Connect with us

ದಿನದ ಸುದ್ದಿ

ಪಾತಾಳ ಮುಟ್ಟಿರುವ ಆರ್ಥಿಕ ಸ್ಥಿತಿ ಮೇಲೆತ್ತುವ ಇಚ್ಛಾಶಕ್ತಿ ಕೇಂದ್ರ ವಿತ್ತ ಸಚಿವರಿಗಿಲ್ಲ : ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು : ಕಳೆದ ಬಾರಿಯ ಕೇಂದ್ರದ ಬಜೆಟ್ ಗಾತ್ರ ರೂ.27 ಲಕ್ಷ ಕೋಟಿಗಳಿತ್ತು, ಈ ಬಾರಿ ರೂ.30 ಲಕ್ಷದ 42 ಸಾವಿರ ಕೋಟಿಗೆ ಏರಿಕೆ ಕಂಡಿದೆ. ನೇರ ತೆರಿಗೆ ಸಂಗ್ರಹ ಕಡಿಮೆಯಾದ ಕಾರಣ ಕಳೆದ ಬಾರಿ ಸುಮಾರು ಎರಡು ಲಕ್ಷ ಕೋಟಿ ಹಣ ಕೊರತೆಯಾಗಿತ್ತು. ಕೇಲವ ರೂ.25 ಲಕ್ಷ ಕೋಟಿಗಳಷ್ಟು ಮಾತ್ರ ಖರ್ಚು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರುು.

ಶನಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಮಂಡಿಸಿದ ಬಜೆಟ್ ಉದ್ದೇಶಿಸಿ ಮಾತನಾಡಿದ ಅವರು, ಎರಡನೇ ಬಾರಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಾಗ ದೇಶದ ಆದಾಯವನ್ನು 5 ಟ್ರಿಲಿಯನ್ ಡಾಲರ್‌ಗೆ ಏರಿಸುವುದಾಗಿ ಭರವಸೆ ನೀಡಿದ್ದರು. ಇಂದು ದೇಶದ ಜಿಡಿಪಿ 2.5 ರಷ್ಟಿದೆ, ಈ ಪರಿಸ್ಥಿತಿಯಲ್ಲಿ ಮೋದಿಯವರ ಭರವಸೆ ಈಡೇರುವುದು ಕನಸಿನ ಮಾತು.

ಪ್ರಸಕ್ತ ಬಜೆಟ್‌ನಲ್ಲಿ ದೇಶದ ಜಿಡಿಪಿಯನ್ನು 6% ಗೆ ಏರಿಸುವ ಕುರಿತು ವ್ಯಾಖ್ಯಾನಿಸಲಾಗಿದ್ದರೂ, ಅದರ ಈಡೇರಿಕೆಗೆ ಬೇಕಾದಂತಹ ಪರಿಣಾಮಕಾರಿ ಕಾರ್ಯಸೂಚಿಗಳೇನು ಕಂಡುಬರುತ್ತಿಲ್ಲ. ಹಾಗಾಗಿ ಇದೂ ಕೂಡ ಭರವಸೆಯಾಗಿಯೇ ಉಳಿಯಲಿದೆ. ಪಾತಾಳ ಮುಟ್ಟಿರುವ ಆರ್ಥಿಕ ಸ್ಥಿತಿಯನ್ನು ಮೇಲೆತ್ತಲು ಬೇಕಾದ ಇಚ್ಛಾಶಕ್ತಿ ಕೇಂದ್ರ ವಿತ್ತ ಸಚಿವರಲ್ಲಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಣಕಾಸು ಸಚಿವರು ಕೃಷಿ ಕ್ಷೇತ್ರದ ಅಭಿವೃದ್ದಿಗೆ 16 ಅಂಶಗಳ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಇದರಲ್ಲಿ 9 ಅಂಶಗಳು ರೈತರ ಜಮೀನನ್ನು ಖಾಸಗಿ ಕಂಪೆನಿಗಳ ಸುಪರ್ದಿಗೆ ಒಳಪಡಿಸುವಂತಿವೆ. ಉದಾಹರಣೆಗೆ ‘ಕೃಷಿ ಉಡಾನ್’ ಯೋಜನೆ ಸಣ್ಣಪುಟ್ಟ ರೈತರಿಗಿಂತ ಕಾರ್ಪೊರೇಟ್ ಕಂಪೆನಿಗಳಿಗೆ ಹೆಚ್ಚು ಲಾಭದಾಯಕವಾಗುವಂತಿದೆ. 16 ಅಂಶಗಳ ಕಾರ್ಯಕ್ರಮಗಳಲ್ಲಿ 9 ಅಂಶಗಳು ‘ಕಾರ್ಪೊರೇಟ್ ಫಾರ್ಮಿಂಗ್’ ಕಡೆಗೆ ಒತ್ತು ನೀಡುತ್ತಿವೆ. ಒಟ್ಟಾರೆ ಕೃಷಿಯನ್ನು ಖಾಸಗೀಕರಣಗೊಳಿಸುವ ಸರ್ಕಾರದ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಕಿಡಿಕಾರಿದರು.

16 ಅಂಶಗಳ ಬಹುತೇಕ ಕಾರ್ಯಕ್ರಮಗಳು ಸಾಮಾನ್ಯ ರೈತರಿಗೆ ಸಂಬಂಧಿಸಿದ್ದಲ್ಲ. 162 MT ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್‌ಗಳ ಮ್ಯಾಪಿಂಗ್ ಮತ್ತು ಜಿಯೊಟ್ಯಾಗಿಂಗ್ ಇದರಿಂದ ಬಡರೈತನಿಗೆ ಏನು ಲಾಭ? ರೆಫ್ರಿಜರೇಟೇಡ್ ರೈಲುಗಳು, ಕೃಷಿ ಉಡಾನ್ ವಿಮಾನಗಳು ಯಾವ ರೈತರ ಅನುಕೂಲಕ್ಕಾಗಿ ತಿಳಿಯುತ್ತಿಲ್ಲ. 2022ರ ವೇಳೆಗೆ ದೇಶದ ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಪ್ರಧಾನಿ ಹೇಳಿದ್ದರು. ಕಳೆದ ಹಣಕಾಸು ವರ್ಷದಲ್ಲಿ ಕೃಷಿ ಕ್ಷೇತ್ರ ಶೇಕಡಾ 2.5ರಷ್ಟು ಬೆಳವಣಿಗೆ ಕಂಡಿದೆ. ರೈತರ ಆದಾಯ ದುಪ್ಪಟ್ಟು ಆಗಬೇಕಾದರೆ ಕೃಷಿ ಕ್ಷೇತ್ರ ಕನಿಷ್ಠ 10ರಿಂದ 15% ದರದಲ್ಲಿ ಬೆಳವಣಿಗೆ ಆಗಬೇಕು. ಸದ್ಯಕ್ಕೆ ಇದೂ ಕೂಡ ಅಸಾಧ್ಯದ ಮಾತು ಎಂದು ನುಡಿದರು.

ಕೇಂದ್ರ ಪ್ರಸ್ತಾಪಿಸಿರುವ 3 ಮಾದರಿ ಕಾಯ್ದೆಗಳಾದ ಭೂಮಿ ಗುತ್ತಿಗೆ ಕಾಯ್ದೆ, ಎಪಿಎಂಸಿ ಕಾಯ್ದೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಹೊಸ ಮಾರ್ಕೆಟಿಂಗ್ ಕಾಯ್ದೆ ಮತ್ತು ಕಾಂಟ್ರಾಕ್ಟ್ ಫಾರ್ಮಿಂಗ್ (ಕಾರ್ಪೋರೇಟ್ ಫಾರ್ಮಿಂಗ್) ಕಾಯ್ದೆಗಳನ್ನು ರಾಜ್ಯ ಸರ್ಕಾರಗಳು ಒಪ್ಪಿಕೊಳ್ಳಲೇಬೇಕು ಎಂದು ಕೇಂದ್ರ ಹೇಳುತ್ತಿದೆ.

ಇದು ತುಂಬಾ ಅಪಾಯಕಾರಿ. ಇಡೀ ದೇಶದ ರೈತರು ಸಾಲದ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ನರಳಾಡುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕೆಂಬುದು ನಮ್ಮದು ಹಳೆಯ ಬೇಡಿಕೆ. ಕಳೆದ ಆರು ವರ್ಷಗಳಿಂದ ಇದನ್ನು ಕೇಳುತ್ತಾ ಬಂದಿದ್ದೇವೆ. ಈ ಬಜೆಟ್ ನಲ್ಲಿಯೂ ಆ ಬಗ್ಗೆ ಉತ್ತರ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಬಾರಿಯ ಬಜೆಟ್‌ನಲ್ಲಿ ಸಾರ್ವಜನಿಕ ವಲಯಗಳಿಗೆ ಒಟ್ಟು ಬಜೆಟ್ ಗಾತ್ರದ 0.90% ರಷ್ಟು ಅನುದಾನ ವಿನಿಯೋಗಿಸಲಾಗಿತ್ತು, ಈ ಬಾರಿ ಅದು 0.96% ಗೆ ಏರಿಕೆ ಕಂಡಿದೆ. ಗ್ರಾಮೀಣಾಭಿವೃದ್ಧಿಗೆ ಕಳೆದ ಬಾರಿ 1.21% ಅನುದಾನ ಮೀಸಲಿತ್ತು, ಈ ಬಾರಿ 1.23% ಗೆ ಹೆಚ್ಚಿಸಲಾಗಿದೆ.

ಈ ಬಜೆಟ್‌ನಲ್ಲಿ ಕೃಷಿಗೆ ಅತ್ಯಧಿಕ‌ ಮಹತ್ವ ನೀಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದರೂ ಕೂಡ ಕೃಷಿಗೆ ಒಟ್ಟು ಬಜೆಟ್ ಅನುದಾನದಲ್ಲಿ ಮೀಸಲಾದ ಪಾಲು ಕೇವಲ 1.50% ಮಾತ್ರ. ಕಳೆದ ಬಾರಿ ಇದು 1.46% ಇತ್ತು. ಈ ಬಾರಿಯೂ ಕೃಷಿ ಕಡೆಗಣಿಸಲ್ಪಟ್ಟಿರುವುದು ದುರದೃಷ್ಟಕರ.

ಗ್ರಾಮೀಣ ಭಾಗದ ನಿರುದ್ಯೋಗ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನರೇಗಾ ಯೋಜನೆಗೆ ರೂ.10 ಸಾವಿರ ಕೋಟಿ ಹಣ ಕಡಿತಗೊಳಿಸಲಾಗಿದೆ. ಕಳೆದ ವರ್ಷ ರೂ.71,000 ಕೋಟಿ ನೀಡಿದ್ದರೆ, ಈ ಬಾರಿ ರೂ.61,000 ಕೋಟಿ ನಿಗದಿಗೊಳಿಸಲಾಗಿದೆ. ಇದರಿಂದ ಗ್ರಾಮೀಣ ಭಾರತ ಇನ್ನಷ್ಟು ಸೊರಗಿಹೋಗಲಿದೆ ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದ ಉಪನಗರ ರೈಲು ಯೋಜನೆ ಬಗ್ಗೆ ಕಳೆದ ಬಜೆಟ್‌ನಲ್ಲಿಯೇ ಪ್ರಸ್ತಾಪವಿದ್ದರೂ ಈವರೆಗೂ ಒಂದು ಸ್ಟೇಷನ್ ಆಗಲಿ, ಹಳಿ ನಿರ್ಮಾಣ ಕಾರ್ಯವಾಗಲಿ ಆಗಿಲ್ಲ. ಮತ್ತೆ ಈ ಬಾರಿಯೂ ಅದೇ ರಾಗ, ಅದೇ ಹಾಡು. ಈ ಬಜೆಟ್‌ನಲ್ಲಿ ಕೂಡ ಅನುದಾನವನ್ನು ಮೀಸಲಿಟ್ಟಿಲ್ಲ ಜೊತೆಗೆ ಅನುದಾನದ ಬಗ್ಗೆ ಸ್ಪಷ್ಟತೆ ಕೂಡ ಇಲ್ಲ.

ದೇಶದ ಅಭಿವೃದ್ಧಿಯ ದರ 42 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ತೆರಿಗೆ ಸಂಗ್ರಹ ಎರಡು ಲಕ್ಷ ಕೋಟಿ ರೂಪಾಯಿಯಷ್ಟು ಕಡಿಮೆಯಾಗಿದೆ. ಕಾರ್ಪೋರೇಟ್ ತೆರಿಗೆ ಶೇಕಡಾ 15ರಷ್ಟು ಕಡಿಮೆಯಾಗಿದೆ. ಸಂಪನ್ಮೂಲ ಸಂಗ್ರಹದ ಯಾವ ಹೊಸ ಮಾರ್ಗಗಳ ಬಗ್ಗೆಯೂ ಬಜೆಟ್ ನಲ್ಲಿಯೂ ಪ್ರಸ್ತಾಪ ಇಲ್ಲ ಎಂದರು.

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಸಕ್ತ ಬಜೆಟ್‌ನಲ್ಲಿ ಎಲ್‌ಐಸಿ ಶೇರುಗಳನ್ನು ಸಹ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇದೊಂದು ರೀತಿ ಕುತ್ತಿಗೆಯಲ್ಲಿರುವ ತಾಳಿ ಮಾರಾಟಕ್ಕಿಟ್ಟ ಪರಿಸ್ಥಿತಿ. ದೇಶದ ಸದ್ಯದ ಆರ್ಥಿಕ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದುಕ್ಕೆ ಸರ್ಕಾರದ ಈ ನಿರ್ಧಾರ ಸಾಕ್ಷಿ.

ವಿತ್ತೀಯ ಶಿಸ್ತು ಕಳೆದ ಬಾರಿ ಬಜೆಟ್‌ನಲ್ಲಿ 3.3 ಎಂದು ನಿಗದಿಪಡಿಸಲಾಗಿತ್ತು. ವರ್ಷಾಂತ್ಯದ ವೇಳೆಗೆ ಇದು 3.6 ತಲುಪಿತ್ತು. ಬರುವ ವರ್ಷಕ್ಕೆ ಸರ್ಕಾರವೇ 3.5 ಎಂದು ಗುರಿ ಇಟ್ಟುಕೊಂಡಿದೆ.‌ ಅಂದರೆ ಈಗಿರುವ ಸಾಲದ ಜೊತೆಗೆ ಇನ್ನಷ್ಟು ಸಾಲ ಮಾಡಿ ದೇಶವನ್ನು ದಿವಾಳಿ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದು ಕೆಂಡಾಮಂಡಲರಾದರು.

ಒಟ್ಟಿನಲ್ಲಿ ಇದು ದೇಶದ ಮುನ್ನಡೆಗೆ ಬೇಕಾದ ಯಾವ ಮುನ್ನೋಟವೂ ಇಲ್ಲದ, ಭವಿಷ್ಯದ ಮೇಲಿನ ಭರವಸೆಯನ್ನು ಕಳೆದುಕೊಂಡಿರುವ ಸಾಮಾನ್ಯ ಜನರು, ರೈತರು, ಯುವಜನರು, ಉದ್ಯಮಿಗಳು ಹೀಗೆ ಯಾವ ಜನ ಸಮುದಾಯದಲ್ಲಿಯೂ ವಿಶ್ವಾಸ-ಭರವಸೆಯನ್ನು ಹುಟ್ಟಿಸದ ನಿರಾಶದಾಯಕ ಬಜೆಟ್ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending