Connect with us

ಅಂತರಂಗ

ಅರಿಮೆಯ ಅರಿವಿರಲಿ-29 : ಮೌಲ್ಯದ ಮೌಲ್ಯಮಾಪನ

Published

on

  • ಯೋಗೇಶ್ ಮಾಸ್ಟರ್

ಮೌಲ್ಯ ಅಥವಾ ಬೆಲೆ ಎನ್ನುವುದು, ಅದು ತಾತ್ವಿಕವೋ ಅಥವಾ ಲೌಕಿಕವೋ, ಒಟ್ಟಾರೆ ಅದು ಮಾನವನಿಂದ ಆರೋಪಿತವಾಗಿರುವುದು. ಪಾತ್ರ ಅಪಾತ್ರ, ದಯೆ ನಿರ್ದಯೆ, ಔದಾರ್ಯ ಅನೌದಾರ್ಯ, ಪ್ರಾಮಾಣಿಕ ಅಪ್ರಮಾಣಿಕ, ಸದ್ಗುಣ ದುರ್ಗುಣ, ಒಳಿತು ಕೆಡಕು, ಧರ್ಮ ಅಧರ್ಮ; ಈ ದ್ವಂದ್ವ ಪರಿಕಲ್ಪನೆಗಳಾವುವೂ ವಾಸ್ತವವಾಗಿ ನಿಸರ್ಗದಲ್ಲಿ ಇಲ್ಲ. ಆದರೆ ಮಾನವ ನಿರ್ಮಿತ ಸಮಾಜದಲ್ಲಿ ಎಲ್ಲವೂ ಇದೆ. ಎಲ್ಲಿ ದ್ವಂದ್ವಗಳು ಇರುತ್ತವೆಯೋ ಅಲ್ಲಿ ಮಾನಸಿಕ ಸಮಸ್ಯೆಗಳೂ ಇರುತ್ತವೆ. ಸಂಘರ್ಷ, ತುಮುಲ, ದ್ವಂದ್ವ, ಗೊಂದಲ, ಒತ್ತಡ, ಖಿನ್ನತೆ; ಈ ಎಲ್ಲವೂ ಮನೋರೋಗಗಳಿಗೆ ಕಾರಣವೇ.

ಒಂದು ಕಾಲಘಟ್ಟದಲ್ಲಿ ಯಾವುದನ್ನು ಮೌಲ್ಯ ಎಂದು ಭಾವಿಸಿಲಾಗಿರುತ್ತದೆಯೋ ಮನುಷ್ಯನ ಜೀವನ ಕ್ರಮ, ಆಲೋಚನಾ ಕ್ರಮಗಳು ಬದಲಾದಂತೆ ನಾವು ವಸ್ತು ಅಥವಾ ವಿಷಯಗಳಿಗೆ ಆರೋಪಿಸುವ ಮೌಲ್ಯಗಳೂ ಕೂಡ ಬದಲಾಗುತ್ತವೆ. ತೊಟ್ಟಲಿನಲ್ಲಿಯೇ ಮಕ್ಕಳನ್ನು ವಧೂವರರನ್ನಾಗಿಸುವ ಕಾಲಘಟ್ಟವಿತ್ತು.ಹೆಣ್ಣುಮಗುವು ಮೈನೆರೆಯುವ ಮುನ್ನವೇ ಮದುವೆ ಮಾಡಬೇಕಾದ ಕಾಲದಲ್ಲಿ ಬಾಲ್ಯವಿವಾಹ ಸಮಾಜವು ಒಪ್ಪಿತ ವ್ಯವಸ್ಥೆಯಾಗಿತ್ತು. ಆದರೆ ಈಗ ಅದು ಅಪರಾಧ. ಸಾಮಾಜಿಕ ಮೌಲ್ಯಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತಿರುತ್ತವೆ ಎಂದು ತಿಳಿಯಲು ಇಷ್ಟು ಸಾಕು. ಹೆಚ್ಚು ಹೆಚ್ಚು ಚರ್ಚೆಗಳು ಬೇಡ.

ಹಾಗಾಗಿಯೇ ಸಾಮಾಜಿಕ ಮೌಲ್ಯವೆಂದು, ಸಮಾಜವೋ, ಸಂಸ್ಕೃತಿಯೋ ಒಪ್ಪಬೇಕೆಂದು ಪ್ರಾಣವನ್ನು ಪಣವಾಗಿಟ್ಟು ನಾವು ಎಂದೂ ನಡೆದುಕೊಳ್ಳುವ ಅಗತ್ಯವಿಲ್ಲ. ಆದರೂ ಒಂದು ವಿಷಯವನ್ನು ಗಮನದಲ್ಲಿ ಇರಿಸಿಕೊಂಡು ನಮ್ಮ ನಡವಳಿಕೆಗಳನ್ನು, ಆಲೋಚನೆಗಳನ್ನು, ಕೆಲಸಗಳನ್ನು ಒಂದು ಕ್ರಮಕ್ಕೆ ಒಳಪಡಿಸಿಕೊಳ್ಳಬೇಕಾದ ಅಗತ್ಯವಿದೆ.

ಯಮ ನಿಯಮ

ಒಂದು ಕೆಲಸವು ಸರಾಗವಾಗಿ ನಡೆಯಲು ಅದಕ್ಕೊಂದು ಕ್ರಮಬೇಕು. ಕ್ರಮವಿಲ್ಲದೇ ಹೋದರೆ ಸಾಮಾನ್ಯವಾಗಿ ಆ ಕೆಲಸ ಆಗದು. ಆ ಕೆಲಸದ ಕ್ರಮಕ್ಕೆ ವ್ಯಕ್ತಿಯು ತನ್ನನ್ನು ಬದ್ಧಗೊಳಿಸಿಕೊಳ್ಳುವುದಕ್ಕೆ ಶಿಸ್ತು ಎನ್ನುತ್ತೇವೆ. ಹೀಗೆಂದುಕೊಳ್ಳೋಣ, ನಮ್ಮ ಆಲೋಚನೆಯಲ್ಲಿ ಒಂದು ಕ್ರಮವಿರಲಿ, ಕೆಲಸದಲ್ಲಿ ಒಂದು ಶಿಸ್ತು ಇರಲಿ. ಒಬ್ಬ ವ್ಯಕ್ತಿಯು ತನ್ನ ಮನಸ್ಸನ್ನು, ದೇಹವನ್ನು, ಭಾವನೆಗಳನ್ನು, ಕುಟುಂಬವನ್ನು, ಸಂಬಂಧಗಳನ್ನು ಮತ್ತು ಸಮಾಜದಲ್ಲಿ ತನ್ನ ಇರುವಿಕೆ ಮತ್ತು ಭಾಗವಹಿಸುವಿಕೆಯನ್ನು ಆರೋಗ್ಯವಾಗಿಟ್ಟುಕೊಳ್ಳಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

ಆ ಕ್ರಮಗಳನ್ನು ಕಾರ್ಯರೂಪಕ್ಕೆ ತರಲು ಶಿಸ್ತು ಬೇಕಾಗುತ್ತದೆ. ಕ್ರಮ ಮತ್ತು ಶಿಸ್ತುಗಳ ಉದ್ದೇಶ ವ್ಯಕ್ತಿ, ಕುಟುಂಬ, ಸಂಬಂಧ ಮತ್ತು ಸಮಾಜ; ಇವಿಷ್ಟನ್ನೂ ಆರೋಗ್ಯವಾಗಿಡುವುದಷ್ಟೇ ಆಗಿರುತ್ತದೆ. ಇದನ್ನೇನಾದರೂ ನಾವು ಮೌಲ್ಯ ಎನ್ನಬಹುದೇ? ಅನ್ನಬಹುದು. ಅಂದುಕೊಳ್ಳೋಣ, ಅಡ್ಡಿಯಿಲ್ಲ.

ಆರೋಗ್ಯವಾಗಿರಬೇಕು ಎಂದು ಬಯಸುತ್ತಿರುವುದಾದರೂ ಆನಂದಕ್ಕೆ. ಹಿತವಾದ ಬದುಕು, ಆನಂದವಾದ ವಾತಾವರಣ ಮತ್ತು ಘಾಸಿತವಾಗುವಂತಹ ಸಂಘರ್ಷಗಳಿಲ್ಲದ ಜೀವನವನ್ನು ನಾವು, ನಮ್ಮ ಸಹಜೀವಿಗಳು ಮತ್ತು ಮುಂದಿನ ಪೀಳಿಗೆಯವರು ಹೊಂದಬೇಕೆನ್ನುವುದೇ ನಮ್ಮ ಉದ್ದೇಶವಾಗಿದ್ದ ಪಕ್ಷದಲ್ಲಿ ಯಾವುದ್ಯಾವುದಕ್ಕೋ ಮೌಲ್ಯವೆಂದು ಆರೋಪಿಸುವುದನ್ನು ನಿಲ್ಲಿಸಬೇಕು. ಅನರ್ಥಕಾರಿ ಮತ್ತು ಅನಗತ್ಯವಾಗಿರುವುದನ್ನೆಲ್ಲಾ ಮೌಲ್ಯವೆಂದು ಪರಿಗಣಿಸುವುದನ್ನು ನಿಲ್ಲಿಸಬೇಕು.

ಅವಗ್ಯಾವಾಗಲೋ ಪತಿಯೇ ಪರದೈವ ಎಂಬುದೊಂದು ಮೌಲ್ಯ. ಅವನು ಬೂಟುಗಾಲಿನಲ್ಲಿ ಒದ್ದರೂ ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ ಎಂದು ಬಂದು ಕೇಳದೇ ಇರುವಂತಹ ಕೌಟುಂಬಿಕ ಅಥವಾ ದಾಂಪತ್ಯದ ಮೌಲ್ಯವನ್ನು ಅವನು ಪಾಲಿಸುತ್ತಿದ್ದರು.ಮೌಲ್ಯಗಳಿಗೊಂದು ಮೌಲ್ಯಮಾಪನವಿರಬೇಕು. ಇದನ್ನು ಗಂಭೀರವಾಗಿ ಪರಿಗಣಿಸೋಣ. ಯಾವುದನ್ನು ಮೌಲ್ಯವೆಂದು ಭಾವಿಸುತ್ತೇವೆಯೋ ಆ ಗುಣವಾಗಲಿ, ವರ್ತನೆಯಾಗಲಿ, ಆಚಾರ ಅಥವಾ ವಿಚಾರವಾಗಲಿ ತನಗೂ ನೋವನ್ನುಂಟು ಮಾಡಿಕೊಳ್ಳಬಾರದು. ಇತರರಿಗೆ ನೋವನ್ನುಂಟು ಮಾಡಬಾರದು. ನೋವೆಂದರೆ ಮಾನಸಿಕವಾಗಿ, ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಕಿರುಕುಳ ಆಗಬಾರದು. ಯಾವುದೇ ವ್ಯಕ್ತಿಯ ವಯಸ್ಸು, ಹಿನ್ನೆಲೆ, ವರ್ಣ ಮತ್ತು ವರ್ಗಗಳನ್ನು ಲೆಕ್ಕಿಸದೇ ಗೌರವವನ್ನು ಸಲ್ಲಿಸಬೇಕು.

ಅಂದರೆ ಯಾವುದರ ಆಧಾರದಲ್ಲಿಯೂ ಯಾರೊಬ್ಬರ ವ್ಯಕ್ತಿಗೌರವಕ್ಕೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು. ಸೋಲು, ಅವಘಡ, ನೋವು, ಸಾವಿನಂತಹ ಸಂಕಟಗಳ ಸಮಯಗಳಲ್ಲಿ ಯಾರಿಗಾದರೂ ನೆರವಾಗುವಂತಹ ವರ್ತನೆಗಳು ಸಹಜವಾಗಿರಬೇಕು. ಯಾರೊಬ್ಬರ ಆಯ್ಕೆ ಮತ್ತು ಜೀವನ ಕ್ರಮದಲ್ಲಿ ಅನಗತ್ಯವಾಗಿ ಮೂಗು ತೂರಿಸುವಂತಹ ಅತಿಕ್ರಮಣ ಪ್ರವೇಶದ ಧೋರಣೆಗಳು ಇರಬಾರದು.

ಯಾರೊಬ್ಬರ ಆಹಾರ, ಆಶ್ರಯ, ಶಿಕ್ಷಣ ಮತ್ತು ಆರೋಗ್ಯದ ವಿಷಯದಲ್ಲಿ ಯಾರಾದರೂ ತಮ್ಮಿಂದಾಗುವ ಕಾಣ್ಕೆಯನ್ನು ನೀಡುವಂತಹ ಔದಾರ್ಯವನ್ನು ಹೊಂದಿರಬೇಕು. ಈ ರೀತಿಯಲ್ಲಿ ಒಂದಿಷ್ಟನ್ನು ಪಟ್ಟಿ ಮಾಡಿಕೊಂಡು ಪಟ್ಟು ಹಿಡಿದು ಉಳಿದ ವಿಷಯಗಳನ್ನು ಧಾರ್ಮಿಕವೇ ಆಗಿರಲಿ, ಸಾಂಸ್ಕೃತಿಕವೇ ಆಗಿರಲಿ, ಸಾಮಾಜಿಕವಾಗಿ ಪ್ರಚಲಿತದಲ್ಲಿದ್ದು ಬಹಳ ಜನಪ್ರಿಯವಾಗಿರಲಿ ನಿರಾಕರಿಸುವಂತಹ ಸಾಮಾಜಿಕವಾಗಿ ಧೈರ್ಯವೂ ಮಾನಸಿಕವಾಗಿ ಗಟ್ಟಿತನವೂ ಇರಬೇಕು.

ಧೈರ್ಯ ಮತ್ತು ಗಟ್ಟಿತನ

ಸಾಮಾಜಿಕವಾಗಿ ಧೈರ್ಯ ಮತ್ತು ಮಾನಸಿಕವಾಗಿ ಗಟ್ಟಿತನದಿಂದ ಕೂಡಿರುವ ಮೌಲ್ಯವನ್ನು ಪ್ರತಿಪಾದಿಸಿಕೊಂಡು ಬರುವಂತಹ ಮನಸ್ಥಿತಿಯವರಿಗೆ ಅರಿಮೆಗಳಂತಹ ಮಾನಸಿಕ ಸಮಸ್ಯೆಗಳು ವಿರಳವೆಂದೇ ಹೇಳಬಹುದು. ಏಕೆಂದರೆ ಅವರಿಗೆ ಸಮಾಜದ ಒಪ್ಪಿತ ಅಥವಾ ತಿರಸ್ಕೃತ ವಿಚಾರಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬರುವ ವಿಷಯದ ಬಗ್ಗೆ ಅರಿವಿರುತ್ತದೆ.

ವ್ಯಕ್ತಿಗತವಾಗಿ ಮತ್ತು ವ್ಯಕ್ತಿಗಳಿಂದ ಕೂಡಿರುವ ಸಮಾಜಕ್ಕೆ ಯಾವುದು ಅಗತ್ಯ ಮತ್ತು ಯಾವುದು ಅನಗತ್ಯ ಎಂದು ತಿಳಿದಿರುತ್ತದೆ. ತಾವು ಯಾವ ಕ್ರಮದಲ್ಲಿ ಆಲೋಚನೆಗಳನ್ನು ಹೊಂದಿದ್ದೇವೆ ಮತ್ತು ಯಾವ ರೀತಿಯಲ್ಲಿ ಶಿಸ್ತುಬದ್ಧರಾಗಿದ್ದೇವೆ ಎಂಬುದರ ಬಗ್ಗೆ ಸ್ಪಷ್ಟತೆ ಇರುತ್ತದೆ. ಹಾಗಾಗಿ ಅರಿಮೆಗಳ ಸಮಸ್ಯೆ ಅವರಲ್ಲಿ ವಿರಳ. ದ್ವಂದ್ವಗಳು, ಗೊಂದಲಗಳು ಸಮಸ್ಯೆಗಳಿಗೆ ಸಂಪನ್ಮೂಲಗಳು.

ಸಾಮಾಜಿಕ ಸೋಂಕು

ತಿಳಿಯದೇ ಯಾವುದ್ಯಾವುದೋ ಸೋಂಕುಗಳು ತಗುಲಿ ಶರೀರದಲ್ಲಿ ಸಮಸ್ಯೆಯಾದಂತೆ, ಆಕಸ್ಮಿಕ ಮತ್ತು ಅಪಘಾತಗಳಿಂದ ದೇಹಕ್ಕೆ ಗಾಯಗಳಾದಂತೆ, ಮನಸ್ಸಿಗೂ ಕೆಲವು ಸಮಸ್ಯೆಗಳು ಬರುತ್ತವೆ, ಗಾಯಗಳು ಆಗುತ್ತವೆ. ಇವಕ್ಕೆ ಯಾವುದೋ ಸನ್ನಿವೇಶ, ಸಂಗತಿಗಳು ಮತ್ತು ಸಾಂದರ್ಭಿಕ ಒತ್ತಡಗಳು ಕಾರಣಗಳಾಗುತ್ತವೆ. ದೈಹಿಕ ಸಮಸ್ಯೆಗಳನ್ನು ತಪಾಸಣೆಗಳಿಂದ ತಿಳಿದುಕೊಳ್ಳುವಂತೆ ಮಾನಸಿಕ ಸಮಸ್ಯೆಗಳನ್ನು ಮತ್ತು ಘಾಸಿತ ಮನಸ್ಸಿನ ನೋವಿನ ಕಾರಣಗಳನ್ನೂ ವ್ಯಕ್ತಿಗಳು ಗಮನಿಸಿಕೊಳ್ಳುವಷ್ಟು ಪ್ರಜ್ಞಾವಂತರಾದರೆ ಅಲ್ಲಿಗೆ ಆರೋಗ್ಯಕರ ಮನಸ್ಸಿನ ಭರವಸೆಯನ್ನು ಹೊಂದಬಹುದು.

ಆಕಾಶದಲ್ಲಿ ಮೋಡಗಳು ಚಲಿಸಿದಂತೆ ಯಾವುದ್ಯಾವುದೋ ಮನೋವಿಕಾರಗಳು, ವಿಕೃತ ಭಾವನೆಗಳು, ಅಸಂಬದ್ಧ ಆಲೋಚನೆಗಳು ವರ್ತಿಸಲು ಮತ್ತು ಪ್ರದರ್ಶಿಸಲು ಹಾತೊರೆಯುತ್ತವೆ. ವಿಕಾರ ವಿಕೃತ ಅಕ್ರಮ ಎಂದೆಲ್ಲಾ ಹೇಳುವುದೂ ಕೂಡಾ ಸಾಮಾಜಿಕ ಅಭಿಪ್ರಾಯಗಳ ಪದಗಳೇ. ಆದರೆ ಸಮಸ್ಯೆಗೆ ಸಮಾಧಾನ ಹುಡುಕುವವರಿಗೆ ಅವು ಸಮಸ್ಯೆಗಳು ಮಾತ್ರವೇ. ಮನೋವೈದ್ಯರಿಗೆ ಅವುಗಳು ರೋಗಲಕ್ಷಣಗಳು. ಆ ರೋಗಲಕ್ಷಣಗಳನ್ನು ಅನುಸರಿಸಿ ಸಮಾಲೋಚನೆ ಮಾಡಿ ರೋಗದ ಕಾರಣವನ್ನು ಪತ್ತೆ ಮಾಡಬೇಕು ಮತ್ತು ಚಿಕಿತ್ಸೆಯನ್ನು ನೀಡಿ ರೋಗಿಯನ್ನು ರೋಗಮುಕ್ತನನ್ನಾಗಿ ಮಾಡಬೇಕು. ಇದು ವೈದ್ಯರಾದವರ ಮತ್ತು ಸಮಾಲೋಚಕರ ಉದ್ದೇಶ ಮತ್ತು ಗಮ್ಯ.

ವೈದ್ಯರು ರೋಗಿಯನ್ನು ದ್ವೇಷಿಸಲಾರರು. ಅವರ ಗುರಿ ರೋಗಿಯೆಂಬ ಜೀವಿಯ ಕ್ಷೇಮ ಮತ್ತು ರೋಗವೆಂಬುದರ ನಿರ್ನಾಮ. ಅರಿಮೆಗಳು ಮತ್ತು ಇತರ ಮಾನಸಿಕ ಸಮಸ್ಯೆಗಳು ಇರುವ ನಾವಾಗಲಿ, ನಮ್ಮ ಜೊತೆಯಲ್ಲಿರುವವರು ಯಾರೇ ಆಗಲಿ ನಾವು ಹೊಂದಬೇಕಾದ ಧೋರಣೆಯೇ ಇದು. ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಹುಟ್ಟುಹಾಕುವಲ್ಲಿ ಧರ್ಮಗಳು, ಸಂಸ್ಕೃತಿಗಳು, ಸಾಮಾಜಿಕ ಅಭಿಪ್ರಾಯಗಳು, ಜಾತಿ ಗೋತ್ರಗಳ ಶ್ರೇಷ್ಟತೆ ಮತ್ತು ಮಡಿವಂತಿಕೆಯ ಗೀಳುಗಳು, ಸೈದ್ಧಾಂತಿಕ ವ್ಯಸನಗಳೆಲ್ಲವೂ ತಮ್ಮ ಪಾತ್ರಗಳನ್ನು ವಹಿಸುತ್ತವೆ.

ನಮಗೆ ಅಪಘಾತವಾಗಿ ಅಥವಾ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ರಕ್ತಬೇಕಾದಾಗ ಧರ್ಮ ಅಥವಾ ಜಾತಿಯನ್ನು ನೋಡದೇ ಅಗತ್ಯವಾಗಿರುವ ಗ್ರೂಪಿನ ರಕ್ತವನ್ನು ನೋಡುವಂತೆ, ಜಡ್ಡು ಬಿದ್ದ ದೇಹಕ್ಕೆ ಅಗತ್ಯವಿರುವ ಔಷಧಿಯನ್ನು ತೆಗೆದುಕೊಳ್ಳುವಂತೆ, ಧಾರ್ಮಿಕ – ಸಾಂಸ್ಕೃತಿಕ – ಸಾಮಾಜಿಕ ಕಟ್ಟುಪಾಡುಗಳಿಂದ ಉಂಟಾಗುವ ಮಾನಸಿಕ ಒತ್ತಡಗಳು ಮತ್ತು ಸಮಸ್ಯೆಗಳನ್ನು ನಿಭಾಯಿಸುವಲ್ಲಿಯೂ ಕೂಡಾ ವೈಜ್ಞಾನಿಕ ಮತ್ತು ವೈಚಾರಿಕ ಕ್ರಮಗಳನ್ನು ಅನುಸರಿಸಬೇಕು.
ದೈಹಿಕ ಸಮಸ್ಯೆಗಾದರೂ ಅವರಿವರು ಬಾಹ್ಯ ಒತ್ತಡವನ್ನು ವ್ಯಕ್ತಿಗಳ ಮೇಲೆ ಹೇರಿ ಚಿಕಿತ್ಸೆಯು ನಡೆಯುವಂತೆ ನೋಡಿಕೊಳ್ಳಬಹುದು. ಆದರೆ ಮಾನಸಿಕ ಸಮಸ್ಯೆಗೆ ಅವರಿವರು ಬಾಹ್ಯ ಒತ್ತಡವನ್ನು ತರಲು ಆಗದು. ವ್ಯಕ್ತಿಯು ತಾನೇ ಮೊದಲು ಒಪ್ಪಿಕೊಳ್ಳಬೇಕು. ತನಗಿರುವ ಸಮಸ್ಯೆಯಿಂದ ತಾನು ಬಿಡುಗಡೆಯಾಗುವ ಆಶಯವನ್ನು ಹೊಂದಬೇಕು. ಅದಕ್ಕಾಗಿ ಅವನು ಪ್ರಾಮಾಣಿಕವಾಗಿ ಕ್ರಮದಲ್ಲಿ ಒಳಗಾಗಿ, ಶಿಸ್ತನ್ನು ಪಾಲಿಸಲು ಸಿದ್ಧನಾಗಬೇಕು.

ಇದು ವ್ಯಕ್ತಿಯು ತಾನೇ ಮುಂದಾಗಬೇಕಾದ ಕಾರಣದಿಂದ ತಪಾಸಣೆಯೂ ಆಗದು, ಚಿಕಿತ್ಸೆಯೂ ನಡೆಯದು, ಗುಣಮುಖರೂ ಆಗರು. ಹಾಗಾಗಿಯೇ ಮಾನಸಿಕ ಸಮಸ್ಯೆಗಳ ನಿರ್ವಹಣೆಯಲ್ಲಿ ಭಾರತವು ಬಹಳ ಹಿಂದಿದೆ. ವೈಜ್ಞಾನಿಕ ತಪಾಸಣೆಗೆ ಮತ್ತು ಚಿಕಿತ್ಸೆಗೆ ಒಡ್ಡಿಕೊಳ್ಳುವವರ ಸಂಖ್ಯೆ ಬಹಳ ಕಡಿಮೆಯಿದೆ. ರೋಗಿಗಳ ಸಂಖ್ಯೆಯು ಬಹುದೊಡ್ಡ ಪ್ರಮಾಣದಲ್ಲಿದೆ. ಮಾನಸಿಕ ರೋಗಿಯೆಂದರೆ ಕಡೆಗಣಿಸಿ ಕಾಣುವಂತಹ ಮನಸ್ಥಿತಿ ಸಮಾಜದಲ್ಲಿದೆ.

ಅವರನ್ನು ಕೇವಲವಾಗಿ ಕಾಣುವ, ನಿಮ್ಹಾನ್ಸ್ ನಂತಹ ಪ್ರತಿಷ್ಟಿತ ಮತ್ತು ಬದ್ಧತೆಯಿಂದ ಕೆಲಸ ಮಾಡುತ್ತಿರುವಂತಹ ಚಿಕಿತ್ಸಾ ಕೆಂದ್ರವನ್ನು “ಹುಚ್ಚರ ಆಸ್ಪತ್ರೆ” ಎಂದು ಅವಹೇಳನಕಾರಿಯಾಗಿ ಹಾಸ್ಯ ಮತ್ತು ಅಪಹಾಸ್ಯಗಳನ್ನು ಮಾಡುವ ಜನರಿದ್ದಾರೆ. ಇಂತಹ ಸೋಶಿಯಲ್ ಸ್ಟಿಗ್ಮಾ ಅಥವಾ ಸಾಮಾಜಿಕ ಅಪಕೀರ್ತಿಯೂ ಕೂಡಾ ಮಾನಸಿಕ ಸಮಸ್ಯೆಗಳಿಗೆ ವೈಜ್ಞಾನಿಕವಾಗಿ ಪರಿಹಾರ ಕಂಡುಕೊಳ್ಳದಿರಲು ಕಾರಣ. ಆದರೆ ಸಾಮಾಜಿಕ ಅಪಕೀರ್ತಿಯನ್ನು ಅಥವಾ ಕಳಂಕವನ್ನು ಸೃಷ್ಟಿಸಿರುವವರಾದರೂ ಯಾರು? ಮತ್ತಿದೇ ವ್ಯಕ್ತಿಗಳು.

ತಾವೇ ಸಮಸ್ಯೆಯಲ್ಲಿರುವರು, ತಮ್ಮ ಸಮಸ್ಯೆಯನ್ನು ನಿವಾರಿಸಿಕೊಳ್ಳಲಾಗದಂತೆ ತಾವೇ ಸಾಮಾಜಿಕ ಮನಸ್ಥಿತಿಯನ್ನು ನಿರ್ಮಿಸುವರು. ಇದು ಇಂದಿನ ಬಹುದೊಡ್ಡ ಸಮಸ್ಯೆ. ಇದರ ಬಗ್ಗೆ ನಾವು ಮೊದಲು ಜಾಗೃತರಾಗುವುದು ಮತ್ತು ಇತರರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಸಧ್ಯದ ಕರ್ತವ್ಯ. ಇದಾದರೆ ಆರೋಗ್ಯಕರವಾದ ಮನಸ್ಸು ಮತ್ತು ಸಮಾಜವನ್ನು ಹಂತಹಂತವಾಗಿಯಾದರೂ ಮುಂದಿನ ಪೀಳಿಗೆಗಳಿಗೆ ನಿರ್ಮಿಸಲು ಸಾಧ್ಯವೇನೋ ನೋಡಬಹುದು.

(ಮುಂದುವರಿಯುತ್ತದೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

Trending