Connect with us

ದಿನದ ಸುದ್ದಿ

ಕೋವಿಡ್-19 ಕೋಲಾಹಲ

Published

on

  • ಡಾ.ಎಚ್.ಎಸ್.ಅನುಪಮಾ

ಬೆಳಗಾವಿ ಹತ್ತಿರದ ಹಳ್ಳಿಗೆ ಚೀನಾದಿಂದ ಟೆಕ್ಕಿ ದಂಪತಿಗಳು ಬಂದಿಳಿದರು. ಮೊದಲಾಗಿದ್ದರೆ ತಮ್ಮೂರಿಗೆ ವಿದೇಶದಿಂದ ಬಂದವರ ಕಾಣಲು ಹಳ್ಳಿಯ ಅಬಾಲವೃದ್ಧ ಸ್ತ್ರೀಪುರುಷರಾದಿಯಾಗಿ ಎಲ್ಲರೂ ಕುತೂಹಲಿಗಳಾಗಿರುತ್ತಿದ್ದರು. ಕರೆಕರೆದು ಮಾತಾಡಿಸುತ್ತಿದ್ದರು. ಇಣುಕಿ ನೋಡುತ್ತಿದ್ದರು. ಆದರೆ ಈಗ ಬಂದವರು ತಾವು ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಇದ್ದೇವೆಂದು ಪ್ರಮಾಣಪತ್ರ ತೋರಿಸಿದರೂ ಕೇಳದೇ ಆ ಜೋಡಿಯನ್ನು ಅಟ್ಟಾಡಿಸಿ ಬೈದು, ಪೊಲೀಸರ ಕರೆದು, ಆಂಬುಲೆನ್ಸಿನಲ್ಲಿ ಕೂಡಿ ಹಾಕಿ ಊರು ಬಿಟ್ಟೋಡಿಸಿದರು. ಅಷ್ಟೇ ಅಲ್ಲ, ವಾಟ್ಸಾಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಆ ಜೋಡಿಯ ಭಾವಚಿತ್ರ ಹಂಚಿಕೊಂಡು ಅವರನ್ನು ಯಾರೂ ನಿಮ್ಮ ಊರುಗಳೊಳಗೆ ಬಿಟ್ಟುಕೊಳ್ಳಬೇಡಿ ಎಂದು ಪ್ರಚಾರ ಮಾಡಿದರು.

ಮಂಡ್ಯದ ಹೊರಭಾಗದಲ್ಲಿ ನಾರುಬೇರುಗಳ ಔಷಧಿ ಮತ್ತು ಮಸಾಲೆ ಪದಾರ್ಥಗಳನ್ನು ಹೊತ್ತು ದಕ್ಷಿಣ ಆಫ್ರಿಕಾದಲ್ಲಿ ವ್ಯಾಪಾರ ಮಾಡಿಬಂದ ಹಕ್ಕಿಪಿಕ್ಕಿ ಸಮುದಾಯದ ಅಲೆಮಾರಿಗಳು ತಮ್ಮ ನೆಲೆಗೆ ವಾಪಸಾದದ್ದೇ ಉಳಿದವರು ಭಯಭೀತರಾದರು. ಹಕ್ಕಿಪಿಕ್ಕಿಟೆಂಟುಗಳೊಳಗೆಅಲ್ಲೋಲಕಲ್ಲೋಲವಾಯಿತು.ಕೊನೆಗೆ ವಿದೇಶದಿಂದ ಹಿಂದಿರುಗಿದವರಿಗೆ ಬೇರೆ ವ್ಯವಸ್ಥೆ ಮಾಡುವಂತಾಯಿತು.

ಮತ್ತೊಂದೆಡೆ ಭಾರತದ ಹಳ್ಳಿ, ನಗರ, ಕೇರಿಗಳಲ್ಲಿ ಟಿವಿ, ಜಾಲತಾಣಗಳಿಂದ ಕರೋನಾ ಅತಿಸುದ್ದಿಯಿಂದ ಭಯದ ವ್ಯಾಧಿ ಹರಡತೊಡಗಿದೆ. ಹೊರಗೆ ಹೋಗಬೇಡಿ. ಮುಟ್ಟಬೇಡಿ. ಮನೆಗೆ ಕರೆಯಬೇಡಿ. ಕೆಮ್ಮುವವರ ಬಳಿ ನಿಲ್ಲಬೇಡಿ ಎಂಬಿತ್ಯಾದಿ ಬೇಡಗಳ ನಡುವೆ ಆಗಲೇ ವ್ಯಕ್ತಿಗಳ ನಡುವಿರುವ ದೂರ ವಿಸ್ತಾರವಾಗತೊಡಗಿದೆ.

‘ಅಯ್ಯೋ, ತಂಡಿಕೆಮ್ಮ ಅಂತ ಸರ್ಕಾರಿ ಆಸ್ಪತ್ರೆಗೆ ಹೋದ್ರೆ ಅಲ್ಲಿ ರಕ್ತ ಟೆಸ್ಟ್ ಮಾಡಿ ಕಡೆಗೆ 14 ದಿನ ಕ್ವಾಣೇಲಿ ಕೂಡಿ ಹಾಕ್ತಾರಂತೆ’ ಎಂಬ ಹೆದರಿಕೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಲು ಕೆಲವರು ಹೆದರಿದರೆ; ತಂತಮ್ಮ ಮನೆಯ ಮದುವೆ, ತೀರ್ಥಯಾತ್ರೆ, ಧಾರ್ಮಿಕ ಕಾರ್ಯಗಳೆಲ್ಲವನ್ನು ರದ್ದು ಮಾಡಿದ್ದಾರೆ ಮತ್ತೆ ಕೆಲವರು. ಶಾಲೆಯೂ ಇಲ್ಲದೆ, ಪರೀಕ್ಷೆಯೂ ಇಲ್ಲದೇ ಪಾಸಾಗಿ ಮುಂದಿನ ತರಗತಿಗೆ ಹೋದ ಮಕ್ಕಳು ಸಮಯ ಕಳೆಯಲು ಹೊಸಹೊಸ ಯೋಜನೆಗಳನ್ನು ಹಾಕತೊಡಗಿವೆ.

‘ಅರೆ, ಎಲ್ಲಾದರೂ ಸಾಧ್ಯವೇ? ಸಾಧ್ಯವೇ ಇಲ್ಲ’ ಎನ್ನುವಂತಹುದೆಲ್ಲ ತಂತಾನೇ ಅನಿವಾರ್ಯವಾಗಿ, ಸಾಧ್ಯವೂ ಆಗಿ ಏರ್‌ಪೋರ್ಟುಗಳು, ಮಾಲುಗಳು, ದೇವಳ-ಆಶ್ರಮ-ಮಠಗಳು, ಹೋಟೆಲು ಬೀಚುಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದರೆ, ಗುಡಿಸಲು-ಟೆಂಟು-ಸ್ಲಮ್ಮುವಾಸಿಗಳು, ಕೂಲಿಗಳು, ಮನೆದೇವಿಯರು ತಂತಮ್ಮ ದಿನನಿತ್ಯದ ಹೊಟ್ಟೆಪಾಡಿನ ಕೆಲಸಗಳಲ್ಲಿ ಮುಳುಗಿ ಹೋಗಿದ್ದಾರೆ.

ಇಷ್ಟೆಲ್ಲ ಉಲ್ಟಾಪಲ್ಟಾ, ಕೋಲಾಹಲ, ಅಸಂಭವ ಸಂಭವ ಆಗುತ್ತಿರುವುದಾದರೂ ಏತಕ್ಕೆ? ಭಯಕ್ಕೆ, ಪ್ರಾಣಭಯಕ್ಕೆ. ನಿಜ. ಜೀವಿಗಳ ಚಟುವಟಿಕೆಯನ್ನೆಲ್ಲ ನಿಯಂತ್ರಿಸುವ ಮುಖ್ಯ ಚಾಲನಾ ಶಕ್ತಿ ಭಯ ಎನ್ನುವುದು ಮತ್ತೆ ಸಾಬೀತಾಗಿದೆ. ಅದರಲ್ಲೂ ಪ್ರಾಣಭಯ ಆವರಿಸಿಕೊಂಡಿತೆಂದರೆ ಯಮನಿಯಮಗಳು ಮರೆತು ಹೋಗುತ್ತವೆ. ಸಂಬಂಧಗಳು ಕಾಣೆಯಾಗುತ್ತವೆ. ಎತ್ತ, ಏನುಗಳು ಸತ್ತು ಹೋಗುತ್ತವೆ.

ನಾವೆಳೆದ ಗಡಿಗಳೆಂಬ ಹುಸಿರೇಖೆಗಳು ತಂತಾವೇ ಅಳಿಸಿ ಹೋಗುತ್ತವೆ. ಜೈಲುಗಳ ಬಾಗಿಲುಗಳು ತೆರೆದುಕೊಳ್ಳುತ್ತವೆ. ತಮ್ಮ ಮೇಲೆ ತಾವೇ ಆರೋಪಿಸಿಕೊಂಡ ಹುಸಿ ಶಕ್ತಿಗಳೆಲ್ಲ ಕರಗಿಹೋಗಿ ಸುಮ್ಮಸುಮ್ಮನೆ ‘ಮಹಾನ್’ ಆದವರು ಬೆತ್ತಲಾಗಿ ನಿಜಸ್ವರೂಪ ಬಯಲಾಗುತ್ತದೆ. ಸರ್ವಾಧಿಕಾರಿಯಿಂದ ಹಿಡಿದು ಬೀದಿ ಬದಿಯ ಭಿಕಾರಿಯವರೆಗೂ; ಪರಮಾಣು ಶಸ್ತ್ರಾಸ್ತ್ರ ಹೊಂದಿದವರಿಂದ ಹಿಡಿದು ಚಿಂದಿ ಆಯುವವರವರೆಗೆ ಪ್ರಾಣಭಯ ಆವರಿಸಿದಾಗ ಎಲ್ಲರಿಗೂ ಬದುಕುಳಿವ ಹಂಬಲದ ಹೊರತು ಮತ್ತೆಲ್ಲ ಮರೆತುಹೋಗುತ್ತದೆ.

ಹೌದು. ಕೋವಿಡ್-19 ವೈರಸ್‌ನಿಂದ ಹರಡುತ್ತಿರುವ ಕಾಯಿಲೆ ಮತ್ತು ಮರಣ ಭೀತಿ ಇಡಿಯ ವಿಶ್ವವನ್ನೇ ಆವರಿಸಿದ ೨೦೨೦ರ ಮಾರ್ಚ್ ಹೊತ್ತಿಗೆ ಗಡಿ, ಮೂರ್ತಿ, ಸ್ಮಾರಕ, ಮಾಲು, ಮಹಲು, ಫ್ಯಾಷನ್, ಯುದ್ಧ, ದಂಗೆಗಳೇ ಮೊದಲಾದ ಮನುಷ್ಯ ಅಹಂಕಾರದ ನಿರ್ಮಿತಿಗಳೆಲ್ಲಾ ತಾತ್ಕಾಲಿಕವಾಗಿಯಾದರೂ ಪೊಳ್ಳು ಎಂದೆನಿಸುವಂತೆ ಅಣುರೇಣುತೃಣವೊಂದು ನಿವಾಳಿಸಿ ಬಿಸಾಡಿದೆ. ಲಕ್ಷ ಕೋಟಿ ರೂಪಾಯಿಗಳನ್ನು ಗಾಳಿಯಲ್ಲೇ ಸೃಷ್ಟಿಸುವ ಷೇರು ಮಾರುಕಟ್ಟೆ ಎಂಬ ಮಾಯಾನಗರಿ ಮೇಣದರಮನೆಯಂತೆ ಕರಗಿ ಹೋಗುತ್ತಿದೆ.

ಯಾವುದೂ ಬೇಡ, ಯಾರಿಗೂ ಬೇಡವೆನುವಂತಹ ತಾತ್ಕಾಲಿಕ ಸ್ಮಶಾನ ವೈರಾಗ್ಯ ಆವರಿಸಿದಂತಿದೆ. ಧರ್ಮಗುರುಗಳ ಸಾಕ್ಷಿಯಿಲ್ಲದೆ ಎಲ್ಲ ಶವಗಳನ್ನೂ ಮಿಲಿಟರಿ-ಮುನ್ಸಿಪಾಲಿಟಿ ಲಾರಿಗಳು ಹೊತ್ತೊಯ್ದು ವಿದ್ಯುತ್ ಚಿತಾಗಾರದಲ್ಲಿ ಸುಟ್ಟುಬಿಡುತ್ತಿವೆ. ಧರ್ಮ-ಜಾತಿ ಭೇದವಿಲ್ಲದೆ ಬದುಕಿರುವವರನ್ನೂ, ಮರಣಿಸಿದವರನ್ನೂ ವೈರಸ್ ಆವರಿಸಿಕೊಂಡಿದೆ. ಎರಡು ಕಾಲಿನವರ ಸಾಧನೆ ಏನೇ ಇರಲಿ, ಪ್ರಕೃತಿಯೆದುರು ಎಲ್ಲವೂ ತೃಣವೇ, ನಿಜ ದೈವ ಪ್ರಕೃತಿಯೇ ಎಂಬ ಪಾಠ ಮತ್ತೆಮತ್ತೆ ಕಲಿಯಬೇಕಾಗಿದೆ.

ವೈರಸ್ ಎಂಬ ವಿಸ್ಮಯ-ಅಪಾಯ

ಆನೆ, ತಿಮಿಂಗಿಲಗಳಿಂದ ಹಿಡಿದು ಬ್ಯಾಕ್ಟೀರಿಯಾಗಳಂತಹ ಏಕಕೋಶ ಜೀವಿಗಳ ತನಕ ಜೀವಿಗಳಿಗೆ ನಾನಾ ಕಾಯಿಲೆಗಳನ್ನುಂಟುಮಾಡುವ; ಏಡ್ಸ್, ಪೋಲಿಯೋ, ದಡಾರ, ಸಿಡುಬು, ಮೈಲಿಬೇನೆ, ಕಾಮಾಲೆ, ವಾಂತಿಭೇದಿ, ರುಬೆಲ್ಲಾ, ಇನ್‌ಫ್ಲುಯೆಂಜಾ, ಹಂದಿಗೋಡು ಕಾಯಿಲೆ, ಮಂಗನ ಕಾಯಿಲೆ, ಮಂಗನಬಾವು ಮತ್ತಿತರ ನೂರಾರು ಕಾಯಿಲೆಗಳಿಗೆ ಕಾರಣವಾದ ವೈರಸ್‌ಗಳು ಬಲು ವಿಚಿತ್ರ, ವಿಶಿಷ್ಟ ಅಪಾಯಕಾರಿ ಕಣಗಳು. ಪಕ್ಷಿ, ಪ್ರಾಣಿ, ಗಿಡ, ಶಿಲೀಂಧ್ರ, ಬ್ಯಾಕ್ಟೀರಿಯಾ ಇತ್ಯಾದಿ ಬೇರೊಂದು ಜೀವಿಯ ಜೀವಕೋಶದೊಳಗೆ ಮಾತ್ರ ಬದುಕಬಲ್ಲ ಸೂಕ್ಷ್ಮಾಣುಗಳು ಅವು. ಇತ್ತ ‘ಜೀವಿ’ಯೂ ಅಲ್ಲ. ಅತ್ತ ‘ಅಜೀವಿ’ಗಳೂ ಅಲ್ಲ. ಜೀವಿ ಅಜೀವಿಗಳ ನಡುವಿರುವ ಅತ್ಯಂತ ಸರಳ, ಅತಿ ಸಣ್ಣ ಕಣ ವೈರಸ್ ಸಂಪೂರ್ಣ ಬೇರೆ ಜೀವಕೋಶವನ್ನು ಅವಲಂಬಿಸಿರುವಂಥವು.

ವೈರಸ್ಸುಗಳ ಗಾತ್ರ ಬಲು ಕಿರಿದು. ಎಲ್ಲೋ ಕೆಲವನ್ನು ಹೊರತುಪಡಿಸಿದರೆ ಎಲ್ಲವೂ ಬ್ಯಾಕ್ಟೀರಿಯಾಗಿಂತ ಸಣ್ಣವು. ಪೋಲಿಯೋ ವೈರಸ್ ಉಪ್ಪಿನ ಒಂದು ಕಣದ 10 ಸಾವಿರದಲ್ಲಿ ಒಂದನೇ ಭಾಗದಷ್ಟು ಗಾತ್ರದ್ದು; ಕೋವಿಡ್ ಐದು ಸಾವಿರದ ಒಂದು ಭಾಗದಷ್ಟು ದೊಡ್ಡದು. ವೈರಸ್ಸುಗಳಿಗಿಂತ ಬ್ಯಾಕ್ಟೀರಿಯಾಗಳು 8-10 ಪಟ್ಟು ದೊಡ್ಡದಿರುತ್ತವೆ. 1931ರಲ್ಲಿ ಎಲೆಕ್ಟ್ರಾನ್ ಮೈಕ್ರೋಸ್ಕೋಪ್ ಕಂಡುಹಿಡಿದ ಮೇಲೆಯೇ ನಾವು ವೈರಸ್ಸುಗಳನ್ನು, ಅವುಗಳ ರೂಪರಚನೆಯನ್ನು ಕಂಡದ್ದು.

ಪ್ರಾಣಿಗಳ ದೇಹದಲ್ಲಷ್ಟೇ ಇರುವ ಕೆಲವು ವೈರಸ್‌ಗಳು ಮನುಷ್ಯರನ್ನು ತಲುಪಿ ಹೊಸಹೊಸ ಕಾಯಿಲೆಗಳಿಗೆ ಕಾರಣವಾಗುತ್ತವೆ. ಹೀಗೆ ಏಡ್ಸ್ ಕಾಯಿಲೆ ದಕ್ಷಿಣ ಆಫ್ರಿಕಾದ ಚಿಂಪಾಂಜಿಗಳಿಂದ; ಸಾರ‍್ಸ್ ಕಾಯಿಲೆ ಸಿವೆಟ್ ಬೆಕ್ಕುಗಳಿಂದ; ಕೆಎಫ್‌ಡಿ ಮಂಗಗಳಿಂದ; ಮರ‍್ಸ್-2019 ಒಂಟೆಗಳಿಂದ; ಈಗ ಕೋವಿಡ್-19 ಬಾವಲಿಗಳಿಂದ ಬಂದಂಥವು. ಶ್ವಾಸನಾಳ, ಬಾಯಿ, ಗಂಟಲು, ಚರ್ಮ, ಲೈಂಗಿಕ ಅಂಗಾಂಗಗಳು, ಕೀಟದ ಕಡಿತ ಮುಂತಾದ ಮಾರ್ಗಗಳಿಂದ ಮಾನವ ದೇಹದೊಳಗೆ ಪ್ರಾಣಿ ವೈರಸ್‌ಗಳು ಹೊಕ್ಕಿಬಿಡುತ್ತವೆ. ಮುಖ ನೆಕ್ಕಿದ ಒಂಟೆ, ತಲೆಮೇಲೆ ಹತ್ತಿದ ಮಂಗ, ಕಾಲಸಂದಿ ತೂರಿಕೊಳುವ ಬೆಕ್ಕು, ರೋಗವಾಹಕ ಜೀವಿಯ ಅರೆಬೆಂದ ಮಾಂಸದಡುಗೆ, ತರಕಾರಿ-ಮಾಂಸದ ಮಾರುಕಟ್ಟೆಗಳಲ್ಲಾಗುವ ಮನುಷ್ಯ-ಪ್ರಾಣಿ ಸಂಪರ್ಕ – ಇವೇ ಮೊದಲಾದ ಕಾರಣಗಳಿಗೆ ಮನುಷ್ಯರಲ್ಲಿ ಪ್ರಾಣಿಯ ವೈರಸ್ ಸೇರಿಬಿಡಬಹುದು. ಹಾಗೆಯೇ ಇಕೋ ಟೂರಿಸಂ, ಅತಿಕ್ರಮಣ, ಒತ್ತುವರಿ, ವಲಸೆಗಳಿಂದ ಪ್ರಾಣಿಗಳಿಗೆ ನಮ್ಮ ವೈರಸ್‌ಗಳನ್ನು ನಾವೂ ದಾಟಿಸುತ್ತಿರಬಹುದು.

ನವೆಂಬರ್ 2019ರಿಂದ ಇದುವರೆಗೆ ಕೊಲ್ಲಿ ರಾಷ್ಟ್ರಗಳಲ್ಲಿ ಅದರಲ್ಲೂ ಸೌದಿ ಅರೇಬಿಯಾದಲ್ಲಿ ಎರಡು ಸಾವಿರಕ್ಕಿಂತ ಹೆಚ್ಚು ಜನರನ್ನು ಕೊಂದಿರುವ ಮರ‍್ಸ್ ತಾನು ಅಂಟಿದ 30% ಜನರನ್ನು ಕೊಂದು ಹಾಕುವಷ್ಟು ಅಪಾಯಕಾರಿ. ಈಗ ಬಂದೆರಗಿರುವ ಕೋವಿಡ್-19ರ ಸ್ವಭಾವ ನಮಗಿನ್ನೂ ತಿಳಿದಿಲ್ಲ. ಈ ಬರಹ ಬರೆಯುತ್ತಿರುವ 22-3-20ರ ಮಧ್ಯಾಹ್ನದವರೆಗೆ ಕೋವಿಡ್-19 ನಿಂದ 3,12,500 ರೋಗಿಗಳು ಬಾಧಿತರಾಗಿದ್ದರೆ 13,424 ಜನ ಮರಣ ಹೊಂದಿದ್ದಾರೆ. ಮೂರು ತಿಂಗಳಲ್ಲಿ ಅಂಟಾರ್ಕ್ಟಿಕಾ ಬಿಟ್ಟು ಎಲ್ಲ ಖಂಡಗಳಿಗೂ ಅದು ಹರಡಿದೆ. 167ಕ್ಕಿಂತ ಹೆಚ್ಚು ದೇಶಗಳಲ್ಲಿ ಕೋವಿಡ್‌ನ ಸೋಂಕಿದೆ. ಈಗದು ಯೂರೋಪ್ ಕೇಂದ್ರಿತ. ಇಟಲಿ, ಇರಾನ್, ಸ್ಪೇನ್‌ನಲ್ಲಿ ವೇಗವಾಗಿ ಹರಡುತ್ತಿದೆ. ಮರಣ ಪ್ರಮಾಣ 3.4 % ಇದೆ.

ಏನಿದು ಕರೋನಾ, ಕೋವಿಡ್?

ಡಿಸೆಂಬರ್ 2019ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಉಸಿರಾಟದ ತೀವ್ರ ತೊಂದರೆಯನ್ನುಂಟುಮಾಡುವ ಹಲವು ರೋಗಿಗಳು ಆಸ್ಪತ್ರೆಗೆ ದಾಖಲಾದರು. ಹೊಸವರ್ಷ ಕೊಡುತ್ತಿರುವ ಕೊಡುಗೆಯೋ ಎಂಬಂತೆ ರೋಗಕಾರಣವಾದ ‘ಹೊಸ ಕರೋನಾ ವೈರಸ್’ ಪತ್ತೆಯಾಯಿತು. ವುಹಾನ್‌ನ ಕಡಲ ಆಹಾರಪದಾರ್ಥಗಳ ಸಗಟು ಮಾರುಕಟ್ಟೆಯಿಂದ ಅದು ಹರಡಿದೆ ಎನ್ನಲಾಯಿತು.

ಬಾವಲಿಗಳ ದೇಹಲ್ಲಿರುವ ಕರೋನಾ ವೈರಸ್‌ಗೆ 96% ಸಾಮ್ಯತೆ ಇರುವ ವೈರಾಣು ರೋಗಿಗಳಲ್ಲಿ ಪತ್ತೆಯಾಯಿತು. ಆದರೆ ಮಾರುಕಟ್ಟೆಯಲ್ಲಿ ಬಾವಲಿಯ ಮಾರಾಟ ಇಲ್ಲದಿದ್ದ ಕಾರಣ ಪ್ಯಾಂಗೊಲಿನ್‌ನಂತಹ ಮಧ್ಯವರ್ತಿ ಪ್ರಾಣಿಯಿಂದ ಅಥವಾ ಮಾರುಕಟ್ಟೆಯಲ್ಲಿದ್ದ ಹಾವಿನ ಮಾಂಸದಿಂದ ಅದು ಬಂದಿರಬಹುದೆಂದು ಶಂಕಿಸಲಾಯಿತು. ಕೊನೆಗೆ ಅದಕ್ಕೆ ಕೋವಿಡ್-19 ಎಂಬ ನಾಮಕರಣ ಮಾಡಿದರು. ಇಲ್ಲಿಯವರೆಗೆ ಗೊತ್ತಿರದ ಹೊಸ ವೈರಸ್ ಆಗಿದ್ದರಿಂದ ‘ನೊವೆಲ್’ ವೈರಸ್ ಎಂದು ಕರೆಸಿಕೊಂಡಿತು.

ಸೂರ್ಯನ ಚಿತ್ರ ಬರೆವಾಗ ಉರೂಟು ಸೊನ್ನೆಯ ಸುತ್ತ ಪ್ರಭೆ ಬರೆಯುತ್ತಿದ್ದೆವು, ನೆನಪಿದೆಯೆ? ಅದು ಸೌರ ಕರೋನಾ. ಅಂಥದೇ ರಚನೆಯನ್ನು ಮೈತುಂಬ ಹೊದ್ದಿರುವಂಥವು ಕರೋನಾ ವೈರಸ್‌ಗಳು. ಎಲ್ಲ ರೀತಿಯ ಕರೋನಾ ವೈರಸ್ಸುಗಳೂ ಮಾರಣಾಂತಿಕವಲ್ಲ. ಕೆಲವು ನೆಗಡಿ, ಕೆಮ್ಮು, ಸಣ್ಣ ಜ್ವರಕ್ಕೆ ಮುಗಿದುಹೋಗುತ್ತವೆ. ಹೊಸಋತುವಿನ ಆರಂಭದ ದಿನಗಳ ತಂಡಿ, ಸಣ್ಣಜ್ವರ, ಗಂಟಲುರಿ ಕರೋನಾದಿಂದ ಆಗಿರುವ ಸಾಧ್ಯತೆಯೂ ಇದೆ. ಎಲ್ಲೋ ಕೆಲವೊಮ್ಮೆ ದುಷ್ಟತನವನ್ನೆಲ್ಲ ಆವಾಹಿಸಿಕೊಂಡುಬರುವ ಕೇಡಿಗ ತಳಿಗಳು ಹುಟ್ಟಿಬಿಡುತ್ತವೆ. ಈಗ ಚಾಲ್ತಿಯಲ್ಲಿರುವ ಮರ‍್ಸ್-2019 ಕೋವಿಡ್-19ಅಂತಹವು.

10 ಸಾವಿರ ವರ್ಷಗಳ ಹಿಂದೆ ಭೂಮಿಗೆ ಬಂದ ಕರೋನಾ ವೈರಸ್ ಬಿಸಿರಕ್ತದ ಬೆನ್ನೆಲುಬಿರುವ ಪ್ರಾಣಿಗಳು, ಹಕ್ಕಿ, ಬಾವಲಿಗಳಿಂದ ಮನುಷ್ಯರಿಗೆ ಬಂದಿದ್ದು. ಹಂದಿ, ದನ, ಕೋಳಿ, ನಾಯಿ, ಫೆರೆಟ್, ಕುದುರೆ, ಟರ್ಕಿ, ಬೆಕ್ಕು, ಮೊಲಗಳಲ್ಲಿ ಶೀತ, ಭೇದಿ, ಕರುಳಿನ ತೊಂದರೆಯುಂಟುಮಾಡುವ ಈ ವೈರಸ್ ಮನುಷ್ಯರನ್ನು ಬಾಧಿಸತೊಡಗಿದ್ದು ಇತ್ತೀಚಿನ ಶತಮಾನಗಳಲ್ಲಿ. ನೂರಿನ್ನೂರು ವರ್ಷಗಳ ಹಿಂದೆ ಪ್ರಾಣಿಗಳ ಶ್ವಾಸಕ್ರಿಯೆಯನ್ನು ಬಾಧಿಸುವ ಕರೋನಾ ವೈರಸ್ ಬಂದರೆ, ಇತ್ತೀಚೆಗೆ ಮನುಷ್ಯರನ್ನು ಬಾಧಿಸುವ ಸಾರ‍್ಸ್, ಮರ‍್ಸ್ ಕಾಯಿಲೆಯ ವೈರಸ್ ಉತ್ಪತ್ತಿಯಾಗಿವೆ.

ಕೋವಿಡ್ 19 ಬಂದರೆ ಏನಾಗುವುದು?

  • ಏನೂ ಆಗದೇ ಇರಬಹುದು. ಈ ಸಾಧ್ಯತೆಯೇ ಹೆಚ್ಚು.
  • ಕೆಲವರಿಗೆ ವೈರಸ್ ಸೋಂಕುಂಟಾದ ಹದಿನಾಲ್ಕು ದಿನಗಳೊಳಗೆ ತಂಡಿ, ಗಂಟಲುರಿ, ಸಣ್ಣ ಜ್ವರ, ಭೇದಿ ಶುರುವಾಗುತ್ತದೆ.
  • ನಂತರ ಮೂಗು, ಗಂಟಲ ಮೂಲಕ ಶ್ವಾಸಕೋಶ ಪ್ರವೇಶಿಸುವ ವೈರಸ್ ಕೆಲವರಲ್ಲಿ ತೀವ್ರತರದ ನ್ಯುಮೋನಿಯಾ ಉಂಟುಮಾಡುತ್ತದೆ. ಅತಿಜ್ವರ, ಕೆಮ್ಮು, ದಮ್ಮು, ವಾಂತಿ, ತಲೆನೋವು, ಉಸಿರಾಟದ ತೊಂದರೆ ಹೆಚ್ಚುತ್ತದೆ.
  • ಅತಿ ತೀವ್ರತರವಾಗುವ ಕೆಲವು ಪ್ರಕರಣಗಳಲ್ಲಿ ವಿವಿಧ ಅಂಗಾಂಗಗಳ ವೈಫಲ್ಯತೆಯಾಗಿ ಮರಣವುಂಟಾಗುತ್ತದೆ.
  • ಇದುವರೆಗೆ ರೋಗ ಬಾಧಿಸಿದವರಲ್ಲಿ 60 ವರ್ಷ ಮೇಲ್ಪಟ್ಟವರು, ರೋಗನಿರೋಧಕ ಶಕ್ತಿ ಕುಂಠಿತಗೊಂಡವರು, ಎಳೆಯ ಮಕ್ಕಳೇ ಹೆಚ್ಚಿದ್ದಾರೆ. ಬಡದೇಶಗಳಿಗಿಂತ ಮುಂದುವರೆದ ದೇಶಗಳನ್ನು ಹೆಚ್ಚು ಬಾಧಿಸಿದೆ. ಇಂದು ವಿಶ್ವಪಿಡುಗು (ಪ್ಯಾಂಡೆಮಿಕ್) ಎಂದು ಘೋಷಿಸಲ್ಪಟ್ಟಿದೆ. ಯಾಕೆಂದರೆ ಅದು ಸುಲಭದಲ್ಲಿ ಹರಡುವಂಥದು. ಆದರೆ ಇದರಿಂದಾಗುವ ಸಾವುನೋವುಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಅದಕ್ಕಾಗಿ ಸರ್ಕಾರಗಳು, ಸಂಸ್ಥೆಗಳು, ಸಮಾಜಗಳು ನಾನಾ ಸಲಹೆ, ಸೂಚನೆಯಿತ್ತಿವೆ.

ಹರಡುವಿಕೆ ತಡೆಯಲು ಇರುವ ಕೆಲವು ಸುಲಭ ತಂತ್ರಗಳಿವು

  1. ಅತಿ ಅನಿವಾರ್ಯವಲ್ಲದ ಎಲ್ಲ ಪ್ರಯಾಣ ರದ್ದುಗೊಳಿಸಿ ಇದ್ದಲ್ಲೇ ಇರುವುದು.
  2. ಬಟ್ಟೆ ಮೇಲೆ ವೈರಸ್ 6 ರಿಂದ 12 ಗಂಟೆ ಕಾಲ ಬದುಕಬಹುದು. ಈ ವೈರಸ್ ಉಷ್ಣಸೂಕ್ಷ್ಮ. 30-35 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಗೆ ಹಾಗೂ ಸೋಪಿಗೆ ಸತ್ತು ಹೋಗುತ್ತದೆ. ಹಾಗಾಗಿ ಪದೇಪದೇ ಸೋಪು ನೀರಿನಲ್ಲಿ ಕೈ ತೊಳೆಯಬೇಕು. ಸೋಪು ಹಚ್ಚಿ ಬಟ್ಟೆ ತೊಳೆದು ಬಿಸಿಲಲ್ಲಿ ಒಣಗಿಸಬೇಕು.
  3. ಕೆಮ್ಮುವಾಗ ಸೀನುವಾಗ ಮುಖಗವಸಿನಿಂದ ಅಥವಾ ವಸ್ತ್ರದಿಂದ ಮೂಗುಬಾಯಿ ಮುಚ್ಚಿಕೊಂಡಿರಬೇಕು. ಯಾಕೆಂದರೆ ಒಮ್ಮೆ ಸೀನಿದರೆ ಅಥವಾ ಕೆಮ್ಮಿದರೆ 20,000 ಕಿರುಹನಿಗಳು ವಾತಾವರಣಕ್ಕೆ ಸೇರುತ್ತವೆ. ಪ್ರತಿ ಕಿರುಹನಿಯೂ ನೂರಾರು ವೈರಸ್ ಕಣಗಳನ್ನು ಹೊಂದಿದ್ದು ಎದುರಿರುವವರನ್ನು ಬೇರೆಬೇರೆ ರೀತಿ ತಲುಪುತ್ತವೆ. ಹಾಗಾಗಿ ಜನರ ನಡುವೆ ಇರುವಾಗಲೆಲ್ಲ ಮುಖಗವಸು ತೊಡಬೇಕು.
  4. ಕೆಮ್ಮುವವರು, ಸೀನುವವರಿಂದ ಮೂರು ಮೀಟರ್ ದೂರ ಇದ್ದರೆ ಒಳ್ಳೆಯದು. ಮೂರು ಮೀಟರ್ (10 ಅಡಿ) ಅಂತರ ಸಿಕ್ಕರಷ್ಟೇ ಕೆಮ್ಮು, ಸೀನಿನ ಹನಿಗಳು ನೆಲ ಮುಟ್ಟುತ್ತವೆ.
  5. ಬಂದವರನ್ನು ಸ್ವಾಗತಿಸುತ್ತ ಅಪ್ಪಿಕೊಳ್ಳುವುದು, ಕೈಕುಲುಕುವುದು, ಮುತ್ತಿಕ್ಕುವುದು ಮಾಡಬಾರದು. ಸಾಮಾಜಿಕ ಅಂತರವಿಟ್ಟುಕೊಂಡು ದೂರದಿಂದಲೇ ಹಾರೈಸಬೇಕು.
  6. ಲೋಹದ ಮೇಲ್ಮೈ ಮೇಲೆ ವೈರಸ್ 12 ಗಂಟೆ ಕಾಲ ಜೀವಂತ ಇರಬಲ್ಲದು. ಹಾಗಾಗಿ ಅಂತಹ ಮೇಲ್ಮೈಗಳನ್ನು ಮುಟ್ಟುತ್ತ ಇರುವವರು ಪದೇಪದೇ ಸೋಪು ಹಚ್ಚಿ (ಸ್ಯಾನಿಟೈಸರ್ ಹಚ್ಚಿ ಅಲ್ಲ) ಕೈ ತೊಳೆಯಬೇಕು. ಅಂತಹ ಮೇಲ್ಮೈಗಳನ್ನೂ ಶುಚಿಗೊಳಿಸಬೇಕು.
  7. ನಮ್ಮ ಮೈಕೈಮೇಲೆ 5-10 ನಿಮಿಷ ವೈರಸ್ ಜೀವಂತ ಉಳಿಯಬಹುದು. ಆದರೆ ಆ 5-10 ನಿಮಿಷದಲ್ಲಿ ನಾವು ಅಪ್ರಜ್ಞಾಪೂರ್ವಕವಾಗಿ ಕಣ್ಣು, ಮೂಗು, ಬಾಯಿ, ಕಿವಿ ಮುಟ್ಟಿ ಅಲ್ಲೆಲ್ಲ ಸೇರಿಸಿರುತ್ತೇವೆ. ಹಾಗಾಗಿ ನಮ್ಮ ಮೈ ಮುಖ ಮುಟ್ಟಿಕೊಳ್ಳುತ್ತಿರುವುದನ್ನು ನಿಲ್ಲಿಸಬೇಕು.

2018ರಲ್ಲಿ ಮಲೇರಿಯಾದಿಂದ ವಿಶ್ವಾದ್ಯಂತ 4 ಲಕ್ಷ ಜನ ಸತ್ತಿದ್ದಾರೆ. ಏಡ್ಸ್‌ನಿಂದ 7.7 ಲಕ್ಷ ಜನ ಅಸು ನೀಗಿದ್ದಾರೆ. ಪ್ರತಿ ವರ್ಷ 22 ಸಾವಿರ ಜನ ಡೆಂಗಿಗೆ ಬಲಿಯಾಗುತ್ತಾರೆ. ಹುಚ್ಚುನಾಯಿ ಕಡಿತದ ರೇಬಿಸ್‌ನಿಂದ ವಾರ್ಷಿಕ 55 ಸಾವಿರ ಜನ ಸಾಯುತ್ತಾರೆ. ಒಂದೂವರೆ ಲಕ್ಷ ಜನ ಟೈಫಾಯ್ಡ್‌ನಿಂದ ಸಾಯುತ್ತಾರೆ. 40 ಸಾವಿರ ಜನ ರಸ್ತೆ ಅಪಘಾತಗಳಿಂದ ಸಾಯುತ್ತಾರೆ. ಹಾಗಿರುವಾಗ ಇದುವರೆಗೆ 13000 ಜನರನ್ನು ಕೊಂದ ಕೋವಿಡ್ ಬಗೆಗೇಕೆ ಇಷ್ಟು ಭೀತಿ?

ಭೀತಿ ಏಕೆಂದರೆ ನಮಗೆ ಅದರ ಬಗ್ಗೆ ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು. ಅದರ ಕಾರಣ, ನಿಯಂತ್ರಣ, ಚಿಕಿತ್ಸೆ, ಪರಿಣಾಮ, ಲಸಿಕೆ, ಹರಡುವಿಕೆ ಬಗೆಗೆ ಹೆಚ್ಚು ಗೊತ್ತಿಲ್ಲ. ಇನ್ನೂ ಲಸಿಕೆ, ಚುಚ್ಚುಮದ್ದು ಕಂಡುಹಿಡಿದಿಲ್ಲ. ಮನುಷ್ಯರ ಮೇಲೆ ಪ್ರಯೋಗಿಸಬಹುದಾದ ಲಸಿಕೆ ಕಂಡುಹಿಡಿಯಲು ತಿಂಗಳುಗಳೇ ಬೇಕಾಗಬಹುದು. ಬೃಹತ್ ಪ್ರಮಾಣದಲ್ಲಿ ಲಸಿಕೆ ತಯಾರಿಸಲು ವರುಷಗಳೇ ಬೇಕಾಗಬಹುದು. ಹಾಗಾಗಿ ಇದರ ಬಗೆಗೆ ಮುನ್ನೆಚ್ಚರಿಕೆ ವಹಿಸುವುದೇ ಸೂಕ್ತವಾಗಿದೆ.

14ನೇ ಶತಮಾನದ ಬ್ಯುಬೋನಿಕ್ ಪ್ಲೇಗ್ ವಿಶ್ವದ ಕಾಲುಭಾಗ ಜನಸಂಖ್ಯೆಯನ್ನು ಕೊಂದು ಹಾಕಿತ್ತು. 102 ವರ್ಷ ಕೆಳಗೆ, 1918ರಲ್ಲಿ ಬಂದ ಎಚ್೧ಎನ್೧ ಇನ್‌ಫ್ಲುಯೆಂಜಾ ಕಾಯಿಲೆ ವಿಶ್ವಾದ್ಯಂತ ಮಿಂಚಿನಂತೆ ಹರಡಿ 5 ಕೋಟಿ ಜನರನ್ನು ಬಲಿ ತೆಗೆದುಕೊಂಡಿತ್ತು. (ವಿಶ್ವದ ಮೂರನೆ ಒಂದು ಭಾಗ ಜನರಿಗೆ ಸೋಕಿದ ಆ ವೈರಸ್ ಹಕ್ಕಿಗಳಿಂದ ಮನುಷ್ಯರಿಗೆ ಬಂದಿತ್ತು.) 2009ರ ಇನ್‌ಫ್ಲುಯೆಂಜಾ ಎಚ್1ಎನ್1 ಕನಿಷ್ಟ 2 ಲಕ್ಷ ಜನರನ್ನು ಬಲಿ ತೆಗೆದುಕೊಂಡಿತು. (ಅದು ಹಂದಿಗಳಿಂದ ಮನುಷ್ಯರಿಗೆ ರವಾನೆಯಾಗಿತ್ತು.) ಇದೂ ಅಂತಹ ಒಂದು ವಿಶ್ವವ್ಯಾಧಿಯಾಗದಿರಲಿ ಎನ್ನುವುದೇ ಈ ಎಲ್ಲ ಮುನ್ನೆಚ್ಚರಿಕೆಗಳ ಉದ್ದೇಶವಾಗಿದೆ.

ಆದ್ದರಿಂದ ಕೋವಿದಕ್ಕೆ ಅಂಜದೇ, ಆತಂಕದಿಂದ ದಿನ ದೂಡದೇ, ಸಮಯ ವ್ಯಯವಾಯಿತೆಂದು ದುಃಖಿಸದೇ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳೋಣ. ಅನಿವಾರ್ಯವಲ್ಲದ, ತುರ್ತು ಅಲ್ಲ ಎಲ್ಲ ತಿರುಗಾಟ, ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸೋಣ. ಚಿಕಿತ್ಸೆಯ ಹುಸಿ ಭರವಸೆಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡದಿರೋಣ. ಅನಾಯಾಸವಾಗಿ ಸಿಕ್ಕ ಈ ವಿರಾಮ-ರಜೆಯ ಅಮೂಲ್ಯ ಸಮಯವನ್ನು ಕುಟುಂಬದೊಂದಿಗೆ ಕಳೆಯಲಿಕ್ಕೆ, ಆತ್ಮಾವಲೋಕನ ಮಾಡಿಕೊಳ್ಳಲಿಕ್ಕೆ, ನಾಳಿನ ನಡೆಗಳ ಬಗೆಗೆ ಯೋಚಿಸಲಿಕ್ಕೆ ವಿನಿಯೋಗಿಸೋಣ. ನಮ್ಮ ಮುಂದಿನ ತಲೆಮಾರಿಗೆ ಆರೋಗ್ಯವಂತ ನೆಲ, ಸಮಾಜ ಬಿಟ್ಟು ಹೋಗುವುದು ಹೇಗೆಂಬ ಬಗೆಗೆ ಚಿಂತಿಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending