ದಿನದ ಸುದ್ದಿ
ಕೇಂದ್ರ ಬಜೆಟ್ | ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..!
- ವಿವೇಕಾನಂದ. ಹೆಚ್. ಕೆ
ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ.
ಭಾರತ ಸರ್ಕಾರದ ಬಳಿ ಇರುವ ಚಿನ್ನದ ಸಂಗ್ರಹ ಸುಮಾರು 600 ಟನ್.ಅಮೆರಿಕ ಸರ್ಕಾರದ ಬಳಿ ಇರುವ ಚಿನ್ನದ ಸಂಗ್ರಹ ಸುಮಾರು 6000 ಟನ್.
ಭಾರತ ಇಲ್ಲಿಯವರೆಗೆ ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಗೆದ್ದ ಒಟ್ಟು ಪದಕಗಳು ಸುಮಾರು 28.ಅಮೆರಿಕ ಗೆದ್ದ ಒಟ್ಟು ಪದಕಗಳು ಸುಮಾರು 2250.
ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 30 ಲಕ್ಷ ಕೋಟಿ.ಅಮೆರಿಕದ ಬಜೆಟ್ ಗಾತ್ರ ಸುಮಾರು 375 ಲಕ್ಷ ಕೋಟಿ.ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆ ಚೀನಾದ ಬಜೆಟ್ ಸುಮಾರು 100 ಲಕ್ಷ ಕೋಟಿ.ಅಮೆರಿಕದ ರಕ್ಷಣಾ ಬಜೆಟ್ ಸುಮಾರು 150 ಲಕ್ಷ ಕೋಟಿ.ಭಾರತದ ರಕ್ಷಣಾ ಬಜೆಟ್ ಸುಮಾರು 6/8 ಲಕ್ಷ ಕೋಟಿ.
ಭಾರತದ ಜನಸಂಖ್ಯೆ ಸುಮಾರು 128 ಕೋಟಿ.
ಅಮೆರಿಕದ ಜನಸಂಖ್ಯೆ ಸುಮಾರು 32 ಕೋಟಿ.
ವಿಸ್ತೀರ್ಣದಲ್ಲಿಯೂ ಅಮೆರಿಕ ಭಾರತಕ್ಕಿಂತ ಬಹಳ ದೊಡ್ಡದಾಗಿದೆ.ತಲಾ ಆದಾಯದ ವ್ಯತ್ಯಾಸವಂತೂ ಅಜಗಜಾಂತರವಿದೆ.ಭಾರತದ ನಿಜವಾದ ಆದಾಯ 22 ಲಕ್ಷ ಕೋಟಿಗಳು ಮಾತ್ರ. ಉಳಿದ 8 ಲಕ್ಷ ಸಾಲ ಮತ್ತು ಇತರ ಮೂಲಗಳು.ಅಂದರೆ ನಮ್ಮ ಈಗಿನ ಸ್ಥಿತಿ ಮತ್ತು ಸಾಗಬೇಕಾದ ಹಾದಿಯ ಒಂದು ಕಲ್ಪನೆ ಮಾಡಿಕೊಳ್ಳಿ.
ಇಲ್ಲಿ ಇನ್ನೂ ಒಂದು ಮುಖ್ಯ ವಿಷಯವಿದೆ. ಅಮೆರಿಕ ಬಜೆಟ್ ನ ಬಹುಪಾಲು ಸದುಪಯೋಗವಾಗುತ್ತದೆ. ಆದರೆ ನಮ್ಮ ದೇಶದಲ್ಲಿ ಭ್ರಷ್ಟಾಚಾರ ತುಂಬಾ ಇರುವುದರಿಂದ ಇರುವ ಹಣದ ಬಹುಪಾಲು ದುರುಪಯೋಗವಾಗುತ್ತದೆ ಅಥವಾ ವ್ಯರ್ಥವಾಗುತ್ತದೆ. ಇದು ಮತ್ತೊಂದು ಹೊಡೆತ.
ಬಜೆಟ್ ಗಳು ಮತ್ತು ನಮ್ಮ ದೇಶದ ಅಭಿವೃದ್ಧಿ
ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಸ್ವಾತಂತ್ರ್ಯ ನಂತರ ಇಲ್ಲಿಯವರೆಗೂ ಸುಮಾರು 70 ಕ್ಕಿಂತ ಹೆಚ್ಚು ವಾರ್ಷಿಕ ಬಜೆಟ್ ಗಳನ್ನು ಮಂಡಿಸಿವೆ. ಪಂಚವಾರ್ಷಿಕ ಯೋಜನೆಗಳು ಮತ್ತು ಅದನ್ನು ಮೇಲ್ವಿಚಾರಣೆ ಮಾಡುವ ನೀತಿ ಆಯೋಗ ಸಹ ಇದೆ. ಅಪಾರ ಪ್ರಮಾಣದ ಎಲ್ಲಾ ದರ್ಜೆಯ ಆಡಳಿತ ಯಂತ್ರ ಸಹ ಕೆಲಸ ಮಾಡುತ್ತಲೇ ಇದೆ.
ಯಾವ ಸರ್ಕಾರಗಳು ಸಹ ಸಾಮಾನ್ಯವಾಗಿ ಜನರಿಗೆ ತೊಂದರೆ ಕೊಡುವ ಅಥವಾ ಜನರನ್ನು ನಾಶ ಮಾಡುವ ಯೋಜನೆಗಳನ್ನು ರೂಪಿಸುವುದಿಲ್ಲ. ಬಹಳ ಜನರಿಗೆ ಒಳ್ಳೆಯದಾಗಲಿ ಎಂಬ ಆಶಯವನ್ನೇ ಹೊಂದಿರುತ್ತವೆ.
1950 ಮತ್ತು 2020 ರ ನಡುವೆ ಭಾರತದ ಅಭಿವೃದ್ಧಿ ಸುಮಾರಾಗಿ ಆಗಿದೆ. ವಿಶ್ವ ಸಮುದಾಯ ಕೂಡಾ ತಂತ್ರಜ್ಞಾನದ ಸಹಾಯದಿಂದ ಪ್ರಗತಿಯ ಪಥದಲ್ಲಿದೆ.
ಭಾರತದ ಮಟ್ಟಿಗೆ ಅಭಿವೃದ್ಧಿ ಸಮಾನಾಂತರವಾಗಿಲ್ಲ ಮತ್ತು ಸಮಾಧಾನಕರವಾಗಿಲ್ಲ. ದೇಶದ ಶೇಕಡಾ 50% ಗೂ ಹೆಚ್ಚು ಜನ ತಾವು ಇಷ್ಟಪಟ್ಟ ದೈನಂದಿನ ಊಟ ಬಟ್ಟೆ ವಾಸ ಮಕ್ಕಳ ಯೋಗಕ್ಷೇಮ ಮತ್ತು ಸಾಧಾರಣ ಆರೋಗ್ಯ ವ್ಯವಸ್ಥೆ ಮಾಡಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ.
ಇದನ್ನು ನಾವು ಪಕ್ಷಾತೀತವಾಗಿ ಮತ್ತು ನಿಷ್ಪಕ್ಷಪಾತವಾಗಿ ಭಾರತದ ನಿಜವಾದ ಹಿತಾಸಕ್ತಿಯಿಂದ ನೋಡಬೇಕು. ಯಾವುದೋ ಪಕ್ಷದ ವಕ್ತಾರರಂತೆ ಒಬ್ಬರಿಗೊಬ್ಬರು ಆಪಾದನೆ ಮಾಡುತ್ತಾ ಕೆಸರೆರಚಾಟ ಮಾಡಿದರೆ ಸತ್ಯ ಮತ್ತು ವಾಸ್ತವ ಮರೆಯಾಗಿ ಕೇವಲ ಒಣ ಚರ್ಚೆ ಮತ್ತು ಅಂಕಿಅಂಶಗಳು ಮಹತ್ವ ಪಡೆಯುತ್ತವೆ.
ಸರ್ಕಾರ ಘೋಷಿಸುವ ಯಾವುದೇ ಯೋಜನೆಗಳು ಜಾರಿಯಾಗುವುದು ನಮ್ಮ ಸರ್ಕಾರಿ ಆಡಳಿತ ಯಂತ್ರದ ಮುಖಾಂತರ. ಅದು ಈಗಾಗಲೇ ಕಿಲುಬು ಹಿಡಿದಿದೆ. ಅದನ್ನು ಸರಿ ಮಾಡದೆ ಯಾವ ಯೋಜನೆ ಘೋಷಿಸಿದರು ಸಂಪೂರ್ಣ ಉಪಯೋಗ ಆಗುವುದಿಲ್ಲ. ಅದನ್ನು ಸರಿ ದಾರಿಗೆ ತರಲು ರಾಜಕಾರಣಿಗಳು ಹೆಚ್ಚಿನ ಮಹತ್ವ ನೀಡುತ್ತಿಲ್ಲ.
ಇಲ್ಲಿ ಇನ್ನೊಂದು ಆಶ್ಚರ್ಯಕರ ವಿಷಯವಿದೆ. ಆದಾಯ ತೆರಿಗೆ ವಿನಾಯಿತಿ, ವಸ್ತು ಮತ್ತು ಸೇವೆಗಳ ತೆರಿಗೆ ಹೆಚ್ಚಳ, ಸರ್ಕಾರಿ ನೌಕರರ ಸಂಬಳ ಹೆಚ್ಚಳ ಇನ್ನೂ ಮುಂತಾದ ಯೋಜನೆಗಳು ಚಾಚೂ ತಪ್ಪದೆ ಅಥವಾ ಅದಕ್ಕಿಂತ ಹೆಚ್ಚಾಗಿಯೇ ಸಂಪೂರ್ಣ ಜಾರಿಯಾಗುತ್ತದೆ. ಕಾರಣ ಈ ಯೋಜನೆಗಳು ಈಗಾಗಲೇ ವಿದ್ಯಾವಂತರಾಗಿರುವ ಮತ್ತು ವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಿರುವ ಜನಗಳು ಇವುಗಳನ್ನು ಸ್ವತಃ ಅಥವಾ ಮಧ್ಯವರ್ತಿಗಳ ಮುಖಾಂತರ ಜಾರಿಯಾದ ಮಧ್ಯರಾತ್ರಿಯಿಂದಲೇ ಲಾಭ ಪಡೆದುಕೊಳ್ಳುತ್ತಾರೆ.
ಆದರೆ, ಇನ್ನೂ ಕೆಲವು ಯೋಜನೆಗಳು ಇವೆ. ಉದಾಹರಣೆಗೆ ಗರೀಬೀ ಹಠವೋ, ನರೇಗಾ, ಆಹಾರ ಭದ್ರತೆ, ಬೇಟಿ ಬಚಾವೋ ಬೇಟಿ ಪಡಾವೋ , ಸ್ವಚ್ಛ ಭಾರತ್, ಆಯುಷ್ಮಾನ್ ಮುಂತಾದ ಯೋಜನೆಗಳು ಅದರ ನಿಜ ರೂಪದಲ್ಲಿ ಜನರಿಗೆ ತಲುಪುವುದು ತುಂಬಾ ಕಷ್ಟವಿದೆ.
ಜನರಲ್ಲಿ ಇರುವ ಅಜ್ಞಾನ ಬಡತನ ದಾಖಲೆ ಮತ್ತು ಮಾಹಿತಿಯ ಕೊರತೆ, ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ, ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷತನ ಮತ್ತು ಸೋಮಾರಿತನ, ಅಸೂಯೆ ಮುಂತಾದ ಕಾರಣಗಳು ಇವುಗಳನ್ನು ಜಾರಿಯಾಗಲು ಬಿಡುವುದಿಲ್ಲ.
ಪಾರ್ಲಿಮೆಂಟ್ ಅಥವಾ ವಿಧಾನಸೌದದಲ್ಲಿ ಅಂಕಿಅಂಶಗಳ ಸರ್ಕಸ್ ಮಾಡುತ್ತಾ ಬಜೆಟ್ ಮಂಡಿಸುವುದು ಮತ್ತು ಅದರ ಪರ ವಿರೋಧದ ಚರ್ಚೆಗಳಿಗಿಂತ,ಅದರ ಅನುಷ್ಠಾನ ಮತ್ತು ವಾಸ್ತವ ಫಲಿತಾಂಶಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ ನಿಜವಾದ ಮತ್ತು ಸಮಾನವಾದ ಅಭಿವೃದ್ಧಿ ಸಾಧ್ಯ. ಇಲ್ಲದಿದ್ದರೆ ಪ್ರತಿ ಸರ್ಕಾರಗಳ ಪ್ರತಿ ಬಜೆಟ್ ಕೇವಲ ಸಾಂಕೇತಿಕ ಶಾಸ್ತ್ರವಾಗುತ್ತದೆ. ಚುನಾವಣಾ ರಾಜಕೀಯದ ನಾಟಕಗಳಾಗುತ್ತವೆ. ಇದು ಎಲ್ಲಾ ಪಕ್ಷಗಳ ಎಲ್ಲಾ ಸರ್ಕಾರಗಳಿಗೂ ಸಮನಾಗಿ ಅನ್ವಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್ಲೈನ್ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
Fake Doctors in Karnataka: ಜೀವದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರು; ದಾಳಿ, ದಂಡ, ಕೇಸ್ಗಳ ನಡುವೆಯೂ ಮುಂದುವರಿದ ಜಾಲ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧ ಪ್ರಕರಣಗಳು ಚರ್ಚೆಯಲ್ಲಿರುವ ನಡುವೆಯೇ, ವೈದ್ಯಕೀಯ ಕ್ಷೇತ್ರದ ಮತ್ತೊಂದು ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಅನಧಿಕೃತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರ ಹಾವಳಿ ಮುಂದುವರಿದಿದ್ದು, ಕಳೆದ ಮೂರು ವರ್ಷಗಳಲ್ಲಿ ಆರೋಗ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರಿಗೆ ಸೇರಿದ ಅನಧಿಕೃತ ಕ್ಲಿನಿಕ್ಗಳನ್ನು ಮುಚ್ಚಿಸಲಾಗಿದ್ದು, ಹಲವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಕೋನಸಾಗರದಲ್ಲಿ ನಕಲಿ ವೈದ್ಯೆಯೊಬ್ಬರು ನೀಡಿದ ಚುಚ್ಚುಮದ್ದಿನ ಬಳಿಕ ರೈತರೊಬ್ಬರು ಮೃತಪಟ್ಟಿರುವ ಆರೋಪದ ಪ್ರಕರಣ ನಕಲಿ ವೈದ್ಯರ ಜಾಲದ ಅಪಾಯಕಾರಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಅನಧಿಕೃತವಾಗಿ ಚಿಕಿತ್ಸೆ ನೀಡುವುದು ಮಾತ್ರವಲ್ಲದೆ, ಕೆಲವರು ಮನೆಯಲ್ಲೇ ಕ್ಲಿನಿಕ್ಗಳನ್ನು ನಡೆಸುತ್ತಿರುವುದು ಹಾಗೂ ಪ್ರಯೋಗಾಲಯಗಳನ್ನೂ ನಿರ್ವಹಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಹೈಲೈಟ್ಸ್: ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ತೀವ್ರ |
|
http://Visit : www.suddidina.com
582 ಪ್ರಕರಣ, 87 ಮಂದಿಗೆ ದಂಡ
ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಮೂರು ವರ್ಷಗಳ ಅವಧಿಯಲ್ಲಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರ ಕ್ಲಿನಿಕ್ಗಳನ್ನು ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 87 ನಕಲಿ ವೈದ್ಯರಿಗೆ ದಂಡ ವಿಧಿಸಲಾಗಿದ್ದು, 128 ಮಂದಿ ಇನ್ನೂ ದಂಡ ಪಾವತಿಸಿಲ್ಲ. ಇದೇ ಅವಧಿಯಲ್ಲಿ 29 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿವೆ.
ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ ವ್ಯಾಪ್ತಿಯಲ್ಲಿಯೂ ನೋಂದಣಿ ಅಥವಾ ಅಗತ್ಯ ಪರವಾನಗಿ ಇಲ್ಲದೆ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ದಾಳಿ ನಡೆಸಲಾಗಿದೆ.
ಜಿಲ್ಲೆಗಳಲ್ಲಿ ಸಕ್ರಿಯವಾಗಿರುವ ಜಾಲ
ನಕಲಿ ವೈದ್ಯರನ್ನು ಪತ್ತೆಹಚ್ಚಲು ರಾಜ್ಯ ಸರಕಾರ 2017ರಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ವಿಶೇಷ ಪಡೆ ರಚಿಸಿತ್ತು. ಇದರಲ್ಲಿ ಪೊಲೀಸ್ ಇಲಾಖೆ, ಆಯುಷ್ ಅಧಿಕಾರಿಗಳು ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದಾರೆ.
ನಿರಂತರ ದಾಳಿಗಳ ನಡುವೆಯೂ ನಕಲಿ ವೈದ್ಯರ ಜಾಲ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ವಿಶೇಷವಾಗಿ ಸಣ್ಣಪುಟ್ಟ ಗಲ್ಲಿ, ಕೊಳೆಗೇರಿ ಪ್ರದೇಶಗಳಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಇಂತಹವರು ಕಾರ್ಯನಿರ್ವಹಿಸುತ್ತಿರುವ ಆರೋಪಗಳಿವೆ. ನಗರ ಪ್ರದೇಶಗಳಲ್ಲೂ ಇಂತಹ ಅನಧಿಕೃತ ಕ್ಲಿನಿಕ್ಗಳು ಪತ್ತೆಯಾಗುತ್ತಿವೆ.
ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರಕರಣ
ಕಾರ್ಯಾಚರಣೆಯಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಕಲಿ ವೈದ್ಯರು ಪತ್ತೆಯಾಗುತ್ತಿದ್ದಾರೆ. ಕಲಬುರಗಿ, ರಾಯಚೂರು, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಡಿಮೆ ಹಣದಲ್ಲಿ ಚಿಕಿತ್ಸೆ ಸಿಗುತ್ತದೆ ಎಂಬ ಕಾರಣಕ್ಕೆ ಸಾರ್ವಜನಿಕರು ಅರ್ಹತೆ ಮತ್ತು ನೋಂದಣಿ ಪರಿಶೀಲಿಸದೆ ಇಂತಹವರನ್ನು ಸಂಪರ್ಕಿಸುವುದು ಸಮಸ್ಯೆಗೆ ಕಾರಣವಾಗುತ್ತಿದೆ.
ಕಾನೂನು ಉಲ್ಲಂಘಿಸಿದರೆ ಜೈಲು, ದಂಡ
ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವುದು ಪತ್ತೆಯಾದರೆ ಕೆಪಿಎಂಇ ತಿದ್ದುಪಡಿ ಅಧಿನಿಯಮ 2017ರ ಸೆಕ್ಷನ್ 19ರ ಅಡಿಯಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹1 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನೋಂದಣಿ ಇಲ್ಲದೆ ಖಾಸಗಿ ವೈದ್ಯಕೀಯ ಸಂಸ್ಥೆ ನಡೆಸಿದರೆ ಅದನ್ನು ಮುಚ್ಚಿಸುವ ಕ್ರಮ ಕೈಗೊಳ್ಳಲಾಗುತ್ತದೆ. ನಿಯಮಗಳನ್ನು ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ದಂಡ ಹಾಗೂ ನೋಂದಣಿ ರದ್ದತಿಯಂತಹ ಕ್ರಮಗಳಿಗೂ ಅವಕಾಶವಿದೆ.
ನಕಲಿ ವೈದ್ಯರ ವಿರುದ್ಧದ ಕಾನೂನು ಕ್ರಮದ ಜತೆಗೆ ಸಾರ್ವಜನಿಕರ ಜಾಗೃತಿಯೂ ಅತ್ಯಂತ ಮುಖ್ಯ. ವೈದ್ಯರನ್ನು ಸಂಪರ್ಕಿಸುವ ಮುನ್ನ ಅವರ ವೈದ್ಯಕೀಯ ನೋಂದಣಿ, ಅರ್ಹತೆ ಮತ್ತು ಕ್ಲಿನಿಕ್ನ ಕಾನೂನುಬದ್ಧ ನೋಂದಣಿ ಪರಿಶೀಲಿಸುವುದು ಜೀವ ರಕ್ಷಣೆಯ ಮೊದಲ ಹೆಜ್ಜೆಯಾಗಬಹುದು.
ಸಿಕ್ಕಿಬಿದ್ದ ನಕಲಿ ವೈದ್ಯರು ಅಂಕಿ-ಅಂಶ (2024-2026) |
|
“ನಕಲಿ ಔಷಧಿ ಜಾಲದಂತೆ ನಕಲಿ ವೈದ್ಯರಿಗೂ ಕಡಿವಾಣ ಹಾಕಲಾಗುವುದು. ಅಂಥವರ ಪತ್ತೆಗೆ ಯೋಜನೆ ರೂಪಿಸುತ್ತೇವೆ. ಸಿಕ್ಕಿಬಿದ್ದಲ್ಲಿ ವಿಳಂಬವಿಲ್ಲದೆ ಕಟ್ಟುನಿಟ್ಟಿನ ಕ್ರಮ ವಹಿಸುತ್ತೇವೆ. ಜನರು ಮಾಹಿತಿ ಕೊಟ್ಟರೂ ಕ್ರಮ ವಹಿಸುತ್ತೇವೆ.”
– ಯು.ಟಿ.ಖಾದರ್ ಆರೋಗ್ಯ ಸಚಿವ

-
ದಿನದ ಸುದ್ದಿ5 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ6 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ5 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ6 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ6 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ


