ರಾಜಕೀಯ
ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ
ಇಂದು ಅಕ್ಕ ಮಾಯಾವತಿಯವರ 64 ನೇ ಹುಟ್ಟು ಹಬ್ಬ. ಅವರಿಗೆ ಭೀಮ ಶುಭಾಶಯಗಳನ್ನು ಕೋರುತ್ತಾ..
- ಮಹೇಶ್ ಸರಗೂರು
ಅದು 1977 ರ ಚಳಿಗಾಲದ ಸಮಯ. ದೆಹಲಿಯ ಚಳಿ ಎಂದರೆ ಕೇಳಬೇಕೆ? ಚಳಿ ಎಂದರೆ ಅಂತಿಂಥ ಚಳಿಯಲ್ಲ. ಅತ್ಯಂತ ಭೀಕರವಾದ ಚಳಿ. ನರನಾಡಿಗಳಲ್ಲಿ ನಡುಕ ಹುಟ್ಟಿಸುವ ಚಳಿ.ಇಂತಹ ವಿಪರೀತ ಚಳಿಯ ಅವಧಿಯಲ್ಲೂ ಕಾನ್ಷೀರಾಮ್ ಸಾಹೇಬರು ಬಾಂಸೆಫ್ ಸಂಘಟನೆಯನ್ನು ಹುಟ್ಟುಹಾಕಲು ಹಗಲಿರುಳು ಹೆಣಗುತ್ತಿದ್ದರು.
ಇಂತಹ ಸಮಯದಲ್ಲಿ ಒಂದು ದಿನ ಕಾನ್ಷೀರಾಮ್ ಸಾಹೇಬರು ಮನದಲ್ಲಿ ಅದೇನೋ ಒಂದು ಗಟ್ಟಿ ನಿರ್ಧಾರ ಮಾಡಿಕೊಂಡು ಮೇಲಕ್ಕೆದ್ದರು. ಕಿವಿಗೆ ಮತ್ತು ಕುತ್ತಿಗೆಗೆ ಉಲ್ಲನ್ ಸ್ಕಾರ್ಫ್ ಸುತ್ತಿಕೊಂಡು ಸಹೊದ್ಯೋಗಿಯೊಬ್ಬನನ್ನು ಜೊತೆಗೆ ಕರೆದುಕೊಂಡು ಹೊರನಡೆದರು. ಆಗ ಸಮಯ ರಾತ್ರಿ ಒಂಭತ್ತು ಗಂಟೆ.
ದೆಹಲಿಯ ಬಹುತೇಕ ಜನರು ಆ ಕೊರೆಯುವ ಚಳಿಗೆ ಹೆದರಿಕೊಂಡು, ಬೆಚ್ಚನೆಯ ಹಾಸಿಗೆಯಲ್ಲಿ ಮೈ ತುಂಬಾ ಹೊದ್ದುಕೊಂಡು ಮಲಗಿದ್ದರು. ಇಂತಹ ಸಮಯದಲ್ಲಿ ದೆಹಲಿಯ ಇಂದ್ರಪುರಿ ಪ್ರದೇಶವನ್ನು ಪ್ರವೇಶಿಸಿದ ಕಾನ್ಷೀರಾಮ್ ಸಾಹೇಬರು ಮತ್ತು ಅವರ ಸಹೋದ್ಯೋಗಿ ಇಕ್ಕಟ್ಟಾದ ಓಣಿಯಲ್ಲಿ ನಡೆದು ಮನೆಯೊಂದರ ಬಾಗಿಲು ಬಡಿದರು.
ಅದೇ ತಾನೇ ಊಟ ಮುಗಿಸಿ ಓದುತ್ತಿದ್ದ ಹೆಣ್ಣುಮಗಳೊಬ್ಬಳು ಇಂತಹ ಅಪರಾತ್ರಿಯಲ್ಲಿ ಅದ್ಯಾರು ಬಾಗಿಲು ಬಡಿಯುತ್ತಿರಬಹುದೆಂದು ಯೋಚಿಸುತ್ತಲೇ ಬಾಗಿಲು ತೆರೆದು ನೋಡಿದರೆ ಎದುರಿಗೆ ಕಾನ್ಷೀರಾಮ್ ಸಾಹೇಬರು ನಿಂತಿದ್ದರು.
ಬಾಗಿಲು ತೆರೆದ ಆ ಹೆಣ್ಣು ಮಗಳು ಬೇರಾರೂ ಆಗಿರಲಿಲ್ಲ. ಅವರೇ ಮಾಯಾವತಿ.
ಆಧುನಿಕ ಭಾರತದ ರಾಜಕೀಯ ಇತಿಹಾಸದಲ್ಲಿಯೇ ಅಚ್ಚರಿಯ ಪವಾಡ ಸೃಷ್ಟಿಸಿದ ಆ ಇಬ್ಬರು ಮಹಾಮಹಿಮರು ಒಬ್ಬರಿಗೊಬ್ಬರು ಎದುರುಗೊಂಡ ಮೊದಲ ಕ್ಷಣ ಅದಾಗಿತ್ತು.
ಅಕ್ಕ ಮಾಯಾವತಿಯವರಿಗೆ ಒಂದು ಕ್ಷಣ ಉಸಿರು ನಿಂತಂತಾಯಿತು. ಕಾರಣ ಅಲ್ಲಿ ನಿಂತವರು ವಾಸ್ತವವಾಗಿ ಕಾನ್ಷೀರಾಮ್ ಸಾಹೇಬರಾಗಿದ್ದರೂ ಅವರ ರೂಪ, ಪ್ರತಿರೂಪ ಸಾಕ್ಷಾತ್ ಭಗವಾನ್ ಬುದ್ದನಂತಿತ್ತು. ಭೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಹೋಲುತ್ತಿತ್ತು.
ತನ್ನ ಕಣ್ಣನ್ನು ತಾನೇ ನಂಬದಾದ ಮಾಯಾವತಿಯವರು ಸಾವರಿಸಿಕೊಂಡು ಕಾನ್ಷೀರಾಮ್ ಸಾಹೇಬರನ್ನು ಮನೆಯೊಳಗೆ ಬರಮಾಡಿಕೊಂಡರು. ಕಾನ್ಷೀರಾಮ್ ಸಾಹೇಬರ ಆಕಸ್ಮಿಕ ಆಗಮನ ಮಾಯಾವತಿಯವರ ಮನೆಯಲ್ಲಿ ಮಿಂಚಿನ ಸಂಚಾರವನ್ನುಂಟುಮಾಡಿತ್ತು.
ಮಾಯಾವತಿಯವರ ತಂದೆತಾಯಿಗಳು ಗಡಬಡಿಸಿ ಬಂದು, ಆದರದಿಂದ ಸ್ವಾಗತಿಸಿ, ಪರಸ್ಪರ ಕ್ಷೇಮ ಸಮಾಚಾರ ವಿನಿಮಯ ಮಾಡಿಕೊಂಡರು. ಬಾಂಸೆಫ್ ಕೆಲಸದ ಮೂಲಕ ಅದಾಗಲೇ ಉತ್ತರ ಭಾರತದಾದ್ಯಂತ ಮನೆಮಾತಾಗಿದ್ದ ಕಾನ್ಷೀರಾಮ್ ಸಾಹೇಬರು ಇಂತಹ ಅಪರಾತ್ರಿ ಹೊತ್ತಲ್ಲಿ ಮನೆಗೆ ಬಂದಿದ್ದು ಪ್ರಭುದಾಸ್ ದಯಾಳ್ ಮತ್ತು ರಾಮರತಿಯವರಿಗೆ ಬಿಡಿಸಲಾಗದ ಒಗಟಿನಂತಾಗಿತ್ತು. ಏತಕ್ಕೆ ಬಂದಿದ್ದಾರೋ, ಏನು ಸುದ್ದಿ ತಂದಿದ್ದಾರೋ ಎಂಬ ಅಳುಕು ಅವರದಾಗಿತ್ತು.
ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ
ಕಾನ್ಷೀರಾಮ್ ಸಾಹೇಬರು ಆ ಅಪರಾತ್ರಿಯಲ್ಲಿ ಮಾಯಾವತಿಯವರನ್ನು ಹುಡುಕಿಕೊಂಡು ಬರಲು ಕಾರಣವೊಂದಿತ್ತು. ಆ ಕಾರಣವೇನೆಂದರೆ, 1977 ರ ಸೆಪ್ಟೆಂಬರ್ ನಲ್ಲಿ ಸರ್ಕಾರದ ವತಿಯಿಂದ ದೆಹಲಿಯ Constitution club ನಲ್ಲಿ ಮೂರು ದಿನಗಳ ಕಾಲ ‘ಜಾತಿ ವಿನಾಶ’ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವರಾಗಿದ್ದ ಮತ್ತು ಹೆಸರಾಂತ ಸಮಾಜವಾದಿ ನಾಯಕರಾಗಿದ್ದ ರಾಜ್ ನಾರಾಯಣ್ ರವರು ತಮ್ಮ ಭಾಷಣದಲ್ಲಿ ಅವಹೇಳನಕಾರಿಯಾದ ‘ಹರಿಜನ’ ಪದವನ್ನು ಪದೇ ಪದೇ ಬಳಸಿ ಮಾತನಾಡುತ್ತಿದ್ದರು.
ಅಲ್ಲೇ ಹಾಜರಿದ್ದ ಸರ್ಕಾರಿ ಶಿಕ್ಷಕಿ ಮಾಯಾವತಿಯವರು ಎದ್ದು ನಿಂತು ರಾಜ್ ನಾರಾಯಣ್ ರವರನ್ನು ತರಾಟೆಗೆ ತೆಗೆದುಕೊಂಡರು. ಪರಿಶಿಷ್ಟ ಜಾತಿಯವರಿಗೆ ಹರಿಜನರೆಂದು ಕರೆದು ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ. ನಿಮ್ಮ ಘನತೆ ಮತ್ತು ಗೌರವಗಳನ್ನು ಮರೆತು ಬೇಜವಾಬ್ದಾರಿಯಿಂದ ಮಾತನಾಡಿದ್ದೀರಿ. ನೀವು ಈ ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಸಭೆಯಲ್ಲಿ ಕ್ಷಮೆ ಕೇಳಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಘಟನೆಯಿಂದ ಮಾಯಾವತಿಯವರು ಎಲ್ಲರ ಕೇಂದ್ರ ಬಿಂದುವಾದರು.
ಇದೇ ಸಭೆಯಲ್ಲಿದ್ದ ಕೆಲವು ಬಾಂಸೆಫ್ ಕಾರ್ಯಕರ್ತರು ಮಾಯಾವತಿಯವರ ವಿಷಯವನ್ನು ಕಾನ್ಷೀರಾಮ್ ಸಾಹೇಬರಿಗೆ ವಿವರಿಸಿ, ಮಾಯಾವತಿಯವರು ನಮ್ಮ ಸಂಘಟನೆಯಲ್ಲಿದ್ದರೆ ಬಾಂಸೆಫ್ ಗೆ ಹೆಚ್ಚು ಬಲ ಬರುತ್ತದೆ ಎಂದು ತಿಳಿಸಿದರು. ಬಾಂಸೆಫ್ ಕಾರ್ಯಕರ್ತರ ಮಾತಿನಿಂದ ಉತ್ತೇಜಿತರಾದ ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಅರಿವಿಗೆ ಬಾರದಂತೆ ಅವರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಮಾಯಾವತಿಯವರ ಚಿಂತನೆಗಳನ್ನು ಗಮನವಿಟ್ಟು ಆಲಿಸಿದರು. ಅದಕ್ಕಾಗಿ ಮಾಯಾವತಿಯವರನ್ನು ಹುಡುಕಿಕೊಂಡು ಬಂದಿದ್ದರು.
ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು
ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಭಾರತದ ಸಾಮಾಜಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಮಹಾತ್ಮ ಜ್ಯೋತಿಭಾಫುಲೆಯವರಿಂದಿಡಿದು ಬಾಬಾಸಾಹೇಬ್ ಅಂಬೇಡ್ಕರ್ ವರೆಗಿನ ಎಲ್ಲಾ ಮಹಾಪುರುಷರ ಹೋರಾಟವನ್ನು ಮತ್ತು ಅದರ ಮುಂದುವರಿಕೆಯ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿ ಹೇಳಿದರು.
ಇದಾದ ಬಳಿಕ ಮಾಯಾವತಿಯವರ ಜೀವನದ ಆಸೆ ಆಕಾಂಕ್ಷೆಗಳನ್ನು, ದ್ಯೇಯೋದ್ದೇಶಗಳನ್ನು ಕೇಳಿ ತಿಳಿದುಕೊಂಡರು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾನು ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು ಎನ್ನುವುದು ನನ್ನ ಗುರಿ ಎಂದು ಮಾಯಾವತಿಯವರು ತಿಳಿಸಿದರು.
ನಂತರ ಹೊರಡುವ ಸಮಯದಲ್ಲಿ ಅಂತಿಮವಾಗಿ ಒಂದು ನಿರ್ಧಾರಕ್ಕೆ ಬಂದ ಕಾನ್ಷೀರಾಮ್ ಸಾಹೇಬರು ” ನೀನು ಅಂದುಕೊಂಡಂತೆ ಖಂಡಿತವಾಗಿ ನೀನು ಐಎಎಸ್ ಅಧಿಕಾರಿ ಆಗಬಹುದು. ಆ ಅರ್ಹತೆ ನಿನಗಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ನೀನು ಅಂದುಕೊಂಡಂತೆ ನಿನ್ನ ಜನರ ಸೇವೆ ಮಾಡುವುದು ಮಾತ್ರ ನಿಮ್ಮಿಂದ ಸಾಧ್ಯವಾಗುವುದಿಲ್ಲ.
ಕಾರಣ, ಒಬ್ಬ ಸರ್ಕಾರಿ ಅಧಿಕಾರಿಯಾಗಿ ನೀನು ಸರಕಾರ ನಡೆಸುವ ರಾಜಕಾರಿಣಿಗಳ ಇಚ್ಚೆಯಂತೆ ನಡೆಯಬೇಕಾಗುತ್ತದೆ. ಶ್ರೀಮಂತರ ನೋಟುಗಳಿಂದ ಬಡವರ ಓಟುಗಳನ್ನು ಖರೀದಿಸುವುದನ್ನೇ ಪ್ರಜಾಪ್ರಭುತ್ವ ಎಂದು ಪರಿಗಣಿಸಿರುವ ಭಾರತದಲ್ಲಿ ರಾಜಕೀಯ ನಾಯಕರ ಯೋಜನೆಗಳು ಮತ್ತು ಯೋಚನೆಗಳು ಜಾರಿಯಾಗುತ್ತವೆಯೇ ಹೊರತು ಐಎಎಸ್ ಅಧಿಕಾರಿಗಳ ಯೋಜನೆಗಳು ಮತ್ತು ಯೋಚನೆಗಳಲ್ಲ.
ಈಗ ನಮ್ಮ ಸಮಾಜದಲ್ಲಿ ಬೇಕಾದಷ್ಟು ಮಂದಿ ಐಎಎಸ್ ಅಧಿಕಾರಿಗಳಿದ್ದಾರೆ. ಆದರೆ ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸುವಂತಿಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ನಮಗೆ ಬೇಕಾಗಿರುವುದು ಐಎಎಸ್ ಅಧಿಕಾರಿಗಳಲ್ಲ. ರಾಜಕೀಯ ನಾಯಕರು. ಐಎಎಸ್ ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಬಲ್ಲ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಕುಳಿತು ಜನಪರ ಶಾಸನಗಳನ್ನು ರೂಪಿಸಬಲ್ಲ , ಅವುಗಳನ್ನು ಜಾರಿಗೊಳಿಸಬಲ್ಲ ಸಮರ್ಥ ರಾಜಕೀಯ ನಾಯಕರು.
ನಮ್ಮ ಸಮಾಜದಲ್ಲಿ ಇಂಥ ನಾಯಕರ ಕೊರತೆ ಇದೆ. ನೀನು ಆ ಕೊರತೆಯನ್ನು ನೀಗಿಸಬೇಕು. ನಿನ್ನಲ್ಲಿ ಆ ಶಕ್ತಿಯಿದೆ. ನನ್ನ ಮಾತನ್ನು ನೀನು ನಂಬುವುದಾದರೆ, ನಿನ್ನಲ್ಲಿ ಇಂತದ್ದೊಂದು ಬಯಕೆ ಇದ್ದುದಾದರೆ ನಾನು ನಿನ್ನನ್ನು ಅಂಥ ಒಬ್ಬ ಸಮರ್ಥ ನಾಯಕಿಯನ್ನಾಗಿ ತಯಾರು ಮಾಡುತ್ತೇನೆ. ಆಗ ನೂರಾರು ಜನ ಐಎಎಸ್ ಅಧಿಕಾರಿಗಳು ತಮ್ಮ ಫೈಲುಗಳನ್ನು ಹಿಡಿದುಕೊಂಡು ಬಂದು ನಿನ್ನ ಆದೇಶಕ್ಕಾಗಿ ಕಾಯುತ್ತಾರೆ.
ಒಳ್ಳೆಯ ಮತ್ತು ಕೆಟ್ಟ ಕೆಲಸ ಎರಡನ್ನೂ ಮಾಡುವ ಶಕ್ತಿ ಹೊಂದಿರುವ ಐಎಎಸ್ ಅಧಿಕಾರಿಗಳಿಂದ ನೀನು ನಿನ್ನೆಲ್ಲ ಒಳ್ಳೆಯ ಕೆಲಸಗಳನ್ನೇ ಮಾಡಿಸಬಹುದು. ಅದಕ್ಕಾಗಿ ನೀನು ಒಬ್ಬ ಐಎಎಸ್ ಅಧಿಕಾರಿಯಾಗುವ ಬದಲು ಒಬ್ಬ ಸಮರ್ಥ ರಾಜಕೀಯ ನಾಯಕಿಯಾಗುವುದು ಒಳ್ಳೆಯದು. ಯಾವುದಕ್ಕೂ ಯೋಚಿಸಿ ಒಂದು ಸರಿಯಾದ ನಿರ್ಧಾರಕ್ಕೆ ಬಾ… ನೀನು ತೆಗೆದುಕೊಳ್ಳುವ ನಿರ್ಧಾರದಲ್ಲಿ ಬಹುಜನರ ಭವಿಷ್ಯ ಅಡಗಿದೆ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.
ಮುಂದೆ ನಡೆದಿದ್ದೆಲ್ಲವೂ ನಮ್ಮ ಕಣ್ಣ ಮುಂದಿರುವ ಇತಿಹಾಸ. ನುಡಿದಂತೆ ನಡೆದು, ಯಕಶ್ಚಿತ್ ಶಾಲಾ ಶಿಕ್ಷಕಿಯೊಬ್ಬಳನ್ನು ಉತ್ತರಪ್ರದೇಶದಂತಹ ಅತಿದೊಡ್ಡ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿ, ದೇಶವೇ ಕೊಂಡಾಡುವಂತೆ ಅದ್ಬುತ ಕಾರ್ಯಗಳನ್ನು ಸಾಧಿಸಿ ತೋರಿಸಿದ ಪವಾಡ ಪುರುಷ ಕಾನ್ಷೀರಾಮ್. ಅಂದು ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ. ಕಾರಣ, ಮಹಾಜ್ಞಾನಿಗಳ ಮಾತುಗಳು ಸುಳ್ಳಾಗಲು ಸಾದ್ಯವೇ ಇಲ್ಲ..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
ಮುಖ್ಯಾಂಶಗಳು
ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ
ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ
ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್
ಸುದ್ದಿದಿನ,ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖೆ ಎದುರಿಸುತ್ತಿರುವವರು
ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.
ಕಚೇರಿಯಲ್ಲಿ ತಪಾಸಣೆ
ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.
ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.
ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.
ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.
ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.
ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.
ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.
ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.
ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ
ದಾವಣಗೆರೆ ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಮುದ್ರಿಸಿ ಬಿಎಲ್ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.
ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ
ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ
ಜೂನ್ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ಕಾರ್ಯದರ್ಶಿ ಮಮತ ಹಸ ಗೌಡರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಪಾಲಿಕೆ ಆಯುಕ್ತ ಮಹಾಂತೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಸಂಜೆ ನಡೆದಿದೆ.
ಚನ್ನಗಿರಿ ತಾಲೂಕಿನ ಕಂಚುಗಾರನಹಳ್ಳಿಯ ಸಿದ್ದೇಶ್ ಗಾಯಗೊಂಡ ಯುವಕರಾಗಿದ್ದು, ಚಾಕು ಇರಿತದಿಂದ ಅವರ ಬಲಗೈಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ಸಿದ್ದೇಶ್ ಮೈಸೂರಿನ ಫಾರಂ ಹೌಸ್ನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ದಾಗಿನಕಟ್ಟೆ ಗ್ರಾಮದ ಲೀಲಾವತಿ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಯುವತಿಯ ಕುಟುಂಬದ ವಿರೋಧವಿದ್ದರೂ, ಜುಲೈ 1ರಂದು ಇಬ್ಬರೂ ವಿವಾಹವಾಗಿದ್ದರು.
ಇದಕ್ಕೂ ಮುನ್ನ, ಜೂನ್ 30ರಂದು ಲೀಲಾವತಿ ನಾಪತ್ತೆಯಾಗಿರುವ ಕುರಿತು ಅವರ ಪೋಷಕರು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜೀವಭಯ ಇರುವುದಾಗಿ ತಿಳಿಸಿ ದಂಪತಿ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ರಕ್ಷಣೆ ಕೋರಿದ್ದರು. ಅವರ ಸೂಚನೆಯಂತೆ ವಕೀಲರೊಂದಿಗೆ ಬಸವಾಪಟ್ಟಣ ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ, ಯುವತಿಯ ಸಂಬಂಧಿಕರು ಸಿದ್ದೇಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸಿದ್ದೇಶ್ ಅವರ ಬಲಗೈಗೆ ತೀವ್ರ ಗಾಯಗಳಾಗಿದ್ದು, ಪತಿಯನ್ನು ರಕ್ಷಿಸಲು ಮುಂದಾದ ಲೀಲಾವತಿ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಚಾಕು ದಾಳಿ ನಡೆಸಿದ ಆರೋಪದ ಮೇಲೆ ನಾಗರಾಜನನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಬಳಿಕ ಮಾತನಾಡಿದ ಲೀಲಾವತಿ, “ನನಗೆ ಮತ್ತು ನನ್ನ ಪತಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು. ನಮ್ಮಿಬ್ಬರ ಕೊಲೆಗೆ ಯತ್ನಿಸಿದ ನಾಗರಾಜ ಹಾಗೂ ನನ್ನ ಅಣ್ಣ ಮಂಜುನಾಥ ವಿರುದ್ಧವೂ ದೂರು ದಾಖಲಿಸುತ್ತೇನೆ” ಎಂದು ತಿಳಿಸಿದ್ದಾರೆ.
ಈ ಸಂಬಂಧ ನಾಗರಾಜ ಸೇರಿದಂತೆ ಯುವತಿಯ ಕಡೆಯವರ ವಿರುದ್ಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಸವಾಪಟ್ಟಣದ ಠಾಣೆಯಲ್ಲಿ ಪ್ರೀತಿಸಿ ಮದುವೆಯಾದ ಯುವಕನ ಮೇಲೆ ಮಾರಣಾಂತಿಕ ದಾಳಿ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಎಚ್.ಟಿ.ಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರೀತಿಸಿ ವಿವಾಹವಾಗಿದ್ದಕ್ಕೆ ಯುವಕ-ಯುವತಿ ಬಗ್ಗೆ ಯುವತಿ ಕುಟುಂಬಸ್ಥರ ವಿರೋಧವಿತ್ತು. ಪ್ರೀತಿಸಿ ಮದುವೆಯಾ ಗಿದ್ದ ಯುವಕ-ಯುವತಿಯಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದ ವೇಳೆ ಚಾಕುವಿನಿಂದ ದಾಳಿ ಮಾಡಲಾಗಿದೆ ಎಂದರು.
ಚಾಕುವಿನಿಂದ ದಾಳಿಗೊಳಗಾದ ಯುವಕನನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಗಿರಿ ತಾ. ಕಂಚುಗಾರನಹಳ್ಳಿ ಗ್ರಾಮದಲ್ಲಿ ಒಂದು ಕೆಎಸ್ಆರ್ಪಿ
ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ದಾಳಿ ಮಾಡಿದವರಮೇಲೆದೂರು ನೀಡದಂತೆ ಕೆಲ ಪೊಲೀಸ್ ಸಿಬ್ಬಂದಿ ಒತ್ತಡ ಹೇರಿದ್ದಾರೆಂಬ ಆರೋಪವಿದೆ. ಈ ಬಗ್ಗೆ ಚನ್ನಗಿರಿ ಡಿವೈಎಸ್ಪಿಗೆ ತನಿಖೆ ನಡೆಸುವಂತೆ ಸೂಚನೆ ನೀಡುತ್ತೇವೆ ಎಂದು ಎಸ್ಪಿ ಡಾ.ಶೇಖರ್ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ7 days agoದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್ಒಗಳ ಭೇಟಿ ಪ್ರಾರಂಭ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ3 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ

