ಅಂತರಂಗ
ಅರಿಮೆಯ ಅರಿವಿರಲಿ – 18 : ಅಮೌಲ್ಯದ ಮೌಲ್ಯ ಮಾಪನ
- ಯೋಗೇಶ್ ಮಾಸ್ಟರ್
ಈ ಬಲಿದಾನದರಿಮೆಯು ಮೊಳೆಯುವುದು ಹೇಗೆ? ಕೆಲವರು ಬಲಿಗಂಬಕ್ಕೆ ತಮ್ಮನ್ನು ತಾವು ಬಲಿಪಶುವನ್ನಾಗಿಸಿಕೊಂಡು ನಡೆದರೆ, ಮತ್ತೆ ಕೆಲವರು ತಮ್ಮನ್ನು ತಾವು ಗೆಲುವ ನಾಯಕರನ್ನಾಗಿಸಿಕೊಂಡು ನಡೆಯುತ್ತಾರೆ. ಏಕೆ ಹೀಗೆ?ಬಹಳ ಗಂಭೀರವಾಗಿ ಗಮನಿಸಬೇಕು ಮತ್ತು ಅನುಕಂಪದಿಂದ ವಿಷಯವನ್ನು ಗ್ರಹಿಸಬೇಕು.
ಸಾಮಾನ್ಯವಾಗಿ ಅರಿಮೆಗಳು ಮೊಳೆಯುವುದು ಮತ್ತು ಬೆಳೆಯುವುದು ಬಾಲ್ಯದಲ್ಲಿಯೇ. ಕೆಲವು ಅರಿಮೆಗಳು ಅಂಕುರಿಸಿ ಸಹಜವಾದ ಅರಿವು ಬರುತ್ತಾ ಅಳಿಸಿ ಹೋಗುತ್ತವೆ. ಮತ್ತೆ ಕೆಲವು ಮೊಳೆತು ಬೆಳೆದು ಬಲಿತು ಬೆಳೆ ನೀಡುತ್ತವೆ. ಈ ಬಲಿದಾನದರಿಮೆಯೂ ಕೂಡಾ ಸಾಮಾನ್ಯವಾಗಿ ಬಾಲ್ಯದಲ್ಲಿ ತಂದೆ ತಾಯಿಗಳಿಂದ ಸಿಗುವಂತಹ ಬಳುವಳಿಯೇ. ಕುಟುಂಬದ ಹಿರಿಯರ ದ್ವಂದ್ವ ಮತ್ತು ಮಿಶ್ರವರ್ತನೆಗಳು, ಅವರು ಪ್ರತಿಪಾದಿಸುವ ಮೌಲ್ಯಗಳು ಕಾರಣವಾಗುತ್ತವೆ.
ಸುಮ್ಮನೆ ಹೀಗಂತ ಅಂದುಕೊಳ್ಳಿ; ನಿಮ್ಮ ತಾಯಿಯು ಏನೋ ಓದಬೇಕು ಮತ್ತು ಉದ್ಯೋಗದಲ್ಲಿ ಪ್ರಗತಿ ಕಾಣಬೇಕು ಎಂದು ಕನಸಿರುತ್ತಾರೆ. ಆದರೆ ಅದು ಆಗದೇ ಕನಸನ್ನು ಕನವರಿಸಿಕೊಂಡೇ, ಅದನ್ನು ತಾಂತ್ರಿಕವಾಗಿ ತ್ಯಾಗ ಮಾಡಿದ್ದು ನಿಮಗಾಗಿ ಮನೆಯಲ್ಲಿ ಗೇಯುತ್ತಿರುತ್ತಾರೆ. ಹಾಗೆ ಹೆಣಗುವುದು ಒಂದು ಮೌಲ್ಯವೆಂದು ಬೇರೆ ಭಾವಿಸಿರುತ್ತಾರೆ. ಹೆಣ್ಣಾದವಳು ಈ ಬಗೆಯ ತ್ಯಾಗಗಳಿಗೆ ಅಣಿಯಾಗಿರಲೇ ಬೇಕು ಎಂದು ಭಾವಿಸಿರುತ್ತಾರೆ. ಅದು ಅವರಿಗೆ ಮೌಲ್ಯ. ಸಾಲದಕ್ಕೆ ಹೆಣ್ಣಿಗೆ ಬಿರುದು ಬಾವಲಿಗಳನ್ನಿತ್ತು ಅವಳನ್ನು ತ್ಯಾಗಕ್ಕೆ ಸಜ್ಜುಗೊಳಿಸಿರುತ್ತಾರೆ. ಹೆಣ್ಣು ಸಂಸಾರದ ಕಣ್ಣು. ಅವಳಿಗೆ ಭೂಮಿಯಷ್ಟು ಸಹನೆ. ಅದೂ ಇದೂ ಪರಾಕುಗಳ ಒಂದು ಪಟ್ಟಿ. ಆ ಪಟ್ಟಿಯನ್ನು ಆಕೆಯ ಒಳಮನಸ್ಸು ಬಾಯಿಪಾಠ ಮಾಡಿಕೊಂಡಿದ್ದು ಅದಕ್ಕೆ ತಕ್ಕುದಾಗಿ ನಡೆದುಕೊಳ್ಳಲು ಯತ್ನಿಸುತ್ತಿರುತ್ತಾಳೆ. ಅವಳ ವೈಯಕ್ತಿಕ ಬಯಕೆಗಳೂ ಭುಗಿಲೆದ್ದು ಕುಣಿಯುತ್ತಿರುತ್ತವೆ.
ಈ ಎರಡರ ತಾಕಲಾಟದಲ್ಲಿ ಸ್ವಭಾವತಃ ಮೃದು ಅಥವಾ ದುರ್ಬಲ ಮನಸ್ಕರಾದರೆ ವ್ಯವಸ್ಥೆ ಮತ್ತು ಪರಿಸ್ಥಿತಿಗಳ ಕೈ ಮೇಲಾಗುತ್ತದೆ. ಅವರು ಬಲಿದಾನದರಿಮೆಯ ನೇರ ಬಲಿಪಶುಗಳಾಗಿರುತ್ತಾರೆ. ಈ ಘನವೆತ್ತ ತ್ಯಾಗದ ಪರಂಪರೆಯನ್ನು ನೀವೂ ಕೂಡಾ ಬಹಳ ಶ್ರದ್ಧೆಯಿಂದ ವ್ರತ ಸ್ವೀಕರಿಸುವಂತೆ ಸ್ವೀಕರಿಸಿದ್ದಿರಬಹುದು. ಏಕೆಂದರೆ ಆ ತಾಯಿಯೇ ನಿಮ್ಮ ಪ್ರತಿದಿನದ ಜೀವಂತ ಮಾದರಿ. ಅವರದೇ ಬಿತ್ತನೆ. ಅವರಿಂದಲೇ ಮೊಳಕೆಯೊಡೆಯುವುದು, ಚಿಗುರೊಡೆಯುವುದು, ಟಿಸಿಲೊಡೆಯುವುದು, ಮೊಗ್ಗರಳಿ ಹೂವಾಗುವುದು. ಇದೊಂದು ಉದಾಹರಣೆಯಷ್ಟೇ. ಯಾವುದನ್ನೋ ಮೌಲ್ಯವೆಂದು ಚಿನ್ನದ ಚೌಕಟ್ಟಿನಲ್ಲಿ ಬರೆದಿಟ್ಟಿರುತ್ತದೆಯೋ ಅದು ನಿಮ್ಮ ವ್ಯಕ್ತಿಗತ ಬಯಕೆಯ, ಉತ್ಕಟ ಬಯಕೆಯ ಮರಣಶಾಸನವಾಗಿರಬಹುದು. ಉತ್ಕಟ ಬಯಕೆಗಳ ಮರಣಶಾಸನಗಳೇ ಅರಿಮೆಯ ಲಕ್ಷಣಗಳು.
ತಂದೆ ತಾಯಿಯರ ಎಷ್ಟೋ ತಾಕಲಾಟಗಳನ್ನು, ತೊಳಲಾಟಗಳನ್ನು, ತಿಕ್ಕಲುತನಗಳನ್ನು ಪರಮಶ್ರದ್ಧೆಯಿಂದ ಮಕ್ಕಳು ಎರವಲು ಪಡೆದಿರುತ್ತಾರೆ. ಅಲ್ಲಿಗೆ ಮನೆಯೇ ಒಂದು ಬಲಿಗಂಬ.ಮನೆಯವರೆಲ್ಲರೂ ಬಲಿಪಶುಗಳು ಸ್ವಯಿಚ್ಛೆಯಿಂದ, ಅನಿವಾರ್ಯವಾಗಿ ಅರಿಮೆಯ ಬಲಿಪಶುಗಳು.
ಮೌಲ್ಯಗಳ ಹೇರುವ ಸಮಾಜ
ಮನೆಯೆಂಬ ಬಾಣಲಿಯಿಂದ ಜಿಗಿದು ಬಂದರೆ ನಿಮಗೆ ಹೊರಗೆ ಸಮಾಜವೆಂಬ ಬೆಂಕಿಯಿದೆ. ವ್ಯಕ್ತಿಯೊಬ್ಬನ ಆಂತರಿಕವಾದ ಉತ್ಕಟ ಬಯಕೆಗಳೇನೇ ಇರಲಿ, ಸಾಮಾಜಿಕ ಕಟ್ಟುಪಾಡುಗಳು, ಸಾಂಸ್ಕೃತಿಕ ನಿರೀಕ್ಷೆಗಳು ಅರಿಮೆಗಳನ್ನು ಬಲಪಡಿಸುತ್ತವೆ.
ಉದಾಹರಣೆಗೆ ನಾನೊಬ್ಬ ಜೈನನೋ, ಬ್ರಾಹ್ಮಣನೋ, ಲಿಂಗಾಯತನೋ ಆಗಿದ್ದರೆ ನನ್ನ ವ್ಯಕ್ತಿಗತವಾದ ಬಯಕೆಗಳೇನೇ ಇರಲಿ. ಚಿಕನ್ ಮಂಚೂರಿಯ ತಿನ್ನಬೇಕೆಂದು ಬಯಸಿದರೆ, ಸಮಾಜ ಅದನ್ನು ವಿಚಿತ್ರವಾಗಿ ಅಥವಾ ವಿಲಕ್ಷಣವಾಗಿ ನೋಡುತ್ತದೆ. “ಬಿಡಪ್ಪಾ ಬ್ರಾಹ್ಮಣರು, ಲಿಂಗಾಯತರೆಲ್ಲಾ ತಿನ್ನಕ್ಕೆ ಶುರು ಮಾಡಿದ್ದರಿಂದ ಮಾಂಸದ ಬೆಲೆ ಏರಿತು” ಎಂದು ತಿನ್ನುವುದನ್ನು ಪರೋಕ್ಷವಾಗಿ ವ್ಯಕ್ತಿಯೊಬ್ಬನ ಆಹಾರದ ಬಯಕೆಯನ್ನು ಖಂಡಿಸುತ್ತಾರೆ.
ಬ್ರಾಹ್ಮಣ ಅಥವಾ ಲಿಂಗಾಯತನು ಮಾಂಸ ತಿನ್ನುವುದಕ್ಕೂ ಬೆಲೆ ಏರಿಕೆಗೂ ಏನೂ ಸಂಬಂಧವಿಲ್ಲದಿದ್ದರೂ ಇವನ್ನು ಕೇಳಬೇಕಾಗುತ್ತದೆ. ಬ್ರಾಹ್ಮಣರ ಅಥವಾ ಜೈನರ ಅಥವಾ ಲಿಂಗಾಯತರ ಸಮುದಾಯವೂ, ಬಳಗವೂ ತಮ್ಮಲ್ಲಿರುವ ಮಾಂಸ ತಿನ್ನುವ ವ್ಯಕ್ತಿಯನ್ನು ಪುರಸ್ಕರಿಸುವುದಿಲ್ಲ. ಅವನೊಬ್ಬ ನೇರವಾಗಿ ಅಲ್ಲದಿದ್ದರೂ ಒಂದು ರೀತಿಯಲ್ಲಿ ಜಾತಿಗೆಟ್ಟವ. ಹಾಗಾಗಿ ಅವನು ಕದ್ದು ತಿನ್ನಬೇಕು. ಅಥವಾ ಅವರ ತಿರಸ್ಕಾರಕ್ಕೆ ಒಳಗಾಗದಿರಲು ತಿನ್ನಬಾರದು.
ಹೆಣ್ಣು ಮಗುವೊಂದರ ಹಣೆಯಲ್ಲಿ ಕುಂಕುಮವಿರದಿದ್ದರೆ ನೀನು ಮುಸಲ್ಮಾನಳಾ ಎನ್ನುವುದು, ಗಡ್ಡವಿಟ್ಟುಕೊಂಡು ಮೀಸೆ ತೆಗೆದ ಪುರುಷನಿಗೆ “ಸಲಾಂ ವಾಲೆಕುಂ” ಎನ್ನುವುದು, ದೇವಸ್ಥಾನಕ್ಕೆ ಅಥವಾ ಮಂಗಳಕಾರ್ಯಕ್ಕೆ ಸೀರೆ, ಇತ್ಯಾದಿ ಮಂಗಳದ್ರವ್ಯಗಳಿಂದ ಅಲಂಕೃತವಾಗಿ ಹೋಗಬೇಕೆನ್ನುವುದು, ಮುತ್ತೈದೆಯಾದವಳು ಹೇಗೆಲ್ಲಾ ಇರಬೇಕೆನ್ನುವುದು ಅಥವಾ ವಿಧವೆಯಾದವಳು ಏನೆಲ್ಲಾ ಬಳಸಬಾರದು ಎನ್ನುವುದು; ಹೀಗೇ, ಸಾಲುಸಾಲಾಗಿ ವ್ಯಕ್ತಿಯ ಆಂತರಿಕ ಬಯಕೆಯನ್ನು ಮೀರಿದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ನಿರೀಕ್ಷೆಗಳನ್ನೆಲ್ಲಾ ವ್ಯಕ್ತಿಯು ಮನ್ನಿಸಬೇಕಾದ ಮೌಲ್ಯವೆಂದು ಅವನಲ್ಲಿ ದ್ವಂದ್ವವನ್ನುಂಟು ಮಾಡುತ್ತಾ ಬಲಿದಾನದರಿಮೆಯನ್ನು ಬಲಿಸುತ್ತದೆ.
ದೌರ್ಬಲ್ಯಕ್ಕೆ ಮೌಲ್ಯದ ಕವಚ
ಸರಿ, ಇನ್ನೊಂದು ಬದಿಯಲ್ಲಿಯೂ ಬಲಿದಾನದರಿಮೆಯು ಬಲಿಯುತ್ತಾ ಬಲಗೊಳ್ಳುವುದನ್ನು ಬಗೆಯಬೇಕು. ಕೆಲವರು ಮಾನಸಿಕವಾಗಿ ದುರ್ಬಲರಾಗಿರುತ್ತಾರೆ. ಎದುರಿಸಿ ತಮ್ಮ ಶಕ್ತಿಪ್ರದರ್ಶನ ಮಾಡಿ ತಮ್ಮ ಆಸೆಯನ್ನು ಪ್ರಕಟಗೊಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಅದಕ್ಕೆ ತಮ್ಮ ದೌರ್ಬಲ್ಯಕ್ಕೆ ಮೌಲ್ಯವನ್ನು ಆರೋಪಿಸಿಕೊಂಡು ತಾವು ವಿಧೇಯವಾಗಿ ನಡೆದುಕೊಂಡು ಹೋಗಿಬಿಡುವುದು. ಸುಮ್ಮನೆ ಕೆಲವು ಉದಾಹರಣೆಗಳು ಅಂತ ಹೇಳ್ತೀನಿ. ಆ ಮಾದರಿಯಲ್ಲಿ ಬೇರೆಯದನ್ನು ಗಮನಿಸಿ.
ಶಿಶ್ನದಲ್ಲಿ ನಿಮಿರುವಿಕೆಯ ಸಮಸ್ಯೆ ಇರುವವನು ಅಥವಾ ಷಂಡತನದಿಂದ ಬಳಲುತ್ತಿರುವವನು ತಾನು ಕಾಮವನ್ನು ನಿಗ್ರಹ ಮಾಡಿ ಬ್ರಹ್ಮಚರ್ಯವನ್ನು ಪಾಲನೆ ಮಾಡುತ್ತಿದ್ದೇನೆಂದು ಘೋಷಿಸುತ್ತಾ ಸಂನ್ಯಾಸಿಯಾಗುವುದು. ಅವನ ಸಮಸ್ಯೆಗೆ ಸಂನ್ಯಾಸವೆಂಬ ಆಧ್ಯಾತ್ಮಿಕ ಮೌಲ್ಯದ ಸಮಾಧಾನ. ಅವನು ತನ್ನ ಬಲಿದಾನದರಿಮೆಯನ್ನು ಮೌಲ್ಯಕ್ಕೆ ತಿರುಗಿಸಿಕೊಳ್ಳುವ ಬಗೆ. ತನ್ನಿಂದ ಏನನ್ನೋ ಕಿತ್ತುಕೊಂಡವನಿಗೆ ಎರಡು ತಟ್ಟಿ ವಾಪಸ್ಸು ಕಿತ್ತುಕೊಳ್ಳಲಾಗದವನು ಅವನನ್ನು ಕ್ಷಮಿಸಿದ್ದೇನೆ. ಹೋದರೆ ಹೋಗಲಿ ಎಂಬ ಔದಾರ್ಯವನ್ನು ಪ್ರದರ್ಶಿಸುತ್ತಾ ಮೌಲ್ಯವನ್ನು ಆರೋಪಿಸಿಕೊಳ್ಳುವುದು.
ಪಾಪ, ನಮ್ಮಪ್ಪ ಅಮ್ಮನಿಗೆ ಹೊತ್ತುಹೊತ್ತಿಗೆ ಊಟಕ್ಕೆ ಹವಣಿಸುವುದೇ ದೊಡ್ಡ ಕೆಲಸವಾಗಿರುತ್ತಿತ್ತು. ಇನ್ನು ನನಗೆ ಓದಿಸೋದು, ಇನ್ನೇನೋ ಕಲಿಸೋದು ಹೇಗೆ ಸಾಧ್ಯವಾಗುತ್ತದೆ ಎಂದು ಇನ್ನೊಬ್ಬರನ್ನು ಆರೋಪಿಸುತ್ತಾ ತಮ್ಮನ್ನು ಬಲಿಪಶುವನ್ನಾಗಿಸಿಕೊಂಡು ಕೊರಗುವುದು, ತಮಗೆ ತಾವೇ ಮರುಗುವುದು, ಇತರರಿಂದ ಅನುಕಂಪವನ್ನು ಅಪೇಕ್ಷಿಸುವುದು ಕೂಡಾ ಈ ಅರಿಮೆಯ ಮತ್ತೊಂದು ಮುಖವೇ.
ಅರಿಮೆಗೆ ಪೋಷಕ ಮಾದರಿಗಳು
ಬಲಿದಾನದರಿಮೆಯನ್ನು ಪೋಷಿಸಲು ನಿಮಗೆ ರಾಷ್ಟ್ರೀಯ ನಾಯಕರೂ ಸಿಗುತ್ತಾರೆ. ಆಧ್ಯಾತ್ಮವ್ಯಕ್ತಿಗಳೂ ಸಿಗುತ್ತಾರೆ. ಜೋನ್ ಆಫ್ ಆರ್ಕ್, ಅಸ್ಸಿಸ್ಸಿಯ ಸಂತ ಫ್ರಾನ್ಸಿಸ್, ಗಾಂಧೀಜಿ, ಯೇಸು, ಮದರ್ ಥೆರೆಸಾರೇ ಮೊದಲಾದ ಮಾದರಿಗಳು ಕೂಡಾ ತಮ್ಮನ್ನು ತಾವು ನೋವಿಗೆ ಒಳಪಡಿಸಿಕೊಂಡು ಇತರರ ಸೇವೆಯೇ ತಮ್ಮ ಒಲವು ಎಂಬ ಆದರ್ಶವನ್ನು ಒಡ್ಡಬಲ್ಲವು. ಇಂತಹ ಯಶಸ್ವೀ ಮತ್ತು ಪ್ರಖ್ಯಾತ ಐತಿಹಾಸಿಕ ವ್ಯಕ್ತಿಗಳ ತ್ಯಾಗದ ಮೌಲ್ಯಗಳು ವ್ಯಕ್ತಿಯೊಬ್ಬನ ತ್ಯಾಗದ ಅರಿಮೆಯನ್ನು ಬಲಪಡಿಸುವ ಸಾಧ್ಯತೆಗಳನ್ನು ಅಲ್ಲಗೆಳೆಯಲಾಗುವುದಿಲ್ಲ.
ಬಾಲ್ಯದಲ್ಲಿನ ಪ್ರೀತಿ ವಾತ್ಸಲ್ಯಗಳ ಕೊರತೆ, ದೇಹದ ಆಕಾರವು ಸರಿ ಇಲ್ಲ ಎಂಬ ಭಾವ, ಮನೆಯಲ್ಲಿ ಕಠಿಣವಾಗಿ ತೀರ್ಮಾನಕ್ಕೊಳಗಾಗುತ್ತಿದ್ದರೆ ಬಲಿದಾನದರಿಮೆಯು ಮೊಳೆಯುವ ಸಾಧ್ಯತೆಗಳಿರುತ್ತವೆ. ತಂದೆ ತಾಯಿ ಅಥವಾ ಮನೆಯ ಇತರ ಸದಸ್ಯರಿಂದ, ಶಿಕ್ಷಕರಿಂದ, ಸಾಮಾಜಿಕ ಪರಿಸರದಿಂದ, ಓರಗೆಯವರಿಂದ ಮಗುವು ಭಾವನಾತ್ಮಕವಾಗಿ ತಳಮಳಕೊಳಗಾಗುತ್ತಿದ್ದರೆ, ಒತ್ತಡವನ್ನು ಅನುಭವಿಸುತ್ತಿದ್ದರೆ ಈ ಬಲಿದಾನದರಿಮೆಯ ಉದಯವಾಗುವುದು.
ದೇಹಾಲಸ್ಯವಿರುವಾಗ, ಶರೀರದಲ್ಲಿ ಅಸೌಖ್ಯವಿರುವಾಗ ಹೊಂದುವಂತಹ ಒಪ್ಪಲಾರದಂತಹ ಸಂಬಂಧಗಳು ಕೂಡಾ ಈ ಅರಿಮೆಗೆ ಕಾರಣವಾಗಬಹುದು. ಕೆಲವೊಮ್ಮೆ ತಾವು ನಿರ್ಧಾರ ತೆಗೆದುಕೊಳ್ಳಬೇಕಾದಾಗ ನಿರ್ಧಾರ ತೆಗೆದುಕೊಳ್ಳದೇ ಜವಾಬ್ದಾರಿಯಿಂದ ತಪ್ಪಿಸಿಕೊಂಡಿರುತ್ತಾರೆ. ಆ ನೋವು ಅಥವಾ ಬೇಸರವೂ ಕೂಡಾ ‘ಹೋಗತ್ತ, ನನ್ನ ಬಾಳು ಇಷ್ಟೇ’ ಎಂಬ ಧೋರಣೆಯಲ್ಲಿ ಬಲಿದಾನದರಿಮೆಯನ್ನು ಬೆಳೆಸಿಕೊಳ್ಳುತ್ತಾರೆ.
ಇನ್ನೂ ಕೆಲವರಿಗೆ ತಾವೊಬ್ಬ ಮಹಾನ್ ಮುಗ್ಧ ಜೀವಿ, ಭಾವುಕ ಮತ್ತು ಅನುಕಂಪದ ಜೀವಿಯೆಂದು ತೋರಿಸಿಕೊಳ್ಳುವ ತವಕ. ಈ ಆಂತರಿಕ ತವಕದ ಕೊಡುಗೆಯಾಗಿಯೂ ದೊರಕುವುದು ಈ ಮಾರ್ಟಿರ್ ಕಾಂಪ್ಲೆಕ್ಸ್.ಇನ್ನೂ ಕೆಲವರು ತಮ್ಮ ಹೆಣಗುವಿಕೆಯನ್ನು ಉತ್ಪ್ರೇಕ್ಷಿಸಿ ವೈಭವೀಕರಿಸುತ್ತಾರೆ. ಸುಮ್ಮನೆ ಒಂದು ಉದಾಹರಣೆ. ಬೇಗ ಬೇಗ ಊಟಕ್ಕೆ ಬಡಿಸಲು ಹೋದಾಗ ಕಾಲಿಗೆ ಚೇರು ಬಡಿದು ಒಂದು ಸಣ್ಣ ನೋವಾಗುತ್ತದೆ. ಅಯ್ಯೋ ಪಾಪ ಎಂದು ಉಪಚಾರಕ್ಕೆ ಅರ್ಹವಾಗಿಲ್ಲದ್ದಷ್ಟು ಸಣ್ಣ ನೋವು ಅದು. ಅದಕ್ಕೆ ಅವರು ಚೇರಿಗೆ ಮೊಣಕಾಲು ಬಡಿದು, ತಾವು ಬಿದ್ದು, ತಲೆಯು ನೆಲಕ್ಕೆ ಅಪ್ಪಳಿಸಿ, ಒಂದೈದು ನಿಮಿಷ ಮೂರ್ಚಾವಸ್ಥೆಯಲ್ಲಿದ್ದು ಎದ್ದು ಬಂದರಾದರೆ ಒಂದಷ್ಟು ಉಪಚಾರ, ಕನಿಕರ, ಅಯ್ಯೋ ಪಾಪ ಲಭ್ಯವಾಗುವುದು. ಅದಕ್ಕೆ ಉತ್ಪ್ರೇಕ್ಷೆ. ಅದು ಬರಿಯ ನೋವಿಗೆ ಸೀಮಿತವಲ್ಲ. ಅವರು ಪಡುವ ಶ್ರಮಕ್ಕೆ, ಅಥವಾ ಇತರರು ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದಕ್ಕೆ; ಇತರ ವಿಷಯಗಳಿಗೂ ಸಹ.
ಈ ಅರಿಮೆಯುಳ್ಳವರಿಗೆ ಇತರರ ಉದ್ದೇಶಗಳ ಮೇಲೆ ಅನುಮಾನವೂ ಕೂಡಾ ಸಾಮಾನ್ಯ.
ತಾವು ಸರಿಯಾಗಿಯೇ ಇರಬೇಕೆನ್ನುವುದು ಅವರ ಗೀಳು. ತಮ್ಮ ಕೈಯಲ್ಲಿ ಆಗುತ್ತದೋ ಇಲ್ಲವೋ, ಯಾರಾದರೂ ಕೆಲಸವನ್ನು ಮಾಡಿಕೊಡಲು ಕೇಳಿದರೆ “ಹೂ, ಮಾಡುತ್ತೇನೆ” ಎನ್ನುವುದೇ ಅವರ ಮೊದಲ ಉತ್ತರ.
ಕೆಲವೊಮ್ಮೆ ಅವರಿಗೆ ಅನ್ನಿಸುವುದೇನೆಂದರೆ, ಇತರರು ತನ್ನ ಮನಸ್ಸನ್ನು ತಿಳಿದುಕೊಂಡಿದ್ದಾರೆ ಅಥವಾ ತಿಳಿದುಕೊಳ್ಳುತ್ತಾರೆ ಎಂದು. ಇವರಿಂದ ಸಮಸ್ಯೆಗಳಿಗೆ ಪರಿಹಾರವಂತೂ ಎಂದಿಗೂ ಸಿಗುವುದಿಲ್ಲ. ಏಕೆಂದರೆ ಇವರು ನೋಯುವುದರಲ್ಲೇ ಸಂತೋಷಪಡುವವರು. ಒಂದು ವೇಳೆ ಸಮಸ್ಯೆಗೆ ಪರಿಹಾರ ಸಿಕ್ಕಿಬಿಟ್ಟಿತು ಎಂದಿಟ್ಟುಕೊಳ್ಳಿ, ಅದರ ನೆರಳಾಗಿ ಮತ್ತಷ್ಟು ಸಮಸ್ಯೆಗಳನ್ನು ತರುತ್ತಾರೆ. ಅವರು ಮಹಾನ್ ನಾಟಕಕಾರರು. ಪ್ರಶಂಸೆ ಗಿಟ್ಟಿಸಲು, ಗಮನ ಸೆಳೆಯಲು, ಜನರ ದೃಷ್ಟಿಯನ್ನು ತಮ್ಮ ಕಡೆಗೆ ಸೆಳೆಯಲು ನಟಿಸಲೂ ಸೈ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

