ಬಹಿರಂಗ
ಬೇಕಾದುದು- ವೈಷ್ಣವ ದೀಕ್ಷೆಯಲ್ಲ ; ತ್ರಿಜ ದೀಕ್ಷೆ
- ದೇವನೂರ ಮಹಾದೇವ
ಮಧ್ವ ಸಿದ್ಧಾಂತದ ಬಗ್ಗೆ ಕುವೆಂಪು ಅಸಹನೆಯನ್ನು* ಮನುಷ್ಯರಾದರೆ ಸಾಕು ಅರ್ಥ ಮಾಡಿಕೊಳ್ಳಬಹುದು. ಮಧ್ವ ಸಿದ್ಧಾಂತದ ನಿತ್ಯ ಮುಕ್ತ, ನಿತ್ಯ ಸಂಸಾರಿ, ನಿತ್ಯ ನಾರಕಿ- ಎಂಬ ಈ ದೃಷ್ಟಿಕೋನದಲ್ಲಿ -ಜಗತ್ತು, ಮನುಷ್ಯ ಬದಲಾಗುವುದಿಲ್ಲ ಎಲ್ಲವೂ ನಿತ್ಯ ಅಂದರೆ ಶಾಶ್ವತ ಎಂದು ಸಮಾಜವನ್ನು ಜಡಗೊಳಿಸಿ ಚಲನರಹಿತ ಮಾಡಿ, ನರಕವನ್ನೇ ತಾರತಮ್ಯವನ್ನೇ ಸಿದ್ಧಾಂತಗೊಳಿಸಿಬಿಟ್ಟಿದೆ.
ಇಂಥ ಕಡೆ ವಿಶ್ವೇಶ್ವರತೀರ್ಥರು ಹುಟ್ಟಿದ್ದಾರೆ. ಈ ಸಿದ್ಧಾಂತದ ಮಠಕ್ಕೆ ಶ್ರೀಗಳಾಗಿದ್ದಾರೆ. ಆದರೆ ಚಲನೆಯನ್ನು ಬಯಸುವಂತೆ ಕಾಣುತ್ತಾರೆ. ಹಾಗಾಗಿ, ತನ್ನ ಸಿದ್ಧಾಂತದ ಚೌಕಟ್ಟನ್ನು ಮೀರಲು ಇವರು ಒದ್ದಾಡುತ್ತಿರುವಂತೆ ಕಾಣಿಸುತ್ತಿದೆ. ಈ ಒದ್ದಾಟ, ಬಲೆಗೆ ಸಿಕ್ಕಿಕೊಂಡು ಕೈಕಾಲು ಬಡಿಯುತ್ತಿರುವ ಒಂದು ಗುಬ್ಬಚ್ಚಿಯ ಒದ್ದಾಟದಂತಿದೆ. ಇದನ್ನು ನೋಡಿದಾಗ ಇವರು ಅಲ್ಲಿರಬೇಕಾದವರಲ್ಲ, ನಮ್ಮ ಜೊತೆ ಇರಬೇಕಾದವರು ಅಂತ ಒಂದೊಂದು ಸಲ ಅನ್ನಿಸುತ್ತದೆ.
ಆದರೆ ಇವರ ಒದ್ದಾಟವು ಆಳವಾದ ಧಾರ್ಮಿಕತೆಯಿಂದ ಬಂದುದೇ? ಅಂತರಂಗದ್ದೇ? ಎಂದು ಪ್ರಶ್ನಿಸಿಕೊಂಡಾಗ-ಧೈರ್ಯವಾಗಿ ಹೌದು ಎಂದು ಹೇಳಲು ಕಷ್ಟವಾಗುತ್ತದೆ. ‘ಕೀಳಿಂಗಲ್ಲದೆ ಹಯನು ಕರೆಯದು’ ಎಂದರೆ, ತಾನು ತನ್ನ ಅಹಂ ಅನ್ನು ಅಲ್ಪವಾಗಿಸದೆ ಮೋಕ್ಷವಿಲ್ಲ- ಎಂಬ ತುಡಿತದಿಂದಾಗಿ ಅಹಂ ಅಲ್ಪವಿರುವ, ಮೇಲರಿಮೆ ಇಲ್ಲದ ಅಸ್ಪೃಶ್ಯ ಸಮುದಾಯವನ್ನು ಶ್ರೇಷ್ಠವೆಂದು ಭಾವಿಸಿದ ವಚನಕಾರರ ನಡೆ ಕಂಡಾಗ, ಶ್ರೀಪೇಜಾವರರ ಪಾದಯಾತ್ರೆ ಧಾರ್ಮಿಕವಲ್ಲವೇನೋ ಧರ್ಮರಾಜಕಾರಣವಿರಬೇಕು ಎಂಬ ಅನುಮಾನ ಹುಟ್ಟಿಸುತ್ತದೆ. ‘ತಮ್ಮ ಮಠಕ್ಕೆ ಉತ್ತರಾಧಿಕಾರಿಯಾಗಿ ಕುರುಬರನ್ನೇನಾದರೂ ಮಾಡುತ್ತೀರಾ’ ಎಂದು ಕೇಳಿದರೆ, ‘ಬ್ರಾಹ್ಮಣರನ್ನು ಮಾತ್ರ ಕೇಳುತ್ತೀರಿ? ಕ್ರಿಶ್ಚಿಯನ್ನರನ್ನು ಕೇಳುತ್ತೀರಾ? ಲಾಮಾ ಮಾಡು ಎಂದು ಬೌದ್ಧರನ್ನು ಕೇಳುತ್ತೀರಾ?’ ಎಂದು ಪೇಜಾವರರು ಸಹನೆ ಕಳೆದು ಕೊಳ್ಳುತ್ತಾರೆ!.
‘ನಾನು ಕ್ರಿಶ್ಚಿಯನ್, ನಾನು ಬೌದ್ಧ, ನಾನು ಯಾಕೆ ಮಠಾಧಿಪತಿಯಾಗಬಾರದು?’ ಎಂದು ಆ ಧರ್ಮಗಳಲ್ಲಿರುವ ಯಾರೇ ಪ್ರಶ್ನಿಸಬಹುದು. ಇದಕ್ಕೆ ಆ ಧರ್ಮಗಳಲ್ಲಿ ಅವಕಾಶವಾದರೂ ಇದೆ. ಕೆಲವು ಕಡೆ ಸಾಧ್ಯವೂ ಆಗಿದೆ. ಹಿಂದೂ ಎಂದುಕೊಂಡಿರುವ ಜಾತಿಧರ್ಮದಲ್ಲಿ ಇದು ಸಾಧ್ಯವೇ? ಉಡುಪಿ ಕೃಷ್ಣನ ಗುಡಿಯ ಹೊರಗೆ ನಿಂತಿರುವ ಕನಕದಾಸನ ಕುರುಬರು ನಿಮ್ಮ ಸಮಾಜಕ್ಕೆ ಸೇರಿಲ್ಲವೇ? ಅವರ ಧರ್ಮವೇ ಬೇರೆಯೇ? ಅಥವಾ ಪ್ರತಿ ಜಾತಿಯೂ ಒಂದೊಂದು ಧರ್ಮವೇ?
ಹಾಗಾದರೆ ಧರ್ಮ ಎಂದರೇನು? ಜಾತಿಗಳ ಮೇಲು-ಕೀಳು ನಿಷಿದ್ಧಗಳ ಕಟ್ಟಳೆಗಳೇ ಇಲ್ಲಿ ಧರ್ಮವಾಗಿದೆ. ಅದಕ್ಕೇ ಪೇಜಾವರರನ್ನು ತಿರುಪತಿಯಲ್ಲಿ ಪೂಜೆಗೆ ಬಿಡುವುದಿಲ್ಲ ಎಂದರೆ- ನಾವೆಂಥ ಕ್ಷುದ್ರಜೀವಿಗಳು ಎಂದು ನಮಗನಿಸುವುದಿಲ್ಲ. ಈ ನಮ್ಮ ಮಠ, ದೇವಸ್ಥಾನ, ಪೂಜಾಸ್ಥಳಗಳು ಈ ಅಂಧಃತಮಸ್ಸಿನಿಂದ ಹೊರಬರಲು ಇನ್ನೆಷ್ಟ್ಟು ವರ್ಷಗಳು ಕಾಯಬೇಕು? ‘ನಿನ್ನನ್ನು ನನ್ನ ಮಠದ ಉತ್ತರಾಧಿಕಾರಿಯನ್ನಾಗಿ ಮಾಡುತ್ತೇನೆ, ಮತಾಂತರ ಆಗಬೇಡ’ ಎನ್ನಲು ಬಾಯಿಬಾರದ ಮಠಾಧಿಪತಿ ‘ಮತಾಂತರ ಆಗಬಾರದು’ ಎಂದು ನೈತಿಕತೆ ಕಾಡದೆ ಹೇಳಿದರೂ ಅದರೊಳಗಿನ ನಿರ್ಲಜ್ಜತೆ ನಮಗೆ ಕಾಣಿಸುವುದಿಲ್ಲ. ‘ನೀನು ಹೊರಗಿರುವುದೇ ನಮ್ಮ ಸಂಪ್ರದಾಯ’ ಎನ್ನುವುದರ ಕ್ರೌರ್ಯವೂ ನಮಗೆ ತಟ್ಟುವುದಿಲ್ಲ.
ಈಗ ಪೇಜಾವರ ಶ್ರೀಗಳು ದಲಿತರಿಗೆ ವೈಷ್ಣವ ದೀಕ್ಷೆ ಕೊಡಲು ಹೊರಟಿದ್ದಾರೆ. ಈಗಾಗಲೇ ವೈಷ್ಣವ ದೀಕ್ಷೆ ಪಡೆದ ಅನೇಕ ದಲಿತ ದಾಸ ಒಕ್ಕಲುಗಳು ಇವೆ. ಶಂಖ-ಜಾಗಟೆಯನ್ನು ಪ್ರತ್ಯೇಕವಾಗಿ ಮಡಿಯಾಗಿ ಇಟ್ಟುಕೊಂಡು, ಆ ಇಟ್ಟಿರುವ ಜಾಗಕ್ಕೆ ಉಳಿದವರಿಗೆ ಪ್ರವೇಶ ಕೊಡದೆ, ದಾಸ ಒಕ್ಕಲುಗಳಲ್ಲೇ ಮದುವೆಗೆ ಹೆಣ್ಣು ಗಂಡು ಹುಡುಕುತ್ತಿವೆ. ಈ ದೀಕ್ಷೆ ದಲಿತರಲ್ಲಿ ಭೇದವನ್ನು ಹೆಚ್ಚಿಸಿರುವುದೇ ಹೊರತು ಐಕ್ಯತೆಯನ್ನಲ್ಲ. ಪೇಜಾವರ ಶ್ರೀಗಳ ಪಾದಯಾತ್ರೆಯಿಂದ ದಲಿತರಲ್ಲಿ ಇನ್ನಷ್ಟು ದಾಸರು ಹೆಚ್ಚಾಗಬಹುದು. ಶಂಖಜಾಗಟೆ ಬಾರಿಸಬಹುದು! ಎಷ್ಟೇ ಶಂಖ-ಜಾಗಟೆ ಬಾರಿಸಿದರೂ ಅವರ ಅಸ್ಪೃಶ್ಯ ಸ್ಥಿತಿಯಿಂದ ಚಲನೆ ಕಾಣದು. ಯಾಕೆಂದರೆ ವೈಷ್ಣವ ದೀಕ್ಷೆ ಎಂದರೆ ಸೇವಕತನದ ದಾಸ ದೀಕ್ಷೆ.
ಹೀಗಿರುವಾಗ ಶ್ರೀ ಪೇಜಾವರರು ವೈಷ್ಣವದೀಕ್ಷೆಯನ್ನು ಪುನರ್ಪರಿಶೀಲಿಸುವುದು ಒಳಿತೇನೋ. ಬದಲಾಗಿ ದ್ವಿಜರಿಗೆ ತ್ರಿಜ ದೀಕ್ಷೆ ಕೊಡುವುದು ನಮ್ಮ ಸಮಾಜದ ಆರೋಗ್ಯ ಐಕ್ಯತೆ ಸಮತೋಲನಕ್ಕೆ ಅಗತ್ಯವೇನೋ ಅನ್ನಿಸುತ್ತದೆ. ಹಾಲಿ ದ್ವಿಜ ದೀಕ್ಷೆಯ ಗಾಯತ್ರೀ ಮಂತ್ರದಲ್ಲಿ, ಮುಖ್ಯವಾಗಿ ಬುದ್ಧಿ ಪ್ರಚೋದನೆಯಾಗಲಿ ಎಂಬ ಆಶಯವಿದೆ. ಬುದ್ಧಿಯಿಂದ ಒಡಕು ವಂಚನೆ ಮೇಲರಿಮೆ ಕೀಳರಿಮೆ ಇತ್ಯಾದಿಗಳು ಹೆಚ್ಚಲೂಬಹುದು. ಭಾರತದ ಸಮಾಜಕ್ಕೆ ಇಂದು ತುರ್ತಾಗಿ ಬೇಕಾಗಿರುವುದು- ಕರುಳು ಅಂದರೆ ಅಂತಃಕರಣ, ಅಂದರೆ ಬಂಧುತ್ವ. ಇದರ ಪ್ರಚೋದನೆಗಾಗಿ, ಅಂದರೆ ಕಾರುಣ್ಯದ ಪ್ರಚೋದನೆಯಾಗಲಿ ಎಂಬ ಆಶಯದ ತ್ರಿಜದೀಕ್ಷೆ ಅಂದರೆ ನೆತ್ತಿಗೊಂದು ಮುತ್ತು ಕೊಟ್ಟು ಮಗುತನದ ಬಂಧುತ್ವದ ಅಭೇದದೀಕ್ಷೆ ಭಾರತಕ್ಕೆ ಅರ್ಜೆಂಟಾಗಿ ಬೇಕಾಗಿದೆ.
ಭಾರತವು ಏನೇನೋ ಹುಟ್ಟುಹಾಕಿದೆ. ಹುಟ್ಟಿಸುವುದರಲ್ಲಿ ನಾವು ನಿಸ್ಸೀಮರು. ಚಾತುರ್ವರ್ಣ ಜಾತಿಭೇದದ ತಾರತಮ್ಯದ ಕಾನೂನು ಕಟ್ಟಳೆಗಳನ್ನು ಧರ್ಮವಾಗಿಸಲು ದೇವರುಗಳನ್ನೇ ರೌಡಿಗಳನ್ನಾಗಿಸಿದ ದೇಶ ಇದು. ಇತ್ತೀಚೆಗೆ ಆಕ್ಸಿಡೆಂಟ್ ಗಣೇಶನನ್ನೂ ಹುಟ್ಟುಹಾಕಿದೆ. ಈಗ ಒಂದು ಹೊಸ ಹುಟ್ಟಿಗಾಗಿ ಪೇಜಾವರ ಶ್ರೀಗಳ ಮುಂದೆ ಸಲಹೆಯೊಂದನ್ನಿಡುವೆ. ನಮ್ಮದು ಜನ್ಮಾಂತರಗಳನ್ನು ನಂಬುವ ದೇಶ. ಈ ಜನ್ಮದ ತರ್ಕಕ್ಕೆ- ‘ಕಳೆದ ಜನ್ಮದಲ್ಲಿ ಅಸ್ಪೃಶ್ಯತೆ ಆಚರಿಸಿದವರೇ ಈ ಜನ್ಮದಲ್ಲಿ ಅದನ್ನು ಅನುಭವಿಸಲು ಅಸ್ಪೃಶ್ಯರಾಗಿ ಹುಟ್ಟಿದ್ದಾರೆ. ಈ ಜನ್ಮದಲ್ಲಿ ಅಸ್ಪೃಶ್ಯತೆ ಆಚರಿಸುವವರು ಮುಂದಿನ ಜನ್ಮದಲ್ಲಿ ಅಸ್ಪೃಶ್ಯರಾಗಿ ಹುಟ್ಟುವರು’ ಎಂದು ಜನಜನಿತ ಮಾಡಿದರೆ ನಮ್ಮ ಜಡ ಸಮಾಜವು ಸ್ವಲ್ಪವಾದರೂ ಚಲಿಸಬಹುದಲ್ಲವೇ? ಜನ್ಮ ನಿಜವಿದ್ದರೆ ಆ ಜನ್ಮಾಂತರದ ಕರ್ಮಫಲವನ್ನು ಉಣ್ಣಬೇಕಾದ್ದೂ ನಿಜವಿರಬಹುದಲ್ಲವೇ?
ಏನೇನೋ ಹುಟ್ಟುಹಾಕುವವರು ಇದನ್ನೂ ಯಾಕೆ ಹುಟ್ಟುಹಾಕಬಾರದು?! ಯಾಕೆ ಮಠಾಧೀಶರುಗಳು ಇದನ್ನು ಪ್ರಚಾರ ಮಾಡಬಾರದು? ತಾರತಮ್ಯಕ್ಕಾಗಿ ತರ್ಕಿಸಿ ಸಾಯುವ ಭಾರತದ ಮನಸ್ಸು ಐಕ್ಯತೆಗಾಗಿ ಯಾಕೆ ತರ್ಕಿಸಬಾರದು? ಇದನ್ನೇ ಅಸ್ಪೃಶ್ಯರೊಳಗಿನ ತಾರತಮ್ಯಕ್ಕೂ- ಈ ಜನ್ಮದಲ್ಲಿ ಯಾರನ್ನಾದರು ಕೀಳಾಗಿ ಕಂಡಿದ್ದರೆ ಮುಂದಿನ ಜನ್ಮದಲ್ಲಿ ಕೀಳಾಗಿ ಹುಟ್ಟಿಯೇ ಕರ್ಮಫಲವನ್ನು ಕಳೆದುಕೊಳ್ಳಬೇಕಾಗುತ್ತದೆ- ಎಂಬಲ್ಲಿಯವರೆಗೂ ವ್ಯಾಪಿಸಬಹುದು.
ಸುಸ್ತಾಗುತ್ತಿದೆ. ಯಾಕೋ ಮುಗಿಯುತ್ತಿಲ್ಲ. ಪ್ರೀತಿ-ಸಮಾನತೆಯ ಆಸೆ ಇಟ್ಟುಕೊಂಡು ಇತಿಹಾಸಕಾಲದಿಂದಲೂ ಜೀವಿಸುತ್ತಿದ್ದೇವೆ. ಪೇಜಾವರಶ್ರೀಗಳ ಪಾದಯಾತ್ರೆಯಿಂದಾಗಿ ಕೆಲವರಾದರೂ ಎಳೆಯ ದ್ವಿಜರು ತ್ರಿಜರಾಗಿ ತ್ರಿಜತ್ವ ಪಡೆದು ತಮ್ಮದಲ್ಲದ ಜಾತಿಯಲ್ಲಿ ಮದುವೆಯಾಗಿ ಹೊಸ ಮನುಷ್ಯ ಸಂತಾನ ಹುಟ್ಟಲು ಶ್ರೀ ಪೇಜಾವರರ ಈ ಪಾದಯಾತ್ರೆ ಪ್ರಚೋದನೆಯನ್ನು ಉಂಟು ಮಾಡಲಿ ಎಂದು ಕನಸು ಕಾಣುವೆ. ನನ್ನ ಕನಸು ನನಸಾಗಲಿ.
“ಕುವೆಂಪು ಅವರ ಸಂದರ್ಶನವೊಂದರಲ್ಲಿ ಶ್ರೀಕೃಷ್ಣ ಆಲನಹಳ್ಳಿಯವರು ಕುವೆಂಪು ಅವರಿಗೆ ಒಂದು ಪ್ರಶ್ನೆ ಕೇಳಿದರು- ‘ಮಧ್ವಸಿದ್ಧಾಂತ ನೀಚ ಸಿದ್ಧಾಂತವೇ ಸರ್?’ ಅಂತ. ಅದಕ್ಕೆ ಕುವೆಂಪು- ‘ನೀಚ? ಪರಮ ನೀಚ’ ಅಂದರು. ಆಲನಹಳ್ಳಿ ನಕ್ಕೂ ನಕ್ಕೂ ಆ ನಗುವಿನ ಅಲೆ ನನ್ನ ಕಿವಿಯಲ್ಲಿ ಇನ್ನೂ ಇದೆ.”
(‘ಎದೆಗೆ ಬಿದ್ದ ಅಕ್ಷರ’ ಸಂಕಲನದಿಂದ ಆಯ್ದ ಒಂದು ಬರಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


