Connect with us

ಬಹಿರಂಗ

ಬೀದರ್ ದೇಶದ್ರೋಹ ಪ್ರಕರಣದ ಸುತ್ತ ಮುತ್ತ

Published

on

  • ಕುಮಾರ ಬುರಡಿಕಟ್ಟಿ

ಬೀದರ್‌ನ ಶಾಹೀನ್ ಶಾಲೆಯ ಮೇಲೆ ಹಾಗೂ ಮೈಸೂರಿನ ವಿದ್ಯಾರ್ಥಿನಿಯ ಮೇಲೆ ಹಾಕಲಾದ ದೇಶದ್ರೋಹ ಪ್ರಕರಣಗಳು ಸಧ್ಯಕ್ಕೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಹೇಗೆ ದುರ್ಬಳಕೆಯಾಗುತ್ತಿದೆ ಎಂಬುದಕ್ಕೆ ಇತ್ತೀಚಿನ ಜೀವಂತ ಪ್ರತಿಮೆಗಳಾಗಿ ನಿಂತಿವೆ.

ಬೀದರ್ ಪ್ರಕರಣವನ್ನು ತುಸು ಹತ್ತಿರದಿಂದಲೇ ನೋಡುತ್ತಾ ವರದಿ ಮಾಡುತ್ತಿರುವುದರಿಂದ ಹಾಗೂ ನಿನ್ನೆ (ಸೋಮವಾರ) ಬೀದರ್‌ಗೆ ಹೋಗಿ ಇಡೀ ದಿನ ಆ ಪ್ರಕರಣದ ಬಲಿಪಶುಗಳನ್ನು ಮಾತಾಡಿಸಿದ ನಂತರ ನನಗೆ ಕಂಡ ಒಂದಿಷ್ಟು ಬಿಡಿಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ.

ಕಳೆದ ಜನವರಿ 21ರಂದು ಬೀದರ್‌ನ ಪ್ರತಿಷ್ಠಿತ ಶಾಹೀನ್ ಸ್ಕೂಲಿನಲ್ಲಿ ವಾರ್ಷಿಕೋತ್ಸವ ಸಮಾರಂಭವಿತ್ತು. ವಿದ್ಯಾರ್ಥಿಗಳು ವಿಭಿನ್ನ ರೀತಿಯ, ಸೃಜನಶೀಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಅಂತಹ ಕಾರ್ಯಕ್ರಮಗಳಲ್ಲಿ ಆರನೇ ತರಗತಿಯ ಮಕ್ಕಳು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್‌ಸಿ) ಕುರಿತು ಪ್ರದರ್ಶಿಸಿದ ಕಿರುನಾಟಕ ಕೂಡ ಒಂದು.

ಈ ನಾಟಕದಲ್ಲಿ ಕೆಲವು ಪಾತ್ರಗಳು ಎನ್ಆರ್‌ಸಿ ಕುರಿತು ಚರ್ಚೆ ಮಾಡುತ್ತವೆ. “ಸತ್ತು ಗೋರಿಯಲ್ಲಿರುವ ನನ್ನ ಅಜ್ಜ, ಮುತ್ತಜ್ಜನ ದಾಖಲೆಗಳನ್ನು ಕೇಳಿದರೆ ನಾನೆಲ್ಲಿಂದ ತಂದುಕೊಡಲಿ?” “ಏನೇ ಆದ್ರೂ ನಾನಂತೂ ನನ್ನ ಪೌರತ್ವ ಸಾಬೀತು ಪಡಿಸಲು ದಾಖಲೆ ಕೊಡಲ್ಲ”, “ನನ್ನ ದಾಖಲೆಗಳನ್ನು ಕೇಳಲು ಬಂದರೆ ಚಪ್ಪಲಿಯಿಂದ ಹೊಡೆಯುತ್ತೇನೆ” ಎಂಬಿತ್ಯಾದಿ ಮಾತುಗಳನ್ನು ಒಂದೊಂದು ಪಾತ್ರ ಆಡುತ್ತದೆ. ಈ ಕೊನೆಯ ಡೈಲಾಗನ್ನು ಹೇಳಿದ್ದು ಆಯೇಷಾ (ಹೆಸರನ್ನು ಬದಲಾಯಿಸಲಾಗಿದೆ) ಎಂಬ ಹನ್ನೊಂದು ವರ್ಷದ ಹುಡುಗಿ.

ಸೂಕ್ಷ್ಮವಾಗಿ ನೋಡಿದರೆ ಇದೊಂದು ವಿಡಂಬನಾತ್ಮಕ ನಾಟಕ. ಚಪ್ಪಲಿಯಿಂದ ಹೊಡೆಯುತ್ತೇನೆ ಎಂಬುದು ಉರ್ದು/ ಹಿಂದಿ ಭಾಷೆಯಲ್ಲಿ ಜನಸಾಮಾನ್ಯರು ಬಹಳ ಸಲೀಸಾಗಿ, ಮಾಮೂಲಿಯಾಗಿ ಸಣ್ಣಪುಟ್ಟ ವಿಷಯಕ್ಕೆಲ್ಲಾ ಆಡುವ ಮಾತು (ಜ್ಯೂತೆ ಸೆ ಮಾರುಂಗ). ಅದರೆ ಇಲ್ಲಿ ಆ ಡೈಲಾಗೇ ಬಹಳ ಜನರಿಗೆ ಮುಳುವಾಗಿ ಪರಿಣಮಿಸಿದೆ.

ಈ ನಾಟಕದ ವೀಡಿಯೋ ತುಣುಕೊಂದನ್ನು ಮೊಹಮ್ಮದ್ ಯೂಸೂಫ್ ಎಂಬ ಸ್ಥಳೀಯ ಉರ್ದು ಪತ್ರಿಕೆಯ ವರದಿಗಾರನೊಬ್ಬ ಫೇಸ್ಬುಕ್ಕಿನಲ್ಲಿ ಪೋಸ್ಟ್ ಮಾಡುತ್ತಾನೆ. ಇದು ನೀಲೇಶ್ ರಕ್ಷ್ಯಾಳ್ ಎಂಬ ಬಲಪಂಥೀಯ ವ್ಯಕ್ತಿಯೊಬ್ಬನ ಗಮನಕ್ಕೆ ಬರುತ್ತದೆ. ಆತ ಈ ನಾಟಕದಲ್ಲಿರುವ ಸಂಭಾಷಣೆಗಳು, ಅದರಲ್ಲೂ ವಿಶೇಷವಾಗಿ “ಚಪ್ಪಲಿಯಿಂದ ಹೊಡೆಯುತ್ತೇನೆ” ಎನ್ನುವ ಡೈಲಾಗು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಡಿದ ಅವಮಾನ ಎಂಬುದಾಗಿ ಹಾಗೂ ಅದೊಂದು ದೇಶದ್ರೋಹದ ಕೃತ್ಯ ಎಂಬುದಾಗಿ ಆರೋಪಿಸಿ ಈ ನಾಟಕ ಪ್ರದರ್ಶನ ಮಾಡಿದ ಶಾಹೀನ್ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೀದರ್ನ ನ್ಯೂಟೌನ್ ಪೊಲೀಸ್ ಸ್ಟೇಷನ್ನಿನಲ್ಲಿ ಜನವರಿ 26ರಂದು ದೂರು ದಾಖಲಿಸುತ್ತಾನೆ.

ಇದನ್ನು ಆಧರಿಸಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿಭಂಗ ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 124ಎ (ದೇಶದ್ರೋಹ) ಮತ್ತು ಇತರ ಸೆಕ್ಷನ್ನುಗಳ ಅಡಿಯಲ್ಲಿ ಶಾಹಿನ್ ಸಂಸ್ಥೆಯ ಅಧ್ಯಕ್ಷ, ಆಡಳಿತ ಮಂಡಳಿ ಮತ್ತು ಮೊಹಮ್ಮದ್ ಯೂಸೂಫ್ ಮೇಲೆ ಪ್ರಕರಣ ದಾಖಲಿಸುತ್ತಾರೆ.

ಮರುದಿನದಿಂದಲೇ ಪೊಲೀಸರು ಶಾಲೆಗೆ ಬಂದು ಪ್ರಕರಣದ ವಿಚಾರಣೆ ಶುರು ಮಾಡುತ್ತಾರೆ. ಶಾಲೆಯ ಸಿಸಿಟೀವಿ ಕ್ಯಾಮೆರಾದ ದೃಶ್ಯಗಳನ್ನು ವಶಪಡಿಸಿಕೊಳ್ಳುತ್ತಾರೆ. ಶಾಲೆಯ ಶಿಕ್ಷಕರು ಮತ್ತು ಇತರ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುತ್ತಾರೆ.

ಮರುದಿನ, ಅಂದರೆ ಜನವರಿ 28ನೇ ತಾರೀಖು ಡಿವೈಎಸ್ಪಿ ಬಸವೇಶ್ವರ ಹೀರಾ ನೇತೃತ್ವದಲ್ಲಿ ಸಮವಸ್ತ್ರದಲ್ಲೇ ಬರುವ ಪೊಲೀಸರು ಸುಮಾರು 46 ಮಕ್ಕಳನ್ನು ವಿಚಾರಣೆಗೊಳಪಡಿಸುತ್ತಾರೆ. ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ ಪೊಲೀಸರು ಸಮವಸ್ತ್ರದಲ್ಲಿರಬಾರದು ಹಾಗೂ ಮಕ್ಕಳ ಹಿತರಕ್ಷಣಾ ಸಮಿತಿಯ ಸದಸ್ಯರು ಜೊತೆಯಲ್ಲಿರಬೇಕು ಎಂಬ ಕನಿಷ್ಠ ಜ್ಞಾನವನ್ನೂ ಹೊಂದಿರದ ಬೀದರ್ ಪೊಲೀಸರು ಈ ಬಾಲನ್ಯಾಯ ನಿಯಮಗಳನ್ನು ಗಾಳಿಗೆ ತೂರುತ್ತಾರೆ.

ಸಮವಸ್ತ್ರಧಾರಿ ಪೊಲೀಸರು ಪುಟ್ಟ ಪುಟ್ಟ ಮಕ್ಕಳನ್ನು ವಿಚಾರಣೆಗೊಳಪಡಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಾದ್ಯಂತ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬೀದರ್ ಪೊಲೀಸರು ಮರುದಿನ ಶಾಲೆಗೆ ಸಿವಿಲ್ ಡ್ರೆಸ್ಸಿನಲ್ಲಿ ಬರುತ್ತಾರೆ. ಆದರೆ ಆವತ್ತು ಯಾವ ಮಕ್ಕಳನ್ನೂ ವಿಚಾರಣೆಗೆ ಒಡಪಡಿಸದೇ ಕೇವಲ ಸಿಬ್ಬಂದಿಯನ್ನು ವಿಚಾರಣೆ ಮಾಡಿ ಹಿಂತಿರುಗುತ್ತಾರೆ.

ಅದರ ಮರುದಿನ, ಅಂದರೆ, ಜನವರಿ 29ರಂದು ಮತ್ತೆ ಸಿವಿಲ್ ಡ್ರೆಸ್ಸಿನಲ್ಲಿ ಬರುವ ಪೊಲೀಸರು ತಮ್ಮೊಂದಿಗೆ ಮಕ್ಕಳ ಹಿತರಕ್ಷಣಾ ಸಮಿತಿಯ ಇಬ್ಬರು ಮಹಿಳಾ ಸದಸ್ಯರನ್ನು ಕರೆದುಕೊಂಡು ಬಂದಿರುತ್ತಾರೆ. ಈ ಬಾರಿ ಅವರು ಮತ್ತೆ ಮಕ್ಕಳನ್ನು ವಿಚಾರಣೆಗೆ ಒಳಪಡಿಸುತ್ತಾರೆ. ಈ ಬಾರಿ ಅವರು ಸುಮಾರು ಮೂರು ತಾಸು ವಿಚಾರಣೆ ಮಾಡುತ್ತಾರೆ.

ಪ್ರತೀ ವಿಚಾರಣೆಯ ಸಮಯದಲ್ಲೂ ನಾಟಕದಲ್ಲಿ “ಚಪ್ಪಲಿಯಿಂದ ಹೊಡೆಯುತ್ತೇನೆ” ಎಂಬ ಡೈಲಾಗ್ ಹೇಳಿದ ಆರನೆಯ ತರಗತಿಯ ಆಯೇಶಾಳನ್ನೇ ತೀವ್ರವಾಗಿ ವಿಚಾರಣೆ ಮಾಡುತ್ತಾರೆ. ವಿಚಾರಣೆಯ ಸಮಯದಲ್ಲಿ ಆ ಹುಡುಗಿ ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಆ ಡೈಲಾಗನ್ನು ತನ್ನ ತಾಯಿ ಹೇಳಿಕೊಟ್ಟಿರುವುದಾಗಿ ಹೇಳುತ್ತಾಳೆ.

ಅದನ್ನೇ ಆಧಾರವಾಗಿಟ್ಟುಕೊಂಡ ಪೊಲೀಸರು ಮಾರನೆಯ ದಿನ, ಅಂದರೆ ಜನವರಿ 30ರಂದು ಮತ್ತೆ ಶಾಲೆಗೆ ಬಂದು ಸಿಬ್ಬಂದಿಯನ್ನು ವಿಚಾರಣೆ ಮಾಡುತ್ತಾರೆ. ಈ ಸಮಯದಲ್ಲಿ ಆ ನಾಟಕ ಪ್ರದರ್ಶನದ ಉಸ್ತುವಾರಿ ವಹಿಸಿದ್ದು ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಎಂಬುದನ್ನು ಕಂಡುಕೊಳ್ಳುತ್ತಾರೆ.

ಆಯೇಶಾಳ ಹೇಳಿಕೆ ಆಧಾರದಲ್ಲಿ ಆಕೆಯ ತಾಯಿ ನಜ್ಬುನ್ನೀಸಾಳನ್ನು ಹಾಗೂ ಶಾಲೆಯ ಸಿಬ್ಬಂದಿಯ ಹೇಳಿಕೆಯ ಆಧಾರದಲ್ಲಿ ನಾಟಕದ ಉಸ್ತುವಾರಿ ನೋಡಿಕೊಂಡಿದ್ದ ಮುಖ್ಯಶಿಕ್ಷಕಿ ಫರಿದಾ ಬೇಗಂ ಅವರನ್ನು ಸುಮಾರು ಮಧ್ಯಾಹ್ನ 4 ಗಂಟೆಯ ಹೊತ್ತಿಗೆ ಬಂಧಿಸಿ ಕರೆದೊಯ್ಯುತ್ತಾರೆ.

ಮಾರನೆಯ ದಿನ, ಅಂದರೆ ಜನವರಿ 31ನೇ ತಾರೀಖಿನಂದು ಮತ್ತೆ ಶಾಲೆಗೆ ಬರುವ ಪೊಲೀಸರು ಕೆಲವು ಮಕ್ಕಳ ಪಟ್ಟಿಯನ್ನು ಕೊಟ್ಟು ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಂತೆ ಒತ್ತಾಯಿಸುತ್ತಾರೆ. ಆದರೆ ಅದಕ್ಕೆ ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತೌಸೀಫ್ ಮಡಿಕೇರಿ ಖಂಡಿತ ಒಪ್ಪುವುದಿಲ್ಲ. ಅಷ್ಟೊತ್ತಿಗಾಗಲೇ ಬೀದರ್ ದೇಶದ್ರೋಹದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿರುತ್ತದೆ.

ಪೊಲೀಸರು ಸಮವಸ್ತ್ರದಲ್ಲೇ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದಕ್ಕೆ ತೀವ್ರ ವೀರೋಧ ವ್ಯಕ್ತವಾಗಿದ್ದು ಮಾತ್ರವಲ್ಲದೇ ರಾಷ್ಟ್ರೀಯ ಮತ್ತು ರಾಜ್ಯ ಮಾನವ/ಮಕ್ಕಳ ಹಕ್ಕುಗಳ ಸಂಸ್ಥೆಗಳು ಶಾಲೆಯನ್ನು, ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿರುತ್ತವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಪೊಲೀಸ್ ಠಾಣೆಗೆ ಕಳಿಸಿಕೊಡಲು ಶಾಲೆಯ ಆಡಳಿತ ಮಂಡಳಿ ಸುತಾರಾಂ ಒಪ್ಪುವುದಿಲ್ಲ. ಈ ವಿಷಯದಲ್ಲಿ ಪೊಲೀಸರಿಗೂ ಮತ್ತು ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತೌಸಿಫ್ ಮಡಿಕೇರಿ ನಡುವೆ ಸಣ್ಣದೊಂದು ಮಾತಿನ ಚಕಮಕಿಯೂ ನಡೆಯುತ್ತದೆ.

ಬಾಲ ನ್ಯಾಯ ವ್ಯವಸ್ಥೆಯ ಬಗ್ಗೆ ತನಗೆ ಪಾಠ ಮಾಡಬೇಡ ಎಂದು ವಿಚಾರಣಾಧಿಕಾರಿ ಡಿವೈಎಸ್ಪಿ ಬಸವೇಶ್ವರ ಹೀರಾ ಅವರು ತೌಸಿಫ್ ಮಡಿಕೇರಿಗೆ ಧಮಕಿಯನ್ನೂ ಹಾಕುತ್ತಾರೆ. ಇಷ್ಟೆಲ್ಲಾ ಆದರೂ ಮಕ್ಕಳನ್ನು ಪೊಲೀಸ್ ಸ್ಟೇಷನ್ನಿಗೆ ಕಳಿಸಿಕೊಡಲು ಶಾಲೆಯ ಆಡಳಿತ ಮಂಡಳಿ ಒಪ್ಪದಿದ್ದುದರಿಂದ ಅನಿವಾರ್ಯವಾಗಿ ಶಾಲೆಯಲ್ಲೇ ವಿಚಾರಣೆ ಮಾಡುತ್ತಾರೆ.

ನಂತರ ಫೆಬ್ರವರಿ 1, 3 ಮತ್ತು 4ನೇ ತಾರೀಖಿನಂದು ಮತ್ತೆ ಮತ್ತೆ ಶಾಲೆಗೆ ಬಂದು ವಿದ್ಯಾರ್ಥಿಗಳನ್ನು ವಿಚಾರಣೆ ಮಾಡುತ್ತಾರೆ. ಹೀಗೆ, ಪೊಲೀಸರು ಒಟ್ಟು ಐದು ಬಾರಿ ಮಕ್ಕಳನ್ನು ವಿಚಾರಣೆಗೆ ಒಳಪಡಿಸುತ್ತಾರೆ. ವಿಚಾರಣೆಗೆ ಒಳಗಾದ ಒಟ್ಟು ಮಕ್ಕಳ ಸಂಖ್ಯೆ ಸುಮಾರು 80. ನಾಟಕದಲ್ಲಿ ಪಾತ್ರಗಳನ್ನು ಮಾಡಿದ ಮಕ್ಕಳನ್ನಂತೂ ಪೊಲೀಸರು ಪದೇಪದೇ ವಿಚಾರಣೆಗೆ ಒಳಪಡಿಸಿದರೆ ಉಳಿದ ಮಕ್ಕಳನ್ನು ಒಂದೆರಡು ಬಾರಿ ಮಾತ್ರ ವಿಚಾರಣೆ ಮಾಡುತ್ತಾರೆ.

ಈ ನಾಟಕದ ಸ್ಕ್ರಿಪ್ಟ್ ಬರೆದದ್ದು ಯಾರು? ಈ ನಾಟಕದ ಡೈಲಾಗ್ ಯಾರು ಹೇಳಿಕೊಟ್ಟರು? ಪ್ರಧಾನಮಂತ್ರಿ ಮುಸ್ಲೀಂ ಆಗಿದ್ರೆ ಹೀಗೆ ಚಪ್ಪಲಿಯಿಂದ ಹೊಡೆಯುತ್ತೇನೆ ಅಂತಿದ್ತಾ? ನಾಟಕದ ರಿಹರ್ಸಲ್ ಎಲ್ಲಿ ಮಾಡಿದ್ರಿ? ನೋಡೋದಕ್ಕೆ ತಂದೆತಾಯಿ ಬಂದಿದ್ರಾ? ಎಂಬಿತ್ಯಾದಿ ಪ್ರಶ್ನೆಗಳನ್ನೇ ಪ್ರತೀದಿನ ಕೇಳುತ್ತಿದ್ದರು. ಸಿಸಿಟೀವಿ ಕ್ಯಾಮೆರಾದ ಕವರೇಜ್ ಇಲ್ಲದ ಶಾಲಾ ಕಟ್ಟಡದ ಮೂಲೆಯ ಕೋಣೆಯೊಂದನ್ನು ಅವರು ವಿಚಾರಣೆಗಾಗಿ ಆಯ್ಕೆ ಮಾಡಿಕೊಂಡಿದ್ದರು. ಫೆಬ್ರುವರಿ 4ನೇ ತಾರೀಖಿನ ನಂತರ ಪೊಲೀಸರು ಮತ್ತೆ ಶಾಲೆಯ ಕಡೆ ಬಂದಿಲ್ಲವಂತೆ.

ಈ ಇಡೀ ಪ್ರಕರಣದಲ್ಲಿ ಅತಿ ಹೆಚ್ಚು ನೋವು ಅನುಭವಿಸಿದವರು ಮತ್ತು ಈಗಲೂ ಅನುಭವಿಸುತ್ತಿರುವವರು ಎಂದರೆ ನಜ್ಬುನ್ನಿಸಾ ಮತ್ತು ಅವಳ ಮಗಳು ಆಯೇಶಾ. ನಜ್ಬುನ್ನಿಸಾ ಬೀದರಿನಿಂದ ಸುಮಾರು ನಲ್ವತ್ತು ಕಿ.ಮೀ. ದೂರದಲ್ಲಿರುವ ಹಳ್ಳಿಕೇಡ್ ಗ್ರಾಮದವಳು. ಸುಮಾರು 27 ವರ್ಷ ಇರಬಹುದು. ಮಗಳು ಆಯೇಶಾಳಿಗೆ ಸುಮಾರು 11 ವರ್ಷ ಇರಬಹುದು. ಸುಮಾರು ಏಳು ವರ್ಷಗಳ ಹಿಂದೆಯೇ ಅವಳ ಗಂಡ ಕ್ಯಾನ್ಸರಿನಿಂದ ಬಳಲಿ ಅಸುನೀಗಿದ್ದಾನೆ. ಅಂದಿನಿಂದಲೂ ನಜ್ಬುನ್ನೀಸಾಳೇ ತನ್ನ ಮತ್ತು ತನ್ನ ಮಗಳ ಹೊಟ್ಟೆಪಾಡನ್ನು ನೋಡಿಕೊಳ್ಳುತ್ತಿರುವುದು.

ಶಾಹೀನ್ ಸಂಸ್ಥೆಯು ಹಳ್ಳಿಕೇಡದಲ್ಲೂ ಒಂದು ಪ್ರಾಥಮಿಕ ಶಾಲೆಯನ್ನು ನಡೆಸುತ್ತಿದೆ. ಅಲ್ಲಿ ಶಿಕ್ಷಕಿಯೊಬ್ಬಳ ಮಗಳು ಮುಂದೆ ಬೀದರಿಗೆ ಬಂದು ಶಾಹೀನ್ ಸಂಸ್ಥೆಯ ಹೈಸ್ಕೂಲಿನಲ್ಲಿ, ಪಿಯೂಸಿ ಕಾಲೇಜಿನಲ್ಲಿ ಓದಿ ಸರ್ಕಾರಿ ಕೋಟದಡಿಯಲ್ಲಿ ಉಚಿತ ಮೆಡಿಕಲ್ ಸೀಟು ಪಡೆದಿರುತ್ತಾಳೆ. ಇಂತಹ ಒಂದೆರಡು ಉದಾಹರಣೆಗಳು ನಜ್ಬುನ್ನೀಸಾಳಲ್ಲೂ ತನ್ನ ಮಗಳ ಬಗ್ಗೆ ಆಸೆ, ಆಕಾಂಕ್ಷೆಗಳನ್ನು ಹುಟ್ಟಿಸಿರುತ್ತವೆ. ಆಯೇಶಾಳನ್ನೂ ಬೀದರಿನ ಶಾಹೀನ್ ಶಾಲೆಗೆ ಸೇರಿಸಿದರೆ ಅವಳೂ ಡಾಕ್ಟರ್ ಅಥವಾ ಎಂಜಿನೀಯರ್ ಆಗಬಹುದು ಎಂಬ ಕನಸುಗಳು ಆಕೆಯಲ್ಲಿ ಮೊಳೆಯುತ್ತವೆ. ಈ ಕನಸುಗಳೇ ಅವಳನ್ನು ಮಗಳ ಜೊತೆ ಹಳ್ಳಿಕೇಡ್ ತೊರೆದು ಬೀದರಿಗೆ ಬರುವುದಕ್ಕೆ ಪ್ರೇರೇಪಿಸುತ್ತವೆ.

ಈಗ್ಗೆ ನಾಲ್ಕೈದು ತಿಂಗಳ ಹಿಂದಷ್ಟೇ ಕಣ್ಣತುಂಬಾ ಕನಸು ಕಟ್ಟಿಕೊಂಡು ಆಯೇಶಾ ಜೊತೆ ಬೀದರಿಗೆ ಬಂದಿದ್ದ ನಜ್ಬುನ್ನಿಸಾ ಬೀದರಿನ ದುಡಿಯುವ ಜನ ವಾಸಿಸುವ ಏರಿಯಾದಲ್ಲಿ ಒಂದು ಸಣ್ಣ ರೂಮನ್ನು ಬಾಡಿಗೆಗೆ ಪಡೆದು ನೆಲೆಸುತ್ತಾಳೆ. ತಾನು ಅವರಿವರ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದು ಮಗಳನ್ನು ತನ್ನ ಆಸೆಯಂತೆಯೇ ಶಾಹೀನ್ ಶಾಲೆಗೆ ಸೇರಿಸುತ್ತಾಳೆ.

ಅಸಲಿಗೆ ಶಾಹಿನ್ ಶಾಲೆ ಮುಸ್ಲಿಂ ಸಮುದಾಯದ ಶಾಲೆ ಎಂದೇ ಪರಿಚಿತವಾಗಿದ್ದರೂ ಇಲ್ಲಿ ಶೇಕಡ 50ರಷ್ಟು ಮುಸ್ಲೀಮೇತರ ಮಕ್ಕಳು ಕಲಿಯುತ್ತಿದ್ದಾರೆ. ಹಿಂದೂ, ಸಿಖ್, ಕ್ರಿಶ್ಚಿಯನ್, ಮುಸ್ಲಿಂ – ಎಲ್ಲಾ ಧರ್ಮದ ಬಡ ಮಕ್ಕಳಿಗೆ ಇಲ್ಲಿ ಪ್ರವೇಶ ಸಿಗುತ್ತದೆ. ಇದು ಒಳ್ಳೆಯ ಹೆಸರು ಮಾಡಿರುವ ಸಂಸ್ಥೆ. ದೇಶಾದ್ಯಂತ ಸುಮಾರು 40 ಕಡೆ ಈ ಸಂಸ್ಥೆಯ ಶಾಲೆಗಳಿವೆ. ಬೀದರ್ ಶಾಲೆಯೊಂದರಿಂದಲೇ ಕಳೆದ ವರ್ಷ 327 ವಿದ್ಯಾರ್ಥಿಗಳು ನೀಟ್ ಮೂಲಕ ಸರ್ಕಾರಿ ಕೋಟಾದಲ್ಲಿ ಉಚಿತ ಮೆಡಿಕಲ್ ಸೀಟುಗಳನ್ನು ಪಡೆದಿದ್ದಾರೆ.

ಇಂತಹ ಶಾಲೆಗೆ ಮಗಳನ್ನು ಸೇರಿಸಿ ಇನ್ನೂ ನಾಲ್ಕು ತಿಂಗಳು ತುಂಬುವ ಮೊದಲೇ ನಜ್ಬುನ್ನೀಸಾ ದೇಶದ್ರೋಹದ ಆರೋಪ ಹೊತ್ತು, ಆಯೇಶಾಳನ್ನು ಅನಾಥಳನ್ನಾಗಿ ಮಾಡಿ ಜೈಲು ಸೇರಬೇಕಾಗಿ ಬಂದಿದೆ. ಅತ್ತ ಆಕೆ ಜೈಲು ಸೇರಿದ ನಂತರ ಪಕ್ಕದ ಮನೆಯ ಮೊಹ್ಮದ್ ಹಫೀಜುದ್ದೀನ್ ಕುಟುಂಬ ಆಯೇಶಾಳನ್ನು ತಮ್ಮ ಹತ್ತಿರ ಇಟ್ಟುಕೊಂಡು ಸುಮಾರು 8-10 ದಿನ ಆರೈಕೆ ಮಾಡಿದೆ. ನಂತರ ಮಕ್ಕಳ ಹಿತರಕ್ಷಣಾ ಸಮಿತಿಯ ಸಲಹೆಯ ಮೇರೆಗೆ ಆಕೆಯನ್ನು ಶಾಹೀನ್ ಸಂಸ್ಥೆ ನಡೆಸುವ ಹಾಸ್ಟೆಲ್ ಒಂದಕ್ಕೆ ವರ್ಗಾಯಿಸಿ ಅಲ್ಲಿನ ವಾರ್ಡನ್ ಜೊತೆ ಇರುವುದಕ್ಕೆ ಕಳಿಸಲಾಗಿದೆ.

“ಆಯೇಶಾ ಬಹಳ ಲವಲವಿಕೆಯ ಹುಡುಗಿಯಾಗಿದ್ದಳು. ಪದೇ ಪದೇ ಪೊಲೀಸರ ವಿಚಾರಣೆ, ಅವಳ ಅಮ್ಮಿಯ ಬಂಧನ ಅವಳ ಮನಸ್ಸಿನ ಮೇಲೆ ದೊಡ್ಡ ಆಘಾತ ಉಂಟು ಮಾಡಿದೆ. ತಾಯಿಯ ಬಂಧನದ ನಂತರ ಯಾವಗಲೂ ಬಹಳ ಸಪ್ಪೆಯಾಗಿರುತ್ತಿದ್ದಳು. ಮಧ್ಯರಾತ್ರಿ ದಿಢೀರನ್ ಎದ್ದು ಅಳುತ್ತಿದ್ದಳು. ಕೆಟ್ಟ ಕನಸು ಕಂಡು ಥಟ್ಟನೇ ಚೀರುತ್ತಿದ್ದಳು. ಸಮಾಧಾನಿಸಿ ಮಲಗಿಸುತ್ತಿದ್ದೆವು. ಒಮ್ಮೆ ಮಧ್ಯರಾತ್ರಿ ಆಸ್ಪತ್ರೆಗೂ ಕರೆದುಕೊಂಡು ಹೋಗಿದ್ದೆವು.

ಅಪ್ಪ ತೀರಿಕೊಂಡಿದ್ದಾರೆ, ಅಮ್ಮ ಜೈಲು ಸೇರಿದ್ದಾರೆ. ನೆರೆಹೊರೆಯವರಾಗಿ ನಾವು ಇಷ್ಟಾದರೂ ಮಾಡಬೇಕಲ್ಲವೆ?” ಎಂದು ಮೊಹ್ಮದ್ ಹಫೀಜುದ್ದೀನ್ ಹೇಳಿದರು. ಬೀದರಿನ ದರ್ಜಿ ಗಲ್ಲಿಯಲ್ಲಿ ಅವರು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಆಯೇಶಾ ಮತ್ತು ನಜ್ಬುನ್ನಿಸಾ ವಾಸಿಸುತ್ತಿದ್ದ ಮನೆಯನ್ನು ತೋರಿಸಿ ಎಂದು ಸ್ವಲ್ಪ ಒತ್ತಾಯ ಮಾಡಿದ ಮೇಲೆ ಅವರು ಅಂಗಡಿಯನ್ನು ಬೇರೆಯವರಿಗೆ ಒಪ್ಪಿಸಿ ಬೈಕಿನಲ್ಲಿ ಕರೆದುಕೊಂಡು ಹೋಗಿ ತೋರಿಸಿದರು. ನಾನು ಮನೆಯದೊಂದು ಫೋಟೋ ತೆಗೆದುಕೊಂಡೆ.

“ಆಯೇಶಾ ಬಹಳ ಹಸನ್ಮುಖಿ ಹುಡುಗಿ. ಅಮ್ಮಿ ನಜ್ಬುನ್ನಿಸಾ ಬಂಧನವಾದ ಮೇಲೆ ಅವಳು ಮುಖ ಪೂರ್ಣವಾಗಿ ಬಾಡಿಬಿಟ್ಟಿದೆ. ನಗು ಮುಖದಿಂದ ಮರೆಯಾಗಿಬಿಟ್ಟಿದೆ. ಯಾವಾಗಲೂ ಖಿನ್ನತೆಯಲ್ಲಿ ಇರುತ್ತಾಳೆ. ಅಮ್ಮಿಯ ಬಂಧನವಾದ ಮೇಲೂ ಸ್ವಲ್ಪ ದಿನ ಆಯೇಶಾ ಶಾಲೆಗೆ ಬರುತ್ತಿದ್ದಳು. ಶಾಲೆಯ ಆವರಣದಲ್ಲಿ ದಿನಾಲೂ ನನ್ನನ್ನು ಕಂಡ ತಕ್ಷಣ ಅಳುತ್ತಾ ಓಡಿ ಬಂದು ತಬ್ಬಿಕೊಂಡುಬಿಡುತ್ತಿದ್ದಳು.

ಆಕೆ ದಿನಾಲು ಕೇಳುವ ಮೊದಲ ಪ್ರಶ್ನೆ ಎಂದರೆ ‘ಅಮ್ಮಿ ಯಾವಾಗ ಬರ್ತಾಳೆ’ ಅಂತ. ನಾನು ಆವಾಗ ಬರ್ತಾಳೆ, ಈವಾಗ ಬರ್ತಾಳೆ ಅಂತ ಹೇಳುತ್ತಾ ಹೇಗೋ ಸಮಾಧಾನ ಮಾಡ್ತಿದ್ದೆ. ‘ನಾನು ಮಾಡಿದ ತಪ್ಪಿಗೆ ಅಮ್ಮಿನ ಯಾಕೆ ಕರ್ಕೊಂಡು ಹೋಗಿದ್ದಾರೆ’ ಅಂತ ಮತ್ತೆ ಮತ್ತೆ ಕೇಳುತ್ತಿದ್ದಳು. ಈಗ ಕೆಲವು ದಿನಗಳಿಂದ ಆಕೆ ಶಾಲೆಗೂ ಬಂದಿಲ್ಲ. ಇವತ್ತಿನಿಂದ ಪರೀಕ್ಷೆಗಳು ಶುರುವಾಗಿವೆ. ಆಕೆ ಪರೀಕ್ಷೆಯನ್ನೂ ಬರೆಯುತ್ತಿಲ್ಲ. ದಯವಿಟ್ಟು ಏನಾದ್ರೂ ಮಾಡಿ ನಜ್ಬುನ್ನಿಸಾಳ ಬಿಡುಗಡೆಗೆ ಸಹಾಯ ಮಾಡಿ. ನಮಗೂ ಆಯೇಶಾಳ ಸ್ಥಿತಿಯನ್ನು ನೋಡೋಕೆ ಆಗ್ತಿಲ್ಲ,” ಎಂದು ಆಯೇಶಾಳ ಕ್ಲಾಸ್ ಟೀಚರ್ ಆಸ್ಮಾ ತರನ್ನುಮ್ ಹೇಳಿದ್ರು.

ಸೀದಾ ಜೈಲಿಗೆ ಹೋಗಿ ನಜ್ಬುನ್ನೀಸಾಳನ್ನೂ ಮಾತಾಡಿಸಿದೆ. “ನಾನೇನೂ ಆಯೇಶಾಳಿಗೆ ಇಂತಹ ಡೈಲಾಗನ್ನೇ ಹೇಳು ಅಂತ ಏನೂ ಹೇಳಿಕೊಟ್ಟಿರಲಿಲ್ಲ. ಜ್ಯೂತೆಸೆ ಮಾರುಂಗಿ ಎಂಬುದು ನಾವು ಆಡುಭಾಷೆಯಲ್ಲಿ, ಸಣ್ಣಪುಟ್ಟ ವಿಷಯಗಳಿಗೂ ಬಳಸುತ್ತೇವೆ. ನಾನು ಎಂದಾದರೂ ಆ ರೀತಿ ಬೈದಿದ್ದನ್ನು ನೋಡಿ ಆಯೇಶಾ ಅದನ್ನು ನಾಟಕದಲ್ಲಿ ಬಳಸಿರಬಹುದು ಅನ್ನಿಸುತ್ತದೆ. ಅದನ್ನೇ ಇಷ್ಟೊಂದು ರಾದ್ಧಾಂತ ಮಾಡೋ ಅವಶ್ಯಕತೆ ಇತ್ತಾ? ಆಯೇಶಾಳ ಓದು, ಭವಿಷ್ಯದ ಬಗ್ಗೆ ಏನೇನೋ ಕನಸು ಕಟ್ಟಿಕೊಂಡು ಬಂದಿದ್ದೆವು. ಬಂದ ನಾಲ್ಕೇ ತಿಂಗಳಲ್ಲಿ ಹೀಗೆಲ್ಲಾ ಆಗಿಹೋಯ್ತು. ನಂಗೆ ಆಯೇಶಾಳದ್ದೇ ಚಿಂತೆ. ಹೇಗಿದ್ದಾಳೋ, ಏನು ಮಾಡುತ್ತಿದ್ದಾಳೋ… ಸಬ್ ಅಲ್ಲಾ ಕಿ ಮರ್ಜಿ…” ಅಂತ ಹೇಳಿದಳು.

ಶಾಹಿನ್ ಶಾಲೆಯಲ್ಲಿ ಪದೇ ಪದೇ ಪೊಲೀಸರ ವಿಚಾರಣೆಗೆ ಒಳಗಾದ ಇಬ್ಬರು ವಿದ್ಯಾರ್ಥಿಗಳನ್ನೂ ಮಾತಾಡಿಸಿದೆ. ಅದರಲ್ಲಿ ಉತ್ತರ ಪ್ರದೇಶ ಮೂಲದ, ವಯಸ್ಸಿನಲ್ಲಿ ಸ್ವಲ್ಪ ದೊಡ್ಡವನಾದ ಒಬ್ಬ ವಿದ್ಯಾರ್ಥಿ ಮಾತ್ರ ‘ನನಗೆ ಪೊಲೀಸರ ವಿಚಾರಣೆಯಿಂದ ಹೆದರಿಕೆ ಆಗಲಿಲ್ಲ’ ಎಂದ. ಇನ್ನೊಬ್ಬ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿ, ವಯಸ್ಸಿನಲ್ಲಿ ಸ್ವಲ್ಪ ಸಣ್ಣವನು ಮಾತ್ರ ಬಹಳ ಹೆದರಿದ್ದಾಗಿ ಹೇಳಿದ.

“ಪೊಲೀಸರು ಎದೆಯ ಮೇಲೆಯೇ ನುಗ್ಗಿದಂತೆ ಬರುವ ರೀತಿ, ಅವರು ಪ್ರಶ್ನೆ ಕೇಳುವ ಶೈಲಿ, ನಮ್ಮನ್ನು ದಿಟ್ಟಿಸಿ ನೋಡುವ ರೀತಿ – ಎಲ್ಲವೂ ಭಯ ಹುಟ್ಟಿಸುತ್ತಿದ್ದವು. ಎರಡು ದಿನ ಬಹಳ ಹೆದರಿಕೆಯಾಗಿತ್ತು. ನಂತರ ಮೇಸ್ಟ್ರು ಸ್ವಲ್ಪ ಧೈರ್ಯ ಹೇಳಿದ ಮೇಲೆ ಸ್ವಲ್ಪ ಧೈರ್ಯ ಬಂತು,” ಎಂದು ಹೇಳಿದ ಆ ಪುಟ್ಟ ಬಾಲಕ.

“ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿರೋಧ ಪಕ್ಷದ ನಾಯಕರು ಪಾರ್ಲಿಮೆಂಟಿನಲ್ಲೇ ಚೋರ್ (ಕಳ್ಳ) ಅಂತ ಕರೀತಾರೆ. ಕೆಲವು ಟೀವಿ ಚಾನೆಲ್ಲುಗಳ ಕಾರ್ಯಕ್ರಮಗಳಂತೂ ಮೋದಿಯನ್ನೂ ಒಳಗೊಂಡಂತೆ ಎಲ್ಲಾ ರಾಜಕೀಯ ನಾಯಕರನ್ನು ಎಷ್ಟೊಂದು ಅವಮಾನ, ಅಪಹಾಸ್ಯ ಮಾಡುತ್ತವೆ. ಅವುಗಳಿಗೆಲ್ಲಾ ಹೋಲಿಸಿದರೆ ನಮ್ಮ ಮಕ್ಕಳು ಒಂದು ವಿಡಂಬನಾತ್ಮಕ ನಾಟಕದಲ್ಲಿ ಆಡಿರುವ ಮಾತುಗಳು ಏನೂ ಅಲ್ಲ.

ಆದರೂ ನಮ್ಮ ಸಂಸ್ಥೆಯ ಮೇಲೆ ದೇಶದ್ರೋಹದಂತ ಗಂಭೀರ ಪ್ರಕರಣ ದಾಖಲಿಸಲಾಗಿದೆ. ಒಂದು ಮಾನನಷ್ಟ ಮೊಕದ್ದಮೆ ದಾಖಲಿಸಲೂ ಯೋಗ್ಯವಲ್ಲದ ಡೈಲಾಗುಗಳು ಅವು. ಕಾರ್ಯಾಂಗ ವಿಫಲವಾದಾಗ ಇಂತಹ ಅವಘಡಗಳು ನಡೆಯುತ್ತವೆ. ಪೊಲೀಸರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ ಅಂತ ಕಾಣುತ್ತೆ. ಅದಕ್ಕೆ ಇಂತಹ ಚಿಕ್ಕಪುಟ್ಟ ವಿಷಯವನ್ನು ಇಷ್ಟೊಂದು ದೊಡ್ಡ ರಾದ್ಧಾಂತ ಮಾಡುತ್ತಿದ್ದಾರೆ,” ಎನ್ನುತ್ತಾರೆ ಶಾಹೀನ್ ಸಂಸ್ಥೆಯ ತೌಸೀಫ್ ಮಡಿಕೇರಿ.

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಏನು ಹೇಳ್ತಾರೆ ಕೇಳೋಣ ಅಂತ ಎಸ್ಪಿ ಆಫೀಸಿಗೆ ಹೋದೆ. ಈ ಪ್ರಕರಣ ದಾಖಲಾದಾಗ ಎಸ್ಪಿಯಾಗಿ ಇದ್ದವರು ಶ್ರೀಧರ್. ಈಗ ಅವರು ವರ್ಗಾವಣೆಯಾಗಿ ಹೋಗಿ ನಾಗೇಶ್ ಡಿ.ಎಲ್. ಎಂಬುವವರು ಆ ಸ್ಥಾನಕ್ಕೆ ಬಂದಿದ್ದಾರೆ. ಇದು ಎಸ್ಪಿಯಾಗಿ ಅವರಿಗೆ ಮೊದಲ ಪೋಸ್ಟಿಂಗ್ ಅನ್ನಿಸುತ್ತದೆ.

ಅವರನ್ನು ಭೇಟಿಯಾಗಿ ಇಂತಹದ್ದೊಂದು ವಿಡಂಬನಾ ನಾಟಕದಲ್ಲಿ ಮಕ್ಕಳು ಆಡಿರುವ ಡೈಲಾಲ್ ಅನ್ನು ಮುಂದಿಟ್ಟುಕೊಂಡು ದೇಶದ್ರೋಹ ಪ್ರಕರಣ ದಾಖಲಿಸುವ ಅಗತ್ಯವಿತ್ತಾ? ನಾಟಕದಲ್ಲಿನ ಮಕ್ಕಳ ಡೈಲಾಗುಗಳು ನಿಜಕ್ಕೂ ದೇಶದ್ರೋಹಕ್ಕೆ ಸಮ ಅನ್ನಿಸುತ್ತಾ? ಪ್ರಕರಣ ದಾಖಲಾದ ಮೇಲೆ ಶಾಲೆಗೆ ಹೋಗಿ ಐದು ಬಾರಿ ಮಕ್ಕಳನ್ನು ವಿಚಾರಣೆ ಮಾಡುವ ಅಗತ್ಯವಿತ್ತಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದೆ.

ಅದು ನಿಜಕ್ಕೂ ದೇಶದ್ರೋಹವಾಗುತ್ತಾ ಇಲ್ಲವಾ ಎಂಬುದರ ಬಗ್ಗೆ ಅವರೇನೂ ಹೆಚ್ಚು ಮಾತಾಡಲಿಲ್ಲ. ವಿಚಾರಣೆಯಲ್ಲಿ ನೋಡೋಣ ಏನು ಬರುತ್ತೋ ಅಂತ ಅಂದರು. ಆದರೆ, ಶಾಲೆಗೆ ಹೋಗಿ ವಿಚಾರಣೆ ಮಾಡಿದ್ದರ ಬಗ್ಗೆ ಮಾತಾಡಿ ಅಷ್ಟು ಸಲ ಶಾಲೆಗೆ ಹೋಗಿ ವಿಚಾರಣೆ ಮಾಡುವ ಅಗತ್ಯವಿರಲಿಲ್ಲ ಎನ್ನುವ ಮೂಲಕ ಅಷ್ಟರ ಮಟ್ಟಿಗೆ ಪ್ರಾಮಾಣಿಕತೆಯನ್ನು ತೋರಿದರು.

“ವೈಯಕ್ತಿಕವಾಗಿ ನನಗನ್ನಿಸುವುದೇನೆಂದರೆ ಪದೇ ಪದೇ ಶಾಲೆಗೆ ಹೋಗಿ ವಿಚಾರಣೆ ನಡೆಸುವ ಅಗತ್ಯ ಇರಲಿಲ್ಲ. ಪ್ರಾಯಶಃ ವಿಚಾರಣಾಧಿಕಾರಿಗೆ ಒಮ್ಮೆ ಹೋದಾಗಲೇ ಎಲ್ಲಾ ಮಕ್ಕಳು ವಿಚಾರಣೆಗೆ ಸಿಕ್ಕಿರಲಿಕ್ಕಿಲ್ಲ ಅಥವಾ ಎಲ್ಲರನ್ನೂ ಒಂದೇ ದಿನ ವಿಚಾರಣೆ ಮಾಡುವುದಕ್ಕೆ ಆಗಿರಲಿಕ್ಕಿಲ್ಲ. ಹಾಗಾಗಿ ಮತ್ತೆ ಮತ್ತೆ ಹೋಗಬೇಕಾಗಿ ಬಂದಿರಬಹುದು. ಒಂದೇ ಮಗುವನ್ನು ಹಲವು ಬಾರಿ ವಿಚಾರಣೆ ನಡೆಸಿದ್ದು ಬಳಹ ಕಡಿಮೆ ಪ್ರತೀ ದಿನ ಬೇರೆ ಬೇರೆ ಮಕ್ಕಳನ್ನು ವಿಚಾರಣೆ ಮಾಡಲಾಗಿದೆ,” ಎಂದರು.

ಆಯೇಶಾಳನ್ನು ಭೇಟಿಯಾಗುವುದಕ್ಕೆ ಅವಕಾಶ ಇರಲಿಲ್ಲ. ಮಾಧ್ಯಮದವರು, ಇನ್ನಿತರ ಸಂಘಸಂಸ್ಥೆಗಳು ಮತ್ತು ಹೊರಗಿನವರು ಯಾರೂ ಆಕೆಯನ್ನು ಭೇಟಿಯಾಗುವುದಕ್ಕೆ ಅವಕಾಶ ಕೊಡಬಾರಂದೆಂದು ಮಕ್ಕಳ ಹಿತರಕ್ಷಣಾ ಸಮಿತಿ ಶಾಲೆಗೆ ತಿಳಿಸಿದೆ. ಹಾಗಾಗಿ, ಆಯೇಶಾ ಭೇಟಿ ಸಾಧ್ಯವಾಗಲಿಲ್ಲ.

ಆದರೆ, ಫೋನಿನಲ್ಲಿ ಸಿಕ್ಕಳು. ಅವಳ ತಾಯಿಯನ್ನು ನ್ಯಾಯಾಲಯದಲ್ಲಿ ಭೇಟಿಯಾಗಿದ್ದನ್ನು ಮತ್ತೆ ಜೈಲಿಗೆ ಹೋಗಿ ಭೇಟಿಯಾಗಲಿರುವುದನ್ನು ಹೇಳಿದೆ. ನಾನೂ ಭೇಟಿಯಾಗಬೇಕು ಎಂದಳು. ಅಮ್ಮನನ್ನು ನೋಡಬೇಕು ಎಂದಳು. ಏನು ಹೇಳಬೇಕು ಎಂಬುದು ತಿಳಿದಯದೇ ನನಗೆ ತೋಚಿದ ರೀತಿಯಲ್ಲಿ ಒಂದಿಷ್ಟು ಸಮಾಧಾನ ಮಾಡಿ ಫೋನ್ ಕಟ್ ಮಾಡಿದೆ.

ಅಂದಹಾಗೆ, ಬಂಧಿತರಾಗಿರುವ ನಜ್ಬುನ್ನಿಸಾ ಮತ್ತು ಫರೀದಾ ಬೇಗಂ ಅವರಿಗೆ ಮಧ್ಯಂತರ ಜಾಮೀನು ಕೊಡಬೇಕೆಂದು ಸಲ್ಲಿಸಿರುವ ಅರ್ಜಿ ಹಾಗೂ ಶಾಹೀನ್ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಖದೀರ್ ಮತ್ತು ಇತರ ಐವರು ಮ್ಯಾನೇಜ್ಮೆಂಟ್ ಸದಸ್ಯರನ್ನು ಬಂಧಿಸಬಾರದು ಎಂದು ಸಲ್ಲಿಸಿರುವ ನಿರೀಕ್ಷಣಾ ಜಾಮೀನಿನ ಅರ್ಜಿ ನ್ಯಾಯಾಲಯದ ಮುಂದೆ ಇಂದು ವಿಚಾರಣೆಗೆ ಬರುತ್ತಿವೆ. ಬೀದರ್ ರಾಜದ್ರೋಹ ಪ್ರಕರಣದ ಬಲಿಪಶುಗಳಿಗೆ ಒಳ್ಳೆಯದಾಗಲಿ ಎಂದು ನೀವೂ ಹಾರೈಸಿ.

(ಈ ಕುರಿತು ದಿ ಹಿಂದೂ ಪತ್ರಿಯಲ್ಲಿ ನನ್ನದೊಂದು ವರದಿ ಇದೆ. ಆಸಕ್ತರು ಓದಿಕೊಳ್ಳಬಹುದು – ಕುಮಾರ ಬುರಡಿಕಟ್ಟಿ )

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending