ಅಂತರಂಗ
ಅರಿಮೆಯ ಅರಿವಿರಲಿ-12 : ಶವಮುಖದ ಶೃಂಗಾರ
- ಯೋಗೇಶ್ ಮಾಸ್ಟರ್
ಆತ್ಮರತಿಯು ಪ್ರೇಮವನ್ನು ಕೊಲ್ಲುತ್ತದೆ.ಆತ್ಮರತಿಯ ಆಳವಾದ ಅರಿಮೆಯ ಪ್ರಬಲವಾದ ಪ್ರಕಟಣೆಯೇ ಅಹಂಕಾರ. ನಮಗೆ ಸವಾಲೊಡ್ಡುವ ಒಬ್ಬನ ಅಹಂಕಾರವನ್ನು ಗುರುತಿಸುವ ಭರಾಟೆಯಲ್ಲಿ ನಮ್ಮ ಆತ್ಮರತಿಯ ಅರಿಮೆಯು ಹೊಂದಿರುವ ಉತ್ಕಟವಾದ ಇಚ್ಛೆಯು ನಮ್ಮ ಅಹಂಕಾರವನ್ನು ಝಳಪಿಸುತ್ತದೆ. ಎರಡು ಅಹಂಕಾರಗಳ ಖಡ್ಗಗಳ ಕಾಳಗದಲ್ಲಿ ಪ್ರೇಮ ಸಾಯುತ್ತದೆ. ವಾತ್ಸಲ್ಯ ಸಾಯುತ್ತದೆ. ಸೌಹಾರ್ಧ ಧೂಳೀಪಟವಾಗುತ್ತದೆ.
ನನಗೆ ಅವನ ಅಹಂಕಾರ ಕಾಣುತ್ತದೆ ಎಂದರೆ, ಅವನ ಅಹಂಕಾರವನ್ನು ಖಂಡಿಸುತ್ತಿದ್ದೇನೆಂದರೆ, ಅವನ ಅಹಂಕಾರಕ್ಕೆ ಮಣಿಯಲು ನಾನು ಒಪ್ಪದೇ ನಾನೂ ಸವಾಲೆಸೆಯುತ್ತಿದ್ದೇನೆಂದರೆ, ಹೌದು, ನನ್ನಲ್ಲಿರುವ ಆತ್ಮರತಿಯ ಅರಿಮೆಯು ತನ್ನ ಪ್ರಕಟಣೆಯಾದ ಅಹಂಕಾರವನ್ನು ವಿಜೃಂಭಿಸುತ್ತಿದೆ.
ಒಬ್ಬ ಕಳ್ಳನ ಲಕ್ಷಣಗಳನ್ನು ಮತ್ತೊಬ್ಬ ಕಳ್ಳ ಬಲ್ಲ. ಇಲ್ಲೂ ಚೌಕಾಸಿ ಮಾಡಿಕೊಳ್ಳಬಹುದು. ನನ್ನದನ್ನು ಅಹಂಕಾರ ಎಂದು ಒಪ್ಪಿಕೊಂಡರೂ ಅವನದನ್ನು ದುರಹಂಕಾರ ಎನ್ನುತ್ತೇನೆ. ಇದು ಆತ್ಮರತಿ ಅರಿಮೆಯ ಪಟ್ಟುಗಳು.
ಪ್ರಬಲವಾದ ಅಥವಾ ಉತ್ಕಟವಾದ ವಾಂಛೆ, ಒಳಗಿರುವ ಬಯಕೆಯೊಂದಿಗೆ ಆತ್ಮರತಿಯ ನಂಟು. ಆತ್ಮರತಿಗೆ ಎರಡು ಅಲುಗಿನ ಕತ್ತಿಯನ್ನು ಬಳಸಲು ಗೊತ್ತುಂಟು.
ಒಳಗಿರುವ ಕಾಮುಕನ ತಣಿಸಲು ಪ್ರೇಮವನ್ನು ತೋರಬಹುದು ಅಥವಾ ಅತ್ಯಾಚಾರವನ್ನೂ ಮಾಡಬಹುದು. ಆತ್ಮರತಿಯೂ ಹಾಗೆ. ತನ್ನೊಳಗಿನ ಆಸೆಯನ್ನು ತಣಿಸಿಕೊಳ್ಳಲು ವಿನಯವಾಗಿ ಪರೋಪಕಾರಿಯೂ ಆಗಬಹುದು, ಅಹಂಕಾರಿಯೂ ಆಗಬಹುದು. ಆತ್ಮಕ್ಕೆ ರತಿಯೇ ಮುಖ್ಯ. ಈ ಅರಿಮೆಗೆ ತಾನು ಯಾರನ್ನು ಹೊಕ್ಕಿದೆಯೋ ಅವನ ಮೂಲಕ ತಾನು ತೃಪ್ತವಾಗಬೇಕಷ್ಟೇ.
ಯಾರೋ ಒಬ್ಬರ ತಾಳಕ್ಕೆ ಕುಣಿಯುವ ಮೂಲಕವೂ ಆತ್ಮರತಿಯು ತಾನು ಸುಖವನ್ನು ಪಡುತ್ತದೆ. ಅದಕ್ಕೆ ತಾನು ತೃಪ್ತವಾಗಬೇಕು. ಆತ್ಮರತಿಯರಿಮೆಯು ಪ್ರೇಮದ ಮುಖವಾಡವನ್ನು ತೊಟ್ಟಿರುವ ಅತ್ಯಾಚಾರಿಯೂ ಆಗಿರಬಹುದು. ಆದರೆ ಅತ್ಯಾಚಾರಿಯನ್ನು ನೀವು ಎನ್ಕೌಂಟರ್ ಮಾಡುವಿರಿ. ಪ್ರೇಮಿಯನ್ನು ಅಲ್ಲ. ಅಷ್ಟೇಕೆ, ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿ ಸಂತ್ರಸ್ತೆಗೆ ನ್ಯಾಯವೊದಗಿಸುವ ಗನ್ನುಗಳನ್ನು ಹಿಡಿದಿರುವ ಕೈಗಳೂ ಆತ್ಮರತಿಯ ಕೈಗೊಂಬೆಗಳೇ. ಆತ್ಮರತಿಗೆ ಇಲ್ಲಿ ನ್ಯಾಯವೊದಗಿಸುವ ನೆಪ ಬೇಕಿತ್ತು.
ಹೊನ್ನಶೂಲದ ಅರಿವಾದೊಡೆ
ಅರಿಮೆಯು ಪ್ರಲೋಭನೆಗೆ ಒಡ್ಡುತ್ತಿರುವ ಪ್ರದರ್ಶನದ ಯಾವುದೇ ಇಚ್ಛೆಯನ್ನು ನಮ್ಮ ಅರಿವು ನಿರಾಕರಿಸಲು ಪ್ರಾರಂಭಿಸಿದ ಗಳಿಗೆಯಿಂದಲೇ ಆತ್ಮರತಿಯ ಅವನತಿ ಆರಂಭವಾಗುತ್ತದೆ. ಬಸವಣ್ಣನವರು ಫ್ರಾಯ್ಡ್ನ ನಾರ್ಸಿಸಂನ ಹೆಸರೆತ್ತದೇ ಆತ್ಮರತಿಯರಿಮೆಗೆ ಆಹಾರವೊದಗಿಸದಿರಲು ಅರಿವನ್ನು ಹೊಂದಿದ್ದರು. “ಎನ್ನವರೊಲಿದು ಹೊನ್ನ ಶೂಲದಲ್ಲಿಕ್ಕಿದರೆನ್ನ ಹೊಗಳಿ, ಹೊಗಳಿ” ಎಂದು ನೋಯುವ ಅವರು “ಅಯ್ಯೋ ನೊಂದೆನು, ಸೈರಿಸಲಾರೆನು” ಎಂದು ಅವರ ಅರಿವು ಅರಿಮೆಯೊಂದಿಗೆ ಸಂಘರ್ಷಕ್ಕಿಳಿಯುತ್ತದೆ. ಕೂಡಲ ಸಂಗನ ಎಚ್ಚರಿಸುತ್ತಾರೆ “ನೀನೆನಗೆ ಒಳ್ಳಿದನಾದಡೆ ಎನ್ನ ಹೊಗಳತೆಗಡ್ಡ ಬಾರ, ಧರ್ಮೀ” ಎಂದು. ನಮ್ಮನ್ನು ಅರಿಮೆಯಿಂದ ಕಾಪಾಡಿಕೊಳ್ಳಲು ನಾವು ಮೊರೆಹೋಗಬೇಕಾಗಿರುವುದು ಅರಿವಿಗೇ.
ಬಸವಣ್ಣನವರ ಅರಿವು ಮತ್ತು ಅರಿಮೆಯ ಸಂಘರ್ಷದಲ್ಲಿ ಪ್ರಾಮಾಣಿಕವಾಗಿ ಅವರ ಪ್ರಕಟಣೆಯಲ್ಲಿ ಏನೆನ್ನುವರು ನೋಡಿ. “ಎನ್ನವರೆನಗೊಲಿದು ಹೊನ್ನಸೂಲವನಿಕ್ಕಿದರಯ್ಯಾ, ಅಹಂಕಾರಪೂರಾಯ ಘಾಯದಲ್ಲಿ ಆನೆಂತು ಬದುಕುವೆನೆಂತು ಜೀವಿಸುವೆ?”
ನಿಜ, ಆತ್ಮರತಿಯರಿಮೆಯ ತೃಪ್ತಿಗೆ ತನ್ನನ್ನು ಒಪ್ಪಿಸಿಕೊಂಡುಬಿಟ್ಟರೆ, ಅಹಂಕಾರವು ವಿಜೃಂಭಿಸುತ್ತಾ ತನ್ನತನದ ಜೀವತ್ವವನ್ನು ಕಳೆದುಕೊಂಡು ಸಾಯಬೇಕಾಗುತ್ತದೆ. ಇನ್ನುಳಿದಂತೆ ಪಡೆವ ಗೌರವ ಮತ್ತು ವೈಭವಗಳೆಲ್ಲಾ ಶವಕ್ಕೆ ಮಾಡಿರುವ ಶೃಂಗಾರ.
ಶೂಲಕ್ಕಿರುವ ಅಲುಗುಗಳು.
ಮನಶಾಸ್ತ್ರಜ್ಞರು ಈ ಆತ್ಮರತಿಯರಿಮೆಯನ್ನು ಚಿಕಿತ್ಸೆ ನೀಡುವ ಸಲುವಾಗಿ ಗುರುತಿಸಲು ವಿಧಾನವೊಂದನ್ನು ಕೈಗೆತ್ತಿಕೊಳ್ಳುತ್ತಾರೆ. ಅದಕ್ಕೆ
The Narcissistic Personality Inventory (NPI) ಎಂದು ಹೆಸರಿಸುತ್ತಾರೆ. ಈ ಆತ್ಮರತಿಯರಿಮೆಗೆ ಯಾಕಿಷ್ಟು ತಲೆಕೆಡಿಸಿಕೊಳ್ಳಬೇಕೆಂದರೆ, ಇನ್ನು ನೀವು ಮುಂದೆ ಓದಲಿರುವ ಅನೇಕಾನೇಕ ಅರಿಮೆಗಳಿಗೆ ಇದು ತಾಯಿಯಂತೆ ಕಾಣುತ್ತದೆ. ಅನೇಕಾನೇಕ ಮಾನಸಿಕ ಸಮಸ್ಯೆಗಳಿಗೆ, ಗೀಳುಗಳಿಗೆ, ವ್ಯಸನಗಳಿಗೆ ಜನ್ಮ ಕೊಡುತ್ತದೆ. ಹಾಗಾಗಿಯೇ ಬುಡಮೂಲ ಚಿಕಿತ್ಸೆಯನ್ನು ಕೊಡಬೇಕೆಂದೋ ಅಥವಾ ಪಡೆಯಬೇಕೆಂದೋ ಬಯಸುವವರು ಈ ಆತ್ಮರತಿಯ ಅರಿಮೆಯನ್ನು ಅರಿತುಕೊಳ್ಳಲೇ ಬೇಕು.
ಇದು ಯಾವ್ಯಾವ ಆಯಾಮಗಳಲ್ಲಿ ಪ್ರಕಟಗೊಳ್ಳುತ್ತದೆ ಎಂದರೆ ಎಣಿಸಲಸದಳ. ಸಮಾಜಘಾತುಕನಾಗಿ, ಶೋಷಕನಾಗಿ, ಮೋಸಗಾರನಾಗಿ, ವಂಚಕನಾಗಿ ವ್ಯಕ್ತಿಯು ವರ್ತಿಸಬಹುದು. ಕಿಲಾಡಿಯಾಗಿ, ಕಾಮುಕತೆಯಿಂದ ಸಂಮೋಹಿಸುವವನಾಗಿ ಸೆಳೆಯಬಹುದು. ತಾನೊಬ್ಬ ಮಹಾ ಪ್ರಶಂಸನೀಯ ವ್ಯಕ್ತಿಯಾಗಿ, ಗಮನಾರ್ಹ ನಾಯಕನೆಂಬ ಭ್ರಮೆ ಹುಟ್ಟಿಸಿ, ಜನರನ್ನು ಸದಾ ಮೂರ್ಖರನ್ನಾಗಿಸುತ್ತಾ ನಯವಂಚಕ ಅಥವಾ ಕ್ರೂರಿ ಸರ್ವಾಧಿಕಾರಿಯನ್ನು ಇದು ಹುಟ್ಟಿಸಬಹುದು. ಆತ್ಮರತಿಯ ಅರಿಮೆಯು ತನ್ನ ಉತ್ಕಟ ಬಯಕೆಯನ್ನು ತೃಪ್ತಗೊಳಿಸಿಕೊಳ್ಳಲು ಯಾವ ಹಂತಕ್ಕೆ ಪ್ರಯಾಣಿಸುತ್ತದೆ ಎಂದು ಅದಕ್ಕೇ ತಿಳಿದಿರುವುದಿಲ್ಲ. ಆತ್ಮರತಿಯ ಶೂಲಕ್ಕೆ ಅದೆಷ್ಟು ಅಲುಗುಗಳಿರುವವೋ ಬಲ್ಲವರಾರು!
ಅಭಿಷಕ್ತ ಆತ್ಮರತಿ
ಇನ್ನೊಂದು ಬಗೆಯ ಆತ್ಮರತಿಯ ಅರಿಮೆ ಇದೆ. ಅದು ಜನಪ್ರಿಯತೆಯಿಂದ, ಗಳಿಸಿರುವ ಅಧಿಕಾರ ಅಥವಾ ಹಣದಿಂದ ಉಂಟಾಗುವುದು ಅಥವಾ ಇರುವುದು ಉಲ್ಬಣಗೊಳ್ಳುವುದು. ಸಾಧಾರಣವಾಗಿ ಇದ್ದೇ ಇರುವಂತಹ ಆತ್ಮರತಿಯು ದೊರಕಿದ ಖ್ಯಾತಿಯಿಂದಲೋ, ಹಣದಿಂದಲೋ, ಅಧಿಕಾರದಿಂದಲೋ ಮತ್ತಷ್ಟು ರೆಕ್ಕೆಪುಕ್ಕಗಳನ್ನು ಹೊಂದುವುದು.ಅದಕ್ಕೆ Acquired situational narcissism (ASN) ಎನ್ನುವರು. ನೀವು ನಿಮ್ಮ ಗೆಳೆಯರು ಬರಗೆಟ್ಟಾಗ ಒಟ್ಟೊಟ್ಟಾಗಿ ದೊರಕಿದ್ದನ್ನು ಗೋರಿಕೊಂಡು ಹಂಚಿ ಉಂಡಿರುತ್ತೀರಿ. ನಿಮ್ಮಲ್ಲೊಬ್ಬ ಹೇಗೋ ಏನೋ ಆರೋಪಿತ ಅದೃಷ್ಟದಿಂದ ಸೆಲೆಬ್ರಿಟಿಯಾಗಿಬಿಟ್ಟಿದ್ದಾನೆ. ಈಗ ಅವನು ನಿಮ್ಮ ಜೊತೆ ವ್ಯವಹರಿಸುವ ರೀತಿ ನೀತಿಗಳನ್ನು ನೋಡಿ. ನೀವು ಅವನ ಭುಜದ ಮೇಲೆ ಕೈ ಹಾಕಿ, ಬೆನ್ನಿಗೆ ಬಾರಿಸಿ ಮಾತಾಡಿಸಲು ಆಗುವುದಿಲ್ಲ. ಅದೇ ಹಿಂದಿನ ಸ್ಥಿತಿಯಲ್ಲಿರುವ ನೀವು ಅದೇ ಹಿಂದಿನ ರೀತಿಯಲ್ಲಿ ಮುಟ್ಟಿದರೆ ಅವನಿಗೆ ಇಕ್ಕಟ್ಟಿನಲ್ಲಿ ಸಿಲುಕಿದಂತಾಗುತ್ತದೆ. ಸಹಿಸಲಾಗುವುದಿಲ್ಲ. “ಯಾವಾಗ್ಲೂ ಒಂದೇನಾ?” ಅನ್ನುತ್ತಾನೆ.
ನಿಮಗೆ ಹಣದ ವಿಷಯದಲ್ಲಿ ಮತ್ತು ಖ್ಯಾತಿಯ ವ್ಯಾಪ್ತಿಯಲ್ಲಿ ಅವನು ಎಷ್ಟು ಎತ್ತರಕ್ಕೆ ಹೋದರೂ ನಿಮಗವನು ಸ್ನೇಹಿತನೇ ಎಂದು ನೀವು ಭಾವಿಸಲು ಯತ್ನಿಸುತ್ತೀರಿ. ಆದರೆ, ಅವನು ನಿಮ್ಮನ್ನು ನಿವಾರಿಸಿಕೊಳ್ಳಲು ಯತ್ನಿಸುವನು. ಏಕೆಂದರೆ ಅವನು ತಾನೆಂದರೆ ಒಂದು ಚಿತ್ರಣವೊಂದನ್ನು ಜನರಿಗೆ ಕಟ್ಟಿಕೊಟ್ಟಿರುತ್ತಾರೆ. ಆ ಗೌರವ, ಮಾನ್ಯತೆಗಳನ್ನು ನೀವು ನೀಡದೇ ಅವನ ಘನತೆಗೆ ಧಕ್ಕೆ ತರುತ್ತೀರೆಂದು ಅವನು ನಿಮ್ಮನ್ನು ಅವಾಯ್ಡ್ ಮಾಡುತ್ತಾನೆ.
ಸರಿ, ಅವನ ಆತ್ಮರತಿಯರಿಮೆಯು ಅವನನ್ನು ನಿಮ್ಮಿಂದ ದೂರಾಗಿಸಿದಂತೆ, ನಿಮ್ಮ ಆತ್ಮದರಿಮೆಯೂ ಕಡಿಮೆಯಿರುವುದಿಲ್ಲ. ತನ್ನ ವ್ಯಾಪ್ತಿ ಪ್ರದೇಶದಲ್ಲಿ, ತನಗೆ ಶ್ರೋತೃಗಳಾಗಿ, ಪ್ರೇಕ್ಷಕರಾಗಿ ದೊರಕಿರುವವರ ಮುಂದೆ ಆ ಸೆಲೆಬ್ರಿಟಿಯು ನಿಮ್ಮೊಡನಿದ್ದಾಗ ಅದೆಷ್ಟು ದೀನನಾಗಿದ್ದನು, ಎಷ್ಟು ನಿಮ್ಮಿಂದ ಪಡೆದಿದ್ದನೆಂದು ವಿವರ ಒಪ್ಪಿಸುವ ಮೂಲಕ ತನ್ನ ಉತ್ಕಟ ಬಯಕೆಯನ್ನು ತೃಪ್ತಿಗೊಳಿಸಿಕೊಳ್ಳಲು ಯತ್ನಿಸುತ್ತದೆ.
ಅವನ ಅಹಂಕಾರವನ್ನು ಖಂಡಿಸಲು ನಿಮ್ಮ ಅಹಂಕಾರ ವಿಜೃಂಭಿಸುತ್ತದೆ. ಇದೇ ಆತ್ಮರತಿಯ ಲೀಲೆ. ನಿಮಗೆ ಆಗ ಅವನು ಜೀವಂತವಿದ್ದ. ಈಗ ಅವನೆಷ್ಟೇ ವೈಭವದಲ್ಲಿ ಮೆರೆಯುತ್ತಿದ್ದರೂ ಸಾಗುತ್ತಿರುವ ಅಲಂಕರಿಸಲ್ಪಟ್ಟಿರುವ ಶವ! ಅವನಿಗೆ ನೀವು ಹಳೆಯ ಕೊಳೆ!
ನಾನೇನು ಖಾಲಿಪೀಲಿಯಲ್ಲ
ಆತ್ಮರತಿಯ ಸೆಲೆಬ್ರಿಟಿಯ ಶೋಕೇಸಿನಲ್ಲಿರುವ ಪ್ರದರ್ಶನಗಳ ಲೀಲೆ ಅಪಾರ. ಅವರು ಕಲಾವಿದರೇ. ಆದರೆ ಇತರ ಸ್ಟಾರ್ ಕಲಾವಿದರಿಗೆ ದೊರಕುವಷ್ಟು ಅವಕಾಶಗಳು ದೊರಕುವುದಿಲ್ಲ. ಅವರನ್ನು ಕರೆಯುವಷ್ಟು ಇವರನ್ನು ಸಮಾರಂಭಗಳಿಗೆ ಕರೆಯುವುದಿಲ್ಲ. ಆದರೂ ನೀವೇನಾದರೂ ಕಾರ್ಯಕ್ರಮಕ್ಕೋ ಅಥವಾ ನಿಮ್ಮದ್ಯಾವುದಾದರೂ ಯೋಜನೆಗೋ ಅವರಿಗೆ ಕರೆ ಮಾಡಿದರೆ, ತಕ್ಷಣ ಒಪ್ಪಿಕೊಳ್ಳುವುದಿಲ್ಲ. ಖಾಲಿ ಕುಳಿತಿದ್ದೇನೆ ಎಂದು ಹೇಳಲು ಅವರಿಗೆ ಆಗುವುದಿಲ್ಲ. ಡೈರಿ ನೋಡುತ್ತೇನೆ. ನಂತರ ಹೇಳುತ್ತೇನೆ. ನನಗೆ ಯಾವುದೋ ಕಾರ್ಯಕ್ರಮವಿದೆ ಅನಿಸುತ್ತದೆ. ಆಗುವುದಿಲ್ಲ ಅನಿಸುತ್ತದೆ. ಯಾವುದಕ್ಕೂ ಆ ಕಾರ್ಯಕ್ರಮದ ಆಯೋಜಕರಿಗೆ ಕರೆ ಮಾಡಿ ತಿಳಿದು ನಂತರ ತಿಳಿಸುವೆ. ಇದೆಲ್ಲಾ ಅವರ ಕೆಟ್ಟ ಬುದ್ಧಿಯ, ಹೀನ ಮನಸ್ಥಿತಿಯ ವರ್ತನೆಗಳು ಎಂದು ಖಂಡಿತ ಅಂದುಕೊಂಡು ಅವರನ್ನು ಖಂಡಿಸಬೇಡಿ ಅಥವಾ ನಿರಾಕರಿಸಬೇಡಿ. ಪಾಪ, ಅವರ ಅರಿವಿಗೇ ಎಟುಕದಂತೆ ವರ್ತಿಸಲು ಪ್ರಚೋದಿಸುವ ಅರಿಮೆಯ ಪ್ರಭಾವಗಳು.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

