ಅಂತರಂಗ
ಅರಿಮೆಯ ಅರಿವಿರಲಿ-31 : ಸೇಡೆಂಬ ಸೋಂಕು
- ಯೋಗೇಶ್ ಮಾಸ್ಟರ್
ಕೆಲವೊಮ್ಮೆ ಕೆಲವರು ತಾವು ತೊಂದರೆಯಲ್ಲಿದ್ದಾಗ ಸಹಾಯ ಕೇಳುತ್ತಾರೆ. ನಮಗೆ ಮಾಡಲು ಸಾಧ್ಯವಾಗುವುದಿಲ್ಲ ಅಥವಾ ಆ ಸಮಯಕ್ಕೆ ನಿರ್ಲಕ್ಷಿಸಿಬಿಡುತ್ತೇವೆ. ಯಾವುದೋ ಕಾರಣದಿಂದ ಮುಂದೂಡಿರುತ್ತೇವೆ. ಅವರಿಗೆ ಮಾಡುವ ಕೆಲಸಕ್ಕೆ ಪ್ರಾಧಾನ್ಯತೆ ಕೊಟ್ಟಿರುವುದಿಲ್ಲ. ಆಮೇಲೆ ಅವರಿಗೆ ಆ ಸಹಾಯದ ಅವಶ್ಯಕತೆಯೇ ಇರುವುದಿಲ್ಲ ಅಥವಾ ನಮ್ಮ ಸಹಾಯ ಪಡೆದುಕೊಳ್ಳಲಾಗದೇ ಇನ್ನೇನಾದರೂ ತೊಂದರೆ ಆಗಿಬಿಟ್ಟಿರುತ್ತದೆ. ಆಗಲೂ ಕೂಡಾ ನಮಗೆ ಅಪರಾಧ ಪ್ರಜ್ಞೆ ಕಾಡುತ್ತದೆ.ಇಂತಹ ಹತ್ತು ಹಲವು ಅನುಭವಗಳು ಅರಿಮೆಗಳಾಗಿ ಬೇರೂರಿದರೂ ಆಶ್ಚರ್ಯವಿಲ್ಲ.
ನೀವೆಲ್ಲೋ ಹೊರಡುತ್ತಿರುತ್ತೀರಿ. ನಿಮ್ಮ ಮನೆಯಲ್ಲಿರುವ ವಯಸ್ಸಾದವರೋ ಅಥವಾ ಸಣ್ಣ ಮಕ್ಕಳೋ ನಿಮಗೆ ಏನನ್ನೋ ಹೇಳಲು ಅಥವಾ ಕೇಳಲು ಪ್ರಯತ್ನಿಸುತ್ತಾರೆ. ಅದನ್ನು ಕೇಳಿಸಿಕೊಳ್ಳುವಷ್ಟೂ ವ್ಯವಧಾನವಿರದ ನೀವು ಅಲ್ಲಿಂದ ಹೊರಟುಬಿಡುತ್ತೀರಿ. ಸ್ವಲ್ಪ ದೂರ ಸಾಗಿದ ಮೇಲೆ ಆ ವೃದ್ಧರ ಅಥವಾ ಮಗುವಿನ ಕೇಳುತ್ತಿದ್ದ ಅಥವಾ ಮಾತಾಡುತ್ತಿದ್ದ ಮುಖ ನೆನಪಿಗೆ ಬರುತ್ತದೆ. ಆಗ ನಿಮಗೆ ಪಿಚ್ಚೆನಿಸುತ್ತದೆ. ಹಾಗೆ ಬರಬಾರದಿತ್ತು ಎಂದು ಪದೇ ಪದೇ ಅನ್ನಿಸುತ್ತದೆ. ಅದನ್ನು ಹೇಗೆ ಸರಿಮಾಡುವುದು ಎಂದು ಆಲೋಚಿಸುತ್ತೀರಿ. ಈ ಬಗೆಯ ಅಪರಾಧದ ಅರಿಮೆಗೆ ಕಂಪಾಶನ್ ಗಿಲ್ಟ್ ಅಥವಾ ಅನುಕಂಪದ ಅಪರಾಧದ ಅರಿಮೆಯೆಂದೇ ಕರೆಯುತ್ತಾರೆ.
ಅನುಕಂಪಿತ ಅಪರಾಧ
ಕೆಲವೊಮ್ಮೆ ನಮ್ಮದೇ ಸಮಸ್ಯೆ ಇರುವಾಗ ಗಮನಿಸಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಸಾಂದರ್ಭಿಕವಾಗಿ ಮೂಡುವ ಉಪೇಕ್ಷೆಯ ಭಾವದಿಂದ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿರುವುದಿಲ್ಲ. ಕೆಲವೊಮ್ಮೆ, ಸಹಾಯ ಮಾಡಬೇಕು ಎಂದು ಬಹಳ ಗಂಭೀರವಾಗಿ ಒಲವನ್ನು ಹೊಂದಿದ್ದರೂ ಸಂಪನ್ಮೂಲಗಳ ಕೊರತೆ ಅಥವಾ ಸಮಯದ ಅಭಾವದಿಂದ ಸಹಾಯ ಮಾಡಿರುವುದಿಲ್ಲ. ಕಾರಣ ಯಾವುದೇ ಆದರೂ ಅಪರಾಧದ ಭಾವ ಕಾಡುತ್ತದೆ.
ಹೀಗೊಮ್ಮೆ ಯಾರಾದರೂ ಸಹಾಯ ಕೇಳಿದಾಗ “ಅವರು ನನ್ನ ವಿಷಯದಲ್ಲಿ ಇಂತಹ ತಪ್ಪು ಮಾಡಿದ್ದರು. ಆದ ಕಾರಣದಿಂದ ನಾನು ಅವರಿಗೆ ಸಹಾಯ ಮಾಡುವುದಿಲ್ಲ” ಎಂದು ಆಲೋಚಿಸಿದರೆ, ಅಂದೆಂದೋ ನನಗೆ ಸಹಾಯ ಬೇಕಿತ್ತು. ಆದರೆ ಅವರು ಮಾಡಿರಲಿಲ್ಲ. ಹಾಗಾಗಿ ಈಗ ನಾನು ಮಾಡುವುದಿಲ್ಲ ಎಂದರೆ ಅವರಲ್ಲಿ ಸೇಡಿನ ಭಾವ ಇದೆ ಎಂದು ಅರ್ಥ. ಸೇಡಿನ ಭಾವವೂ ಕೂಡಾ ಗಂಭೀರವಾದಂತಹ ಮನೋರೋಗವೇ ಹೌದು.
ಸೇಡಿನ ರೋಗ
ನಾರ್ಸಿಸಂನ ಅಥವಾ ಆತ್ಮರತಿಯ ಒಂದು ಭಾಗವೂ ಆಗಿರುವ ಈ ಸೇಡು ತೀರಿಸಿಕೊಳ್ಳುವ ಸಮಸ್ಯೆಯನ್ನು posttraumatic stress disorder (PTSD)ಅಥವಾ ಸೇಡಿನೊತ್ತಡದ ಸಮಸ್ಯೆ ಎಂದು ಕರೆಯಬಹುದು. ತಮ್ಮ ಜೀವನದಲ್ಲಿ ನಡೆದಂತಹ ನಷ್ಟ, ಸಾವು, ನೋವು, ಅವಮಾನ, ನಿರಾಸೆ ಇತ್ಯಾದಿ ಕಹಿ ಘಟನೆಗಳಿಂದ, ನೊಂದಿದ್ದು, ಅದಕ್ಕೆ ಕಾರಣರಾದವರ ಮೇಲೆ ತಮ್ಮ ಕೋಪವನ್ನು ತೋರಿಸಿಕೊಳ್ಳುವಂತಹ ಮನೋಭಾವ ಇದು. ನಮಗೆ ಯಾರಿಂದ ಬೇಸರವಾಗಿರುತ್ತದೆಯೋ, ನಷ್ಟವಾಗಿರುತ್ತದೆಯೋ ಅವರ ಕೋಪವಿರುವುದು ಸಹಜವೇ, ಹೇಗಾದರೂ ಸರಿ ತೀರಿಕೊಂಡೇ ತೀರುತ್ತೇವೆ ಎನ್ನಬೇಡಿ.
ಇದೊಂದು ಬಹಳ ಗಂಭೀರವಾದಂತಹ ಮತ್ತು ಕೇಡಿನ ಪರಿಣಾಮಗಳನ್ನು ಬೀರುವಂತಹ ಮಾನಸಿಕ ಸಮಸ್ಯೆ. ಇಂತಹ ಅನೇಕಾನೇಕ ಮಾನಸಿಕ ಸಮಸ್ಯೆಗಳನ್ನೆಲ್ಲಾ ಸಹಜ ಎಂದು ಪದೇಪದೇ ಹೇಳುತ್ತಲೇ ನಮ್ಮ ಸಮಾಜದಲ್ಲಿ ಅಪರಾಧಗಳು ತೀವ್ರತರದಲ್ಲಿ ಹೆಚ್ಚಿರುವುದು. ಅಪರಾಧಿಗಳು ಹೆಚ್ಚಿದ್ದು ಜೀವಗಳಿಗೆ ಭದ್ರತೆ ಇಲ್ಲದೇ ಹೋಗಿರುವುದು. ಈ ಮಾನಸಿಕ ಸಮಸ್ಯೆಯಿಂದಾಗಿ ಸೇಡಿನ ಭಾವದ ಒತ್ತಡದಿಂದ ಬಳಲುತ್ತಿರುವವರು ತಾವೂ ನೆಮ್ಮದಿಯಾಗಿರುವುದಿಲ್ಲ. ತಮ್ಮ ಜೊತೆಗೆ ಇರುವ ಇತರ ವ್ಯಕ್ತಿಗಳೂ, ಸಂಬಂಧಗಳೂ ನೆಮ್ಮದಿಯಾಗಿರುವುದಿಲ್ಲ ಮತ್ತು ಯಾರನ್ನು ದ್ವೇಷಿಸುತ್ತಾರೆಯೋ ಅವರನ್ನೂ ನೆಮ್ಮದಿಯಾಗಿರಿಸಬಾರದೆಂದು ಪ್ರಯತ್ನಿಸುತ್ತಿರುತ್ತಾರೆ.
ತಮ್ಮ ನೋವಿಗೆ, ನಷ್ಟಕ್ಕೆ, ಅವಮಾನಕ್ಕೆ ಕಾರಣರಾದವರನ್ನು ನಷ್ಟಕ್ಕೆ, ಅವಮಾನಕ್ಕೆ ಮತ್ತು ನೋವಿಗೆ ತಳ್ಳುವ ಈ ಮನೋರೋಗವಿರುವವರು “ನಾವು ಅವರಿಗೆ ಬುದ್ಧಿ ಕಲಿಸುತ್ತೇವೆ” ಎಂದು ಸಮರ್ಥಿಸಿಕೊಳ್ಳಲು ಯತ್ನಿಸುತ್ತಾರೆ. ಈ ರೋಗವು ಸಾಂಕ್ರಮಿಕದಂತೆ ವರ್ತಿಸುತ್ತದೆ. ಅದರಿಂದ ಒಬ್ಬ ವ್ಯಕ್ತಿಯನ್ನು ಸಮರ್ಥಿಸಿಕೊಳ್ಳಲು ಹಲವಾರು ಜನರೂ ಒಂದಾಗುವುದರಿಂದ ಗುಂಪು ಘರ್ಷಣೆಗಳು ನಡೆಯುವುದು, ಸಾಮೂಹಿಕ ರಕ್ತಪಾತಗಳಾಗುವುದೂ ನಡೆಯುವುದುಂಟು. ಹೊಂಚು ಹಾಕಿ ಕೊಲ್ಲುವುದು, ಎಷ್ಟೋ ಕಾಲಗಳಿಂದ ಕೊಲೆ ಮಾಡಲೆಂದೇ ಸಂಚು ಹೂಡುವುದು, ಅದಕ್ಕೆ ಅವರಿವರನ್ನು ಸಹಾಯಕ್ಕೆ ತೆಗೆದುಕೊಳ್ಳುವುದು; ಇತ್ಯಾದಿಗಳೆಲ್ಲವೂ ಕೂಡಾ ಈ ರೋಗದ ಪ್ರತಿಫಲವೇ. ಸಣ್ಣದೋ ದೊಡ್ಡದೋ ರೋಗ ರೋಗವೇ.
ಕೆಲವರು ತಾವಾಗಿ ಕೊಲೆ ಮಾಡಲು, ಅಥವಾ ಸೇಡು ತೀರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಅವರಿಗೆ ತೊಂದರೆ ಆಗಲೆಂದು ಕಾಯುತ್ತಿರುತ್ತಾರೆ. ಇದೊಂದು ಪುಟ್ಟ ಮಾನದಂಡವನ್ನು ಇಟ್ಟುಕೊಳ್ಳೋಣ. ನಮಗೆ ತೊಂದರೆ ಮಾಡಿದ್ದಾರೆಂದು ಅಥವಾ ನಷ್ಟ ಮಾಡಿದ್ದಾರೆಂದು ಆ ವ್ಯಕ್ತಿಗಳಿಗೂ ಕೂಡಾ ತೊಂದರೆ ನಷ್ಟವಾಗಲೆಂದು ಬಯಸುವ ಮನಸ್ಸಾದರೆ, ಅಥವಾ ಆದಾಗ ಸಂತೋಷವಾದರೆ, ಅವನಿಗೆ ಹಾಗೆ ಆಗಬೇಕಿತ್ತು ಎಂದು ಯಾರಿಗಾದರೂ ಅನ್ನಿಸಿದರೆ ಅವರಿಗೆ ಈ ಸಮಸ್ಯೆ ಇದೆ ಎಂದೇ ಅರ್ಥ.
ಅದಕ್ಕೆ ಶಬ್ಧಗಳಲ್ಲಿ ಬೇರೆ ಬೇರೆ ರೂಪಗಳನ್ನು ಕೊಡುತ್ತೇವೆ. “ಒಬ್ಬರಿಗೆ ಕೆಟ್ಟದು ಮಾಡಿದರೆ ಒಳ್ಳೆಯದಾಗತ್ತಾ? ಹಾಲು ಕುಡಿದ ಮಕ್ಕಳೇ ಬದುಕಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾರೆಯೇ?” ಎಂದೋ, “ನನ್ನ ಹೊಟ್ಟೆ ಉರಿ ಅವನನ್ನು ಸುಮ್ಮನೆ ಬಿಡುತ್ತದಾ?” ಎಂದೋ, “ದೇವರು ಸರಿಯಾಗಿ ತೋರಿಸದೇ ಇರುತ್ತಾನಾ?”; ಇವೆಲ್ಲವೂ ಪಿ ಟಿ ಎಸ್ ಡಿ ಅಥವಾ ಸೇಡಿನೊತ್ತಡದ ಸಮಸ್ಯೆಯ ಲಕ್ಷಣಗಳೇ.
ಈ ಸೇಡಿನ ಆಗ್ರಹದ ಮನೋಭಾವವು ಸಾಮಾನ್ಯವಾಗಿ ಸಹಜವಾಗಿಯೇ ಬರುವುದು. ಆದರೆ ಅದನ್ನು ಮುಂದುವರಿಸಿಕೊಂಡು ಪ್ರಜ್ಞಾಪೂರ್ವಕವಾಗಿ, ಅರಿವಿನಿಂದ ಕೂಡಿದವರಾಗಿ ಸರಿಪಡಿಸಿಕೊಳ್ಳದಿದ್ದರೆ ಅದು ಬಹಳ ಗಂಭೀರವಾದ ಮಾನಸಿಕ ಸಮಸ್ಯೆಯಾಗಿ ಪರಿಣಮಿಸಿ, ಗಂಭೀರವಾದ, ಭೀಕರವಾದ ಪರಿಣಾಮಗಳನ್ನು ಉಂಟು ಮಾಡುತ್ತದೆ.ಸೇಡು ತೀರಿಸಿಕೊಳ್ಳುವ ರೋಗವು ನಿಜಕ್ಕೂ ಬಾಲ್ಯದಲ್ಲಿಯೇ ತುಟಿಗಳಲ್ಲಿ ಹಾಲು ಆರುವ ಮುನ್ನವೇ ಹುಟ್ಟುತ್ತದೆ ಮತ್ತು ಬೆಳೆಯುತ್ತದೆ.
ಮಗುವು ನೆಲದ ಮೇಲೆ ಎಡವಿ ಬಿದ್ದಾಗ, ಅಳುತ್ತಿರುವ ಮಗುವನ್ನು ಸಮಾಧಾನಿಸಲು ಎಂದು, “ನೋವಾಯ್ತಾ? ಯಾರು ನಿನ್ನ ಬೀಳಿಸಿದ್ದು, ಹೊಡಿ, ಹೊಡಿ” ಎಂದು ನೆಲಕ್ಕೆ ‘ಅತ್ತ’ ಮಾಡಿಸುವಾಗಲೇ ಸೇಡಿನ ಭಾವದ ಬೀಜ ಬಿತ್ತಿದ್ದಾಯ್ತು. ಇನ್ನು ಚೌಕಾಬಾರದಲ್ಲಿ, ಪಗಡೆಯ ಆಟದಲ್ಲಿ ತನ್ನ ಕಾಯನ್ನು ಹೊಡೆದ ಅವನ ಕಾಯನ್ನು ಹೇಗಾದರೂ ಹೊಡೆಯಲೇ ಬೇಕೆಂದು ಹಟ ಹಿಡಿಯುವಲ್ಲಿ ಸೇಡಿನ ಭಾವ ಬಿತ್ತುವುದಿಲ್ಲ ಎಂದುಕೊಂಡಿರಾ? ಯಾರಾದರೂ ಮಗುವು ಕೇಳಿದ್ದನ್ನು ಕೊಡದೇ ಹೋದಾಗ ಅಥವಾ ತರದೇ ಇದ್ದಾಗ, ಆ ಕೋಪಕ್ಕೆ ಅಳಲು ಪ್ರಾರಂಭಿಸಿದಾಗ, “ಅವರು ನಿನಗೆ ಕೊಡಲಿಲ್ಲವಾ? ಅತ್ತ ಮಾಡು, ಅತ್ತ ಮಾಡು” ಎಂದು ನೀವು ಮಗುವಿನಿಂದ ಅವರಿಗೆ ಹೊಡೆಸುತ್ತಿದ್ದಾಗ ಸೇಡಿನ ಭಾವ ಬಲಿಯುವುದಿಲ್ಲ ಎಂದುಕೊಂಡಿರುವಿರಾ? ನನಗೆ ನಿರಾಸೆ ಉಂಟು ಮಾಡಿರುವವರನ್ನು, ನನಗೆ ಕೋಪ ತರಿಸಿದವರನ್ನು, ನನಗೆ ಹಿತ ಕೊಡದಿರುವವರನ್ನು ದಂಡಿಸಬೇಕು, ಶಿಕ್ಷಿಸಬೇಕು ಎಂದು ಬೆಳೆಸಿಕೊಳ್ಳುವ ಅರಿಮೆ ಮುಂದೆ ಎಷ್ಟರಮಟ್ಟಿಗೆ ಅರಳಿ ಬೆಳೆದು ವಿಸ್ತಾರವಾಗುವುದು ಗೊತ್ತೇ?
ಇನ್ನೊಂದು ವಿಷಯವೂ ನೆನಪಿನಲ್ಲಿಡಬೇಕು. ಅವರ್ಯಾರನ್ನೋ ತೋರಿಸಿ ಅತ್ತ ಮಾಡಿಸುವ ನಾವು ಎಷ್ಟೋ ವಿಷಯಗಳಲ್ಲಿ ನಾವೂ ಮಗುವಿನ ಅಥವಾ ವ್ಯಕ್ತಿಯ ನಿರೀಕ್ಷೆಗೆ ತಕ್ಕುದಾಗಿ ನಡೆದುಕೊಳ್ಳಲಾಗುವುದಿಲ್ಲ. ಅದು ಸಕಾರಣವೂ ಆಗಿರುವುದಿಲ್ಲ. ಆಗ ನಾವೂ ಅದರ ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ ಮತ್ತು ಅದರ ಮನಸ್ಸಿನಲ್ಲಿ ನಿರಾಸೆ, ಕೋಪ ಮತ್ತು ಬೇಸರವನ್ನು ಮೂಡಿಸಿರುತ್ತೇವೆ. ಆಗ ಈಗಾಗಲೇ ರೂಢಿಯಾಗಿರುವ ಸೇಡಿನ ಆಗ್ರಹದಂತೆ ಆ ಮನಸ್ಸು ನಮ್ಮನ್ನೂ ದ್ವೇಷಿಸಲು ಆರಂಭಿಸುತ್ತದೆ. ಎಷ್ಟೋ ಮಕ್ಕಳು ತಾವು ದೊಡ್ಡವರಾದ ಮೇಲೆ ತಮ್ಮ ತಂದೆ, ತಾಯಿ ಅಥವಾ ಇತರ ಕುಟುಂಬದ ಸದಸ್ಯರ ಮೇಲೆ ನಾನಾ ರೀತಿಯಲ್ಲಿ ಸೇಡುತೀರಿಸಿಕೊಳ್ಳುತ್ತಿರುತ್ತಾರೆ.
ಆದರೆ ಅದನ್ನು ಸೇಡು ಎಂದು ಅವರು ಭಾವಿಸಿರುವುದಿಲ್ಲ. ನಮ್ಮ ಮಹಾಭಾರತ ಮತ್ತು ರಾಮಾಯಣದಂತಹ ಮಹಾಕಾವ್ಯಗಳಿಂದ ಹಿಡಿದು, ಅನೇಕಾನೇಕ ಚಾರಿತ್ರಿಕ ದಾಖಲೆಗಳೂ ಸೇಡಿನ ರಾಜಕಾರಣ ಮತ್ತು ಸಂಘರ್ಷವನ್ನು ಬಹಳ ಸ್ಪಷ್ಟವಾಗಿ ಮತ್ತು ಹಟಮಾರಿತನದಿಂದ ಸಾಧಿಸಿವೆ. ಇನ್ನು ಸಿನಿಮಾಗಳಲ್ಲಂತೂ ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ, ಸಹೋದರರ ಸವಾಲ್ ಎನ್ನುತ್ತಾ ಹಲವಾರು ಚಲನಚಿತ್ರಗಳು ಸೇಡನ್ನು ತೀರಿಸಿಕೊಳ್ಳುವುದೇ ಒಂದು ಮೌಲ್ಯವೆಂಬಂತೆ ಪ್ರತಿಪಾದಿಸಿಕೊಂಡು ಬಂದಿವೆ.ವಿಶ್ವದ ಬಹುತೇಕ ಎಲ್ಲಾ ಭಾಷೆಗಳಲ್ಲೂ ಸೇಡು ತೀರಿಸಿಕೊಳ್ಳುವುದು ಅಥವಾ ಪ್ರತಿಕಾರ ತೆಗೆದುಕೊಳ್ಳುವುದು ಒಂದು ವೀರತೆಯ ಲಕ್ಷಣವೆಂದು ಪ್ರದರ್ಶಿಸಿದ್ದಾರೆ. ಸೇಡು ಮನಸ್ಸಿನ ವಿಕೃತಿಯ ಲಕ್ಷಣ. ಈ ರೋಗ ಬರೀ ವ್ಯಕ್ತಿಗಳಲ್ಲಿ ಮಾತ್ರವಲ್ಲ ಸಾಮುದಾಯಿಕವಾಗಿಯೂ ಕೂಡಾ ಸೋಂಕನ್ನು ಹರಡಿಸುತ್ತದೆ.
ಸಾಮುದಾಯಿಕ ಸೋಂಕು
ಈ ಮುಸ್ಲೀಂ ಉಗ್ರರಿದ್ದಾರೆ ಎಂದು ಇಲ್ಲಿರುವ ಮುಸ್ಲೀಮರನ್ನು ಅನುಮಾನಿಸುವುದು, ಅಪಮಾನಿಸುವುದು, ಅವರ ಮೇಲೆ ಸೇಡು ತೀರಿಸಿಕೊಳ್ಳುವಂತೆ ವರ್ತಿಸುವುದು ಕೂಡಾ ಸಾಮುದಾಯಿಕವಾದ ಪಿ ಟಿ ಎಸ್ ಡಿ. ಹಾಗೆಯೇ ಬ್ರಾಹ್ಮಣರು ಮತ್ತು ಇತರ ಸವರ್ಣೀಯವೆಂದು ಗುರುತಿಸಿಕೊಂಡಿರುವ ಸಮುದಾಯಗಳು ತಮ್ಮ ಮಡಿವಂತಿಕೆಯಿಂದ ಇತರ ತಳವರ್ಗದವರಿಗೆ ಅಪಮಾನ ಮಾಡಿದ್ದವು ಎಂದು ಇಂದು ಅವರನ್ನು ಅಪಮಾನಿಸುವುದು, ಅನುಮಾನಿಸುವುದು, ಹೆಜ್ಜೆ ಹೆಜ್ಜೆಗೂ ಅವರನ್ನು ನಿಂದಿಸುವುದು, ಎಲ್ಲರನ್ನೂ ಒಂದೇ ತಟ್ಟೆಯಲ್ಲಿಟ್ಟು ತೂಗುವುದು ಕೂಡಾ ಇದೇ ಮನೋರೋಗದ ಲಕ್ಷಣವೇ.
ಸೇಡಿನ ಮನೋಭಾವಕ್ಕೆ ಯಾವುದಾದರೂ ಒಂದು ಲಾಂಛನ ಬೇಕಾಗಿರುತ್ತದೆ. ಅದು ತನ್ನನ್ನು ತಾನು ಪ್ರಕಟಗೊಳಿಸಿಕೊಳ್ಳಲು ಯತ್ನಿಸುತ್ತಿರುತ್ತದೆ. ಯಾವ ನೆಪವಾದರೂ ಸರಿಯೇ. ಯಾವುದೇ ಪ್ರತಿಕ್ರಿಯೆ, ಪ್ರತಿಭಟನೆಯು ಸಾಂದರ್ಭಿಕವಾದ ಕ್ರಿಯೆಗೆ ಮತ್ತು ಪೂರ್ವಾಗ್ರಹವಿಲ್ಲದೆಯೇ ಇದೆಯೇ ಎಂಬುವುದನ್ನು ನಾವೇ ಗಮನಿಸಿಕೊಳ್ಳಬೇಕಾಗುತ್ತದೆ. ವ್ಯಕ್ತಿಯಿಂದ ಆದ ನಕಾರಾತ್ಮಕವಾದ ಅನುಭವದಿಂದ ತಾವೂ ನಕಾರಾತ್ಮಕವಾಗಿ ಅವರಿಗೆ ಚುರುಕು ಮುಟ್ಟಿಸಬೇಕು ಎಂಬ ಸೇಡಿನ ಭಾವ ಹೇಗೆ ವ್ಯಕ್ತಿಯಲ್ಲಿನ ಮಾನಸಿಕ ಸಮಸ್ಯೆಯೋ ಹಾಗೆಯೇ ಸಾಮುದಾಯಿಕವಾಗಿಯೂ ಕೂಡಾ ಇಂತಹ ಸಂಕಲಿತ ಮಾನಸಿಕ ಸಮಸ್ಯೆಗಳು ಇರುತ್ತವೆ.
ಹಿಂದೆಂದೋ ಅಥವ ಈಗೆಲ್ಲೋ ಆದ ಮತಾಂತರವನ್ನು ವಿರೋಧಿಸಲು ಅದಕ್ಕೆ ಸಂಬಂಧವೇ ಇಲ್ಲದ ಇತರ ಮುಸ್ಲೀಂ ಮತ್ತು ಕ್ರೈಸ್ತರ ಮೇಲೆ ದಾಳಿ ಮಾಡುವುದು, ಯಾರೋ ಕರ್ಮಠ ಬ್ರಾಹ್ಮಣರ ಮಡಿವಂತಿಕೆಯ ಮತ್ತು ಸಂಕುಚಿತ ಮನಸ್ಥಿತಿಯನ್ನು ವಿರೋಧಿಸಲು ಎಲ್ಲಾ ಬ್ರಾಹ್ಮಣರೂ ಹೀಗೆ ಎಂದು ನಿರ್ಧಾರಕ್ಕೆ ಬರುವುದು, ಅವಹೇಳನ ಮಾಡುವುದು; ಸಾಮುದಾಯಿಕ ಮಾನಸಿಕ ಸಮಸ್ಯೆಗಳೇ ಆಗಿವೆ.ಇದರ ಜೊತೆಗೆ ಸೇಡಿನ ಭಾವವು ಸೇರಿಕೊಂಡರೆ ನಾಗರಿಕ ಸಮಾಜದಲ್ಲಿ ಸಾಮರಸ್ಯ ಕದಡುವುದು. ಪ್ರತಿಯೊಬ್ಬರ ಬದುಕಿಗೆ ಅಗತ್ಯವಿರುವುದನ್ನು ಗಮನಿಸದೇ ಸೇಡು ತೀರಿಸಿಕೊಳ್ಳುವ ಉನ್ಮತ್ತತೆಯಲ್ಲಿ ಕತ್ತಿ ಝಳಪಿಸುತ್ತಿರುತ್ತಾರೆ.
ಹೌದು, ವ್ಯಕ್ತಿಗತವಾಗಿ ನಮಗೆ ನಿರಾಸೆಯಾಗಿದೆ. ಸಾಮುದಾಯಿಕವಾಗಿ ನಮಗೆ ನೋವಾಗಿದೆ. ಹಾಗಾದರೆ ಏನು ಮಾಡಬೇಕು? ಸೇಡು ತೀರಿಸಿಕೊಳ್ಳುವ ಪ್ರವೃತ್ತಿ ಮಾನಸಿಕ ಸಮಸ್ಯೆ ಎಂದಾದರೆ ಅದನ್ನು ನಿವಾರಿಕೊಳ್ಳಲು ಏನು ಮಾಡಬೇಕು? ಆ ಬಾಧೆಯನ್ನು ಶಮನ ಮಾಡಿಕೊಳ್ಳಲು ಏನು ಮಾಡಬೇಕು? ಮುಂದೆ ನೋಡೋಣ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ



