Connect with us

ಅಂತರಂಗ

ಅರಿಮೆಯ ಅರಿವಿರಲಿ-6 : ಮಗಳೆಂಬ ಸವತಿ

Published

on

Art by Evan Hauton
  • ಯೋಗೇಶ್ ಮಾಸ್ಟರ್

ಸಾಮಾನ್ಯವಾಗಿ ಅಕ್ಕ ತಂಗಿಯರಲ್ಲಿ ಇರುವಂತಹ ಸಂಘರ್ಷದ ಅತಿರೇಕವು ಅಣ್ಣ ತಂಗಿಯಲ್ಲಿ ಅಥವಾ ಅಕ್ಕ ತಮ್ಮನಲ್ಲಿ ಇಲ್ಲದಿರುವುದಕ್ಕೆ ಕಾರಣವು ಬರಿಯ ವ್ಯಕ್ತಿಗತ ವರ್ತನೆಗಳೇ ಅಥವಾ ಮನುಷ್ಯನ ಮಾನಸಿಕ ಸಂರಚನೆಯೇ?

ಅಮ್ಮ ಮತ್ತು ಮಗಳಲ್ಲಿ ಇರುವಂತಹ ಸಂಘರ್ಷವು ದೂರು ಪ್ರತಿದೂರುಗಳು ತಂದೆ ಮಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆ ಎಂಬುದು ತಂದೆಗೆ ಮಗಳ ಮೇಲೆ ಹೆಚ್ಚು ಮಮತೆಯೇ? ತಾಯಿಗಿಲ್ಲವೇ? ‌ಈಗಾಗಲೇ ಈಡಿಪಸ್ ಕಾಂಪ್ಲೆಕ್ಸ್ ಅಥವಾ ತಾಯಿಯರಿಮೆಯನ್ನು ತಿಳಿದವರಿಗೆ ಇದನ್ನು ತಿಳಿಯುವುದು ಅಷ್ಟೇನೂ ಕಷ್ಟವಲ್ಲ.

ಈಡಿಪಸ್ ಕಾಂಪ್ಲೆಕ್ಸ್ ಅಥವಾ ತಾಯರಿಮೆಯಂತೆಯೇ ತಂದೆಯರಿಮೆಯೂ ಕೂಡಾ ಇದೆ. ಮನೋವಿಜ್ಞಾನಿ ಕಾರ್ಲ್ ಜಂಗ್ ವಿಶದಪಡಿಸಿದ ಆ ಅರಿಮೆಯಾದ ಇಲೆಕ್ಟ್ರಾ ಕಾಂಪ್ಲೆಕ್ಸಿಗೂ ಒಂದು ಕತೆಯಿದೆ. ಹೆಣ್ಣು ಮಗುವೊಂದು ತನ್ನ ತಂದೆಯೊಡನೆ ಆಪ್ತತೆ ಅಥವಾ ಆತ್ಮೀಯತೆಗಳಿಸಲು ತನ್ನ ತಾಯಿಯೊಂದಿಗೆ ಹೊಂದಬಹುದಾದ ಮನೋಲೈಂಗಿಕ ಸಂಘರ್ಷವನ್ನು ಇಲೆಕ್ಟ್ರಾ ಕಾಂಪ್ಲೆಕ್ಸ್ ಎಂದು ಹೆಸರಿಸುತ್ತಾರೆ.

ಗ್ರೀಕ್ ನಾಟಕಕಾರ ಸಾಫೋಕ್ಲಿಸ್ ಬರೆದ ಇಲೆಕ್ಟ್ರಾ ದುರಂತ ನಾಟಕದಲ್ಲಿ ಇಲೆಕ್ಟ್ರಾ ಓರ್ವ ರಾಜಕುಮಾರಿ. ಸೇಡು ಮತ್ತು ಹಟದ ಕಾರಣ ತನ್ನ ಸೋದರನನ್ನೇ ತನ್ನ ತಾಯಿಯ ವಿರುದ್ಧ ಪ್ರಚೋದಿಸಿ ಕೊಲ್ಲುವಂತೆ ಮಾಡುತ್ತಾಳೆ. ಅವಳಿಗೆ ಅವಳ ತಂದೆಯ ಮೇಲೆ ಪ್ರೇಮ. ನಾಟಕೀಯ ತಿರುವುಗಳಿರುವ ಇದೊಂದು ದುರಂತ ಕತೆ. ಆದರೆ ಸಾಮಾನ್ಯವಾಗಿ ತಂದೆಯ ಮೇಲಿನ ಮಗಳೊಬ್ಬಳ ಕಡುವ್ಯಾಮೋಹವನ್ನು ಸಂಕೇತಿಸಲು ಇಲೆಕ್ಟ್ರಾ ಕಾಂಪ್ಲೆಕ್ಸ್ ಎಂದು ಕರೆಯಲಾಗಿದೆ.

ಎಷ್ಟೋ ಸಲ ಮಗಳ ಅಂಟಿಕೆಯನ್ನು ತಂದೆ ಸಹಜ ಪ್ರೀತಿಯೆಂದೂ, ಮಗನ ಗಾಢವಾದ ಅವಲಂಬನವನ್ನು ತಾಯಿ ಶಿಶುಸಹಜವೆಂದೂ ಮಕ್ಕಳ ಕಡು ವ್ಯಾಮೋಹವನ್ನು ಅಥವಾ ಲೈಂಗಿಕ ಸೆಳೆತವನ್ನು ನಿರ್ಲಕ್ಷಿಸಿಬಿಡುವರು. ಒಂದು ವೇಳೆ ತಿಳಿದರೂ ಅದನ್ನು ಆಡಲಾರರು, ಕೆಲವೊಮ್ಮೆ ಮಕ್ಕಳಲ್ಲಿ ಅಂತಹುದೆಲ್ಲಾ ಇರುವುದಿಲ್ಲ, ತಾವೇ ತಪ್ಪಾಗಿ ತಿಳಿದಿರಬಹುದು ಎಂದು ಸುಮ್ಮನಾಗಿಬಿಡಬಹುದು. ಮತ್ತೂ ಕೆಲವೊಮ್ಮೆ ಇಂತದ್ದನ್ನೆಲ್ಲಾ ಹಗರಣ ಮಾಡಬಾರದು ಎಂದೂ ಸುಮ್ಮನಾಗಿಬಿಡುವರು.

ಸಮಸ್ಯೆ ಎಂದರೆ, ತಾಯಿಗೆ ತನ್ನ ಪುಟ್ಟ ಮಗನು ತನ್ನೊಡನೆ ಕಡು ವ್ಯಾಮೋಹವನ್ನು ಹೊಂದಿರುವಾಗ ಒಂದು ವೇಳೆ ತನ್ನ ಲೈಂಗಿಕ ವಾಂಛೆಯನ್ನು ತೋರಿದಾಗ, ಆ ವಿಷಯವನ್ನು ತನ್ನ ಗಂಡನಿಗೆ ತಿಳಿಸಿದರೆ ಶಿಕ್ಷಿಸಬಹುದೆಂಬ ಭಯದಿಂದ ಸುಮ್ಮನಾಗಿಬಿಡುತ್ತಾಳೆ. ಅದೇ ರೀತಿ ತಂದೆಯೂ ಕೂಡಾ, ತನ್ನೊಂದಿಗೆ ತನ್ನ ಮಗಳು ಹೊಂದಿರುವ ಸಲುಗೆಯಲ್ಲಿ ಸರಸದ ಆಸೆಯಿದೆ ಎಂದು ತಿಳಿದರೂ ಅದು ಬೇರೆ ಯಾರಿಗೂ ಗೊತ್ತಾಗಿಲ್ಲ. ನಾನೂ ಗೊತ್ತು ಮಾಡುವುದು ಬೇಡ. ಅದಕ್ಕೆ ಇಂಬು ಕೊಡದಿದ್ದರಾಯಿತು ಎಂದು ಸುಮ್ಮನಾಗಿಬಿಡುತ್ತಾನೆ.

ಏಕೆಂದರೆ ಒಂದು ವೇಳೆ ತಾಯಿಗೆ ತಿಳಿದರೆ ಅವಳು ತಮ್ಮಿಬ್ಬರ ಅನ್ಯೋನ್ಯತೆಯನ್ನು ತುಂಡರಿಸುತ್ತಾಳೆ ಎಂಬ ಭಯ ಅವನಿಗೆ. ಅವನಿಗೂ ಅವನ ಮಗಳ ಆಪ್ತತೆ ಹಿತವಾಗಿರುತ್ತದೆ. ಆದರೆ ಆ ಆಪ್ತತೆಯಲ್ಲಿ ಲೈಂಗಿಕತೆಯ ವಾಸನೆ ಕಂಡಾಗ ಅವನಿಗೆ ಇರಿಸುಮುರಿಸಾಗುತ್ತದೆ. ಇದಕ್ಕೆ ತುಂಬಾ ತಲೆಕೆಡಿಸಿಕೊಳ್ಳುವಷ್ಟಿಲ್ಲ. ಎಳೆಯ ಮಕ್ಕಳಿಗೆ ಸಮಾಜವು ಕಟ್ಟಿಕೊಟ್ಟಿರುವ ಶಿಷ್ಟ ಸಂಬಂಧಗಳ ಗುರುತು ಪರಿಚಯ ಇಲ್ಲದಿರುವುದು ಒಂದು ಕಾರಣವಾದರೆ, ಅವರು ನೈಸರ್ಗಿಕವಾಗಿ ಪಶುಗಳಂತೆ ತಮ್ಮ ಪ್ರವೃತ್ತಿಗಳನ್ನು ತೋರಿಸುತ್ತಾರೆ ಅಷ್ಟೇ. ಆದರೆ ಸಾಮಾಜಿಕ ತರಬೇತಿಗೆ ಅವರು ಒಳಪಡುತ್ತಿದ್ದಂತೆ ಸಮಾಜದಲ್ಲಿ ಸ್ಥಾಪಿತವಾಗಿರುವ ಅಥವಾ ಒಪ್ಪಿತವಾಗಿರುವ ಲೈಂಗಿಕ ನಿರೀಕ್ಷೆಗೆ ಅನುಗುಣವಾಗಿ ನಡೆಯುವ ರೂಢಿಯನ್ನು ಮಾಡಿಕೊಳ್ಳುತ್ತದೆ.

ಮೂರರಿಂದ ಆರು ವರ್ಷದವರಷ್ಟು ಸಣ್ಣ ಮಕ್ಕಳಾಗಿದ್ದಾಗಲೇ ಕಾಣುವವು ಈ ಈಡಿಪಸ್ ಮತ್ತು ಇಲೆಕ್ಟ್ರಾ ಕಾಂಪ್ಲೆಕ್ಸ್‍ಗಳು. ಈ ಎರಡೂ ಅರಿಮೆಗಳ ವಿಷಯದಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಇದರ ಅರಿವು ಇದ್ದು ಹೊಣೆಗಾರಿಕೆಯಿಂದ ತಮಗೆ ಜೋತು ಬೀಳುವ ಮಕ್ಕಳ ಬಗ್ಗೆ ಎಚ್ಚರಿಕೆಯಿಂದ ವರ್ತಿಸಬೇಕು. ಇಲ್ಲವಾದರೆ ಭಾವನಾತ್ಮಕವಾಗಿಯೋ, ಮೋಹಪರವಶರಾಗಿಯೋ ವಿವೇಚನೆಯಿಲ್ಲದೇ ವರ್ತಿಸಿದರೆ ಮುಂದಿನ ದಿನಗಳಲ್ಲಿ ಸಂಬಂಧಗಳು ಹಳಸುತ್ತವೆ. ಎಂತೆಂತಹ ಪ್ರಸಂಗಗಳನ್ನು ಎದುರಿಸಬೇಕಾಗುವುದೆಂದು ಹೇಳಲಾಗುವುದಿಲ್ಲ.

ಸಿಗ್ಮಂಡ್ ಫ್ರಾಯ್ಡ್ ಹೇಳುವಂತೆ ಹೆಣ್ಣು ಮಗುವಿಗೆ ತನ್ನ ತಂದೆ ಇರುವ ಶಿಶ್ನವು ತನಗಿಲ್ಲವೆಂದು ಅಸೂಯೆ ಪಡುತ್ತಾಳೆಂದೂ ಅದಕ್ಕೆ ಶಿಶ್ನಾಸೂಯೆ ಎಂದೂ ಹೆಸರಿಸುತ್ತಾನೆ. ಇದೇ ಕಾರಣಕ್ಕೆ ಅವಳು ತಂದೆಯೊಡನೆ ಆತ್ಮೀಯತೆಯಿಂದ ಸಖ್ಯವನ್ನು ಬೆಳೆಸಿಕೊಳ್ಳುತ್ತಾಳೆ. ಜೊತೆಗೆ ತನ್ನ ತಂದೆ ತನ್ನ ತಾಯಿಯ ಜೊತೆಗಿನ ಸರಸ ಸಂಬಂಧವನ್ನು ಸಹಿಸಲಾರದೇ ಹೋಗುತ್ತಾಳೆ. ಕೆಲವು ಹೆಣ್ಣು ಮಕ್ಕಳಂತೂ ತಮ್ಮ ತಾಯಂದಿರಿಗೆ ಸವತಿ ಕಾಟವನ್ನೇ ಕೊಡುತ್ತಾರೆ. ಇದು ತಾತ್ಕಾಲಿಕ. ಏಕೆಂದರೆ ವಯಸ್ಸಾದಂತೆ ಅವರಿಗೆ ತಮ್ಮ ಲೈಂಗಿಕ ಗುರುತಿನ ಬಗ್ಗೆ ಸರಿಯಾದ ಅರಿಮೆ ಉಂಟಾಗುತ್ತದೆ ಮತ್ತು ಬಾಲ್ಯದಲ್ಲಿ ಅದರ ಬಗ್ಗೆ ತಮಗಿದ್ದ ಒಲವನ್ನೂ ಮತ್ತು ಗೊಂದಲವನ್ನೂ ಕ್ರಮೇಣ ಇಲ್ಲವಾಗಿಸಿಕೊಳ್ಳುತ್ತಾರೆ.ಸಮಾಜದಲ್ಲಿ ಇರುವಂತಹ ಸಾಂಪ್ರದಾಯಿಕವಾದ ಲೈಂಗಿಕ ಗುರುತುಗಳ ಹೊಣೆಗಾರಿಕೆಯನ್ನು ರೂಢಿಸಿಕೊಳ್ಳುತ್ತಾರೆ.

ಒಂದು ವೇಳೆ ಪೋಷಕರು ಮೋಹಪರವಶವಾಗಿ ಮಗುವಿನ ಶಿಶ್ನಾಸೂಯೆಯ ಅವಧಿಯಲ್ಲಿ ಮಕ್ಕಳಿಗೆ ಸ್ಪಂದಿಸಿದರೆ, ಮಗುವು ಅದರಿಂದ ಹೊರಗೆ ಬರದೇ ಹೋಗಬಹುದು. ತನ್ನ ಜೋತುಬೀಳುವಿಕೆಯನ್ನು ಗಟ್ಟಿಗೊಳಿಸಿಕೊಂಡು ಅದನ್ನೇ ತನ್ನ ಪ್ರಧಾನ ಲೈಂಗಿಕಾಸಕ್ತಿಯನ್ನಾಗಿಯೂ ಕೂಡಾ ಮುಂದುವರಿಸಿಕೊಳ್ಳಬಹುದು.ಆದರೆ ಈ ಶಿಶ್ನಾಸೂಯೆಯ ವಾದವನ್ನು ನವೀನ ಮನಶಾಸ್ತ್ರಜ್ಞರು ಒಪ್ಪುವುದಿಲ್ಲ. ಮತ್ತೆ ಕೆಲವರು ಇದು ಅವಾಸ್ತವದ ವಾದ ಎಂದು ಸಾರಾಸಗಟಾಗಿ ತಿರಸ್ಕರಿಸುತ್ತಾರೆ. ಆದರೆ, ಅಷ್ಟೂ ತಿರಸ್ಕರಿಸುವ ಬದಲು ವಿಷಯವನ್ನು ತಿಳಿದಿದ್ದು ಗಮನಿಸುವುದರಿಂದ ಮತ್ತು ಗಮನಕ್ಕೆ ಬಂದಾಗ ಪ್ರಜ್ಞೆಯಿಂದ ವರ್ತಿಸುವುದರಲ್ಲಿ ಹಾನಿಯೇನೂ ಇಲ್ಲ.

ಲೈಂಗಿಕ ವಿಷಯಗಳಲ್ಲಿ ಇರುವಂತಹ ಮಡಿವಂತಿಕೆ ಮತ್ತು ಸಾಮಾಜಿಕ ಅಪಖ್ಯಾತಿಯ ಹಿಂಜರಿಕೆಯಿಂದಾಗಿ ಬಹುಪಾಲು ಜನರು ಇಂತವನ್ನು ಒಪ್ಪುವುದಿರಲಿ, ಕೇಳಲೂ ಇಷ್ಟ ಪಡುವುದಿಲ್ಲ. ಆದರೆ ನಾನು ಕಂಡಂತಹ ಕೆಲವು ವ್ಯಕ್ತಿಗತ ಸಂಬಂಧಗಳಲ್ಲಿ ಇಂತಹ ಪ್ರಕರಣಗಳನ್ನು ಕಂಡಿದ್ದೇನೆ. ತನ್ನ ತಂದೆಯಂತಹ ಪ್ರಿಯತಮನನ್ನು ಹೆಣ್ಣು ಬಯಸುವುದು, ತನ್ನ ತಾಯಿಯ ಛಾಯೆಯನ್ನು ಪ್ರಿಯತಮೆಯಲ್ಲಿ ಗಂಡು ಬಯಸುವುದು ಕೂಡಾ ಮಾಸಿದ ಈಡಿಪಸ್ ಮತ್ತು ಇಲೆಕ್ಟ್ರಾ ಕಾಂಪ್ಲೆಕ್ಸ್‍ಗಳ ಪ್ರಭಾವಗಳೇ ಎಂದು ಅನಿಸುತ್ತದೆ.

ತಂದೆಯರಿಮೆ ಅಥವಾ ಇಲೆಕ್ಟ್ರಾ ಕಾಂಪ್ಲೆಕ್ಸ್‍ಗಳು ಸಾಮಾನ್ಯವಾಗಿ ಹೆಣ್ಣು ಮಕ್ಕಳು ತಮ್ಮ ತಾಯಿಯರ ಬಗ್ಗೆ ದೂರುತ್ತಿರುತ್ತಿರುವುದರಲ್ಲಿ ಕಾಣುತ್ತಿರುತ್ತದೆ. “ನಾನು ಏನು ಮಾಡಿದರೂ ತಪ್ಪನ್ನು ಕಂಡು ಹಿಡಿಯುತ್ತಾರೆ. ನನ್ನ ಸಾಧನೆ ಬಗ್ಗೆ ಹೆಮ್ಮೆ ಪಡುವುದಿಲ್ಲ. ಏನಾದರೂ ಕೇಳಿದರೆ ನಿಮ್ಮ ಅಪ್ಪನ್ನ ಕೇಳು ಎಂದು ವ್ಯಂಗ್ಯವಾಗಿ ಹೇಳುತ್ತಾರೆ” ಇತ್ಯಾದಿ. ಗಮನಿಸಿದವರಿಗೆ ಗೋಚರಿಸುವ ಕೆಲವು ವಿಷಯಗಳಿವೆ. ಕೆಲವು ತಾಯಂದಿರಿಗೆ ಮದುವೆಯಾದ ತನ್ನ ಮಗಳಿಗಿಂತ ಅಳಿಯನ ಮೇಲೆ ಪ್ರೀತಿ ಹೆಚ್ಚು. ಮಗಳು ಮತ್ತು ಅಳಿಯನ ನಡುವೆ ಜಗಳ ಬಂದಾಗ ಅತ್ತೆ ಅಳಿಯನ ಪಕ್ಷವಹಿಸುತ್ತಾಳೆ. “ನಾನು ಅವಳನ್ನು ಇವತ್ತು ನೋಡುತ್ತಿಲ್ಲ. ಅವಳು ಮೊದಲಿಂದಲೂ ಹಾಗೆಯೇ” ಎನ್ನುತ್ತಾಳೆ.

ಇನ್ನೂ ಕೆಲವು ಪ್ರಕರಣಗಳಲ್ಲಿ ಸೊಸೆಯಂದಿರು ವಿಧವೆ ಅತ್ತೆಯಿಂದ ಹೆಚ್ಚು ಕಿರುಕುಳಗಳನ್ನು ಅನುಭವಿಸುತ್ತಾರೆ. ಇದಕ್ಕೆ ಕಾರಣ ಬಿಡಿಸಿ ಹೇಳಬೇಕಿಲ್ಲ. ಈಡಿಪಸ್ಸೇ ಆಗಲಿ ಅಥವಾ ಇಲೆಕ್ಟ್ರಾ ಕಾಂಪ್ಲೆಕ್ಸೇ ಆಗಲಿ, ಅವು ಮಕ್ಕಳಲ್ಲಿ ಕಂಡು ಬಂದಾಗ ಅಲ್ಲಿ ಸಂಯಮ ವಹಿಸಬೇಕಾದವರು ಮತ್ತು ಪ್ರಜ್ಞಾವಂತಿಕೆಯಿಂದ ವರ್ತಿಸಬೇಕಾದವರು ಹಿರಿಯರು. ಮಕ್ಕಳಲ್ಲಿ ಅಂತಹ ಅರಿಮೆಗಳನ್ನು ಕಂಡರೆ ಅದು ಸಹಜವೂ ಮತ್ತು ನೈಸರ್ಗಿಕವೂ ಆಗಿದ್ದು ಮಾನಸಿಕವಾಗಿ ಆರೋಗ್ಯ ಕೆಟ್ಟಿರುವುದೇನಲ್ಲ.

ಆದರೆ ಹಿರಿಯರೇನಾದರೂ ಅನಾರೋಗ್ಯಕರವಾದ ಮನಸ್ಥಿತಿಯನ್ನು ಹೊಂದಿದ್ದಲ್ಲಿ ಮಗುವಿಗೆ ಸಮಸ್ಯೆಯಾಗುತ್ತದೆ. ಅದೂ ಕೂಡಾ ಅನಾರೋಗ್ಯಕರವಾದಂತಹ ಮನೋಭಾವವನ್ನು ಹೊಂದುವುದಕ್ಕೆ ಆಸ್ಪದವಾಗುತ್ತದೆ. ಯಾವಾಗಲೂ ಅಷ್ಟೇ, ಲೈಂಗಿಕ ಭಾವನೆಗಳು ಸಹಜವಾಗಿ ಮೂಡುವುದು ಆರೋಗ್ಯಕರವೇ ಆಗಿರುತ್ತದೆ. ಆದರೆ ಅದನ್ನು ವಿಕೃತಗೊಳಿಸಿಕೊಳ್ಳುವುದು ಮನುಷ್ಯನ ಅನಿಯಂತ್ರಿತ ಮನಸ್ಸಿನ ದುಡುಕಿನ ತುಡುಗುತನವೇ ಆಗಿರುತ್ತದೆ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending