ಲೈಫ್ ಸ್ಟೈಲ್
ನಾಡಿಗೆ ಬಂದ ಕಾಡುಕೋಣ..!
- ಪಶುವೈದ್ಯರುಗಳ ಪೇಷಂಟುಗಳು ಬರೀ ದನ, ಎಮ್ಮೆ, ಕೋಳಿ,ಕುರಿ, ಆಡು, ನಾಯಿ, ಬೆಕ್ಕು, ಕೋಳಿ, ಹಂದಿ ಇತ್ಯಾದಿಗಳಿಗೆ ಸೀಮಿತವಾಗಿರದೆ ಮೊಲ, ಇಲಿ, ಕೋತಿ, ಆಮೆ, ಹುಲಿ, ಸಿಂಹ, ಒಂಟೆ, ಆನೆ, ಚಿರತೆ, ಹಾವು , ನರಿ, ಜಿಂಕೆ, ಕಡಿವೆ ಇತ್ಯಾದಿ ತರಹೇವಾರಿ ವನ್ಯಜೀವಿಗಳ ಚಿಕಿತ್ಸೆ ಮತ್ತು ಜೀವನ ಕ್ರಮದ ಬಗ್ಗೆಯೂ ತಿಳಿದುಕೋಂಡಿರಬೇಕಾಗುತ್ತದೆ. ಕೆಲವೊಮ್ಮೆ ಈ ಪ್ರಾಣಿಗಳನ್ನು ಚಿಕಿತ್ಸೆ ಮಾಡುವಾಗ ಸಾಕಷ್ಟು ಅಪಾಯವೂ ಕಾದಿರುತ್ತದೆ. ಗಾಯಗೊಂಡ ಕಾಡುಕೋಣವೊಂದರ ಚಿಕಿತ್ಸೆಯ ರೋಚಕ ಅನುಭವ.
–ಡಾ. ಎನ್.ಬಿ.ಶ್ರೀಧರ
ಶನಿವಾರವೊಂದರ ಮಧ್ಯಾಹ್ನ 11 ಘಂಟೆಯಿರಬಹುದು. ಆ ದಿನ ತಾಳಗುಪ್ಪದಲ್ಲಿ ಸಂತೆ. ಆಸ್ಪತ್ರೆಯಲ್ಲಿ ಗಿಜಿಗುಟ್ಟುವಷ್ಟು ಜನ ಮತ್ತು ತರಹೆವಾರಿ ಕೇಸುಗಳು. ಹುಳವಾಗಿ ಗಬ್ಬು ನಾರುವ ಗಾಯದಿಂದ ಹಿಡಿದು ಸಂತಾನಹರಣ ಚಿಕಿತ್ಸೆಗೆಂದು ಕಾಯುತ್ತಿರುವ ಪಕ್ಕದ ತಾಲೂಕು ಸೊರಬದ ಶ್ವಾನಗಳ ಸವಾರಿ ಕ್ಯೂನಲ್ಲಿತ್ತು. ಒಳರೋಗಿಗಳಾಗಿ ಮಾಡಿಕೊಂಡ ಕೆಲವು “ಪೇಷಂಟು”ಗಳ ಚಿಕಿತ್ಸೆಯೂ ಕಾದಿತ್ತು. ನಾನೇ ಪ್ರಯೋಗಕ್ಕೆಂದು ತಂದು ಸಂಶಯಿತ ವಿಷಗಿಡಗಳನ್ನು ತಿನ್ನಿಸುಸುತ್ತಿರುವ ಕರುಗಳ ಗುಂಪಿತ್ತು. ಮನೆಗೆ ಚಿಕಿತ್ಸೆಗೆ ಕರೆದಿರುವ “ಟೂರಿಂಗ್ ಪೇಷಂಟು”ಗಳ ಪಟ್ಟಿಯೂ ಸಹ ಬೆಳೆಯುತ್ತಿತ್ತು.
ಅಷ್ಟರಲ್ಲೇ ನನ್ನ ಶಿಷ್ಯ “ಸಾರ್..ಡಿ ಎಪ್ ಓ ಅವರು ಲೈನಿನಲ್ಲಿದ್ದಾರೆ. ಗರಂ ಆಗಿದಾರೆ.. ನಿಮ್ಮ ಜೊತೆ ಮಾತಾಡಬೇಕಂತೆ “ ಎಂದ. ಯಾವುದೋ ಕಾಡು ಕೋಣವೋ ಅಥವಾ ಹುಲಿ ಸಿಂಹ, ಜಿಂಕೆ ಇತ್ಯಾದಿ ವನ್ಯೃಗಗಳು ಕಾಡಿನಲ್ಲಿ ಸತ್ತಿರಬೇಕು. ಮರಣೋತ್ತರ ಪರೀಕ್ಷೆ ಮಾಡಲು ಕರೆಯುತ್ತಿದ್ದಾರೆ. ಈ ದಿನ ಹಳ್ಳ ಹಿಡಿಯಿತು. ದೇಶದ ಆರ್ಥಿಕತೆಗೆ ನಮ್ಮ ಹಸು ಎಮ್ಮೆಗಳಂತೆ ಒಂದಿನಿತೂ ಕೊಡುಗೆ ನೀಡದ, ಕರದಾತರು ಕಷ್ಟಪಟ್ಟು ನೀಡಿದ ಹಣವನ್ನು ಜೀವವೈವಿಧ್ಯದ ಸಂರಕ್ಷಣೆಯ ಹೆಸರಿನಲ್ಲಿ ನುಂಗಿ ನೀರು ಕುಡಿಯುತ್ತಿರುವ ಅಧಿಕಾರಿಗಳ ಗುಂಪೊಂದರ ಪುನರ್ವಸತಿಯಾಗಿ ಕೇಂದ್ರವಾಗಿ ಮಾರ್ಪಟ್ಟ ಇಲಾಖೆಯೆಂದು ನನ್ನ ಮಿತ್ರ ಹೇಳುವ ಅರಣ್ಯ ಇಲಾಖೆಯ ಯಾವುದೋ ಕಾಡು ಪ್ರಾಣಿ ಸತ್ತರೆ ಎಲ್ಲ ಕೆಲಸ ಬದಿಗೊತ್ತಿ ಅದರ ಕೊಳೆತು ಹೋದ ಶವಪರೀಕ್ಷೆಗೆ ಇಲ್ಲಿಂದ ಹೋಗಬೇಕಾದ ಅನಿವಾರ್ಯತೆಯನ್ನು ಶಪಿಸುತ್ತಾ ಫೋನು ಎತ್ತಿದೆ. ಆಕಡೆಯಿಂದ “ ಡಾಕ್ಟ್ರೇನ್ರಿ.. ಎಷ್ಟೊತ್ರಿ ಬರೋದು? ನಾನು ಸಾಗರ ಡಿಎಪ್ಪೋ ಕಣ್ರೀ… ತುಮರಿ ಹತ್ರ ಕಾಡುಕೋಣ ಅಡಿಕೆ ತೋಟದಲ್ಲಿ ಮನೆ ಮಾಡಿ ಬಿಟ್ಟಿದೆ.. ಅದ್ಕೆ ಒಂದಿಷ್ಟು ಚಿಕಿತ್ಸೆ ಆಗ್ಬೇಕಿತ್ತು.. ತುಮರಿಗೆ ಬೇಗ ಬಂದ್ಬಿಡಿ.. ಈ ಪೇಪರ್ರಿನವರು ತಲೆ ತಿಂತಾ ಇದ್ದಾರೆ” ಎಂದು ಅವರ ಅಧಿಕಾರಿ ಗತ್ತಿನಲ್ಲೇ ಗಾರ್ಡು ಫಾರೆಸ್ಟರುಗಳಿಗೆ ನೀಡುವಂತೆ ಆದೇಶ ನೀಡಿದರು.
ಇದೊಳ್ಳೆ ಕಥೆಯಾಯ್ತಲ್ಲ !! ದನದ ಚಿಕಿತ್ಸೆ ಬಿಟ್ಟು ಈ ಕಾಡುಕೋಣದ ಚಿಕಿತ್ಸೆಗೆ ಹೋಗ್ಬೇಕಲ್ಲ ? ಎಲ್ಲೋದ್ರು ಈ ಕಾಡುಪ್ರಾಣಿ ಡಾಕ್ಟರುಗಳು? ಎಂದು ಪರಿಚಿತರಾದ ಅರಣ್ಯ ಇಲಾಖೆಯ ಸ್ನೇಹಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಫೋನಾಯಿಸಿದೆ. ಅದರ ಪ್ರವರ ತಿಳಿಯಿತು.
“ಅಡಿಕೆ ತೋಟದಲ್ಲಿ ಮನೆ ಮಾಡಿದ ಕಾಡುಕೋಣ” “ಕಾಡಿನಿಂದ ನಾಡು ಸೇರಿದ ಕಾಡುಕೋಣ” ಇತ್ಯಾದಿ ಶಿರ್ಷಿಕೆಯ ಸುದ್ಧಿಗಳು ದಿನಪತ್ರಿಕೆಗಳಲ್ಲಿ ಬರತೊಡಗಿದ ಮೇಲೆಯೇ ನಮಗೆ ಗೊತ್ತಾಗಿದ್ದು ಕಾಡುಕೋಣವೊಂದು ತುಮರಿ ಭಾಗದ ಹೆಗಡೆಯೊಬ್ಬರ ತೋಟ ಸೇರಿ ಅಲ್ಲಿಯೇ ಠಿಕಾಣಿ ಹೂಡಿದೆ ಎಂದು. ಸಾಮಾನ್ಯವಾಗಿ ನಮ್ಮ ಜಾನುವಾರುಗಳ ಜಂಜಾಟದಲ್ಲಿಯೇ ಮುಳುಗಿಹೋಗುವ ನಾವು ಆಗೆಲ್ಲ ಕಾಡುಪ್ರಾಣಿಗಳ ಚಿಕಿತ್ಸೆಗೆ ಹೋಗುವುದು ಕಡಿಮೆಯಾಗಿತ್ತು. ಅದಕ್ಕೆಂದೇ ಶಿವಮೊಗ್ಗದಲ್ಲಿ ಅರಣ್ಯ ಇಲಾಖೆಯಲ್ಲಿರುವ ಇರುವ “ಆನೆ ಡಾಕ್ಟರು” ಹುಲಿ ಸಿಂಹ” ಡಾಕ್ಟರುಗಳಾದ ವನ್ಯಜೀವಿ ಪಶುವೈದ್ಯರು ಬಂದು ಏನೇನು ಬೇಕೋ ಅದೆಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದರು.
ಅದರೆ ಆಗ ವನ್ಯಜೀವಿ ತಜ್ಞ ಪಶುವೈದ್ಯರು ದೂರದೂರಿನಲ್ಲಿ ಪುಂಡ ಕಾಡಾನೆಗಳು ಊರು ನುಗ್ಗಿ ದಾಂಧಲೆ ಎಬ್ಬಿಸಿದ್ದರಿಂದ ಅವುಗಳ ತರಲೆ ನಿಲ್ಲಿಸಿ ಖೆಡ್ಡಾಕ್ಕೆ ಕೆಡವಲು ನಾಡಾನೆಗಳನ್ನು ತೆಗೆದುಕೊಂಡು ಹೋಗಿ ಕೊಡಗಿನ ಹತ್ತಿರ ಯಾವುದೇ ಹಳ್ಳಿಯಲ್ಲಿ ಕಳೆದು ೧೫ ದಿನಗಳಿಂದ ಬೀಡು ಬಿಟ್ಟಿದ್ದು ಅವರು ಬಂದು ಈ ಕಾಡು ಪ್ರಾಣಿಯ ಚಿಕಿತ್ಸೆ ಮಾಡುವವರೆಗೆ ದಿನನಿತ್ಯ ಕಾಟಕೊಡುವ ದಿನಪತ್ರಿಕೆಗಳಿಂದ ಬಚಾವಾಗಲು ಡಿಎಪ್ಪೋ ನನಗೆ ಫೋನಾಯಿಸಿದ್ದಾರೆಂದೂ, ಸಾಗರ ಪಶುವೈದ್ಯ ಆಸ್ಪತ್ರೆಯ ಪಶುವೈದ್ಯರೆಲ್ಲ ತುಮರಿ ಏರಿಯಾವು ನನ್ನ ವ್ಯಾಪ್ತಿಯಲ್ಲಿ ಬರುವುದರಿಂದ ನನಗೆ ತಿಳಿಸಲು ಸೂಚಿಸಿದ್ದಾರೆಂದೂ ತಿಳಿಯಿತು.
ಸರಿ ನಮ್ಮಾಸ್ಪತ್ರೆಯಿಂದ ಯಾವ ರೂಟಿನಲ್ಲೇ ಹೋದರು 60-70 ಕಿಲೋಮೀಟರು ಇರುವ ತುಮರಿಗೆ ಹೋಗಲು ಎಲ್ಲಾ ಚಿಕಿತ್ಸಾ ಪರಿಕರಗಳನ್ನು ಸಿದ್ಧ ಮಾಡಿಕೊಳ್ಳಲು ನನ್ನ ಶಿಷ್ಯನಿಗೆ ತಿಳಿಸಿದೆ. ಕಾಡು ಪ್ರಾಣಿಗಳಿಗೆ ಅರಿವಳಿಕೆ ನೀಡುವ ಡಾರ್ಟ್ ಗನ್ನು ಇಲ್ಲವೆಂದೂ, ಕಾಡೆಮ್ಮೆ (ಕಾಡು ಕೋಣ?), ಮೈಮೇಲೆ ಬಂದರೆ ಕಷ್ಟವಿದೆಯೆಂದೂ ಯಾವುದಕ್ಕೂ ಮನೆಗೆ ಹೋಗಿ ತಿಳಿಸಿ ಬರುವೆನೆಂದೂ ನನ್ನ ಶಿಷ್ಯ ಮನೆಗೆ ಹೊರಟ.
ತುಮರಿ, ಬ್ಯಾಕೋಡು, ಕಾರ್ಗಲ್ಲು, ಶಿರವಂತೆ, ಅರಳಗೋಡು, ಕೊಂಜವಳ್ಳಿ, ಸೈದೂರು ಇತ್ಯಾದಿ ಈಗ ಆಸ್ಪತ್ರೆಯಾಗಿರುವ ಸುಮಾರು 90ಕಿಲೋಮೀಟರ್ ವ್ಯಾಪ್ತಿಯ ವಿಸ್ತಾರ ಪ್ರದೇಶಗಳಿಗೆ ಏಕೈಕ ತಜ್ಞ ಪಶುವೈದ್ಯನಾದ ನಾನು ಈ ಭಾಗದಲ್ಲಿ ಯಾವುದೇ ನಾಡು ಅಥವಾ ಕಾಡು ಪ್ರಾಣಿಗಳಿಗೆ ತೊಂದರೆಯಾದರೂ ಮರಣೋತ್ತರ ಪರೀಕ್ಷೆ ಅಥವಾ ಚಿಕಿತ್ಸೆ ನೀಡುವ ಮಹತ್ತರ ಜವಾಬ್ದಾರಿ ಹೊತ್ತು ಕೊಂಡಿದ್ದೆ.
ಎಂದಿನಂತೆ ನನ್ನ ಸುಜ಼ುಕಿ ಸವಾರಿ ನನ್ನ ಶಿಷ್ಯನ ಜೊತೆ ತುಮರಿ ಕಡೆ ಹೊರಟಿತು. ಸಾಗರ ಸೇರಿ ಸಾಗರದಿಂದ ಹೊಳೆಬಾಗಿಲಿನ ಬಾರ್ಜು ದಾಟಿ ಇನ್ನೂ 25 ಕಿಮಿ ಅಂಕು ಡೊಂಕಾದ ರಸ್ತೆಗಳಲ್ಲಿ ಸಾಗಿ ಕಾಡುಕೋಣದ ವಿಷಯ ಕೇಳುತ್ತಾ ಸಾಗಿದೆವು. ಗಮನದ ಹಳ್ಳಿ ತಲುಪಿ ಅಲ್ಲಿ ಹೆಗ್ಡೇರ ತೋಟದಲ್ಲಿ ಗಮಯದ ಜಾಡು ಹಿಡಿದು ಸಾಗಿದೆವು. ಬೈಕಿನಲ್ಲಿ ಸಾಗಿ ಸಾಗಿ ಬೇಸರ ಎಷ್ಟೊತ್ತಿಗಪ್ಪಾ ಈ ಊರು ಬರುತ್ತೆ ಎನ್ನುವಷ್ಟರಲ್ಲಿ ಗಮಯದ ಉಗಮ ಸ್ಥಾನ ಬಂತು.
ಗಮಯದ ಸುತ್ತ ಜನವೋ ಜನ. ಕೆಲವು ಅರಣ್ಯ ಇಲಾಖೆ ಸಿಬ್ಬಂದಿ ಜಮೆಯಾಗಿ ಅವರ ಅಮೂಲ್ಯ ವಸ್ತುವಿನ ರಕ್ಷಣೆ ಮಾಡುತ್ತಿದ್ದರು. ಒಂದೆರಡು ಪೋಲೀಸ್ ಸಿಬ್ಬಂದಿಯೂ ಸಹ ಜನರ ಬೀಡು ಕಡಿಮೆ ಮಾಡಲು ಹರ ಸಾಹಸ ಪಡುತ್ತಿದ್ದರು. ಹೋಯ್.. ಹೋಯ್… ಡಾಕ್ಟ್ರು ಬಂದ್ರು .. ದಾರಿ ಬಿಡಿ” ಎನ್ನುವ ಆಜ್ಞೆ ಪೋಲೀಸರಿಂದ ಬಂದು ಎಲ್ಲಾ ಜನರಿಂದ ನಾನೇ ಫ಼ೋಕಸ್ಸಾದೆ. ಕಾಡು ಕೋಣವನ್ನು ಸುಮಾರು ೧೫ ಅಡಿ ದೂರದಿಂದ ನೋಡಿದೆ. ಬಿಳಿಯ ಪಟ್ಟಿಯ ಕುತ್ತಿಗೆ, ಕಟ್ಟು ಮಸ್ತಾದ ದೇಹ, ರಾಜಗಾಂಭೀರ್ಯದಲ್ಲಿ ಇರಬೇಕಾದ ಕಾಡುಕೋಣ ಲಾಚಾರ್ ಎದ್ದು ಬಡ್ಕಾಟೆ ಹೆಣದಂತೆ ಹಿಂಡಿ ನೀಡದೇ ಇರುವ ಏಳಲು ಸಾಧ್ಯವಾಗದ ಮುದಿ ಎಮ್ಮೆಯಾಗಿ ಹೋಗಿತ್ತು. ಆದರೂ ಅದರ ಸ್ಥಿತಿ ಗಮನಿಸಲು ಸ್ವಲ್ಪ ಹತ್ತಿರ ಹೋದರೆ ಬುಸ್ ಎಂದು ಶಬ್ಧ ಮಾಡುತ್ತಾ ಏರಿ ಬಂತು.
ಸರಿಯಾಗಿ ಗಮನಿಸಿದಾಗ ಮುಂದಿನ ಬಲಗಾಲಿನ ಮೇಲ್ಬಾಗ ಉಬ್ಬಿದಂತೆ ಕಂಡು ಬಂತು. ಇದರ ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಹೋಗುವುದು ಗ್ಯಾರಂಟಿ ಅನ್ನಿಸಿತು. ಅರಣ್ಯ ಇಲಾಖೆಯವರಿಗೆ “ ಈ ಕೋಣನ್ನ ಹೇಗಾದ್ರೂ ಹಿಡಿದು ಕೊಟ್ರೆ, ಅದಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿ ಏನಾದರೂ ಮಾಡಬಹುದು. ನಮ್ಮ ಹತ್ತಿರ ಅರಿವಳಿಕೆಯನ್ನು ದೂರದಿಂದಲೇ ನೀಡುವ “ಡಾರ್ಟ್ ಗನ್” ಇರದೇ ಇರುವುದರಿಂದ ಯಾವುದೇ ಕ್ಷಣದಲ್ಲಿ ಕಾಡು ಕೋಣ ನುಗ್ಗಿದರೆನಾಮಾವಶೇಷವಾಗುವ ಸಾಧ್ಯತೆ ಇತ್ತು. ಅದು ಕೃಷವಾಗಿರುವುದನ್ನು ಗಮನಿಸಿದರೆ ಅದಕ್ಕೆ ಗಂಭೀರವಾದ ಕಾಯಿಲೆ ಇರುವುದು ಗ್ಯಾರಂಟಿಯಾಗಿತ್ತು. ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಯಮಪುರಿ ಸೇರಿ ಖಾಯಂ ಆಗಿ ಯಮನ ವಾಹನ ಆಗುವ ಸಾಧ್ಯತೆ ಇತ್ತು.
ನನ್ನ ಶಿಷ್ಯ ಖಾಯಂ ಎಮ್ಮೆಗಳನ್ನು ಕೆಡಗಿ ಅಭ್ಯಾಸ ಇದ್ದಾತ. ಆತ “ ಸಾರ್.. ಒಂದು ಕೈ ನೋಡಿಯೇ ಬಿಡ್ಲಾ ಸಾರ್.. ಕಾಡುಕೋಣ ಹ್ಯಾಂಗಿದ್ರೂ ಬಡಕಲಾಗಿದೆ. ನಮ್ಮ ಎಮ್ಮೆಗಳಷ್ಟೇ ತಾಕತ್ತು ಇರ್ಬಹುದು, ಹಗ್ಗ ಹಾಕಿ ಕೆಡವಿ ಬಿಡ್ತೀನಿ “ ಎಂದು ಹುಂಬ ಧೈರ್ಯ ತೋರಿದ. ನಾನು ಮಾತ್ರ ಈ ರಿಸ್ಕ್ ತೆಗೆದುಕೊಳ್ಳಲು ಸುತರಾಂ ಸಿದ್ದವಿರಲಿಲ್ಲ. ಎಲ್ಲಾದರೂ ನಮ್ಮ ಅಂದಾಜು ತಪ್ಪಿ ಈ ಕಾಡುಕೋಣ ನುಗ್ಗಿ ಯಾರನ್ನಾದರೂ ಕೆಡಗಿ ಕೊಂದರೆ ಯಾರು ಜವಾಬ್ದಾರರರು? ಎಂದು “ ಈ ಕಾಡು ಪ್ರಾಣಿ ಸಹವಾಸ ಸಾಕಪ್ಪಾ.. ಅದರ ಡಾಕ್ಟರುಗಳು ಬಂದು ಏನಾದರೂ ಮಾಡ್ಲಿ. ನಮ್ಮಿಂದ ದನ ಆರಾಮವಾದ್ರೆ ಸಾಕು” ಎಂದು ರಾಗ ಎಳೆದೆ. ಆದರೂ ವೃತ್ತಿಯ ತುಡಿತ ಇದೆಯಲ್ಲ.. ಏನಾದರೂ ಮಾಡಲೇ ಬೇಕು. ಸುತ್ತ ಮುತ್ತ ಸೇರಿದ ಜನ ಎಲ್ಲಾ ತರಹೇವಾರಿ ಕಾಮೆಂಟು ಪಾಸು ಮಾಡಲಿಕ್ಕೆ ಪ್ರಾರಂಭಿಸಿದರು.
ಅವರೊಲ್ಲಬ್ಬ “ಇವರು ದನಕ್ಕೆ ಮಾತ್ರ ಡಾಕ್ಟರು. ಎಮ್ಮೆ ಮುಕಳಿ ಒಳಗೆ ಕೈ ಹಾಕಿ ಇನ್ಸೆಮಿನೇಷನ್ ಮಾಡೋದು ಮಾತ್ರ ಇವರಿಗೆ ಕಲ್ಸಿರ್ತಾರೆ. ಈ ಕಾಡುಕೋಣದ ಟ್ರೀಟ್ಮೆಂಟಿಗೆಲ್ಲಾ ಮೈಸೂರಿನಿಂದ ಎಕ್ಸ್ಪರ್ಟ್ಸ್ ಬರ್ಬೇಕು. ಸುಮ್ನೇ ಟೈಮ್ ಪಾಸಿಗೆ ಬಂದಿದ್ದಾರೆ. ಅದ್ರ ಜೊತೆ ಈ ಫ಼ಾರೆಸ್ಟ್ ಖಾತೆ ಜನಾ ಬೇರೆ ದಂಡ” ಎಂದು ನನ್ನ ವೃತ್ತಿಯ ಘನತೆಯನ್ನು ಮೂರುಕಾಸಿಗಿಳಿಸಿ ನಿವಾಳಿಸಿ ಬಿಸಾಡಿದ ಹಾಗೂ ಫ಼ಾರೆಸ್ಟು ಇಲಾಖೆಯವರು ಕಳ್ಳ ನಾಟಾ ಮಾಡುತ್ತಿದ್ದ ಕೆಲ ಹಳ್ಳಿಯ ಜನರನ್ನು ಕುಂಡೆಯ ಮೇಲೆ ಹಾಕಿ ಕಟಕಟೆ ಒಳಗೆ ಹಾಕಿದ ಹಳೆ ಸೇಡು ತೀರಿಸಿಕೊಂಡ. ಹಳ್ಳಿಯಲ್ಲಿ ರಾತ್ರಿ ,10 ಘಂಟೆಗೆ ಕರು ಅಡ್ಡ ಸಿಕ್ಕಿಹಾಕಿಕೊಂಡಾಗ ಎಣ್ಣೆಯ ಮತ್ತನ್ನು ಏರಿಸಿಕೊಂಡವರಿಂದ ಈ ತರಹದ ಮಾತು ಕೇಳಿ ಅಭ್ಯಾಸವಾಗಿ ಹೋದ ನಾನು ಇದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಲೇ ಇಲ್ಲ. ಆದರೆ ನನ್ನ ಶಿಷ್ಯನಿಗೆ ಮಾತ್ರ ನಖಶಿಖಾಂತ ಕೋಪ ಬಂದಿತ್ತು.
ಆತ “ಸಾರ್. ಏನೂ ತೊಂದರೆ ಇಲ್ಲದಂತೆ ಅದನ್ನು ಕೆಡಗಿ ಕೊಡ್ತೀನಿ ಸಾರ್. ಇಂಜೆಕ್ಷನ್ ಹಾಕಿ ಅನೇಸ್ಠೇಸಿಯಾ ಕೊಟ್ಟು ಕೆಲಸ ಮಾಡಿ.. ಫ಼ಾರೆಸ್ಟ್ ಡಿಪಾರ್ಟ್ಮೇಂಟಿನವರೂ ಸಹಾಯ ಮಾಡ್ತಾರೆ” ಅಂದ. ಅಷ್ಟು ಹೊತ್ತು ನಮ್ಮ ಪರಿಪಾಟಲು ನೋಡಿ ಮಜಾ ತಗಳ್ತಿದ್ದ ಅರಣ್ಯ ಇಲಾಖೆಯ ಗಾರ್ಡು ಫ಼ಾರೆಸ್ಟರುಗಳೂ ಜನರ ಮಾತಿನಿಂದ ರೇಗಿ ಏನಾದರೂ ಮಾಡಲೇಬೇಕೆಂಬ ತೀರ್ಮಾನಕ್ಕೆ ಬಂದಾಗಿತ್ತು, ಅವರು ನಾಟಾ ಸಾಗಿಸಲು ಕಳ್ಳ ಸಾಗಣೆಗೆ ಉಪಯೋಗಿಸುತ್ತಿದ್ದ ಸೀಜ಼್ ಮಾಡಿದ ದಪ್ಪನೇ ಹಗ್ಗ ತಂದರು.
ಅದನ್ನು ಎಂಟತ್ತು ಅಡಿಕೆ ಮರದ ಸುತ್ತ ಕಟ್ಟಿ ಕಾಡು ಕೋಣ ಹಗ್ಗದ ಕೋಟೆ ಒಳಗೆ ಭದ್ರವಾಗುವಂತೆ ದಿಗ್ಭಂಧನ ಹಾಕಿದರು. ಕಾಡುಕೋಣ ಇರುವ ಜಾಗದ ಸುತ್ತ ಗೂಟದ ಬೇಲಿ ರೆಡಿಯಾಗಿ ಅಕ್ಷರಷ: ಕೊರೋನಾ ಪೀಡಿತರನ್ನು ಕ್ವಾರಂಟೈನಿನೊಳಗೆ ಹಾಕಿದ ಹಾಗೇ ಲಾಕ್ ಮಾಡಿದರು. ಆದರೆ ಕೋಣಕ್ಕೆ ಅನೇಶ್ಥೆಸಿಯಾ ಇಂಜೆಕ್ಷನ್ ಚುಚ್ಚಬೇಕಲ್ಲ. “ಯಾರಾದ್ರೂ ಬಂದು ಇದನ್ನು ಮಾಂಸದಲ್ಲಿ ತೂರಿಸ್ರೋ” ಎಂದು ಸಿರಿಂಜಿನಲ್ಲಿ ತಕ್ಕ ಪ್ರಮಾಣದ ಅನೇಸ್ಥೆಸಿಯಾ ಚುಚ್ಚುಮದ್ದು ಲೋಡ್ ಮಾಡಿ ನೀಡಲು ಹೋದೆ. ಯಾರೂ ಮುಂದೆ ಬರಲಿಲ್ಲ.
ಒಂದು ಉಪಾಯ ಹೊಳೆಯಿತು. ನಾವು ನಿರ್ಮಿಸಿದ ಕೋಟೆಯೊಳಗೆ ಒಂದಿಷ್ಟು ಮುರುಗಲು ಮತ್ತು ಕೋಕೋ ಗಿಡಗಳಿದ್ದವು. ಅವುಗಳ ಮೇಲೆ ಹತ್ತಿ ಕುಳಿತರೆ ಮತ್ತು ಕಾಡುಕೋಣವನ್ನು ಅಲ್ಲಿಗೆ ನಿಧಾನವಾಗಿ ಚಲನೆಯಾಗುವಂತೆ ನೋಡಿಕೊಂಡರೆ ಅದಕ್ಕೆ ಕಚಕ್ ಎಂದು ಇಂಜೆಕ್ಷನ್ ಚುಚ್ಚಿಬಿಡುವ ಎಂದುಕೊಂಡೆ. ಆದರೆ ಇಲ್ಲಿ ತುಂಬಾ ರಿಸ್ಕ್ ಇತ್ತು. ಆದರೆ ಮೊದಲೇ ಗಾಯಾಳು ಕೋಣ, ಖಂಡಿತಾ ರೋಷ ಭರಿತವಾಗಿರುತ್ತದೆ. ಏನಾದರೂ ಹೆಚ್ಚುಕಮ್ಮಿ ಆಗಿ ಆಯ ತಪ್ಪಿದರೆ ಅದರ ಮೇಲೆಯೇ ಬೀಳುವ ಸಾಧ್ಯತೆ ಇತ್ತು. ಬಿದ್ದರೆ ತುಳಿದು ಖಂಡಿತಾ ತುಳಿದು ಯಮಪುರಿಗೆ ಕಳಿಸುತ್ತಿತ್ತು.
ಯಾರಿಗಾದರೂ ಮರ ಹತ್ತಿ ಅದು ಕೆಳಗೆ ಬಂದೊಡೆ ಇಂಜೆಕ್ಷನ್ ಚುಚ್ಚಿ ಎಮ್ದರೆ ಎಲ್ಲರೂ ಹೆದರು ಪುಕ್ಕಲರೆ. ಮತ್ತೆ ಕೆಲವರು ಹೊಟ್ಟೆ ಹೊತ್ತ ದಡೂತಿಗಳು. ಅಲ್ಲಿ ಇರುವವರಲ್ಲಿ ನಾನೇ ತೆಳ್ಳಗಿರುವವ. ಏನಾದರಾಗಲಿ ಎಂದು ಅನಸ್ಥೆಸಿಯಾವನ್ನು ತುಂಬಿಸಿದ ಸಿರಿಂಜ್ ಕೈಲಿ ಹಿಡಿದು ಅದು ನೇರವಾಗಿ ಕೆಳಗೆ ಬರಬಹುದಾದ ಕೋಕೋ ಗಿಡದ ಮೇಲೆ ಏರಿದೆ. ಕಾಡುಕೋಣವನ್ನು ಮರದ ಕೆಳಗೆ ಬಂದು ನಿಲ್ಲುವಂತೆ ಬೆದರಿಸಲು ಸೂಚಿಸಿದೆ.
ಹಲವು ರೌಂಡ್ ಕಾರ್ಯಾಚರಣೆಯ ನಂತರ ಯಾವುದೋ ಗಳಿಗೆಯಲ್ಲಿ ಕಾಡು ಕೋಣ ನಾನು ಮೇಲೆ ಇದ್ದ ಕೊಂಬೆಯ ಕೆಳಗೆ ಬಂದು ನಿಂತಿತು. ಇದೇ ಅವಕಾಶವೆಂದು ಅದರ ಹಿಂಬಾಗದ ಪ್ರಷ್ಠದ ಮೇಲೆ ಸೂಜಿಯ ಸಮೇತ ಸಿರಿಂಜ್ ಚುಚ್ಚಿ ಸರಕ್ಕನೇ ಔಷಧಿ ಸೇರಿಸಿದೆ. ಆಯ ತಪ್ಪಿ ಕೆಳಗೆ ಬಿದ್ದ ಹೊಡೆತಕ್ಕೆ ಕಾಡುಕೋಣದ ಎದುರು ಅಂಗಾತ ಬಿದ್ದೆ. ಇನ್ನೇನು ಕಾಡುಕೋಣ ನನ್ನನ್ನು ತಿವಿಯಬೇಕು.. ನೋಡ್ತೀನಿ .. ಏನೂ ಶಬ್ಧ ಇಲ್ಲ.
ನಾನು ಕೊಟ್ಟ ಅರಿವಳಿಕೆಯ ಪ್ರಭಾವದಿಂದ ಕಾಡುಕೋಣ ಧರಾಶಾಯಿಯಾಗಿತ್ತು.
ಕೂಡಲೇ ನನ್ನ ಶಿಷ್ಯ ಮತ್ತು ಅರಣ್ಯ ಇಲಾಖೆಯವರು ಕಾಡುಕೋಣವನ್ನು ನಾಡುಕೋಣ ಕಟ್ಟಿದಂತೆ ಹಗ್ಗದಿಂದ ಏಳದಂತೆ ಕ್ಷಣಮಾತ್ರದಲ್ಲಿ ಬಂಧಿಸಿದರು. ಕಾಡುಕೋಣದ ಮುಂಗಾಲಿನ ಮೇಲ್ಬಾಗದಲ್ಲಿ ಕೀವಿನಿಂದ ಕೂಡಿದ ಗಡ್ಡೆಯಿತ್ತು. ಸಾವಧಾನವಾಗಿ ಅದನ್ನು ಓಪನ್ ಮಾಡಿದಾಗ ಟಕ್ ಎಂದು ಅದರೊಳಗಿದ್ದ ಬುಲೆಟ್ ಹೊರಬಂತು. ಯಾರೋ ದುರುಳರು ಮಾಂಸದಾಸೆಗೆ ಕಾಡುಕೋಣಕ್ಕೆ ಗುಂಡು ಹೊಡೆದಾಗ ಅದು ಮಾಂಸದಲ್ಲಿ ಕಚ್ಚಿಕೊಂಡು ಅಲ್ಲಿ ಕೀವುಂಟುಮಾಡಿದೆ ಎಂದು ತಿಳಿಯಿತು.
ಕೀವು ಬಸಿದು ಹೋಗುವ ಹಾಗೇ ಮಾಡಿ ಅದರೊಳಗೆ ಟಿಂಚರ್ ಆಯೋಡಿನ್ ಯುಕ್ತ ಭಟ್ಟೆಯನ್ನಿರಿಸಿ ಸುತ್ತಲೂ ಮುಲಾಮು ಹಚ್ಚಿದೆ. ಅವಶ್ಯಕ ನಂಜುನಿವಾರಕಗಳು, ನೋವು ನಿವಾರಕಗಳು ಹಾಗೂ ಜೀವನಿರೋಧಕದ ಚುಚ್ಚುಮದ್ದು ನೀಡಿದೆ. ಕಾಡುಕೋಣ ಬಹಳ ಬಡಕಲುಗೊಂಡಿತ್ತು. ಬಹುಶ: ಕೀವಿನ ನೋವಿನ ಬಾಧೆಯಿಂದ ಇರಬಹುದೇನೋ? ಕಾಡು ಕೋಣ ನಾಡಿಗೆ ಆಶ್ರಯಕ್ಕೆ ಬಂದಿದೆ.ತೋಟದಲ್ಲಿ ಸುಲಭವಾಗಿ ಸಿಗುವ ಹಲಸಿನ ಹಣ್ಣು ಇತ್ಯಾದಿ ತಿಂದು ಸೆಟ್ಲ್ ಆಗಿದೆ ಎಂದು ಗೊತ್ತಾಯ್ತು. ಎಲ್ಲ ಕೆಲಸ ಮುಗಿಸಿ, ಅದರ ತಿಲಕಾಷ್ಠ ಮಹಿಷ ಬಂಧನ ಬಿಡಿಸಿ ದೂರ ಬಂದೆವು. ಕೋಟೆಯಂತೆ ಮಾಡಿದ ಹಗ್ಗದ ಬಿಗಿತವನ್ನೂ ಸಡಿಲ ಗೊಳಿಸಿದೆವು. ಸುಮಾರು ಮುಕ್ಕಾಲು ಘಂಟೆಗೆ ಕಾಡುಕೋಣಕ್ಕೆ ಪ್ರಜ್ಞೆ ಬಂತು. ಓಲಾಡುತ್ತಾ ಏಳಲು ಪ್ರಯತ್ನಿಸಿತು. ಸ್ವಲ್ಪ ಹೊತ್ತಿಗೆ ಎದ್ದು ನಿಂಟು ಮೈಕೊಡವಿಕೊಂಡಿತು. ದುಡುಕ್ಕನೆ ಪಕ್ಕಳದ ಹಳ್ಳದ ಮೇಲೆ ಏರಿ ನಿಂತಿತು. ನಮ್ಮೆಡೆ ಒಂತರಾ ಕೃತಜ್ಞತೆಯ ನೋಟ ಬೀರಿ ಕಾಡಿನಲ್ಲಿ ಜಿಗಿದು ಮಾಯವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಿಲೀಸ್ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್ ಸ್ಟಾರ್ ಯಶ್; ‘ಟಾಕ್ಸಿಕ್’ ಗೆಲುವಿಗಾಗಿ ವಿಶೇಷ ಪೂಜೆ
ಚೆನ್ನೈ ಪ್ರೀ-ರಿಲೀಸ್ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್; ಕೆಜಿಎಫ್-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ
- ಟಾಕ್ಸಿಕ್ ರಿಲೀಸ್ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್!
- ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ
ಸುದ್ದಿದಿನ,ಮಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 26ರಂದು ಚಿತ್ರ ತೆರೆಗೆ ಬರಲಿದ್ದು, ಬಿಡುಗಡೆಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಿನ್ನೆ ಚೆನ್ನೈನಲ್ಲಿ ನಡೆದ ‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಕಾರ್ಯಕ್ರಮ ಮುಗಿದ ಬಳಿಕ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.
http://Visit : www.suddidina.com
ರಿಲೀಸ್ಗೂ ಮುನ್ನ ದೇವರ ದರ್ಶನದ ಸಂಪ್ರದಾಯ
ಸಿನಿಮಾ ಬಿಡುಗಡೆಗೂ ಮುನ್ನ ದೇವಸ್ಥಾನಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯುವುದು ಯಶ್ ಅವರಲ್ಲಿ ಹಿಂದಿನಿಂದಲೂ ಕಂಡುಬರುವ ಸಂಪ್ರದಾಯ. ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯ ಮುನ್ನವೂ ಯಶ್ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದೀಗ ‘ಟಾಕ್ಸಿಕ್’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೂಲಕ ತಮ್ಮ ಆ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.
ಯಶ್ ಸೂರ್ಯ ದೇವಸ್ಥಾನಕ್ಕೂ ಭೇಟಿ ನೀಡಿ ಹರಕೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯೂ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೂ ಮುನ್ನ ಯಶ್ ಅವರ ದೇವಸ್ಥಾನ ಭೇಟಿ ಅಭಿಮಾನಿಗಳ ಗಮನ ಸೆಳೆದಿದೆ.
ಟಾಕ್ಸಿಕ್ ಮೇಲೆ ಭಾರಿ ನಿರೀಕ್ಷೆ
ಗೀತು ಮೋಹನ್ದಾಸ್ ನಿರ್ದೇಶನದ ‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಆಕ್ಷನ್ ಥ್ರಿಲ್ಲರ್ ಆಗಿದ್ದು, ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೂ ಚಿತ್ರ ಡಬ್ ಆಗಿದೆ.
ಯಶ್ ಪ್ರಮುಖ ಪಾತ್ರದಲ್ಲಿರುವ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ನಯನತಾರಾ ಸೇರಿದಂತೆ ಬಹುಭಾಷಾ ತಾರೆಯರ ದೊಡ್ಡ ಬಳಗವೇ ಇದೆ. ಹೀಗಾಗಿ ಕನ್ನಡ ಮಾತ್ರವಲ್ಲದೆ ದಕ್ಷಿಣ ಹಾಗೂ ಉತ್ತರ ಭಾರತದ ಮಾರುಕಟ್ಟೆಗಳಲ್ಲೂ ಚಿತ್ರದ ಮೇಲೆ ಭಾರಿ ನಿರೀಕ್ಷೆ ಮೂಡಿದೆ.
ಬೆಂಗಳೂರಿನಲ್ಲಿ ಟಿಕೆಟ್ ದರಕ್ಕೆ ಶಾಕ್!
‘ಟಾಕ್ಸಿಕ್’ ಅಡ್ವಾನ್ಸ್ ಬುಕ್ಕಿಂಗ್ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಕೆಲವು ಪ್ರೀಮಿಯಂ ಥಿಯೇಟರ್ಗಳಲ್ಲಿ ಟಿಕೆಟ್ ದರ ₹3,600ರ ಗಡಿ ತಲುಪಿರುವುದು ಗಮನ ಸೆಳೆದಿದೆ. ಕೆಲವು ಮಲ್ಟಿಪ್ಲೆಕ್ಸ್ಗಳಲ್ಲಿ ರೆಕ್ಲೈನರ್ ಟಿಕೆಟ್ಗಳು ₹700ರಿಂದ ₹1,600ರವರೆಗೆ ಲಭ್ಯವಿದ್ದರೆ, ಕೆಲವು ಪ್ರೀಮಿಯಂ ಸ್ಕ್ರೀನ್ಗಳಲ್ಲಿ ದರ ಇನ್ನಷ್ಟು ಹೆಚ್ಚಾಗಿದೆ.
ಸಾಕ್ನಿಲ್ಕ್ ವರದಿಯ ಪ್ರಕಾರ, ಅಡ್ವಾನ್ಸ್ ಬುಕ್ಕಿಂಗ್ ಆರಂಭವಾದ ಎರಡು ದಿನಗಳಲ್ಲಿ ‘ಟಾಕ್ಸಿಕ್’ ಸುಮಾರು ₹18.73 ಕೋಟಿ ಮುಂಗಡ ಬುಕ್ಕಿಂಗ್ ದಾಖಲಿಸಿದೆ ಎನ್ನಲಾಗಿದೆ. ಟಿಕೆಟ್ ದರ ಏರಿಕೆಯ ನಡುವೆಯೂ ಬುಕ್ಕಿಂಗ್ ವೇಗ ಕುಂದಿಲ್ಲ.
ರಿಲೀಸ್ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್ ಸ್ಟಾರ್ ಯಶ್; ‘ಟಾಕ್ಸಿಕ್’ ಗೆಲುವಿಗಾಗಿ ವಿಶೇಷ ಪೂಜೆ
ನಾಳೆ ತೆರೆಗೆ ‘ಟಾಕ್ಸಿಕ್’
ಯಶ್ ಮತ್ತು ಗೀತು ಮೋಹನ್ದಾಸ್ ಕಥೆ ಬರೆದಿರುವ ಈ ಚಿತ್ರವು ಭಿನ್ನ ಕಥಾಹಂದರ ಹಾಗೂ ಭರ್ಜರಿ ಆಕ್ಷನ್ ಮೂಲಕ ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆ ಮೂಡಿಸಿದೆ. ಈಗ ಧರ್ಮಸ್ಥಳದ ಸನ್ನಿಧಿಯಲ್ಲಿ ಯಶ್ ಪಡೆದ ಆಶೀರ್ವಾದದ ಬೆನ್ನಲ್ಲೇ, ನಾಳೆ ‘ಟಾಕ್ಸಿಕ್’ ಬಾಕ್ಸ್ ಆಫೀಸ್ನಲ್ಲಿ ಹೇಗೆ ಸದ್ದು ಮಾಡಲಿದೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

ದಿನದ ಸುದ್ದಿ
ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
- ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ 100% ಶುಲ್ಕ?
- ಶೇ.2ಕ್ಕೆ ಇಳಿದ ಶುಲ್ಕದ ಬಳಿಕ ಅರ್ಜಿ ಹೆಚ್ಚಾದರೂ, ತಾಂತ್ರಿಕ ಸಮಸ್ಯೆಯಿಂದ ಜನರಿಗೆ ಸಂಕಷ್ಟ
- 7.50 ಲಕ್ಷ ಬಿ-ಖಾತೆ ಆಸ್ತಿಗಳ ಪೈಕಿ ಕೇವಲ 90 ಸಾವಿರ ಅರ್ಜಿಗಳು, 20 ಸಾವಿರಕ್ಕಷ್ಟೇ ಎ-ಖಾತೆ ಭಾಗ್ಯ
ಸುದ್ದಿದಿನ,ಬೆಂಗಳೂರು: ‘ಮನೆ ನಮ್ಮದು, ಖಾತೆಯೂ ನಮ್ಮ ಹಕ್ಕು’ ಎಂಬ ನಿರೀಕ್ಷೆಯೊಂದಿಗೆ ಎ-ಖಾತೆ ಪಡೆಯಲು ಮುಂದಾದ ಬೆಂಗಳೂರಿನ ಸಾವಿರಾರು ಆಸ್ತಿ ಮಾಲೀಕರಿಗೆ ಇದೀಗ ನಿರಾಸೆ ಎದುರಾಗಿದೆ. ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯ ಭಾಗವಾಗಿ ಆರಂಭಿಸಿದ್ದ ‘ನನ್ನ ಖಾತಾ ನನ್ನ ಹಕ್ಕು’ ಕಾರ್ಯಕ್ರಮದ ಗಡುವು ಮುಕ್ತಾಯಗೊಂಡಿದ್ದು, ಯೋಜನೆಯ ಅನುಷ್ಠಾನದಲ್ಲಿ ಎದುರಾದ ತಾಂತ್ರಿಕ ಸಮಸ್ಯೆ ಹಾಗೂ ಅಧಿಕಾರಿಗಳ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು ನಗರದಲ್ಲಿ ಸುಮಾರು 7.50 ಲಕ್ಷ ಬಿ-ಖಾತೆ ಆಸ್ತಿಗಳಿವೆ ಎನ್ನಲಾಗಿದ್ದು, ಈ ಪೈಕಿ ಕೇವಲ 90 ಸಾವಿರ ಆಸ್ತಿ ಮಾಲೀಕರು ಮಾತ್ರ ಎ-ಖಾತೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ಸಲ್ಲಿಸಿದವರಿಗೂ ತಕ್ಷಣ ಪರಿಹಾರ ಸಿಗಲಿಲ್ಲ. ಅಧಿಕಾರಿಗಳ ಪ್ರಕ್ರಿಯೆ ವಿಳಂಬದಿಂದಾಗಿ ಇದುವರೆಗೆ ಕೇವಲ 20 ಸಾವಿರ ಆಸ್ತಿಗಳಿಗೆ ಮಾತ್ರ ಎ-ಖಾತೆ ಮಂಜೂರಾಗಿದೆ. ಇನ್ನೂ 60 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ.
ಶುಲ್ಕ ಕಡಿತದ ಬಳಿಕ ಹೆಚ್ಚಿದ ನಿರೀಕ್ಷೆ
ಆರಂಭದಲ್ಲಿ ಎ-ಖಾತೆ ಪಡೆಯಲು ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು ಶುಲ್ಕ ವಿಧಿಸಲು ಸರ್ಕಾರ ನಿರ್ಧರಿಸಿತ್ತು. ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶುಲ್ಕವನ್ನು ಶೇ.2ಕ್ಕೆ ಇಳಿಸಲಾಯಿತು. ಶುಲ್ಕ ಕಡಿಮೆಯಾದ ಬಳಿಕ ಎ-ಖಾತೆ ಪಡೆಯುವ ಆಸಕ್ತಿಯೂ ಹೆಚ್ಚಾಯಿತು. ಆದರೆ, ಇದೇ ಸಂದರ್ಭದಲ್ಲಿ ಮತ್ತೊಂದು ಸಮಸ್ಯೆ ಎದುರಾಯಿತು. ಅರ್ಜಿ ಸಲ್ಲಿಸಲು ಬಳಸುತ್ತಿದ್ದ ಜಿಬಿಎ ವೆಬ್ಸೈಟ್ನಲ್ಲಿ ಸರ್ವರ್ ಡೌನ್, ತಾಂತ್ರಿಕ ದೋಷ ಮತ್ತು ಮೂಲಸೌಕರ್ಯ ಕೊರತೆ ಕಾಣಿಸಿಕೊಂಡಿದ್ದರಿಂದ ಅನೇಕ ಆಸ್ತಿ ಮಾಲೀಕರು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಪರದಾಡಿದರು. ಅರ್ಜಿ ಸಲ್ಲಿಸಿದವರಲ್ಲೂ ಹಲವರ ಅರ್ಜಿಗಳು ಅಧಿಕಾರಿಗಳ ಪರಿಶೀಲನೆಗಾಗಿ ಬಾಕಿ ಉಳಿದಿವೆ.
ಗಡುವು ಮುಗಿದ ಬಳಿಕ ಶುಲ್ಕದ ಹೊರೆ?
ಈಗ ‘ನನ್ನ ಖಾತಾ ನನ್ನ ಹಕ್ಕು’ ಯೋಜನೆಯ ಗಡುವು ಮುಕ್ತಾಯಗೊಂಡಿರುವುದರಿಂದ, ಮುಂದಿನ ದಿನಗಳಲ್ಲಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳುವವರು ಪೂರ್ಣ ಪ್ರಮಾಣದ ಶೇ.100 ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಈಗಾಗಲೇ ಅರ್ಜಿ ಸಲ್ಲಿಸಿ ಅಧಿಕಾರಿಗಳ ಅನುಮೋದನೆಗಾಗಿ ಕಾಯುತ್ತಿರುವ 60 ಸಾವಿರಕ್ಕೂ ಹೆಚ್ಚು ಆಸ್ತಿ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ. “ಶುಲ್ಕ ವಸೂಲಿಗೆ ಸರ್ಕಾರ ತೋರಿದ ವೇಗವನ್ನು, ಜನರಿಗೆ ತಾಂತ್ರಿಕ ನೆರವು ನೀಡುವಲ್ಲಿ ತೋರಲಿಲ್ಲ” ಎಂಬ ಆಕ್ರೋಶವೂ ಕೇಳಿಬರುತ್ತಿದೆ.
ಈಗ ಎಲ್ಲರ ಕಣ್ಣು ಸರ್ಕಾರದತ್ತ ನೆಟ್ಟಿದೆ. ಗಡುವು ವಿಸ್ತರಣೆಯಾಗುತ್ತದೆಯೇ? ಬಾಕಿ ಅರ್ಜಿಗಳಿಗೆ ವಿಶೇಷ ಅವಕಾಶ ಸಿಗುತ್ತದೆಯೇ? ಅಥವಾ ಸಾವಿರಾರು ಜನರು ಶೇ.100 ಶುಲ್ಕದ ಹೊರೆ ಹೊರುವಂತಾಗುತ್ತದೆಯೇ? ಎಂಬ ಪ್ರಶ್ನೆಗಳಿಗೆ ಸರ್ಕಾರದ ಮುಂದಿನ ನಿರ್ಧಾರವೇ ಉತ್ತರ ನೀಡಬೇಕಿದೆ.

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ20 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ21 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ17 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ17 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ17 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ







