ದಿನದ ಸುದ್ದಿ
ವಿಶ್ವ ಪಶುವೈದ್ಯ ದಿನ | ಪಶುವೈದ್ಯ ವೃತ್ತಿಯ ಸುತ್ತ ಒಂದು ಪಕ್ಷಿ ನೋಟ
- ಡಾ. ಕಮಲೇಶ್ ಕುಮಾರ್ ಕೆ ಎಸ್,ಪಶುವೈದ್ಯಾಧಿಕಾರಿಗಳು,ಪಶುಚಿಕಿತ್ಸಾಲಯ, ಮತ್ತೂರು,ಶಿವಮೊಗ್ಗ
ಎಲ್ಲಾ ವರ್ಷದ ಏಪ್ರಿಲ್ ಕಡೆಯ ಶನಿವಾರ ವಿಶ್ವ ಪಶುವೈದ್ಯ ದಿನಾಚರಣೆ ಆಚರಿಸುವ ವಿಶ್ವದ ಪಶುವೈದ್ಯರು ಇಡೀ ವಿಶ್ವವೇ ಕರೋನದಿಂದ ತತ್ತರಿಸಿ ಹೋಗಿರುವ ಈ ಸಂದರ್ಭದಲ್ಲಿ ಈ ಬಾರಿ ಒಂದು ಉತ್ತಮ ಗುರಿಯಾದ “ಪರಿಸರ ಸಂರಕ್ಷಣೆಯಿಂದ ಪ್ರಾಣಿ ಹಾಗು ಮನುಷ್ಯರ ಆರೋಗ್ಯ ಸುಧಾರಣೆ” (“Environmental protection for improving animal and human health”) ಎಂಬ ವಿಷಯವನ್ನು ಉತ್ತೇಜಿಸುತ್ತಿದ್ದಾರೆ. ಪರಿಸರ ಸಂರಕ್ಷಣೆಯಿಂದ ಆಗುವ ಮಾಲಿನ್ಯ ತಡೆ, ಕಡಿಮೆ ರೋಗ ಹರಡುವಿಕೆ ಹಾಗೂ ಹೆಚ್ಚುವ ರೋಗ ನಿರೋಧಕ ಶಕ್ತಿಯಿಂದ ಖಂಡಿತವಾಗಿಯೂ ಎಲ್ಲಾ ಜೀವಿಗಳ ಆರೋಗ್ಯ ಸುಧಾರಣೆ ಸಾಧ್ಯವಾಗುತ್ತದೆ.
ರೈತರ ಏಳಿಗೆಗಾಗಿ ಕರೋನಾದಲ್ಲೂ ಪಶುವೈದ್ಯರ ಹೋರಾಟ
ಕರೋನದಿಂದ ಆಗಿರುವ ಇಂಥಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಎಲ್ಲ ಉದ್ಯಮಗಳು ಸ್ಥಗಿತವಾಗಿ ದೇಶದ ಆರ್ಥಿಕತೆ ಕುಸಿಯುತ್ತಿದ್ದರು ಸಹ ಹೈನುಗಾರಿಕೆ ಬಡ ರೈತರ ಕೈ ಹಿಡಿದಿದೆ, ನೆಮ್ಮದಿಯಾಗಿ ಜೀವನ ನಡೆಸಿ ನಿಟ್ಟುಸಿರು ಬಿಡಲು ಸಹಾಯ ಹಸ್ತ ನೀಡಿದೆ, ಇದಕ್ಕೆ ಪಶುವೈದ್ಯರು ಎಗ್ಗಿಲ್ಲದೆ ನೀಡುತ್ತಿರುವ ಅಗತ್ಯ ಸೇವೆಯು ಬೆನ್ನೆಲುಬಾಗಿದೆ.
ಪಶುವೈದ್ಯ ವೃತ್ತಿಯ ಇತಿಹಾಸ
ಇತಿಹಾಸದ ಪ್ರಕಾರ ಮೊಟ್ಟಮೊದಲು ಪಶು ವೈದ್ಯಕೀಯ ವಿಜ್ಞಾನದಲ್ಲಿ ಪಾಂಡಿತ್ಯವನ್ನು ಪಡೆದ ವ್ಯಕ್ತಿಯು ಭಾರತೀಯ, ಅವನು ಹಯಘೋಷ ಎಂಬ ಋಷಿಯ ಮಗನಾದ ಶಾಲಿಹೋತ್ರ (2350 BCE) ಎಂಬ ಉಲ್ಲೇಖವಿದೆ.
ಫ್ರಾನ್ಸನ ಜಾನುವಾರುಗಳಲ್ಲಿ ಏಕಾಏಕಿ ಪಿಡುಗು ರೋಗ ಕಾಣಿಸಿಕೊಂಡಾಗ, ಅದಕ್ಕೆ ಪರಿಹಾರ ಕಂಡುಹಿಡಿಯಲೆಂದೇ ಕ್ಲಡ್ ಬೊರ್ಗಲಟ್ (Claude Bourgelat) ಎಂಬಾತನು ಮೊಟ್ಟಮೊದಲ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು ತದ ನಂತರ ಇನ್ನುಳಿದ ದೇಶಗಳಲ್ಲಿ ಪ್ರಾರಂಭವಾದವು. ಹೀಗೆ ಪಶುವೈದ್ಯ ವಿಜ್ಞಾನವು ಬೆಳೆಯತೊಡಗಿತು.
ಪಶುವೈದ್ಯರು ಹೀಗೆ ಉತ್ತಮರು
ಜಾನುವಾರುಗಳೇ ದೇವರು ಎಂದು ಕಲ್ಪಿಸಿಕೊಂಡಿರುವ ನಮ್ಮ ದೇಶದಲ್ಲಿ, ಕೇವಲ ಪೂಜೆಯ ವಸ್ತುವೆಂದು ನೋಡದೆ ಜಾನುವಾರುಗಳಿಂದ ಆರ್ಥಿಕವಾಗಿ ಸದೃಢತೆ ಹೊಂದಿದ ಸಾಕಷ್ಟು ರೈತರು ನಮ್ಮ ಸುತ್ತಲೂ ಇರುವುದನ್ನು ನಾವೆಲ್ಲರೂ ಗಮನಿಸಿಯೇ ಇರುತೇವೆ. ಅದೆಷ್ಟೋ ಸಣ್ಣ ಹಾಗೂ ಅತೀ ಸಣ್ಣ ರೈತರು ತಮ್ಮಲ್ಲಿರುವ ಬೆರಳೆಣಿಕೆಯಷ್ಟು ಕೋಳಿ, ಕುರಿ, ಮೇಕೆ, ಹಸುಗಳನ್ನು ಕಟ್ಟಿಕೊಂಡು ಉತ್ತಮ ರೀತಿಯಲ್ಲಿ ಜೀವನ ಸಾಗಿಸುತಿರುವುದಕ್ಕೆ ಲೆಕ್ಕವಿಲ್ಲದಷ್ಟು ಉದಾಹರಣೆ ನಮ್ಮ ಬಳಿ ಇವೆ. ಪಶುವೈದ್ಯರು ಜಾನುವಾರು ಸಾಗಾಣಿಕೆ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರ ಏಳಿಗೆಗೆ ನೀಡುತ್ತಿರುವ ಸಹಕಾರ ಬಹಳಷ್ಟು.
ಪಶುವೈದ್ಯರಾಗಲು ಇರಲೇಬೇಕಾದ ಗುಣಗಳು
ನಟ ವಿಲ್ ರೋಜರ್ಸ್ಸ ಎಂಬಾತನ “Best doctor in the world is a veterinarian. He can’t ask his patients what’s the matter. He’s just got to know.” ಹೇಳಿಕೆಯಂತೆ ನಮಗೆಲ್ಲ ತಿಳಿದಿರುವ ಹಾಗೆ ಸಾಮಾನ್ಯವಾಗಿ ಪ್ರಾಣಿಗಳು ರೋಗದ ಲಕ್ಷಣಗಳನ್ನು ತೋರಿಸುವುದಿಲ್ಲ, ಪ್ರಾಣಿಯ ವಾರಸುದಾರರ ಹೇಳಿಕೆಯ ಮೇಲೆ ಅವಲಂಬಿತವಾಗಿಯೋ ಇಲ್ಲವಾದಲ್ಲಿ ತಾವಾಗಿಯೇ ಪರೀಕ್ಷಿಸಿ ಅದನ್ನು ಕಂಡು ಹಿಡಿಯ ಬೇಕಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹಳೆಯ ಚಿಕಿತ್ಸೆಯ ಅನುಭವ, ಜಾಣ್ಮೆ, ತಾಳ್ಮೆ, ಉತ್ತಮ ದೃಷ್ಟಿ, ಸ್ಪರ್ಶ ಸಂವೇದನೆ ಹಾಗು ಪ್ರಾಣಿಗಳ ಮೇಲಿನ ಪ್ರೀತಿ ಸಾಕಷ್ಟು ಇರಬೇಕಾಗುತ್ತದೆ.
ಪಶುವೈದ್ಯರು ಕೇವಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದಲ್ಲದೆ ಸಾಕಷ್ಟು ಬಾರಿ ಜಾನುವಾರು ಮಾಲೀಕರ ಮನೆಯ ಬಾಗಿಲಿಗೆ ಹೋಗಿ ಚಿಕಿತ್ಸೆಯನ್ನು ನೀಡಬೇಕಾಗಿರುತ್ತದೆ ಆದ್ದರಿಂದ
ಕೇವಲ ಮಾನಸಿಕರೀತಿಯಿಂದ ಅಲ್ಲದೆ ದೈಹಿಕವಾಗಿಯೂ ಸದೃಢವಾಗಿರಬೇಕಾಗಿರುತ್ತದೆ.
ಪಶುವೈದ್ಯರ ಶ್ರೇಷ್ಠತೆ ಹಾಗು ವೈವಿಧ್ಯತೆ
ವೈದ್ಯರೆಂದರೆ ಅವರ ಜೀವನಾದ್ಯಂತ ಕಲಿಕೆಯು ಅವರ ಜೊತೆಗೂಡಿರುತ್ತದೆ, ಅದೇ ರೀತಿ ಮನುಷ್ಯನನ್ನು ಬಿಟ್ಟು ಬೇರೆಲ್ಲಾ ಜೀವಿಗಳ ಎಲ್ಲ ರೀತಿಯ ರೋಗಗಳಿಗೂ ಚಿಕಿತ್ಸೆ ನೀಡಬಲ್ಲ ಪಶುವೈದ್ಯರು ದಿನನಿತ್ಯವೂ ಸಾಕಷ್ಟು ಕಲಿಯುತ್ತಿರಬೇಕಾಗಿರುತ್ತದೆ. ಹೇಳಬೇಕೆಂದರೆ ಸಾಕಷ್ಟು ಪಶುವೈದ್ಯರು ಸಾಮಾನ್ಯ ಜ್ವರದ ಚಿಕಿತ್ಸೆಯಿಂದ ಹಿಡಿದು ಎಂತಹ ಅರವಳಿಕೆಯಿಂದ ಕೂಡಿದ ಶಾಸ್ತ್ರಚಿಕಿತ್ಸೆಯನ್ನು ಕೂಡ ಮಾಡಬಲ್ಲರು ಹಾಗೂ ತಮ್ಮ ಕಾರ್ಯ ವ್ಯಾಪ್ತಿಯ ಸ್ಥಳದಲ್ಲಿ ಕಂಡು ಬರುವ ರೋಗಗಳನ್ನು ಚಾಣಾಕ್ಷ ರೀತಿಯಿಂದ ಕಂಡು ಹಿಡಿದು ಅದಕ್ಕೆ ಸೂಕ್ತ ರೀತಿಯ ಚಿಕಿತ್ಸೆಯನ್ನು ನೀಡಬಲ್ಲರು.
ವಿಶ್ವದಲ್ಲಿ ಪಶು ವೈದ್ಯಕೀಯ ವಿಜ್ಞಾನವು ಸಾಕಷ್ಟು ಮುಂದುವರೆದಿದೆ ಆದರೂ ಭಾರತವು ಅದರಲ್ಲೇನು ಮಿಗಿಲಿಲ್ಲ. ಆದರೆ ವಾಸ್ತವ ಸ್ಥಿತಿ ಗಮನಿಸಿದರೆ ಇಂದಿಗೂ ಭಾರತದಲ್ಲಿ ಸುಸಜ್ಜಿತವಾದ ಸಲಕರಣೆಗಳನ್ನು ಹೊಂದಿರುವ ಪಶು ಆಸ್ಪತ್ರೆ ಬೆರಳೆಣಿಕೆಯಷ್ಟು ಮಾತ್ರ. ಪ್ರಾಥಮಿಕ ಚಿಕಿತ್ಸೆಯಿಂದ ಹಿಡಿದು ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಯನ್ನು ಕೂಡ ಒಬ್ಬ ಪಶುವೈದ್ಯನೇ ನೀಡಬೇಕಾಗಿರುತ್ತದೆ. ಇಂತಹ ಸಂದರ್ಭದಲ್ಲೂ ಕೂಡ ನಮ್ಮ ಪಶುವೈದ್ಯರು ದೃತಿಗೆಡದೆ ಸಾಕಷ್ಟು ಮೇಲುಗೈ ಸಾಧಿಸಿದ್ದಾರೆ.
ಜನರಿಗೆ ಸೇವೆಯನ್ನು ಒದಗಿಸುವ ಅಧಿಕಾರಿಗಳಲ್ಲಿ ಸಾಕಷ್ಟು ಹತ್ತಿರವಾಗಿರುವ ಪಶುವೈದ್ಯರು ರೈತರ ಏಳಿಗೆಗೆ ಸಾಕಷ್ಟು ಮಾಹಿತಿಯನ್ನು ನೀಡಬಲ್ಲರು ಹಾಗೂ ಅವರ ದಿನನಿತ್ಯ ಜೀವನದಲ್ಲಿ ವೈಜ್ಞಾನಿಕ ಜೀವನವನ್ನು ಅಳವಡಿಸಿಕೊಳ್ಳಲು ಉಪಕಾರಿಯಾಗಿದ್ದಾರೆ. ಪಶುವೈದ್ಯರು ಕೇವಲ ವೈದ್ಯಕೀಯ ಸೇವೆ ಅಲ್ಲದೆ ಇನ್ನಿತರ ಸೇವೆಯನ್ನು ಒಡಗಿಸುತ್ತಿದ್ದಾರೆ.
- ಪ್ರಾಣಿಗಳಿಂದ ಮಾನವನಿಗೆ ಬರುವ ರೋಗ ತಡೆಗಟ್ಟುವಿಕೆ ಹಾಗೂ ಅದರ ಕುರಿತು ಸಂಶೋಧನೆ (ಉದಾ: ರೇಬಿಸ್, ಹಕ್ಕಿ ಜ್ವರ, ಬ್ರುಸೆಲೋಸಿಸ್)
- ಎಲ್ಲಾ ತರಹದ ಪ್ರಾಣಿ, ಕಾಡು ಪ್ರಾಣಿಗಳ ರಕ್ಷಣೆ, ಚಿಕಿತ್ಸೆ ಹಾಗೂ ರೋಗ ತಡೆಗಟ್ಟುವಿಕೆ.
- ಸಸಾರ ಜನಕ ಆಹಾರ ಪದಾರ್ಥಗಳಾದ ಹಾಲು, ಮಾಂಸ ಹಾಗೂ ಮೊಟ್ಟೆಗಳ (ಪ್ರೊಟೀನ್) ಉತ್ಪಾದನೆಯಿಂದ ಪೌಷ್ಟಿಕ ಆಹಾರ ಉತ್ಪಾದನೆ.
- ಮನುಷ್ಯರ ಔಷಧ ಉತ್ಪಾದನೆ.
- ಜಾನುವಾರುಗಳ ಔಷಧ ಉತ್ಪಾದನೆ.
- ಯಾವುದೇ ರೀತಿಯ ಹೊಸ ಸಂಶೋಧನೆಯು ಮೊದಲು ಪ್ರಾಣಿಗಳೇ ಮೇಲೆ ಪ್ರಯೋಗಿಸಿ ಉತ್ತಮ ಫಲಿತಾಂಶ ಇದ್ದಲ್ಲಿ ನಂತರ ಮಾನವರ ಉಪಯೋಗಕ್ಕೆ ಬಳಕೆ. (ಉದಾ: ಬಾಡಿಗೆ ತಾಯಿಯಿಂದ ಮಗುವಿನ ಜನನ)
- ಸತ್ತ ಜಾನುವಾರುಗಳಿಂದ ವ್ಯವಸಾಯಕ್ಕಾಗಿ ಉತ್ತಮವಾದ ರಾಸಾಯನಿಕ ಉತ್ಪಾದನೆ.
- ಗೊಬ್ಬರ ಉತ್ಪಾದನೆ.
- ಗೋಮೂತ್ರದ ಔಷಧೀಯ ಉಪಯೋಗದ ಕುರಿತು ಸಂಶೋಧನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ1 day agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ1 day agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

