Connect with us

ಲೈಫ್ ಸ್ಟೈಲ್

ಸ್ಟಿರಾಯ್ಡುಗಳು : ಜೀವರಕ್ಷಕಗಳೋ ? ಜೀವ ನಾಶಕಗಳೋ ?

Published

on

  • ಡಾ: ಎನ್.ಬಿ.ಶ್ರೀಧರ

ಘಟನೆ 1

“ಸಾರ್.. ಇಲ್ಲೊಂದು ಬೆಲೆಬಾಳುವ ಎತ್ತಿಗೆ ಸಿಕ್ಕ ಪಟ್ಟೆ ಜೇನುನೊಣ ಕಚ್ಚಿ ಎತ್ತು ಸಾಯುವ ಸ್ಥಿತಿಯಲ್ಲಿದೆ. ಇದನ್ನು ಬದುಕಿಸಲು ಚಿಕಿತ್ಸೆ ಸೂಚಿಸಿ”. ಇದು ಉತ್ತರ ಕರ್ನಾಟಕ ಭಾಗದಲ್ಲಿನ ನನ್ನ ವಿದ್ಯಾರ್ಥಿ ಪಶುವೈದ್ಯರ ಕೋರಿಕೆ. ಅದಕ್ಕೆ ಸ್ಟಿರಾಯ್ಡ್ ಅವಶ್ಯಕತೆ ಇದೆ. ಇಂತಿಷ್ಟು ಪ್ರಮಾಣದಲ್ಲಿ ಚುಚ್ಚುಮದ್ದಿನ ರೂಪದಲ್ಲಿ ನೀಡಿ ಹಾಗೂ ಉಳಿದಂತೆ ಇತರ ಚಿಕಿತ್ಸೆ ನೀಡಿ ಎಂದು ಸಲಹೆ ನೀಡಿದೆ. ಮರು ದಿನ ಎತ್ತು ಚೇತರಿಸಿಕೊಂಡಿತು ಸಾರ್.. ಧನ್ಯವಾದ ಅಂದು ಅನುಸರಣಾ ವರದಿ ಬಂತು.

ಘಟನೆ 2

ನಮ್ಮ ಸ್ನೇಹಿತರನ್ನು ಅವರ ಕಾಯಿಲೆಯೊಂದಕ್ಕೆ ಚಿಕಿತ್ಸೆಗಾಗಿ ತಜ್ಞರೊಬ್ಬರ ಬಳಿ ಕರೆದೊಯ್ದಿದ್ದೆ. ಎಲ್ಲಾ ಪರೀಕ್ಷೆಗಳಾದ ಮೇಲೆ ಚಿಕಿತ್ಸಾ ಚೀಟಿಯನ್ನು ವೈದ್ಯರು ವಿವರಿಸಿದರು. ನೀಡಿ… ಇವರೆ.. ನಿಮ್ಮ ಕಾಯಿಲೆ ಇಂತಹದು. ಇದರ ಚಿಕಿತ್ಸೆಗಾಗಿ ಸಣ್ಣ ಪ್ರಮಾಣದಲ್ಲಿ ಸ್ಟಿರಾಯ್ಡ್ ಒಂದನ್ನು ಬರೆದಿದ್ದೇನೆ. ಇದು ನಿಮ್ಮ ಕಾಯಿಲೆಯಲ್ಲಿ ಬಹಳ ಅನಿವಾರ್ಯ.

ಇಂತಿಷ್ಟು ದಿನ ತೆಗೆದುಕೊಳ್ಳಿ ಎನ್ನುತ್ತಿದ್ದಂತೆ ನನ್ನ ಸ್ನೇಹಿತರು ಪಕ್ಕದಲ್ಲಿ ಹಾವು ಹಾದು ಹೋದಂತೆ ಹಾರಿಬಿದ್ದರು. ಛೆ.. ಛೆ.. ಸ್ಟಿರಾಯ್ಡುಗಳೇ? ನಾನು ತೆಗೆದುಕೊಳ್ಳಲು ಸಾಧ್ಯವೇ ಇಲ್ಲ !!. ಈ ಡಾಕ್ಟ್ರೇ ಸರಿ ಇಲ್ಲ. ಸ್ಟಿರಾಯ್ಡುಗಳನ್ನು ಬರ್ದು ಕೊಡ್ತಾರೆ. ಇವರಿಗೆ ಅವರ ಕಾಯಿಲೆಗಳಲ್ಲಿ ಸ್ಟಿರಾಯ್ಡುಗಳ ಬಗ್ಗೆ ಅವರ ಕಾಯಿಲೆಯಲ್ಲಿ ಅನಿವಾರ್ಯತೆಯನ್ನು ವಿವರಿಸಿ ಅವರು ಅದನ್ನು ಸ್ವಲ್ಪ ದಿನ ತೆಗೆದುಕೊಳ್ಳುವಂತೆ ಮಾಡಲು ಸಾಕು ಸಾಕಾಯಿತು!!

ಘಟನೆ 3

ಸುಮಾರು ವರ್ಷಗಳ ಹಿಂದಿನ ಕಥೆ. ನಮ್ಮ ಪ್ರಯೋಗಶಾಲೆಯಲ್ಲಿರುವ ಒಬ್ಬರಿಗೆ ” ಸೋರಿಯಾಸಿಸ್” ಕಾಯಿಲೆ ಇತ್ತು. ಈ ಕಾಯಿಲೆಗೆ ಉತ್ತಮ ಔಷಧಿ ಇಲ್ಲ. ಇದಕ್ಕೆ ಅಲೋಪತಿಯಲ್ಲಿ ಇರುವ ಔಷಧಗಳನ್ನು ತೆಗೆದುಕೊಳ್ಳುತ್ತಾ ದಿನ ದೂಡುತ್ತಿದ್ದರು. ಕೈ ಮೇಲೆ ತುರಿಕೆಯ ಕಲೆಗಳು ಎದ್ದು ಕಾಣುತ್ತಿದ್ದವು.

ಸ್ವಲ್ಪ ದಿನ ಬಿಟ್ಟು ನೋಡಿದರೆ ಏನಾಶ್ಚರ್ಯ !! ಕಲೆಗಳೆಲ್ಲಾ ಮಾಯ !! ಔಷಧಶಾಸ್ತ್ರ ತಜ್ಞರೆಂದು ಹೇಳಿಕೊಳ್ಳುವ ನಮಗೇ ಗೊತ್ತಾಗದ ಹಾಗೇ ಹೊಸ ಔಷಧಿ ಬಂದು ಬಿಟ್ಟಿತೇ ಎಂದು ಆಶ್ಚರ್ಯ ಪಟ್ಟೆ!. ಕೇಳಿದರೂ ನಿಮಗೆ ಆ ಔಷಧದ ವಿಷಯ ಬೇಡ ಸಾರ್. ನೀವು ಅದನ್ನೆಲ್ಲಾ ನಂಬಲ್ಲ ಎಂದು ನುಣುಚಿಕೊಂಡು ಬಿಟ್ಟರು. ವಿಷಯ ಮರೆತು ಹೋಯಿತು.

ಸ್ವಲ್ಪ ದಿನದ ನಂತರ ಅವರಿಂದ ದೂರವಾಣಿ ಕರೆ!. ಸಾರ್. ಸ್ವಲ್ಪ ಮೈಗೆ ಹುಶಾರಿಲ್ಲ.. ನಾಲ್ಕು ದಿನ ರಜೆ ಬೇಕು.. ಸರಿ. ರಜೆ ಮುಗಿಸಿ ಬಂದ ನಂತರ ಅವರಲ್ಲಿ ಏನೋ ಬದಲಾವಣೆ ಗಮನಿಸಿದೆ. ಮುಖವೆಲ್ಲಾ ಸ್ವಲ್ಪ ದಪ್ಪವಾಗಿತ್ತು. ದೇಹದ ತೂಕವೂ ಜಾಸ್ತಿಯಾದ ಹಾಗೇ ಕಾಣಿಸಿತು. ಅಲ್ರೀ… ಯಾಕೋ ದಪ್ಪ ಆದ ಹಾಗೇ ಕಾಣ್ತೀರಲ್ಲ!! ಯಾಕೆ ? ಅಂದೆ. ಇಲ್ಲ ಸಾರ್. ಒಂದು ಹತ್ತು ದಿನದಿಂದ ಆಲಸ್ಯ. ಬೆಳಿಗ್ಗೆ ವಾಕ್ ನಿಲ್ಲಿಸಿ ಬಿಟ್ಟೆ. ಅದಕ್ಕೆ ತೂಕ ಜಾಸ್ತಿಯಾಗಿ ಬಿಟ್ಟಿದೆ ಅಂದರು.

ನನಗೆ ಸಂಶಯವಾಗಿ ಏನಾದ್ರೂ ಔಷಧ ತೆಗೆದುಕೊಳ್ತಾ ಇದ್ದೀರೇನ್ರಿ ?? ಅಂದೆ. ಹೌದು ಸಾರ್. ಈ ಸೋರಿಯಾಸಿಸ್” ಗೆ ಹಳ್ಳಿ ಔಷಧಿ ತಗೋಳ್ತಾ ಇದ್ದೀನಿ ಸಾರ್. ಅದ್ರಿಂದ್ಲೇ ನನಗೆ ಹುಶಾರಾಗಾದೆ. ಅದೇನೂ ತೊಂದ್ರೆ ಇಲ್ಲ ಸಾರ್. ಅಯುರ್ವೇದಿಕ್ ಔಷಧಿ. ಸೈಡ್ ಇಫೆಕ್ಟ್ ಇಲ್ವಂತೆ ಸಾರ್.. ಅಂದ್ರು.

“ಸರಿ. ಔಷಧಿ ತಗೊಂಡು ಬನ್ನಿ ನೋಡೋಣ” ಅಂದೆ. ಕಾಗದದ ಪೊಟ್ಟಣದಲ್ಲಿ ಕಟ್ಟಿದ ಕಂದು ಬಣ್ಣದ ಪುಡಿಯಂತಹ ವಸ್ತುವೊಂದನ್ನು ತಂದು ಕೊಟ್ಟರು. ಅದನ್ನು ನಮ್ಮ ಪ್ರಯೋಗಾಲಯದಲ್ಲಿ ತಪಾಸಣೆಗೆ ಒಳಪಡಿಸಿದೆ. ಅದರಲ್ಲಿ ಸ್ಟಿರೋಯ್ಡ್ ಇರುವುದು ಪತ್ತೆ ಆಯ್ತು.

ನಂತರ ಗೊತ್ತಾಗಿರುವುದು ಆ ಪಂಡಿತ ಆಯುರ್ವೇದದ ಹೆಸರಿನಲ್ಲಿ ಸ್ಟಿರೋಯ್ಡ್ಗಳನ್ನು ಪುಡಿಯಲ್ಲಿ ಬೆರೆಸಿ ಜನರಿಗೆ ನೀಡಿ ಮಂಕು ಬೂದಿ ಎರಚಿ ಹಣ ಕೀಳುತ್ತಿದ್ದ. ಈ ಸ್ಟಿರೋಯ್ಡ್ ಗಳು ಶರೀರದ ರೋಗ ನಿರೋಧಕ ಕಣಗಳನ್ನು ಹತ್ತಿಕ್ಕಿ ತಾತ್ಕಾಲಿಕ ಉಪಶಮನ ನೀಡಿದರೂ ಅವುಗಳ ಅಡ್ಡಪರಿಣಾಮದಿಂದ ಶರೀರದಲ್ಲಿ ನೀರು ತುಂಬಿಕೊಂಡು ದೇಹದ ತೂಕ ಹೆಚ್ಚಿಸಿ ಆಲಸ್ಯವನ್ನುಂಟು ಮಾಡಿದೆ ಅಂತ ಗೊತ್ತಾಯ್ತು. ಔಷಧ ನಿಲ್ಲಿಸಿದ ಮೇಲೆ ಅವರ ಆರೋಗ್ಯ ಸುಧಾರಿಸಿತು.

ಘಟನೆ 4

ಕುದುರೆಗಳು ಚೆನ್ನಾಗಿ ಓಡಲು ಮತ್ತು ಜಾನುವಾರುಗಳು ಚೆನ್ನಾಗಿ ಕೊಬ್ಬಲು ಸ್ಟಿರಾಯ್ಡುಗಳ ಬಳಕೆ ಅತಿಯಾಗಿ ಅವುಗಳಿಗೆ “ಡೋಪಿಂಗ್ ಪರೀಕ್ಷೆ” ಈಗ ಕಡ್ಡಾಯವಾಗಿದೆ. ದೇಹ ಹುರಿಗೊಳಿಸುವ ಸಲುವಾಗಿ ತನ್ನ ಜಿಮ್ ಗ್ರಾಹಕರಿಗೆ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಜಿಮ್ ತರಬೇತುದಾರನನ್ನು ಬಂಧಿಸಲಾಗಿದೆ ಮತ್ತು ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ ಸ್ಟಿರಾಯ್ಡ್ಸ್ ಉಪಯೋಗಿಸುತ್ತಿದ್ದ ಮತ್ತು ಸಿಕ್ಕಿ ಬಿದ್ದು ಕಂಬಿ ಎಣಿಸಿದ ಇತ್ಯಾದಿ.. ಸುದ್ಧಿಗಳು ಮಾಧ್ಯಮಗಳಲ್ಲಿ ಹರಿದಾಡಿ ಜನರಲ್ಲಿ ಸ್ಟಿರಾಯ್ಡುಗಳ ಬಗ್ಗೆ ಭಯನ್ನು ಹುಟ್ಟಿಸಿದವು. ಇವುಗಳಿಗೆ “ಉದ್ಧೀಪನ ಔಷಧಿಗಳು” ಎಂದೂ ಕರೆಯುತ್ತಾರೆ.

ಈ ಘಟನೆಗಳು ಸ್ಟಿರಾಯ್ಡುಗಳ ಉಪಯುಕ್ತತೆ ಮತ್ತು ಅವುಗಳ ದುಷ್ಪರಿಣಾಮ ಇವುಗಳ ಕುರಿತು ನನ್ನ ಗಮನಕ್ಕೆ ಬಂದ ಚಿಕ್ಕ ಪುಟ್ಟ ಉದಾಹರಣೆಗಳು ಅಷ್ಟೆ.. ಇಂತಹ ಸಹಸ್ರಾರು ಜನರು ಈ ತರಹದ ಸುಳ್ಳು ಔಷಧಗಳಿಗೆ ಬಲಿಯಾಗಿರಬಹುದೇನೋ?

ಹಾಗಿದ್ದರೆ ಏನಿದು ಸ್ಟಿರೋಯ್ಡ್? ಯಾಕೆ ಇದನ್ನು ಬಳಸುತ್ತಾರೆ? ಏನಿದರ ಪರಿಣಾಮ ಮತ್ತು ಅಡ್ಡಪರಿಣಾಮ? ಅನ್ನುವ ಬಗ್ಗೆ ತಿಳಿಯೋಣವೇ?

ಮೆದುಳಿನಿಂದ ಸ್ರವಿಸಲ್ಪಡುವ ಎಸಿಟಿಹೆಚ್ ಹಾರ್ಮೋನಿನಿಂದ ಪ್ರಚೋದಿತವಾಗಿ ಅಡ್ರಿನಲ್ ಗ್ರಂಥಿಯ ಕಾರ್ಟೆಕ್ಸ್ ಭಾಗದಿಂದ “ಕಾರ್ಟಿಕೋಸ್ಟಿರೋಯ್ಡ್” ರಕ್ತದಲ್ಲಿ ಸ್ರವಿಸಲ್ಪಡುತ್ತದೆ. ಪ್ರಸಕ್ತ ಮಾರುಕಟ್ಟೆಯಲ್ಲಿ ಇರುವ ಅನೇಕ ಸ್ಟಿರಾಯ್ಡುಗಳಿಗೆ ಇದೇ ಮೂಲ ಸೌಧ. ಇದರ ಪರಿಣಾಮವನ್ನು ಎರಡು ಮುಖ್ಯ ಘಟ್ಟದಲ್ಲಿ ವಿಭಜಿಸಬಹುದು.

ಅದೆ ಗ್ಲುಕೋಕಾರ್ಟಿಕಾಯ್ಡ್ ಪರಿಣಾಮ ಮತ್ತು ಮಿನೆರಲೋ ಕಾರ್ತಿಕಾಯ್ಡ್ ಪರಿಣಾಮಗಳು. ಶರೀರ ಹೆಚ್ಚಿನ ಕೆಲಸ ಮಾಡಬೇಕಾದರೆ ಅವಶ್ಯವಿರುವ ಗ್ಲುಕೋಸ್ ಬೇಕಾದಾಗ ಗ್ಲುಕೋಕಾರ್ಟಿಕಾಯ್ಡ್ ಪರಿಣಾಮವೆಂದರೆ ರಕ್ತದಲ್ಲಿನ ಗ್ಲುಕೋಸ್ ಪ್ರಮಾಣವನ್ನು ಪಿತ್ತಜನಕಾಂಗ, ಮಾಂಸಖಂಡಗಳು ಮತ್ತು ಕೊಬ್ಬಿನ ಕಣಗಳ ವಿಭಜನೆಯಿಂದ ಹೆಚ್ಚಿಸುವುದು.ಈ ವರ್ಗಕ್ಕೆ ಕೆಲವು ಉದಾಹರಣೆಗಳೆಂದರೆ ಕಾರ್ಟಿಸೊಲ್, ಪ್ರೆಡ್ನಿಸೋನ್, ಪ್ರೆಡ್ನಿಸೋಲೊನ್, ಮೆಥೈಲ್ ಪ್ರೆಡ್ನಿಸೋಲೊನ್,ಡೆಕ್ಸಾಮಿಥಸೋನ್, ಬೆಟಾಮಿಥಸೋನ್ ಇತ್ಯಾದಿ.

ಇನ್ನು ಮಿನೆರಲೋಕಾರ್ಟಿಕಾಯ್ಡ್ ಪರಿಣಾಮವೆಂದರೆ ಶರೀರದಲ್ಲಿ ಹೆಚ್ಚಿನ ಪೊಟ್ಯಾಸಿಯಂ ಅಂಶವನ್ನು ಅಲ್ಡೋಸ್ಟಿರೋನ್ ಅಂಶದ ಮೂಲಕ ಉಳಿಸಿಕೊಳ್ಳುವುದು. ಇದಕ್ಕೆ ಉದಾಹರಣೆಗಳೆಂದರೆ ಅಲ್ಡೋಸ್ಟಿರೋನ್ ಪ್ಲುಡ್ರೋಕಾರ್ಟಿಸೋನ್ ಇತ್ಯಾದಿ.

ಇದಲ್ಲದೇ “ಅನಾಬೋಲಿಕ್ ಸ್ಟಿರಾಯ್ಡ್” ಎಂಬ ಮತ್ತೊಂದು ವರ್ಗವಿದ್ದು ಇದನ್ನು ವಯಸ್ಸಾದ ವ್ಯಕ್ತಿಗಳಲ್ಲಿ ಮಾಂಸಖಂಡಗಳು ದುರ್ಬಲವಾದಾಗ ಉಪಯೋಗಿಸುತ್ತಾರೆ. ಆದರೆ ಬಹಳ ಸಲ ಇದನ್ನು ಕ್ರೀಡಾಪಟುಗಳು ದುರ್ಬಳಕೆ ಮಾಡಿ, ಹಿಂಬಾಗಿಲಿನಿಂದ ಕ್ರೀಡೆಯನ್ನು ಗೆಲ್ಲುವ ಹುನ್ನಾರ ಮಾಡುತ್ತಾರೆ.

“ಅನಾಬೋಲಿಕ್ ಸ್ಟಿರಾಯ್ಡ್” ಇವು ಗಂಡು ಹಾರ್ಮೊನಾದ ಟೆಸ್ಟೋಸ್ಟಿರಾನ್ ಇದರ ಪ್ರತಿರೂಪವಾಗಿದ್ದು ಮಾಂಸಖಂಡಗಳಲ್ಲಿ ಪ್ರೋಟೀನುಗಳ ಬಳಕೆ ಜಾಸ್ತಿ ಮಾಡುತ್ತವೆ. ಇದರಿಂದ ಮಾಂಸಖಂಡಗಳು ಹಿಗ್ಗಿ, ಕುಸ್ತಿ ಮತ್ತು ಬಾಕ್ಸಿಂಗ್ ಪಟುಗಳು ಮತ್ತು ಅನೇಕ ಕ್ರೀಡಾಪಟುಗಳು ಇದರ ದುರ್ಬಳಕೆ ಮಾಡಿ “ಉದ್ಧೀಪನ ಔಷಧಿ” ಪತ್ತೆಯ ಸಮಯದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ಇದಕ್ಕೆ ಉದಾಹರಣೆಯೆಂದರೆ ಆಂಡ್ರೋಸ್ಟೆನೆಡಿಯೋನ್, ಸ್ಟಾನಜೋಲೋಲ್, ನಾಂಡ್ರೋಲೋನ್ ಇತ್ಯಾದಿ.

ಮತ್ತೊಂದು ಮುಖ್ಯವಾದ ಅಂಶವೆಂದರೆ ಕಾರ್ಟಿಕೋಸ್ಟಿರಾಯ್ಡುಗಳು ಶರೀರದಲ್ಲಿ ಉರಿಯೂತವನ್ನುಂಟು ಮಾಡಬಲ್ಲ ಸೈಟೊಕೈನ್ ಮತ್ತಿತರ ಪದಾರ್ಥಗಳ ಉತ್ಪಾದನೆ ಮತ್ತು ಅವುಗಳ ಕಾರ್ಯವನ್ನು ಕುಂಠಿತಗೊಳಿಸಿ ಉರಿಯೂತವನ್ನು ಕಡಿಮೆ ಮಾಡುತ್ತವೆ. ಕಾರಣ ಇವುಗಳನ್ನು “ ಜೀವ ರಕ್ಷಕ” ಔಷಧಗಳ ಪಟ್ಟಿಯಲ್ಲಿ ಸೇರಿಸುತ್ತಾರೆ.

ಈ ಔಷಧಿ ಇರದಿದ್ದರೆ ಅಪಘಾತ, ಹಾವು ಕಡಿತ, ಜೇನು ಹುಳ ಕಡಿತದಂತ ಅನೇಕ ಜೀವ ತೆಗೆಯುವ ಸ್ಥಿತಿಗಳಿಗೆ “ಜೀವ ರಕ್ಷಕ” ಔಷಧಗಳೇ ಇಲ್ಲವಾಗಿದ್ದವು. ನಮ್ಮ ದೇಹಕ್ಕೆ ಅತಿಯಾದ ಉರಿಯೂತವನ್ನುಂಟು ಮಾಡಬಲ್ಲ ಈ ಸ್ಥಿತಿಗಳಿಗೆ ಗ್ಲುಕೊಕಾರ್ಟಿ ಕಾಯ್ಡುಗಳು ರಾಮಬಾಣವಾಗಿ ಪರಿಣಮಿಸಿವೆ.

ಸ್ಟಿರಾಯ್ಡುಗಳು ಜನ ಹೆದರುವ ಹಾಗೇ “ಭಯಾನಕ” ಔಷಧಿಗಳೇನೂ ಅಲ್ಲ. ಸಾಕಷ್ಟು ಎಚ್ಚರ ವಹಿಸಿಯೇ ಅವುಗಳನ್ನು ಕಂಡು ಹಿಡಿಯಲಾಗಿದೆ. ಸ್ಟಿರಾಯ್ಡುಗಳು ಅಥವಾ ಅನಾಬೊಲಿಕ್ ಸ್ಟಿರಾಯ್ಡುಗಳ ದುರ್ಬಳಕೆಯಿಂದ ಕೆಟ್ಟ ಹೆಸರು ಪಡೆದಿವೆಯೇ ಹೊರತು ಇವುಗಳು ವೈದ್ಯರ ಸಲಹೆಯಂತೆ ಉಪಯೋಗಿಸಿದಲ್ಲಿ ಉತ್ತಮ ಪರಿಣಾಮ ಬೀರಬಲ್ಲ ಔಷಧಗಳು.

ಯಾವುದೇ ಔಷಧವನ್ನು ವೈದ್ಯರ ಸಲಹೆಯಂತೆ ನಿಯಮಿತ ಅವಧಿಗೆ ಬಳಸಿದರೆ ಏನೂ ತೊಂದರೆ ಇಲ್ಲ. ವೈದ್ಯರಿಗೆ ಪ್ರತಿ ಔಷಧಿಯ ಪರಿಣಾಮ ಮತ್ತು ಅಡ್ಡಪರಿಣಾಮ ತಿಳಿದಿರುತ್ತದೆ. ಅವಶ್ಯವಾಗಿದ್ದಾಗ ಮಾತ್ರ ಅವರು ಬಳಸುತ್ತಾರೆ. ಸುಮ್ಮನೆ ಪೂರ್ವಾಗೃಹ ಪೀಡೆಯಿಂದ ಒಂದು ಔಷಧಿಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ತರವಲ್ಲ. ಅಲ್ಲದೇ ಕೆಲವರು ಸ್ವಯಂ ವೈದ್ಯದಿಂದಲೂ ಹಾಗೂ ಕೆಲ ಹಣಬಾಕ ಕೊಟ್ಟಿ ವೈದ್ಯರುಗಳು ಸಹ ಈ ಔಷಧಿಗಳನ್ನು ದುರುಪಯೋಗ ಮಾಡುವುದನ್ನು ತಡೆಯುವುದು ಒಳ್ಳೆಯದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending