ಬಹಿರಂಗ
ಕೋವಿದನ ನಡುವೆ – ಸುಳ್ಳು ಸುದ್ದಿಯ ವ್ಯಸನವೂ ಮಾಧ್ಯಮವೆಂಬೋ ವ್ಯಾಧಿಯೂ
- ನಾ ದಿವಾಕರ
ಸುದ್ದಿ ಎನ್ನುವುದೇ ಸತ್ಯ-ಮಿಥ್ಯೆಯ ಸಂಗಮ. ಏಕೆಂದರೆ ಅದು ಮನುಷ್ಯನನ್ನು ತಲುಪುವುದು ಬೇರೊಂದು ಮೂಲದಿಂದ. ಎಲ್ಲೋ ನಡೆದ ಒಂದು ವಿದ್ಯಮಾನ ಯಾವುದೋ ಒಂದು ಮೂಲದಿಂದ ನಮ್ಮ ಗಮನಕ್ಕೆ ಬಂದಾಗ ನಾವು ಅದನ್ನು ಸುದ್ದಿ, ವಾರ್ತೆ, ಸಮಾಚಾರ ಮುಂತಾದ ಹೆಸರುಗಳಿಂದ ಗುರುತಿಸುತ್ತೇವೆ. ಸುದ್ದಿಯ ಮೂಲ ಯಾವುದೆಂದು ತಿಳಿಯುವ ಗೋಜಿಗೆ ನಾವು ಹೋಗುವುದಿಲ್ಲ. ನಮಗೆ ತಲುಪಿದ ವಿಷಯ ಸತ್ಯವೋ ಮಿಥ್ಯೆಯೋ ಎಂದು ತಿಳಿಯಲೂ ಆಸಕ್ತಿ ತೋರುವುದಿಲ್ಲ. ನಮ್ಮ ಮನಸ್ಥಿತಿಗೆ ತಕ್ಕಂತೆ, ನಮ್ಮ ಆಲೋಚನೆಗೆ ಪೂರಕವಾಗಿ ನಮ್ಮ ಕಿವಿಗೆ ಬಿದ್ದ ಸಮಾಚಾರವನ್ನು ನಂಬುವುದು ಬಿಡುವುದು ಮಾಡುತ್ತೇವೆ.
ಸಂಪರ್ಕ ಮಾಧ್ಯಮಗಳೇ ಇಲ್ಲದ ಕಾಲದಲ್ಲಿ ಮಾನವ ಸಮಾಜ ಹೇಗೆ ನಿರ್ವಹಿಸಿರಬಹುದು ಎಂದು ಒಮ್ಮೆ ಯೋಚಿಸೋಣ. ಆಗ ಸುದ್ದಿ ಸಮಾಚಾರ ವಾರ್ತೆ ಇದಾವುದೂ ಇರಲಿಕ್ಕಿಲ್ಲ ಅಲ್ಲವೇ. ತಾವು ಕಣ್ಣಾರೆ ನೋಡಿದ್ದನ್ನು ಜನರು ತಮ್ಮನ್ನು ನೇರವಾಗಿ ಸಂಪರ್ಕಿಸುವವರೊಡನೆ ಹಂಚಿಕೊಳ್ಳುತ್ತಿದ್ದರು. ಅಲ್ಲಿ ವಿಷಯದ ವಿನಿಮಯ ಮಾತ್ರವೇ ಇತ್ತು, ವಿತರಣೆ, ಪ್ರಸರಣ ಇರುತ್ತಿರಲಿಲ್ಲ. ಮಾನವ ಸಮಾಜ ಹೆಚ್ಚು ವಿಸ್ತರಣೆಯಾಗದಿದ್ದ ಕಾಲದಲ್ಲಿ ಈ ವಿನಿಮಯವೂ ಸಹ ಸೀಮಿತ ಚೌಕಟ್ಟಿನಲ್ಲಿ ಮಾತ್ರವೇ ಇರುತ್ತಿತ್ತು. ಇದನ್ನು ಸಂದೇಶ ಎನ್ನಲಾಗುತ್ತಿತ್ತು ಸುದ್ದಿ ಎನ್ನುತ್ತಿರಲಿಲ್ಲ. ಏಕೆಂದರೆ ಇಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತ್ರವೇ ವಿಷಯ ಹರಿದಾಡುತ್ತಿತ್ತು. ಈ ಸಂದೇಶಕ್ಕೆ ಒಂದು ವ್ಯಾಪ್ತಿ ದೊರೆತಿದ್ದು ಅಕ್ಷರ ಮತ್ತು ಬರಹ ಒಂದಾದ ಸಂದರ್ಭದಲ್ಲಿ.
ಪಾರಿವಾಳಗಳ ಮೂಲಕ ತಮ್ಮ ಸಂದೇಶವನ್ನು ದೂರದಲ್ಲಿರುವ ತಮ್ಮ ನಿಕಟವರ್ತಿಗಳಿಗೆ ರವಾನಿಸುವ ಪರಂಪರೆಯ ಸಂದರ್ಭದಲ್ಲೂ ವಿನಿಮಯವಾಗುತ್ತಿದ್ದುದು ಪರಸ್ಪರ ಸಂಬಂಧಿತ ವಿಚಾರಗಳು ಮಾತ್ರ. ಇದನ್ನೂ ಸುದ್ದಿ ಎನ್ನಲಾಗುವುದಿಲ್ಲ. ಈ ಸುದ್ದಿ ಅಥವಾ ಸಮಾಚಾರ ಎಂಬ ವಿದ್ಯಮಾನಕ್ಕೆ ಪುಷ್ಟಿ ದೊರೆತದ್ದು ಬಹುಶಃ ರಾಜಪರಂಪರೆಯಲ್ಲಿ ಇದ್ದಿರಬಹುದು. ಅನ್ಯ ರಾಜ್ಯಗಳಲ್ಲಿ ಅಥವಾ ತಮ್ಮದೇ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಿಳಿದುಕೊಳ್ಳಲು ಸಾಮ್ರಾಟರು ತಮ್ಮ ಬೇಹುಗಾರರನ್ನು ವಿವಿಧ ಪ್ರಾಂತ್ಯಗಳಿಗೆ ಕಳುಹಿಸುವ ಪರಂಪರೆ ಸುದ್ದಿ-ಸಮಾಚಾರದ ಉಗಮಕ್ಕೆ ಕಾರಣವಾಯಿತೇನೋ ! ಇಲ್ಲಿ ಸುದ್ದಿಯ ಸತ್ಯಾಸತ್ಯತೆಯ ನಿಷ್ಕರ್ಷೆಗೆ ಸುದ್ದಿ ತರುವ ಬೇಹುಗಾರನ ನಿಷ್ಠೆ ಮತ್ತು ಬದ್ಧತೆಯೇ ಮೂಲ. ಅವನ ಪ್ರಾಮಾಣಿಕತೆಯೇ ಆಧಾರ.
ತನ್ನ ದೊರೆಗೆ ನಿಷ್ಠಾವಂತನಾದ ಬೇಹುಗಾರರಲ್ಲಿ ಎರಡು ವಿಧ. ಮೊದಲನೆಯದು ತನ್ನ ರಾಜನಿಷ್ಠೆಯನ್ನು ಪ್ರದರ್ಶಿಸಲು, ರಾಜನಿಗೆ ಇಷ್ಟವಾಗುವಂತೆ ಸುದ್ದಿಯನ್ನು ಅರುಹುವುದು. ತನ್ನ ದೊರೆಗೆ ಇಷ್ಟವಾಗದ ವಿಚಾರಗಳನ್ನು ಮರೆಮಾಚುವುದು, ಪ್ರಿಯವಾದುದನ್ನು ರಂಜನೀಯವಾಗಿ ಅರುಹುವುದು, ದೊರೆಯ ಆಕ್ರೋಶಕ್ಕೆ ಕಾರಣವಾಗುವ ವಿಚಾರವನ್ನು ಜಾಣ್ಮೆಯಿಂದ ಹೇಳುವುದು, ಇಲ್ಲವೇ ಹೇಳದೆಯೇ ಇರುವುದು, ಹೀಗೆ. ಈ ರೀತಿಯ ಸುದ್ದಿ ತರುವವರು ಸಾಮಾನ್ಯವಾಗಿ ರಾಜನಿಗೆ ಶತ್ರುಗಳನ್ನು ಸೃಷ್ಟಿಸುತ್ತಿದ್ದುದೇ ಹೆಚ್ಚು. ವ್ಯಕ್ತಿಗತವಾಗಿ ತಮಗೆ ಇಷ್ಟವಾಗದವರ ವಿರುದ್ಧ ರಾಜನ ಬಳಿ ಇಲ್ಲದ ವಿಷಯಗಳನ್ನು ಹೇಳುವ ಮೂಲಕ ಆಗಾಗ್ಗೆ ಸಣ್ಣಪುಟ್ಟ ಶತ್ರುಪಾಳಯಗಳನ್ನು ಸೃಷ್ಟಿಸುವ ಪರಂಪರೆಗೆ ದೀರ್ಘ ಇತಿಹಾಸವೇ ಇದೆ ಅಲ್ಲವೇ ?
ಎರಡನೆಯ ವಿಧ ಎಂದರೆ ತಮ್ಮ ಅಸ್ತಿತ್ವ, ಸ್ಥಾನಮಾನ ಉಳಿಸಿಕೊಳ್ಳಲು, ತಮ್ಮ ಸ್ವಂತ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ಸುದ್ದಿಯನ್ನು ತಿರುಚಿ ಹೇಳುವುದು ಇಲ್ಲವೇ ಇಲ್ಲದ ಸುದ್ದಿಯನ್ನು ಸೃಷ್ಟಿಸಿ ಹೇಳುವುದು.
ಇಂಥವರಿಗೆ ರಾಜನಿಷ್ಠೆ ಇರುತ್ತಿತ್ತು ಆದರೆ ರಾಜನಿಗೆ ಇವರ ಮೇಲಿರುತ್ತಿದ್ದ ವಿಶ್ವಾಸವೇ ಇವರ ಬಂಡವಾಳವಾಗುತ್ತಿತ್ತು. ದೊರೆ ತಾನು ಹೇಳಿದ್ದನ್ನು ನಂಬುತ್ತಾನೆ ಎನ್ನುವ ವಿಶ್ವಾಸವೇ ಇವರ ಸುದ್ದಿಮನೆಯ ಕುಲುಮೆಗೆ ಶಾಖ ನೀಡುತ್ತಿತ್ತು. ಇವರ ಭಟ್ಟಂಗಿತನ, ವಂದಿಮಾಗಧ ನಡೆ ರಾಜನ ದೃಷ್ಟಿಯಲ್ಲಿ ಪ್ರಾಮಾಣಿಕತೆ ಎನಿಸಿದರೂ, ಅದು ಅಪಾಯಕಾರಿಯಾಗಿ ಪರಿಣಮಿಸುತ್ತಿತ್ತು. ಆದರೆ ಇವರು ಮುಟ್ಟಿಸುತ್ತಿದ್ದ ಸುದ್ದಿ ರಾಜನನ್ನೂ ಸಂಪ್ರೀತಗೊಳಿಸುತ್ತಿತ್ತು. ಹಾಗಾಗಿ ಇವರ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುತ್ತಿರಲಿಲ್ಲ.
ದೊರೆಗೆ ಈ ಎರಡೂ ರೀತಿಯ ಸುದ್ದಿ ವಾಹಕರು ಪ್ರಿಯವಾಗಿಯೇ ಕಾಣುತ್ತಿದ್ದರು. ಏಕೆಂದರೆ ತನ್ನ ಸಾಮ್ರಾಜ್ಯದ ರಕ್ಷಣೆಗೆ ಇದು ಅತ್ಯವಶ್ಯವಾಗುತ್ತಿತ್ತು.
ರಾಜಪ್ರಭುತ್ವದ ಕಾಲದಲ್ಲೇ ಬಹುಶಃ ಸುಳ್ಳುಸುದ್ದಿಯ ವ್ಯಸನ ಉಗಮಿಸಿರಬೇಕು. ಹೊರ ರಾಜ್ಯದಿಂದ ಅಥವಾ ಶತ್ರು ಪಾಳಯದಿಂದ ಸತ್ಯವೋ ಸುಳ್ಳೋ ಯಾವುದೋ ಒಂದು ಸುದ್ದಿ ತರದಿದ್ದರೆ ಸುದ್ದಿವಾಹಕರು ದೊರೆಯ ಕೆಂಗಣ್ಣಿಗೆ ಗುರಿಯಾಗಬೇಕಿತ್ತು. ಬಹುಶಃ ಈ ಕಾಲಘಟ್ಟದಿಂದಲೇ ಸುದ್ದಿಮನೆಯ ಒಂದು ನಿರ್ದಿಷ್ಟ ಪರಿಕಲ್ಪನೆ ಮೂಡಿರಬೇಕು. ಈ ಪರಿಕಲ್ಪನೆಯ ಚೌಕಟ್ಟಿನಲ್ಲೇ ಸುಳ್ಳು ಸುದ್ದಿಯ ವ್ಯಸನವೂ ನೆಲೆ ಕಂಡಿರಬೇಕು.
ದೊರೆಗೆ ಏನಾದರೂ ಸುದ್ದಿ ಮುಟ್ಟಿಸಬೇಕು ಎನ್ನುವುದೇ ಸುದ್ದಿವಾಹಕರ ಆದ್ಯತೆಯಾಗಿರಲಿಕ್ಕೂ ಸಾಕು.
(ಇವಿಷ್ಟೂ ಇತಿಹಾಸದ ಆಕರಗಳನ್ನು ಆಧರಿಸಿ ಮಂಡಿಸಿದ ವಿಚಾರ ಅಲ್ಲ. ಹೀಗಿದ್ದಿರಬಹುದು ಎನ್ನುವ ಕಲ್ಪನೆ. ಇರಲೂಬಹುದಲ್ಲವೇ, ಇತಿಹಾಸದ ಅಧ್ಯಯನದಲ್ಲಿ ಗಮನಿಸಿರುವುದೇ ಆಗಿದೆ)
ಈಗ 21ನೆಯ ಶತಮಾನದ 3ನೆಯ ದಶಮಾನಕ್ಕೆ ಬರೋಣ. ಇಂದು ನಮಗೆ ಸುದ್ದಿ ಎನ್ನುವುದು ಮನೆಯ ಮಾತಿನಂತಾಗಿಬಿಟ್ಟಿದೆ. ಯಾವುದು ಸುದ್ದಿ, ಯಾವುದು ಸಂದೇಶ ಎಂಬ ವ್ಯತ್ಯಾಸವನ್ನೇ ಗ್ರಹಿಸಲಾರದಷ್ಟು ಮಟ್ಟಿಗೆ ಸಂಪರ್ಕ ಮತ್ತು ಸಂವಹನ ಮಾರ್ಗಗಳು ನಮ್ಮನ್ನು ಆವರಿಸಿಕೊಂಡುಬಿಟ್ಟಿವೆ. “ಆಕಾಶವಾಣಿ ವಾರ್ತೆಗಳು ಓದುತ್ತಿರುವವರು ಕೆ.ಎಸ್. ಪುರುಷೋತ್ತಮ್” ಅಥವಾ “ ಆಕಾಶವಾಣಿ ಪ್ರದೇಶ ಸಮಾಚಾರ ಓದುತ್ತಿರುವವರು ನಾಗಮಣಿ ಎಸ್ ರಾವ್ ” ಈ ದನಿಗಳನ್ನೊಮ್ಮೆ ನೆನಪಿಸಿಕೊಳ್ಳೋಣ. ಸುದ್ದಿ ಮತ್ತು ಸಂದೇಶದ ನಡುವಿನ ವ್ಯತ್ಯಾಸವನ್ನು ಅವರ ದನಿಗಳಲ್ಲಿ ಕಾಣಬಹುದಿತ್ತು. ಇಂದು ನಾವು ಆಕಾಶದಲ್ಲೇ ವಿಹರಿಸುತ್ತಿದ್ದೇವೆ ಆದರೆ ವಾಣಿ ಕಡಲ ಪಾಲಾಗಿದೆ.
ಹಾಗಾಗಿ ಸುದ್ದಿಮನೆಗಳೇ ಅನಿವಾರ್ಯ ಎನಿಸಿಬಿಟ್ಟಿದೆ. ಸುದ್ದಿಯ ವ್ಯಾಪ್ತಿ ಹೆಚ್ಚಾಗಿದೆ. ಆದರೆ ಮೂಲ ಸ್ವರೂಪ ಬದಲಾಗಿಲ್ಲ. ಆದರೆ ಸುದ್ದಿ ಮತ್ತು ಸಮಾಚಾರದ ಬಗ್ಗೆ ನಮ್ಮ ಗ್ರಹಿಕೆ ಕೊಂಚ ಬದಲಾದಂತಿದೆ. ನಾಲ್ಕೈದು ದಶಕಗಳ ಹಿಂದೆ ಪರಿಚಯಸ್ಥರು ಎದುರಾಗಿ ಏನ್ಸಮಾಚಾರ ಅಂದ್ರೆ ಏನಿಲ್ಲ ಎನ್ನುತ್ತಿದ್ದೆವು ಇಲ್ಲವಾದರೆ ನಮ್ಮನ್ನೇ ಕುರಿತು ಒಂದೆರಡು ಮಾತುಗಳನ್ನಾಡಿ ನಡೆಯುತ್ತಿದ್ದೆವು. ಈಗ ಏನ್ಸಮಾಚಾರ ಅಂದ್ರೆ ಸಾಕು ನೆಹರೂ ಅವರಿಂದ ಮೋದಿಯವರೆಗೆ, ಮೊಘಲರಿಂದ ಒಡೆಯರ್ ವರೆಗೆ ಮಾತಿನ ಲಹರಿ ಬೆಳೆಯುತ್ತದೆ. ಇತಿಹಾಸ, ವಿಜ್ಞಾನ, ಸುಜ್ಞಾನ, ಅಜ್ಞಾನ ಎಲ್ಲವನ್ನೂ ಮಾತನಾಡಿ ಕೊನೆಗೆ ಕೈ ಕುಲುಕಲೂ ಆಗದಷ್ಟು ಮನಸು ಭಾರ ಮಾಡಿಕೊಂಡು ಎರಡು ಧೃವಗಳತ್ತ ಮುಖ ಮಾಡಿ ಹೊರಟುಬಿಡುತ್ತೇವೆ. ಇದು ಸಾರ್ವತ್ರಿಕ ಸತ್ಯ ಅಲ್ಲ, ಆದರೆ ನಿರಾಕರಿಸುವ ವಿದ್ಯಮಾನವೂ ಅಲ್ಲ.
ಏಕೆ ಹೀಗೆ ? ಏಕೆಂದರೆ ಇಂದು ನಮಗೆ ಸುದ್ದಿ ಎಂದರೆ ನಮಗೆ ನೀಡಲಾಗುವ ಅಥವಾ ಒದಗಿಸಲಾಗುವ ಮಾಹಿತಿಯೇ ಹೊರತು, ನಾವು ಪ್ರತ್ಯಕ್ಷವಾಗಿ ನೋಡಿ ಪ್ರಮಾಣಿಸಿದ ಮಾಹಿತಿ ಅಲ್ಲ. ಹಾಗೊಮ್ಮೆ ನಾವು ನೋಡಿದ್ದುದೇ ಆದರೂ, ನಮ್ಮ ಕಣ್ಣೋಟವೇ ಸರಿಯಿಲ್ಲವೇನೋ ಎನ್ನುವ ಮಟ್ಟಿಗೆ ಸುದ್ದಿಮನೆಗಳು ಒಂದು ಘಟನೆಯನ್ನು ರುಬ್ಬಿ ರುಬ್ಬಿ ಚಟ್ನಿ ಮಸಾಲೆ ಮಾಡಿಬಿಟ್ಟಿರುತ್ತವೆ. ಸುದ್ದಿ ಮತ್ತು ಸಮಾಚಾರಗಳನ್ನು ಜನತೆಗೆ ತಲುಪಿಸುವ ಮುದ್ರಣ ಮಾಧ್ಯಮ ಯುಗದ ಕನಿಷ್ಟ ಪ್ರಜ್ಞಾವಂತಿಕೆಯನ್ನೂ ವಿದ್ಯುನ್ಮಾನ ಮಾಧ್ಯಮದ ಯುಗದಲ್ಲಿ ಕಾಣಲಾಗುತ್ತಿಲ್ಲ. ಏಕೆಂದರೆ ಬೆರಳ ತುದಿಯಲ್ಲಿ ಲಭಿಸುವ ಸುದ್ದಿಯನ್ನು ಕ್ಷಣಮಾತ್ರದಲ್ಲಿ ತಮ್ಮ ಪರದೆಯ ಮೇಲೆ ಬಿಂಬಿಸದೆ ಹೋದರೆ ಸುದ್ದಿಮನೆಯ ಅಸ್ತಿತ್ವಕ್ಕೆ ಕುಂದುಬರುತ್ತದೆ. ಮಾರುಕಟ್ಟೆಯಲ್ಲಿ ಮೌಲ್ಯ ಕುಸಿಯುತ್ತದೆ.
ಮತ್ತೊಮ್ಮೆ ಆಕಾಶವಾಣಿಯತ್ತ ನೋಡೋಣ. ಆಗಿನ ವಾರ್ತೆಗಳನ್ನು ಓದುತ್ತಿರುವವರ ಧ್ವನಿಯನ್ನು ಕೇಳಿಯೇ ದೇಶದಲ್ಲಿ ಏನೋ ಆಘಾತಕಾರಿ ಘಟನೆ ಸಂಭವಿಸಿದೆ, ಯಾರೋ ಮಹನೀಯರು ಮೃತಪಟ್ಟಿದ್ದಾರೆ ಎಂದು ಹೇಳಬಹುದಿತ್ತು. ಏಕೆಂದರೆ ಇಂತಹ ವಿಷಾದದ ಸುದ್ದಿಯನ್ನು ಓದುವಾಗ ಅವರ ಮೆಲುದನಿಯಲ್ಲಿ ವಿಷಾದದ ಎಳೆ ಕಂಡುಬರುತ್ತಿತ್ತು. ಇದನ್ನು ಈಗಿನ ಸುದ್ದಿಮನೆಗಳಲ್ಲಿ ಊಹಿಸಲು ಸಾಧ್ಯವೇ ? “ ಕೋರೋನಾದಿಂದ ಸತ್ತವರ ಸಂಖ್ಯೆ ಒಂದು ಲಕ್ಷ ದಾಟಿದೆ ” ಎಂದು ಏರುದನಿಯಲ್ಲಿ ಹೇಳುವ ನಿರೂಪಕಿಯ ಮುಖಭಾವವನ್ನು ನೋಡಿದರೆ, ಏನೋ ಸಂಭ್ರಮ ಮನೆಮಾಡಿದಂತೆ ಕಾಣುತ್ತದೆ.
ಇಲ್ಲಿ ಸಂಯಮ ಮತ್ತು ಸಂವೇದನೆಯ ಕೊರತೆ ಎದ್ದು ಕಾಣುತ್ತದೆ. ಇದರ ನೇರ ಪರಿಣಾಮವೇ ಈ ಸುದ್ದಿಮನೆಗಳನ್ನು ಆವರಿಸಿರುವ ಸುಳ್ಳು ಸುದ್ದಿಯ ವ್ಯಸನ. ಇಲ್ಲಿ ಪುನಃ ರಾಜಪ್ರಭುತ್ವಕ್ಕೆ ಮರಳೋಣ. ಇಂದಿನ ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಗೂ, ಅಂದಿನ ರಾಜಪ್ರಭುತ್ವಕ್ಕೂ ವ್ಯತ್ಯಾಸವೇನಾದರೂ ಇದ್ದರೆ ಅದು ಆಯ್ಕೆ ಪ್ರಕ್ರಿಯೆಯಲ್ಲಿ ಮಾತ್ರ ಎನ್ನುವುದನ್ನು ತಾತ್ವಿಕವಾಗಿಯಾದರೂ ಒಪ್ಪಲೇಬೇಕು. ಏಕೆಂದರೆ ಎಷ್ಟೇ ಪ್ರಜಾಸತ್ತಾತ್ಮಕ ಧೋರಣೆಯನ್ನು ಅನುಸರಿಸಿದರೂ ಆಡಳಿತಾರೂಢ ಸರ್ಕಾರಗಳು ಗತಕಾಲದ ಸಾಮ್ರಾಟರನ್ನೇ ಹೋಲುವಂತೆ ವರ್ತಿಸುತ್ತಿರುವುದನ್ನು ಭಾರತದಲ್ಲಂತೂ ಕಾಣುತ್ತಲೇ ಬಂದಿದ್ದೇವೆ. ದೊರೆ ಬದಲಾಗುತ್ತಾನೆ, ರಾಜಗೃಹದ ಲಕ್ಷಣಗಳು ಬದಲಾಗುವುದಿಲ್ಲ. ಪ್ರಭುತ್ವದ ಲಕ್ಷಣಗಳೂ ಬದಲಾಗುವುದಿಲ್ಲ.
ಇಲ್ಲಿ ರಾಜಪ್ರಭುತ್ವ ಕಾಲದ ಸುದ್ದಿವಾಹಕರತ್ತ ನೋಡೋಣ. ಎರಡೂ ವಿಧದ ಸುದ್ದಿವಾಹಕರು ಇಂದಿಗೂ ಇದ್ದಾರೆ ಅಲ್ಲವೇ ? ಆಗ ದೊರೆಗೆ ಸುದ್ದಿ ತಲುಪಿಸುತ್ತಿದ್ದರು. ಈಗ ದೊರೆಗೆ ಬೇಕಾದಂತೆ ಜನತೆಗೆ ಸುದ್ದಿ ತಲುಪಿಸುತ್ತಾರೆ. ದೊರೆಯ ಸಂತೃಪ್ತಿಯೇ ತಮ್ಮ ಆತ್ಮತೃಪ್ತಿ ಎಂದು ಭಾವಿಸುವ ಒಂದು ಪಡೆ, ತಮ್ಮ ಅಸ್ತಿತ್ವ ರಕ್ಷಣೆಗಾಗಿ ದೊರೆಯನ್ನು ಹೇಗಾದರೂ ತೃಪ್ತಿಪಡಿಸುವ ಮತ್ತೊಂದು ಪಡೆ ಎರಡೂ ಆಯಾಮಗಳಲ್ಲಿ ನಾವಿಂದು ಅತ್ಯಾಧುನಿಕ ಸುದ್ದಿಮನೆಗಳನ್ನು ನೋಡುತ್ತಿದ್ದೇವೆ. ಇದರಿಂದ ಹೊರತಾದ ಮತ್ತೊಂದು ಆಯಾಮವೂ ಇದ್ದರೂ, ಅದು ಆಡಳಿತಾರೂಢ ಪಕ್ಷವನ್ನು ಅವಲಂಬಿಸುತ್ತದೆ. ಅಂದರೆ ವ್ಯವಸ್ಥೆಯ ವಿರುದ್ಧ, ಪ್ರಭುತ್ವದ ವಿರುದ್ಧ ಮಾತನಾಡುವ ಸುದ್ದಿಮನೆ ಇರುವುದು ಊಹಿಸಲಸಾಧ್ಯ .
ರಾಜಪ್ರಭುತ್ವದ ಲಕ್ಷಣಗಳನ್ನು ರಾಜಭವನಗಳಲ್ಲಿ ಕಾಣಲಾಗದಿದ್ದರೂ ಈ ಸುದ್ದಿಮನೆಗಳ ಮೂಲಕ ಕಾಣಬಹುದು.
ಇಂದಿನ ವಿದ್ಯುನ್ಮಾನ ಮಾಧ್ಯಮ ಮತ್ತು ಕೊಂಚಮಟ್ಟಿಗೆ ಮುದ್ರಣ ಮಾಧ್ಯಮಗಳ ಸುಳ್ಳುಸುದ್ದಿಯ ವ್ಯಸನಕ್ಕೆ ಇದೇ ಮೂಲ ಕಾರಣ. ಸುದ್ದಿಮನೆಗಳು ಸುದ್ದಿ ಸಮಾಚಾರವನ್ನು ಸತ್ಯಸಂಧರಂತೆ ಜನತೆಗೆ ಮುಟ್ಟಿಸಲು ಸ್ಥಾಪನೆಯಾಗುತ್ತಿಲ್ಲ. ಆಳುವ ವರ್ಗಗಳಿಗೆ ಅಥವಾ ಆಡಳಿತಾರೂಢ ಪಕ್ಷಗಳಿಗೆ ಅನುಕೂಲವಾಗುವಂತೆ ಸುದ್ದಿಯನ್ನು ಜನರ ಬಳಿ ಕೊಂಡೊಯ್ಯಲು ಸ್ಥಾಪನೆಯಾಗುತ್ತಿವೆ. ಹಾಗಾಗಿ ಜನರಿಗೆ ಏನು ಬೇಕು ಎನ್ನುವುದು ಇಲ್ಲಿ ಪ್ರಸ್ತುತ ಎನಿಸುವುದೇ ಇಲ್ಲ. ನಾವು ಕೊಟ್ಟಿದ್ದನ್ನು ಜನರು ಸ್ವೀಕರಿಸುತ್ತಾರೆ ಎನ್ನುವ ಊಳಿಗಮಾನ್ಯ ಧೋರಣೆಯೇ ಪ್ರಧಾನವಾಗುತ್ತದೆ. ಇದು ಸಮಾಚಾರಗಳಿಂದ ಧಾರಾವಾಹಿಯವರೆಗೂ ಸತ್ಯ. ನಿಮ್ಮ ಮೆಚ್ಚಿನ ಚಿತ್ರಗೀತೆ ಕಾರ್ಯಕ್ರಮವನ್ನು ಆಕಾಶವಾಣಿಯಲ್ಲಿ ಕೇಳುತ್ತಿದ್ದೆವು, ಇದು ಇಲ್ಲಿ ಸಾಧ್ಯವೇ ? ಇಲ್ಲ ಅಲ್ವಾ.
ರಾಜಪ್ರಭುತ್ವದ ಕಾಲದಲ್ಲಿ ಸುದ್ದಿವಾಹಕನ ಸುದ್ದಿ ಕೇಳಿ ರಾಜ ಸಂಪ್ರೀತನಾದರೆ ಮಡಿಲಿಗೆ ವರಹಗಳನ್ನು ಸುರಿಯತ್ತಿದ್ದ. ಈಗ ಜಾಹೀರಾತು ಅಥವಾ ಇನ್ನಿತರ ಮಾರುಕಟ್ಟೆ ರೂಪದ ವರಹಗಳನ್ನು ಸುರಿಯಲಾಗುತ್ತದೆ. ಈ ದಕ್ಷಿಣೆಗೆ ಪ್ರತಿಯಾಗಿ ಸುದ್ದಿಮನೆಗಳು ಏನು ಮಾಡಬೇಕು. ಸುಳ್ಳನ್ನೂ ಸತ್ಯ ಎಂದು ಜನರು ನಂಬುವ ಹಾಗೆ ಸುದ್ದಿಯನ್ನು ಸಿದ್ಧಪಡಿಸಬೇಕು. ಅದಕ್ಕಾಗಿಯೇ ಆ ಏರುದನಿಯ ನಿರೂಪಕರನ್ನೂ ತಯಾರಿಸಲಾಗುತ್ತದೆ. ಸತ್ಯವನ್ನು ಸುಳ್ಳು ಎಂದು ಬಿಂಬಿಸುವುದು, ಸುಳ್ಳನ್ನು ಸತ್ಯ ಎಂದು ಬಿಂಬಿಸುವುದು ಎರಡೂ ಪ್ರಕ್ರಿಯೆಗಳು ಒಟ್ಟೊಟ್ಟಿಗೇ ಸಾಗಲು ಆಧುನಿಕ ತಂತ್ರಜ್ಞಾನದ ಸಂವಹನ ಮಾಧ್ಯಮಗಳು ನೆರವಾಗುತ್ತವೆ. ಬೆರಳತುದಿಯಲ್ಲಿರುವ ಸುದ್ದಿಯನ್ನು ಕೂಡಲೇ ಬಿತ್ತರಿಸಿ, ನಾವೇ ಮೊದಲು ಎಂದು ಘೋಷಿಸಿದ ಕೂಡಲೇ ನೋಡುಗರಲ್ಲಿ ವಿಶ್ವಾಸ ಮೂಡುವುದು ಸಹಜ.
ಈ ಸುದ್ದಿಮನೆಗಳನ್ನು ನೋಡಿ ಸುದ್ದಿಯನ್ನು ನಂಬುವ ಜನರ ಮುಂದೆ ಬೇರೆ ಆಯ್ಕೆ ಇದೆಯೇ ? ಖಂಡಿತವಾಗಿಯೂ ಇದೆ. ಮುದ್ರಣ ಮಾಧ್ಯಮಗಳು ಸ್ವಲ್ಪಮಟ್ಟಿಗೆ ವಾಸಿ. ದೂರದರ್ಶನ ವಾರ್ತೆಗಳೂ ಇವೆ. ಆದರೆ ಆಧುನಿಕ ಸಮಾಜ, ವಿಶೇಷವಾಗಿ ಮಧ್ಯಮ ವರ್ಗಗಳು ಮತ್ತು ಶ್ರೀಮಂತ ವರ್ಗಗಳಿಗೆ ಭೋಗದ ವ್ಯಸನ ಹೆಚ್ಚಾಗಿದೆ. ಹಿಂಬದಿಯ ಪರದೆ, ಒಂದು ಮೇಜು, ತಾಲ್ಲೂಕು ಕಚೇರಿಯಲ್ಲಿರುವಂತಹ ವಾತಾವರಣದಲ್ಲಿ ಸುದ್ದಿವಾಹಕರು ಕುಳಿತು ಸುದ್ದಿ ಓದಿದರೆ ಈ ವರ್ಗಗಳಿಗೆ ರುಚಿಸುವುದಿಲ್ಲ. ರಂಜನೀಯವಾಗಿರಬೇಕು, ಪ್ರತಿ ವಾಕ್ಯದ ಹಿನ್ನೆಲೆಯಲ್ಲಿ ವಾದ್ಯಗಳ ಅಬ್ಬರ ಬೇಕು, ಗ್ರಾಫಿಕ್ಸ್ ಇರಬೇಕು, ಒಂದೇ ಪರದೆಯಲ್ಲಿ ಹತ್ತಾರು ಸುದ್ದಿಗಳು ಚಿಂದಿ ಚಿಂದಿಯಾಗಿ ಕಾಣಬೇಕು. ಹೀಗೆ ಸಮಾಜದ ಈ ಅವಲಕ್ಷಣಗಳಿಗೆ ಸುದ್ದಿಮನೆಗಳು ಸ್ಪಂದಿಸಲು ಸದಾ ಸಿದ್ಧವಾಗಿರುತ್ತವೆ.
ಈ ಬೌದ್ಧಿಕ ದಾರಿದ್ರ್ಯದ ನೆಲೆಯಲ್ಲೇ ಭಾರತದ ಸುದ್ದಿಮನೆಗಳನ್ನು ಸುಳ್ಳುಸುದ್ದಿಯ ವ್ಯಸನ ಕಾಡುತ್ತಿದೆ. ಸಮಾಜಮುಖಿ ಪ್ರಾಮಾಣಿಕ ವರದಿಗಾರರಿಗೆ ಜಾಗವೇ ಇಲ್ಲದಂತಹ ವಾತಾವರಣ ಮುದ್ರಣ ಮಾಧ್ಯಮಗಳಲ್ಲೂ ಸೃಷ್ಟಿಯಾಗುತ್ತಿದೆ. ಇಲ್ಲಿ ಪ್ರಗತಿಪರತೆ, ಪ್ರತಿಗಾಮಿತನ ಎನ್ನುವುದಕ್ಕಿಂತಲೂ ಮಾಧ್ಯಮಗಳ ಸಮಾಜೋ ರಾಜಕೀಯ ಹೊಣೆಗಾರಿಕೆ ಮುಖ್ಯವಾಗುತ್ತದೆ. ಪಕ್ಷ ರಾಜಕಾರಣವನ್ನು ಹೊರಗಿಟ್ಟು ನೋಡಿದಾಗ ಇದು ಅರ್ಥವಾಗುತ್ತದೆ. ಮಾಧ್ಯಮಗಳು ಯಾವುದೇ ರಾಜಕೀಯ ಸಿದ್ಧಾಂತ ಅಥವಾ ಮತಧಾರ್ಮಿಕ ತತ್ವಗಳಿಗೆ ಬದ್ಧವಾಗಿರಬೇಕಿಲ್ಲ. ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭ ಎನಿಸಿಕೊಂಡಿರುವ ಈ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸ ಇದೆ ಎನ್ನುವ ಸಾಮಾನ್ಯ ಪ್ರಜ್ಞೆ ಇದ್ದರೆ ಸಾಕು. ತುರ್ತುಪರಿಸ್ಥಿತಿಯ ಸಂದರ್ಭವನ್ನು ಒಮ್ಮೆ ತಿರುಗಿ ನೋಡಿದರೂ ಸಾಕು.
ಆದರೆ ಹಣಕಾಸು ಬಂಡವಾಳದ ಮಾರುಕಟ್ಟೆ ವ್ಯವಸ್ಥೆಯಲ್ಲಿ ಪ್ರಪಂಚದ ಯಾವುದೇ ವಿದ್ಯಮಾನವೂ ಈ ವ್ಯೂಹದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮಾಧ್ಯಮ ಕ್ಷೇತ್ರವೇ ಮಾರುಕಟ್ಟೆಗೆ ಶರಣಾಗಿಬಿಟ್ಟಿದೆ. ಆಡಳಿತ ಯಂತ್ರವನ್ನು ನಿಯಂತ್ರಿಸುವ ಕಾರ್ಪೋರೇಟ್ ಕೈಗಳೇ ಮಾಧ್ಯಮಗಳನ್ನೂ ನಿಯಂತ್ರಿಸುತ್ತವೆ. ಒಂದು ಸುದ್ದಿ ಪತ್ರಿಕೆ ಇಂದು ಬದುಕುಳಿಯಬೇಕಾದರೆ, ಆಳುವ ವರ್ಗಗಳ ಕೃಪಾಕಟಾಕ್ಷಕ್ಕಾಗಿ ಕೈಚಾಚಬೇಕಾದ ಪರಿಸ್ಥಿತಿ ಎದುರಾಗಿದೆ. ಮಾಧ್ಯಮ ಲೋಕದ ಸ್ವಾಯತ್ತತೆ ಮತ್ತು ಸ್ವಂತಿಕೆಯ ಬಗ್ಗೆ ಚರ್ಚೆ ನಡೆಸುವ ಕಲ್ಪನೆ ಈಗಾಗಲೇ ಇತಿಹಾಸದ ಕಸದಬುಟ್ಟಿ ಸೇರಿದೆ. ದುರಂತ ಎಂದರೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು ತಮ್ಮ ಮಾನ ಹರಾಜು ಹಾಕಿಕೊಳ್ಳಲು ಕೊರೋನಾ ಸಂದರ್ಭವನ್ನು ಬಳಸಿಕೊಂಡಿವೆ.
ಕೊರೋನಾ-ಕೋವಿದ್ 19 ಸುದ್ದಿಮನೆಗಳ ಜವಾಬ್ದಾರಿ ಮತ್ತು ಉತ್ತರದಾಯಿತ್ವವನ್ನು ಹೆಚ್ಚಿಸಬೇಕಿತ್ತು. ಇಡೀ ದೇಶವೇ ಆತಂಕಕ್ಕೊಳಗಾಗಿರುವ ಸಂದರ್ಭದಲ್ಲಿ ಸುದ್ದಿಮನೆಗಳಲ್ಲಿ ತಯಾರಾಗುವ ಪ್ರತಿಯೊಂದು ಸುದ್ದಿಯೂ ಜನಮಾನಸದಲ್ಲಿನ ಆತಂಕಗಳನ್ನು ದೂರ ಮಾಡಿ, ಸಮಾಜದಲ್ಲಿನ ಅಂತರಗಳನ್ನು ಕಡಿಮೆ ಮಾಡಿ, ಸಮಸ್ತ ಭಾರತೀಯ ಪ್ರಜೆಗಳ ಐಕಮತ್ಯ ಸಾಧಿಸುವಂತಿರಬೇಕಿತ್ತು. ಆದರೆ ಇದಕ್ಕೆ ತದ್ವಿರುದ್ಧವಾದುದನ್ನು ನಾವಿಂದು ಕಾಣುತ್ತಿದ್ದೇವೆ. ದೈಹಿಕ ಅಂತರ ಕಾಪಾಡಿಕೊಳ್ಳುತ್ತಿರುವ ಜನರ ನಡುವೆ ಸಾಮುದಾಯಿಕ ಅಂತರವನ್ನು ಹೆಚ್ಚಿಸಿರುವುದು ಮಾಧ್ಯಮಗಳ ಹೆಗ್ಗಳಿಕೆ.
ಈ ಕ್ಷಣದ ಮಾರುಕಟ್ಟೆ ಮೌಲ್ಯ ವೃದ್ಧಿಗೆ ಸುಳ್ಳು ಸುದ್ದಿಗಳು ನೆರವಾಗುತ್ತಿವೆ. ಇತ್ತ ದೊರೆಗಳೂ ಸಂಪ್ರೀತರಾಗುತ್ತಾರೆ. ಸೂಕ್ತ ದಕ್ಷಿಣೆಯೂ ದೊರೆಯುತ್ತದೆ. ನಾಳೆ ಕ್ಷಮೆ ಕೋರಿದರೂ, ಬಾಚಿಕೊಂಡ ಲಾಭ ಭಂಡಾರ ಸೇರಿರುತ್ತದೆ. ಅರ್ನಾಬ್ ಗೋಸ್ವಾಮಿ ಮತ್ತು ಇವರ ಶಿಷ್ಯ ವೃಂದಕ್ಕೆ ಈ ತಂತ್ರ ಚೆನ್ನಾಗಿಯೇ ತಿಳಿದಿದೆ.
ಕೋವಿದ್ 19 ಭಾರತವನ್ನು ಎಲ್ಲ ರೀತಿಯಲ್ಲೂ ಬೆತ್ತಲೆ ಮಾಡಿದೆ. ಮಾಧ್ಯಮ ಮತ್ತು ಸುದ್ದಿಮನೆಗಳು ಅಪವಾದವಾಗಬೇಕಿಲ್ಲ. ಸುದ್ದಿಮನೆಗಳ ಸುಳ್ಳು ಸುದ್ದಿಯ ವ್ಯಸನ ಸಮಾಜದಲ್ಲಿ ಸೃಷ್ಟಿಯಾಗಿದ್ದ, ಸೃಷ್ಟಿಯಾಗಬಹುದಿದ್ದ ಸೌಹಾರ್ದತೆಯನ್ನೂ ಹಾಳುಗೆಡಹಿವೆ. ಭೋ ಪರಾಕ್ ಹೇಳುವ ವಂದಿಮಾಗಧ ಸಂಸ್ಕøತಿಯಿಂದ ಭಾರತ ಬಹುದೂರ ಸಾಗಿ ಬಂದಿದೆ.
ಆದರೆ ಸುದ್ದಿಮನೆಗಳಲ್ಲಿ ಈ ಸಂಸ್ಕೃತಿ ನಿರಂತರವಾಗಿ ನಡೆದುಬಂದಿದೆ. ಏಕೆಂದರೆ ರಾಜಪ್ರಭುತ್ವದ ಪಳೆಯುಳಿಕೆಗಳನ್ನು ನಾಶಪಡಿಸಲು ನಮ್ಮಿಂದ ಸಾಧ್ಯವಾಗಿಲ್ಲ, ಸಾಧ್ಯವಾಗುತ್ತಿಲ್ಲ. ಆದರೆ ಸಾಧ್ಯವಿದೆ ಎನ್ನುವ ಭರವಸೆಯನ್ನು ಕೊರೋನಾ ಮೂಡಿಸಿದೆ.
ಪ್ರಭುತ್ವ ಮತ್ತು ಪ್ರಭುತ್ವವನ್ನು ಪೋಷಿಸುವ ಎಲ್ಲ ಸಾಂಸ್ಥಿಕ ನೆಲೆಗಳೂ ಬೆತ್ತಲಾಗುತ್ತಿರುವ ಈ ಸಂದರ್ಭದಲ್ಲಿ ಸುಳ್ಳುಸುದ್ದಿಯ ವ್ಯಸನಕ್ಕೆ ಒಳಗಾದ ಮಾಧ್ಯಮಗಳು ಸರ್ವವ್ಯಾಪಿ ಕೊರೋನಾಗಿಂತಲೂ ಭೀಕರ ವ್ಯಾಧಿಯಂತೆ ಕಂಡುಬಂದರೆ ಅಚ್ಚರಿಯೇನಿಲ್ಲ.
ಈ ವ್ಯಾಧಿಯನ್ನು ಹೋಗಲಾಡಿಸಲು ಬೇಕಿರುವುದು ಸಾಮಾಜಿಕ ಪ್ರಜ್ಞೆ ಮತ್ತು ನಾಗರಿಕ ಸಂವೇದನೆ. ನಮ್ಮ ಸಮಾಜದಲ್ಲಿ ಇದು ಇನ್ನೂ ಉಳಿದಿದೆ ಎನ್ನುವುದೊಂದೇ ಆಶಾದಾಯಕ ಸಂಗತಿ. ಈ ಸಂವೇದನೆಯ ಕೊಂಡಿಗಳನ್ನು ಬೆಸೆಯುವ ಮೂಲಕ ನಾವು ಮತ್ತೊಂದು ಹೊಸ ಲೋಕವನ್ನು ಸೃಷ್ಟಿಸಬಹುದಲ್ಲವೇ ? ಸುಳ್ಳು ಸುದ್ದಿಯ ವ್ಯಸನಕ್ಕೆ ಮದ್ದು ಇದೆಯೇ ? ಕೊರೋನಾ ನೆರವಾಗುವುದಿಲ್ಲ. ಕೊರೋನಾ ನಂತರದ ದಿನಗಳಲ್ಲಿ ಇದು ಸಾಧ್ಯ. ನಮ್ಮ ನಡುವಿನ ಮಾಧ್ಯಮ ಎನ್ನುವ ವ್ಯಾಧಿಯನ್ನು ಕೊನೆಗೊಳಿಸಲು ಕೊರೋನಾ ಇರಲಿ ಎಂದು ಬಯಸುವುದು ಬೇಡ. ಕೊರೋನಾ ಹೋಗಲಿ, ನಾವು ಇರುತ್ತೇವೆ ಅಲ್ಲವೇ ?
(ವಿಸೂ : ಇಲ್ಲಿ ಮಾಧ್ಯಮ ಎಂದರೆ ಮುಖ್ಯವಾಹಿನಿಯ ಮಾಧ್ಯಮಗಳು ಮಾತ್ರ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ2 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ14 hours ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ

