Connect with us

ಅಂತರಂಗ

ಅರಿಮೆಯ ಅರಿವಿರಲಿ-9 : ಆತ್ಮರತಿ

Published

on

  • ಯೋಗೇಶ್ ಮಾಸ್ಟರ್

ವನು ಲ್ಯಾಕೋನಿಯಾದ ಬೇಟೆಗಾರ. ಅವನಿದ್ದದ್ದು ಪುರಾತನ ಗ್ರೀಸಿನಲ್ಲಿರುವ ಥಿಸ್ಪಿಯೇ ಪ್ರಾಂತ್ಯ. ಅವನೋ ಕಟ್ಟುಮಸ್ತಾದ ಮೈಕಟ್ಟಿನವ, ಸುಂದರ ಮುಖದವ. ಅವನೂ ಸುಂದರ. ಅವನಿಗೂ ಸುಂದರವಾದ ವಿಷಯಗಳಲ್ಲಿ ಪರಮಾಸಕ್ತಿ. ಅವಳೊಬ್ಬಳು ಶಾಪಕ್ಕೊಳಗಾದ ಕನ್ಯೆ. ಅವನನ್ನು ಅನುಸರಿಸುತ್ತಿರುತ್ತಾಳೆ. ಅವಳ ಶಾಪವೋ ಅವಳಿಗೆ ತನ್ನ ಮಾತನ್ನು ತಾನು ಹೇಳಲಾಗದು. ಇತರರ ಮಾತನ್ನು ಪ್ರತಿಧ್ವನಿಸಬೇಕು. ಹಾಗಾಗಿ ಅವಳಿಗೆ ಗ್ರೀಕ್ ಬೇಟೆಗಾರನಿಗೆ ತನ್ನ ಪ್ರೀತಿಯ ಮಾತುಗಳನ್ನು ಹೇಳಲಾಗದು, ತನ್ನ ಪ್ರಶಂಸೆಯನ್ನೂ ತಿಳಿಸಲಾಗದು. ಅವನೋ ಇವಳ ಕಡೆ ಕಣ್ಣೆತ್ತಿಯೂ ನೋಡದೇ ಓಡಾಡುತ್ತಿರುತ್ತಾನೆ.

ಒಮ್ಮೆ ತಿಳಿಯಾದ ನೀರಿನಲ್ಲಿ ತನ್ನ ಬಿಂಬವನ್ನು ನೋಡಿಕೊಳ್ಳುತ್ತಾನೆ. ತನ್ನದೇ ಸೌಂದರ್ಯವನ್ನು ತಾನೇ ನೋಡಿಕೊಂಡು ಪರವಶನಾಗುತ್ತಾನೆ. ಆ ನೀಳ ಮೂಗು, ಹೊಳಪಿನ ಕಣ್ಣುಗಳು, ಗುಲಾಬಿ ದಳದಂತಹ ತುಟಿಗಳು, ನಕ್ಕರೆ ಅರಳಿದ ಹೂವಿನಂತಹ ಮುಖ; ಆಹಾ! ಅದನ್ನು ಮುದ್ದಿಸುವಷ್ಟು ಆಕರ್ಷಕ, ಮೋಹಕ. ಒಂದೇ ಕಣ್ಣೋಟಕೆ ಪ್ರೇಮಿಸಲಾಗುವಂತೆ, ಒಮ್ಮಿಂದೊಮ್ಮೆಲೇ ಮರುಳಾಗಿ ಅಪ್ಪಿ ಇನ್ನಿಲ್ಲವಾಗುವಂತಹ ಸೆಳೆತ. ಅವನು ತನ್ನ ಬಿಂಬಕ್ಕೆ ತಾನೇ ಮೋಹಿತನಾಗಿ ಮುದಪಡೆಯಲು, ಸರಸದಿಂದ ಮುಟ್ಟುತ್ತಾನೆ. ನೀರು ಕಲಕುತ್ತಿದ್ದಂತೆ ಬಿಂಬ ಚದರುತ್ತದೆ. ಇಲ್ಲವಾಗುತ್ತದೆ. ಅಯ್ಯೋ, ತನ್ನ ಮೋಹಕ, ಪ್ರೇಮಪೂರ್ಣ ತನ್ನನ್ನು ಪಡೆಯಲು ನೀರಿಗೆ ಧುಮುಕುತ್ತಾನೆ. ಆದರೆ ಸಿಗುವುದಿಲ್ಲ. ದಡದಲ್ಲೊಂದು ಅವನ ಪ್ರೇಮಕ್ಕೆ ಸಾಕ್ಷಿಯಾಗಿ ಹೂಗಿಡವೊಂದು ಮೂಡುತ್ತದೆ. ಆ ಹೂವಿಗೂ ಅವನದೇ ಹೆಸರು. ನಾರ್ಸಿಸಸ್.

ಆತ್ಮರತಿಯಲೆಗಳು

ನಾರ್ಸಿಸಸ್ ತನ್ನ ತಾನು ಮೋಹಿಸಿಕೊಳ್ಳುವ, ತನಗೆ ತಾನು ಪರವಶವಾಗುವ, ತನ್ನನ್ನು ತಾನೇ ಪ್ರೀತಿಸಿಕೊಳ್ಳುವ ಆತ್ಮರತಿಗೆ ಪ್ರತಿಮೆಯಾಗಿ ನಿಲ್ಲುತ್ತಾನೆ. ಈ ಅರಿಮೆಯೇ ಆತ್ಮರತಿ. ಅವರಿವರ ಅತಿಕ್ರಮಣ ಪ್ರವೇಶವಿರದಿದ್ದಾಗ ಏಕಾಂತದಲ್ಲಿ ಕನ್ನಡಿಯ ಮುಂದೆ ಕುಳಿತುಕೊಂಡು ತನ್ನನ್ನೇ ತಾನೇ ನೋಡಿಕೊಂಡು, ಕಾಣುವ ಎಲ್ಲಾ ವಿವರಗಳನ್ನು ಗಮನಿಸುತ್ತಾ, ಪ್ರಶಂಸಿಸುತ್ತಾ, ನಸುನಗುತ್ತಾ, ಮೋಹಗೊಳ್ಳುತ್ತಾ ಪರವಶವಾಗುವ ಅನುಭವವಿರುವವರಿಗೆ ನಾರ್ಸಿಸಸ್ ನೀರಿನಲ್ಲಿ ತನ್ನ ಬಿಂಬವನ್ನು ಹೇಗೆ ನೋಡಿಕೊಂಡಿದ್ದಿರಬಹುದು ಎಂದು ಅರಿವಾಗುತ್ತದೆ.

ಫೇಸ್ಬುಕ್ ಅಥವಾ ಇನ್ಟಾಗ್ರಾಂನಲ್ಲೋ ಕಣ್ಣಾಡಿಸಿದರೆ ಆತ್ಮರತಿಯ ಅಸಂಖ್ಯಾತ ಉದಾಹರಣೆಗಳು ಸಿಗುತ್ತವೆ. ಮುಖಪುಟವಂತೂ ಆತ್ಮರತಿಯ ಮಹಾಸಾಗರ. ನಾರ್ಸಿಸಿಸಂ ಅಥವಾ ಆತ್ಮರತಿಯ ಅರಿಮೆಯ ಅಲೆಗಳು ಎದ್ದೆದ್ದು ಬರುತ್ತಲೇ ಇರುತ್ತವೆ. ಅಷ್ಟು ಸಾಮಾನ್ಯ. ನಮಗೆ ಹೆಜ್ಜೆಹೆಜ್ಜೆಗೂ ಕಣ್ಣಿಗಪ್ಪಳಿಸುತ್ತಿರುತ್ತವೆ.

ಅದ್ಯಾವುದೋ ಊರ ಹಬ್ಬಕ್ಕೆ ಶುಭಾಶಯ ಕೋರುವ ರಾಜಕಾರಣಿಯ ಅಥವಾ ಮುಂದೆ ನಿಲ್ಲಬಹುದಾದ ಚುನಾವಣಾ ಅಭ್ಯರ್ಥಿಯ ಫ್ಲೆಕ್ಸ್ ನೋಡಿ. ಹೆಸರಿನ ಹಿಂದೆ ಒಂದಿಷ್ಟು ಬಿರುದು ಬಾವಲಿಗಳು, ಗ್ರಾಫಿಕ್ಸ್‍ನಲ್ಲಿ ಹುಲಿ ಸಿಂಹಗಳೂ ಅತ್ತಿತ್ತ ಇದ್ದರೆ ಆಶ್ಚರ್ಯವಿಲ್ಲ. ಈತನೆಂದು ಗುರುತಿಸಲು ಬರಿಯ ಮುಖ ಸಾಕಾದರೂ, ಅವರಿಗೆ ಆತ ತೊಟ್ಟಿರುವ ಬೂಟಿನವರೆಗೂ, ಜೊತೆಗೆ ನಡೆಯ ಭಂಗಿಯನ್ನೂ ತೋರುವ ತವಕ. ಅದನ್ನು ನೋಡಿ, ಆಹಾ, ಆ ಸುಂದರವಾದ ಹೊಳಪುಳ್ಳ ಉಂಗುರವನ್ನು ನೋಡು, ಆಹಾ, ಆ ಚೆಂದದ ಶರ್ಟಿನ ಬಣ್ಣವನ್ನು ನೋಡು.

ಇಂಥವೆಲ್ಲಾ ತೊಟ್ಟಿರುವ, ಹೀಗೆಲ್ಲಾ ಕಾಣುವ ಇವನೇ ನಮ್ಮ ನಾಯಕನಾಗಬೇಕು ಎಂದು ಅವನ ಸೌಂದರ್ಯೋಪಾಸನೆಯಿಂದ ರಸ್ತೆಯಲ್ಲಿ ಓಡಾಡುತ್ತಿರುವವರಾರಾದರೂ ಪರವಶವಾಗುತ್ತಾರೆಂದುಕೊಂಡಿದ್ದೀರಾ?
ಫೇಸ್ಬುಕ್ಕಿನಲ್ಲಿ ಕೆಲವರು ಎಡಕ್ಕೆ ತಿರುಗಿ ಒಂದು ಪಟ, ಬಲಕ್ಕೆ ತಿರುಗೊಂದು ಪಟ, ಹೀಂಗೊಂದು ಪಟ, ಹಾಗೊಂದು ಪಟ. ಮೇಲಿಂದೊಂದು, ಕೆಳಗಿಂದೊಂದು; ನಾನಾ ಭಾವಗಳಲ್ಲಿ, ಭಂಗಿಗಳಲ್ಲಿ ವಿಜೃಂಭಿಸುತ್ತಿರುತ್ತವೆ. ಕೆಲವು ಸಲ ಬರಿಯ ನೋಡುಗರಿಗೆ ಪಟ ಹಾಕಿದವರಿಗೆ ಕಂಡ ವ್ಯತ್ಯಾಸಗಳಾವುವೂ ಕಾಣುವುದೂ ಇಲ್ಲ. ಎಲ್ಲವೂ ಒಂದೇ ಎಂಬಂತೆ ಕಾಣುತ್ತಿರುತ್ತದೆ.

ಇನ್ನೂ ಮುಂದುವರಿದು ತಾವು ತೊಟ್ಟಿರುವ ಪ್ರತಿ ಬಟ್ಟೆಯ ಪಟಗಳನ್ನು ಫೇಸ್ಬುಕ್ಕಿನಲ್ಲಿ ಪೇರಿಸುವುದು ಸಾಲದೆಂದು ಅವರ ಸ್ನೇಹಿತರೆಲ್ಲಿ ನೋಡುವುದರಿಂದ ವಂಚಿತರಾಗಿಬಿಡುತ್ತಾರೋ ಎಂದು ಪ್ರಶಂಸಿಸಬಹುದಾದ ಸ್ನೇಹಿತರಿಗೆಲ್ಲಾ ತಗುಲಿ ಹಾಕಿರುತ್ತಾರೆ. ಲೈಕಿಸಲಿ, ಪ್ರೀತಿಸಲಿ, ವಾವ್ ಎಂದು ಕಣ್ಣು ಬಾಯಿ ಬಿಡಲೆಂಬ ಹೆಬ್ಬಯಕೆ. ಒಂದು ನಾರ್ಸಿಸಸ್ ಮತ್ತೊಂದು ನಾರ್ಸಿಸಸ್ಸನ್ನು ನೋಡುವುದಿಲ್ಲ.

ಆಗ ಈ ನಾರ್ಸಿಸಸ್ ಬಡಪೆಟ್ಟಿಗೆ ಬಗ್ಗದೆ ಆ ನಾರ್ಸಿಸಸ್ ಒಳಪೆಟ್ಟಿಗೆಗೆ ಸಂದೇಶ ಕಳುಹಿಸಿ ಮೆಚ್ಚಿಸಿಕೊಳ್ಳುವವರೆಗೂ ಬಿಡುವುದಿಲ್ಲ.
ಆಹಾ, ಈ ಮುಖ ಎಡಗಡೆಯಿಂದ ಎಷ್ಟು ಸುಂದರ, ಹಾ, ಹಾಗೆಯೇ ಬಲದಿಂದಲೂ ಸುಂದರ ಎಂದು ನಾನಾ ಬಗೆಗಳಿಂದಲೂ ನೋಡುತ್ತಾ ಆನಂದದಿಂದ ರಸಾನುಭೂತಿಯಲ್ಲಿ ಮಿಂದೆದ್ದು ನೋಡುಗಳು ಸುರಸವಾದ ಸಾರ್ಥಕ ಪಡೆಯುತ್ತಾರೆಂದುಕೊಂಡಿದ್ದೀರಾ?
ಬಹಳಷ್ಟು ಸೆಲ್ಫೀ ಅಥವಾ ಸ್ವಂತೀ ಪಟಗಳು ಆತ್ಮರತಿಯ ಬಿಂಬಗಳು.

ಸಾಮಾನ್ಯ ಸಮಸ್ಯೆ

ಆತ್ಮರತಿ ಎಂದರೆ ಆತ್ಮವಿಶ್ವಾಸ ಅಥವಾ ಸ್ವಕೇಂದ್ರಿತ ವ್ಯಕ್ತಿತ್ವವೇನಲ್ಲ. ಅದೊಂದು ಮಾನಸಿಕ ಸಮಸ್ಯೆ. ಕಾರಣ ಮತ್ತು ಪರಿಣಾಮಗಳಿರುವಂತಹ ಬಹಳ ಗುರುತರವಾದಂತಹ ಹಾಗೂ ಗಂಭೀರವಾದ ಸಮಸ್ಯೆಯೇ. ಈ ಆತ್ಮರತಿಯ ಅರಿಮೆಗೆ narcissistic personality disorder (NPD)
ಎಂದು ಕರೆಯುತ್ತಾರೆ. ಆಗಲೇ ಹೇಳಿದಂತೆ ಇದು ನಮ್ಮಲ್ಲಿ ಬಹು ವ್ಯಾಪಕವಾದ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ಮಾನಸಿಕ ಸಮಸ್ಯೆಗಳು ಸಮಸ್ಯೆಗಳನ್ನಾಗಿ ಗುರುತಿಸಿಕೊಳ್ಳುವುದಿಲ್ಲ. ಹಾಗೆ ಗುರುತಿಸಿಕೊಂಡರೆ ಅವು ಕೊಂಚವಾದರೂ ನಿಯಂತ್ರಣಕ್ಕೆ ಬರುತ್ತವೆ. ನನ್ನಲ್ಲಿ ಆತ್ಮರತಿಯ ಅರಿಮೆ ಇದೆ ಎಂದು ಗುರುತಿಸಿಕೊಂಡರೆ ಪ್ರದರ್ಶನಗಳು ಕೊಂಚ ಕಡಿಮೆಯಾಗಬಹುದು. ಅಥವಾ ಪ್ರದರ್ಶನಗಳಿಗೊಂದು ನಿಯಂತ್ರಣ ಬರಬಹುದು.

ಒಟ್ಟಾರೆ ಆತ್ಮರತಿಯ ಅರಿಮೆಯನ್ನು ಇತರರಲ್ಲಿ ಗುರುತಿಸಲು ಮತ್ತು ತನ್ನಲ್ಲಿ ಗುರುತಿಸಿಕೊಳ್ಳಲು ಫೇಸ್ಬುಕ್ ಮತ್ತು ಫ್ಲೆಕ್ಸುಗಳು ಒಳ್ಳೆಯ ಸಾಧನವಾಗಿವೆ. ಆದರೆ ಈ ಆತ್ಮರತಿಯ ಸಮಸ್ಯೆ ಬರೀ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದರೆ ನಸುನಕ್ಕು ಸುಮ್ಮನಾಗಿಬಿಡಬಹುದಿತ್ತು. ಆದರೆ ಅದು ಗಂಭೀರವಾದ ಒಳಸುಳಿಗಳನ್ನು ಹೊಂದಿವೆ. ಮುಂದೆ ಹೇಳಲಾಗುವ ಎಲ್ಲಾ ಲಕ್ಷಣಗಳೂ ಇರಲೇ ಬೇಕೆಂದೇನಿಲ್ಲ. ಆದರೆ ಇವು ಸಾಮಾನ್ಯ ಲಕ್ಷಣಗಳು. ಇವುಗಳಲ್ಲಿ ಕೆಲವು ಇರಬಹುದು. ಇಲ್ಲದೇ ಇರಬಹುದು. ಕೆಲವರಿಗೆ ಇವುಗಳ ಜೊತೆಗೆ ಇನ್ನೂ ಹಲವಿರಬಹುದು.
ತನಗೆ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುವ ಹಪಹಪಿಸುವ ಬಯಕೆ.

ತನ್ನ ಕಡೆಗೆ ಗಮನ ಸೆಳೆಯುವ ಮತ್ತು ಪ್ರಶಂಸೆ ಪಡೆಯುವ ಅದುಮಿಡಲಾಗದ ಆಳದೊಳಗಿಂದೇಳುತ್ತಲೇ ಇರುವ ಆಸೆ. ಬೇರೆಯವರ ಬಗ್ಗೆ ಸಹಾನುಭೂತಿ(empathy)ಇಲ್ಲದಿರುವುದು. ಸಂಬಂಧಗಳಲ್ಲಿ ಸಮಸ್ಯೆಗಳು, ಸ್ವಾರ್ಥ, ಇತರರ ಭಾವನೆಗಳನ್ನು ಪರಿಗಣಿಸದಿರುವುದು.
ಒಟ್ಟಾರೆ ಈ ಆತ್ಮರತಿ ಅರಿಮೆಯು ಕಪ್ಪು ಬಿಳಿಪಿನಷ್ಟು ಸ್ಪಷ್ಟವಾಗಿ ವಿಭಜಿಸಿ ಸ್ಪಷ್ಟೀಕರಿಸಲಾಗದ್ದು. ಬೆಳಕಿನ ವಕ್ರೀಭವನದಿಂದ ಅನೇಕ ಬಣ್ಣಗಳು ಮೂಡುವಂತೆ ವಿವಿಧ ರಂಗುಗಳನ್ನು ಪಡೆದುಕೊಳ್ಳುವಂತಹ ಅರಿಮೆ.
ಇನ್ನೂ ಕೆಲವರಲ್ಲಿ ನೀವು ಗಮನಿಸಬಹುದು.

ತಮ್ಮ ಬಗ್ಗೆ ಅತ್ಯಂತ ಮಹೋನ್ನತದ ಎತ್ತರದ ಭವಿಷ್ಯತ್ತಿನ ಭ್ರಮೆಯಲ್ಲಿ ಬಡಬಡಿಸುತ್ತಿರುವರು. ಅವರ ವಿಶ್ವಾಸಕ್ಕೆ, ಯಶಸ್ಸಿಗೆ, ಅಧಿಕಾರಕ್ಕೆ, ಬುದ್ಧಿಮತ್ತೆಗೆ, ಸೌಂದರ್ಯಕ್ಕೆ, ಪ್ರೇಮಕ್ಕೆ ಸಾಟಿಯೇ ಇಲ್ಲವೆಂಬಂತೆ ಹೇಳಿಕೊಳ್ಳುತ್ತಿರುವರು.

ಬರಹಗಾರನೊಬ್ಬ ತಾನು ರಚಿಸಿದ ಕವನ, ಕತೆ ಅಥವಾ ಲೇಖನವನ್ನು ಸಹಜವಾಗಿ ಪ್ರಕಟಿಸುತ್ತಾನೆ. ಬರಿದೇ ಪ್ರಸ್ತುತ ಪಡಿಸುವುದು ಅಥವಾ ಹಂಚಿಕೊಳ್ಳುವುದೇಕೆಂದರೆ ಅದು ಓರ್ವ ವ್ಯಕ್ತಿಯ ಅಥವಾ ಸಮಾಜದ ಅಭಿಪ್ರಾಯವನ್ನು ಅಥವಾ ಒಲವು ನಿಲುವುಗಳನ್ನು ಅಭಿವ್ಯಕ್ತಿಗೊಳಿಸುತ್ತಿರುತ್ತವೆ. ಹಾಗಾಗಿ ಅದನ್ನು ಅವನು ಹಂಚಿಕೊಳ್ಳುವುದು ಸಹಜ. ಈ ಹಂಚಿಕೊಳ್ಳುವಿಕೆಯಲ್ಲಿ ಪ್ರಶಂಸೆಯ ಹಸಿವಿರಲಾರದು. ಆದರೆ, ತಾವೊಂದು ಸುಂದರವಾದ ಮತ್ತು ಅಪರೂಪವಾದ ಅಥವಾ ವಿಶಿಷ್ಟವಾದ ಕತೆಯೊಂದನ್ನು ಅಥವಾ ಕವನವೊಂದನ್ನು ಬರೆದಿದ್ದೇನೆ ಎಂದು ನಿಮ್ಮ ವಾಟ್ಸಪ್ಪಿಗೋ ಅಥವಾ ಇನ್‍ಬಾಕ್ಸಿಗೋ ಯಾರಾದರೂ ಕಳುಹಿಸಿದ್ದಾರೆಂದರೆ, ಅವರು ಬರಿದೇ ಹಂಚಿಕೊಳ್ಳಲು ಕಳುಹಿಸಿಲ್ಲ. ನಿಮಗೂ ವಿಷಯ ತಿಳಿದಿರಲಿ ಎಂಬ ಸಾಧಾರಣ ಧೋರಣೆಯಲ್ಲ.

ಪ್ರಶಂಸೆಗಳನ್ನು ಉಣಬಡಿಸಿ ನನ್ನ ಆತ್ಮರತಿಯ ಹಸಿವನ್ನು ತಣಿಸಿ ಎಂದು. ಪ್ರಶಂಸೆಗಳಿಗಾಗಿ ಪರಿತಪಿಸುವುದು, ಪ್ರಶಸ್ತಿಗಳಿಗಾಗಿ ಹಂಬಲಿಸಿ ಹೆಣಗಾಡಿ ಎಂತಾದರೂ ಪಡೆಯುವುದು, ಕಮಿಷನ್ ಕೊಟ್ಟಾದರೂ ಡಾಕ್ಟರೇಟ್ ಪಡೆದು ಡಾ. ಹಾಕಿಕೊಂಡು ಆನಂದಿಸುವುದು; “ಅದು ಸಾಮಾನ್ಯ” ಕೆಟಗರಿಗೆ ತಳ್ಳಬೇಡಿ. ಆತ್ಮರತಿಯ ಹಸಿವೆಯಿಂದ ಬಳಲುತ್ತಿರುವ ಅರಿಮೆ ಎಂಬ ಅರಿವಿರಲಿ. ಅರಿಮೆಗಳಿರುವುದು ಸಾಮಾನ್ಯವಲ್ಲ. ಸಾಮಾನ್ಯವಾಗಿರುವ ಸಮಸ್ಯೆಗಳು.

ನನಗೆ ಅವರು ಗೊತ್ತು

ಒಂದೆರಡು ವರ್ಷಗಳ ಹಿಂದೆ, ನಮ್ಮ ಮನೆಯ ಹತ್ತಿರವೇ ಮರವೊಂದರ ಕೆಳಗೆ ಧೂಮಪಾನ ಮತ್ತು ಮದ್ಯಪಾನದಲ್ಲಿ ನಿರತರಾಗಿದ್ದ ಯುವಕರ ತಂಡವೊಂದು ಮನೆಯೊಳಗಿದ್ದವರಿಗೆ ಕಿರಿಕಿರಿ ಮಾಡುವಷ್ಟು ಉತ್ಸಾಹದಲ್ಲಿ ಊಳಿಡುತ್ತಿದ್ದರು. ನಿದ್ರೆ ಮಾಡುತ್ತಿದ್ದ ನನಗೆ ಭಂಗವಾಗಬಾರದೆಂದು ನನ್ನ ಹೆಂಡತಿ ಅವರ ಬಳಿಗೆ ಹೋಗಿ, “ನೀವು ಹೀಗೆಲ್ಲಾ ಇಲ್ಲಿ ಗಲಾಟೆ ಮಾಡಬಾರದು. ಎದ್ದು ಬಾರ್ ಅಥವಾ ಪಬ್ ಗೆ ಹೋಗಿ” ಎಂದು ಹೇಳಿದಳು. ಅವರಲ್ಲೊಬ್ಬ ಹೇಳಿದನಂತೆ, “ರೀ ಮೇಡಂ, ನಾವ್ಯಾರು ಗೊತ್ತಾ? ರಾಮ ಲಕ್ಷ್ಮಣರ ಹುಡುಗರು” ಎಂದು. “ಯಾವ ರಾಮ ಲಕ್ಷ್ಮಣ? ರಾಮ ಲಕ್ಷ್ಮಣರ ಹುಡುಗರಾದರೆ ಭಜನೆ ಮಾಡ್ಕೊಂಡು ಕೂತ್ಕೊಳ್ಳಿ. ಇಲ್ಯಾಕೆ ಬಂದು ಹೀಗೆ ಗಲಾಟೆ ಮಾಡ್ತೀರಿ” ಎಂದವಳೇ ಮನೆಗೆ ಬಂದು ಪೋಲಿಸರಿಗೆ ಫೋನ್ ಮಾಡಿ, ಅವರು ಬಂದು ರಾಮ ಲಕ್ಷ್ಮಣರ ಹುಡುಗರಿಗೆ ಬೈದು ಬೆತ್ತದ ರುಚಿಯನ್ನೋ ತೋರಿಸಿ ಕಳುಹಿಸಿದ್ದರು.

ರಾಮ ಲಕ್ಷ್ಮಣರಿಬ್ಬರೂ ರೌಡಿಗಳು ಎಂದು ಪೋಲಿಸರು ರಾಮಾಯಣದ ರಾಮ ಲಕ್ಷ್ಮಣರಷ್ಟೇ ತಿಳಿದಿದ್ದ ನನ್ನ ಹೆಂಡತಿಗೆ ತಿಳಿಸಿದರು. ಅವಳಿಗೆ ಅರ್ಥವಾಗದೇ ಹೋಗಿದ್ದು, ಅವರಿಬ್ಬರ ಹೆಸರು ಹೇಳಿದರೆ ತಾನೇಕೆ ಸುಮ್ಮನಾಗಬೇಕೆಂದು ಅವರು ಬಯಸಿದರು ಎಂದು.

ಆತ್ಮರತಿಯ ಸ್ವಕುಚ ಮರ್ಧನದವರದು ಇದಿನ್ನೊಂದು ಲಕ್ಷಣ. ನನಗೆ ಆ ಮಿನಿಸ್ಟರ್ ಗೊತ್ತು, ಈ ಹೀರೋ ಮೊದಲು ನಮ್ಮನೇಲೇ ಬಾಡಿಗೆಗೆ ಇದ್ದ, ಆ ಹೀರೋಯಿನ್ ನನ್ನ ಫ್ರೆಂಡ್‍ಗೆ ಫ್ರೆಂಡು, ಆ ಸಾಧಕ ನಮ್ಮ ಸಂಬಂಧಿಗಳೇ ಆಗಬೇಕು; ಎಂದೆಲ್ಲಾ ಪ್ರಖ್ಯಾತ ವ್ಯಕ್ತಿಗಳ ಅಥವಾ ಸಂಘಸಂಸ್ಥೆಗಳ ಜೊತೆಗೆ ತಮ್ಮ ಗುರುತುಗಳನ್ನು ಅಗತ್ಯವಿಲ್ಲದಿದ್ದರೂ ಪ್ರದರ್ಶಿಸುತ್ತಿರುವುದು.

ಆತ್ಮಪೋಷಣೆ

ಗೌರಿಹಬ್ಬದ ದಿನದಂದು ಸಂಗೀತ ನಿರ್ದೆಶಕ ಹಂಸಲೇಖ ಮತ್ತವರ ಮನೆಯವರು ನಮ್ಮ ಮನೆಗೆ ಬಂದಿದ್ದರು. ನಾನೆಲ್ಲೋ ಒಳಗಿದ್ದೆ. ನಮ್ಮ ತಾಯಿಯ ಜೊತೆ ಫೋನಿನಲ್ಲಷ್ಟೇ ಮಾತಾಡಿದ್ದ ಹಂಸಲೇಖರವರಿಗೆ ಅಮ್ಮನ ಮುಖ ಪರಿಚಯವಿಲ್ಲ. ವರಾಂಡದಲ್ಲಿ ನಿಂತಿದ್ದ ಅತ್ತೆಯವರ ಬಳಿಗೆ ಬಂದು “ಅಮ್ಮಾ ನಮಸ್ಕಾರ” ಎಂದರು. ಅವರನ್ನು ನಮ್ಮ ತಾಯಿ ಎಂದು ತಿಳಿದಿದ್ದರು. ಹಲ್ಲಿಗೆ ಕಡ್ಡಿ ಚುಚ್ಚಿಕೊಳ್ಳುತ್ತಿದ್ದ ಅವರು “ಆ” ಎಂದರು, ಅಂದರೆ ‘ಸರಿ’ ಅಂತ ಅರ್ಥ. “ನಾನು ಹಂಸಲೇಖ” ಎಂದರು. ಆ ಧ್ವನಿಯಲ್ಲಿ ನಿಮಗೆ ಗೊತ್ತೇ ಇರಬೇಕಾದ ಪರಿಚಯ ಎಂಬ ಧೋರಣೆ. ಆದರೆ ಅವರು ಅಂದಿದ್ದು, “ಅದಕ್ಕೆ?” ಅಂತ. ಹಂಸಲೇಖರಿಗೆ ಒಂದು ಕ್ಷಣ ಕಕ್ಕಾಬಿಕ್ಕಿ. “ನಾನು ಹಂಸಲೇಖ” ಎಂಬ ಭಾವಕ್ಕೆ ತಟ್ಟಂತ ತಡೆ.

ಒಳಗಿಂದ ಬಂದ ನನ್ನ ತಾಯಿ, “ಓ ಹಂಸಲೇಖ ಬನ್ನಿ ಬನ್ನಿ” ಎಂದು ಕರೆದುಕೊಂಡು ಹೋದರು. ಅಲ್ಲಿಗೆ ಅವರ ಮುಜುಗರವನ್ನು ತಿಳಿಗೊಳಿಸಿಕೊಳ್ಳಲು ಸಾಧ್ಯವಾಯಿತು. ನಮ್ಮತ್ತೆಗೆ ಹಂಸಲೇಖ ಎಂದರೆ ಯಾರೆಂದೇ ಗೊತ್ತಿರಲಿಲ್ಲ. ಅವರಿಗೆ ಕನ್ನಡ ಚಿತ್ರರಂಗದಲ್ಲಿ ಗೊತ್ತಿರುವ ಏಕೈಕ ವ್ಯಕ್ತಿ ಎಂದರೆ ಅವರು ರಾಜ್ ಕುಮಾರ್ ಮಾತ್ರ.

“ನಾನು ಹಂಸಲೇಖ ಎಂಬ ಗರ್ವವನ್ನು ಆ ತಾಯಿ ಮುರಿದರು” ಎಂದು ಹಂಸಲೇಖ ಆಗಾಗ್ಗೆ ನೆನಪು ಬಂದಾಗ ನನ್ನ ಅತ್ತೆಯನ್ನು ನೆನೆಸಿಕೊಳ್ಳುತ್ತಿದ್ದರು. ಆತ್ಮರತಿಯ ಅಭಿವ್ಯಕ್ತಿಯನ್ನು ಪೋಷಿಸಿದಾಗ ಅದು ಉಬ್ಬುವುದು. ಪೋಷಣೆ ಸಿಗದಿದ್ದಾಗ ಅದು ಕುಗ್ಗುವುದು. ಕೆಲವು ಸಲ ಖಿನ್ನತೆಗೇ ಜಾರುವುದು.

ಜನಪ್ರಿಯ ಕಲಾವಿದರೂ ಅದೆಷ್ಟು ಎತ್ತರಕ್ಕೆ ಬೆಳೆದಿದ್ದರೂ, “ನನ್ನ ಪ್ರತಿಭೆ ಮತ್ತು ಸೇವೆಯನ್ನು ಗುರುತಿಸಿ ಸರ್ಕಾರ ಪ್ರಶಸ್ತಿಯನ್ನು ಕೊಟ್ಟಿಲ್ಲ” ಎಂದು ಸಂದರ್ಶನಗಳಲ್ಲಿ ಅವಲತ್ತುಕೊಳ್ಳುತ್ತಿದ್ದಾಗ ನಾರ್ಸಿಸಸ್‍ನ ಪ್ರಲಾಪದಂತೆ ಕಂಡರೆ ತಪ್ಪೇನೂ ಅಲ್ಲ. ನಾರ್ಸಿಸಸ್ ಅಲ್ಲದಿದ್ದರೂ ನಾರ್ಸಿಸಸ್ ಸಂಬಂಧಿಕರೇ ಆಗಿರುತ್ತಾರೆ.

ಬಹುಪರಾಕ್

ಕೆಲವೊಂದು ಫ್ಲೆಕ್ಸ್‍ಗಳಲ್ಲಿ ಯಾವುದ್ಯಾವುದೋ ಕನ್ನಡ ಹೋರಾಟಗಾರರೆಂದು ಗುರುತಿಸಿಕೊಂಡವರ ಚಿತ್ರಗಳ ಕೆಳಗೆ ಸಮಸ್ತ ಕನ್ನಡಿಗರ ಹೃದಯ ಸಿಂಹಾಸನಾಧೀಶ ಎಂದೇನಾದರೂ ಹಾಕಿದ್ದರೆ ತಕ್ಷಣವೇ ನಾನು ನನ್ನ ಪಕ್ಕದವರಿಗೆ ಹೇಳುತ್ತೇನೆ. ಅದು ನನ್ನ ಹೃದಯದ ಹೊರತು ಎಂದು. ತಮ್ಮ ಹೆಸರಿನ ಹಿಂದೆ ಬಿರುದುಬಾವಲಿಗಳನ್ನು ಹಚ್ಚಿಕೊಳ್ಳುವುದು, ಸ್ವಾಮೀಜಿಗಳು ತಮ್ಮ ಆಟೋಗ್ರಾಫ್ ಹಾಕುವಾಗಲೂ ಜಗದ್ಗುರು ಶ್ರೀ ಶ್ರೀ ಶ್ರೀ ಎಂದು ಬರೆದುಕೊಂಡು ತಮ್ಮ ಹೆಸರನ್ನು ಬರೆಯುವುದು ಆತ್ಮರತಿಯ ಮತ್ತೊಂದು ಮಗ್ಗುಲೇ.

ಕೆಲವೊಂದು ಸ್ವಾಮಿಗಳ ಆತ್ಮರತಿಯ ಲಕ್ಷಣಗಳು ಅಳತೆ ಮೀರಿದ್ದಾಗಿರುತ್ತದೆ. ನಮಸ್ಕಾರಕ್ಕೆ ಪ್ರತಿನಮಸ್ಕಾರ ಹೇಳದಿರುವಷ್ಟು. ಅವರನ್ನು ನೋಡಲು ಯಾರಾದರೂ ಬಂದರೆಂದರೆ ಮುಗಿಸಿಕೊಳ್ಳಲು ಪಾದಗಳನ್ನು ಮುಂದೆ ಸರಿಸುವಷ್ಟು. ತಮ್ಮ ಕಿರೀಟಧಾರಿ ಫೋಟೋ, ತಮ್ಮ ತಲೆಯ ಹಿಂದೆ ಫೋಟೋಶಾಪಿನಲ್ಲಿ ಪ್ರಭಾವಳಿಯನ್ನು ಬಿಡಿಸಿಕೊಂಡು ನಗುನಗುತ್ತಾ ಅಭಯ ಹಸ್ತವನ್ನು ತೋರುವ ದೈವೀಪಟವನ್ನು ಮಾಡಿಸಿಕೊಳ್ಳುವಷ್ಟು.ಆತ್ಮರತಿಯರಿಮೆಯವರೋ ಬಹುಬಹು ಪರಾಕು ಪ್ರಿಯರು.

ಈ ಆತ್ಮರತಿಯರಿಮೆಯ ಮತ್ತೊಂದು ಲಕ್ಷಣವೆಂದರೆ ಇತರರದನ್ನು ಪ್ರಶಂಸಿಸಲು ಅಷ್ಟು ಮನಸೊಪ್ಪದಿರುವುದು. ತಾವು ಯಾವುದೋ ಒಂದು ಆ ಕೆಲಸವನ್ನು ಎಂದಿಗೂ ಮಾಡದಿದ್ದರೂ “ಅದೇನು ಮಹಾ. ನಾನೂ ಮಾಡುತ್ತೇನೆ” ಎನ್ನುವುದು. ಸಾಲದಕ್ಕೆ ಅಸೂಯಾಪರವಾಗಿವುದು. ಆತ್ಮರತಿಯೆಂಬ ಅರಿಮೆಗೆ ಅನೇಕಾನೇಕ ಗೀಳುಗಳು ಮತ್ತು ವ್ಯಸನಗಳು ಆಪ್ತ ಸ್ನೇಹಿತರು.

ಫೇಸ್ಬುಕ್ಕಿನಲ್ಲಿ ತಮಗೇ ಆಸಕ್ತಿ ಇರುವ ವಿಷಯವನ್ನೋ ಅಥವಾ ಸಂಗತಿಯನ್ನೋ ಇನ್ನಾರಾದರೂ ತಮಗಿಂತ ಮುಂಚೆಯೇ ಪ್ರಕಟಿಸಿಬಿಟ್ಟರೆ, ಅಥವಾ ತಾವು ಪ್ರಕಟಿಸಿದ್ದರೆ ಚೆನ್ನಾಗಿರುತ್ತಿತ್ತು ಎಂಬಂತಹ ಬರಹವನ್ನೋ ಅಥವಾ ವಿಷಯವನ್ನೋ ಗೋಡೆಗೆ ಅಂಟಿ ಹಾಕಿಕೊಂಡಿದ್ದರೆ, ಅದನ್ನು ನೋಡಿದರೂ ಹಾಗೆಯೇ ಮುಂದೆ ಹೋಗುತ್ತಾರೆ. ಅದು ತಮಗೂ ಇಷ್ಟವಾದ ಅಥವಾ ಆಸಕ್ತಿಯ ವಿಷಯವಾಗಿದ್ದರೂ ಲೈಕಿಸುವುದಿಲ್ಲ ಅಥವಾ ಕಮೆಂಟಿಸುವುದಿಲ್ಲ. ಅಸೂಯಾಗ್ನಿಯು ಅವರಿಗೆ ಏನನ್ನೂ ಮಾಡದಂತೆ ತಡೆಯುತ್ತದೆ. ಇನ್ನು ‘ನಾನೂ ಇದೇ ವಿಚಾರ ಮಾಡಿದ್ದೆ. ಆದರೆ ನೀವು ಮಾಡಿದ್ದೀರಿ. ಅಭಿನಂದನೆಗಳು’ ಎಂದು ತಿಳಿಸುವುದು ಬಹಳ ದುಬಾರಿಯ ವ್ಯಾಪಾರ ಅವರಿಗೆ.

ಓ, ಆತ್ಮರತಿಯ ಆಯಾಮಗಳು ಅಗಣಿತ. ಆದರೂ ಒಂದಷ್ಟು ಗುಣಿಸಿದ್ದೇನೆ ಮತ್ತು ಪರಿಗಣಿಸಿದ್ದೇನೆ ಮನೋವೈಜ್ಞಾನಿಕ ತಳಹದಿಯಿಂದ. ಮುಂದೆ ನೋಡೋಣ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending