Connect with us

ರಾಜಕೀಯ

ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ

Published

on

ಕಾನ್ಷೀರಾಂ ಮತ್ತು ಮಾಯಾವತಿ

ಇಂದು ಅಕ್ಕ ಮಾಯಾವತಿಯವರ 64 ನೇ ಹುಟ್ಟು ಹಬ್ಬ. ಅವರಿಗೆ ಭೀಮ ಶುಭಾಶಯಗಳನ್ನು ಕೋರುತ್ತಾ..

  • ಮಹೇಶ್ ಸರಗೂರು

ಅದು 1977 ರ ಚಳಿಗಾಲದ ಸಮಯ. ದೆಹಲಿಯ ಚಳಿ ಎಂದರೆ ಕೇಳಬೇಕೆ? ಚಳಿ ಎಂದರೆ ಅಂತಿಂಥ ಚಳಿಯಲ್ಲ. ಅತ್ಯಂತ ಭೀಕರವಾದ ಚಳಿ. ನರನಾಡಿಗಳಲ್ಲಿ ನಡುಕ ಹುಟ್ಟಿಸುವ ಚಳಿ.ಇಂತಹ ವಿಪರೀತ ಚಳಿಯ ಅವಧಿಯಲ್ಲೂ ಕಾನ್ಷೀರಾಮ್ ಸಾಹೇಬರು ಬಾಂಸೆಫ್ ಸಂಘಟನೆಯನ್ನು ಹುಟ್ಟುಹಾಕಲು ಹಗಲಿರುಳು ಹೆಣಗುತ್ತಿದ್ದರು.

ಇಂತಹ ಸಮಯದಲ್ಲಿ ಒಂದು ದಿನ ಕಾನ್ಷೀರಾಮ್ ಸಾಹೇಬರು ಮನದಲ್ಲಿ ಅದೇನೋ ಒಂದು ಗಟ್ಟಿ ನಿರ್ಧಾರ ಮಾಡಿಕೊಂಡು ಮೇಲಕ್ಕೆದ್ದರು. ಕಿವಿಗೆ ಮತ್ತು ಕುತ್ತಿಗೆಗೆ ಉಲ್ಲನ್ ಸ್ಕಾರ್ಫ್ ಸುತ್ತಿಕೊಂಡು ಸಹೊದ್ಯೋಗಿಯೊಬ್ಬನನ್ನು ಜೊತೆಗೆ ಕರೆದುಕೊಂಡು ಹೊರನಡೆದರು. ಆಗ ಸಮಯ ರಾತ್ರಿ ಒಂಭತ್ತು ಗಂಟೆ.

ದೆಹಲಿಯ ಬಹುತೇಕ ಜನರು ಆ ಕೊರೆಯುವ ಚಳಿಗೆ ಹೆದರಿಕೊಂಡು, ಬೆಚ್ಚನೆಯ ಹಾಸಿಗೆಯಲ್ಲಿ ಮೈ ತುಂಬಾ ಹೊದ್ದುಕೊಂಡು ಮಲಗಿದ್ದರು. ಇಂತಹ ಸಮಯದಲ್ಲಿ ದೆಹಲಿಯ ಇಂದ್ರಪುರಿ ಪ್ರದೇಶವನ್ನು ಪ್ರವೇಶಿಸಿದ ಕಾನ್ಷೀರಾಮ್ ಸಾಹೇಬರು ಮತ್ತು ಅವರ ಸಹೋದ್ಯೋಗಿ ಇಕ್ಕಟ್ಟಾದ ಓಣಿಯಲ್ಲಿ ನಡೆದು ಮನೆಯೊಂದರ ಬಾಗಿಲು ಬಡಿದರು.

ಅದೇ ತಾನೇ ಊಟ ಮುಗಿಸಿ ಓದುತ್ತಿದ್ದ ಹೆಣ್ಣುಮಗಳೊಬ್ಬಳು ಇಂತಹ ಅಪರಾತ್ರಿಯಲ್ಲಿ ಅದ್ಯಾರು ಬಾಗಿಲು ಬಡಿಯುತ್ತಿರಬಹುದೆಂದು ಯೋಚಿಸುತ್ತಲೇ ಬಾಗಿಲು ತೆರೆದು ನೋಡಿದರೆ ಎದುರಿಗೆ ಕಾನ್ಷೀರಾಮ್ ಸಾಹೇಬರು ನಿಂತಿದ್ದರು.

ಬಾಗಿಲು ತೆರೆದ ಆ ಹೆಣ್ಣು ಮಗಳು ಬೇರಾರೂ ಆಗಿರಲಿಲ್ಲ. ಅವರೇ ಮಾಯಾವತಿ.
ಆಧುನಿಕ ಭಾರತದ ರಾಜಕೀಯ ಇತಿಹಾಸದಲ್ಲಿಯೇ ಅಚ್ಚರಿಯ ಪವಾಡ ಸೃಷ್ಟಿಸಿದ ಆ ಇಬ್ಬರು ಮಹಾಮಹಿಮರು ಒಬ್ಬರಿಗೊಬ್ಬರು ಎದುರುಗೊಂಡ ಮೊದಲ ಕ್ಷಣ ಅದಾಗಿತ್ತು.

ಅಕ್ಕ ಮಾಯಾವತಿಯವರಿಗೆ ಒಂದು ಕ್ಷಣ ಉಸಿರು ನಿಂತಂತಾಯಿತು. ಕಾರಣ ಅಲ್ಲಿ ನಿಂತವರು ವಾಸ್ತವವಾಗಿ ಕಾನ್ಷೀರಾಮ್ ಸಾಹೇಬರಾಗಿದ್ದರೂ ಅವರ ರೂಪ, ಪ್ರತಿರೂಪ ಸಾಕ್ಷಾತ್ ಭಗವಾನ್ ಬುದ್ದನಂತಿತ್ತು. ಭೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಹೋಲುತ್ತಿತ್ತು.

ತನ್ನ ಕಣ್ಣನ್ನು ತಾನೇ ನಂಬದಾದ ಮಾಯಾವತಿಯವರು ಸಾವರಿಸಿಕೊಂಡು ಕಾನ್ಷೀರಾಮ್ ಸಾಹೇಬರನ್ನು ಮನೆಯೊಳಗೆ ಬರಮಾಡಿಕೊಂಡರು. ಕಾನ್ಷೀರಾಮ್ ಸಾಹೇಬರ ಆಕಸ್ಮಿಕ ಆಗಮನ ಮಾಯಾವತಿಯವರ ಮನೆಯಲ್ಲಿ ಮಿಂಚಿನ ಸಂಚಾರವನ್ನುಂಟುಮಾಡಿತ್ತು.

ಮಾಯಾವತಿಯವರ ತಂದೆತಾಯಿಗಳು ಗಡಬಡಿಸಿ ಬಂದು, ಆದರದಿಂದ ಸ್ವಾಗತಿಸಿ, ಪರಸ್ಪರ ಕ್ಷೇಮ ಸಮಾಚಾರ ವಿನಿಮಯ ಮಾಡಿಕೊಂಡರು. ಬಾಂಸೆಫ್ ಕೆಲಸದ ಮೂಲಕ ಅದಾಗಲೇ ಉತ್ತರ ಭಾರತದಾದ್ಯಂತ ಮನೆಮಾತಾಗಿದ್ದ ಕಾನ್ಷೀರಾಮ್ ಸಾಹೇಬರು ಇಂತಹ ಅಪರಾತ್ರಿ ಹೊತ್ತಲ್ಲಿ ಮನೆಗೆ ಬಂದಿದ್ದು ಪ್ರಭುದಾಸ್ ದಯಾಳ್ ಮತ್ತು ರಾಮರತಿಯವರಿಗೆ ಬಿಡಿಸಲಾಗದ ಒಗಟಿನಂತಾಗಿತ್ತು. ಏತಕ್ಕೆ ಬಂದಿದ್ದಾರೋ, ಏನು ಸುದ್ದಿ ತಂದಿದ್ದಾರೋ ಎಂಬ ಅಳುಕು ಅವರದಾಗಿತ್ತು.

ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ

ಕಾನ್ಷೀರಾಮ್ ಸಾಹೇಬರು ಆ ಅಪರಾತ್ರಿಯಲ್ಲಿ ಮಾಯಾವತಿಯವರನ್ನು ಹುಡುಕಿಕೊಂಡು ಬರಲು ಕಾರಣವೊಂದಿತ್ತು. ಆ ಕಾರಣವೇನೆಂದರೆ, 1977 ರ ಸೆಪ್ಟೆಂಬರ್ ನಲ್ಲಿ ಸರ್ಕಾರದ ವತಿಯಿಂದ ದೆಹಲಿಯ Constitution club ನಲ್ಲಿ ಮೂರು ದಿನಗಳ ಕಾಲ ‘ಜಾತಿ ವಿನಾಶ’ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವರಾಗಿದ್ದ ಮತ್ತು ಹೆಸರಾಂತ ಸಮಾಜವಾದಿ ನಾಯಕರಾಗಿದ್ದ ರಾಜ್ ನಾರಾಯಣ್ ರವರು ತಮ್ಮ ಭಾಷಣದಲ್ಲಿ ಅವಹೇಳನಕಾರಿಯಾದ ‘ಹರಿಜನ’ ಪದವನ್ನು ಪದೇ ಪದೇ ಬಳಸಿ ಮಾತನಾಡುತ್ತಿದ್ದರು.

ಅಲ್ಲೇ ಹಾಜರಿದ್ದ ಸರ್ಕಾರಿ ಶಿಕ್ಷಕಿ ಮಾಯಾವತಿಯವರು ಎದ್ದು ನಿಂತು ರಾಜ್ ನಾರಾಯಣ್ ರವರನ್ನು ತರಾಟೆಗೆ ತೆಗೆದುಕೊಂಡರು. ಪರಿಶಿಷ್ಟ ಜಾತಿಯವರಿಗೆ ಹರಿಜನರೆಂದು ಕರೆದು ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ. ನಿಮ್ಮ ಘನತೆ ಮತ್ತು ಗೌರವಗಳನ್ನು ಮರೆತು ಬೇಜವಾಬ್ದಾರಿಯಿಂದ ಮಾತನಾಡಿದ್ದೀರಿ. ನೀವು ಈ ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಸಭೆಯಲ್ಲಿ ಕ್ಷಮೆ ಕೇಳಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಘಟನೆಯಿಂದ ಮಾಯಾವತಿಯವರು ಎಲ್ಲರ ಕೇಂದ್ರ ಬಿಂದುವಾದರು.

ಇದೇ ಸಭೆಯಲ್ಲಿದ್ದ ಕೆಲವು ಬಾಂಸೆಫ್ ಕಾರ್ಯಕರ್ತರು ಮಾಯಾವತಿಯವರ ವಿಷಯವನ್ನು ಕಾನ್ಷೀರಾಮ್ ಸಾಹೇಬರಿಗೆ ವಿವರಿಸಿ, ಮಾಯಾವತಿಯವರು ನಮ್ಮ ಸಂಘಟನೆಯಲ್ಲಿದ್ದರೆ ಬಾಂಸೆಫ್ ಗೆ ಹೆಚ್ಚು ಬಲ ಬರುತ್ತದೆ ಎಂದು ತಿಳಿಸಿದರು. ಬಾಂಸೆಫ್ ಕಾರ್ಯಕರ್ತರ ಮಾತಿನಿಂದ ಉತ್ತೇಜಿತರಾದ ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಅರಿವಿಗೆ ಬಾರದಂತೆ ಅವರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಮಾಯಾವತಿಯವರ ಚಿಂತನೆಗಳನ್ನು ಗಮನವಿಟ್ಟು ಆಲಿಸಿದರು. ಅದಕ್ಕಾಗಿ ಮಾಯಾವತಿಯವರನ್ನು ಹುಡುಕಿಕೊಂಡು ಬಂದಿದ್ದರು.

ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು

ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಭಾರತದ ಸಾಮಾಜಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಮಹಾತ್ಮ ಜ್ಯೋತಿಭಾಫುಲೆಯವರಿಂದಿಡಿದು ಬಾಬಾಸಾಹೇಬ್ ಅಂಬೇಡ್ಕರ್ ವರೆಗಿನ ಎಲ್ಲಾ ಮಹಾಪುರುಷರ ಹೋರಾಟವನ್ನು ಮತ್ತು ಅದರ ಮುಂದುವರಿಕೆಯ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿ ಹೇಳಿದರು.

ಇದಾದ ಬಳಿಕ ಮಾಯಾವತಿಯವರ ಜೀವನದ ಆಸೆ ಆಕಾಂಕ್ಷೆಗಳನ್ನು, ದ್ಯೇಯೋದ್ದೇಶಗಳನ್ನು ಕೇಳಿ ತಿಳಿದುಕೊಂಡರು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾನು ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು ಎನ್ನುವುದು ನನ್ನ ಗುರಿ ಎಂದು ಮಾಯಾವತಿಯವರು ತಿಳಿಸಿದರು.

ನಂತರ ಹೊರಡುವ ಸಮಯದಲ್ಲಿ ಅಂತಿಮವಾಗಿ ಒಂದು ನಿರ್ಧಾರಕ್ಕೆ ಬಂದ ಕಾನ್ಷೀರಾಮ್ ಸಾಹೇಬರು ” ನೀನು ಅಂದುಕೊಂಡಂತೆ ಖಂಡಿತವಾಗಿ ನೀನು ಐಎಎಸ್ ಅಧಿಕಾರಿ ಆಗಬಹುದು. ಆ ಅರ್ಹತೆ ನಿನಗಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ನೀನು ಅಂದುಕೊಂಡಂತೆ ನಿನ್ನ ಜನರ ಸೇವೆ ಮಾಡುವುದು ಮಾತ್ರ ನಿಮ್ಮಿಂದ ಸಾಧ್ಯವಾಗುವುದಿಲ್ಲ.

ಕಾರಣ, ಒಬ್ಬ ಸರ್ಕಾರಿ ಅಧಿಕಾರಿಯಾಗಿ ನೀನು ಸರಕಾರ ನಡೆಸುವ ರಾಜಕಾರಿಣಿಗಳ ಇಚ್ಚೆಯಂತೆ ನಡೆಯಬೇಕಾಗುತ್ತದೆ. ಶ್ರೀಮಂತರ ನೋಟುಗಳಿಂದ ಬಡವರ ಓಟುಗಳನ್ನು ಖರೀದಿಸುವುದನ್ನೇ ಪ್ರಜಾಪ್ರಭುತ್ವ ಎಂದು ಪರಿಗಣಿಸಿರುವ ಭಾರತದಲ್ಲಿ ರಾಜಕೀಯ ನಾಯಕರ ಯೋಜನೆಗಳು ಮತ್ತು ಯೋಚನೆಗಳು ಜಾರಿಯಾಗುತ್ತವೆಯೇ ಹೊರತು ಐಎಎಸ್ ಅಧಿಕಾರಿಗಳ ಯೋಜನೆಗಳು ಮತ್ತು ಯೋಚನೆಗಳಲ್ಲ.

ಈಗ ನಮ್ಮ ಸಮಾಜದಲ್ಲಿ ಬೇಕಾದಷ್ಟು ಮಂದಿ ಐಎಎಸ್ ಅಧಿಕಾರಿಗಳಿದ್ದಾರೆ. ಆದರೆ ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸುವಂತಿಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ನಮಗೆ ಬೇಕಾಗಿರುವುದು ಐಎಎಸ್ ಅಧಿಕಾರಿಗಳಲ್ಲ. ರಾಜಕೀಯ ನಾಯಕರು. ಐಎಎಸ್ ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಬಲ್ಲ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಕುಳಿತು ಜನಪರ ಶಾಸನಗಳನ್ನು ರೂಪಿಸಬಲ್ಲ , ಅವುಗಳನ್ನು ಜಾರಿಗೊಳಿಸಬಲ್ಲ ಸಮರ್ಥ ರಾಜಕೀಯ ನಾಯಕರು.

ನಮ್ಮ ಸಮಾಜದಲ್ಲಿ ಇಂಥ ನಾಯಕರ ಕೊರತೆ ಇದೆ. ‌ನೀನು ಆ ಕೊರತೆಯನ್ನು ನೀಗಿಸಬೇಕು. ನಿನ್ನಲ್ಲಿ ಆ ಶಕ್ತಿಯಿದೆ. ನನ್ನ ಮಾತನ್ನು ನೀನು ನಂಬುವುದಾದರೆ, ನಿನ್ನಲ್ಲಿ ಇಂತದ್ದೊಂದು ಬಯಕೆ ಇದ್ದುದಾದರೆ ನಾನು ನಿನ್ನನ್ನು ಅಂಥ ಒಬ್ಬ ಸಮರ್ಥ ನಾಯಕಿಯನ್ನಾಗಿ ತಯಾರು ಮಾಡುತ್ತೇನೆ. ಆಗ ನೂರಾರು ಜನ ಐಎಎಸ್ ಅಧಿಕಾರಿಗಳು ತಮ್ಮ ಫೈಲುಗಳನ್ನು ಹಿಡಿದುಕೊಂಡು ಬಂದು ನಿನ್ನ ಆದೇಶಕ್ಕಾಗಿ ಕಾಯುತ್ತಾರೆ.

ಒಳ್ಳೆಯ ಮತ್ತು ಕೆಟ್ಟ ಕೆಲಸ ಎರಡನ್ನೂ ಮಾಡುವ ಶಕ್ತಿ ಹೊಂದಿರುವ ಐಎಎಸ್ ಅಧಿಕಾರಿಗಳಿಂದ ನೀನು ನಿನ್ನೆಲ್ಲ ಒಳ್ಳೆಯ ಕೆಲಸಗಳನ್ನೇ ಮಾಡಿಸಬಹುದು. ಅದಕ್ಕಾಗಿ ನೀನು ಒಬ್ಬ ಐಎಎಸ್ ಅಧಿಕಾರಿಯಾಗುವ ಬದಲು ಒಬ್ಬ ಸಮರ್ಥ ರಾಜಕೀಯ ನಾಯಕಿಯಾಗುವುದು ಒಳ್ಳೆಯದು. ಯಾವುದಕ್ಕೂ ಯೋಚಿಸಿ ಒಂದು ಸರಿಯಾದ ನಿರ್ಧಾರಕ್ಕೆ ಬಾ… ನೀನು ತೆಗೆದುಕೊಳ್ಳುವ ನಿರ್ಧಾರದಲ್ಲಿ ಬಹುಜನರ ಭವಿಷ್ಯ ಅಡಗಿದೆ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.

ಮುಂದೆ ನಡೆದಿದ್ದೆಲ್ಲವೂ ನಮ್ಮ ಕಣ್ಣ ಮುಂದಿರುವ ಇತಿಹಾಸ. ನುಡಿದಂತೆ ನಡೆದು, ಯಕಶ್ಚಿತ್ ಶಾಲಾ ಶಿಕ್ಷಕಿಯೊಬ್ಬಳನ್ನು ಉತ್ತರಪ್ರದೇಶದಂತಹ ಅತಿದೊಡ್ಡ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿ, ದೇಶವೇ ಕೊಂಡಾಡುವಂತೆ ಅದ್ಬುತ ಕಾರ್ಯಗಳನ್ನು ಸಾಧಿಸಿ ತೋರಿಸಿದ ಪವಾಡ ಪುರುಷ ಕಾನ್ಷೀರಾಮ್. ಅಂದು ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ. ಕಾರಣ, ಮಹಾಜ್ಞಾನಿಗಳ ಮಾತುಗಳು ಸುಳ್ಳಾಗಲು ಸಾದ್ಯವೇ ಇಲ್ಲ..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್‌ಗೆ ರಾಜೀನಾಮೆ ಸವಾಲು!

Published

on

janardhana-reddy-attacks-b-nagendra-valmiki-scam-ballari-political-war
ಚಂದ್ರಶೇಖರ್ ಸಾವು, ನಿಗಮದ ಹಣ ದುರ್ಬಳಕೆ ವಿಚಾರ ಮುಂದಿಟ್ಟುಕೊಂಡು ಮಾಜಿ ಸಚಿವ ನಾಗೇಂದ್ರ ವಿರುದ್ಧ ರೆಡ್ಡಿ ಗಂಭೀರ ಆರೋಪ

ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಿಗಮದ ಹಣ ದುರ್ಬಳಕೆ ಹಾಗೂ ಚಂದ್ರಶೇಖರ್ ಸಾವಿನ ವಿಚಾರವನ್ನು ಪ್ರಸ್ತಾಪಿಸಿ ನಾಗೇಂದ್ರ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಹೈಲೈಟ್ಸ್

  • ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ತೀವ್ರ ವಾಗ್ದಾಳಿ
  • ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ ಮತ್ತೆ ಮುನ್ನೆಲೆ
  • ಚಂದ್ರಶೇಖರ್ ಸಾವಿನ ವಿಚಾರದಲ್ಲಿ ಗಂಭೀರ ಆರೋಪ
  • ಬಳ್ಳಾರಿಯ 10 ಕ್ಷೇತ್ರಗಳಿಗೆ ರಾಜೀನಾಮೆ ನೀಡಿ ಚುನಾವಣೆ ಎದುರಿಸುವಂತೆ ಸವಾಲು
  • ಸಂಸದ ತುಕಾರಾಂ ರಾಜೀನಾಮೆ ನೀಡಬೇಕೆಂದು ರೆಡ್ಡಿ ಆಗ್ರಹ

ನಾಗೇಂದ್ರ ಅವರು ಕಣ್ಣೀರು ಹಾಕುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ರೆಡ್ಡಿ ಟೀಕಿಸಿದ್ದಾರೆ. ಚಂದ್ರಶೇಖರ್ ಸಾವಿಗೆ ಸಂಬಂಧಿಸಿದಂತೆ ನಾಗೇಂದ್ರ ಅವರ ವಿರುದ್ಧ ನೇರ ಆರೋಪದ ಧಾಟಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕಿದೆ ಎಂದು ಹೇಳಿದ್ದಾರೆ.

http://Visit : www.suddidina.com

₹187 ಕೋಟಿ ಹಗರಣದ ಆರೋಪ ಮತ್ತೆ ಮುನ್ನೆಲೆಗೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಜನಾರ್ಧನ ರೆಡ್ಡಿ, ಪ್ರಕರಣದಲ್ಲಿ ಹಲವು ವ್ಯಕ್ತಿಗಳು ಮತ್ತು ನೂರಾರು ಬ್ಯಾಂಕ್ ಖಾತೆಗಳ ಬಳಕೆಯಾಗಿದೆ ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ಕೆಲವರ ಖಾತೆಗಳಿಗೆ ₹6.50 ಕೋಟಿ ವರ್ಗಾವಣೆಯಾಗಿದೆ ಎಂದು ಉಲ್ಲೇಖಿಸಿದ ಅವರು, ನಗದು ಹಾಗೂ ಚಿನ್ನಾಭರಣ ಖರೀದಿಯ ಬಗ್ಗೆಯೂ ಆರೋಪ ಮಾಡಿದ್ದಾರೆ.

ಹಗರಣದಲ್ಲಿ ನಾಗೇಂದ್ರ ಅವರ ಪಾತ್ರವಿದೆ ಎಂಬುದು ಸ್ಪಷ್ಟ ಎಂದು ರೆಡ್ಡಿ ಆರೋಪಿಸಿದ್ದು, ತಪ್ಪು ಮಾಡಿಲ್ಲ ಎನ್ನುವ ನಾಗೇಂದ್ರ ಅವರಿಗೆ ಕಾಂಗ್ರೆಸ್ ಪಕ್ಷ ಏಕೆ ಸಚಿವ ಸ್ಥಾನದಿಂದ ರಾಜೀನಾಮೆ ಪಡೆಯಿತು ಎಂಬ ಪ್ರಶ್ನೆಯನ್ನೂ ಮುಂದಿಟ್ಟಿದ್ದಾರೆ.

ರಾಜಕೀಯ ಹಿನ್ನೆಲೆ ಕೆದಕಿದ ರೆಡ್ಡಿ

ನಾಗೇಂದ್ರ ಅವರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಪಾತ್ರವಿತ್ತು ಎಂದು ಹೇಳಿದ ರೆಡ್ಡಿ, ಬಿಜೆಪಿ ವಿರುದ್ಧ ಮಾತನಾಡುವ ಮೊದಲು ತಮ್ಮ ರಾಜಕೀಯ ಆರಂಭವನ್ನು ನೆನಪಿಸಿಕೊಳ್ಳಬೇಕು ಎಂದು ಟಾಂಗ್ ನೀಡಿದ್ದಾರೆ. ಮನुस್ಮೃತಿ, ಬಿಜೆಪಿ ಹಾಗೂ ವಾಲ್ಮೀಕಿ ಸಮುದಾಯದ ವಿಚಾರದಲ್ಲಿ ನಾಗೇಂದ್ರ ನೀಡಿರುವ ಹೇಳಿಕೆಗಳಿಗೂ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋಲು-ಗೆಲುವು ಕಂಡಿರುವುದನ್ನು ಉಲ್ಲೇಖಿಸಿದ ರೆಡ್ಡಿ, ಶ್ರೀರಾಮುಲು ಅವರನ್ನು ‘ರಿಜೆಕ್ಟೆಡ್ ಪೀಸ್’ ಎಂದು ಟೀಕಿಸಿದ್ದ ನಾಗೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

10 ಕ್ಷೇತ್ರಗಳಿಗೆ ರಾಜೀನಾಮೆ ನೀಡಿ ಚುನಾವಣೆ ಎದುರಿಸುವಂತೆ ಸವಾಲು

ಅಖಂಡ ಬಳ್ಳಾರಿ ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳ ಶಾಸಕರು ಹಾಗೂ ಸಂಸದರು ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಬಂದರೆ ಬಿಜೆಪಿ ಸಿದ್ಧವಿದೆ ಎಂದು ಜನಾರ್ಧನ ರೆಡ್ಡಿ ಸವಾಲು ಹಾಕಿದ್ದಾರೆ. ಹತ್ತು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸುವ ಮೂಲಕ ತಮ್ಮ ರಾಜಕೀಯ ಶಕ್ತಿ ಪ್ರದರ್ಶಿಸುವುದಾಗಿ ಅವರು ಹೇಳಿದ್ದಾರೆ.

ನಾಗೇಂದ್ರ ರಾಜೀನಾಮೆ ನೀಡಿದ್ದರೂ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ತುಕಾರಾಂ ರಾಜೀನಾಮೆಗೂ ಆಗ್ರಹ

ವಾಲ್ಮೀಕಿ ಹಗರಣದ ಹಣದ ಪ್ರಭಾವದಿಂದಲೇ ತುಕಾರಾಂ ಸಂಸದರಾಗಿದ್ದಾರೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ, ಮೊದಲು ಕಾಂಗ್ರೆಸ್ ತುಕಾರಾಂ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಆರೋಪಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

Continue Reading

ದಿನದ ಸುದ್ದಿ

Trump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್‌ನಾ?

Published

on

Trump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್‌ನಾ?

ಸುದ್ದಿದಿನ,ಅಮೆರಿಕ: ಅಮೆರಿಕ-ವೆನೆಜುವೆಲಾ ನಡುವಿನ ಹೊಸ ತೈಲ ಒಪ್ಪಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಒಪ್ಪಂದವನ್ನು ‘ವಿಶ್ವದ ಅತಿದೊಡ್ಡ ತೈಲ ಡೀಲ್’ ಎಂದು ಬಣ್ಣಿಸಿದ್ದಾರೆ.

ವೆನೆಜುವೆಲಾದ ಬೃಹತ್ ತೈಲ ಸಂಪತ್ತನ್ನು ಅಭಿವೃದ್ಧಿಪಡಿಸುವುದು ಮಾತ್ರವಲ್ಲದೆ, ಅಮೆರಿಕದ ಇಂಧನ ಭದ್ರತೆಯನ್ನು ಬಲಪಡಿಸುವ ಉದ್ದೇಶವೂ ಇದರ ಹಿಂದೆ ಇದೆ ಎನ್ನಲಾಗಿದೆ.

ಹೈಲೈಟ್ಸ್

  • ಅಮೆರಿಕ-ವೆನೆಜುವೆಲಾ ನಡುವೆ ಬೃಹತ್ ತೈಲ ಒಪ್ಪಂದ
  • 65 ಬಿಲಿಯನ್ ಬ್ಯಾರೆಲ್‌ಗೂ ಹೆಚ್ಚು ತೈಲ ಸಂಗ್ರಹದ ಮೇಲೆ ಗಮನ
  • 17 ಪ್ರಮುಖ ತೈಲ ಕ್ಷೇತ್ರಗಳ ಅಭಿವೃದ್ಧಿ ಯೋಜನೆ
  • $100 ಬಿಲಿಯನ್‌ಗೂ ಹೆಚ್ಚು ಹೂಡಿಕೆ ಸಾಧ್ಯತೆ
  • ಉತ್ಪಾದನೆ ಹೆಚ್ಚಾದರೆ ಜಾಗತಿಕ ತೈಲ ಮಾರುಕಟ್ಟೆಯ ಮೇಲೂ ಪರಿಣಾಮ

http://Visit : www.suddidina.com

65 ಬಿಲಿಯನ್ ಬ್ಯಾರೆಲ್ ತೈಲದತ್ತ ಗಮನ

ಒಪ್ಪಂದದ ಪ್ರಮುಖ ಅಂಶವೆಂದರೆ ವೆನೆಜುವೆಲಾದಲ್ಲಿರುವ ಸುಮಾರು 65 ಬಿಲಿಯನ್ ಬ್ಯಾರೆಲ್‌ಗಳಿಗೂ ಹೆಚ್ಚು ತೈಲ ಸಂಗ್ರಹ. ಈ ಸಂಪತ್ತಿನ ಅಭಿವೃದ್ಧಿಯಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹಾಗೂ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ನೇತೃತ್ವದಲ್ಲಿ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ.

17 ತೈಲ ಕ್ಷೇತ್ರಗಳ ಅಭಿವೃದ್ಧಿಗೆ ಬೃಹತ್ ಹೂಡಿಕೆ

ವೆನೆಜುವೆಲಾದ 17 ಪ್ರಮುಖ ತೈಲ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ 100 ಬಿಲಿಯನ್ ಡಾಲರ್‌ಗೂ ಹೆಚ್ಚು ಹೂಡಿಕೆ ಬರಬಹುದೆಂಬ ನಿರೀಕ್ಷೆ ಇದೆ. ಇದರಿಂದ ವೆನೆಜುವೆಲಾ ಸರ್ಕಾರಕ್ಕೆ ದೀರ್ಘಾವಧಿಯಲ್ಲಿ 209 ಬಿಲಿಯನ್ ಡಾಲರ್‌ಗೂ ಅಧಿಕ ತೆರಿಗೆ ಆದಾಯ ದೊರೆಯುವ ಸಾಧ್ಯತೆಯನ್ನೂ ಅಲ್ಲಿನ ಆಡಳಿತ ಉಲ್ಲೇಖಿಸಿದೆ.

https://x.com/SecRubio/status/2093472965404860812

ಅಮೆರಿಕಕ್ಕೆ ಏನು ಲಾಭ?

ತೈಲ ಉತ್ಪಾದನೆ ಹೆಚ್ಚಾದರೆ ಅಮೆರಿಕಕ್ಕೆ ಕಡಿಮೆ ದರದಲ್ಲಿ ಕಚ್ಚಾ ತೈಲ ಲಭ್ಯವಾಗುವ ಸಾಧ್ಯತೆ ಇದೆ. ಇದರಿಂದ ದೇಶೀಯ ಇಂಧನ ಬೆಲೆಗಳ ಮೇಲೆ ಒತ್ತಡ ಕಡಿಮೆಯಾಗಬಹುದು ಎಂಬುದು ಟ್ರಂಪ್ ಆಡಳಿತದ ನಿರೀಕ್ಷೆ. ಉತ್ಪಾದನೆಯ ಒಂದು ಭಾಗವನ್ನು ಅಮೆರಿಕದ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್‌ಗೆ ಬಳಸುವುದರ ಜೊತೆಗೆ ಸೇನಾ ಅಗತ್ಯಗಳಿಗೂ ಬಳಸುವ ಸಾಧ್ಯತೆ ಇದೆ.

ತಕ್ಷಣ ಉತ್ಪಾದನೆ ಹೆಚ್ಚುವುದು ಸುಲಭವಲ್ಲ

ಆದರೆ ಒಪ್ಪಂದ ಘೋಷಣೆಯಾದ ತಕ್ಷಣ ವೆನೆಜುವೆಲಾದ ತೈಲ ಉತ್ಪಾದನೆ ಗಗನಕ್ಕೇರುವುದಿಲ್ಲ. ಹಲವು ವರ್ಷಗಳ ನಿರ್ಲಕ್ಷ್ಯದಿಂದ ತೈಲ ಕ್ಷೇತ್ರಗಳ ಮೂಲಸೌಕರ್ಯ ದುರ್ಬಲಗೊಂಡಿದೆ. ಹಳೆಯ ಘಟಕಗಳ ಪುನರ್‌ನಿರ್ಮಾಣ, ಪೈಪ್‌ಲೈನ್‌ಗಳು, ಸಂಸ್ಕರಣಾ ಘಟಕಗಳು ಮತ್ತು ಸಾರಿಗೆ ವ್ಯವಸ್ಥೆ ಸುಧಾರಣೆಗೆ ಭಾರೀ ಬಂಡವಾಳ ಹಾಗೂ ಹಲವು ವರ್ಷಗಳ ಸಮಯ ಬೇಕಾಗಬಹುದು.

ಜಾಗತಿಕ ತೈಲ ಮಾರುಕಟ್ಟೆಗೆ ಸವಾಲು?

ವೆನೆಜುವೆಲಾ ಅಪಾರ ತೈಲ ಸಂಗ್ರಹ ಹೊಂದಿದ್ದರೂ, ಅದರ ಉತ್ಪಾದನೆ ಸಂಗ್ರಹದ ಪ್ರಮಾಣಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಹೊಸ ಹೂಡಿಕೆಗಳ ಮೂಲಕ ಉತ್ಪಾದನೆ ಗಣನೀಯವಾಗಿ ಹೆಚ್ಚಾದರೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆ ಹೆಚ್ಚಬಹುದು. ಇದರಿಂದ ತೈಲ ಬೆಲೆ, ಅಮೆರಿಕದ ಇಂಧನ ನೀತಿ ಮತ್ತು ಇತರ ತೈಲ ಉತ್ಪಾದಕ ರಾಷ್ಟ್ರಗಳ ತಂತ್ರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

Trending