Connect with us

ದಿನದ ಸುದ್ದಿ

ಇಂಡಿಯಾ ಲಾಕ್ ಡೌನ್ : ಇದರ ಸೈಡ್ ಎಫೆಕ್ಟ್ ನಿಯಂತ್ರಣ ಹೇಗೆ..?

Published

on

  • ವಿವೇಕಾನಂದ. ಹೆಚ್.ಕೆ.

ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ಆಘಾತಗಳನ್ನು ಅನುಭವಿಸುತ್ತಾ ಬಂದಿದೆ.

ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳು ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ.

ಇದೀಗ ಕೊರೋನಾ ವೈರಸ್ ಆ ರೀತಿಯ ಒಂದು ಆತಂಕವಷ್ಟೆ. ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ ಅಲ್ಲ. ಕೆಲವು ಇಂಗ್ಲೀಷ್ ಸಿನಿಮಾಗಳಲ್ಲಿ ಬೇರೆ ಲೋಕದಿಂದ ದಾಳಿ ಇಡುವ ಏಲಿಯನ್ ಗಳ ವಿರುದ್ಧ ಹೋರಾಡುವ ದೃಶ್ಯಗಳನ್ನು ನೋಡಿರಬಹುದು. ಅವು ಮಾಡುವ ಅನಾಹುತಗಳು ಮತ್ತು ಕೊನೆಗೆ ಅವುಗಳ ವಿರುದ್ಧ ಜಯ. ಇದೂ ಸಹ ಅದೇ ರೀತಿ. ಆದರೆ ಅದು ಸಿನಿಮಾ ಇದು ವಾಸ್ತವ.

ಡಾರ್ವಿನ್‌ನ ಸಾರ್ವಕಾಲಿಕ ಸಿದ್ದಾಂತದಂತೆ ಬಲಿಷ್ಠವಾದದ್ದು ಮಾತ್ರ ಉಳಿಯುತ್ತದೆ. ಕೊರೋನಾ ವೈರಸ್ ಎಂಬ ಜೀವಾಣು ಮನುಷ್ಯನ ಮೇಲೆ ಯುದ್ಧ ಸಾರಿದೆ. ಸದ್ಯಕ್ಕೆ ಅದು ವಿಜಯದ ರಣಕೇಕೆ ಹಾಕುತ್ತಿದೆ. ಅದರ ವಿರುದ್ಧ ಮನುಷ್ಯ ಉಳಿವಿಗಾಗಿ ಹೋರಾಡುತ್ತಿದ್ದಾನೆ.

ಇದೀಗ ಅದರ ಹೋರಾಟದ ಭಾಗವಾಗಿ ಇಡೀ ಭಾರತವನ್ನು ಬಹುತೇಕ ಬಂದ್ ಮಾಡಲಾಗಿದೆ. ಆಧುನಿಕ ಕಾಲದ ಸುಮಾರು 50 ವಯಸ್ಸು ಆಸುಪಾಸಿನ ಜನರಿಗೆ ಇದರ ನೇರ ಅನುಭವ ಇರಲೇ ಇಲ್ಲ. ಅವರಿಗೆ ಇದೊಂದು ಅನಿರೀಕ್ಷಿತ ಆಘಾತ.

ಇರಲಿ ಈಗ ಮನೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಸಮಯ ಕಳೆಯುವ ಅನಿವಾರ್ಯತೆಗೆ ಸಿಲುಕಿದ್ದೇವೆ. ಈ ಸಮಯದಲ್ಲಿ ನಿಜವಾಗಲೂ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಬಹಳಷ್ಟು ಅಗ್ನಿ ಪರೀಕ್ಷೆಗೆ ಒಳಪಡುತ್ತದೆ. ಇಂದು ನಾಳೆ ನಾಡಿದ್ದು ಹಬ್ಬ, ಅದರ ಆಚರಣೆ,
ಸಾವಿನ ಭಯ ಆತಂಕ ಹೊಸ ಜೀವನ ಶೈಲಿಯ ಒತ್ತಡದಲ್ಲಿ ಅಷ್ಟಾಗಿ ಗೊತ್ತಾಗುವುದಿಲ್ಲ. ಆದರೆ ‌ನಂತರ ದಿನಗಳು ಕಷ್ಟವಾಗುತ್ತದೆ. ಮಾನಸಿಕ ಕಿರಿಕಿರಿ ಉಂಟುಮಾಡುತ್ತದೆ. ಅದಕ್ಕಾಗಿ ಸ್ವಲ್ಪ ಅನುಕೂಲಕರ ಪರಿಸ್ಥಿತಿಯ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಈ ಕೆಲವು ವಿಧಾನಗಳನ್ನು ಅನುಸರಿಸಬಹುದು.

ಯೋಗ ಪ್ರಾಣಾಯಾಮ ಧ್ಯಾನ ವ್ಯಾಯಾಮ ನೃತ್ಯಗಳ ಮೊರೆ ಹೋಗಬಹುದು. ದೈಹಿಕವಾಗಿ ದುರ್ಬಲರಾದವರು ಧ್ಯಾನ ಮತ್ತು ಪ್ರಾಣಾಯಾಮದಿಂದ ಸಾಕಷ್ಟು ಮಾನಸಿಕ ಲಾಭ ಪಡೆಯಬಹುದು.

ಇಲ್ಲಿಯವರೆಗೂ ಓದಲು ಸಾಧ್ಯವಾಗದ ಯಾವುದಾದರೂ ಆಸಕ್ತಿಯ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಕು. ಖಂಡಿತ ಓದು ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಪಾರು ಮಾಡುತ್ತದೆ.

ನಿಮ್ಮ ಆಸಕ್ತಿಯ ಏನನ್ನಾದರೂ ಬರೆಯಲು ಪ್ರಾರಂಭಿಸಿ. ಕನಿಷ್ಠ ದಿನಚರಿ ಅಥವಾ ಬದುಕಿನ ನೆನಪ ಪುಟಗಳಾದರೂ ದಾಖಲಿಸಿರಿ. ಇದು ಓದಿಗಿಂತ ಹೆಚ್ಚು ಸಮಾಧಾನಕರ ಪರಿಣಾಮ ನಿಮ್ಮ ಮನಸ್ಸಿನ ಮೇಲೆ ಬೀರುತ್ತದೆ.

ಹಳೆಯ ಗೆಳೆಯರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ತೃಪ್ತಿಯಾಗುವಷ್ಟು ಮಾತನಾಡಿ. ಅದನ್ನು ಈ ವಿರಾಮದ ಎಲ್ಲಾ ದಿನಗಳಲ್ಲಿಯೂ ಮುಂದುವರಿಸಿ. ಅಕ್ಷರದ ಚಾಟ್ ಗಳಿಗಿಂತ ನೇರ ಮಾತುಗಳು ನಿಮ್ಮನ್ನು ‌ಉಲ್ಲಸಿತರಾಗಿಡುತ್ತದೆ.

ಮಕ್ಕಳು ಮನೆಯವರೊಂದಿಗೆ ಚೆಸ್ ಕೇರಂ ಹಾವು ಏಣಿಯಾಟ ಚೌಕಾಬಾರ ಮುಂತಾದ ಆಟಗಳನ್ನು ಹಾಡಬಹುದು. ಇದು ನಿಮ್ಮ ಬಹುತೇಕ ಸಮಯ ಆಕ್ರಮಿಸುತ್ತದೆ. ಸಮಯ ಕಳೆಯುವುದೇ ತಿಳಿಯುವುದಿಲ್ಲ.

ಕುಟುಂಬ ಸ್ವಲ್ಪ ದೊಡ್ಡದಿದ್ದರೆ ಚೀಟಿ ಬರೆದು ಕಳ್ಳ ಪೋಲೀಸ್ ಆಟ, ಅಂತ್ಯಾಕ್ಷರಿ, ಖಾಲಿ ಹಾಳೆಯ ಮೇಲೆ ಚುಕ್ಕಿಯಿಟ್ಟು ಜೋಡಿಸುವುದು, ಕಣ್ಣಾ ಮುಚ್ಚಾಲೆ, ಯಾವುದಾದರೂ ವಸ್ತುಗಳನ್ನು ಮನೆಯಲ್ಲಿ ಮುಚ್ಚಿಟ್ಟು ಹುಡುಕುವುದು ಮುಂತಾದ ಆಟಗಳನ್ನು ಆಡಬಹುದು. ಇದು ಸ್ವಲ್ಪ ಖುಷಿ ಕೊಡುತ್ತದೆ.

ಸರಳ ರೀತಿಯ ಅಡುಗೆಗಳ ಪ್ರಯೋಗ ಮಾಡಬಹುದು. ಇಲ್ಲಿಯವರೆಗೂ ಮನೆಯಲ್ಲಿ ಯಾರು ಅಡುಗೆ ಮಾಡುತ್ತಿದ್ದರೋ ಅದನ್ನು ಬದಲಾಯಿಸಿ ಮತ್ತೊಬ್ಬರು ಒಂದಷ್ಟು ಪ್ರಯತ್ನಿಸಬಹುದು. ಆದರೆ ಮಿತ ಆಹಾರ ಒಳ್ಳೆಯದು.

ಆರೋಗ್ಯದ ಕಾರಣಕ್ಕಾಗಿ ಉಪವಾಸ ವೃತಗಳನ್ನು ಸಹ ಮಾಡಬಹುದು. ಹೌದು ಏಕತಾನತೆ ಮುರಿಯಲು ವೈದ್ಯರ ಸಲಹೆ ಮೇರೆಗೆ ಉಪವಾಸ ದೇಹ ಮತ್ತು ಮನಸ್ಸಿನ ನಿಯಂತ್ರಣಕ್ಕೆ ಒಳ್ಳೆಯ ಮದ್ದು.
ಅದು ಅವರವರ ಆರೋಗ್ಯ ಸ್ಥಿತಿ ಅವಲಂಬಿಸಿರುತ್ತದೆ.

ಅನುಕೂಲ ಇದ್ದರೆ ಅತ್ಯುತ್ತಮ ಸಿನಿಮಾ ನೋಡಬಹುದು ಮತ್ತು ಸಂಗೀತ ಆಲಿಸಬಹುದು. ಇವು ಖಂಡಿತವಾಗಿ ನಿಮ್ಮನ್ನು ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತದೆ. ಕೆಲವೊಮ್ಮೆ ಆಳವಾಗಿ ಯೋಚಿಸುವಂತೆ ಪ್ರೇರೇಪಿಸುತ್ತದೆ.

ಮೊಬೈಲ್ ನಲ್ಲಿರುವ ಅನೇಕ ಹೊಸ ಹೊಸ ತಾಂತ್ರಿಕ ಸಾಧ್ಯತೆಗಳನ್ನು ಕಲಿಯಲು ಪ್ರಯತ್ನಿಸಬಹುದು. ಸದಾ ವೇಗದ ಜೀವನದಲ್ಲಿ ನಾವು ಕನಿಷ್ಠ ಉಪಯೋಗ ಮಾತ್ರ ತಿಳಿದಿರುತ್ತೇವೆ. ಆದರೆ ಇಂದಿನ ಸ್ಮಾರ್ಟ್ ಫೋನ್ ಗಳಲ್ಲಿ ವಿಶ್ವ ರೂಪ ದರ್ಶನ ಪಡೆಯಬಹುದು.

ಮಾತಿನ ಸಂತೆಯಲ್ಲಿ ಮರೆಯಾಗಿದ್ದ ಮೌನದ ದಿವ್ಯತೆಯನ್ನು ಹಿಡಿದಿಡಲು ಪ್ರಯತ್ನಿಸಬಹುದು. ಮೌನ ತುಂಬಾ ಕಠಿಣ. ಆದರೆ ‌ ಅದು ಒಮ್ಮೆ ಅನುಭವಕ್ಕೆ ಸಿಕ್ಕರೆ ತುಂಬಾ ಪರಿಣಾಮಕಾರಿ. ಅದೊಂದು ಅನುಭಾವ. ಸಾಧ್ಯವಾದರೆ ಪ್ರಯತ್ನಿಸಿ.

ಇದು ನನಗೆ ಹೊಳೆದ ಕೆಲವು ವಿಷಯಗಳು ಮಾತ್ರ. ಇದರ ಜೊತೆಗೆ ನಿಮಗೂ ಹಲವಾರು ವಿಧಾನಗಳು ತಿಳಿದಿರುತ್ತದೆ. ನಾನು ಈ ಮೂಲಕ ಮತ್ತೊಮ್ಮೆ ನೆನಪಿಸುತ್ತಿದ್ದೇನೆ ಅಷ್ಟೆ.

ಇದರ ಜೊತೆ ಖಂಡಿತವಾಗಿಯೂ ಬಡಜನರನ್ನು ಜ್ಞಾಪಿಸಿಕೊಳ್ಳಲೇ ಬೇಕು. ಕರೋನ ವಿರುದ್ಧ ಈ ಕರ್ಪ್ಯೂ ಹೋರಾಟದ ಬಹುದೊಡ್ಡ ಸೈಡ್ ಎಪೆಕ್ಟ್ ಎಂದರೆ ಬೀದಿ ಬದಿಯ ಮನೆ ಇಲ್ಲದ ಸುಮಾರು 10 ಕೋಟಿ ಕಡುಬಡವರ ಬಹುತೇಕ ಸರ್ವನಾಶ.

ಸರ್ಕಾರಗಳು ಏನೇ ಹೇಳಿದರು ಈ‌ ಸಂದರ್ಭದಲ್ಲಿ ಆಡಳಿತ ಯಂತ್ರ ಅವರನ್ನು ಮುಟ್ಟುವುದು ತುಂಬಾ ಕಷ್ಟವಿದೆ. ಅವರು ಯಾವುದೇ ದಾಖಲೆ ಹೊಂದಿರದೆ ಲೆಕ್ಕಕ್ಕೇ ಸಿಗುವುದಿಲ್ಲ. ಉಳ್ಳವರು ಮತ್ತು ದಾನ ಮಾಡುವ ಮನಸ್ಸಿರುವವರು ಕೂಡ ಅವರಿಗೆ ಕೈಲಾದ ಸಹಾಯ ಮಾಡಲಾಗದ ಅಸಹಾಯಕ ಸ್ಥಿತಿ ಏರ್ಪಟ್ಟಿದೆ. ಹೊರಗೆ ಹೋಗುವಂತಿಲ್ಲ.

ಮುಖ್ಯವಾಗಿ ರಾಜ್ಯ ರಾಜಧಾನಿಗಳ, ದೊಡ್ಡ ನಗರಗಳ ಬಸ್ ನಿಲ್ದಾಣ, ರೈಲು ನಿಲ್ದಾಣ, ಫ್ಲೈ ಓವರ್ ಗಳ ಬಳಿ ಮಲಗುವವರ ಸ್ಥಿತಿ ನಾಯಿಗಿಂತ ಕಡೆಯಾಗಿರುತ್ತದೆ. ಇಲ್ಲ ಬೀದಿ ನಾಯಿಗಳು ಇನ್ನೂ ದುಸ್ಥಿತಿಗೆ ಹೋಗಿ ಜೀವ ಕಳೆದುಕೊಳ್ಳುತ್ತವೆ.

ನಾವು ಎಷ್ಟು ಸಾಧ್ಯವೋ ಎಲ್ಲಿ ಸಾಧ್ಯವೋ ಎಷ್ಟು ಅನುಕೂಲವೋ ಅದನ್ನು ಬಳಸಿಕೊಂಡು ಇಂತಹವರಿಗೆ ಸಹಾಯ ಮಾಡಲು ಪ್ರಯತ್ನಿಸೋಣ. ಅದು ಉಪಕಾರವಲ್ಲ ಕರ್ತವ್ಯ ಎಂದು ಭಾವಿಸೋಣ. ದಿನಗೂಲಿ ನೌಕರರು ಸಹ ಇದೇ ವ್ಯಾಪ್ತಿಯಲ್ಲಿ ಬರುತ್ತಾರೆ.

ಇಷ್ಟೆಲ್ಲದರ ನಡುವೆಯೂ ಈ ಸಿನೆಮಾ ಹಾಡು ಗುನುಗುನಿಸುತ್ತಿರಿ…ನಗುನಗುತಾ ನಲಿ ನಲಿ,
ಏನೇ ಆಗಲಿ..

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending