ದಿನದ ಸುದ್ದಿ
ದಾವಣಗೆರೆ | ನಾಳೆಯಿಂದಲೇ ಹೋಟೆಲ್ ಕಾರ್ಯಾರಂಭಕ್ಕೆ ಸೂಚನೆ ; ತಾವಿರುವಲ್ಲಿಯೇ ಪಡಿತರ ಪಡೆಯಿರಿ: ಜಿಲ್ಲಾಧಿಕಾರಿ
ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ಡೌನ್ನಿಂದ ಸಿಲುಕಿಕೊಂಡಿರುವ ನೆರೆ ಜಿಲ್ಲೆಗಳ ಹಾಗೂ ನೆರೆ ರಾಜ್ಯಗಳ ಸಾರ್ವಜನಿಕರು ತಮ್ಮ ಬಳಿ ಪಡಿತರ ಚೀಟಿ ಇದ್ದಲ್ಲಿ ತಾವಿರುವಲ್ಲಿಯೇ ಪಡಿತರ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಇಂದು ಜಿಲ್ಲಾಡಳಿತದ ಭವನದ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಯಾವುದೇ ನಿರಾಶ್ರಿತರು ಹಸಿವಿನಿಂದ ಬಳಲಬಾರದು. ವಿವಿಧ ರಾಜ್ಯಗಳ ಕಾರ್ಮಿಕರು, ಅಲೆಮಾರಿ ಜನಾಂಗದವರು, ಅವರು ಇರುವಲ್ಲಿಗೆ ಅಧಿಕಾರಿಗಳು ತೆರಳಿ ತಯಾರಿಸಿದ ಆಹಾರ ಅಥವಾ ಪಡಿತರ ಒದಗಿಸುವ ಮೂಲಕ ಅವರಿಗೆ ನೆರವು ನೀಡಬೇಕೆಂದರು.
ಲೈಂಗಿಕ ಕಾರ್ಯಕರ್ತರು, ಮಂಗಳಮುಖಿಯರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಸಂಬಂಧಿಸಿದ ತಹಶೀಲ್ದಾರರು ವರದಿ ಪಡೆದು ಅವರಿಗೆ ಅಗತ್ಯ ಪಡಿತರ ವಿತರಿಸಲು ಕ್ರಮ ತೆಗೆದುಕೊಳ್ಳಬೇಕೆಂದರು.
ಜಿಲ್ಲೆಯಲ್ಲಿ 156 ಸಫಾಯಿ ಕರ್ಮಚಾರಿ ಕುಟುಂಬಗಳಿದ್ದು, ಅವರಲ್ಲಿ ಕೆಲವರಿಗೆ ಪಡಿತರ ಚೀಟಿ ಇದೆ. ಒಂದು ವೇಳೆ ಇಲ್ಲದವರಿಗೂ ಅಗತ್ಯ ಪಡಿತರ ನೀಡಿ. ಮತ್ತು ಬೇಕರಿಗಳು ಕಾರ್ಯಾರಂಭವಾಗಿರುವ ಬಗ್ಗೆ ಖಚಿತಪಡಿಸಿ ಎಂದರು.
- ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ ಜಮಾತೆ ಇಸ್ಲಾಂ ಧರ್ಮಸಭೆಯಲ್ಲಿ ಹಾಜರಾದ ಐದು ವ್ಯಕ್ತಿಗಳು ನಗರದಲ್ಲಿ ಇದ್ದಾರೆಂಬ ಟಿವಿ ಮಾಧ್ಯಮದಲ್ಲಿ ಸುದ್ದಿ ಬಂದಿದ್ದು, ಅವರು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಡಬೇಕು. ಅಥವಾ ಯಾರಾದರೂ ಅವರ ಅಕ್ಕಪಕ್ಕ ವಾಸಿಸುವವರು ಅಂತಹವರ ಮಾಹಿತಿ ನೀಡಿದರೆ, ಅಂತಹವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು.
|ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿಗಳು
ಬಳ್ಳಾರಿಯ ಹೊಸಪೇಟೆಯ ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿ ನಗರದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಅವರನ್ನು ತಪಾಸಣೆ ನಡೆಸಿದ ವೈದ್ಯರನ್ನು ಹೋಮ್ ಕ್ವಾರೆಂಟೈನ್ನಲ್ಲಿ ಇಡಲಾಗಿದೆ. ಅವರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದರು.
ಲಾಕ್ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಒಟ್ಟು 78 ವಾಹನಗಳನ್ನು ಸೀಜ್ ಮಾಡಲಾಗಿದ್ದು, ದಯಮಾಡಿ ಸಾರ್ವಜನಿಕರು ಮನೆಯಿಂದ ಹೊರ ಹೋಗಲು ಕಾರಣ ಬೇಡ. ಮನೆಯಲ್ಲಿರಲು ಹಲವಾರು ಕಾರಣಗಳಿವೆ ಎಂದರು.
ಈ ಕುರಿತು ಜನಪ್ರತಿನಿಧಿಗಳು ಸಾರ್ವಜನಿಕರಲ್ಲಿ ಮನವಿ ಮಾಡಬೇಕೆಂದು ನಾನು ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಹಾಗೂ ವಿವಿಧ ಧರ್ಮಗುರುಗಳು, ಸಮಾಜದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.
ದಾವಣಗೆರೆ ಮತ್ತು ಹರಿಹರ ಹೊರತುಪಡಿಸಿ ಅಂಗನವಾಡಿಗಳಲ್ಲಿ ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಮೊಟ್ಟೆಗಳನ್ನು ನೀಡಬೇಕೆಂದರು.
ಆಹಾರ ಇಲಾಖೆಯ ಉಪ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ಜಿಲ್ಲೆಯ ರೈಸ್ಮಿಲ್ಗಳು, ದಾಲ್ಮಿಲ್ಗಳು ಕಾರ್ಯಾರಂಭ ಮಾಡಿದ್ದು, ಪೂರಕ ಸಾಮಗ್ರಿಗಳು ದೊರೆಯುತ್ತಿವೆ ಎಂದು ಮಾಲೀಕರು ತಿಳಿಸಿದ್ದಾರೆ ಎಂದರು.
ಹೋಟೆಲ್ ತೆರೆಯಲು ಜಿಲ್ಲಾಧಿಕಾರಿ ಸೂಚನೆ
ಕೊರೊನಾ ವೈರಸ್ ಹಿನ್ನೆಲೆ ಲಾಕ್ಡೌನ್ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹೋಟೆಲ್ಗಳನ್ನು ಕಾರ್ಯಾರಂಭ ಮಾಡಬೇಕು. ಪ್ರಮುಖವಾಗಿ ನೂತನ್ ಕಾಲೇಜು ರಸ್ತೆಯ ಸವಿತಾ ಹೋಟೆಲ್, ವಿದ್ಯಾನಗರದ ಸಿಗಂಧೂರೇಶ್ವರಿ ಹೋಟೆಲ್, ಅಜ್ಜಿ ಹೋಟೆಲ್ ಖಾನಾವಳಿ, ಆಂಜನೇಯ ಬಡಾವಣೆಯ ಬಿಐಇಟಿ ರಸ್ತೆಯ ಮಮತಾ ಹೋಟೆಲ್, ಹದಡಿ ರಸ್ತೆಯ ಶಿವಸಾಗರ್ ಹೋಟೆಲ್ಗಳನ್ನು ಏ.1 ರಿಂದಲೇ ತೆರೆಯಬೇಕು. ಉಳಿದ ಹೋಟೆಲ್ಗಳವರು ಈ ಕೂಡಲೇ ತೆರೆಯಬೇಕೆಂದರು.
ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ16 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

