Connect with us

ಅಂತರಂಗ

ಅರಿಮೆಯ ಅರಿವಿರಲಿ-10 : ನಾನು ಎಂದರೆ ಯಾರು..?

Published

on

  • ಯೋಗೇಶ್ ಮಾಸ್ಟರ್

ನಮಸ್ಕಾರ” ಎಂದಿರಿ ಅವರಿಗೆ. ಅವರೂ “ನಮಸ್ಕಾರ” ಎಂದರು. ನಿಮ್ಮಿಬ್ಬರ ಭೇಟಿಯಾಗಿ ಹತ್ತು ನಿಮಿಷಗಳಾಗಿವೆ. ಹನ್ನೊಂದನೆಯ ನಿಮಿಷಕ್ಕೆ ಇನ್ಯಾರೋ ಮೂರನೆಯವರು ಅವರಿಗೆ ತಿಳಿದಿರುವವರೋ ಅಥವಾ ಸಾಂದರ್ಭಿಕವಾಗಿ ಬಂದರು. ಅವರು ನಿಮ್ಮನ್ನು ವರ್ಣಿಸಲು ಪ್ರಾರಂಭಿಸುತ್ತಾರೆ. ನಿಮ್ಮದೆಂತಹ ಉದಾತ್ತ ವ್ಯಕ್ತಿತ್ವ, ನೀವು ಎಷ್ಟು ಪ್ರತಿಭಾವಂತರು, ನೀವು ಅವರಿಗೆ ಈಗ ಸಿಕ್ಕಿದ್ದು ಎಷ್ಟು ಅದೃಷ್ಟ; ಇತ್ಯಾದಿ.

ನಿಮ್ಮ ಅಗಣಿತ ಗುಣನಾಮ ಬಹುಪರಾಕುಗಳನ್ನೆಲ್ಲಾ ಕೇಳಿ ನೀವೇನಾದರೂ ಎಣ್ಣೆಗೆ ಬಿದ್ದ ಪೂರಿಯಂತೆ ಉಬ್ಬಿದಿರೋ ನೀವೊಬ್ಬ ನಾರ್ಸಿಸಸ್. ನಿಮ್ಮನ್ನು ಪುಂಖಾನುಪುಂಖವಾಗಿ ಹೊಗಳುತ್ತಿರುವವರು ಕೂಡಾ ಒಬ್ಬ ನಾರ್ಸಿಸಸ್. ಬರಿಯ ಹತ್ತು ನಿಮಿಷದ ಪರಿಚಯದಲ್ಲಿ ನಿಮ್ಮ ಜೀವಮಾನದ ಸಾಧನೆಯನ್ನು ಜಗತ್ತಿಗೆ ಸಾರಲು ಪಣತೊಟ್ಟು ನಿಂತಿರುವ ಮತ್ತು ನಿಮಗೆ ಬೇಕು ಬೇಕಾದ ಎಲ್ಲಾ ಪ್ರಶಸ್ತಿಗಳನ್ನು ಅವರ ಪೆಟ್ಟಿಗೆಯಿಂದ ತೆಗೆತೆಗೆದು ಕೊಡುತ್ತಿದ್ದಾರೆಂದರೆ ಅವರೂ ಕೂಡಾ ಒಬ್ಬ ನಾರ್ಸಿಸಸ್.

ನೀವೂ ಕೂಡಾ ಇಂತೆಯೇ ಅವರನ್ನು ಪ್ರಶಂಸಿಸಬೇಕೆಂದು ಅವರು ನಿಮಗೆ ಲಂಚ ನೀಡುತ್ತಿರುವುದು. ನೀವು ಅವರು ಬಡಿಸಿದ ರಸದೌತಣ ಸವಿದು, ಗಪ್ಪನೆ ಸುಮ್ಮನಾಗಿಬಿಟ್ಟರೆ. ಅವರು ನಿಮ್ಮನ್ನು ಮತ್ತೆಂದೂ ಹೊಗಳಲಾರರು. ನೀವೂ ಹೊಗಳಿದರೋ ಅಲ್ಲಿಗೆ ಕೊಟ್ಟು ಪಡೆಯುವ ವ್ಯವಹಾರ ಸುಸೂತ್ರವಾಗಿ ನಡೆಯುತ್ತಲೇ ಇರುತ್ತದೆ. ಇದು ಕೆಲವು ಸಲ ವೇದಿಕೆಯ ಮೇಲೂ ನಡೆಯುತ್ತದೆ.

ನಮ್ಮ ಸಾಧನೆಯ ಪಟ್ಟಿ ಒಂದು ನಮ್ಮ ಕೈಯ ಒಂದು ಮೊಳದಷ್ಟಿರುತ್ತದೆ. ಆದರೆ ನಮ್ಮನ್ನು ಕರೆಸಿದವರು ಅದನ್ನು ದುಬೈನ ಬುರ್ಜಾ ಖಲೀಫ್ ಕಟ್ಟಡದಷ್ಟು ಎಳೆದಿರುತ್ತಾರೆ. ಅಲ್ಲಿ ನಮ್ಮನ್ನು ಕರೆಯಿಸಿದವರಿಗೆ ನಾರ್ಸಿಸಸ್ ಹಸಿವೆಗೆ ಎರಡು ಬಗೆಯ ಊಟ ಬೇಕು. ಒಂದು ನಾವು ಕರೆಯಿಸಿರುವ ವ್ಯಕ್ತಿ ಸಾಧಾರಣ ಅಲ್ಲ. ಅಸಮಾನ್ಯ. ಅವರು ಅಷ್ಟು ಅಗ್ರಗಣ್ಯ ಎಂಬ ಚಿತ್ರಣವನ್ನು ಸಭಿಕರಿಗೆ ನೀಡುವುದು ಒಂದಾದರೆ, ಅಷ್ಟು ಹೊಗಳಿಸಿ ಹೂಮಳೆಗರೆಸಿಕೊಂಡವರು ಅದಕ್ಕೆ ಧನ್ಯತಾಭಾವದಿಂದ ಮರುಹೊಗಳಿಕೆ ಕೊಡಬಾರದೇ? ಇಂತಹ ಕಾರ್ಯಕ್ರಮ ಮಾಡುತ್ತಿರುವ ಇವರು ಅದೆಷ್ಟು ಮಹೋನ್ನತ ವ್ಯಕ್ತಿ ಎಂದು ಬಿನ್ನವತ್ತಳೆ ನೀಡದೇ ಹಾಗೇ ಹೋಗುವುದು ನ್ಯಾಯವೇ? ಧರ್ಮವೇ? ಸರಿ, ಪೈಪೋಟಿಗಳ ಮೇಲೆ ಹೊಗಳಬೇಕಾಗುತ್ತದೆ.ಹೊಗಳಿಕೆಗಳ ಹೊನ್ನಶೂಲದಿಂದ ಪರಸ್ಪರ ಇರಿದಿರಿದುಕೊಳ್ಳುತ್ತಿರುವುದು ಆತ್ಮರತಿಯರಿಮೆಯ ಮತ್ತೊಂದು ಫಳಫಳಿಸುವ ಲಕ್ಷಣ.

ಹೊಗಳಿಕೆಗಳ ಸುರಿಮಳೆ ಸುರಿದಾಗ ನಾರ್ಸಿಸಸ್ ಅಲ್ಲದವರಾದರೆ ಸಂಕೋಚದಿಂದ ಹಿಡಿಮುದ್ದೆಯಾಗುತ್ತಾರೆ. ಸ್ಪಂದಿಸುವುದೂ ಕಷ್ಟವಾಗುತ್ತದೆ. ಅಂತವರು ಸುಮ್ಮನಿದ್ದರೆ ಒಪ್ಪಿಕೊಂಡಂತಹ ಕಷ್ಟ, ಅದನ್ನು ಅಲ್ಲಗಳೆದರೆ ಸಭಿಕರ ಮುಂದೆ ಆಯೋಜಕರನ್ನು ಮುಜುಗರಕ್ಕೆ ತಳ್ಳಿದಂತಾಗುವುದು. ಅದಕ್ಕೆ ಅಡ್ಡಗೋಡೆ ಮೇಲೆ ದೀಪವಿಟ್ಟುಬಿಡುತ್ತಾರೆ. “ಇವರು ನನ್ನ ಮೇಲಿನ ಅಭಿಮಾನದಿಂದ ಇಷ್ಟು ಹೇಳುತ್ತಿದ್ದಾರೆ. (ನಾನು ಅಷ್ಟು ಇಲ್ಲ) ಎಂದು ಬ್ರಾಕೆಟಲ್ಲಿ ಓದುವವರಿಗೆ ಅರ್ಥವಾಗುವಷ್ಟು ಒಂದಿಷ್ಟು ನಗೆ ನಕ್ಕು ವಿಷಯವನ್ನು ತೇಲಿಸಿಬಿಡುತ್ತಾರೆ.

ಕೆಲವು ಸಮಾರಂಭಗಳು ಆತ್ಮರತಿಯ ಅಮೋಘ ಮೆರವಣಿಗೆಯೇ ಆಗಿರುತ್ತದೆ. ನಾರ್ಸಿಸಮ್ ಬಗ್ಗೆ ತಿಳಿದಿವರಿಗೆ ಅದು ಬಲ್ಲವನೇ ಬಲ್ಲ ಬೆಲ್ಲದ ರುಚಿಯ ಗಾದೆಯಂತೆ. ಕೆಲವರೆಲ್ಲಾ ಆ ಎಲ್ಲಾ ಹೊಗಳಿಗೆಗಳನ್ನು ಸ್ವೀಕರಿಸುತ್ತಾರೆ. ಹೌದು, ನಾನಿದಕ್ಕೆ ಅರ್ಹ ಎಂದು ಭಾವಿಸಿರುತ್ತಾರೆ. ಇನ್ನೂ ಸರಿಯಾಗಿ ಮತ್ತು ಪೂರ್ತಿಯಾಗಿ ಅವರು ಹೇಳಿಲ್ಲ ಎಂದೂ ಸ್ವಲ್ಪ ನಿರಾಶೆಯಾಗುತ್ತದೆ. ಇವರು ನಾರ್ಸಿಸಮ್ ಪಂಥದವರು.
ನೀವು ಅವರಿಗೆ ನಿರಾಶೆ ಮಾಡಿದಿರೋ, ಉಹುಂ, ಇನ್ನೊಂದು ಸಲ ಅವರು ನಿಮ್ಮನ್ನು ಅವರು ಲಕ್ಷಿಸುವುದಿಲ್ಲ. ನೀವು ಅವರನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ, ಅತಿಥಿಯಾಗಿ ಕರೆದು ಉಪೇಕ್ಷೆ ಮಾಡಿಬಿಡುತ್ತೀರಿ ಎಂದು ನಿಮ್ಮ ಕಡೆ ಹೊರಳುವುದಿಲ್ಲ.

ಹೊಗಳಿಕೆಯೇ ಆಹಾರ

ಆತ್ಮರತಿಯ ಸುಖಿಗಳು ತಮ್ಮನ್ನು ಭೇಟಿ ಮಾಡಿದವರಿಗೆ ತಮ್ಮ ಜೀವನದ ಮಹತ್ವದ ಅನೇಕಾನೇಕ ಘಟನೆಗಳನ್ನು ಹೇಳುತ್ತಿರುತ್ತಾರೆ. ಅದು ಆ ಸಂದರ್ಭಕ್ಕೆ ಬೇಕಿರಲಿ, ಬೇಡದಿರಲಿ. ಹೇಳದೇ ಬಿಡುವುದಿಲ್ಲ. ನೀವು ಕತೆ ಕೇಳಿದಂತೆ ಕೇಳಿ ಸುಮ್ಮನಾಗಿಬಿಟ್ಟರೆ ಅವರಿಗೆ ಬಹಳ ನಿರಾಶೆಯಾಗುತ್ತದೆ. ಅವರು ಅಷ್ಟೂ ಹೊತ್ತು ಹೇಳಿದ್ದೇಕೆಂದರೆ, ಆ ಗುಣಗಳನ್ನೆಲ್ಲಾ ನೀವು ಗುರುತಿಸಿ, ಹೆಕ್ಕಿ, ಒಂದಿಷ್ಟು ಒಳ್ಳೆಯ ಮಾತುಗಳನ್ನಾಡಬೇಕು ಎಂದು. ಅವು ಕಷ್ಟದ ಮತ್ತು ಸಾಹಸದ ಕೆಲಸಗಳಾಗಿರಬಹುದು.

ಯಾರಿಗೋ ಉಪಕಾರ ಮಾಡಿದ್ದಾಗಿರಬಹುದು.ಯಾವುದೋ ಸನ್ನಿವೇಶದಲ್ಲಿ ಹೆಣಗಾಡಿದ್ದೋ, ಹೋರಾಡಿದ್ದೋ ಆಗಿರಬಹುದು.
ಅವರಿಗೆ ಪ್ರಿಯವಾಗುವ ಶಬ್ದಗಳೇನೆಂದರೆ,
“ಅಬ್ಬಾ, ನೀವು ಅದು ಹೇಗೆ ಆ ಸಾಹಸ ಮಾಡಿದಿರಿ? ನೀವಾಗಿದ್ದಕ್ಕೆ ಮಾಡಿದಿರಿ. ಬೇರೆಯವರಾಗಿದ್ದರೆ ಓಡಿ ಹೋಗಿಬಿಡುತ್ತಿದ್ದರು. ಸೋತು ಸುಣ್ಣವಾಗಿಬಿಡುತ್ತಿದ್ದರು.”

“ಈಗಿನ ಕಾಲದಲ್ಲಿ ಯಾರು ಆ ರೀತಿ ನೆರವಾಗುತ್ತಾರೆ. ಎಲ್ಲರೂ ಅವರವರದು ನೋಡಿಕೊಳ್ಳುತ್ತಾರೆ. ನೀವಾಗಿದ್ದಕ್ಕೆ ಅಷ್ಟು ಉಪಕಾರ ಮಾಡಿದ್ದೀರಿ. ನಿಜವಾಗಿಯೂ ನೀವು ಗ್ರೇಟ್.” “ಪ್ಚ್, (ಅವರನ್ನೇ ದಿಟ್ಟಿಸಿ ನೋಡುತ್ತಾ) ನಂಬಕ್ಕೇ ಆಗಲ್ಲ. ನೀವು ಹೇಗೆ ಇವೆಲ್ಲಾ ಮಾಡಿದಿರಿ? ನನಗೆ ನಿಮ್ಮ ಜೊತೆ ಹೀಗೆ ಇರೋದೇ ಹೆಮ್ಮೆ.”

ಆಗ ಅವರ ಮುಖ ನೋಡಿ. ಕಣ್ಣುಗಳಲ್ಲಿ ಹೊಳಪಿರುತ್ತದೆ. ಮುಖದ ಪೂರ್ತಿ ನಗು ತುಂಬಿರುತ್ತದೆ. ವೆಂಕಟೇಶ್ವರ ಮಹಾತ್ಮ್ಯೆ ಸಿನಿಮಾದಲ್ಲಿ ಪ್ರತ್ಯಕ್ಷವಾದ ದೇವರು ನಸುನಗುತ್ತಾ ಭಕ್ತನ ಸ್ತುತಿಗೀತೆಗಳನ್ನು ಕೇಳುತ್ತಾ ತಲೆಯಾಡಿಸುತ್ತಿರುವಂತೆ ಕಾಣುತ್ತದೆ.
ಆತ್ಮರತಿಯ ರತಿಮನ್ಮಥರ ಸಂಭಾಷಣೆಯಲ್ಲಿ ಸಾಮಾನ್ಯವಾಗಿ ಅವರು ಮಾಡಿರುವ ಸಾಧನೆ ಅಥವಾ ಪಟ್ಟಿರುವ ವೇದನೆಗಳಿಂದ ಗೆದ್ದಿರಿವುದ ನಿವೇದನೆ. ಇತರರಿಗಿಂತ ತಾವು ವಿಶೇಷವೆಂದು ತಮ್ಮ ಕೇಳುಗ ಕುರಿಗಳಿಗೆ ಅರ್ಥ ಮಾಡಿಸಬೇಕಾಗಿರುವುದೇ ಅವರ ಗುರಿ.

ಅವರ ಮಾತುಗಳನ್ನು ಮುಂದಿರುವವರು ಕೇಳುತ್ತಿದ್ದಾರೋ ಇಲ್ಲವೋ ಎಂದು ಯೋಚಿಸುವುದೇ ಇಲ್ಲ. ತಮ್ಮ ಮುಂದಿರುವವರು ತಾವು ಕೇಳುತ್ತಿರುವ ಸಂಕೇತವಾಗಿ ಪ್ರಶ್ನೆಗಳನ್ನು ಕೇಳದಿದ್ದರೂ, ಅನುಮಾನಗಳನ್ನು ಮುಂದಿಟ್ಟು ಬಗೆಹರಿಸಿಕೊಳ್ಳಲು ಯತ್ನಿಸದಿದ್ದರೂ ಇವರು ಹೇಳುತ್ತಲೇ ಇರುತ್ತಾರೆ. ಅವರ ಹಸಿವಿಗೆ ಕೇಳುಗರ ಸಕಾರಾತ್ಮಕ ಪ್ರತಿಕ್ರಿಯೆಯೇ ಆಹಾರ.

ಅಪಾರ ಆತ್ಮವಿಶ್ವಾಸದ ವ್ಯಕ್ತಿಯಂತೆ ಕಾಣುವ ಅವರು ಹಾಗೆಯೇ ವರ್ತಿಸುತ್ತಾರೆ. ಅವರ ಆತ್ಮರತಿಗೆ ಸರಸವಾಗಿ ಉಣಬಡಿಸದ ಅರಸಿಕರನ್ನು ಅವರು ಇಷ್ಟಪಡುವುದಿಲ್ಲ. ದೂರಲಿ, ದೂರದಿರಲಿ ಖಂಡಿತವಾಗಿ ದೂರೀಕರಿಸುತ್ತಾರೆ. ಅವರ ಸುತ್ತ ಹೊಗಳುಭಟರಿರಬೇಕು. ಅವರು ಹೇಳಿದ್ದಕ್ಕೆಲ್ಲಾ, “ಪ್ಚ, ಅಮೋಘ! ವಿಸ್ಮಯ! ಅದ್ಭುತ!” ಎಂದು ಬೆರಗಾಗುತ್ತಿರಬೇಕು.

ಏಳು ಮಹಾಪಾತಕಗಳು

ನಾರ್ಸಿಸಮ್‍ನ ಏಳು ಮಹಾಪಾತಕಗಳನ್ನು ಮನೋವಿಜ್ಞಾನಿಗಳು ಗುರುತಿಸುತ್ತಾರೆ.

ನಾಚಿಗೇಡಿತನ: ಸಾಮಾನ್ಯವಾಗಿ ಆತ್ಮರತಿಯ ವ್ಯಕ್ತಿಗಳು ಮುಕ್ತವಾಗಿ ಮತ್ತು ಅಭಿಮಾನದಿಂದ ನಾಚಿಗೇಡಿಯಾಗಿರುತ್ತಾರೆ. ನಾನೂಂದ್ರೆ ಏನು? ನಾನೂಂದ್ರೆ ಯಾರು? ನಾನು ಮನಸ್ಸು ಮಾಡಿದರೆ ಏನು ಮಾಡ್ತೇನೆ ಗೊತ್ತಾ?; ಈ ವಾಕ್ಯಗಳೆಲ್ಲಾ ಅವರವೇ. ಅವರು ತಾವು ಯಾವಾಗಲೂ ವಿಮರ್ಶಾತೀತವಾಗಿರಲು ಬಯಸುತ್ತಾರೆ. ತನ್ನಲ್ಲಿ ವಿಮರ್ಶೆ ಮಾಡಲೇನಿದೆ? ನನ್ನ ಟೀಕಿಸುವವನು ಅಥವಾ ವಿಮರ್ಶಿಸುವವನು ಖಂಡನೆ ಅರ್ಹನೆಂದು ಅವರ ಅಚಲ ನಂಬಿಕೆ. ತಾವು ಶ್ರೀಮಾನ್ ಅಥವಾ ಶ್ರೀಮತಿ ಪರ್ಫೆಕ್ಟ್. ಒಂದು ವೇಳೆ ಅವರ ಯಾವುದಾದರೂ ಕೆಲಸ ಖಂಡಿತವಾಗಿ ಖಂಡನೀಯ ಮತ್ತು ತಪ್ಪು ಎಂದು ನಿರೂಪಿಸಿಬಿಟ್ಟಿದ್ದೇ ಆದರೂ, ಅವರು ಹೇಳುವುದೇನೆಂದರೆ, “ಅಕಸ್ಮಾತ್, ಈ ಕೆಲಸ ತಪ್ಪಾಗಿರಬಹುದು.

ಆದರೆ ನನ್ನ ಉದ್ದೇಶವು ಉತ್ತಮವಾಗಿತ್ತು. ನಾನು ಒಳ್ಳೆಯ ಉದ್ದೇಶದಿಂದ ಮಾಡಿದ್ದು” ಎಂದು ಹೇಳುತ್ತಾರೆಯೇ ಹೊರತು, ತಾವು ಅಪರಾಧ ಪ್ರಜ್ಞೆಯಿಂದ ನರಳುವುದೂ ಇಲ್ಲ. ತಾವು ತಪ್ಪಿತಸ್ಥರೆಂದು ಒಪ್ಪಿಕೊಳ್ಳುವುದೂ ಇಲ್ಲ.

ಅಸಾಧ್ಯ ಸಾಧಕ: ನಾರ್ಸಿಸಿಸ್ಟ್‍ಗಳು ತಮ್ಮನ್ನು ತಾವು ಪರ್ಫೆಕ್ಟ್ ಎಂದು ನಂಬಿರುವ ಕಾರಣದಿಂದ ಇತರರಿಗೆ ಸಾಧ್ಯವಾಗದ ಅದ್ಭುತಗಳನ್ನು ತಾವು ಸೃಷ್ಟಿಸುತ್ತೇವೆಂದು ನಂಬಿರುತ್ತಾರೆ. ಇತರರನ್ನು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡುತ್ತಾರೆಯೇ ಹೊರತು ತಮ್ಮ ಆತ್ಮಚಿತ್ರಣವನ್ನು ಕಿಂಚಿತ್ತೂ ಮುಕ್ಕಾಗಿಸಿಕೊಳ್ಳರು.

ಸೊಕ್ಕು: ಯಾರಾದರೂ ಅವರನ್ನು ಖಂಡಿಸಿದರೆ, ಟೀಕಿಸಿದರೆ ಅವರ ಉಸಿರಾಟ ವೇಗವನ್ನು ಪಡೆಯುತ್ತದೆ. ಸೊಕ್ಕು ಉಕ್ಕೇರುತ್ತದೆ. ಆ ಟೀಕೆಗಳನ್ನು ತುಂಬಾ ವ್ಯಕ್ತಿಗತವಾಗಿ ಅದನ್ನು ತೆಗೆದುಕೊಳ್ಳುವುದು ಮಾತ್ರವಲ್ಲದೇ ಇತರರಿಗೆ ಅವರ ಬಗ್ಗೆ ನಕಾರಾತ್ಮಕವಾಗಿ ಹೇಳುತ್ತಿರುತ್ತಾರೆ. ಅವರ ಚಾರಿತ್ರ್ಯವಧೆ ಮಾಡಲು ಹೇಸುವುದಿಲ್ಲ. ಅವರಿಗೆಂತಾದರೂ ಸಂಕಟ ಬಂದರೆ “ಅವರಿಗೆ ಹಾಗೇ ಆಗಬೇಕು” ಎಂದು ತೃಪ್ತಿಪಡುವ ಪ್ರಯತ್ನ ಮಾಡುತ್ತಾರೆ.

ಅಸೂಯೆ: ಇತರರ ಸಾಧನೆಗಳನ್ನು ಪ್ರಶಂಸಿಸುವುದು ಅವರಿಗೆ ಎಂದೂ ಆಗದು. ಇತರರೇನಾದರೂ ಸಾಧನೆ ಮಾಡಿದ್ದಾರೆಂದರೆ ಅವರ್ಯಾವುದೋ ಅಡ್ಡದಾರಿಯಿಂದ ಮೇಲೆದ್ದು ಬಂದಿರಬೇಕು, ಯಾವುದಾದರೂ ವಶೀಲಿ, ಲಂಚ ರುಶುವತ್ತುಗಳ ಪ್ರಭಾವವಿರಬೇಕು, ಅವರಿಗೇನು ಅವರಪ್ಪನ ಹತ್ತಿರ ದುಡ್ದು ಬೇಕಾದಷ್ಟಿದೆ ಮಾಡುತ್ತಾನೆ; ಹೀಗೆ, ಏನಾದರೊಂದು ಹೇಳಿಯೇ ತೀರುತ್ತಾರೆಯೇ ಹೊರತು ಮೆಚ್ಚುವುದಂತೂ ಇಲ್ಲ. ಅದ್ಯಾವ ಸೀಮೆ ಸಾಧನೆ ಎಂಬ ಉಪೇಕ್ಷೆಯು ಅಸೂಯೆಯ ಬಿಂಬವೇ ಹೊರತು ಮತ್ತೇನಿಲ್ಲ.

ಪರಾಕುಪ್ರಿಯ: ನಾರ್ಸಿಸಿಸ್ಟ್‍ಗಳು ಸಕಾರಣಕ್ಕೆ ಹೊರತಾದ ಬಿರುದುಬಾವಲಿಗಳನ್ನು ಹೊಂದುವುದಕ್ಕೆ ಇಷ್ಟಪಡುತ್ತಾರೆ. ಪಕ್ಕದ ರಸ್ತೆಯವರಿಗೆ ಅವರ ಬಗ್ಗೆ ತಿಳಿದಿರದಿದ್ದರೂ ತಾವು ಜಗದ್ವಿಖ್ಯಾತರು ಎಂದು ಅನ್ನಿಸಿಕೊಳ್ಳಲು ಆಶಿಸುತ್ತಾರೆ. ಅದನ್ನು ಉಳಿಸಿಕೊಳ್ಳಲು ಸದಾ ಹೆಣಗಾಡುತ್ತಿರುತ್ತಾರೆ. ಅದನ್ನು ಒಪ್ಪಿಕೊಳ್ಳದವರ ಬಗ್ಗೆ ಬಹಳ ಕೋಪವಿರುತ್ತದೆ.

ಪಟಾಲಂ ಪಡೆ: ತಮ್ಮ ಸುತ್ತಲೂ ಹೇಳಿದಂತೆ ಕೇಳಿಕೊಂಡಿರುವ ಒಂದಷ್ಟು ಜನರನ್ನು ಹೊಂದಿರುವಂತಹ ಮನಸ್ಥಿತಿ ಬಹಳ ಸಾಧಾರಣ. ಆ ಜನರು ಇವರಿಗೆ ಪರಾಕು ಹೇಳಲು ಮಾತ್ರವಲ್ಲದೇ, ಇವರ ಶ್ರೇಷ್ಟತೆ ಮತ್ತು ಹೆಗ್ಗಳಿಕೆಯ ಬಗ್ಗೆ ಜನಗಳಲ್ಲಿ ಜಾಗೃತಿಯನ್ನು ಉಂಟು ಮಾಡಬೇಕೆಂದು ಇವರ ಅಭಿಲಾಷೆ. ಸಾಧಾರಣರಲ್ಲದೇ ಇವರು ಮಹಾನ್ ಸಾಧಕರಾಗಿದ್ದರೂ, ಪ್ರಖ್ಯಾತರಾಗಿದ್ದರೂ ಇಂತಹ ಮನಸ್ಥಿತಿಯಲ್ಲೇ ಇರುತ್ತಾರೆ.

ಅವರೊಬ್ಬರು ಈ ನಾಡಿನ ಬಹುಪ್ರಖ್ಯಾತರು. ನಾನೂ ಮತ್ತು ಕೆಲವು ಯುವನಿರ್ದೇಶಕರ ತಂಡಕ್ಕೆ ಅವರು ಗೆಳೆಯರು. ನಾವೆಲ್ಲರೂ ಕೂಡಿ ಒಂದು ಸಂಸ್ಥೆಗೆ ಔಪಚಾರಿಕ ಭೇಟಿ ನೀಡಬೇಕಿತ್ತು. ಪ್ರಖ್ಯಾತರ ಗೆಳೆಯರೊಬ್ಬರೂ ನಮ್ಮೊಂದಿಗೆ ಬಂದಿದ್ದರು.

ಈ ನಮ್ಮ ತಂಡ ಸಾಮಾನ್ಯವಾಗಿ ಮಾತಾಡಿಕೊಂಡು ಬರುತ್ತಿದ್ದೆವು. ಪ್ರಖ್ಯಾತರ ಗೆಳೆಯ ನಮ್ಮ ತಂಡದ ಬಳಿಗೆ ಬಂದು ಹೇಳಿದರು, “ನೀವು ಮೊದಲು ಒಳಗೆ ಬೇಗ ಬೇಗ ಹೋಗಿ. ಅಲ್ಲಿ ಇರುವವರಿಗೆ ಹೇಳಿ, ‘ಸಾರ್ ಬಂದರು, ಸಾರ್ ಬಂದರು’ ಅಂತ. ಅಲರ್ಟ್ ಆಗಲಿ” ಎಂದು.

ಪ್ರಖ್ಯಾತರ ಮುಖವನ್ನು ನೋಡಿದರೆ ಅವರು ಸಹಜವಾಗಿ ಅಲರ್ಟ್ ಆಗುತ್ತಾರೆ. ಮೇಲೆದ್ದು ಬಂದು ಗೌರವಿಸುತ್ತಾರೆ, ಸ್ವಾಗತಿಸುತ್ತಾರೆ. ನಾವು ಹೋಗಿ ‘ಬಂದ್ರು ಬಂದ್ರು’ ಅಂತ ಹೇಳೋದೇನಿದೇಂತ ನಮ್ಮ ಧೋರಣೆ. ನಾವು ಅದಕ್ಕೆ ಜಾಣ ಮುಗ್ಧರಾಗಿ ‘ನೀವು ಹೇಳುವುದು ಹೇಗೆ ಮಾಡುವುದು ಎಂದು ತಿಳಿಯಲಿಲ್ಲ’ ಎಂಬಂತೆ ಪಿಳಪಿಳನೆ ನೋಡುತ್ತಿದ್ದೆವು. ಆಗ ನಗಲೂ ಆಗುತ್ತಿರಲಿಲ್ಲ. ನಾವುಗಳು ಆಮೇಲೆ ಮನಸೋಯಿಚ್ಚೆ ನಗಾಡಿಕೊಂಡೆವು. ಬಹುಶಃ ನಮ್ಮ ಹತ್ತಿರ ಮಾಡಿಕೊಂಡ ತಮ್ಮ ಗೆಳೆಯರ ಅಹವಾಲು ಆ ಪ್ರಖ್ಯಾತರಿಗೆ ತಿಳಿದಿರಲಿಲ್ಲ ಎನಿಸುತ್ತದೆ.

ಇರಲಿ, ಇಂತಹ ಪಟಾಲಂ ಪಡೆಯನ್ನು ಹೊಂದಿರುವಾಸೆ ಆತ್ಮರತಿಸಖರದು. ಅವರನ್ನು ಶೋಷಿಸುತ್ತಿದ್ದೇವೆ ಎಂಬ ಅರಿವೂ ಅವರಿಗಿರುವುದಿಲ್ಲ. ತಮಗಾಗಿ ಅವರು ಹಾಗೆ ಮಾಡಬೇಕಾಗಿರುವುದು ಅವರ ಧರ್ಮ ಎಂದು ಅವರು ಭಾವಿಸಿರುತ್ತಾರೆ.

ಸೀಮೆಯೊಳಗೆ ಬಂಧಿತರು: ಬಹಳ ಶೋಚನೀಯ ಸಂಗತಿಯೆಂದರೆ, ತಾವು ತಮ್ಮ ಸುತ್ತಲೂ ಒಂದು ಎಲ್ಲೆಯನ್ನು ಗೀಚಿಕೊಂಡು ತಮ್ಮನ್ನು ಸಂಕುಚಿತಗೊಳಿಸಿಕೊಳ್ಳುತ್ತಿದ್ದೇವೆ ಎಂಬ ಅರಿವು ಅವರಿಗೆ ಇರದೇ ಹೋಗುವುದು. ಅವರು ತಮ್ಮ ಮತ್ತು ಇತರರ ನಡುವೆ ಕಂದಕಗಳನ್ನು ತೋಡಿಕೊಳ್ಳುತ್ತಿದ್ದೇವೆ ಎಂದು ಅವರ ಅರಿವಿಗೆ ಬಾರದೇ ಹೋಗುವುದು. ಒಂದು ವೇಳೆ ಅವರು ಖ್ಯಾತನಾಮರಾಗಿದ್ದರೆ, ಉನ್ನತ ಅಧಿಕಾರಸ್ಥರಾಗಿದ್ದರೆ ಅನಿವಾರ್ಯವಾಗಿ ಅವರಿಂದ ಕೆಲಸಗಳಾಗಬೇಕಾದವರು ತಗ್ಗುವ ಬಗ್ಗುವ ನಟನೆ ಮಾಡುತ್ತಿರುತ್ತಾರೆ.

ಕೊನೆಗೊಮ್ಮೆ ಅವರಿಂದ ಏನೂ ಕೆಲಸ ಆಗುವ ಅಗತ್ಯ ಇಲ್ಲದೇ ಹೋದಾಗ ಅವರನ್ನು ತಟ್ಟನೆ ನಿರ್ಲಕ್ಷಿಸಿಬಿಡುತ್ತಾರೆ. ಸಂಪೂರ್ಣ ಬಿಟ್ಟುಬಿಡುತ್ತಾರೆ. ತಮ್ಮ ಸುತ್ತಲೂ ವಂದಿಮಾಗದರನ್ನು, ಪಟಾಲಮನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದವರಿಗೆ ಒಮ್ಮಿಂದೊಮ್ಮೆಲೆ ಆಘಾತವಾಗುತ್ತದೆ. ತಮ್ಮ ಅಹಂಕಾರಕ್ಕೆ ಆಹಾರ ಸಿಗದೇ ಮಾನಸಿಕವಾಗಿ ಕೃಶವಾಗುತ್ತಾರೆ. ಖಿನ್ನತೆಗೆ ಜಾರುತ್ತಾರೆ. ಅಂತಹ ಖಿನ್ನತೆಗಳಿಂದ ಹೊರಬರಲಾಗದೇ ಅನೇಕ ರೀತಿಯ ವ್ಯಸನಗಳಿಗೆ ತುತ್ತಾಗುತ್ತಾರೆ. ಕೆಲವೊಮ್ಮೆ ಆತ್ಮಹತ್ಯೆಗೆ ಶರಣಾಗಲೂಬಹುದು.

ಈ ಮಾನಸಿಕ ಸಮಸ್ಯೆ ಬಹಳಷ್ಟು ಜನರಲ್ಲಿರುವುದರಿಂದ ವ್ಯಕ್ತಿಗತವಾಗಿಯೂ ಮತ್ತು ಸಾಮಾಜಿಕವಾಗಿಯೂ ಬಹಳ ಸಂಘರ್ಷಗಳು ಮತ್ತು ಸಮಸ್ಯೆಗಳು ಉಂಟಾಗುತ್ತಿರುತ್ತವೆ. ಇದನ್ನು ಓದಿದಾಗ ನನ್ನಲ್ಲೂ ಇಂತಹ ಸಮಸ್ಯೆಯೊಂದಿದೆ ಎಂದು ಯಾರಿಗಾದರೂ ಅನ್ನಿಸಿದರೆ, ಅದು ಬಹಳ ಒಳ್ಳೆಯ ಸೂಚನೆ. ಏಕೆಂದರೆ, ಯಾವುದೇ ಮಾನಸಿಕ ಸಮಸ್ಯೆಯ ಚಿಕಿತ್ಸೆಯ ಕಾರ್ಯ ಪ್ರಾರಂಭವಾಗುವುದು ‘ನನಗೆ ಈ ಸಮಸ್ಯೆ ಇದೆ’ ಅರಿವಿನಿಂದ.

ಅದೇ ಪರಿಹಾರಕ್ಕೆ ಮೊದಲ ಹೆಜ್ಜೆ. ಸಾಮಾನ್ಯವಾಗಿ ಮಾನಸಿಕ ಸಮಸ್ಯೆಯು ತೀವ್ರವಾಗಿರುವವರು ತಮಗೆ ಮಾನಸಿಕ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದೇ ಇಲ್ಲ. ಇತರರಲ್ಲಿ ಅದು ಇದೆ ಎಂದು ಗುರುತಿಸಲು ಯತ್ನಿಸುತ್ತಿರುತ್ತಾರೆ. ತಾವು ಮಾತ್ರ ಸಂಪೂರ್ಣ ಆರೋಗ್ಯದಿಂದ ಇದ್ದೇವೆ ಎಂದುಕೊಂಡಿರುತ್ತಾರೆ. ಮನೋರೋಗಕ್ಕೆ ಮದ್ದಿಲ್ಲ ಎಂಬ ಗಾದೆಯನ್ನು ಒಪ್ಪುವುದು ಬೇಡ.ಮನೋರೋಗಕ್ಕೆ ಮದ್ದಿದೆ ಎಂಬ ಭರವಸೆ ಮತ್ತು ವಿಶ್ವಾಸದೊಡನೆ ಆತ್ಮವಿಮರ್ಶೆಗೊಳಗಾಗುವುದು ಈ ಸಮಸ್ಯೆಗೆ ಪರಿಹಾರಕ್ಕೆ ದಾರಿ ಕಾಣುವ ಪ್ರಾರಂಭ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending