ಭಾವ ಭೈರಾಗಿ
ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕಲ್ಕುಳಿ ವಿಠಲ್ ಹೆಗ್ಗಡೆ ಅವರ ಭಾಷಣ ; ಮಿಸ್ ಮಾಡ್ದೆ ಓದಿ
- ಶೃಂಗೇರಿಯಲ್ಲಿ ದಿನಾಂಕ 10- 01- 2020 ರಂದು ನಡೆದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಶ್ರೀ ಕಲ್ಕುಳಿ ವಿಠಲ್ ಹೆಗ್ಗಡೆ ಅವರ ಭಾಷಣದ ಬರಹ ರೂಪ
ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ.
ಜಿಲ್ಲಾ 19ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.
ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ ಆಡಳಿತಕ್ಕೊಳಪಟ್ಟಿದ್ದ ಕಾರ್ಕಳದ ದೊರೆ ಭೈರವೇಂದ್ರನ ಆಸ್ಥಾನದಲ್ಲಿ ಕವಿಯಾಗಿದ್ದನೆಂದು ಇತಿಹಾಸ ಹೇಳುತ್ತದೆ. ಈತನ ಗ್ರಂಥ ‘ನಾಗಕುಮಾರ ಚರಿತೆ’ಯಲ್ಲಿ ಮುಖ್ಯವಾಗಿ ಕರ್ಮಮಾರ್ಗದ ಪ್ರಸ್ತಾಪ ಬರುತ್ತದೆ. ನನ್ನದೂ ಕರ್ಮಮಾರ್ಗವೇ. ನಮ್ಮ ನೆಲ, ಜಲ ಮತ್ತು ನಮ್ಮ ಜನರಿಗೆ ಸರ್ಕಾರದಿಂದಲೇ ಆಗಲಿ, ಇನ್ಯಾರಿಂದಲೇ ಆಗಲಿ ಸಂಕಷ್ಟ ಬಂದಾಗಲೆ ಧ್ವನಿ ಎತ್ತುವ ಕಾಯಕ ಮಾಡಿದ್ದೇನೆ. ಅಗತ್ಯ ಬಿದ್ದಾಗ ಹೋರಾಟಕ್ಕಿಳಿದಿದ್ದೇನೆ. ಇದು ನನ್ನ ಕರ್ತವ್ಯವಾಗಿದೆ.
ಈ ಅಧ್ಯ ಕ್ಷ ಸ್ಥಾನವು ಈ ಹಿಂದಿನ ನನ್ನ ಹೋರಾಟಕ್ಕೆ ಸಂದ ಗೌರವ ಎಂದು ಭಾವಿಸಿದ್ದೇನೆ. ನನ್ನ ಹೋರಾಟದ ಅನುಭವ ಮತ್ತು ಚಿಂತನೆಗಳು ನನ್ನ ಕೃತಿ, ಪ್ರಬಂಧ, ಲೇಖನಗಳಲ್ಲಿ ಅಭಿವ್ಯಕ್ತಗೊಂಡಿದ್ದು, ಅವೇ ಈ ವೇದಿಕೆಯನ್ನು ತಮ್ಮೆಲ್ಲರ ಅಭಿಮಾನದ ಮೇರೆಗೆ ದೊರಕಿಸಿಕೊಟ್ಟಿತ್ತೆಂದು ಕೊಳ್ಳುತ್ತೇನೆ. ನನ್ನನ್ನು ಆಯ್ಕೆಮಾಡಿದ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯ ಕ್ಷರು, ಪದಾಧಿಕಾರಿಗಳಿಗೆ, ಅಭಿಮಾನಿಗಳಿಗೆ, ಸ್ನೇಹಿತರಿಗೆ, ಸಮಸ್ತರಿಗೆ ಮೊದಲಿಗೆ ಅಂತರಾಳದ ನಮಸ್ಕಾರ ತಿಳಿಸುತ್ತೇನೆ.
ಶೃಂಗೇರಿ ಎಂದರೆ ಹಾವು ಗರ್ಭಿಣಿ ಕಪ್ಪೆಗೆ ನೆರಳು ನೀಡಿದ ಜಾಗ. ಸೌಹಾರ್ದತೆಯ ಪರಂಪರೆಗೆ ಇದಕ್ಕಿಂತ ದೊಡ್ಡ ಉದಾಹರಣೆ ನನಗಂತೂ ಸಿಕ್ಕಿಲ್ಲ. ಈ ಕಾರಣದಿಂದ ನನಗೆ ನನ್ನೂರಿನ ಬಗ್ಗೆ ಹೆಮ್ಮೆ ಎಲ್ಲರಿಗಿಂತಲೂ ಒಂದು ಹಿಡಿ ಹೆಚ್ಚು. ಇಂತಹ ನನ್ನೂರಿನಲ್ಲಿ ನಡೆಯುತ್ತಿರುವ ಈ ಕನ್ನಡ ಹಬ್ಬದಲ್ಲಿ ಈ ಗೌರವ ಪಡೆಯುತ್ತಿರುವುದರಿಂದ ಆಗುತ್ತಿರುವ ಸಂತೋಷವನ್ನು ಪದಗಳಲ್ಲಿ ಹೇಳಲಾರೆ.
ಪ್ರಿಯ ಬಂಧುಗಳೇ,
ಇದೊಂದು ಸಾಹಿತ್ಯ ಸಮ್ಮೇಳನ ಎಂಬುದಕ್ಕಿಂತ ಕನ್ನಡಿಗರ ಸ್ವಾಭಿಮಾನದ ಸಮಾವೇಶವಾಗಿ ಇತಿಹಾಸದಲ್ಲಿ ದಾಖಲಾಗಲಿದೆ.ಇದು ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನವಾಗಿದ್ದರೂ, ಬುದ್ದಿಗೇಡಿಗಳಿಂದಾಗಿ ಅಖಿಲ ಕರ್ನಾಟಕ ಮಟ್ಟದಲ್ಲಿ ಸುದ್ದಿ ಮಾಡಿ ಪ್ರಚಾರ ಪಡೆದಿದೆ. ಎಷ್ಟೇ ಅಡೆ-ತಡೆಗಳು ಎದುರಾದರೂ ಇದರ ಯಶಸ್ಸಿಗಾಗಿ ಹಲವಾರು ಕನ್ನಡ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ದ್ದಾರೆ. ಅನೇಕರು ತಮ್ಮ ಕೈಯಲ್ಲಾದಷ್ಟು ಆರ್ಥಿಕ ನೆರವು ನೀಡಿದ್ದಾರೆ. ಆ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಎಸೆದ ಸವಾಲನ್ನು ದಿಟ್ಟವಾಗಿ ಎದುರಿಸಿದ್ದಾರೆ. ಇದು ನನ್ನಲ್ಲಿ ಹೋರಾಟದ ಕಾವನ್ನು ಇನ್ನಷ್ಟು ಹೆಚ್ಚಿಸಿದೆ ಎಂದಷ್ಟೇ ನಾನು ಈ ಸಂದರ್ಭದಲ್ಲಿ ಹೇಳಬಲ್ಲೆ.
ನನ್ನನ್ನು ಈ ಸಮ್ಮೇಳನದ ಅಧ್ಯ ಕ್ಷ ರಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯ ಕ್ಷ ರು ಮಾಹಿತಿ ನೀಡಿದ ಕೂಡಲೇ ನನ್ನ ನೆನಪಿಗೆ ಬಂದವರು, ಪರಂಪರೆಯ ಕಥೆಗಳನ್ನು ಮತ್ತು ಜೀವನಾನುಭವದ ಸಂಗತಿಗಳನ್ನು ಧಾರೆ ಎರೆದು ಪೋಷಿಸಿದ ನನ್ನ ಅಪ್ಪ-ಅಮ್ಮ, ಆನಂತರ ನನ್ನನ್ನು ಬೆಳೆಸಿದ ಪ್ರಗತಿಪರ ಚಳವಳಿ ಗಳು, ಸಾರ್ವಜನಿಕ ಬದುಕಿನ ಬವಣೆಗಳ ಮುಖಾಮುಖಿಗೆ ಬೆನ್ನೆಲುಬಾಗಿ ನಿಂತ ಕುಟುಂಬವರ್ಗ ಮತ್ತು ನನ್ನ ಸಂಗಾತಿಗಳು, ಸ್ನೇಹಿತರು.
ಈ ಎಲ್ಲರಿಗೂ ನನ್ನ ನಮನಗಳು ಸಲ್ಲುತ್ತವೆ. ಈ ಆತಂಕದ ಸಂದರ್ಭದಲ್ಲಿಯೂ ದೂರ ದೂರದ ಊರಿನಿಂದ ಬಂದಿರುವ ಮತ್ತು ಇಲ್ಲಿಯ ಕನ್ನಡಾಭಿಮಾನಿಗಳಿಗೆ ನಾನು ಋಣಿ.
ಏನನ್ನಾದರೂ ಬರೆದು ಓದಬೇಕೆಂದರೆ ನನಗೆ ಎಲ್ಲಿಲ್ಲದ ಹಿಂಜರಿಕೆ. ನಾನೆಂದೂ ಜನರೆದುರು ನಿಂತನಿಲುವಿನಲ್ಲಿ ಆಲೋಚಿಸುತ್ತಲೇ ಹೊಳೆದಂತೆ ಮಾತಾಡುವವನು. ಇಲ್ಲಿಯೂ ಹಾಗೆ ಮಾಡಬೇಕೆಂಬ ಆಸೆ ನನ್ನದಾಗಿತ್ತು. ಆದರೆ ಸತ್ಸಂಪ್ರದಾಯವನ್ನು ಮೀರಬಾರದೆಂಬ ಕಾರಣಕ್ಕೆ ಭಾಷಣವನ್ನು ಓದುತ್ತಿದ್ದೇನೆ.
ಭಾಷಣ ಮಾಡುವುದಕ್ಕಿಂತ ಭಾಷಣ ಬರೆಯುವುದು ಹೆಚ್ಚು ತ್ರಾಸದ ಕೆಲಸವೆಂಬುದು ನನಗೆ ಕಳೆದ ಒಂದು ತಿಂಗಳಿನಲ್ಲಿ ಅರಿವಾಗಿದೆ. ನಾನು ಈ ಭಾಷಣವನ್ನು ನನ್ನೊಳಗೇ ಅಂದುಕೊಳ್ಳುತ್ತ, ತಿದ್ದಿಕೊಳ್ಳುತ್ತ, ಆಡಬೇಕೆಂದು ಅನ್ನಿಸುವ ಈ ನನ್ನ ಮಾತುಗಳು ಅವಶ್ಯಕವೇ? ಈಗಿನ ವಿದ್ಯಮಾನದಲ್ಲಿ ಎಷ್ಟು ಪ್ರಸ್ತುತವಾದೀತು ಎಂದು ಆಲೋಚಿಸುತ್ತ, ವಿಶ್ಲೇಷಿಸುತ್ತ ಕಾಲಕಳೆದಿದ್ದೇನೆ. ಅಧ್ಯ ಕ್ಷ ನಾಗಿ ಆಯ್ಕೆಯಾದದ್ದನ್ನು ತಿಳಿದ ದಿನದಿಂದಲೂ ಈಗ ಇಲ್ಲಿ ನಿಮ್ಮೆದುರು ಮಾತಾಡಲು ನಿಂತಿರುವ ಕ್ಷ ಣವನ್ನು ಆತಂಕದಿಂದ ಊಹಿಸಿಕೊಳ್ಳುತ್ತ ಕಳೆದಿ ದ್ದೇನೆ. ಈ ಹೊತ್ತಲ್ಲಿ ನಿಮ್ಮ ಮುಂದೆ ಆಡಲೇ ಬೇಕಾಗಿರುವ ಹಲವು ಮಾತುಗಳು ನನ್ನ ಮುಂದಿವೆ. ಅವುಗಳಲ್ಲಿ ಕೆಲವು ವಿಷಯಗಳನ್ನು ಮಾತ್ರ ನಾನಿಲ್ಲಿ ಪ್ರಸ್ತಾಪಿಸುತ್ತೇನೆ.
ಆತ್ಮೀಯ ಕನ್ನಡ ಪ್ರೇಮಿಗಳೇ,
ಸಾಹಿತ್ಯ ಸಮ್ಮೇಳನಗಳು ಕನ್ನಡ ನುಡಿ ಜಾತ್ರೆಗಳಾಗಿವೆಯೇ ಹೊರತು, ಕನ್ನಡಿಗರ ಧ್ವನಿಯಾದ ಉದಾಹರಣೆಗಳು ಬಹಳ ಕಡಿಮೆ. ಇನ್ನು ಸಮ್ಮೆಳನಾಧ್ಯಕ್ಷರ ಭಾಷಣದಲ್ಲಿನ ವಿಷಯಗಳನ್ನು ಮುಂದಿಟ್ಟುಕೊಂಡು ಗಂಭೀರ ಚರ್ಚೆ ನಡೆಸಿದ್ದಿಲ್ಲ. ಅಧ್ಯಕ್ಷೀಯ ಭಾಷಣದಲ್ಲಿನ ಬೇಡಿಕೆ, ಅಹವಾಲುಗಳಾಗಲೀ, ಅಥವಾ ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ತೀರ್ಮಾನಿಸಿದ ನಿರ್ಣಯಗಳಾಗಲೀ, ಜಾರಿಗೆ ಬಂದಿದ್ದು, ನಾಡು-ನುಡಿಯ ಸಮಸ್ಯೆಗಳು ಬಗೆಹರಿದಿದ್ದು ಅಪರೂಪ.
ನನ್ನ ಹೋರಾಟದ ಅನುಭವದಲ್ಲಿ ಹೇಳುವುದಾದರೆ ನಾನು ತುಮಕೂರಿನಲ್ಲಿ ಮತ್ತು ಶಿವಮೊಗ್ಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ, ರಾಜ್ಯ ಮತ್ತು ಮಲೆನಾಡಿನ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ಇವುಗಳನ್ನು ಸಮ್ಮೇಳನದ ನಿರ್ಣಯಗಳಲ್ಲಿ ಸೇರಿಸಬೇಕೆಂದು ಒತ್ತಾಯ ಮಾಡಿ, ಪ್ರತಿಭಟನೆ ಕೂಡ ಮಾಡಿ, ಅದರಲ್ಲಿ ಯಶಸ್ವಿಯೂ ಆಗಿದ್ದೇನೆ. ಆದರೆ ಮುಖ್ಯಮಂತ್ರಿಗಳೇ ಭರವಸೆ ನೀಡಿದ್ದರೂ ಈ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿಲ್ಲವೆಂಬ ಬಹುದೊಡ್ಡ ವಿಷಾದ ನನ್ನಲ್ಲಿದೆ.
ಅಂದ ಮಾತ್ರಕ್ಕೆ ಈ ರೀತಿಯ ಸಮ್ಮೇಳನದಲ್ಲಿ ನ್ಯಾಯಯುತ ಬೇಡಿಕೆಗಳನ್ನು, ಸಮಾಜದ ಸಂಕಟಗಳನ್ನು ಪ್ರಸ್ತಾಪಿಸುವುದು ವ್ಯರ್ಥವೆಂಬುದು ನನ್ನ ಅಭಿಪ್ರಾಯವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮ್ಮ ಅಹವಾಲನ್ನು, ಬೇಡಿಕೆಗಳನ್ನು ಸಲ್ಲಿಸುವುದು ಸಂವಿಧಾನಾತ್ಮಕ ಹಕ್ಕು. ಜನ ಜಾಗೃತರಾದರೆ ಸರ್ಕಾರಗಳು ಇವುಗಳಿಗೆ ಬೆಲೆ ನೀಡಲೇಬೇಕಾಗುತ್ತದೆ. ಆ ದೃಷ್ಟಿಯಿಂದ ಇಂದು ನಾನಿಲ್ಲಿ ಪ್ರಸ್ತಾಪಿಸುವ ವಿಷಯಗಳು ನಾವೆಲ್ಲರೂ ಸೇರಿ ನೀಡುತ್ತಿರುವ ಆದೇಶವೆಂದೂ, ಇದು ನನ್ನ ಜವಾಬ್ದಾರಿಯೂ ಹೌದೆಂದು ತಿಳಿದು ಈ ಭಾಷಣವನ್ನು ಮುಂದುವರೆಸುತ್ತೇನೆ.
ಈ ಸಾಹಿತ್ಯ ಸಮ್ಮೇಳನದಲ್ಲಿ ನಾನು ವಿನಮ್ರವಾಗಿ ಒಪ್ಪಿಕೊಳ್ಳುವುದೆಂದರೆ ನಾನು ಮೂಲತಃ ಸಾಹಿತ್ಯವನ್ನು ಶಾಸ್ತ್ರೀಯವಾಗಿ ಕಲಿತವನಲ್ಲ. ತಮಗೆಲ್ಲರಿಗೂ ಗೊತ್ತಿರುವಂತೆ ನಾನು ಪರಿಸರ ಮತ್ತು ಸಾಮಾಜಿಕ ಹೋರಾಟದ ಕಾರ್ಯಕರ್ತ. ಕಳೆದ ಭರ್ತಿ ನಾಲ್ಕು ದಶಕಗಳಿಂದ ಒಂದಿಂದು ಹೋರಾಟಗಳಲ್ಲಿ ತೊಡಗಿಸಿಕೊಂಡು ಬಂದಿದ್ದೇನೆ. ಹಾಗೆ ಹೇಳುವುದಾದರೆ ಯಾರಾದರೂ ನನ್ನ ಇತ್ತೀಚಿನ ಕೃತಿಗಳನ್ನು ಓದಿ ನನ್ನನ್ನು ಸಾಹಿತಿ ಎಂದು ಗುರುತಿಸುವುದಕ್ಕಿಂತ ಹೋರಾಟಗಾರನೆಂದರೆ ನನಗೆ ಹೆಚ್ಚು ಖುಷಿಯಾಗುತ್ತದೆ.
ವಾಸ್ತವವೆಂದರೆ ರಾಜ್ಯದಾದ್ಯಂತ ನಡೆದ ಹೋರಾಟಗಳಲ್ಲಿ ಭಾಗವಹಿಸಿದ್ದರಿಂದ ನನಗೆ ಸಿಕ್ಕ ಸ್ನೇಹಿತರು, ಅಭಿಮಾನಿಗಳ ಬೆಂಬಲವೆಷ್ಟೋ ಅಷ್ಟೇ ನನ್ನ ಕೃತಿ ‘ಮಂಗನಬ್ಯಾಟೆ’ಗೂ ವಿಸ್ತೃತವಾದ ಸ್ಪಂದನೆ ಸಿಕ್ಕಿದೆ. ಇದರ ಅರಿವೂ ನನಗಿದೆ. ಹೋರಾಟ ಸಾಹಿತ್ಯದಿಂದ ಹೊರತಲ್ಲ. ಸಾಹಿತ್ಯವೂ ಹೋರಾಟದಿಂದ ಹೊರತಲ್ಲ. ಅವು ಒಂದಕ್ಕೊಂದು ಪೂರಕವೇ. ಸೈದ್ಧಾಂತಿಕ ಪ್ರೇರಣೆಯಿಲ್ಲದ ಹೋರಾಟಗಳಾಗಲೀ; ಸಾಮಾಜಿಕ ಬದ್ಧತೆಯಿಲ್ಲದ ಸಾಹಿತ್ಯವಾಗಲೀ- ಎರಡೂ ಜೊಳ್ಳು. ಜನಸಮಾನ್ಯರ ಸಂಕಟಗಳನ್ನು ಪರಿಹರಿಸುವಲ್ಲಿ ಹೋರಾಟಗಳಿಗೆ ಎಷ್ಟು ಜವಾಬ್ದಾರಿ ಇರುತ್ತದೋ ಅಷ್ಟೇ ಜವಾಬ್ದಾರಿ ಸಾಹಿತ್ಯಕ್ಕೂ ಇರುತ್ತದೆ.
ಮೌಲ್ಯಯುತ ಸಾಹಿತ್ಯ ಸಾಮಾಜಿಕ ಬದ್ಧತೆಯಿಂದ ಕೂಡಿರಬೇಕಾಗುತ್ತದೆ. ಈ ಬದ್ಧತೆಯ ವಿಷಯ ಬಂದಾಗ ನನ್ನ ಆತ್ಮೀಯರಾದ, ಖ್ಯಾತ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಅವರ ಮಾತು ನೆನಪಿಗೆ ಬರುತ್ತದೆ, ಅವರು ‘ಸಾಹಿತ್ಯ ಮತ್ತು ಬದ್ಧತೆ’ ಲೇಖನದಲ್ಲಿ ಹೀಗೆ ಬರೆಯುತ್ತಾರೆ;
‘ಸಾಮಾಜಿಕ ಕಳಕಳಿಯ ಹಿನ್ನೆಲೆಯುಳ್ಳ ಬದ್ಧತೆ ಈ ಕಾಲದ ಅಗತ್ಯ. ಚರಿತ್ರೆ ಇಚ್ಛಿಸುವ ಸ್ಥಿತಿಯೆಂದರೆ ಸರಿಯಾದೀತು’. ಸಾಹಿತ್ಯ ಒಣ ಹರಟೆ, ಪುಂಡರ ಗೋಷ್ಠಿಯಲ್ಲ. ಅದು ಪ್ರತಿಪಾದಿಸುವುದೇನೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ಕಾಣುವುದು, ಮನಸ್ಸನ್ನು ಅರಳಿಸುವುದು. ಅವನಲ್ಲಿ ಹುದುಗಿರುವ ದುರಾಸೆ, ಕ್ರೌರ್ಯ, ಅಸೂಯೆ, ಆಕ್ರಮಣ ಪ್ರವೃತ್ತಿಗಳನ್ನು ತೊಡೆದು ಉದಾತ್ತತೆಯಿಂದ, ಸುಂದರ ಸುಖಮಯ ನೆಮ್ಮದಿಯನ್ನು ಅಭಿವ್ಯಕ್ತಿಸುವುದು. ಹಾಗೆ ನೋಡಿದರೆ ಈ ಮನುಷ್ಯ ಸಮಾಜವನ್ನು ಆಳುತ್ತಿರುವುದು ಸಾಹಿತ್ಯದ ಮೂಲಕವೇ. ಗೀತೆ, ಬೈಬಲ, ಖುರಾನ್ ನಂತಹ ಮಹತ್ ಧರ್ಮಗ್ರಂಥಗಳು ಕೋಟಿ ಕೋಟಿ ಜನರನ್ನು ನಿಯಂತ್ರಿಸುತ್ತಿವೆ.
ಒಂದು ಕಾಲದಲ್ಲಿ ಪ್ರಪಂಚದ ಮೂರನೇ ಎರಡರಷ್ಟು ಜನರನ್ನು ಮಾನವತಾವಾದಿ ಕಾರ್ಲ್ ಮಾರ್ಕ್ಸ್ ಸಮಾಜವಾದ ಸಿದ್ಧಾಂತದ ಕಮ್ಯುನಿಸಂ (ಪ್ರಣಾಳಿಕೆ) ನಿಯಂತ್ರಿಸುತ್ತಿತ್ತು. ಧರ್ಮ- ಸಿದ್ಧಾಂತಗಳು ತಮ್ಮ ತಮ್ಮ ಅನುಯಾಯಿಗಳನ್ನಷ್ಟೇ ನಿಯಂತ್ರಿಸಿದರೆ ಸಾಹಿತ್ಯ ಸಮಾಜದ ಎಲ್ಲರೂ ಮಾನವಂತರಾಗಿ ಬದುಕಲು ಸಹಾಯ ಮಾಡುತ್ತದೆ.
ಹುಟ್ಟಿದವರಿಗೆ ಸಾವಿದೆ; ಆದರೆ ಬರೆದ ಸಾಹಿತ್ಯಕ್ಕೆಂದೂ ಅಳಿವಿಲ್ಲ ಎಂಬ ಮಾತಿದೆ. ಈ ಮಾತಿಗೆ ಪುಷ್ಟಿದಾಯಕವಾದ ವಿಚಾರವೆಂದರೆ ಯುಗದಕವಿ, ಜಗದ ಕವಿ, ಮಲೆನಾಡಿನ ಕವಿ, ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ. ಕನ್ನಡ ಜೀವಂತವಿರುವವರೆಗೂ ನಮ್ಮ ಈ ಹೆಮ್ಮೆಯ ಕವಿಯ ಸಾಹಿತ್ಯ ಜೀವಂತವಾಗಿರುತ್ತದೆ.
ಕುವೆಂಪು ಎಂದರೆ ಮಲೆನಾಡು. ಅವರು ಈ ನಮ್ಮ ಮಲೆನಾಡಿನ ಪರಿಸರವನ್ನು ರಮ್ಯವಾಗಿ ವರ್ಣಿಸಿ ವಿಜೃಂಭಿಸಿದರು. ‘ಹಕ್ಕಿ ಬಳಗ ಸುತ್ತ ಕೂಡಿ ಬೈಗಂ ಬೆಳಗು ಹಾಡಿ ಹಾಡಿ ಮಲೆನಾಡ ಸಗ್ಗ ಮಾಡಿ’ ಎನ್ನುತ್ತಾ ಅವರು ಬರೆದ ಕವಿತೆ-ಕಾದಂಬರಿಗಳು ನನ್ನನ್ನು, ನನ್ನಂತಹ ಅನೇಕರನ್ನು ಪರಿಸರವಾದಿಯಾಗಿ ರೂಪಿಸಿದೆ ಎಂದರೆ ಸಾಹಿತ್ಯದ ಶಕ್ತಿ ಅಪೂರ್ವವಾದದ್ದು ಎಂದೆನಿಸುವುದಿಲ್ಲವೇ?
ನಾನು ಯಾವುದೇ ಸಾಹಿತ್ಯದ ಕೃತಿಯನ್ನಾದರೂ ವ್ಯಸನಕ್ಕಾಗಿ ಮಾತ್ರ ಓದುವುದಿಲ್ಲ, ಸಂಶೋಧನಾ ದೃಷ್ಟಿಯಿಂದಲೇ ಅಭ್ಯಾಸ ಮಾಡುತ್ತೇನೆ. ಆದ್ದರಿಂದ ನಾನು ಎಂದೆಂದೂ ಸಾಹಿತ್ಯದ ವಿದ್ಯಾರ್ಥಿಯೇ. ನನ್ನ ಹಾಗೂ ನನ್ನಂತಹ ಕೋಟ್ಯಂತರ ಜನರ ಅರಿವನ್ನು ಹೆಚ್ಚಿಸಿದ್ದು, ಹೆಚ್ಚಿಸುತ್ತಿರುವುದು ನಮ್ಮ ಭಾಷೆ ಕನ್ನಡ. ಕನ್ನಡ ಭಾಷೆಯೇ ನಮ್ಮ ಆಸ್ತಿ. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆಯ ಪರಂಪರೆಯೇ ಸೌಹಾದತೆ. ಹತ್ತನೇ ಶತಮಾನದಲ್ಲಿ ಆದಿಕವಿ ಪಂಪ ‘ಮಾನವ ಜಾತಿ ತಾನೊಂದೇ ವಲಂ’ ಎಂದು ಮಾನವತೆಯನ್ನು ಸಾರಿದ. ಸರ್ವಜೀವಿಗಳ ಆತ್ಮದಲ್ಲೂ ಪರಮಾತ್ಮನಿದ್ದಾನೆಂದು ಸಾರಿದ ಶಂಕರಾಚಾರ್ಯರು, ಚಾಂಡಾಲನಲ್ಲಿ ಈಶ್ವರನನ್ನು ಕಂಡರು.
ಕನ್ನಡ ನೆಲದ, ವಿಶ್ವಮಾನ್ಯ ಧಾರ್ಮಿಕ ಹೋರಾಟಗಾರ ಬಸವಣ್ಣ ಮನುಷ್ಯ ಮನುಷ್ಯರಲ್ಲಿ ಬೇಧವು ಸಲ್ಲದು ಎನ್ನುವುದನ್ನು ಸರಳವಾಗಿ ಹೇಳಿದ್ದು ಹೀಗೆ;
ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ. ಇಂತಹ ಭವ್ಯ ಪರಂಪರೆ ಕನ್ನಡಕ್ಕಿದೆ.
ಕುವೆಂಪು ಅವರ ವಿಶ್ವದೃಷ್ಠಿ, ವಿಶ್ವಮಾನವ ಸಂದೇಶದ ‘ಅನಿಕೇತನ’ ಕವನ ನಮ್ಮೆಲ್ಲರ ಮಂತ್ರವಾಗಬೇಕು.
ನೂರು ಮತದ ಹೊಟ್ಟ ತೂರಿ,ಎಲ್ಲ ತತ್ವವೆಲ್ಲ ಮೀರಿ,ನಿರ್ದಿಗಂತವಾಗಿ ಏರಿ,ಓ ನನ್ನ ಚೇತನ, ಆಗು ನೀ ಅನಿಕೇತನ
ಈ ಕವನದ ಸಾಲುಗಳು ನಮಗೆ ಬೇಕಾದುದು ಆ ಮತ, ಈ ಮತ ಅಲ್ಲ, ಮನುಜಮತ. ಆ ಪಥ ಈ ಪಥ ಅಲ್ಲ, ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ. ಸರ್ವದ ಸರ್ವಸ್ತರ ಉದಯ ಎಂದು ಸಾರುತ್ತವೆ. ಇದು ಎಂದೆಂದಿಗೂ ಸರ್ವಕಾಲಿಕ ಪ್ರೇರಣೆಯಾಗಿದೆ.
“ಕುವೆಂಪು ಅವರು ವಿಶ್ವಮಾನವನಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವ ಪ್ರಣಾಳಿಕೆಯನ್ನು ಈ ಕವನದಲ್ಲಿ ಕೊಟ್ಟಿ ದ್ದಾರೆ” ಎಂದು ನಮ್ಮ ತಾಲೂಕಿನವರೇ ಆದ ಖ್ಯಾತ ಕವಿ ಶೃಂಗೇರಿ ವಿದ್ಯಾರಣ್ಯಪುರ ಪರಮೇಶ್ವರ ಭಟ್ಟ (ಎಸ.ವಿ. ಪರಮೇಶ್ವರ ಭಟ್ಟ) ಹೇಳಿರುವುದನ್ನು ನಾನಿಲ್ಲಿ (ಕೃತಿ: ರಸಋಷಿ ಕುವೆಂಪು) ನೆನಪಿಸುತ್ತೇನೆ. ಅರವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದ ನಮ್ಮ ತಾಲೂಕಿನ ಈ ಹೆಮ್ಮೆಯ ಸಾಹಿತಿಯನ್ನು ಸ್ಮರಿಸುತ್ತೇನೆ.
ಕುವೆಂಪು ಅವರು ‘ಹೋಗುವೆನು ನಾ’ ಕವನದಲ್ಲಿ;
ಅಲ್ಲಿ ಇಂತಿರಬೇಕು, ಇಂತಿರಬಾರದೆಂಬುವುದಿಲ್ಲವೈ;
ಅಲ್ಲಿ ಹೊರೆ ಹೊಣೆಯಿಲ್ಲ; ಶಾಸ್ತ್ರದ ವಿಧಿ ನಿಷೇಧಗಳಿಲ್ಲವೈ;
ಜಾತಿಗೀತಿಯ ವೇದಭೇದದ ಕಟ್ಟುಕಟ್ಟಳೆ ನಿಲ್ಲದೈ:
ಅಲ್ಲಿ ಪ್ರೀತಿಯೆ ನೀತಿ; ಧರ್ಮಕೆ ಬೇರೆ ಭೀತಿಯೆ ಸಲ್ಲದೈ!
ಎಂದು ಮಲೆನಾಡಿನಲ್ಲಿನ ಸಾಮರಸ್ಯವನ್ನು ದಾರ್ಶನಿಕತೆಯಿಂದ ಅಭಿವ್ಯಕ್ತಪಡಿಸಿರುವುದು ನಮ್ಮ ಬದುಕಿಗೆ, ಶತಮಾನದುದ್ದಕ್ಕೂ ದಾರಿದೀಪವಾಗಿದೆ.
ಮಾನವತಾ ಪ್ರೇಮಿಗಳೇ,
ಹತ್ತು ಹನ್ನೊಂದನೇ ಶತಮಾನದಲ್ಲಿ ಐರೋಪ್ಯ ರಾಷ್ಟ್ರವೊಂದರಲ್ಲಿ ಒಂದು ಜಾನಪದ ಕಥೆ ಪ್ರಚಲಿತದಲ್ಲಿ ಇತ್ತಂತೆ. ಆ ಕತೆಯಲ್ಲಿ ಬರುವ ಗಿಳಿಯೊಂದು ತಾನು ನೋಡಿದ ಭೂಸ್ವರ್ಗದ ಬಗ್ಗೆ ವರ್ಣಿಸುತ್ತದೆ. ವರ್ಣನೆ ಹೇಗಿತ್ತೆಂದರೆ; ದೇವಲೋಕದಲ್ಲಿರುವ ಸ್ವರ್ಗದಂತಹ ಪ್ರದೇಶವೊಂದು ಭೂಮಿಯಲ್ಲಿ ಒಂದು ಕಡೆ ಇದೆ. ಆ ಭೂಮಿಯ ಸ್ವರ್ಗದಲ್ಲಿ ಹಗಲೆ ಸೂರ್ಯ ಪ್ರಜ್ವಲಿಸುತ್ತಾ ದಿನ ಪೂರ್ತಿ ಬೆಳಕು ಹರಿಸುತ್ತಿರುತ್ತಾನೆ.
ಕಾಲಕಾಲಕ್ಕೆ ಮಳೆ, ಸಮೃದ್ಧವಾದ ಬೆಳೆ, ಬೆಚ್ಚಗಿನ ವಾತಾವರಣ ವಿಶಾಲವಾದ ಹಸಿರು, ಹುಲ್ಲಿನ ಬಯಲು, ಆಕಾಶದೆತ್ತರದ ಮರಗಳು, ಹಸಿರು ಉಕ್ಕಿಸುವ ನಿತ್ಯ ಹರಿದ್ವರ್ಣದ ಕಾಡು, ಆಕಾಶಕ್ಕೂ ಭೂಮಿ ಒಂದು ಮಾಡುವ ಪರ್ವತಗಳು, ಸುಂದರ ಗಿರಿ-ವನಗಳು ಪರ್ವತಗಳ ನೆತ್ತಿಯಿಂದ ನಿರಂತರ ಹರಿಯುವ ಜಲಪಾತ, ಬೆಳ್ಳಿಯ ಬೆಟ್ಟ, ಹಾಲಿನ ಹೊಳೆ, ಜೇನಿನ ಮಳೆ, ಅಲ್ಲಿ ಹಸಿವಿಲ್ಲ, ಭಯವಿಲ್ಲ, ಸಿಹಿನೀರಿನ ಬುಗ್ಗೆಗಳು, ಮರಗಳೆಲ್ಲವೂ ಶ್ರೀಗಂಧ, ಸದಾ ಹೂ-ಹಣ್ಣುಗಳಿದ್ದ ಮೇಳೈಸುವ ಗಿಡ-ಗುಂಟೆಗಳು,ಸಸ್ಯಗಳೆಲ್ಲವೂ ಔಷಧಿಯುಕ್ತ.
ಪ್ರಾಣಿ-ಪಕ್ಷಿ ಮನುಷ್ಯರೆಲ್ಲರ ಸೌಹಾರ್ದ ಒಡನಾಟ, ಶತೃಗಳ ಭಯವಿಲ್ಲದ ಸ್ವಚ್ಛಂದ ಓಡಾಟ, ತೂಗುವ ತೆನೆಗಳು, ಹೂಬಿರಿದ ಮೊಗ್ಗುಗಳು,ಬಣ್ಣ ಬಣ್ಣದ ಜಲಚರಗಳು, ಹೀಗೆ ಎಲ್ಲವೂ ಸಮೃದ್ಧವಾಗಿರುವ ಸುಖ-ಶಾಂತಿಯ ನೆಮ್ಮದಿಯ ಪ್ರದೇಶ ಏಳು ಸಾಗರವ ದಾಟಿ ಹೋದರೆ ಭೂಮಿಯ ಈ ಸ್ವರ್ಗವನ್ನು ತಲುಪಬಹುದು. ಈ ಕತೆ ವರ್ಣನೆಯೊಂದಿಗೆ ಹೀಗೆ ಸಾಗುತ್ತದೆ. ಇದು ಕತೆ, ಆದರೆ ಇದನ್ನು ಓದಿದಾಗಲೆ ನನಗೆ ನಮ್ಮ ಮಲೆನಾಡನ್ನೇ ಈ ಕತೆಯಲ್ಲಿ ಕಟ್ಟಿಕೊಡಲಾಗಿತ್ತೇನೋ ಅನಿಸುತ್ತದೆ.
ಇಂತಹ ಮಲೆನಾಡಿಗೆ ಸಾಂಬಾರ ಪದಾರ್ಥಗಳ ಸುವಾಸನೆ ಹುಡುಕಿಕೊಂಡು 15ನೇ ಶತಮಾನದಲ್ಲಿ ಪಾಶ್ಚ್ಯಾತ್ಯರು ಬಂದು ಇನ್ನೂರು ವರ್ಷ ನಮ್ಮನಾಳಿದ್ದು ಎಲ್ಲರಿಗೂ ಗೊತ್ತಿದೆ. ಬ್ರಿಟೀಷರ ಆಳ್ವಿಕೆಯಲ್ಲಿ ಮಲೆನಾಡಿನ ಕಾಡೆಲ್ಲಾ ‘ಫಾರೆಸ್ಟ್’ ಆಯಿತು. ಅವರು ಕಾಡಿನ ಲೂಟಿಗಾಗಿ ರೈಲು, ಲಾರಿಗಳನ್ನು ಓಡಿಸಿದರು. ದಿವಂಗತ ತ್ಯಾನಂದೂರು ಪುಟ್ಟಣ್ಣಯ್ಯ ‘ನಾ ಕಂಡ ಮಲೆನಾಡು’ ಕೃತಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಕಷಾಯ ಸಂಸ್ಕೃತಿಯ ಮಲೆನಾಡಿಗೆ ‘ಕಾಫಿ ಸಂಸ್ಕೃತಿ’ ತಂದ ಬ್ರಿಟೀಷರು ಕಾಫಿ-ಟೀ ಎಸ್ಟೇಟ್ಗಳಿಗಾಗಿ ಗುಡ್ಡ ಗುಡ್ಡಗಳನ್ನೇ ಬೋಳಿಸಿದರು. ಒಂದು ಅಂದಾಜಿನ ಪ್ರಕಾರ ಈ ಭೂಮಿಯಲ್ಲಿ ಕಾಡು ಸೃಷ್ಟಿಯಾದನಂತರ ಬ್ರಿಟೀಷರು ಭಾರತಕ್ಕೆ ಬರುವವರೆಗೆ ಎಷ್ಟು ಕಾಡು ನಾಶವಾಗಿತ್ತೋ ಅಷ್ಟು ಕಾಡನ್ನು ಬ್ರಿಟೀಷರು ಭಾರತಕ್ಕೆ ಬಂದ ನಂತರ ಎರಡು ಶತಮಾನಗಳಲ್ಲಿ ನಾಶ ಮಾಡಿದ್ದರು.
ತಮಗೆ ಬೇಕಾದಂತೆ ಕಾಡನ್ನು ನಾಶ ಮಾಡಿದ ಬ್ರಿಟಿಷರು ತಮ್ಮ ‘ಶಿಕಾರಿ’ ಹುಚ್ಚಿಗಾಗಿ ಕಾಡನ್ನು ‘ಮೀಸಲು ಅರಣ್ಯ’ಗಳೆಂದು ಘೋಷಿಸಿದರು. ‘ಕಾನ್ ದೈವ’ (ಕಾಡನ್ನೇ ದೇವರೆಂದುಕೊಂಡು) ಎಂದು ಕಾಡನ್ನು ಪೂಜಿಸುತ್ತಿದ್ದವರ ನಂಬಿಕೆಗಳನ್ನು ಬುಡಮೇಲು ಮಾಡಿದರು. ಬ್ರಿಟೀಷರು ಹೇಳಿದರೂ ಕಾಡು ಕಡಿಯದ ‘ಗೌಡ್ಲು’ಗಳು, ಹಾಡ್ಯ, ದರಖಾಸ್ತು ಎಂದು ಹೇಳಿಕೊಂಡು ಕಾಡು ಬೆಳೆಸಿಕೊಂಡೇ ಬಂದ ನಮ್ಮ ರೈತ ವರ್ಗ ಈ ನಮ್ಮ ಕಾಡಿನ ನಿಜವಾದ ವಾರಸುದಾರರು.
ಬ್ರಿಟೀಷರು ಕಾಡನ್ನು ಎಷ್ಟೇ ದೋಚಿದ್ದರೂ ಕಾಡಿನ ಜನರನ್ನು ಮಾತ್ರ ಒಕ್ಕಲೆಬ್ಬಿಸಿರಲಿಲ್ಲ! ಆದರೆ ಈಗ ಪರಿಸರದ ಹೆಸರಿನಲ್ಲಿ ಅರಣ್ಯದೊಂದಿಗೆ ಪರಿಸರ ಸ್ನೇಹಿಯಾಗಿ ಬದುಕುವ ಅರಣ್ಯ ನಿವಾಸಿಗಳನ್ನೆ ಹೊರ ಹಾಕುವ ಪರಿಸರ ಸಾಮ್ರಾಜ್ಯಶಾಹಿ ದಾಳಿ ನಡೆಯುತ್ತಿದೆ. ಇದರ ವಿರುದ್ಧ ಕಳೆದ ಎರಡು ದಶಕಗಳಿಂದ ಪರಿಸರ ಹೋರಾಟಗಾರನಾಗಿ ದನಿ ಎತ್ತಿ ದ್ದೇನೆ. ಈ ನಮ್ಮ ಮಲೆನಾಡು, ಇಲ್ಲಿಯ ಪರಿಸರ ನಮ್ಮದು, ಇದನ್ನು ನಮ್ಮದಾಗಿಯೇ ಉಳಿಸಿಕೊಳ್ಳಬೇಕಾಗಿದೆ. ಇದಕ್ಕಾಗಿ ಹೊರಗಿನವರು ಪರಿಸರ ಸಂರ ಕ್ಷಣೆಯ ಹೆಸರಿನಲ್ಲಿ, ನಮ್ಮ ಕಷ್ಟ-ಸುಖಗಳನ್ನು ಕೇಳದೆ, ವಿಶ್ವಾಸಕ್ಕೆ ತೆಗೆದುಕೊಳ್ಳದೇ ನೀಡಿದ ಕಸ್ತೂರಿ ರಂಗನ್ ವರದಿ, ಗಾಡ್ಗೀಳ್ ವರದಿಯನ್ನು ತಿರಸ್ಕರಿಸಬೇಕೆಂದು ನಾನು ಆಗ್ರಹಿಸುತ್ತೇನೆ.
ನಾನು ಪರಿಸರವಾದಿಯಲ್ಲ, ನನ್ನದು ಜನಪರ ಪರಿಸರವಾದ ಎಂದು ಈ ಹಿಂದಿನಿಂದಲೂ ಸ್ಪಷ್ಟಪಡಿಸುತ್ತಾ ಬಂದಿದ್ದೇನೆ. ಮೊದಲಿನಿಂದಲೂ ಜನರನ್ನು ಹೊರಗಿಟ್ಟು ನೋಡುವ ಪರಿಸರವಾದಕ್ಕೆ ನನ್ನ ವಿರೋಧವಿದೆ. ಪಾಶ್ಚಿಮಾತ್ಯ ಚಿಂತನೆಯ ಈ ಪರಿಸರವಾದದಲ್ಲಿ ಒಂದಿಷ್ಟು ಕಾಡನ್ನು ಉಳಿಸಿ, ಉಳಿದವರೆಲ್ಲಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಕ್ಕೆ ಮಹತ್ವ ನೀಡಲಾಗುತ್ತದೆ. ಈಗ ಈ ರೀತಿಯ ಪರಿಸರವಾದವನ್ನು ಸಮರ್ಥಿಸುವವರು ನಗರಗಳಲ್ಲಿ ಹೆಚ್ಚಾಗಿದ್ದಾರೆ. ಹಾಗೆಯೇ ಈಗ ನಮ್ಮ ನಡುವೆಯೂ ಸೇರಿಕೊಂಡಿದ್ದಾರೆ. ಇವರಿಗೆ ತಾವು ಕಾಡು ಕಾಪಾಡಲಾಗದ ಮುಂದುವರೆದ ದೇಶಗಳು ದಾರಾಳವಾಗಿ ಹಣಕಾಸಿನ ನೆರವು ನೀಡುತ್ತಿವೆ.
ಭೂಮಿಯ ಕಾವು ದಿನದಿಂದ ದಿನಕ್ಕೆ ಹೆಚ್ಚಲು ಈ ಪಾಶ್ಚ್ಯಾತ್ಯ ಕಲ್ಪನೆಯ ಪರಿಸರವಾದವೇ ಕಾರಣ. ಭೂತಾಪಮಾನ ಏರಬಾರದೆಂದರೆ, ಹವಾಮಾನ ವೈಪರಿತ್ಯದ ಪರಿಣಾಮಗಳು ಕಡಿಮೆಯಾಗಬೇಕಾದರೆ, ಈ ಹಿಂದೆ ಭೂಮಿಯ ಮೇಲೆ ಇದ್ದಂತೆ ಎಲ್ಲೆಡೆಯೂ ಹಸಿರು ಹರಡಬೇಕು. ಹಸಿರಿನೊಂದಿಗೆ ಬೆರೆತ ಬದುಕು ಮನುಷ್ಯನದ್ದಾಗಬೇಕು. ಇದನ್ನು ಅರ್ಥಮಾಡಿಕೊಳ್ಳದೇ, ಎಲ್ಲದಕ್ಕೂ ಮಲೆನಾಡಿಗರನ್ನು ದೂರುವವರಿಗೆ ನನ್ನ ಧಿಕ್ಕಾರವಿದೆ.
ಹೀಗೆ ಹೇಳುವಾಗ ನನಗೆ ನೆನಪಾಗುವುದು 2019ರ ನವೆಂಬರ್ 16ರಂದು ನಮ್ಮ ಜಿಲ್ಲೆಯಲ್ಲಿರುವ ವಿದೇಶಿ ಪರಿಸರ ಸಂಘಟನೆಯೊಂದು ಹದಿನಾಲ್ಕು ರಾಜ್ಯಗಳ ಇಪ್ಪತ್ತೊಂದು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಕಾಡಿನೊಳಗೆ ಬದುಕುವ ಜನರನ್ನು ಹೊರಗೆ ಹಾಕುವುದು ಹೇಗೆಂದು ತರಬೇತಿ ನೀಡಿದ ವಿಷಯ. ಈ ಸಂದರ್ಭದಲ್ಲಿ ಜನರ ಬಳಕೆಯಲ್ಲಿದ್ದ ಒಂದು ಲಕ್ಷ 38ಸಾವಿರ ಎಕರೆ ಕಂದಾಯ ಭೂಮಿಯನ್ನು ರಾತ್ರೋ ರಾತ್ರಿ ಅರಣ್ಯ ಇಲಾಖೆಗೆ ಒಪ್ಪಿಸಿದ ಆಗಿನ ಜಿಲ್ಲಾಧಿಕಾರಿಗಳಿಗೆ ಸನ್ಮಾನವನ್ನೂ ಮಾಡಲಾಗಿದೆಯಂತೆ. ಇವರೆ ಮಲೆನಾಡಿನ ಮೂಲ ನಿವಾಸಿಗಳಾದ ನಮ್ಮನ್ನು ಏನೆಂದು ತಿಳಿದುಕೊಂಡಿದ್ದಾರೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ. ಅರಣ್ಯ ಸಂರ ಕ್ಷಣೆಯ ಹೆಸರಿನಲ್ಲಿ ಎಲ್ಲರನ್ನೂ ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆಯೇ?
ನಾವು ಗಿರಿಜನರನ್ನು ಒಕ್ಕಲೆಬ್ಬಿಸುವುದು ಸೇರಿದಂತೆ ಮುಖ್ಯವಾಗಿ ನಾಲ್ಕು ಕಾರಣಗಳನ್ನು ಇಟ್ಟುಕೊಂಡು ಕುದುರೆ ಮುಖ ರಾಷ್ಟ್ರೀಯ ಉದ್ಯಾನಕ್ಕೆ ವಿರೋಧ ವ್ಯಕ್ತಪಡಿಸಿದ್ದೆವು. ಆದರೆ ಕರ್ನಾಟಕದಲ್ಲಿರುವ ಕೇವಲ ಶೇ.36ಸಿಂಗಳಿಕ ಮಂಗಗಳು ‘ಭಗವತಿ’ ಅರಣ್ಯದಲ್ಲಿ ಮಾತ್ರ ಇವೆ ಎಂದು ಸುಳ್ಳು ವರದಿ ಕೊಟ್ಟು ಈ ಯೋಜನೆ ಜಾರಿಗೆ ತರಲಾಯಿತು.
ಇಂದ10-12ಸಾವಿರ ಜನರ ಬದುಕನ್ನು ಕಿತ್ತುಕೊಳ್ಳಲಾಗಿದೆ. ಕುದುರೆ ಮುಖ ರಾಷ್ಟ್ರೀಯ ಉದ್ಯಾನದೊಳಗೆ ಸಿಕ್ಕಿಹಾಕಿಕೊಂಡವರಿಗೆ ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಕಾಡಿನೊಂದಿಗೆ ಬೆರೆತು ಬದುಕುತ್ತಿರುವ ಅವರಿಗೆ ಅಲ್ಲಿಯೇ ಬದುಕಲು ಬಿಡಿ, ಇಲ್ಲವೇ ಆಸುಪಾಸಿನಲ್ಲಿ ಪುನರ್ವಸತಿ ಯೋಜನೆಯಂತೆ ಬದುಕು ರೂಪಿಸಿಕೊಡಿ ಎಂದು ಆಗ್ರಹಿಸುತ್ತೇನೆ.
ನಮ್ಮ ಮಲೆನಾಡಿನಲ್ಲಿ ಕಳೆದ ಒಂದು ಶತಮಾನದಲ್ಲಿ ಎಷ್ಟು ಕಾಡು ನಾಶವಾಗಿದೆ, ಇದು ಮಳೆಯ ಮೇಲೆ ಯಾವ ಪರಿಣಾಮ ಬೀರಿದೆ ಎಂಬುದನ್ನು ನಾನು ದಾಖಲೆ ಸಹಿತ ವಿವರಿಸಬಲ್ಲೆ. ಆದರೆ ಎಲ್ಲದಕ್ಕೂ ಸ್ಥಳಿಯರೇ ಕಾರಣ ಎಂದು ಒಪ್ಪಲಾರೆ. ಈ ರೀತಿಯ ಆರೋಪ ಮಾಡುತ್ತಾ ಇಲ್ಲಿಯ ನಿವಾಸಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸದೇ ಇರುವುದು ಘೋರ ಅನ್ಯಾಯ.
ಈ ವಿದೇಶಿ ಪರಿಸರ ವಾದಿಗಳ ಉಪಟಳ ಎಷ್ಟಿದೆಯೆಂದರೆ ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಅಗತ್ಯ ಇರುವಲ್ಲಿ ಅಗಲ ಮಾಡಲೂ ಬಿಡುತ್ತಿಲ್ಲ. ಈ ಭಾಗದ ಜನತೆ ಆರೋಗ್ಯ, ವ್ಯವಹಾರಗಳಿಗೆ ಮಂಗಳೂರಿಗೆ ಹೋಗಬೇಕಾದರೆ ಇರುವ ಈ ಹೆದ್ದಾರಿಯಲ್ಲಿ ಬರುವ ಕೆರೆಕಟ್ಟೆ ರಸ್ತೆ, ಈ ರಸ್ತೆಯ ಅಕ್ಕಪಕ್ಕ ನಾಲ್ಕು ಅಡಿ ಮಣ್ಣು ಹಾಕಿ ಅಗಲ ಮಾಡಲು ಪರಿಸರ ಕಾಯ್ದೆಯನ್ನು ಬಳಸಿಕೊಂಡು ಅಡ್ಡಿಪಡಿಸುತ್ತಾರೆ ಅಂದರೆ ಮಲೆನಾಡಿಗರ ಪರಿಸ್ಥಿತಿಯ ಬಗ್ಗೆ ಎಲ್ಲರೂ ಯೋಚಿಸಬೇಕು. ವರ್ಷದಲ್ಲಿ ಈ ಹೆದ್ದಾರಿಯ 21 ಕಿ.ಮೀ. ವ್ಯಾಪ್ತಿಯಲ್ಲಿ ಹತ್ತು- ಇಪ್ಪತ್ತು ಅಪಘಾತಗಳಾಗಿ ಅಮಾಯಕರು ಅಸುನೀಗುತ್ತಿ ದ್ದಾರೆ. ಈ ಬಗ್ಗೆ ಜನ ಎಷ್ಟೇ ಹೋರಾಟ ಮಾಡಿದರೂ ಪ್ರಯೋಜನವಿಲ್ಲದಂತಾಗಿದೆ. ಅಗತ್ಯ ರಸ್ತೆ ಅಗಲೀಕರಣಕ್ಕೆ ವಿರೋಧ ವ್ಯಕ್ತಪಡಿಸುವವರು ಶೃಂಗೇರಿ -ಕೊಪ್ಪ ಜನರಿಗೆ 150 ಕಿ.ಮೀ. ಬಳಸಿ ಚಾರ್ಮುಡಿ ಮೂಲಕ ಮಂಗಳೂರಿಗೆ ತೆರಳಲು ಮಾರ್ಗವಿದೆ ಎಂದು ದಾರಿತಪ್ಪಿಸುತ್ತಿರುವುದು ಅಮಾನವೀಯವಲ್ಲವೇ? ಇದನ್ನು ಯಾರಾದರೂ ಪರಿಸರವಾದವೆಂದರೆ ಈ ವಾದ ನನ್ನದಂತೂ ಅಲ್ಲ.
ಪ್ರಪಂಚದ ಪರಿಸರ ಸಮತೋಲನದಲ್ಲಿ ಸದಾ ಹಸಿರಿನ ಮಲೆನಾಡಿಗೆ ವಿಶಿಷ್ಟ ಸ್ಥಾನಮಾನವಿದೆ. ನಮ್ಮ ಮಲೆನಾಡು ಜೀವ ವೈವಿಧ್ಯತೆಯ ಕಣಜ. ಪ್ರಪಂಚದ ಮೆಗಾ ಬಯೋ ಡೈವರ್ಸಿಟಿಗಳಲ್ಲಿ ಒಂದು. ಇಲ್ಲಿನ ಔಷಧಿ ಸಸ್ಯಗಳು ಅಮೂಲ್ಯವಾದವು. ತುಂಗಾ-ಭದ್ರಾ ಸೇರಿದಂತೆ ಪ್ರಮುಖ ನದಿಗಳೆಲ್ಲದರ ಉಗಮ ಸ್ಥಾನ ನಮ್ಮ ಪಶ್ಚಿಮಘಟ್ಟಗಳು.
ಇಂದು ಕರ್ನಾಟಕದ ಬಹುತೇಕ ವಿದ್ಯುತ್ ಮತ್ತು ನೀರಿನ ಅಗತ್ಯ ಪೂರೈಸುತ್ತಿರುವುದು ನಮ್ಮ ಮಲೆನಾಡು. ಅಂದರೆ ಮಲೆನಾಡು ಎಲ್ಲರಿಗೂ, ಎಲ್ಲದಕ್ಕೂ ಬೇಕು. ಮಲೆನಾಡನ್ನು ಅವಲಂಬಿಸದೇ ಇರುವವರು ಯಾರೂ ಇಲ್ಲ. ಆದರೆ ಮಲೆನಾಡಿನ ಪರಿಸರದೊಂದಿಗೆ ಸಹಬಾಳ್ವೆ ನಡೆಸಿದ ನರ ಮನುಷ್ಯನ ಬಗ್ಗೆ ಯಾರಿಗೂ ಜವಾಬ್ದಾರಿ ಇಲ್ಲ.
ಮಲೆನಾಡಿನಲ್ಲಿ ನೆರೆ ಬಾರದಿದ್ದರೆ ಬಯಲು ನಾಡಿನಲ್ಲಿ ಬರ ಬರುತ್ತದೆ. ಮಲೆನಾಡಿನಲ್ಲಿ ನೆರೆ ಎಂದರೆ ಕಣ್ಣೀರ ಧಾರೆ. ಈ ಎಲ್ಲ ಸಂಕಷ್ಟದಲ್ಲಿ ಬದುಕುತ್ತಿರುವ ಜನರನ್ನು ಈಗ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಇನ್ನಷ್ಟು ಕಷ್ಟಕ್ಕೆ ದೂರಲಾಗುತ್ತಿದೆ. ಹುಲಿ, ಹಾವು, ಆನೆ, ಮಂಗ ಇತ್ಯಾದಿ ಪ್ರಾಣಿಗಳ ಹೆಸರಿನಲ್ಲಿ ಹೊಸ ಹೊಸ ಯೋಜನೆಗಳನ್ನು, ಹೊಸ ಹೊಸ ಕಾಯ್ದೆ-ಕಾನೂನುಗಳನ್ನು ಜಾರಿಗೆ ತಂದು ಮಲೆನಾಡನ್ನು ಜನರಹಿತವಾಗಿ ಮಾಡಲಾಗುತ್ತಿದೆ.
ಆತ್ಮೀಯ ಬಂಧುಗಳೇ,
ಅರಣ್ಯ ಯೋಜನೆಗಳಿಂದ ಮಲೆನಾಡಿಗರು ಸಂಕಷ್ಟಕ್ಕೆ ಸಿಲುಕಿರುವ ಹೊತ್ತಿನಲ್ಲಿಯೇ ಇಲ್ಲಿಯ ಕೃಷಿ ಕೂಡ ಬಹುದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಂಕಷ್ಟವನ್ನು ಹೇಗೆ ನಿಭಾಯಿಸಿಕೊಳ್ಳುತ್ತಾರೆ ಎಂಬುದೇ ನನಗಿರುವ ಆತಂಕವಾಗಿದೆ.
ಮಲೆನಾಡೆಂದರೆ ಅಡಿಕೆ- ಅಡಿಕೆಯ ಹೊರತಾಗಿ ಮಲೆನಾಡನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಮಹಾಕವಿ ಕಾಳಿದಾಸನ ‘ರಘುವಂಶ’ ಕಾವ್ಯದಲ್ಲಿಯೂ ಮಲೆನಾಡಿನ ಅಡಿಕೆ ತೋಟದ ವರ್ಣನೆಗಳಿವೆ. ಆ ಕಾಲದಿಂದಲೂ ಇಲ್ಲಿ ಅಡಿಕೆ ಬೆಳೆಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಂದು ಮಲೆನಾಡಿನಲ್ಲಿ ಹಣ ಓಡಾಡುತ್ತಿದ್ದರೆ ಅದು ಅಡಿಕೆಯದು. ನಮ್ಮಲ್ಲಿ ಬೆಳೆಯುವ ಅಡಿಕೆಯನ್ನು ಈ ಹಿಂದೆ ‘ದೇಶಾವರಿ ಅಡಿಕೆ’ ಎಂದು ಹೊರಗಿನವರು ಗುರುತಿಸುತ್ತಿದ್ದರು.
ಅದರ ಮಾರುಕಟ್ಟೆ ಉತ್ತರ ಭಾರತದಿಂದ ಹಿಡಿದು ಪಾಕಿಸ್ತಾನ, ಅಫ್ಘಾನಿಸ್ತಾನದವರೆಗೂ ಹರಡಿತ್ತು. ತಮಿಳುನಾಡು, ಆಂಧ್ರಗಳಲ್ಲಿ ಮಲೆನಾಡಿನ ಅಡಿಕೆಗೆ ಬಂಗಾರಕ್ಕಿಂತಲೂ ಹೆಚ್ಚಿನ ಮರ್ಯಾದೆ ಇದೆ. ಯಾವುದೇ ಪರಸ್ಪರ ಮಾತುಕತೆಯಲ್ಲಿ, ಗಂಡು ಹೆಣ್ಣಿನ ಸಂಬಂಧ ಮಾಡುವಾಗ ಒಂದು ಬಟ್ಟಲು ‘ದೇಶಾವರಿ ಅಡಿಕೆ’ಯನ್ನು ವಿನಿಮಯ ಮಾಡಿಕೊಳ್ಳುವ ಪದ್ಧತಿಯಿದೆ. ಒಪ್ಪಂದ ಮುರಿದರೆ ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬಾರದು’ ಎಂಬ ಗಾದೆ ಅಲ್ಲಿಯದು.
ಇಂತಹ ಅಡಿಕೆಗೆ ಮಾರಕ ರೋಗವೊಂದು ತಗುಲಿ ಸುಮಾರು ನೂರು ವರ್ಷಗಳಾಗುತ್ತಿವೆ. ಇನ್ನು ಕೆಲವೇ ವರ್ಷದಲ್ಲಿ ಮಲೆನಾಡಿನಲ್ಲಿ ಅಡಿಕೆ ತೋಟ ಸಂಪೂರ್ಣ ನೆಲಸಮವಾಗುವ ಭೀತಿಯಲ್ಲಿದೆ. ಹಾಗಿದ್ದೂ ಇದರ ಸಂಶೋಧನೆಗೆ ಕೋಟಿ ಕೊಟ್ಟು ಸಂಶೋಧನಾ ಕೇಂದ್ರ ತೆರೆದ ಸರ್ಕಾರ ಇಲ್ಲಿಗೆ ವಿಜ್ಞಾನಿಗಳನ್ನೂ ನೇಮಿಸಿಲ್ಲ, ಅವರಿಗೆ ಬೇಕಾದ ಸಲಕರಣೆಗಳನ್ನೂ ಕೊಟ್ಟಿಲ್ಲ.
ನಾನು ಈ ಸಮ್ಮೇಳನದ ಮೂಲಕ ಒತ್ತಾಯಿಸುವುದೇನೆಂದರೆ ಮಲೆನಾಡಿನಿಂದ ಅಡಿಕೆ ಮಾಯವಾಗುವ ಮುಂಚೆ ಈ ರೋಗಕ್ಕೊಂದು ಪರಿಹಾರ ಕಂಡು ಹಿಡಿಯಲೇ ಬೇಕು. ಮಲೆನಾಡಿಗೆ ಅಡಿಕೆಯಂತೆ ಒಪ್ಪುವ ಇನ್ನೊಂದು ಬೆಳೆ ಸದ್ಯಕ್ಕಂತೂ ಇಲ್ಲ. ಮಲೆನಾಡಿನ ಸಂಸ್ಕೃತಿ ಅಡಿಕೆಯೊಂದಿಗೆ ಬೆಸೆದುಕೊಂಡಿದೆ.
ಇನ್ನು ಅಡಿಕೆಗೆ ಮಾರುಕಟ್ಟೆಯ ಸಮಸ್ಯೆಯೂ ಇದೆ. ಈಗಾಗಲೇ ಗುಟ್ಕಾ ಇದರ ಮಾನ ತೆಗೆದಿದೆ. ಈಗ ಅಡಿಕೆಯನ್ನು ಹಾನಿಕಾರಕ ಎಂದು ವ್ಯವಸ್ಥಿತವಾಗಿ ಪ್ರಚಾರ ಮಾಡಿ, ಅದನ್ನು ನಿಷೇಧಿಸುವ ಹುನ್ನಾರ ನಡೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದಿರುವ ಈ ಬೆಳವಣಿಗೆಯನ್ನು ಎದುರಿಸಲು ನಮ್ಮ ಸರ್ಕಾರಗಳು ಸಿದ್ಧತೆಯೇ ನಡೆಸಿಲ್ಲ. ವಿಶ್ಚ ಆರೋಗ್ಯ ಸಂಸ್ಥೆ (ಡಬ್ಲುಎಚ್ಒ)ಯ ಅಂಗ ಸಂಸ್ಥೆಯಾದ ಐಎಆರ್ಸಿ (ಇಂಟರ್ ನ್ಯಾಷನಲ್ ಏಜೆನ್ಸಿ ಫಾರ್ ಕ್ಯಾನ್ಸರ್ ರಿಸರ್ಚ್) ನೀಡಿರುವ ವರದಿ ಅಡಿಕೆಗೆ ಮರಣಶಾಸನವಾಗಿ ಪರಿಣಮಿಸಿದೆ. ಇದನ್ನು ಎದುರಿಸಲು ಸೂಕ್ತ ಸಂಶೋಧನೆಗಳು ನಡೆಯಲೇಬೇಕು ಎಂದು ಎಲ್ಲ ಅಡಿಕೆ ಬೆಳೆಗಾರರ ಪರವಾಗಿ ನಾನು ಈ ಸಮ್ಮೇಳನದ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.
ಸಾಮಾನ್ಯವಾಗಿ ಸಾಹಿತ್ಯ ಸಮ್ಮೇಳನದಲ್ಲಿ ನಾವು ಭಾಷೆಯ ಬಗ್ಗೆ ಚರ್ಚಿಸುತ್ತೇವೆ. ಭಾಷೆ ಉದ್ಯೋಗ, ಆಹಾರ, ಉತ್ಪನ್ನಗಳನ್ನು ಅವಲಂಬಿಸಿರುತ್ತದೆ. ನಮ್ಮ ಮಲೆನಾಡಿನ ಪ್ರಮುಖ ಬೆಳೆಯಾಗಿದ್ದ ಭತ್ತದ ಕೃಷಿ ಕಣ್ಮರೆಯಾಗುತ್ತಿದೆ. ಭತ್ತ ಬೆಳೆಯುತ್ತಿದ್ದ ಪ್ರದೇಶ ಶೇ.೮೦ ರಷ್ಟು ಕಡಿಮೆಯಾಗಿದೆ ಎಂದರೆ ಪರಿಸ್ಥಿತಿಯ ಗಂಭೀರತೆ ನಿಮಗೆ ಅರ್ಥವಾಗಬಹುದು. ಇದರೊಂದಿಗಿನ ಉಪ ಕಸುಬುಗಳೂ ನಾಶವಾಗಿವೆ.
ಇದಕ್ಕೆ ಹಲವಾರು ಕಾರಣಗಳಿರಬಹುದು. ಆದರೆ ಈ ಕೃಷಿಯೊಂದಿಗೆ ಬಳಕೆಯಾಗುತ್ತಿದ್ದ ಭಾಷೆ, ಆಚರಣೆ, ಸಂಸ್ಕೃತಿಗಳೂ ಮಲೆನಾಡಿನಿಂದ ದೂರವಾಗುತ್ತಿರುವುದನ್ನು ನೋಡಿದಾಗ ಸಂಕಟವಾಗುತ್ತದೆ. ಇದೇ ಪರಿಸ್ಥಿತಿ ಮುಂದೆ ಅಡಿಕೆಗೂ ಬಂದರೆ, ಮಲೆನಾಡಿನ ಸಂಸ್ಕೃತಿಯೇ ನಾಶವಾದಂತೆ, ಅದರೊಂದಿಗೆ ಕನ್ನಡ ಭಾಷೆಯ ಸಾವಿರಾರು ಪದಗಳು, ನೂರಾರು ನುಡಿಗಟ್ಟುಗಳು ಇತಿಹಾಸದ ಪುಟ ಸೇರುತ್ತವೆ. ಹೀಗಾಗಿ ಮಲೆನಾಡಿನಲ್ಲಿ ನಡೆಯುತ್ತಿರುವ ಈ ಸಾಹಿತ್ಯ ಸಮ್ಮೇಳನದಲ್ಲಿ ಈ ಎಲ್ಲ ವಿಷಯಗಳ ಕುರಿತು ಗಂಭೀರ ಚರ್ಚೆಗಳಾಗಬೇಕೆಂದು ನಾನು ಆಶಿಸುತ್ತೇನೆ.
ಇವೆಲ್ಲವೂ ಮಲೆನಾಡಿನ ಸಮಸ್ಯೆ ಮಾತ್ರ ಎಂದು ನನಗನ್ನಿಸುವುದಿಲ್ಲ. ನಮ್ಮ ಜಿಲ್ಲೆಯಲ್ಲಿಯೇ ಮಲೆನಾಡಿನ ತಾಲೂಕುಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿಯೂ ಇದೇ ರೀತಿಯಾದ ಹಲವಾರು ಸಮಸ್ಯೆಗಳಿವೆ. ನನ್ನ ಹೋರಾಟದ ಕ್ಷೇತ್ರ ಮಲೆನಾಡಾಗಿದ್ದರಿಂದ ಇಲ್ಲಿಯ ವಿಷಯಗಳು ಹೆಚ್ಚು ಪ್ರಸ್ತಾಪವಾಗಿವೆ ಅಷ್ಟೇ. ಜಾಗತೀಕರಣ, ಬಾಹ್ಯ ಸಂಸ್ಕೃತಿಯ ಒತ್ತಡ, ಅದರಿಂದ ಸೃಷ್ಟಿಯಾಗತ್ತಿರುವ ಬೇಡಿಕೆಗಳು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿದೆ, ನಾವು ಮನುಷ್ಯತ್ವವನ್ನು ಕಳೆದುಕೊಂಡು ಯಾರದ್ದೋ ಸೂತ್ರಕ್ಕೆ ಪಾತ್ರದಾರಿಗಳಾಗಿ ಕುಣಿಯುತ್ತಿ ದ್ದೇವೆ. ಹೀಗಾಗಿಯೇ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ. ಕೋಮುವಾದ ಭುಗಿಲೆದ್ದಿದೆ.
ಬಂಧುಗಳೇ
ಮಾನವತಾ ವಾದಿಗಳನ್ನು ಆತಂಕಕ್ಕೀಡುಮಾಡುವ ಘಟನೆಗಳು ಇಂದು ಮಲೆನಾಡಿನಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಪ್ರತಿದಿನವೂ ನಡೆಯುತ್ತಲೇ ಇದೆ. ಇದೆಲ್ಲದಕ್ಕೆ ನಾವು ಹೆದರಬೇಕಾಗಿಲ್ಲ. ಕುವೆಂಪು ಅವರೇ ‘ರೈತನ ದೃಷ್ಟಿ’ ಕವನದಲ್ಲಿ ಬಡ ರೈತ ಸಾಮ್ರಾಜ್ಯಶಾಹಿಯನ್ನು ಹೇಗೆ ವಿರೋಧಿಸುತ್ತಾನೆ ಎಂಬುದನ್ನು ಕಟ್ಟಿಕೊಟ್ಟಿ ದ್ದಾರೆ. ಆ ಮೂಲಕ ನಮಗೂ ಬೆಳಕಿನ ದಾರಿ ತೋರಿಸಿದ್ದಾರೆ. ನಾವೂ ನಮ್ಮದೇ ಆದ ರೀತಿಯಲ್ಲಿ ಕನಸಿನ ಮಲೆನಾಡನ್ನು ಕಟ್ಟಬೇಕಾಗಿದೆ. ಸೌಹಾರ್ದತೆಯ ಪರಂಪರೆಗೆ ಹೊಸ ಮೆರುಗು ನೀಡಬೇಕಾಗಿದೆ.
ಇಲ್ಲಿಯ ಬಹುತೇಕ ಸಮಸ್ಯೆಗಳಿಗೆ ಮುಖ್ಯ ಕಾರಣಗಳಲ್ಲಿ ಒಂದು, ನಾವು ಆಡಳಿತ ವ್ಯವಸ್ಥೆಯ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗುತ್ತಿರುವುದು ಎಂಬುದು ನನ್ನ ಅಭಿಪ್ರಾಯ. ಶಾಸನ ಸಭಾ ಕ್ಷೇತ್ರಗಳನ್ನು ಜನಸಂಖ್ಯಾಧಾರಿತ ಮಾಡಿರುವುದರಿಂದ ನಮ್ಮ ವಿರಳ ಜನಸಂಖ್ಯೆಯಿಂದಾಗಿ ಶಾಸನ ಸಭೆಗಳಲ್ಲಿ ನಮ್ಮ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗಿದೆ. ಇಲ್ಲಿಯ ಸಮಸ್ಯೆಗಳು ವಿಧಾನಸಭೆಗಳಲ್ಲಿ ನಿರೀಕ್ಷೆಯಷ್ಟು ಪ್ರಸ್ತಾಪವಾಗುತ್ತಿಲ್ಲ.
ಓರ್ವ ಶಾಸಕರ ಕ್ಷೇತ್ರ ನೂರು ಕಿ.ಮೀ. ಇದ್ದರೆ ಆಕ್ಷೇತ್ರ ಯಾವ ರೀತಿ ಅಭಿವೃದ್ಧಿ ಕಾಣಬಹುದು? ಇದಕ್ಕೆ ಪರಿಹಾರವೆಂದರೆ ಭೌಗೋಳಿಕ ವಿಸ್ತೀರ್ಣದ ಆಧಾರದ ಮೇಲೆ ವಿಧಾನಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಿಸಬೇಕಾಗಿದೆ. ಅದರ ಜತೆಗೆ ಮಲೆನಾಡಿನ ತಾಲೂಕುಗಳನ್ನು ಮಾತ್ರ ಸೇರಿಸಿ, ಜಿಲ್ಲೆಗಳನ್ನು ಪುನರ್ ರೂಪಿಸಬೇಕಾಗಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ, ನಮ್ಮ ನೆಲ, ಜಲದ ಮೇಲೆ ನಮಗೇ ಹಕ್ಕು ಬೇಕಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಇರುವಂತೆ ಮಲೆನಾಡನ್ನು ವಿಶೇಷ ಪ್ರದೇಶವೆಂದು ಘೋಷಿಸಿ, ಮಲೆನಾಡಿನ ಅಭಿವೃದ್ಧಿಗೆ ವಿಶೇಷ ಪ್ರಾಧಿಕಾರವನ್ನು ರಚಿಸಬೇಕು. ಎಲ್ಲೋ ಕುಳಿತು ರೂಪಿಸಿದ ಕಾನೂನುಗಳ ಜಾರಿಗೆ ತಡೆ ಇರಬೇಕು. ಮಲೆನಾಡಿನ ಸರ್ವತೋಮುಖ ಅಭಿವೃದ್ಧಿಯ ನಿಯಂತ್ರಣವನ್ನು ಪ್ರಾಧಿಕಾರಕ್ಕೆ ನೀಡಿ, ಅದಕ್ಕೆ ಸರ್ವಾಧಿಕಾರ ವಹಿಸಬೇಕೆಂದು ಸಮ್ಮೇಳನದ ಈ ವೇದಿಕೆಯಿಂದ ಆಗ್ರಹಿಸುತ್ತೇನೆ.
ಕೊನೆಯದಾಗಿ ಕುವೆಂಪು ಅವರ ಕವನದ ಮೂಲಕವೇ ನಾನು ನನ್ನ ಈ ಭಾಷಣವನ್ನು ಅಂತ್ಯಗೊಳಿಸುತ್ತೇನೆ.
ಸರ್ವಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ!
ಎಲ್ಲರಿಗೂ ನಮಸ್ಕಾರ.
ಭಾಷಣದ ವಿಡಿಯೋ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

