Connect with us

ಬಹಿರಂಗ

’ಪತ್ರಕರ್ತ’ರು ಎಂದು ಕರೆಸಿಕೊಳ್ಳುವ ಯೋಗ್ಯತೆ ಇದೆಯೇ?

Published

on

  • ಸತೀಶ್ ಚಪ್ಪರಿಕೆ

ನ್ನಡ ಸುದ್ದಿ ಚಾನೆಲ್ ಗಳ ಎಲ್ಲ ಮುಖ್ಯಸ್ಥರಿಗೆ ನನ್ನ ನಮಸ್ಕಾರಗಳು. ಇದು ನಾನು ನಿಮಗೆಲ್ಲ ಬರೆಯುತ್ತಿರುವ ಬಹಿರಂಗ ಪತ್ರ. ಈ ವಿಷಯದ ಕುರಿತು ನಿಮ್ಮಲ್ಲಿ ಯಾರೇ ಯಾವ ವೇದಿಕೆಯಲ್ಲಿ ಬಹಿರಂಗ ಚರ್ಚೆ ಮಾಡಲು ಕರೆದರೂ ನಾನು ಬರಲು ಸಿದ್ಧ.

ಈವತ್ತು ಒಮ್ಮೆ ನಿಮ್ಮ ಮನೆ ಅಥವಾ ಕಚೇರಿಯಲ್ಲಿನ ಕನ್ನಡಿಯ ಮುಂದೆ ಹೋಗಿ ನಿಲ್ಲಿ. ಒಂದೈದು ನಿಮಿಷ ಕನ್ನಡಿಯ ಮುಂದೆ ನಿಂತು ’ಪತ್ರಕರ್ತ’ ಎಂದು ಕರೆಸಿಕೊಳ್ಳುವ ಯೋಗ್ಯತೆ ನಿಮಗಿದೆಯೇ ಎನ್ನುವುದನ್ನು ಯೋಚಿಸಿ. ಅದೇ ರೀತಿ ನಿಮ್ಮ ಮನೆಯಲ್ಲಿರುವ ಪತ್ನಿ, ಮಕ್ಕಳು, ತಂದೆ-ತಾಯಿಯ ಎದುರು ನಿಂತು ಅದೇ ಪ್ರಶ್ನೆಯನ್ನು ಕೇಳಿ. ಕನಿಷ್ಠ ಅವರು ನಿಮ್ಮ ನಿಲುವನ್ನು ಸಮರ್ಥಿಸುತ್ತಾರಾ ಎಂದು ಅರಿತುಕೊಳ್ಳಿ.

ಇದುವರೆಗೆ ನಿಮ್ಮಗಳ ಕುರಿತು ಒಬ್ಬ ಪತ್ರಕರ್ತನಾಗಿ ನಾನು ಈ ರೀತಿಯ ಬಹಿರಂಗ ಹೇಳಿಕೆ ನೀಡಿಲ್ಲ. ಈವತ್ತು ನೀಡುತ್ತಿದ್ದೇನೆ ಏಕೆಂದರೆ, ನೀವೆಲ್ಲ ನಿಮ್ಮ ನಿಮ್ಮ ಸುದ್ದಿ ವಾಹಿನಿಗಳಲ್ಲಿ ಮದ್ಯದಂಗಡಿಗಳ ತೆರೆಯುವಿಕೆಯ ಕುರಿತು ಸಂಭ್ರಮಿಸುತ್ತಿರುವ ರೀತಿ. ಇದ್ಯಾವ ಪತ್ರಿಕಾ ವ್ಯವಸಾಯ? ಯಾವ ರೀತಿಯ ವರದಿಗಾರಿಕೆ?

ನಿಮಗೆಲ್ಲ ಒಂದಿಷ್ಟು ಅಂತಃಸಾಕ್ಷಿಯಿದ್ದಿದ್ದರೆ, ಈ ಸಮಾಜದ ಬಗ್ಗೆ ಕಳಕಳಿ ಇದ್ದಿದ್ದರೆ ಈ ಅವಕಾಶವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಸಂಪೂರ್ಣ ಮದ್ಯ ನಿಷೇಧದ ಬಗ್ಗೆ ಲಾಬಿ ಮಾಡಬೇಕಿತ್ತು. ಅಬಕಾರಿ ಆದಾಯವೇ ಬಹಳ ದೊಡ್ಡದು ಎಂಬ ಸರ್ಕಾರದ ಮಾತನ್ನು ನೀವು ನಂಬಿದರೆ ನಿಮಗಿಂತ ದೊಡ್ಡ ಮೂರ್ಖರಿಲ್ಲ. ಮೇಲ್ನೋಟಕ್ಕೆ ಅಬಕಾರಿ ಆದಾಯ ಸರ್ಕಾರದ ಒಂದಿಷ್ಟು ಬೊಕ್ಕಸ ತುಂಬಿಸುತ್ತಿರಬಹುದು. ಆದರೆ, ಪರೋಕ್ಷವಾಗಿ ಜನರ ಆರೋಗ್ಯದ ಮೇಲೆ ಆಗುತ್ತಿರುವ ಪರಿಣಾಮ ಮತ್ತು ಅದರ ನಿರ್ವಹಣೆಗೆ ಸರ್ಕಾರ ಖರ್ಚು ಮಾಡುತ್ತಿರುವ ಹಣದ ಪ್ರಮಾಣ ಬರುತ್ತಿರುವ ಆದಾಯಕ್ಕಿಂತ ನಾಲ್ಕು ಪಟ್ಟು.

ಈ ವಿಷಯವನ್ನು ರಾಜಕಾರಣಿಗಳಿಗೆ, ನಮ್ಮನ್ನು ಆಳುತ್ತಿರುವವರಿಗೆ ಮನನ ಮಾಡಿಕೊಡಲು ಸಿಕ್ಕಿದ್ದ ಬಹಳ ದೊಡ್ಡ ಅವಕಾಶವನ್ನು ನೀವೆಲ್ಲ ಕಳೆದುಕೊಂಡಿರಿ. ಹಾಗೆ ಮಾಡುವುದನ್ನು ಬಿಟ್ಟು ನೀವಿಂದು ಸಂಭ್ರಮಿಸುತ್ತಿರುವ ರೀತಿಯನ್ನು ಕಂಡರೆ ನೀವು ಮದ್ಯದ ಲಾಬಿಯ ಪರವಾಗಿ ಲಾಬಿ ಮಾಡುತ್ತಿದ್ದೀರಿ ಎನ್ನುವುದು ಸ್ಪಷ್ಟವಾಗುತ್ತದೆ.

ನೀವು ನೈತಿಕವಾಗಿ ಎಷ್ಟು ಅಧಃಪತನಕ್ಕೆ ಇಳಿದಿದ್ದೀರಿ ಎನ್ನುವುದಕ್ಕೆ ಈವತ್ತು ಬೆಳಿಗ್ಗೆಯಿಂದ ನಿಮ್ಮ-ನಿಮ್ಮ ಸುದ್ದಿ ವಾಹಿನಿಗಳಲ್ಲಿ ಕ್ಯಾಮರಾ ಮುಂದೆ ಕೂತಿರುವ ಆಂಕರ್‍ ಗಳು ಮತ್ತು ನಿಮ್ಮ ವರದಿಗಾರರು ಮದ್ಯದಂಗಡಿಗಳ ತೆರವಿನ ಬಗ್ಗೆ ಸಂಭ್ರಮಿಸುತ್ತಿರುವ ರೀತಿಯೇ ಸಾಕ್ಷಿ. ಇನ್ನು ಇಂತಹ ಒಂದು ಸುದ್ದಿಯನ್ನು ವೈಭವೀಕರಿಸುತ್ತಿರುವ ರೀತಿ.

ಕೇವಲ ಒಂದೇ ಒಂದು ಸುದ್ದಿಯ ತುಣುಕಾಗಿ ಸರಿದು ಹೋಗಬೇಕಾಗಿದ್ದ ಮದ್ಯದಂಗಡಿ ತೆರವು ಎಂಬ ಸುದ್ದಿ ಇಂದು ರಾರಾಜಿಸುತ್ತಿದ್ದರೆ, ಅದಕ್ಕೆ ಕಾರಣ ನೈತಿಕವಾಗಿ ನೀವೆಷ್ಟು ಅಧಃಪತನಗೊಂಡಿರುವುದು. ಟಿ ಆರ್ ಪಿ ಮತ್ತು ರೆವಿನ್ಯೂ ಅಗತ್ಯ ಎಷ್ಟು ಎನ್ನುವುದು ನನಗೆ ಸರಿಯಾಗಿ ಗೊತ್ತು. ಆದರೆ, ಅದಕ್ಕಾಗಿ ಅಂತಃಸಾಕ್ಷಿಯನ್ನು ಮಾರುವ ಅಗತ್ಯವಿಲ್ಲ.

ನಿಮಗೆಲ್ಲ ಸಮಾಜದ ಪರ, ಸಮಾಜದ ಸ್ವಾಸ್ಥ್ಯದ ಪರ ನಿಲ್ಲುವ ಒಂದು ಅಮೋಘ ಅವಕಾಶ ಇತ್ತು. ಕಳೆದ ನಲವತ್ತು ದಿನಗಳಿಂದ ಈ ರಾಜ್ಯ (ದೇಶ)ದ ಜನರು ಮದ್ಯವಿಲ್ಲದೇ ಬದುಕಿ ಉಳಿದಿದ್ದರು. ಇನ್ನು ಮುಂದೆ ಕೂಡ ಬದುಕಲಿದ್ದರು.

ಇದೇ ಅವಕಾಶವನ್ನು ಉಪಯೋಗಿಸಿಕೊಂಡು ಸುದ್ದಿ ಚಾನೆಲ್ ಗಳೆಲ್ಲವೂ ಒಂದಾಗಿ ಮದ್ಯ ನಿಷೇಧದ ಒಂದು ಚಳವಳಿ ಆರಂಭಿಸಬಹುದಿತ್ತು. ಆ ಚಳವಳಿಯ ಮೂಲಕ ಜನಾಭಿಪ್ರಾಯ ಮೂಡಿಸಿ, ಮದ್ಯ ನಿಷೇಧ ಜಾರಿಗೆ ತರುವಂತೆ ಮಾಡಬಹುದಿತ್ತು. ಅದನ್ನು ಬಿಟ್ಟು… ನೀವಿಂದು ಮೂರೂ ಬಿಟ್ಟು ರಾಜ್ಯದ ಜನರೆದುರು ಬೆತ್ತಲಾಗಿ ನಿಂತಿದ್ದೀರಿ. ಪತ್ರಕರ್ತರಾಗಿ ಸತ್ತು ಹೋಗಿದ್ದೀರಿ. ನಿಮ್ಮನ್ನು ಕಂಡರೆ ಅಯ್ಯೋ ಎನಿಸುತ್ತಿದೆ. ಅಷ್ಟೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

Trending