Connect with us

ಅಂತರಂಗ

ಅರಿಮೆಯ ಅರಿವಿರಲಿ-31 : ಸೇಡೆಂಬ ಸೋಂಕು

Published

on

  • ಯೋಗೇಶ್ ಮಾಸ್ಟರ್

ಕೆಲವೊಮ್ಮೆ ಕೆಲವರು ತಾವು ತೊಂದರೆಯಲ್ಲಿದ್ದಾಗ ಸಹಾಯ ಕೇಳುತ್ತಾರೆ. ನಮಗೆ ಮಾಡಲು ಸಾಧ್ಯವಾಗುವುದಿಲ್ಲ ಅಥವಾ ಆ ಸಮಯಕ್ಕೆ ನಿರ್ಲಕ್ಷಿಸಿಬಿಡುತ್ತೇವೆ. ಯಾವುದೋ ಕಾರಣದಿಂದ ಮುಂದೂಡಿರುತ್ತೇವೆ. ಅವರಿಗೆ ಮಾಡುವ ಕೆಲಸಕ್ಕೆ ಪ್ರಾಧಾನ್ಯತೆ ಕೊಟ್ಟಿರುವುದಿಲ್ಲ. ಆಮೇಲೆ ಅವರಿಗೆ ಆ ಸಹಾಯದ ಅವಶ್ಯಕತೆಯೇ ಇರುವುದಿಲ್ಲ ಅಥವಾ ನಮ್ಮ ಸಹಾಯ ಪಡೆದುಕೊಳ್ಳಲಾಗದೇ ಇನ್ನೇನಾದರೂ ತೊಂದರೆ ಆಗಿಬಿಟ್ಟಿರುತ್ತದೆ. ಆಗಲೂ ಕೂಡಾ ನಮಗೆ ಅಪರಾಧ ಪ್ರಜ್ಞೆ ಕಾಡುತ್ತದೆ.ಇಂತಹ ಹತ್ತು ಹಲವು ಅನುಭವಗಳು ಅರಿಮೆಗಳಾಗಿ ಬೇರೂರಿದರೂ ಆಶ್ಚರ್ಯವಿಲ್ಲ.

ನೀವೆಲ್ಲೋ ಹೊರಡುತ್ತಿರುತ್ತೀರಿ. ನಿಮ್ಮ ಮನೆಯಲ್ಲಿರುವ ವಯಸ್ಸಾದವರೋ ಅಥವಾ ಸಣ್ಣ ಮಕ್ಕಳೋ ನಿಮಗೆ ಏನನ್ನೋ ಹೇಳಲು ಅಥವಾ ಕೇಳಲು ಪ್ರಯತ್ನಿಸುತ್ತಾರೆ. ಅದನ್ನು ಕೇಳಿಸಿಕೊಳ್ಳುವಷ್ಟೂ ವ್ಯವಧಾನವಿರದ ನೀವು ಅಲ್ಲಿಂದ ಹೊರಟುಬಿಡುತ್ತೀರಿ. ಸ್ವಲ್ಪ ದೂರ ಸಾಗಿದ ಮೇಲೆ ಆ ವೃದ್ಧರ ಅಥವಾ ಮಗುವಿನ ಕೇಳುತ್ತಿದ್ದ ಅಥವಾ ಮಾತಾಡುತ್ತಿದ್ದ ಮುಖ ನೆನಪಿಗೆ ಬರುತ್ತದೆ. ಆಗ ನಿಮಗೆ ಪಿಚ್ಚೆನಿಸುತ್ತದೆ. ಹಾಗೆ ಬರಬಾರದಿತ್ತು ಎಂದು ಪದೇ ಪದೇ ಅನ್ನಿಸುತ್ತದೆ. ಅದನ್ನು ಹೇಗೆ ಸರಿಮಾಡುವುದು ಎಂದು ಆಲೋಚಿಸುತ್ತೀರಿ. ಈ ಬಗೆಯ ಅಪರಾಧದ ಅರಿಮೆಗೆ ಕಂಪಾಶನ್ ಗಿಲ್ಟ್ ಅಥವಾ ಅನುಕಂಪದ ಅಪರಾಧದ ಅರಿಮೆಯೆಂದೇ ಕರೆಯುತ್ತಾರೆ.

ಅನುಕಂಪಿತ ಅಪರಾಧ

ಕೆಲವೊಮ್ಮೆ ನಮ್ಮದೇ ಸಮಸ್ಯೆ ಇರುವಾಗ ಗಮನಿಸಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಸಾಂದರ್ಭಿಕವಾಗಿ ಮೂಡುವ ಉಪೇಕ್ಷೆಯ ಭಾವದಿಂದ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿರುವುದಿಲ್ಲ. ಕೆಲವೊಮ್ಮೆ, ಸಹಾಯ ಮಾಡಬೇಕು ಎಂದು ಬಹಳ ಗಂಭೀರವಾಗಿ ಒಲವನ್ನು ಹೊಂದಿದ್ದರೂ ಸಂಪನ್ಮೂಲಗಳ ಕೊರತೆ ಅಥವಾ ಸಮಯದ ಅಭಾವದಿಂದ ಸಹಾಯ ಮಾಡಿರುವುದಿಲ್ಲ. ಕಾರಣ ಯಾವುದೇ ಆದರೂ ಅಪರಾಧದ ಭಾವ ಕಾಡುತ್ತದೆ.

ಹೀಗೊಮ್ಮೆ ಯಾರಾದರೂ ಸಹಾಯ ಕೇಳಿದಾಗ “ಅವರು ನನ್ನ ವಿಷಯದಲ್ಲಿ ಇಂತಹ ತಪ್ಪು ಮಾಡಿದ್ದರು. ಆದ ಕಾರಣದಿಂದ ನಾನು ಅವರಿಗೆ ಸಹಾಯ ಮಾಡುವುದಿಲ್ಲ” ಎಂದು ಆಲೋಚಿಸಿದರೆ, ಅಂದೆಂದೋ ನನಗೆ ಸಹಾಯ ಬೇಕಿತ್ತು. ಆದರೆ ಅವರು ಮಾಡಿರಲಿಲ್ಲ. ಹಾಗಾಗಿ ಈಗ ನಾನು ಮಾಡುವುದಿಲ್ಲ ಎಂದರೆ ಅವರಲ್ಲಿ ಸೇಡಿನ ಭಾವ ಇದೆ ಎಂದು ಅರ್ಥ. ಸೇಡಿನ ಭಾವವೂ ಕೂಡಾ ಗಂಭೀರವಾದಂತಹ ಮನೋರೋಗವೇ ಹೌದು.

ಸೇಡಿನ ರೋಗ

ನಾರ್ಸಿಸಂನ ಅಥವಾ ಆತ್ಮರತಿಯ ಒಂದು ಭಾಗವೂ ಆಗಿರುವ ಈ ಸೇಡು ತೀರಿಸಿಕೊಳ್ಳುವ ಸಮಸ್ಯೆಯನ್ನು posttraumatic stress disorder (PTSD)ಅಥವಾ ಸೇಡಿನೊತ್ತಡದ ಸಮಸ್ಯೆ ಎಂದು ಕರೆಯಬಹುದು. ತಮ್ಮ ಜೀವನದಲ್ಲಿ ನಡೆದಂತಹ ನಷ್ಟ, ಸಾವು, ನೋವು, ಅವಮಾನ, ನಿರಾಸೆ ಇತ್ಯಾದಿ ಕಹಿ ಘಟನೆಗಳಿಂದ, ನೊಂದಿದ್ದು, ಅದಕ್ಕೆ ಕಾರಣರಾದವರ ಮೇಲೆ ತಮ್ಮ ಕೋಪವನ್ನು ತೋರಿಸಿಕೊಳ್ಳುವಂತಹ ಮನೋಭಾವ ಇದು. ನಮಗೆ ಯಾರಿಂದ ಬೇಸರವಾಗಿರುತ್ತದೆಯೋ, ನಷ್ಟವಾಗಿರುತ್ತದೆಯೋ ಅವರ ಕೋಪವಿರುವುದು ಸಹಜವೇ, ಹೇಗಾದರೂ ಸರಿ ತೀರಿಕೊಂಡೇ ತೀರುತ್ತೇವೆ ಎನ್ನಬೇಡಿ.

ಇದೊಂದು ಬಹಳ ಗಂಭೀರವಾದಂತಹ ಮತ್ತು ಕೇಡಿನ ಪರಿಣಾಮಗಳನ್ನು ಬೀರುವಂತಹ ಮಾನಸಿಕ ಸಮಸ್ಯೆ. ಇಂತಹ ಅನೇಕಾನೇಕ ಮಾನಸಿಕ ಸಮಸ್ಯೆಗಳನ್ನೆಲ್ಲಾ ಸಹಜ ಎಂದು ಪದೇಪದೇ ಹೇಳುತ್ತಲೇ ನಮ್ಮ ಸಮಾಜದಲ್ಲಿ ಅಪರಾಧಗಳು ತೀವ್ರತರದಲ್ಲಿ ಹೆಚ್ಚಿರುವುದು. ಅಪರಾಧಿಗಳು ಹೆಚ್ಚಿದ್ದು ಜೀವಗಳಿಗೆ ಭದ್ರತೆ ಇಲ್ಲದೇ ಹೋಗಿರುವುದು. ಈ ಮಾನಸಿಕ ಸಮಸ್ಯೆಯಿಂದಾಗಿ ಸೇಡಿನ ಭಾವದ ಒತ್ತಡದಿಂದ ಬಳಲುತ್ತಿರುವವರು ತಾವೂ ನೆಮ್ಮದಿಯಾಗಿರುವುದಿಲ್ಲ. ತಮ್ಮ ಜೊತೆಗೆ ಇರುವ ಇತರ ವ್ಯಕ್ತಿಗಳೂ, ಸಂಬಂಧಗಳೂ ನೆಮ್ಮದಿಯಾಗಿರುವುದಿಲ್ಲ ಮತ್ತು ಯಾರನ್ನು ದ್ವೇಷಿಸುತ್ತಾರೆಯೋ ಅವರನ್ನೂ ನೆಮ್ಮದಿಯಾಗಿರಿಸಬಾರದೆಂದು ಪ್ರಯತ್ನಿಸುತ್ತಿರುತ್ತಾರೆ.

ತಮ್ಮ ನೋವಿಗೆ, ನಷ್ಟಕ್ಕೆ, ಅವಮಾನಕ್ಕೆ ಕಾರಣರಾದವರನ್ನು ನಷ್ಟಕ್ಕೆ, ಅವಮಾನಕ್ಕೆ ಮತ್ತು ನೋವಿಗೆ ತಳ್ಳುವ ಈ ಮನೋರೋಗವಿರುವವರು “ನಾವು ಅವರಿಗೆ ಬುದ್ಧಿ ಕಲಿಸುತ್ತೇವೆ” ಎಂದು ಸಮರ್ಥಿಸಿಕೊಳ್ಳಲು ಯತ್ನಿಸುತ್ತಾರೆ. ಈ ರೋಗವು ಸಾಂಕ್ರಮಿಕದಂತೆ ವರ್ತಿಸುತ್ತದೆ. ಅದರಿಂದ ಒಬ್ಬ ವ್ಯಕ್ತಿಯನ್ನು ಸಮರ್ಥಿಸಿಕೊಳ್ಳಲು ಹಲವಾರು ಜನರೂ ಒಂದಾಗುವುದರಿಂದ ಗುಂಪು ಘರ್ಷಣೆಗಳು ನಡೆಯುವುದು, ಸಾಮೂಹಿಕ ರಕ್ತಪಾತಗಳಾಗುವುದೂ ನಡೆಯುವುದುಂಟು. ಹೊಂಚು ಹಾಕಿ ಕೊಲ್ಲುವುದು, ಎಷ್ಟೋ ಕಾಲಗಳಿಂದ ಕೊಲೆ ಮಾಡಲೆಂದೇ ಸಂಚು ಹೂಡುವುದು, ಅದಕ್ಕೆ ಅವರಿವರನ್ನು ಸಹಾಯಕ್ಕೆ ತೆಗೆದುಕೊಳ್ಳುವುದು; ಇತ್ಯಾದಿಗಳೆಲ್ಲವೂ ಕೂಡಾ ಈ ರೋಗದ ಪ್ರತಿಫಲವೇ. ಸಣ್ಣದೋ ದೊಡ್ಡದೋ ರೋಗ ರೋಗವೇ.

ಕೆಲವರು ತಾವಾಗಿ ಕೊಲೆ ಮಾಡಲು, ಅಥವಾ ಸೇಡು ತೀರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಅವರಿಗೆ ತೊಂದರೆ ಆಗಲೆಂದು ಕಾಯುತ್ತಿರುತ್ತಾರೆ. ಇದೊಂದು ಪುಟ್ಟ ಮಾನದಂಡವನ್ನು ಇಟ್ಟುಕೊಳ್ಳೋಣ. ನಮಗೆ ತೊಂದರೆ ಮಾಡಿದ್ದಾರೆಂದು ಅಥವಾ ನಷ್ಟ ಮಾಡಿದ್ದಾರೆಂದು ಆ ವ್ಯಕ್ತಿಗಳಿಗೂ ಕೂಡಾ ತೊಂದರೆ ನಷ್ಟವಾಗಲೆಂದು ಬಯಸುವ ಮನಸ್ಸಾದರೆ, ಅಥವಾ ಆದಾಗ ಸಂತೋಷವಾದರೆ, ಅವನಿಗೆ ಹಾಗೆ ಆಗಬೇಕಿತ್ತು ಎಂದು ಯಾರಿಗಾದರೂ ಅನ್ನಿಸಿದರೆ ಅವರಿಗೆ ಈ ಸಮಸ್ಯೆ ಇದೆ ಎಂದೇ ಅರ್ಥ.

ಅದಕ್ಕೆ ಶಬ್ಧಗಳಲ್ಲಿ ಬೇರೆ ಬೇರೆ ರೂಪಗಳನ್ನು ಕೊಡುತ್ತೇವೆ. “ಒಬ್ಬರಿಗೆ ಕೆಟ್ಟದು ಮಾಡಿದರೆ ಒಳ್ಳೆಯದಾಗತ್ತಾ? ಹಾಲು ಕುಡಿದ ಮಕ್ಕಳೇ ಬದುಕಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾರೆಯೇ?” ಎಂದೋ, “ನನ್ನ ಹೊಟ್ಟೆ ಉರಿ ಅವನನ್ನು ಸುಮ್ಮನೆ ಬಿಡುತ್ತದಾ?” ಎಂದೋ, “ದೇವರು ಸರಿಯಾಗಿ ತೋರಿಸದೇ ಇರುತ್ತಾನಾ?”; ಇವೆಲ್ಲವೂ ಪಿ ಟಿ ಎಸ್ ಡಿ ಅಥವಾ ಸೇಡಿನೊತ್ತಡದ ಸಮಸ್ಯೆಯ ಲಕ್ಷಣಗಳೇ.

ಈ ಸೇಡಿನ ಆಗ್ರಹದ ಮನೋಭಾವವು ಸಾಮಾನ್ಯವಾಗಿ ಸಹಜವಾಗಿಯೇ ಬರುವುದು. ಆದರೆ ಅದನ್ನು ಮುಂದುವರಿಸಿಕೊಂಡು ಪ್ರಜ್ಞಾಪೂರ್ವಕವಾಗಿ, ಅರಿವಿನಿಂದ ಕೂಡಿದವರಾಗಿ ಸರಿಪಡಿಸಿಕೊಳ್ಳದಿದ್ದರೆ ಅದು ಬಹಳ ಗಂಭೀರವಾದ ಮಾನಸಿಕ ಸಮಸ್ಯೆಯಾಗಿ ಪರಿಣಮಿಸಿ, ಗಂಭೀರವಾದ, ಭೀಕರವಾದ ಪರಿಣಾಮಗಳನ್ನು ಉಂಟು ಮಾಡುತ್ತದೆ.ಸೇಡು ತೀರಿಸಿಕೊಳ್ಳುವ ರೋಗವು ನಿಜಕ್ಕೂ ಬಾಲ್ಯದಲ್ಲಿಯೇ ತುಟಿಗಳಲ್ಲಿ ಹಾಲು ಆರುವ ಮುನ್ನವೇ ಹುಟ್ಟುತ್ತದೆ ಮತ್ತು ಬೆಳೆಯುತ್ತದೆ.

ಮಗುವು ನೆಲದ ಮೇಲೆ ಎಡವಿ ಬಿದ್ದಾಗ, ಅಳುತ್ತಿರುವ ಮಗುವನ್ನು ಸಮಾಧಾನಿಸಲು ಎಂದು, “ನೋವಾಯ್ತಾ? ಯಾರು ನಿನ್ನ ಬೀಳಿಸಿದ್ದು, ಹೊಡಿ, ಹೊಡಿ” ಎಂದು ನೆಲಕ್ಕೆ ‘ಅತ್ತ’ ಮಾಡಿಸುವಾಗಲೇ ಸೇಡಿನ ಭಾವದ ಬೀಜ ಬಿತ್ತಿದ್ದಾಯ್ತು. ಇನ್ನು ಚೌಕಾಬಾರದಲ್ಲಿ, ಪಗಡೆಯ ಆಟದಲ್ಲಿ ತನ್ನ ಕಾಯನ್ನು ಹೊಡೆದ ಅವನ ಕಾಯನ್ನು ಹೇಗಾದರೂ ಹೊಡೆಯಲೇ ಬೇಕೆಂದು ಹಟ ಹಿಡಿಯುವಲ್ಲಿ ಸೇಡಿನ ಭಾವ ಬಿತ್ತುವುದಿಲ್ಲ ಎಂದುಕೊಂಡಿರಾ? ಯಾರಾದರೂ ಮಗುವು ಕೇಳಿದ್ದನ್ನು ಕೊಡದೇ ಹೋದಾಗ ಅಥವಾ ತರದೇ ಇದ್ದಾಗ, ಆ ಕೋಪಕ್ಕೆ ಅಳಲು ಪ್ರಾರಂಭಿಸಿದಾಗ, “ಅವರು ನಿನಗೆ ಕೊಡಲಿಲ್ಲವಾ? ಅತ್ತ ಮಾಡು, ಅತ್ತ ಮಾಡು” ಎಂದು ನೀವು ಮಗುವಿನಿಂದ ಅವರಿಗೆ ಹೊಡೆಸುತ್ತಿದ್ದಾಗ ಸೇಡಿನ ಭಾವ ಬಲಿಯುವುದಿಲ್ಲ ಎಂದುಕೊಂಡಿರುವಿರಾ? ನನಗೆ ನಿರಾಸೆ ಉಂಟು ಮಾಡಿರುವವರನ್ನು, ನನಗೆ ಕೋಪ ತರಿಸಿದವರನ್ನು, ನನಗೆ ಹಿತ ಕೊಡದಿರುವವರನ್ನು ದಂಡಿಸಬೇಕು, ಶಿಕ್ಷಿಸಬೇಕು ಎಂದು ಬೆಳೆಸಿಕೊಳ್ಳುವ ಅರಿಮೆ ಮುಂದೆ ಎಷ್ಟರಮಟ್ಟಿಗೆ ಅರಳಿ ಬೆಳೆದು ವಿಸ್ತಾರವಾಗುವುದು ಗೊತ್ತೇ?

ಇನ್ನೊಂದು ವಿಷಯವೂ ನೆನಪಿನಲ್ಲಿಡಬೇಕು. ಅವರ್ಯಾರನ್ನೋ ತೋರಿಸಿ ಅತ್ತ ಮಾಡಿಸುವ ನಾವು ಎಷ್ಟೋ ವಿಷಯಗಳಲ್ಲಿ ನಾವೂ ಮಗುವಿನ ಅಥವಾ ವ್ಯಕ್ತಿಯ ನಿರೀಕ್ಷೆಗೆ ತಕ್ಕುದಾಗಿ ನಡೆದುಕೊಳ್ಳಲಾಗುವುದಿಲ್ಲ. ಅದು ಸಕಾರಣವೂ ಆಗಿರುವುದಿಲ್ಲ. ಆಗ ನಾವೂ ಅದರ ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ ಮತ್ತು ಅದರ ಮನಸ್ಸಿನಲ್ಲಿ ನಿರಾಸೆ, ಕೋಪ ಮತ್ತು ಬೇಸರವನ್ನು ಮೂಡಿಸಿರುತ್ತೇವೆ. ಆಗ ಈಗಾಗಲೇ ರೂಢಿಯಾಗಿರುವ ಸೇಡಿನ ಆಗ್ರಹದಂತೆ ಆ ಮನಸ್ಸು ನಮ್ಮನ್ನೂ ದ್ವೇಷಿಸಲು ಆರಂಭಿಸುತ್ತದೆ. ಎಷ್ಟೋ ಮಕ್ಕಳು ತಾವು ದೊಡ್ಡವರಾದ ಮೇಲೆ ತಮ್ಮ ತಂದೆ, ತಾಯಿ ಅಥವಾ ಇತರ ಕುಟುಂಬದ ಸದಸ್ಯರ ಮೇಲೆ ನಾನಾ ರೀತಿಯಲ್ಲಿ ಸೇಡುತೀರಿಸಿಕೊಳ್ಳುತ್ತಿರುತ್ತಾರೆ.

ಆದರೆ ಅದನ್ನು ಸೇಡು ಎಂದು ಅವರು ಭಾವಿಸಿರುವುದಿಲ್ಲ. ನಮ್ಮ ಮಹಾಭಾರತ ಮತ್ತು ರಾಮಾಯಣದಂತಹ ಮಹಾಕಾವ್ಯಗಳಿಂದ ಹಿಡಿದು, ಅನೇಕಾನೇಕ ಚಾರಿತ್ರಿಕ ದಾಖಲೆಗಳೂ ಸೇಡಿನ ರಾಜಕಾರಣ ಮತ್ತು ಸಂಘರ್ಷವನ್ನು ಬಹಳ ಸ್ಪಷ್ಟವಾಗಿ ಮತ್ತು ಹಟಮಾರಿತನದಿಂದ ಸಾಧಿಸಿವೆ. ಇನ್ನು ಸಿನಿಮಾಗಳಲ್ಲಂತೂ ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ, ಸಹೋದರರ ಸವಾಲ್ ಎನ್ನುತ್ತಾ ಹಲವಾರು ಚಲನಚಿತ್ರಗಳು ಸೇಡನ್ನು ತೀರಿಸಿಕೊಳ್ಳುವುದೇ ಒಂದು ಮೌಲ್ಯವೆಂಬಂತೆ ಪ್ರತಿಪಾದಿಸಿಕೊಂಡು ಬಂದಿವೆ.ವಿಶ್ವದ ಬಹುತೇಕ ಎಲ್ಲಾ ಭಾಷೆಗಳಲ್ಲೂ ಸೇಡು ತೀರಿಸಿಕೊಳ್ಳುವುದು ಅಥವಾ ಪ್ರತಿಕಾರ ತೆಗೆದುಕೊಳ್ಳುವುದು ಒಂದು ವೀರತೆಯ ಲಕ್ಷಣವೆಂದು ಪ್ರದರ್ಶಿಸಿದ್ದಾರೆ. ಸೇಡು ಮನಸ್ಸಿನ ವಿಕೃತಿಯ ಲಕ್ಷಣ. ಈ ರೋಗ ಬರೀ ವ್ಯಕ್ತಿಗಳಲ್ಲಿ ಮಾತ್ರವಲ್ಲ ಸಾಮುದಾಯಿಕವಾಗಿಯೂ ಕೂಡಾ ಸೋಂಕನ್ನು ಹರಡಿಸುತ್ತದೆ.

ಸಾಮುದಾಯಿಕ ಸೋಂಕು

ಈ ಮುಸ್ಲೀಂ ಉಗ್ರರಿದ್ದಾರೆ ಎಂದು ಇಲ್ಲಿರುವ ಮುಸ್ಲೀಮರನ್ನು ಅನುಮಾನಿಸುವುದು, ಅಪಮಾನಿಸುವುದು, ಅವರ ಮೇಲೆ ಸೇಡು ತೀರಿಸಿಕೊಳ್ಳುವಂತೆ ವರ್ತಿಸುವುದು ಕೂಡಾ ಸಾಮುದಾಯಿಕವಾದ ಪಿ ಟಿ ಎಸ್ ಡಿ. ಹಾಗೆಯೇ ಬ್ರಾಹ್ಮಣರು ಮತ್ತು ಇತರ ಸವರ್ಣೀಯವೆಂದು ಗುರುತಿಸಿಕೊಂಡಿರುವ ಸಮುದಾಯಗಳು ತಮ್ಮ ಮಡಿವಂತಿಕೆಯಿಂದ ಇತರ ತಳವರ್ಗದವರಿಗೆ ಅಪಮಾನ ಮಾಡಿದ್ದವು ಎಂದು ಇಂದು ಅವರನ್ನು ಅಪಮಾನಿಸುವುದು, ಅನುಮಾನಿಸುವುದು, ಹೆಜ್ಜೆ ಹೆಜ್ಜೆಗೂ ಅವರನ್ನು ನಿಂದಿಸುವುದು, ಎಲ್ಲರನ್ನೂ ಒಂದೇ ತಟ್ಟೆಯಲ್ಲಿಟ್ಟು ತೂಗುವುದು ಕೂಡಾ ಇದೇ ಮನೋರೋಗದ ಲಕ್ಷಣವೇ.

ಸೇಡಿನ ಮನೋಭಾವಕ್ಕೆ ಯಾವುದಾದರೂ ಒಂದು ಲಾಂಛನ ಬೇಕಾಗಿರುತ್ತದೆ. ಅದು ತನ್ನನ್ನು ತಾನು ಪ್ರಕಟಗೊಳಿಸಿಕೊಳ್ಳಲು ಯತ್ನಿಸುತ್ತಿರುತ್ತದೆ. ಯಾವ ನೆಪವಾದರೂ ಸರಿಯೇ. ಯಾವುದೇ ಪ್ರತಿಕ್ರಿಯೆ, ಪ್ರತಿಭಟನೆಯು ಸಾಂದರ್ಭಿಕವಾದ ಕ್ರಿಯೆಗೆ ಮತ್ತು ಪೂರ್ವಾಗ್ರಹವಿಲ್ಲದೆಯೇ ಇದೆಯೇ ಎಂಬುವುದನ್ನು ನಾವೇ ಗಮನಿಸಿಕೊಳ್ಳಬೇಕಾಗುತ್ತದೆ. ವ್ಯಕ್ತಿಯಿಂದ ಆದ ನಕಾರಾತ್ಮಕವಾದ ಅನುಭವದಿಂದ ತಾವೂ ನಕಾರಾತ್ಮಕವಾಗಿ ಅವರಿಗೆ ಚುರುಕು ಮುಟ್ಟಿಸಬೇಕು ಎಂಬ ಸೇಡಿನ ಭಾವ ಹೇಗೆ ವ್ಯಕ್ತಿಯಲ್ಲಿನ ಮಾನಸಿಕ ಸಮಸ್ಯೆಯೋ ಹಾಗೆಯೇ ಸಾಮುದಾಯಿಕವಾಗಿಯೂ ಕೂಡಾ ಇಂತಹ ಸಂಕಲಿತ ಮಾನಸಿಕ ಸಮಸ್ಯೆಗಳು ಇರುತ್ತವೆ.

ಹಿಂದೆಂದೋ ಅಥವ ಈಗೆಲ್ಲೋ ಆದ ಮತಾಂತರವನ್ನು ವಿರೋಧಿಸಲು ಅದಕ್ಕೆ ಸಂಬಂಧವೇ ಇಲ್ಲದ ಇತರ ಮುಸ್ಲೀಂ ಮತ್ತು ಕ್ರೈಸ್ತರ ಮೇಲೆ ದಾಳಿ ಮಾಡುವುದು, ಯಾರೋ ಕರ್ಮಠ ಬ್ರಾಹ್ಮಣರ ಮಡಿವಂತಿಕೆಯ ಮತ್ತು ಸಂಕುಚಿತ ಮನಸ್ಥಿತಿಯನ್ನು ವಿರೋಧಿಸಲು ಎಲ್ಲಾ ಬ್ರಾಹ್ಮಣರೂ ಹೀಗೆ ಎಂದು ನಿರ್ಧಾರಕ್ಕೆ ಬರುವುದು, ಅವಹೇಳನ ಮಾಡುವುದು; ಸಾಮುದಾಯಿಕ ಮಾನಸಿಕ ಸಮಸ್ಯೆಗಳೇ ಆಗಿವೆ.ಇದರ ಜೊತೆಗೆ ಸೇಡಿನ ಭಾವವು ಸೇರಿಕೊಂಡರೆ ನಾಗರಿಕ ಸಮಾಜದಲ್ಲಿ ಸಾಮರಸ್ಯ ಕದಡುವುದು. ಪ್ರತಿಯೊಬ್ಬರ ಬದುಕಿಗೆ ಅಗತ್ಯವಿರುವುದನ್ನು ಗಮನಿಸದೇ ಸೇಡು ತೀರಿಸಿಕೊಳ್ಳುವ ಉನ್ಮತ್ತತೆಯಲ್ಲಿ ಕತ್ತಿ ಝಳಪಿಸುತ್ತಿರುತ್ತಾರೆ.

ಹೌದು, ವ್ಯಕ್ತಿಗತವಾಗಿ ನಮಗೆ ನಿರಾಸೆಯಾಗಿದೆ. ಸಾಮುದಾಯಿಕವಾಗಿ ನಮಗೆ ನೋವಾಗಿದೆ. ಹಾಗಾದರೆ ಏನು ಮಾಡಬೇಕು? ಸೇಡು ತೀರಿಸಿಕೊಳ್ಳುವ ಪ್ರವೃತ್ತಿ ಮಾನಸಿಕ ಸಮಸ್ಯೆ ಎಂದಾದರೆ ಅದನ್ನು ನಿವಾರಿಕೊಳ್ಳಲು ಏನು ಮಾಡಬೇಕು? ಆ ಬಾಧೆಯನ್ನು ಶಮನ ಮಾಡಿಕೊಳ್ಳಲು ಏನು ಮಾಡಬೇಕು? ಮುಂದೆ ನೋಡೋಣ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending