ರಾಜಕೀಯ
ಭಾರತದಲ್ಲಿ ಟ್ರಂಪ್ : ಮೋದಿ ಸರಕಾರದ ಅಡಿಯಾಳುತನದ ಪ್ರದರ್ಶನ
- ಈ ಟ್ರಂಪ್ ಭೇಟಿ, ಭಾರತವನ್ನು ಅಮೆರಿಕಾದ ಭೌಗೋಳಿಕ-ರಾಜಕೀಯ ಕಾರ್ಯವ್ಯೂಹಕ್ಕೆ ಸಂಪೂರ್ಣವಾಗಿ ಲಗತ್ತಿಸಿ ಮೋದಿ ಭಾರತದ ಎಲ್ಲ ಹಿತಾಸಕ್ತಿಗಳನ್ನು ಆ ಗುರಿ ಸಾಧನೆಗೆ ಅಡಿಯಾಳಾಗಿಸಿದ್ದನ್ನು ತೋರಿಸಿಕೊಟ್ಟಿದೆ. ಭೇಟಿಯ ಕೊನೆಯಲ್ಲಿ ಹೊರಡಿಸಿದ ಜಂಟಿ ಹೇಳಿಕೆಯಲ್ಲಿ ಇದು ಚೆನ್ನಾಗಿ ಬಿಂಬಿತವಾಗಿದೆ. ಅಮೆರಿಕಾದ ಪ್ರಾಥಮಿಕ ಗುರಿ ಭಾರತವನ್ನು ಒಂದು ನಂಬಿಕಸ್ಥ ವ್ಯೂಹಾತ್ಮಕ ಮತ್ತು ಮಿಲಿಟರಿ ಮಿತ್ರನಾಗಿ ಮಾಡುವುದು ಎಂಬುದು ಭಾರತ-ಅಮೆರಿಕ ಪರಮಾಣು ವ್ಯವಹಾರಕ್ಕೆ ಸಹಿ ಹಾಕಿದಂದಿನಿಂದಲೇ ಸ್ಪಷ್ಟವಾಗಿತ್ತು. ಅಮೆರಿಕಾಕ್ಕೆ ಎದುರಾಗಿ ಭಾರತದ ಹಿತಗಳಿಗೆ ಅತ್ಯಗತ್ಯವಾದ ಒಂದು ವ್ಯಾಪಾರ, ವಾಣಿಜ್ಯ, ದತ್ತಾಂಶ ಸ್ಥಳೀಯಕರಣ ಅಥವ ಬೇರೆ ಯಾವುದೇ ವಿಷಯದಲ್ಲಿ ಮಾತುಕತೆಗಳಿಗೆ ಮೋದಿ ಸರಕಾರಕ್ಕೆ ಯಾವುದೇ ಅವಕಾಶ ಉಳಿದಿಲ್ಲ.
-ಪ್ರಕಾಶ ಕಾರಟ್
ಅಮೆರಿಕ ಸಂಯುಕ್ತ ಸಂಸ್ಥಾನಗಳ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರವರ ಭಾರತ ಭೇಟಿ ಇತ್ತೀಚಿನ ಸಮಯದಲ್ಲಿ ಯಾವುದೇ ಅಮೆರಿಕನ್ ಅಧ್ಯಕ್ಷರ ಭೇಟಿಯಂತಿರಲಿಲ್ಲ. ಇದೊಂದು ಅಧಿಕೃತ ಭೇಟಿಯಾದರೂ, ಅಹಮದಾಬಾದಿನ ಮೊಟೆರ ಕ್ರೀಡಾಂಗಣದಲ್ಲಿ ನಮಸ್ತೆ ಟ್ರಂಪ್ ಇವೆಂಟ್ ಈ ಭೇಟಿಯ ಪ್ರಧಾನ ಸಂಗತಿಯಾಗಿತ್ತು. ಇಲ್ಲಿ ನರೇಂದ್ರ ಮೋದಿ ಕಳೆದ ವರ್ಷ ಅಮೆರಿಕಾದ ಹ್ಯೂಸ್ಟನ್ನಲ್ಲಿ ನಡೆದ ಹೌಡಿ ಮೋದಿಯ ಭಾರತೀಯ ಆವೃತ್ತಿಯನ್ನು ಪ್ರದರ್ಶಿಸಿದರು. ಆದರೆ ಈ ಪ್ರದರ್ಶನವನ್ನು ಕೇವಲ ಒಂದು ತಮಾಷೆ ಎಂದು ತಳ್ಳಿ ಹಾಕುವಂತಿಲ್ಲ. ಇದು ಮೋದಿಯ ಭಾರತ ಟ್ರಂಪ್ನ ಅಮೆರಿಕಾಕ್ಕೆ ಸಂಪೂರ್ಣ ನಿಷ್ಠೆಯನ್ನು-ತಾತ್ವಿಕವಾಗಿ, ರಾಜಕೀಯವಾಗಿ, ವ್ಯೂಹಾತ್ಮಕವಾಗಿ ಮತ್ತು ಸಾಮರಿಕವಾಗಿ- ಘೋಷಿಸಿರುವ ಪರಿ. ಹಿಂದೆಂದೂ ಬಲಪಂಥೀಯ ರಾಜಕೀಯ ಮತ್ತು ಸಿದ್ಧಾಂತ ಇಂದಿನಷ್ಟು ಭಾರತ-ಅಮೆರಿಕ ಸಂಬಂಧಗಳನ್ನು ಜೋಡಿಸುವ ಅಂಟು ಆಗಿರಲಿಲ್ಲ. ಮೋದಿ ಈ ನಮಸ್ತೆ ಟ್ರಂಪ್ನ್ನು ನವಂಬರ್ ತಿಂಗಳ ಅಧ್ಯಕ್ಷೀಯ ಚುನಾವಣೆಗಲ್ಲಿ ತನ್ನ ಗೆಳೆಯ ಟ್ರಂಪ್ರವರ ಪ್ರಚಾರಕ್ಕೆಂದೇ ರೂಪಿಸಿದಂತಿದೆ.
ಈ ಟ್ರಂಪ್ ಭೇಟಿ, ಭಾರತವನ್ನು ಅಮೆರಿಕಾದ ಭೌಗೋಳಿಕ-ರಾಜಕೀಯ ಕಾರ್ಯವ್ಯೂಹಕ್ಕೆ ಸಂಪೂರ್ಣವಾಗಿ ಲಗತ್ತಿಸಿ ಮೋದಿ ಭಾರತದ ಎಲ್ಲ ಹಿತಾಸಕ್ತಿಗಳನ್ನು ಆ ಗುರಿ ಸಾಧನೆಗೆ ಅಡಿಯಾಳಾಗಿಸಿದ್ದನ್ನು ತೋರಿಸಿಕೊಟ್ಟಿದೆ.
ಭೇಟಿಯ ಕೊನೆಯಲ್ಲಿ ಹೊರಡಿಸಿದ ಜಂಟಿ ಹೇಳಿಕೆಯಲ್ಲಿ ಇದು ಚೆನ್ನಾಗಿ ಬಿಂಬಿತವಾಗಿದೆ. ಸಮಗ್ರ ಭೌಗೋಳಿಕ-ವ್ಯೂಹಾತ್ಮಕ ಭಾಗೀದಾರಿಕೆ ಎಂದು ಅದರಲ್ಲಿ ಪ್ರಕಟಿಸಿರುವಂತದ್ದು ಭಾರತವು ಅಮೆರಿಕ ಸಂಯುಕ್ತ ಸಂಸ್ಥಾನಗಳ ವ್ಯೂಹಾತ್ಮಕ, ರಕ್ಷಣಾ ಮತ್ತು ಭದ್ರತಾ ಹಿತಾಸಕ್ತಿಗಳೊಂದಿಗೆ ತನ್ನನ್ನು ಏಕೀಭವಿಸಿಕೊಂಡಿದೆ ಎಂಬ ಘೊಷಣೆಯಲ್ಲದೆ ಬೇರೇನೂ ಅಲ್ಲ.
ಅಮರಿಕಾದ ಪ್ರಾಥಮಿಕ ಗುರಿ ಭಾರತವನ್ನು ಒಂದು ನಂಬಿಕಸ್ಥ ವ್ಯೂಹಾತ್ಮಕ ಮತ್ತು ಮಿಲಿಟರಿ ಮಿತ್ರನಾಗಿ ಮಾಡುವುದು ಎಂಬುದು ಭಾರತ-ಅಮೆರಿಕ ಪರಮಾಣು ವ್ಯವಹಾರಕ್ಕೆ ಸಹಿ ಹಾಕಿದಂದಿನಿಂದಲೇ ಸ್ಪಷ್ಟವಾಗಿತ್ತು. ಅಧ್ಯಕ್ಷ ಟ್ರಂಪ್ ತನ್ನ ಅಹಮದಾಬಾದ್ ಭಾಷಣದಲ್ಲಿ ಅಮೆರಿಕ ಸಂಯುಕ್ತ ಸಂಸ್ಥಾನವು ಭಾರತದ ಪ್ರಧಾನ ರಕ್ಷಣಾ ಭಾಗೀದಾರನಾಗಬೇಕು ಎಂಬುದು ನನ್ನ ನಂಬಿಕೆ, ಆ ರೀತಿಯಲ್ಲಿ ಅದು ಕೆಲಸ ಮಾಡುತ್ತಿದೆ ಎಂದರು.
ಭಾರತ ಈಗಾಗಲೇ ಕಳೆದ ಒಂದು ದಶಕದಲ್ಲಿ ಅಮೆರಿಕಾದಿಂದ 15ರಿಂದ 18 ಬಿಲಿಯ ಡಾಲರುಗಳ ಶಸ್ತ್ರಾಸ್ತ್ರ ಮತ್ತು ರಕ್ಷಣಾ ಉಪಕರಣಗಳನ್ನು ಖರೀದಿಸಿದೆ. ಅಮೆರಿಕಾದೊಡನೆ ಭಾರತ ವ್ಯಾಪಾರದಲ್ಲಿ ಸರಿಯಾದ ರೀತಿಯಲ್ಲಿ ವ್ಯವಹರಿಸುತ್ತಿಲ್ಲ ಎಂಬ ಟ್ರಂಪ್ ಮಾತಿನ ಹಿಂದೆ ಇರುವುದು ಭಾರತ ಅಮೆರಿಕನ್ ಶಸ್ತಾಸ್ತ್ರ ಉತ್ಪಾದಕರಿಂದ ಹೆಚ್ಚೆಚ್ಚು ವೆಚ್ಚದಾಯಕ ಶಸ್ತ್ರಾಸ್ತೃಗಳನ್ನು ಖರೀದಿಸಬೇಕು ಎಂಬ ಒತ್ತಡವೇ. ಈ ಭೇಟಿ ಕಾಲದಲ್ಲಿ 3 ಬಿಲಿಯ ಡಾಲರುಗಳ ಮೌಲ್ಯದ 24 ಎಂಹೆಚ್ 60 ಆರ್ ನಾವಿಕ ಹೆಲಿಕಾಪ್ಟರ್ಗಳನ್ನು ಮತ್ತು ಆರು ಅಪಾಚೆ ಹೆಲಿಕಾಪ್ಟರುಗಳನ್ನು ಖರೀದಿಸುವ ಒಪ್ಪಂದವನ್ನು ಪ್ರಕಟಿಸಲಾಯಿತು.
ಬುನಾದಿ ಮಿಲಿಟರಿ ಒಪ್ಪಂದಗಳು ಎನ್ನಲಾದ ಮೂರು ಒಪ್ಪಂದಗಳಲ್ಲಿ ಎರಡಕ್ಕೆ ಸಹಿ ಹಾಕಿದ ಮೇಲೆ ಮೂರನೇ ಒಪ್ಪಂದ, ಮೂಲ ವಿನಿಮಯ ಸಹಕಾರ ಒಪ್ಪಂದ ಎಂಬುದನ್ನು ಬೇಗನೇ ಪೂರ್ಣಗೊಳಿಸಲಾಗುವುದು ಎಂದು ಜಂಟಿ ಹೇಳಿಕೆ ಸೂಚಿಸುತ್ತದೆ. ಈ ತ್ರಿವಳಿ ಒಪ್ಪಂದಗಳೊಂದಿಗೆ, ಭಾರತದ ಸಶಸ್ತ್ರ ಪಡೆಗಳು ಅಂತರ್ನಿರ್ವಹಣೆ ಮತ್ತು ಜಂಟಿ ಚಟುವಟಿಕೆಗಳ ರೂಪದಲ್ಲಿ ಏಷ್ಯಾದಲ್ಲಿ ಅಮೆರಿಕಾದ ಮಿತ್ರರುಗಳ, ಅಂದರೆ ಜಪಾನ್ ಮತ್ತು ದಕ್ಷಿಣ ಕೊರಿಯಾದ ಸಶಸ್ತ್ರ ಪಡೆಗಳಾಗಿ ಬಿಡುತ್ತವೆ.
ಈ ಜಂಟಿ ಹೇಳಿಕೆ, ಮೋದಿ ಸರಕಾರ ಅಮೆರಿಕ ಸಂಯುಕ್ತ ಸಂಸ್ಥಾನಗಳ ಭಾರತ-ಶಾಂತಸಾಗರ ಕಾರ್ಯವ್ಯೂಹದೊಂದಿಗೆ ತನ್ನನ್ನು ಸಂಪೂರ್ಣವಾಗಿ ಹೊಂದಿಸಿಕೊಂಡಿದೆ ಎಂಬುದನ್ನು ಬಿಂಬಿಸುತ್ತದೆ. ಅದು ಅಮೆರಿಕ-ಭಾರತ-ಜಪಾನ್ ತ್ರಿಪಕ್ಷೀಯ ಶೃಂಗ ಮತ್ತು ಅಮೆರಿಕ, ಜಪಾನ್ಮ ಆಸ್ಟ್ರೇಲಿಯ ಮತ್ತು ಭಾರತ ಇರುವ ಚತುರ್ಪಕ್ಷೀಯ ವೇದಿಕೆಯನ್ನು ಬಲಪಡಿಸುವ ಮಾತಾಡುತ್ತದೆ.
ಆಂತರಿಕ ಭದ್ರತಾ ರಂಗದಲ್ಲಿ ಭಾರತ ಅಮೆರಿಕಾದ ಆಂತರಿಕ ಭದ್ರತಾ ಇಲಾಖೆಯೊಂದಿಗೆ ಸಹಕಾರವನ್ನು ಬೆಳೆಸುತ್ತದೆ, ಅಂದರೆ ನಾವು ಅಮೆರಿಕನ್ ಭದ್ರತಾ ಏಜೆಂಸಿಗಳು ಭಾರತದ ಆಂತರಿಕ ಭದ್ರತಾ ವ್ಯವಹಾರಗಳಲ್ಲಿ ಹೆಚ್ಚಿನ ಪಾತ್ರವಹಿಸುವುದನ್ನು ನಿರೀಕ್ಷಿಸಬಹುದು.
ಈಗ ಭಾರತ-ಅಮೆರಿಕಾ ಸಂಬಂಧಗಳನ್ನು ಬಾಧಿಸುತ್ತಿರುವ ಪ್ರಶ್ನೆಯೆಂದರೆ, ವ್ಯಾಪಾರ ಸಂಬಂಧಗಳು. ಭಾರತೀಯ ಸರಕುಗಳ ಮೇಲೆ ಹೆಚ್ಚಿನ ಸುಂಕಗಳನ್ನು ವಿಧಿಸುವುದು, ಭಾರತದ ಸಾಮಾನ್ಯೀಕೃತ ವ್ಯಾಪಾರ ಆದ್ಯತೆಗಳ ವ್ಯವಸ್ಥೆಯನ್ನು ಹಿಂತೆಗೆದುಕೊಳ್ಳುವುದು ಮುಂತಾದ ಟ್ರಂಪ್ ಆಡಳಿತದ ವೈಷಮ್ಯಭರಿತ ನಡೆಗಳ ನಂತರ, ಅಮೆರಿಕ ಡಬ್ಲ್ಯುಟಿಒ ದಲ್ಲಿ ಭಾರತ ಮತ್ತು ಇತರ ಅಭಿವೃದ್ಧಿ ಹೊಂದುತ್ತಿರುವ ದೇಶಗಳನ್ನು ಇನ್ನು ಮುಂದೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳೆಂದು ವರ್ಗೀಕರಿಸಬಾರದು ಎಂದು ಹೇಳುವವರ ನೇತೃತ್ವವನ್ನು ವಹಿಸಿಕೊಂಡಿದೆ.
ಒಂದು ಸಮತ್ವಹೀನ ಇ-ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಲು ಭಾರತದ ಮೇಲೆ ಅಮೆರಿಕಾ ಒತ್ತಡ ಹೇರುತ್ತಿದೆ, ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ಬೆಲೆ ನಿಯಂತ್ರಣ ಹಾಕುವ ಭಾರತದ ಧೋರಣೆಯನ್ನು ವಿರೋಧಿಸುತ್ತಿದೆ. ಇವೆಲ್ಲವನ್ನು ಕುರಿತಂತೆ ಭಾರತದ ಯಾವೊಂದೂ ನಿಲುವನ್ನು ಅಮೆರಿಕಾ ಒಪ್ಪುವಂತೆ ಮಾಡಲು ಸಾಧ್ಯವಾಗಿಲ್ಲ ಎಂಬುದು ಭೇಟಿ ಕಾಲದಲ್ಲಿನ ಹೇಳಿಕೆಗಳಿಂದ ಸ್ವಯಂವೇದ್ಯವಾಗುತ್ತದೆ. ಜಂಟಿ ಹೇಳಿಕೆ ಒಂದು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಪ್ರಸ್ತಾವಿತ ಮೊದಲ ಹಂತದ ಬಗ್ಗೆ ಮಾತುಕತೆಗಳ ಬಗ್ಗೆಯಷ್ಟೇ ಹೇಳುತ್ತದೆ.
ಅಮೆರಿಕಾಕ್ಕೆ ಎದುರಾಗಿ ಭಾರತದ ಹಿತಗಳಿಗೆ ಅತ್ಯಗತ್ಯವಾದ ಒಂದು ವ್ಯಾಪಾರ, ವಾಣಿಜ್ಯ, ದತ್ತಾಂಶ ಸ್ಥಳೀಯಕರಣ ಅಥವ ಬೇರೆ ಯಾವುದೇ ವಿಷಯದಲ್ಲಿ ಮಾತುಕತೆಗಳಿಗೆ ಮೋದಿ ಸರಕಾರಕ್ಕೆ ಯಾವುದೇ ಅವಕಾಶ ಉಳಿದಿಲ್ಲ.
ಭಾರತದ ವ್ಯೂಹಾತ್ಮಕ ಸ್ವಾಯತ್ತತೆ ಮತ್ತು ಒಂದು ಸ್ವತಂತ್ರ ವಿದೇಶಾಂಗ ಧೋರಣೆಯನ್ನು ಅನುಸರಿಸುವ ಸಾಮರ್ಥ್ಯವನ್ನು ತೀವ್ರವಾಗಿ ಸೀಮಿತಗೊಳಿಸುವಂತಹ ಒಂದು ಹಂತವನ್ನು ಭಾರತ-ಅಮೇರಿಕ ವ್ಯೂಹಾತ್ಮಕ ಸಂಬಂಧಗಳಲ್ಲಿ ತಲುಪಿಯಾಗಿದೆ. ಇತ್ತೀಚೆಗೆ, ಅಮೆರಿಕ ಇರಾನಿನ ಉನ್ನತ ಸೇನಾಧಿಕಾರಿ ಸುಲೆಮಾನ್ರ ಹತ್ಯೆ ಮಾಡಿದಾಗ ಭಾರತ ಅದನ್ನು ಖಂಡಿಸಲಿಲ್ಲ. ಈ ಮೊದಲು, ಇರಾನಿನಿಂದ ತೈಲ ಆಮದು ಮಾಡಿ ಕೊಳ್ಳಬಾರದು ಎಂದು ಆಗ್ರಹಿಸಿದಾಗ ಮೋದಿ ಸರಕಾರ ತಕ್ಷಣವೇ ಅದನ್ನು ಪಾಲಿಸಿತು.
ಇದರ ಬದಲು ಈಗ ಭಾರತ ಅಮೆರಿಕಾದಿಂದ ತೈಲ ಮತ್ತು ಅನಿಲವನ್ನು ಖರೀದಿಸುವ ಒತ್ತಡಕ್ಕೆ ಒಳಗಾಗಿದೆ, ಮೋದಿ ಸರಕಾರ ಇದನ್ನೇ ಒಂದು ಸಾಧನೆಯಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಸಂಪೂರ್ಣವಾಗಿ ಏಕಪಕ್ಷೀಯವಾದ ಶಾಂತಿಯ ಪ್ರಸ್ತಾವವನ್ನು ಭಾರತ ಟೀಕಿಸಲೂ ಇಲ್ಲ. ಈ ಪ್ರಸ್ತಾವದ ಪ್ರಕಾರ ಇಸ್ರೇಲ್ ಸುಮಾರಾಗಿ ಎಲ್ಲ ಆಕ್ರಮಿತ ಪ್ರದೇಶಗಳನ್ನು ಸ್ವಾಧೀನಕ್ಕೆ ಪಡೆಯಬಹುದು. ಆಘಾತಕಾರಿ ಸಂಗತಿಯೆಂದರೆ ವಿದೇಶಾಂಗ ವ್ಯವಹಾರಗಳ ಮಂತ್ರಾಲಯ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ಗೆ ಈ ಟ್ರಂಪ್ ಶಾಂತಿ ಪ್ರಸ್ತಾವವನ್ನು ಪರಿಶೀಲಿಸಬೇಕು ಎಂದು ಹೇಳಿದೆ.
ಭಾರತ ಈ ರೀತಿಯಲ್ಲಿ ಒಂದು ಗಿರಾಕಿ ಸ್ಥಾನಮಾನಕ್ಕೆ ಇಳಿಸಲ್ಪಟ್ಟಿದ್ದರೂ, ಈ ದಿಕ್ಕಿನಲ್ಲಿ ಮೋದಿ ಇಡುವ ಪ್ರತಿಯೊಂದು ಹೆಜ್ಜೆಯನ್ನೂ ಭಾರತಕ್ಕೆ ಒಂದು ಮಹಾಮುನ್ನಡೆ ಎಂದು ಆಳುವ ವಲಯಗಳು ಮತ್ತು ಕಾರ್ಪೊರೇಟ್ ಮಾಧ್ಯಮಗಳು ಹಾಡಿ ಹೊಗಳುತ್ತಿರುವುದು ಈಗಿನ ಕಾಲಾವಧಿಯ ಲಕ್ಷಣ. ಟ್ರಂಪ್ಗೆ ಅಡಿಯಾಳುತನದ ಮೋದಿ ನಿಲುವು ಭಾರತಕ್ಕೆ ಮಾಡಿರುವ ಅನಾಹುತ ಅಪಾರ.
(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.
ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.
ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.
ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.
ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.
ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
ಸುದ್ದಿದಿನ,ಚನ್ನಗಿರಿ: ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ” ಮಿಲ್ಕ್ ಫೆಸ್ಟ್”( ಹಾಲು ಹಬ್ಬ ) ಎಂಬ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಕುಡಿಸುವುದರ ಮೂಲಕ ವಿನೂತನವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ರಾಘು ದೊಡ್ಡಮನಿಯವರು ನಾಗರ ಪಂಚಮಿ ಹಬ್ಬದಂದು ನಮ್ಮ ಜನರು ಕಲ್ಲುನಾಗರಕ್ಕೆ ಮತ್ತು ಹುತ್ತಗಳಿಗೆ ಹಾಲು ಎರೆಯುವ ಸಂಪ್ರದಾಯವಿದೆ ಆದರೆ ಹಾವುಗಳು ಎಂದಿಗೂ ಹಾಲು ಕುಡಿಯುವುದಿಲ್ಲ, ಹಾಲು ಅದರ ಆಹಾರವಲ್ಲ ಹೀಗಿರುವಾಗ ಹಾಲನ್ನು ಈ ರೀತಿಯಲ್ಲಿ ಪೋಲು ಮಾಡುವ ಬದಲಾಗಿ ಅದೇ ಹಾಲನ್ನು ಮಕ್ಕಳಿಗೆ, ಬಡವರಿಗೆ, ರೋಗಿಗಳಿಗೆ ನೀಡಬೇಕು.
ಹಾಲು ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಕರ್ನಾಟಕವೊಂದರಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಮರಣ ಹೊಂದುತ್ತಿದ್ದಾರೆ ಆದ್ದರಿಂದ ನಮ್ಮ ಜನರು ಈ ವಿಷಯವಾಗಿ ಜಾಗೃತರಾಗಬೇಕಿದೆ ಮತ್ತು ಸಮಾಜದಲ್ಲಿ ಹೆಚ್ಚು ಬದಲಾವಣೆ ತರಬಹುದಾದ ಬಹುದೊಡ್ಡ ಜವಾಬ್ದಾರಿ ಹೊಂದಿರುವ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಕ್ಕಳ ಮೂಲಕ ಜನ ಸಮುದಾಯಕ್ಕೆ ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಂತೆ ಕೆಲಸ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಸಹನಾ, ಸಿಂಧೂ, ಬಿಂದು, ಮುಕ್ತ, ಶ್ವೇತ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

