? ತಮ್ಮ ಬಂಧುಗಳನ್ನು ಯಾರಾದರೂ ಅನ್ನ-ನೀರಿಗಾಗಿ ಚಡಪಡಿಸುವಂತೆ ಮಾಡುತ್ತಾರೆಯೇ ? ಸಾರ್ವಜನಿಕ ಜಾಗದಲ್ಲಿ ಅಡ್ಡಾಡಲು ನಿರ್ಬಂಧ ವಿಧಿಸಬಹುದೇ ? ತಮ್ಮ ಬಾಂಧವರನ್ನು ಯಾರಾದರೂ ಹೇಳಹೆಸರಿಲ್ಲದಂತೆ ನಾಶ ಮಾಡುವ ಕುತಂತ್ರ ಮಾಡಬಹುದೇ ? ತಾವೇ ಕೆಸರು ಎರಚಿ, ಅಪಹಾಸ್ಯ ಮಾಡಿ ನಗಬಹುದೇ ? ಈ ಪ್ರಕರಣಗಳು ನಡೆಯುತ್ತಲೇ ಇವೆ ಎಂದಾದರೆ ಅವರು ನಮ್ಮ ಬಂಧುಗಳು ಹೇಗಾಗುತ್ತಾರೆ ?

ಕೇವಲ ಬೆರಳೆಣಿಕೆಯಷ್ಟಿದ್ದ ಮಹಾರ ವೀರ ಯೋಧರು, ಪೇಶ್ವೆಗಳ ಬಲಾಢ್ಯ ಸೇನೆಯನ್ನು ಈ ಕೋರೆಗಾವ ಕದನದಲ್ಲಿ ಹೀನಾಯವಾಗಿ ಸೋಲಿಸಿದ್ದು ಸೋಜಿಗವಲ್ಲ. ಪೇಶ್ವೆಗಳಿಂದ ಉಂಟಾದ ಸಾಮಾಜಿಕ ಅನಿಷ್ಟ, ಅನ್ಯಾಯ ಮತ್ತು ಅಸ್ಪøಶ್ಯತೆಗಳಿಂದ ತಮಗಾದ ಶೋಷಣೆಗೆ ಪ್ರತಿಯಾಗಿ ಪ್ರತಿಕಾರ ಸಾಧಿಸಿದ ಈ ನಡೆ ಮಹಾರರ ಸ್ವಾಭಿಮಾನವನ್ನು ಎತ್ತಿ ಹಿಡಿಯುತ್ತದೆ. ಕೋರೆಗಾವ ಕದನದ ಗೆಲುವು ಎಂದರೆ ಅನ್ಯಾಯದ ವಿರುದ್ಧ ಪಡೆದ ಗೆಲುವೇ ಆಗಿದೆ.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರೂ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಿಸುತ್ತಾರೆ. “ಬ್ರಿಟಿಷರ ಪರವಾಗಿ ಮಹಾರ ಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ ಮಹಾರ ಯೋಧರು ಬ್ರಿಟಿಷರ ಪರ ಯಾಕೆ ಹೋದರು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ. ಮಹಾರರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದುಗಳೆನಿಸಿಕೊಂಡವರು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ-ನರಿಗಳಿಗಿಂತಲೂ ಕಡೆಯಾಗಿ ವರ್ತಿಸಿದಾಗ ಆ ಅವಮಾನವನ್ನು ಸಹಿಸಿಕೊಂಡು ಎಷ್ಟು ದಿನ ಬದುಕುವುದು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಹಿಟ್ಟು ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟಿಷರ ಸೇನೆ ಸೇರಿದರೆಂಬುದನ್ನು ಪ್ರತಿಯೊಬ್ಬರು ಲಕ್ಷ್ಯದಲ್ಲಿಡಬೇಕು” ಎಂಬ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮಾತುಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು.

ಮಹಾರ ಯೋಧರು ಮುಂಚಿನಿಂದಲೂ ಅಂದರೆ ಶಿವಾಜಿಯ ಕಾಲದಿಂದಲೂ ಮರಾಠಾ ಸೇನೆಯಲ್ಲಿ ಪ್ರಾಮಾಣಿಕತೆಯಿಂದ, ಪರಾಕ್ರಮದಿಂದ ದುಡಿದವರು. ಆದರೆ ಎರಡನೇ ಬಾಜಿರಾವ ಗದ್ದುಗೆ ಏರಿದಾಗ ಅನುಭವಿಸಿದ ಜಾತಿಯತೆಯ ತಾರತಮ್ಯತೆ ದಲಿತರನ್ನು ಸಹಜವಾಗಿಯೇ ಕೆರಳಿಸಿತ್ತು. ಆ ಸಂದರ್ಭದಲ್ಲಿ ಅದನ್ನು ಹೇಳಲಾಗಿತ್ತು ಕೂಡ.

ಎರಡನೇ ಬಾಜಿರಾವನ ಬದಲಿಗೆ ಬೇರೆಯವರು ಯಾರಾದರೂ ಸಮರ್ಥರು ಪೇಶ್ವೆಗಳಾದರೆ ಮಾತ್ರ ತಾವು ತಮ್ಮ ತಾಯ್ನೆಲವನ್ನು ಪ್ರಾಣವನ್ನೇ ಬಲಿ ಕೊಟ್ಟಾದರೂ ಕೂಡ ಕಾಪಾಡಲು ಸಿದ್ಧವಿರುವುದಾಗಿ ಪರಾಕ್ರಮಿ ಶಿದನಾಕ ಮನವಿ ಮೂಲಕ ಪ್ರಕಟಿಸಿದ್ದ. ಪೇಶ್ವೆ ಈ ವಿನಂತಿಯನ್ನು ಅತ್ಯಂತ ತಿರಸ್ಕಾರದಿಂದ ತಳ್ಳಿ ಹಾಕಿದ.

ಆದ್ದರಿಂದಲೇ ಮಹಾರ ಯೋಧರು ಬ್ರಿಟಿಷ ಪಡೆ ಸೇರಿ ಪೇಶ್ವೆಯನ್ನು ಮುಗಿಸಲು ಮುಂದಾದರು. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ ಯೋಧರು, ತಮ್ಮ ಮೇಲೆ ಅಮಾನವೀಯವಾದ ಬಂಧನಕಾರಿ ನಿಯಮಗಳಿಂದ ಅಸ್ಪøಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಕದನದಲ್ಲಿ ಮಣ್ಣು ಮುಕ್ಕಿಸಿದರು.

ಪ್ರತಿ ವರ್ಷ ಜನೇವರಿ ಒಂದರಂದು ದೇಶದ ಮೂಲೆ ಮೂಲೆಗಳಿಂದ ಬೃಹತ್ ಪ್ರಮಾಣದಲ್ಲಿ ಆಗಮಿಸುವ ದಲಿತರು ಮೊದಲು ವಿಜಯ ಸ್ತಂಭಕ್ಕೆ ಗೌರವ ವಂದನೆ ಸಲ್ಲಿಸುತ್ತಾರೆ. ನಂತರ ಮೈದಾನದ ಆಟಗಳು ಆರಂಭಗೊಳ್ಳುತ್ತವೆ. ಮಧ್ಯಾಹ್ನ ಸಹಭೋಜನ ಕೂಡ ಇರುತ್ತದೆ. ಭೋಜನದ ನಂತರ ಒಂದಿಷ್ಟು ವಿಶ್ರಾಂತಿ ಪಡೆದುಕೊಂಡು ಸಂಜೆಯ ಇಳಿ ಹೊತ್ತಿನ ಸಮಯದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣೆಯಾಗುತ್ತದೆ. ಈ ಸಂದರ್ಭದಲ್ಲಿ ಸಭೆಯೂ ನಡೆಯುತ್ತದೆ.

ನಾವು ಆ ವೀರ ವಿಜಯಸ್ತಂಭದ ಹತ್ತಿರ ಹೋಗಿ ಗಂಟಲು ಹರಿಯುವಂತೆ ಘೋಷಣೆ ಕೂಗುತ್ತೇವೆ. ಇದನ್ನು ತಪ್ಪೆಂದು ನಾನು ಹೇಳುತ್ತಿಲ್ಲ. ಒಳ್ಳೆಯ ಸಂಗತಿಯೇ ಸರಿ ! ಆದರೆ ಅದೇ ಛಲದಿಂದ ; ಅದೇ ಮನಸ್ಸಿನಿಂದ ನಾವು ನಮ್ಮ ಪೂರ್ವಿಕರ ಪರಾಕ್ರಮವನ್ನು ಉಳಿಸಿಕೊಂಡು ಬರಬೇಕು ಎಂದು ಕೂಡ ನಮಗೆ ಆಗ ಅನ್ನಿಸಬೇಕಲ್ಲವೇ ? ಅನ್ನಿಸಿದರೂ ಆ ಪರಾಕ್ರಮ ಶಕ್ತಿ ಇಂದು ನಮ್ಮಲ್ಲಿ ಉಳಿದಿದೆಯೇ ? ಉಳಿಯದಿದ್ದರೆ ಅದಕ್ಕಾಗಿ ಚಿಂತಿಸುವ ಕನಿಷ್ಟ ಸೌಜನ್ಯವಾದರೂ ನಮಗೆ ಇರಬೇಡವೇ ? ಜೀವದ ಹಂಗು ತೊರೆದು ಅವರು ಅಂದರೆ ನಮ್ಮ ಪೂರ್ವಿಕರು ತಲಾ ನಲವತ್ತು ಸೈನಿಕರಿಗೆ ಒಬ್ಬ ಮಹಾರ ಯೋಧರಾಗಿ ಘನಘೋರ ಕದನದಲ್ಲಿ ವಿಜಯಿಯಾಗುತ್ತಾರೆ !

ಹಾಗಾದರೆ ಇಂದು ನಮ್ಮ ಯುದ್ಧ ಎಲ್ಲಿ ಆಗಬೇಕಿದೆ ? ಯಾರೊಂದಿಗೆ ಆಗಬೇಕಿದೆ ? 500 ಮಹಾರರು ಒಂದೇ ಜೀವವಾಗಿ ಹೋರಾಟ ಮಾಡಿದ್ದರಿಂದಲೇ ವಿಜಯಶ್ರೀ ಅವರಿಗೆ ಒಲಿದಳು. ಹಾಗಾದರೆ ಅಂಥ ಶಕ್ತಿ ಇಂದು ನಮ್ಮಲ್ಲಿ ಉಳಿದಿದೆಯೇ ? ನಾವು ಸ್ವಾರ್ಥಿ ಮತ್ತು ಢೋಂಗಿ ಮಂದಿಯಲ್ಲ ಅಲ್ಲವೇ ?
ನಮ್ಮ ಒಗ್ಗಟ್ಟಿನ (ಏಕತೆಯ) ಇತಿಹಾಸವನ್ನು ನಾವು ಮರೆತಿದ್ದೇವೆ ಅಲ್ಲವೇ ? ಇದರಿಂದಲೇ ಶೋಷಣೆ ಮಿತಿ ಮೀರುತ್ತದೆಯಲ್ಲವೇ ? ನಾವು ನಮ್ಮ ನಮ್ಮಲ್ಲಿಯೇ ಜಗಳವಾಡುತ್ತ ಕುಳಿತ್ತಿದ್ದೇವೆ ಎಂಬುದನ್ನು ಕಂಡಾಗ ಅನಿಸುತ್ತದೆ ; ಯಾರ್ಯಾರು ಕಲಿತರೋ ಅವರಲ್ಲಿಯ ಕೆಲವರು ತಮ್ಮ ಹೊಟ್ಟೆಯನ್ನಷ್ಟೇ ದೊಡ್ಡದಾಗಿಸಿಕೊಂಡರು ! ತಮ್ಮ ಸಮಾಜಕ್ಕೆ ತಾವೇನಾದರೂ ಋಣ ಸಂದಾಯ ಮಾಡಬೇಕಿದೆಯೇ ಎಂಬ ಅರಿವು ಅವರಲ್ಲಿ ಮಕಾಡೆ ಮಲಗಿ ಬಿಟ್ಟಿದೆ !

ನಾವು ನಮ್ಮ ಶೌರ್ಯದ ಇತಿಹಾಸವನ್ನೇ ಮರೆತಿದ್ದೇವೆ ; ಹತ್ತು ಜನ ಹತ್ತು ಕಡೆ ಮುಖ ಮಾಡಿ ನಿಂತಿದ್ದೇವೆ ! ಒಂದುಗೂಡುವ ; ಒಗ್ಗಟ್ಟು ಪ್ರದರ್ಶಿಸುವ ಮಾತೇ ಇಲ್ಲ ! ಅದರ ಪರಿಣಾಮವನ್ನೇ ನಾವು ಅನುಭವಿಸುತ್ತಿದ್ದೇವೆ. ಸಾಮಾನ್ಯನಾದ ನನ್ನನ್ನೂ ಸೇರಿಸಿ ನಮ್ಮವರೇ ಆಗಿರುವ ಮುಖಂಡರೂ ಇದಕ್ಕೆ ಹೊಣೆಗಾರರಾಗಿದ್ದಾರೆ ಎನಿಸುವುದಿಲ್ಲವೇ ?`ಅಸಹಾಯಕವಾಗಿ ಬದುಕುವುದಕ್ಕಿಂತ ಅವ್ವನ ಹೊಟ್ಟೆಯಲ್ಲಿಯೇ ಸತ್ತು ಹೋಗುವುದು ಮೇಲು’ ಎಂದು ಡಾ. ಬಾಬಾಸಾಹೇಬ ಅಂಬೇಡ್ಕರ್‍ರು ಹೇಳಿದ್ದರು.

ಇಂಥ ಮರ್ಮಭೇದಕ ಮಾತುಗಳೇನಾದರೂ ನಿಮಗೆ ತಟ್ಟಿದ್ದಾವೆಯೇ ? ಇಲ್ಲ ! ನಾವೆಲ್ಲ ತಟಸ್ಥರಾಗಿ ಸಂಬಳ ಪಡೆದು ಬೆಚ್ಚಗೆ ಹೊದ್ದುಕೊಂಡು ಮಲಗಿದ್ದೇವೆ ; ಎಚ್ಚರಾಗಿದ್ದೇವೆ ಎನ್ನುವ ಕೆಲವರು ವಿನಾಕರಣ ತಮ್ಮ ತಮ್ಮಲ್ಲಿ ಜಗಳ ಮಾಡಿಕೊಳ್ಳುತ್ತಿದ್ದಾರೆ ; ಇನ್ನೂ ಕೆಲವರು ಮತ್ಸರದಿಂದ ಪರಸ್ಪರ ಮಾತನಾಡುವುದನ್ನೇ ಬಿಟ್ಟುಬಿಟ್ಟಿದ್ದಾರೆ.

ಬಂಧುಗಳೇ,
ಈ ಸಂದರ್ಭದಲ್ಲಿ ನಾನು ವಿಶ್ವವಿದ್ಯಾಲಯ ಮಟ್ಟದಲ್ಲಿ ನಿಂತು ಒಂದು ಮಾತು ಹೇಳುತ್ತಿದ್ದೇನೆ. ನೀವೆಲ್ಲ ಸ್ವಾಭಿಮಾನಿ ದಲಿತರೇ ಆಗಿದ್ದರೆ, ಕಿಂಚಿತ್ತಾದರೂ ಪಡೆದುಕೊಂಡಿದ್ದರ ಋಣ ತೀರಿಸುವ ಕಾರ್ಯವನ್ನು ಯಾಕೆ ಮಾಡಬಾರದು ? ಶಿಕ್ಷಕೇತರ ಸಿಬ್ಬಂದಿಯನ್ನು ಬಿಡಿ ; ಯುಜಿಸಿ ಸಂಬಳ ಪಡೆಯುತ್ತಿರುವ ದಲಿತ ಪ್ರಾಧ್ಯಾಪಕರು ತಿಂಗಳಿಗೆ ಕೇವಲ ನೂರು ರುಪಾಯಿ ನೀಡಿ ಒಂದು ನಿಧಿಯನ್ನು ಆರಂಭಿಸಬೇಕು ; ಅಲ್ಲಿ ಸೇರುವ ಹಣ ದಲಿತ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸದುಪಯೋಗವಾಗಬೇಕು ಎನಿಸುವುದಿಲ್ಲವೆ ? ಒಳಜಾತಿಗಳನ್ನೇ ಮುಂದು ಮಾಡಿಕೊಂಡು ಪರಸ್ಪರ ದ್ವೇಷ-ಜಗಳ ಮರೆಯಬೇಕು ಎನಿಸುವುದಿಲ್ಲವೇ ? ವಿದ್ಯಾರ್ಥಿಗಳನ್ನೂ ಹಾದಿ ತಪ್ಪಿಸುವ ಚಾಳಿಯನ್ನು ಬಿಟ್ಟು ಕೂಡಿ ಬಾಳುವ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಿಲ್ಲವೇ ? ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ.

ದಯವಿಟ್ಟು ಒಂದು ಮಾತನ್ನು ಮಾತ್ರ ನಾನು ಇಲ್ಲಿ ಹೇಳಬಯಸುತ್ತೇನೆ ; ಮೊಟ್ಟಮೊದಲು ನೀವು ನಿಮ್ಮ ನಿಮ್ಮ ಗೂಡುಗಳನ್ನು ಬಿಟ್ಟು ಹೊರಬನ್ನಿ ; ಪೊರೆಯನ್ನು ಹರಿದೊಗೆಯಿರಿ ಸೋದರ ಸಂಬಂಧಗಳನ್ನು ಬೆಸೆಯಲು ಮುಂದಾಗಿ ! ನಮ್ಮ ಪೂರ್ವಿಕರ ಇತಿಹಾಸದ ಅರಿವು ಇದ್ದುದ್ದೇ ಆದಲ್ಲಿ ಇದು ಅಸಾಧ್ಯವೇನೂ ಅಲ್ಲ ಎಂಬುದು ನನ್ನ ಅಚಲ ವಿಶ್ವಾಸವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending