ಅಂತರಂಗ
ಅರಿಮೆಯ ಅರಿವಿರಲಿ-9 : ಆತ್ಮರತಿ
- ಯೋಗೇಶ್ ಮಾಸ್ಟರ್
ಅವನು ಲ್ಯಾಕೋನಿಯಾದ ಬೇಟೆಗಾರ. ಅವನಿದ್ದದ್ದು ಪುರಾತನ ಗ್ರೀಸಿನಲ್ಲಿರುವ ಥಿಸ್ಪಿಯೇ ಪ್ರಾಂತ್ಯ. ಅವನೋ ಕಟ್ಟುಮಸ್ತಾದ ಮೈಕಟ್ಟಿನವ, ಸುಂದರ ಮುಖದವ. ಅವನೂ ಸುಂದರ. ಅವನಿಗೂ ಸುಂದರವಾದ ವಿಷಯಗಳಲ್ಲಿ ಪರಮಾಸಕ್ತಿ. ಅವಳೊಬ್ಬಳು ಶಾಪಕ್ಕೊಳಗಾದ ಕನ್ಯೆ. ಅವನನ್ನು ಅನುಸರಿಸುತ್ತಿರುತ್ತಾಳೆ. ಅವಳ ಶಾಪವೋ ಅವಳಿಗೆ ತನ್ನ ಮಾತನ್ನು ತಾನು ಹೇಳಲಾಗದು. ಇತರರ ಮಾತನ್ನು ಪ್ರತಿಧ್ವನಿಸಬೇಕು. ಹಾಗಾಗಿ ಅವಳಿಗೆ ಗ್ರೀಕ್ ಬೇಟೆಗಾರನಿಗೆ ತನ್ನ ಪ್ರೀತಿಯ ಮಾತುಗಳನ್ನು ಹೇಳಲಾಗದು, ತನ್ನ ಪ್ರಶಂಸೆಯನ್ನೂ ತಿಳಿಸಲಾಗದು. ಅವನೋ ಇವಳ ಕಡೆ ಕಣ್ಣೆತ್ತಿಯೂ ನೋಡದೇ ಓಡಾಡುತ್ತಿರುತ್ತಾನೆ.
ಒಮ್ಮೆ ತಿಳಿಯಾದ ನೀರಿನಲ್ಲಿ ತನ್ನ ಬಿಂಬವನ್ನು ನೋಡಿಕೊಳ್ಳುತ್ತಾನೆ. ತನ್ನದೇ ಸೌಂದರ್ಯವನ್ನು ತಾನೇ ನೋಡಿಕೊಂಡು ಪರವಶನಾಗುತ್ತಾನೆ. ಆ ನೀಳ ಮೂಗು, ಹೊಳಪಿನ ಕಣ್ಣುಗಳು, ಗುಲಾಬಿ ದಳದಂತಹ ತುಟಿಗಳು, ನಕ್ಕರೆ ಅರಳಿದ ಹೂವಿನಂತಹ ಮುಖ; ಆಹಾ! ಅದನ್ನು ಮುದ್ದಿಸುವಷ್ಟು ಆಕರ್ಷಕ, ಮೋಹಕ. ಒಂದೇ ಕಣ್ಣೋಟಕೆ ಪ್ರೇಮಿಸಲಾಗುವಂತೆ, ಒಮ್ಮಿಂದೊಮ್ಮೆಲೇ ಮರುಳಾಗಿ ಅಪ್ಪಿ ಇನ್ನಿಲ್ಲವಾಗುವಂತಹ ಸೆಳೆತ. ಅವನು ತನ್ನ ಬಿಂಬಕ್ಕೆ ತಾನೇ ಮೋಹಿತನಾಗಿ ಮುದಪಡೆಯಲು, ಸರಸದಿಂದ ಮುಟ್ಟುತ್ತಾನೆ. ನೀರು ಕಲಕುತ್ತಿದ್ದಂತೆ ಬಿಂಬ ಚದರುತ್ತದೆ. ಇಲ್ಲವಾಗುತ್ತದೆ. ಅಯ್ಯೋ, ತನ್ನ ಮೋಹಕ, ಪ್ರೇಮಪೂರ್ಣ ತನ್ನನ್ನು ಪಡೆಯಲು ನೀರಿಗೆ ಧುಮುಕುತ್ತಾನೆ. ಆದರೆ ಸಿಗುವುದಿಲ್ಲ. ದಡದಲ್ಲೊಂದು ಅವನ ಪ್ರೇಮಕ್ಕೆ ಸಾಕ್ಷಿಯಾಗಿ ಹೂಗಿಡವೊಂದು ಮೂಡುತ್ತದೆ. ಆ ಹೂವಿಗೂ ಅವನದೇ ಹೆಸರು. ನಾರ್ಸಿಸಸ್.
ಆತ್ಮರತಿಯಲೆಗಳು
ನಾರ್ಸಿಸಸ್ ತನ್ನ ತಾನು ಮೋಹಿಸಿಕೊಳ್ಳುವ, ತನಗೆ ತಾನು ಪರವಶವಾಗುವ, ತನ್ನನ್ನು ತಾನೇ ಪ್ರೀತಿಸಿಕೊಳ್ಳುವ ಆತ್ಮರತಿಗೆ ಪ್ರತಿಮೆಯಾಗಿ ನಿಲ್ಲುತ್ತಾನೆ. ಈ ಅರಿಮೆಯೇ ಆತ್ಮರತಿ. ಅವರಿವರ ಅತಿಕ್ರಮಣ ಪ್ರವೇಶವಿರದಿದ್ದಾಗ ಏಕಾಂತದಲ್ಲಿ ಕನ್ನಡಿಯ ಮುಂದೆ ಕುಳಿತುಕೊಂಡು ತನ್ನನ್ನೇ ತಾನೇ ನೋಡಿಕೊಂಡು, ಕಾಣುವ ಎಲ್ಲಾ ವಿವರಗಳನ್ನು ಗಮನಿಸುತ್ತಾ, ಪ್ರಶಂಸಿಸುತ್ತಾ, ನಸುನಗುತ್ತಾ, ಮೋಹಗೊಳ್ಳುತ್ತಾ ಪರವಶವಾಗುವ ಅನುಭವವಿರುವವರಿಗೆ ನಾರ್ಸಿಸಸ್ ನೀರಿನಲ್ಲಿ ತನ್ನ ಬಿಂಬವನ್ನು ಹೇಗೆ ನೋಡಿಕೊಂಡಿದ್ದಿರಬಹುದು ಎಂದು ಅರಿವಾಗುತ್ತದೆ.
ಫೇಸ್ಬುಕ್ ಅಥವಾ ಇನ್ಟಾಗ್ರಾಂನಲ್ಲೋ ಕಣ್ಣಾಡಿಸಿದರೆ ಆತ್ಮರತಿಯ ಅಸಂಖ್ಯಾತ ಉದಾಹರಣೆಗಳು ಸಿಗುತ್ತವೆ. ಮುಖಪುಟವಂತೂ ಆತ್ಮರತಿಯ ಮಹಾಸಾಗರ. ನಾರ್ಸಿಸಿಸಂ ಅಥವಾ ಆತ್ಮರತಿಯ ಅರಿಮೆಯ ಅಲೆಗಳು ಎದ್ದೆದ್ದು ಬರುತ್ತಲೇ ಇರುತ್ತವೆ. ಅಷ್ಟು ಸಾಮಾನ್ಯ. ನಮಗೆ ಹೆಜ್ಜೆಹೆಜ್ಜೆಗೂ ಕಣ್ಣಿಗಪ್ಪಳಿಸುತ್ತಿರುತ್ತವೆ.
ಅದ್ಯಾವುದೋ ಊರ ಹಬ್ಬಕ್ಕೆ ಶುಭಾಶಯ ಕೋರುವ ರಾಜಕಾರಣಿಯ ಅಥವಾ ಮುಂದೆ ನಿಲ್ಲಬಹುದಾದ ಚುನಾವಣಾ ಅಭ್ಯರ್ಥಿಯ ಫ್ಲೆಕ್ಸ್ ನೋಡಿ. ಹೆಸರಿನ ಹಿಂದೆ ಒಂದಿಷ್ಟು ಬಿರುದು ಬಾವಲಿಗಳು, ಗ್ರಾಫಿಕ್ಸ್ನಲ್ಲಿ ಹುಲಿ ಸಿಂಹಗಳೂ ಅತ್ತಿತ್ತ ಇದ್ದರೆ ಆಶ್ಚರ್ಯವಿಲ್ಲ. ಈತನೆಂದು ಗುರುತಿಸಲು ಬರಿಯ ಮುಖ ಸಾಕಾದರೂ, ಅವರಿಗೆ ಆತ ತೊಟ್ಟಿರುವ ಬೂಟಿನವರೆಗೂ, ಜೊತೆಗೆ ನಡೆಯ ಭಂಗಿಯನ್ನೂ ತೋರುವ ತವಕ. ಅದನ್ನು ನೋಡಿ, ಆಹಾ, ಆ ಸುಂದರವಾದ ಹೊಳಪುಳ್ಳ ಉಂಗುರವನ್ನು ನೋಡು, ಆಹಾ, ಆ ಚೆಂದದ ಶರ್ಟಿನ ಬಣ್ಣವನ್ನು ನೋಡು.
ಇಂಥವೆಲ್ಲಾ ತೊಟ್ಟಿರುವ, ಹೀಗೆಲ್ಲಾ ಕಾಣುವ ಇವನೇ ನಮ್ಮ ನಾಯಕನಾಗಬೇಕು ಎಂದು ಅವನ ಸೌಂದರ್ಯೋಪಾಸನೆಯಿಂದ ರಸ್ತೆಯಲ್ಲಿ ಓಡಾಡುತ್ತಿರುವವರಾರಾದರೂ ಪರವಶವಾಗುತ್ತಾರೆಂದುಕೊಂಡಿದ್ದೀರಾ?
ಫೇಸ್ಬುಕ್ಕಿನಲ್ಲಿ ಕೆಲವರು ಎಡಕ್ಕೆ ತಿರುಗಿ ಒಂದು ಪಟ, ಬಲಕ್ಕೆ ತಿರುಗೊಂದು ಪಟ, ಹೀಂಗೊಂದು ಪಟ, ಹಾಗೊಂದು ಪಟ. ಮೇಲಿಂದೊಂದು, ಕೆಳಗಿಂದೊಂದು; ನಾನಾ ಭಾವಗಳಲ್ಲಿ, ಭಂಗಿಗಳಲ್ಲಿ ವಿಜೃಂಭಿಸುತ್ತಿರುತ್ತವೆ. ಕೆಲವು ಸಲ ಬರಿಯ ನೋಡುಗರಿಗೆ ಪಟ ಹಾಕಿದವರಿಗೆ ಕಂಡ ವ್ಯತ್ಯಾಸಗಳಾವುವೂ ಕಾಣುವುದೂ ಇಲ್ಲ. ಎಲ್ಲವೂ ಒಂದೇ ಎಂಬಂತೆ ಕಾಣುತ್ತಿರುತ್ತದೆ.
ಇನ್ನೂ ಮುಂದುವರಿದು ತಾವು ತೊಟ್ಟಿರುವ ಪ್ರತಿ ಬಟ್ಟೆಯ ಪಟಗಳನ್ನು ಫೇಸ್ಬುಕ್ಕಿನಲ್ಲಿ ಪೇರಿಸುವುದು ಸಾಲದೆಂದು ಅವರ ಸ್ನೇಹಿತರೆಲ್ಲಿ ನೋಡುವುದರಿಂದ ವಂಚಿತರಾಗಿಬಿಡುತ್ತಾರೋ ಎಂದು ಪ್ರಶಂಸಿಸಬಹುದಾದ ಸ್ನೇಹಿತರಿಗೆಲ್ಲಾ ತಗುಲಿ ಹಾಕಿರುತ್ತಾರೆ. ಲೈಕಿಸಲಿ, ಪ್ರೀತಿಸಲಿ, ವಾವ್ ಎಂದು ಕಣ್ಣು ಬಾಯಿ ಬಿಡಲೆಂಬ ಹೆಬ್ಬಯಕೆ. ಒಂದು ನಾರ್ಸಿಸಸ್ ಮತ್ತೊಂದು ನಾರ್ಸಿಸಸ್ಸನ್ನು ನೋಡುವುದಿಲ್ಲ.
ಆಗ ಈ ನಾರ್ಸಿಸಸ್ ಬಡಪೆಟ್ಟಿಗೆ ಬಗ್ಗದೆ ಆ ನಾರ್ಸಿಸಸ್ ಒಳಪೆಟ್ಟಿಗೆಗೆ ಸಂದೇಶ ಕಳುಹಿಸಿ ಮೆಚ್ಚಿಸಿಕೊಳ್ಳುವವರೆಗೂ ಬಿಡುವುದಿಲ್ಲ.
ಆಹಾ, ಈ ಮುಖ ಎಡಗಡೆಯಿಂದ ಎಷ್ಟು ಸುಂದರ, ಹಾ, ಹಾಗೆಯೇ ಬಲದಿಂದಲೂ ಸುಂದರ ಎಂದು ನಾನಾ ಬಗೆಗಳಿಂದಲೂ ನೋಡುತ್ತಾ ಆನಂದದಿಂದ ರಸಾನುಭೂತಿಯಲ್ಲಿ ಮಿಂದೆದ್ದು ನೋಡುಗಳು ಸುರಸವಾದ ಸಾರ್ಥಕ ಪಡೆಯುತ್ತಾರೆಂದುಕೊಂಡಿದ್ದೀರಾ?
ಬಹಳಷ್ಟು ಸೆಲ್ಫೀ ಅಥವಾ ಸ್ವಂತೀ ಪಟಗಳು ಆತ್ಮರತಿಯ ಬಿಂಬಗಳು.
ಸಾಮಾನ್ಯ ಸಮಸ್ಯೆ
ಆತ್ಮರತಿ ಎಂದರೆ ಆತ್ಮವಿಶ್ವಾಸ ಅಥವಾ ಸ್ವಕೇಂದ್ರಿತ ವ್ಯಕ್ತಿತ್ವವೇನಲ್ಲ. ಅದೊಂದು ಮಾನಸಿಕ ಸಮಸ್ಯೆ. ಕಾರಣ ಮತ್ತು ಪರಿಣಾಮಗಳಿರುವಂತಹ ಬಹಳ ಗುರುತರವಾದಂತಹ ಹಾಗೂ ಗಂಭೀರವಾದ ಸಮಸ್ಯೆಯೇ. ಈ ಆತ್ಮರತಿಯ ಅರಿಮೆಗೆ narcissistic personality disorder (NPD)
ಎಂದು ಕರೆಯುತ್ತಾರೆ. ಆಗಲೇ ಹೇಳಿದಂತೆ ಇದು ನಮ್ಮಲ್ಲಿ ಬಹು ವ್ಯಾಪಕವಾದ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ಮಾನಸಿಕ ಸಮಸ್ಯೆಗಳು ಸಮಸ್ಯೆಗಳನ್ನಾಗಿ ಗುರುತಿಸಿಕೊಳ್ಳುವುದಿಲ್ಲ. ಹಾಗೆ ಗುರುತಿಸಿಕೊಂಡರೆ ಅವು ಕೊಂಚವಾದರೂ ನಿಯಂತ್ರಣಕ್ಕೆ ಬರುತ್ತವೆ. ನನ್ನಲ್ಲಿ ಆತ್ಮರತಿಯ ಅರಿಮೆ ಇದೆ ಎಂದು ಗುರುತಿಸಿಕೊಂಡರೆ ಪ್ರದರ್ಶನಗಳು ಕೊಂಚ ಕಡಿಮೆಯಾಗಬಹುದು. ಅಥವಾ ಪ್ರದರ್ಶನಗಳಿಗೊಂದು ನಿಯಂತ್ರಣ ಬರಬಹುದು.
ಒಟ್ಟಾರೆ ಆತ್ಮರತಿಯ ಅರಿಮೆಯನ್ನು ಇತರರಲ್ಲಿ ಗುರುತಿಸಲು ಮತ್ತು ತನ್ನಲ್ಲಿ ಗುರುತಿಸಿಕೊಳ್ಳಲು ಫೇಸ್ಬುಕ್ ಮತ್ತು ಫ್ಲೆಕ್ಸುಗಳು ಒಳ್ಳೆಯ ಸಾಧನವಾಗಿವೆ. ಆದರೆ ಈ ಆತ್ಮರತಿಯ ಸಮಸ್ಯೆ ಬರೀ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದರೆ ನಸುನಕ್ಕು ಸುಮ್ಮನಾಗಿಬಿಡಬಹುದಿತ್ತು. ಆದರೆ ಅದು ಗಂಭೀರವಾದ ಒಳಸುಳಿಗಳನ್ನು ಹೊಂದಿವೆ. ಮುಂದೆ ಹೇಳಲಾಗುವ ಎಲ್ಲಾ ಲಕ್ಷಣಗಳೂ ಇರಲೇ ಬೇಕೆಂದೇನಿಲ್ಲ. ಆದರೆ ಇವು ಸಾಮಾನ್ಯ ಲಕ್ಷಣಗಳು. ಇವುಗಳಲ್ಲಿ ಕೆಲವು ಇರಬಹುದು. ಇಲ್ಲದೇ ಇರಬಹುದು. ಕೆಲವರಿಗೆ ಇವುಗಳ ಜೊತೆಗೆ ಇನ್ನೂ ಹಲವಿರಬಹುದು.
ತನಗೆ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುವ ಹಪಹಪಿಸುವ ಬಯಕೆ.
ತನ್ನ ಕಡೆಗೆ ಗಮನ ಸೆಳೆಯುವ ಮತ್ತು ಪ್ರಶಂಸೆ ಪಡೆಯುವ ಅದುಮಿಡಲಾಗದ ಆಳದೊಳಗಿಂದೇಳುತ್ತಲೇ ಇರುವ ಆಸೆ. ಬೇರೆಯವರ ಬಗ್ಗೆ ಸಹಾನುಭೂತಿ(empathy)ಇಲ್ಲದಿರುವುದು. ಸಂಬಂಧಗಳಲ್ಲಿ ಸಮಸ್ಯೆಗಳು, ಸ್ವಾರ್ಥ, ಇತರರ ಭಾವನೆಗಳನ್ನು ಪರಿಗಣಿಸದಿರುವುದು.
ಒಟ್ಟಾರೆ ಈ ಆತ್ಮರತಿ ಅರಿಮೆಯು ಕಪ್ಪು ಬಿಳಿಪಿನಷ್ಟು ಸ್ಪಷ್ಟವಾಗಿ ವಿಭಜಿಸಿ ಸ್ಪಷ್ಟೀಕರಿಸಲಾಗದ್ದು. ಬೆಳಕಿನ ವಕ್ರೀಭವನದಿಂದ ಅನೇಕ ಬಣ್ಣಗಳು ಮೂಡುವಂತೆ ವಿವಿಧ ರಂಗುಗಳನ್ನು ಪಡೆದುಕೊಳ್ಳುವಂತಹ ಅರಿಮೆ.
ಇನ್ನೂ ಕೆಲವರಲ್ಲಿ ನೀವು ಗಮನಿಸಬಹುದು.
ತಮ್ಮ ಬಗ್ಗೆ ಅತ್ಯಂತ ಮಹೋನ್ನತದ ಎತ್ತರದ ಭವಿಷ್ಯತ್ತಿನ ಭ್ರಮೆಯಲ್ಲಿ ಬಡಬಡಿಸುತ್ತಿರುವರು. ಅವರ ವಿಶ್ವಾಸಕ್ಕೆ, ಯಶಸ್ಸಿಗೆ, ಅಧಿಕಾರಕ್ಕೆ, ಬುದ್ಧಿಮತ್ತೆಗೆ, ಸೌಂದರ್ಯಕ್ಕೆ, ಪ್ರೇಮಕ್ಕೆ ಸಾಟಿಯೇ ಇಲ್ಲವೆಂಬಂತೆ ಹೇಳಿಕೊಳ್ಳುತ್ತಿರುವರು.
ಬರಹಗಾರನೊಬ್ಬ ತಾನು ರಚಿಸಿದ ಕವನ, ಕತೆ ಅಥವಾ ಲೇಖನವನ್ನು ಸಹಜವಾಗಿ ಪ್ರಕಟಿಸುತ್ತಾನೆ. ಬರಿದೇ ಪ್ರಸ್ತುತ ಪಡಿಸುವುದು ಅಥವಾ ಹಂಚಿಕೊಳ್ಳುವುದೇಕೆಂದರೆ ಅದು ಓರ್ವ ವ್ಯಕ್ತಿಯ ಅಥವಾ ಸಮಾಜದ ಅಭಿಪ್ರಾಯವನ್ನು ಅಥವಾ ಒಲವು ನಿಲುವುಗಳನ್ನು ಅಭಿವ್ಯಕ್ತಿಗೊಳಿಸುತ್ತಿರುತ್ತವೆ. ಹಾಗಾಗಿ ಅದನ್ನು ಅವನು ಹಂಚಿಕೊಳ್ಳುವುದು ಸಹಜ. ಈ ಹಂಚಿಕೊಳ್ಳುವಿಕೆಯಲ್ಲಿ ಪ್ರಶಂಸೆಯ ಹಸಿವಿರಲಾರದು. ಆದರೆ, ತಾವೊಂದು ಸುಂದರವಾದ ಮತ್ತು ಅಪರೂಪವಾದ ಅಥವಾ ವಿಶಿಷ್ಟವಾದ ಕತೆಯೊಂದನ್ನು ಅಥವಾ ಕವನವೊಂದನ್ನು ಬರೆದಿದ್ದೇನೆ ಎಂದು ನಿಮ್ಮ ವಾಟ್ಸಪ್ಪಿಗೋ ಅಥವಾ ಇನ್ಬಾಕ್ಸಿಗೋ ಯಾರಾದರೂ ಕಳುಹಿಸಿದ್ದಾರೆಂದರೆ, ಅವರು ಬರಿದೇ ಹಂಚಿಕೊಳ್ಳಲು ಕಳುಹಿಸಿಲ್ಲ. ನಿಮಗೂ ವಿಷಯ ತಿಳಿದಿರಲಿ ಎಂಬ ಸಾಧಾರಣ ಧೋರಣೆಯಲ್ಲ.
ಪ್ರಶಂಸೆಗಳನ್ನು ಉಣಬಡಿಸಿ ನನ್ನ ಆತ್ಮರತಿಯ ಹಸಿವನ್ನು ತಣಿಸಿ ಎಂದು. ಪ್ರಶಂಸೆಗಳಿಗಾಗಿ ಪರಿತಪಿಸುವುದು, ಪ್ರಶಸ್ತಿಗಳಿಗಾಗಿ ಹಂಬಲಿಸಿ ಹೆಣಗಾಡಿ ಎಂತಾದರೂ ಪಡೆಯುವುದು, ಕಮಿಷನ್ ಕೊಟ್ಟಾದರೂ ಡಾಕ್ಟರೇಟ್ ಪಡೆದು ಡಾ. ಹಾಕಿಕೊಂಡು ಆನಂದಿಸುವುದು; “ಅದು ಸಾಮಾನ್ಯ” ಕೆಟಗರಿಗೆ ತಳ್ಳಬೇಡಿ. ಆತ್ಮರತಿಯ ಹಸಿವೆಯಿಂದ ಬಳಲುತ್ತಿರುವ ಅರಿಮೆ ಎಂಬ ಅರಿವಿರಲಿ. ಅರಿಮೆಗಳಿರುವುದು ಸಾಮಾನ್ಯವಲ್ಲ. ಸಾಮಾನ್ಯವಾಗಿರುವ ಸಮಸ್ಯೆಗಳು.
ನನಗೆ ಅವರು ಗೊತ್ತು
ಒಂದೆರಡು ವರ್ಷಗಳ ಹಿಂದೆ, ನಮ್ಮ ಮನೆಯ ಹತ್ತಿರವೇ ಮರವೊಂದರ ಕೆಳಗೆ ಧೂಮಪಾನ ಮತ್ತು ಮದ್ಯಪಾನದಲ್ಲಿ ನಿರತರಾಗಿದ್ದ ಯುವಕರ ತಂಡವೊಂದು ಮನೆಯೊಳಗಿದ್ದವರಿಗೆ ಕಿರಿಕಿರಿ ಮಾಡುವಷ್ಟು ಉತ್ಸಾಹದಲ್ಲಿ ಊಳಿಡುತ್ತಿದ್ದರು. ನಿದ್ರೆ ಮಾಡುತ್ತಿದ್ದ ನನಗೆ ಭಂಗವಾಗಬಾರದೆಂದು ನನ್ನ ಹೆಂಡತಿ ಅವರ ಬಳಿಗೆ ಹೋಗಿ, “ನೀವು ಹೀಗೆಲ್ಲಾ ಇಲ್ಲಿ ಗಲಾಟೆ ಮಾಡಬಾರದು. ಎದ್ದು ಬಾರ್ ಅಥವಾ ಪಬ್ ಗೆ ಹೋಗಿ” ಎಂದು ಹೇಳಿದಳು. ಅವರಲ್ಲೊಬ್ಬ ಹೇಳಿದನಂತೆ, “ರೀ ಮೇಡಂ, ನಾವ್ಯಾರು ಗೊತ್ತಾ? ರಾಮ ಲಕ್ಷ್ಮಣರ ಹುಡುಗರು” ಎಂದು. “ಯಾವ ರಾಮ ಲಕ್ಷ್ಮಣ? ರಾಮ ಲಕ್ಷ್ಮಣರ ಹುಡುಗರಾದರೆ ಭಜನೆ ಮಾಡ್ಕೊಂಡು ಕೂತ್ಕೊಳ್ಳಿ. ಇಲ್ಯಾಕೆ ಬಂದು ಹೀಗೆ ಗಲಾಟೆ ಮಾಡ್ತೀರಿ” ಎಂದವಳೇ ಮನೆಗೆ ಬಂದು ಪೋಲಿಸರಿಗೆ ಫೋನ್ ಮಾಡಿ, ಅವರು ಬಂದು ರಾಮ ಲಕ್ಷ್ಮಣರ ಹುಡುಗರಿಗೆ ಬೈದು ಬೆತ್ತದ ರುಚಿಯನ್ನೋ ತೋರಿಸಿ ಕಳುಹಿಸಿದ್ದರು.
ರಾಮ ಲಕ್ಷ್ಮಣರಿಬ್ಬರೂ ರೌಡಿಗಳು ಎಂದು ಪೋಲಿಸರು ರಾಮಾಯಣದ ರಾಮ ಲಕ್ಷ್ಮಣರಷ್ಟೇ ತಿಳಿದಿದ್ದ ನನ್ನ ಹೆಂಡತಿಗೆ ತಿಳಿಸಿದರು. ಅವಳಿಗೆ ಅರ್ಥವಾಗದೇ ಹೋಗಿದ್ದು, ಅವರಿಬ್ಬರ ಹೆಸರು ಹೇಳಿದರೆ ತಾನೇಕೆ ಸುಮ್ಮನಾಗಬೇಕೆಂದು ಅವರು ಬಯಸಿದರು ಎಂದು.
ಆತ್ಮರತಿಯ ಸ್ವಕುಚ ಮರ್ಧನದವರದು ಇದಿನ್ನೊಂದು ಲಕ್ಷಣ. ನನಗೆ ಆ ಮಿನಿಸ್ಟರ್ ಗೊತ್ತು, ಈ ಹೀರೋ ಮೊದಲು ನಮ್ಮನೇಲೇ ಬಾಡಿಗೆಗೆ ಇದ್ದ, ಆ ಹೀರೋಯಿನ್ ನನ್ನ ಫ್ರೆಂಡ್ಗೆ ಫ್ರೆಂಡು, ಆ ಸಾಧಕ ನಮ್ಮ ಸಂಬಂಧಿಗಳೇ ಆಗಬೇಕು; ಎಂದೆಲ್ಲಾ ಪ್ರಖ್ಯಾತ ವ್ಯಕ್ತಿಗಳ ಅಥವಾ ಸಂಘಸಂಸ್ಥೆಗಳ ಜೊತೆಗೆ ತಮ್ಮ ಗುರುತುಗಳನ್ನು ಅಗತ್ಯವಿಲ್ಲದಿದ್ದರೂ ಪ್ರದರ್ಶಿಸುತ್ತಿರುವುದು.
ಆತ್ಮಪೋಷಣೆ
ಗೌರಿಹಬ್ಬದ ದಿನದಂದು ಸಂಗೀತ ನಿರ್ದೆಶಕ ಹಂಸಲೇಖ ಮತ್ತವರ ಮನೆಯವರು ನಮ್ಮ ಮನೆಗೆ ಬಂದಿದ್ದರು. ನಾನೆಲ್ಲೋ ಒಳಗಿದ್ದೆ. ನಮ್ಮ ತಾಯಿಯ ಜೊತೆ ಫೋನಿನಲ್ಲಷ್ಟೇ ಮಾತಾಡಿದ್ದ ಹಂಸಲೇಖರವರಿಗೆ ಅಮ್ಮನ ಮುಖ ಪರಿಚಯವಿಲ್ಲ. ವರಾಂಡದಲ್ಲಿ ನಿಂತಿದ್ದ ಅತ್ತೆಯವರ ಬಳಿಗೆ ಬಂದು “ಅಮ್ಮಾ ನಮಸ್ಕಾರ” ಎಂದರು. ಅವರನ್ನು ನಮ್ಮ ತಾಯಿ ಎಂದು ತಿಳಿದಿದ್ದರು. ಹಲ್ಲಿಗೆ ಕಡ್ಡಿ ಚುಚ್ಚಿಕೊಳ್ಳುತ್ತಿದ್ದ ಅವರು “ಆ” ಎಂದರು, ಅಂದರೆ ‘ಸರಿ’ ಅಂತ ಅರ್ಥ. “ನಾನು ಹಂಸಲೇಖ” ಎಂದರು. ಆ ಧ್ವನಿಯಲ್ಲಿ ನಿಮಗೆ ಗೊತ್ತೇ ಇರಬೇಕಾದ ಪರಿಚಯ ಎಂಬ ಧೋರಣೆ. ಆದರೆ ಅವರು ಅಂದಿದ್ದು, “ಅದಕ್ಕೆ?” ಅಂತ. ಹಂಸಲೇಖರಿಗೆ ಒಂದು ಕ್ಷಣ ಕಕ್ಕಾಬಿಕ್ಕಿ. “ನಾನು ಹಂಸಲೇಖ” ಎಂಬ ಭಾವಕ್ಕೆ ತಟ್ಟಂತ ತಡೆ.
ಒಳಗಿಂದ ಬಂದ ನನ್ನ ತಾಯಿ, “ಓ ಹಂಸಲೇಖ ಬನ್ನಿ ಬನ್ನಿ” ಎಂದು ಕರೆದುಕೊಂಡು ಹೋದರು. ಅಲ್ಲಿಗೆ ಅವರ ಮುಜುಗರವನ್ನು ತಿಳಿಗೊಳಿಸಿಕೊಳ್ಳಲು ಸಾಧ್ಯವಾಯಿತು. ನಮ್ಮತ್ತೆಗೆ ಹಂಸಲೇಖ ಎಂದರೆ ಯಾರೆಂದೇ ಗೊತ್ತಿರಲಿಲ್ಲ. ಅವರಿಗೆ ಕನ್ನಡ ಚಿತ್ರರಂಗದಲ್ಲಿ ಗೊತ್ತಿರುವ ಏಕೈಕ ವ್ಯಕ್ತಿ ಎಂದರೆ ಅವರು ರಾಜ್ ಕುಮಾರ್ ಮಾತ್ರ.
“ನಾನು ಹಂಸಲೇಖ ಎಂಬ ಗರ್ವವನ್ನು ಆ ತಾಯಿ ಮುರಿದರು” ಎಂದು ಹಂಸಲೇಖ ಆಗಾಗ್ಗೆ ನೆನಪು ಬಂದಾಗ ನನ್ನ ಅತ್ತೆಯನ್ನು ನೆನೆಸಿಕೊಳ್ಳುತ್ತಿದ್ದರು. ಆತ್ಮರತಿಯ ಅಭಿವ್ಯಕ್ತಿಯನ್ನು ಪೋಷಿಸಿದಾಗ ಅದು ಉಬ್ಬುವುದು. ಪೋಷಣೆ ಸಿಗದಿದ್ದಾಗ ಅದು ಕುಗ್ಗುವುದು. ಕೆಲವು ಸಲ ಖಿನ್ನತೆಗೇ ಜಾರುವುದು.
ಜನಪ್ರಿಯ ಕಲಾವಿದರೂ ಅದೆಷ್ಟು ಎತ್ತರಕ್ಕೆ ಬೆಳೆದಿದ್ದರೂ, “ನನ್ನ ಪ್ರತಿಭೆ ಮತ್ತು ಸೇವೆಯನ್ನು ಗುರುತಿಸಿ ಸರ್ಕಾರ ಪ್ರಶಸ್ತಿಯನ್ನು ಕೊಟ್ಟಿಲ್ಲ” ಎಂದು ಸಂದರ್ಶನಗಳಲ್ಲಿ ಅವಲತ್ತುಕೊಳ್ಳುತ್ತಿದ್ದಾಗ ನಾರ್ಸಿಸಸ್ನ ಪ್ರಲಾಪದಂತೆ ಕಂಡರೆ ತಪ್ಪೇನೂ ಅಲ್ಲ. ನಾರ್ಸಿಸಸ್ ಅಲ್ಲದಿದ್ದರೂ ನಾರ್ಸಿಸಸ್ ಸಂಬಂಧಿಕರೇ ಆಗಿರುತ್ತಾರೆ.
ಬಹುಪರಾಕ್
ಕೆಲವೊಂದು ಫ್ಲೆಕ್ಸ್ಗಳಲ್ಲಿ ಯಾವುದ್ಯಾವುದೋ ಕನ್ನಡ ಹೋರಾಟಗಾರರೆಂದು ಗುರುತಿಸಿಕೊಂಡವರ ಚಿತ್ರಗಳ ಕೆಳಗೆ ಸಮಸ್ತ ಕನ್ನಡಿಗರ ಹೃದಯ ಸಿಂಹಾಸನಾಧೀಶ ಎಂದೇನಾದರೂ ಹಾಕಿದ್ದರೆ ತಕ್ಷಣವೇ ನಾನು ನನ್ನ ಪಕ್ಕದವರಿಗೆ ಹೇಳುತ್ತೇನೆ. ಅದು ನನ್ನ ಹೃದಯದ ಹೊರತು ಎಂದು. ತಮ್ಮ ಹೆಸರಿನ ಹಿಂದೆ ಬಿರುದುಬಾವಲಿಗಳನ್ನು ಹಚ್ಚಿಕೊಳ್ಳುವುದು, ಸ್ವಾಮೀಜಿಗಳು ತಮ್ಮ ಆಟೋಗ್ರಾಫ್ ಹಾಕುವಾಗಲೂ ಜಗದ್ಗುರು ಶ್ರೀ ಶ್ರೀ ಶ್ರೀ ಎಂದು ಬರೆದುಕೊಂಡು ತಮ್ಮ ಹೆಸರನ್ನು ಬರೆಯುವುದು ಆತ್ಮರತಿಯ ಮತ್ತೊಂದು ಮಗ್ಗುಲೇ.
ಕೆಲವೊಂದು ಸ್ವಾಮಿಗಳ ಆತ್ಮರತಿಯ ಲಕ್ಷಣಗಳು ಅಳತೆ ಮೀರಿದ್ದಾಗಿರುತ್ತದೆ. ನಮಸ್ಕಾರಕ್ಕೆ ಪ್ರತಿನಮಸ್ಕಾರ ಹೇಳದಿರುವಷ್ಟು. ಅವರನ್ನು ನೋಡಲು ಯಾರಾದರೂ ಬಂದರೆಂದರೆ ಮುಗಿಸಿಕೊಳ್ಳಲು ಪಾದಗಳನ್ನು ಮುಂದೆ ಸರಿಸುವಷ್ಟು. ತಮ್ಮ ಕಿರೀಟಧಾರಿ ಫೋಟೋ, ತಮ್ಮ ತಲೆಯ ಹಿಂದೆ ಫೋಟೋಶಾಪಿನಲ್ಲಿ ಪ್ರಭಾವಳಿಯನ್ನು ಬಿಡಿಸಿಕೊಂಡು ನಗುನಗುತ್ತಾ ಅಭಯ ಹಸ್ತವನ್ನು ತೋರುವ ದೈವೀಪಟವನ್ನು ಮಾಡಿಸಿಕೊಳ್ಳುವಷ್ಟು.ಆತ್ಮರತಿಯರಿಮೆಯವರೋ ಬಹುಬಹು ಪರಾಕು ಪ್ರಿಯರು.
ಈ ಆತ್ಮರತಿಯರಿಮೆಯ ಮತ್ತೊಂದು ಲಕ್ಷಣವೆಂದರೆ ಇತರರದನ್ನು ಪ್ರಶಂಸಿಸಲು ಅಷ್ಟು ಮನಸೊಪ್ಪದಿರುವುದು. ತಾವು ಯಾವುದೋ ಒಂದು ಆ ಕೆಲಸವನ್ನು ಎಂದಿಗೂ ಮಾಡದಿದ್ದರೂ “ಅದೇನು ಮಹಾ. ನಾನೂ ಮಾಡುತ್ತೇನೆ” ಎನ್ನುವುದು. ಸಾಲದಕ್ಕೆ ಅಸೂಯಾಪರವಾಗಿವುದು. ಆತ್ಮರತಿಯೆಂಬ ಅರಿಮೆಗೆ ಅನೇಕಾನೇಕ ಗೀಳುಗಳು ಮತ್ತು ವ್ಯಸನಗಳು ಆಪ್ತ ಸ್ನೇಹಿತರು.
ಫೇಸ್ಬುಕ್ಕಿನಲ್ಲಿ ತಮಗೇ ಆಸಕ್ತಿ ಇರುವ ವಿಷಯವನ್ನೋ ಅಥವಾ ಸಂಗತಿಯನ್ನೋ ಇನ್ನಾರಾದರೂ ತಮಗಿಂತ ಮುಂಚೆಯೇ ಪ್ರಕಟಿಸಿಬಿಟ್ಟರೆ, ಅಥವಾ ತಾವು ಪ್ರಕಟಿಸಿದ್ದರೆ ಚೆನ್ನಾಗಿರುತ್ತಿತ್ತು ಎಂಬಂತಹ ಬರಹವನ್ನೋ ಅಥವಾ ವಿಷಯವನ್ನೋ ಗೋಡೆಗೆ ಅಂಟಿ ಹಾಕಿಕೊಂಡಿದ್ದರೆ, ಅದನ್ನು ನೋಡಿದರೂ ಹಾಗೆಯೇ ಮುಂದೆ ಹೋಗುತ್ತಾರೆ. ಅದು ತಮಗೂ ಇಷ್ಟವಾದ ಅಥವಾ ಆಸಕ್ತಿಯ ವಿಷಯವಾಗಿದ್ದರೂ ಲೈಕಿಸುವುದಿಲ್ಲ ಅಥವಾ ಕಮೆಂಟಿಸುವುದಿಲ್ಲ. ಅಸೂಯಾಗ್ನಿಯು ಅವರಿಗೆ ಏನನ್ನೂ ಮಾಡದಂತೆ ತಡೆಯುತ್ತದೆ. ಇನ್ನು ‘ನಾನೂ ಇದೇ ವಿಚಾರ ಮಾಡಿದ್ದೆ. ಆದರೆ ನೀವು ಮಾಡಿದ್ದೀರಿ. ಅಭಿನಂದನೆಗಳು’ ಎಂದು ತಿಳಿಸುವುದು ಬಹಳ ದುಬಾರಿಯ ವ್ಯಾಪಾರ ಅವರಿಗೆ.
ಓ, ಆತ್ಮರತಿಯ ಆಯಾಮಗಳು ಅಗಣಿತ. ಆದರೂ ಒಂದಷ್ಟು ಗುಣಿಸಿದ್ದೇನೆ ಮತ್ತು ಪರಿಗಣಿಸಿದ್ದೇನೆ ಮನೋವೈಜ್ಞಾನಿಕ ತಳಹದಿಯಿಂದ. ಮುಂದೆ ನೋಡೋಣ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243




