ದಿನದ ಸುದ್ದಿ
ಪ್ರಾಟೆಸ್ಟೆಂಟ್ ಕ್ರಿಶ್ಚಿಯನ್ ಮಾದರಿಯಲ್ಲಿ ಬೌದ್ಧ ಧರ್ಮ ಕಟ್ಟಲು ಬಾಬಾಸಾಹೇಬ್ ಅಂಬೇಡ್ಕರರು ರೂಪಿಸಿದ್ದ ನೀಲನಕ್ಷೆ
- ರಘೋತ್ತಮ ಹೊ.ಬ
1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ ಅವರು ಭಾರತದಲ್ಲಿ ಬೌದ್ಧ ಧರ್ಮ ಬೆಳೆಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ವಿವರಿಸಲು ಸಭೆಗೆ ನೀಲನಕ್ಷೆ ಮಾದರಿಯಲ್ಲಿ ಒಂದು ಮನವಿ ಪತ್ರ ಸಲ್ಲಿಸುತ್ತಾರೆ.
ಆ ನೀಲನಕ್ಷೆಯ ಮುಖ್ಯಾಂಶಗಳನ್ನು ದಾಖಲಿಸುವುದಾದರೆ
ಮೊದಲಿಗೆ ಬಾಬಾಸಾಹೇಬರು ಹೇಳುವುದು ಮತಾಂತರ ಹೊಂದಿದವರಿಗೆ ಅಗತ್ಯವಾಗಿರುವ ಒಂದು ಬೌದ್ಧ ಧರ್ಮಗ್ರಂಥದ ಬಗ್ಗೆ. ಈ ನಿಟ್ಟಿನಲ್ಲಿ ಕ್ರೈಸ್ತ ಧರ್ಮ ಹೋಲಿಸುವ ಅವರು ಕ್ರೈಸ್ತ ಧರ್ಮ ಬೆಳೆಯಲು ಕಾರಣ ಅವರಲ್ಲಿ ಇರುವ ಬೈಬಲ್ ನಂತಹ ಯಾರಾದರೂ ಸುಲಭವಾಗಿ ಇಟ್ಟುಕೊಳ್ಳಬಹುದಾದ ಸಣ್ಣ ಪುಸ್ತಕ. ಆದರೆ ಬೌದ್ಧ ಧರ್ಮಕ್ಕೆ ಅಂತಹ ಅನುಕೂಲ ಇಲ್ಲ ಎನ್ನುತ್ತಾರೆ.
ಇದಕ್ಕೆ ಅವರು ಕೊಡುವ ಕಾರಣ ಸಾಮಾನ್ಯ ಅನುಯಾಯಿಯೊಬ್ಬ ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಪಾಳಿ ಭಾಷೆಯ 73 ಆ ಬೃಹತ್ ಸಂಪುಟಗಳನ್ನು ಓದಲಾರ ಎಂಬುದು. ಖಂಡಿತ, ಬಾಬಾಸಾಹೇಬರು ಹೇಳುವಂತೆ 73 ಆ ಬೃಹತ್ ಸಂಪುಟಗಳನ್ನು ಸಾಮಾನ್ಯ ಓದುಗನಿರಲಿ ಪಂಡಿತರೂ ಕೂಡ ಓದಲಾರರು. ಈ ನಿಟ್ಟಿನಲ್ಲಿ ಬೈಬಲ್ ಮಾದರಿಯಲ್ಲೇ ಬೌದ್ಧಧರ್ಮಕ್ಕೂ ಧರ್ಮ ಗ್ರಂಥವೊಂದನ್ನು ತಯಾರಿಸುವ ಇಂಗಿತ ವ್ಯಕ್ತಪಡಿಸುವ ಬಾಬಾಸಾಹೇಬರು ಆ ಗ್ರಂಥದಲ್ಲಿ ಬುದ್ಧನ ಸಾಮಾಜಿಕ ಮತ್ತು ನೈತಿಕ ನಿಲುವಿಗೆ ಹೆಚ್ಚು ಒತ್ತು ಕೊಡಬೇಕಾದ ಅಗತ್ಯತೆ ಹೇಳುತ್ತಾರೆ.
ಯಾಕೆಂದರೆ ಅವರು ಹೇಳುವುದು ಇದುವರೆಗೂ ಬೌದ್ಧ ಗ್ರಂಥಗಳಲ್ಲಿ ಆದ್ಯತೆ ಕೊಟ್ಟಿರುವುದು ಧ್ಯಾನ, ಚಿಂತನೆ ಮತ್ತು ಅಭಿಧಮ್ಮಕ್ಕೆ. ಈ ದಿಸೆಯಲ್ಲಿ ಈ ಮಾದರಿಯಲ್ಲಿ ಅಂದರೆ ಧ್ಯಾನ, ಚಿಂತನೆ ಮತ್ತು ಅಭಿಧಮ್ಮದ ಮಾದರಿಯಲ್ಲಿ ಭಾರತದಲ್ಲಿ ಬೌದ್ಧ ಧರ್ಮ ಹರಡುವುದನ್ನು ಮುಂದುವರೆಸಿದ್ದೇ ಆದರೆ ಅದು ಅಕ್ಷರಶಃ ಬೌದ್ಧ ಧರ್ಮದ ಬೆಳವಣಿಗೆಗೆ ಮಾರಣಾಂತಿಕವಾಗಿ ಪರಿಣಮಿಸಲಿದೆ ಎನ್ನುತ್ತಾರೆ ಅಂಬೇಡ್ಕರರು.
ಇನ್ನು ಎರಡನೇ ಅಂಶ ತಮ್ಮ ಆ ನೀಲನಕ್ಷೆಯಲ್ಲಿ ಬಾಬಾಸಾಹೇಬರು ಹೇಳುವುದು; ಬೌದ್ಧ ಧರ್ಮದಲ್ಲಿ ಸಾಮಾನ್ಯ ಅನುಯಾಯಿಗಳಿಗೆ ಕ್ರೈಸ್ತ ಧರ್ಮದ ಮಾದರಿಯಲ್ಲಿ ದೀಕ್ಷೆ ನೀಡುವ ಪದ್ಧತಿ ಆರಂಭಿಸುವ ಬಗ್ಗೆ. ಯಾಕೆಂದರೆ ಅವರು ಹೇಳುವುದು ಬೌದ್ಧ ಧರ್ಮದಲ್ಲಿ ಭಿಕ್ಕುಗಳಿಗೆ ಮಾತ್ರ ಈ ಥರದ ದೀಕ್ಷಾ ನೀಡುವ ಪದ್ಧತಿ ಇದ್ದು ಮತಾಂತರ ಆಗುವ ಸಾಮಾನ್ಯ ಅನುಯಾಯಿಗಳಿಗೆ ಅಂತಹ ಯಾವುದೇ ದೀಕ್ಷಾ ಪದ್ಧತಿ ಇಲ್ಲ ಎಂದು.
ಈ ಹಿನ್ನೆಲೆಯಲ್ಲಿ ಎಷ್ಟೋ ಜನ ಬೌದ್ಧ ಧರ್ಮಕ್ಕೆ ಸೇರುತ್ತಾರದರೂ ಅಂತಹ ಒಂದು ದೀಕ್ಷಾ ಪದ್ಧತಿ ಇಲ್ಲದ್ದರಿಂದಾಗಿ ಇದ್ದಕ್ಕಿದ್ದಂತೆ ಅವರು ಬಿಟ್ಟು ಹೋಗುತ್ತಿದ್ದಾರೆ. ಆದ್ದರಿಂದ ಕ್ರೈಸ್ತ ದೀಕ್ಷೆಯ ಮಾದರಿಯಲ್ಲಿ ಯಾವುದೇ ಒಬ್ಬ ವ್ಯಕ್ತಿ ಬೌದ್ಧ ಎನಿಸಿಕೊಳ್ಳಲು ಕಡ್ಡಾಯವಾಗಿ ಅಂತಹ ಒಂದು ದೀಕ್ಷೆ ಸ್ವೀಕರಿಸುವ ಅಗತ್ಯತೆ ಅವರು ಹೇಳುತ್ತ ಅಂತೆಯೇ ಒಂದು ಬೌದ್ಧ ದೀಕ್ಷಾ ಪದ್ಧತಿಯನ್ನು ಆರಂಭಿಸುವ ಬಗ್ಗೆ ಅಂಬೇಡ್ಕರ್ ರು ಸ್ಪಷ್ಟವಾಗಿ ಒತ್ತಿ ಹೇಳುತ್ತಾರೆ.
ಹಾಗೆಯೇ ಆ ದೀಕ್ಷೆಯಲ್ಲಿ ಕೇವಲ ಪಂಚಶೀಲ ಉಚ್ಛರಿಸಿದರಷ್ಟೆ ಸಾಲದು ಜೊತೆಗೆ ಅಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸಬೇಕು ಹೇಗೆಂದರೆ ದೀಕ್ಷೆ ಸ್ವೀಕರಿಸಿದ ತಕ್ಷಣ ಆತನಲ್ಲಿ ತಾನು ಹಿಂದೂ ಎಂಬ ಮನೋಭಾವ ಹೋಗಬೇಕು ಆತ ಹೊಸ ಮನುಷ್ಯನಂತೆ ಆಗಬೇಕು ಎಂದು ಅಂಬೇಡ್ಕರರು ತಮ್ಮ ಆ ದೀಕ್ಷಾ ಪದ್ಧತಿ ಇರಬೇಕಾದ ರೀತಿಯನ್ನು ಹೇಳುತ್ತಾರೆ.
ಮುಂದುವರಿದು ಬೌದ್ಧ ಧರ್ಮ ಬೆಳವಣಿಗೆಯ ತಮ್ಮ ಆ ಬೃಹತ್ ಯೋಜನೆಯ ನೀಲನಕ್ಷೆಯಲ್ಲಿ ಅವರು ಹೇಳುವುದು ಬೌದ್ಧ ಧರ್ಮ ಬೋಧಕರ ಬಗ್ಗೆ. ಈ ನಿಟ್ಟಿನಲ್ಲಿ ಬೌದ್ಧ ಧರ್ಮ ಬೋಧಕರನ್ನು ನೇಮಿಸಿಕೊಳ್ಳಬೇಕೆನ್ನುವ ಅಂಬೇಡ್ಕರರು ಅಂತಹ ಬೋಧಕರು ಸಾಮಾನ್ಯ ಅನುಯಾಯಿಗಳಿಗೆ ಧಮ್ಮ ಬೋಧಿಸಬೇಕು ಮತ್ತು ಅನುಯಾಯಿಗಳು ಬುದ್ಧನ ಆ ಧಮ್ಮವನ್ನು ಹೇಗೆ ಪಾಲಿಸುತ್ತಿದ್ದಾರೆ ಎಂಬುದನ್ನೂ ಗಮನಿಸುತ್ತಿರಬೇಕು ಎನ್ನುತ್ತಾರೆ.
ಹಾಗೆಯೇ ಆ ಬೋಧಕರಿಗೆ ಸಂಬಳ ನೀಡುವ ಅಗತ್ಯತೆ ಹೇಳುವ ಅಂಬೇಡ್ಕರರು ಮದುವೆಯಾಗಿರುವವರನ್ನು ಕೂಡ ಅಂತಹ ಬೌದ್ಧ ಧಮ್ಮ ಬೋಧಕ ವೃತ್ತಿಗೆ ನೇಮಿಸಿಕೊಳ್ಳಬಹುದು ಎನ್ನುತ್ತಾರೆ, ಜೊತೆಗೆ ಅಂತಹವರು ಆರಂಭದಲ್ಲಿ ಪಾರ್ಟ್ ಟೈಮ್ ವೃತ್ತಿ ಮಾಡುತ್ತಿದ್ದರು ಕೂಡ ತಪ್ಪೇನಿಲ್ಲ ಎನ್ನುತ್ತಾರೆ. ಅಂದರೆ ಬಾಬಾಸಾಹೇಬರ ಪ್ರಕಾರ ಅಂತಹ ಧಮ್ಮ ಬೋಧಕರು ತಮ್ಮ ಧಮ್ಮ ಬೋಧನೆಯ ಜೊತೆ ಜೊತೆಗೆ ತಮ್ಮ ಸಂಸಾರ ಮತ್ತು ತಮ್ಮ ವೃತ್ತಿಯನ್ನೂ ಕೂಡ ನಿರ್ವಹಿಸಬಹುದು.
ಮುಂದುವರಿದು ಬಾಬಾಸಾಹೇಬರು ಹೇಳುವುದು ಬೌದ್ಧ ಧಾರ್ಮಿಕ ಪೂಜಾ ಶಾಲೆಗಳನ್ನು ಸ್ಥಾಪಿಸುವ ಬಗ್ಗೆ. ಅಂದಹಾಗೆ ಅಂತಹ ಶಾಲೆಗಳಲ್ಲಿ ಉದ್ದೇಶಿತ ಆ ಧಮ್ಮ ಬೋಧಕರು ಬೌದ್ಧ ಧರ್ಮವನ್ನು ಬೋಧಿಸಬಹುದು, ಅದರ ಜೊತೆಗೆ ಇತರ ಧರ್ಮಗಳನ್ನು ಬೌದ್ಧ ಧರ್ಮದ ಜೊತೆಗೆ ಹೋಲಿಸಿ ಧಮ್ಮದ ಅಧ್ಯಯನ ಮಾಡಬಹುದು ಎನ್ನುತ್ತಾರೆ.
ಈ ಸಂದರ್ಭದಲ್ಲಿ ಬಾಬಾಸಾಹೇಬರು ಒಂದು ಪ್ರಮುಖ ವಿಚಾರ ಪ್ರಸ್ತಾಪಿಸುತ್ತಾರೆ. ಅದು ವಿಹಾರದಲ್ಲಿ ಪ್ರತಿ ಭಾನುವಾರ ಬೌದ್ಧ ಪೂಜಾ ಸಂಪ್ರದಾಯವೊಂದನ್ನು ಆರಂಭಿಸುವ ಬಗ್ಗೆ. ಅಂದಹಾಗೆ ಅಂತಹ ಪೂಜೆಯ ನಂತರ ಧಮ್ಮ ಪ್ರವಚನ ಮಾಡಬೇಕು ಎಂದು ಅವರು ಸ್ಪಷ್ಟವಾಗಿ ಹೇಳುತ್ತಾರೆ.
ಒಟ್ಟಾರೆ ಬಾಬಾಸಾಹೇಬ್ ಅಂಬೇಡ್ಕರ ಈ ನೀಲನಕ್ಷೆಯಂತೆ ಒಂದು ಬೌದ್ಧ ಧರ್ಮ ಗ್ರಂಥ ರಚಿಸುವುದು, ಒಂದು ಬೌದ್ಧ ದೀಕ್ಷಾ ಪದ್ಧತಿ ಸೃಷ್ಟಿಸುವುದು, ಬೌದ್ಧ ಬೋಧಕರನ್ನು ನೇಮಿಸಿಕೊಳ್ಳುವುದು ಮತ್ತು ಪೂಜಾ ಪದ್ಧತಿಯೊಂದನ್ನು ಪ್ರಾರಂಭಿಸಿ ಪ್ರತಿ ಭಾನುವಾರ ಬೌದ್ಧ ಅನುಯಾಯಿಗಳು ಅಂತಹ ವಾರದ ಪ್ರಾರ್ಥನೆಯಲ್ಲಿ ಕಡ್ಡಾಯ ವಾಗಿ ಪಾಲ್ಗೊಳ್ಳುವಂತೆ ಮಾಡುವುದು ಅವರ ಆ ಮಹತ್ವದ ಯೋಜನೆ ಮತ್ತು ಯೋಚನೆಯಾಗಿತ್ತು.
ಹಾಗಿದ್ದರೆ ಧಮ್ಮ ಬೆಳೆಸಲು ಇದಿಷ್ಟೇ ಸಾಕೆ? ವಿಹಾರಗಳು ಬೇಡವೆ? ಇದಕ್ಕೂ ತಮ್ಮ ನೀಲನಕ್ಷೆಯಲ್ಲಿ ಹೇಳುವ ಬಾಬಾಸಾಹೇಬರು ಭಾರತದ ನಾಲ್ಕು ಪ್ರಮುಖ ನಗರಗಳಲ್ಲಿ ಅಂದರೆ ಮದ್ರಾಸ್, ಬಾಂಬೆ, ನಾಗಪುರ ಮತ್ತು ದೆಹಲಿಯಲ್ಲಿ ದೊಡ್ಡ ದೊಡ್ಡ ಬೌದ್ಧ ದೇಗುಲಗಳನ್ನು ವಿಹಾರಗಳನ್ನು ನಿರ್ಮಿಸುವ ವಿಚಾರ ಪ್ರಸ್ತಾಪಿಸುತ್ತಾರೆ. ಹಾಗೆಯೇ ಮಿಶನರಿ ಮಾದರಿಯಲ್ಲಿ ಈ ನಾಲ್ಕು ನಗರಗಳಲ್ಲಿ ಅಂದರೆ ಮದ್ರಾಸ್, ಬಾಂಬೆ, ನಾಗಪುರ ಮತ್ತು ದೆಹಲಿಯಲ್ಲಿ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸುವ ಯೋಜನೆ ಕೂಡ ಬಾಬಾಸಾಹೇಬರು ತಮ್ಮ ಆ ನಕ್ಷೆಯಲ್ಲಿ ಹೇಳುತ್ತಾರೆ.
ಮುಂದುವರಿದು ಎಲ್ಲಾ ಧರ್ಮದವರಲ್ಲಿ ಬೌದ್ಧ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಲು ಬೌದ್ಧ ಧರ್ಮದ ಬಗ್ಗೆ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ, ಗೆದ್ದವರಿಗೆ ಬಹುಮಾನ ನೀಡುವ ಮಾತನ್ನೂ ಬಾಬಾಸಾಹೇಬರು ಹೇಳುತ್ತಾರೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಬೌದ್ಧ ಧರ್ಮ ಪುನರುತ್ಥಾನಕ್ಕೆ ತಾನು ಹೀಗೆ ಪ್ರಾಥಮಿಕ ತಯಾರಿ ಮಾಡಿಕೊಂಡಿದ್ದೇನೆ ಮತ್ತು ಮುಂದೆಂದೂ ಅದು ಭಾರತದಿಂದ ಕಾಣೆಯಾಗದಂತೆ ನಾನು ಎಚ್ಚರಿಕೆ ವಹಿಸುವುದಾಗಿ ಬರ್ಮಾದ ಆ ಅಂತರರಾಷ್ಟ್ರೀಯ ಸಭೆಗೆ ಅವರು ತಿಳಿಸುತ್ತಾರೆ.
ನಿಜ ಹೇಳಬೇಕೆಂದರೆ ಅಂಬೇಡ್ಕರರು ಹಾಕಿಕೊಂಡಿದ್ದ ಈ ನೀಲ ನಕ್ಷೆ ಕಾರ್ಯ ರೂಪಕ್ಕೆ ಬಂದಿದ್ದರೆ ಖಂಡಿತ ಭಾರತದಲ್ಲಿ ಬೌದ್ಧ ಧರ್ಮ ಅಕ್ಷರಶಃ ಪುನರುಜ್ಜೀವನ ಗೊಂಡಿರುತ್ತಿತ್ತು. ಆದರೆ ದುರಂತ ಎಂದರೆ ಅವರು ಆ ನೀಲನಕ್ಷೆ ತಯಾರಿಸಿದ ಎರಡೇ ವರ್ಷದಲ್ಲಿ ಪರಿನಿಬ್ಬಾಣ ಹೊಂದಿದ್ದರು. ಈ ನಡುವೆ ಮತ್ತೂ ದುರಂತವೆಂದರೆ ಬಾಬಾಸಾಹೇಬರ ಅನುಯಾಯಿಗಳಿಗೆ ಅದನ್ನು ಅಂದರೆ ಬೌದ್ಧ ಧರ್ಮವನ್ನು ಪುನರುಜ್ಜೀವನ ಗೊಳಿಸುವ ಮಾತಿರಲಿ ಅಂಬೇಡ್ಕರರು ಹಾಕಿ ಕೊಂಡಿದ್ದ ಆ ನೀಲನಕ್ಷೆಯತ್ತ ಕಣ್ಣೆತ್ತಿ ನೋಡುವ ತಾಳ್ಮೆಯೂ ಇಲ್ಲದಿರುವುದು. ಈ ನಿಟ್ಟಿನಲ್ಲಿ ತಡವಾಗಿದ್ದರೂ ಈಗಲಾದರೂ ಬೌದ್ಧ ಧರ್ಮದ ಪುನರುತ್ಥಾನಕ್ಕೆ ಬಾಬಾಸಾಹೇಬರು ಹಾಕಿದ್ದ ನೀಲನಕ್ಷೆಯತ್ತ ಅವರ ಅನುಯಾಯಿಗಳು ನೋಡಲಿ. ಬೌದ್ಧ ಧರ್ಮದ ಪುನರುತ್ಥಾನಕ್ಕೆ, ಪುನರುಜ್ಜೀವನಕ್ಕೆ ಪಣ ತೊಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸೋಶಿಯಲ್ ಮೀಡಿಯಾ ಪೋಸ್ಟ್ಗೆ ಕೇಸ್, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್ ಗರಂ
ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣ ರದ್ದು ಕೋರಿ ಮೋಹನ್ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೊಲೀಸ್ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದೆ.
http://Visit : www.suddidina.com
ನ್ಯಾಯಾಲಯದ ಮುಂದೆ ಡಿಸಿಪಿ ಸೈದುಲು ಅಡಾವತ್, ಎಸಿಪಿ ರೀನಾ ಸುವರ್ಣ ಹಾಗೂ ತನಿಖಾಧಿಕಾರಿ ಹಾಜರಾಗಿದ್ದರು. ಈ ವೇಳೆ ಪೊಲೀಸ್ ಠಾಣೆಯ ಕಾರ್ಯವೈಖರಿ, ಬಂಧನದ ಕ್ರಮ ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್ಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ನ್ಯಾಯಪೀಠ ಹಲವು ಪ್ರಶ್ನೆಗಳನ್ನು ಕೇಳಿತು.
‘ವೈಟ್ಫೀಲ್ಡ್ ಠಾಣೆ ಡಾರ್ಕ್ಫೀಲ್ಡ್ ಆಗಲಿ’
ವೈಟ್ಫೀಲ್ಡ್ ಠಾಣೆಯಲ್ಲಿ ವಿದ್ಯುತ್ ಹಾಗೂ ಸಿಸಿಟಿವಿ ವ್ಯವಸ್ಥೆ ಕುರಿತ ವಿಚಾರವನ್ನೂ ನ್ಯಾಯಪೀಠ ಪ್ರಸ್ತಾಪಿಸಿತು. ಠಾಣೆಯ ಚಟುವಟಿಕೆಗಳೇ ಅಂಧಕಾರದಲ್ಲಿವೆ ಎಂದು ವ್ಯಂಗ್ಯವಾಡಿದ ನ್ಯಾಯಮೂರ್ತಿಗಳು, ‘ವೈಟ್ಫೀಲ್ಡ್ ಠಾಣೆಯನ್ನು ಡಾರ್ಕ್ಫೀಲ್ಡ್ ಠಾಣೆಯನ್ನಾಗಿ ಬದಲಾಯಿಸಿಕೊಳ್ಳಿ’ ಎಂದು ಕಿಡಿಕಾರಿದರು.
ಉಡುಪಿಗೆ ತೆರಳಿ ಮೋಹನ್ಗೌಡರನ್ನು ವಶಕ್ಕೆ ಪಡೆದಿದ್ದೇಕೆ, ಬೆಳಗಿನ ಜಾವ 2 ಗಂಟೆಗೆ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಂಡಿದ್ದೇಕೆ ಎಂಬುದರ ಕುರಿತು ಅಧಿಕಾರಿಗಳಿಂದ ನ್ಯಾಯಪೀಠ ವಿವರಣೆ ಕೇಳಿತು.
ಡಿಸಿಪಿ ಪರವಾಗಿ, ಮೋಹನ್ಗೌಡ ಹಲವು ಟ್ವೀಟ್ಗಳನ್ನು ಮಾಡಿದ್ದರು. ಅವರನ್ನು ಬಂಧಿಸಿರಲಿಲ್ಲ, ಫೋನ್ ಮಾಡಿದರೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಅವರು ಕಾರಿನಲ್ಲಿ ಬಂದಿದ್ದರು. ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಉತ್ತರಿಸಲಾಯಿತು.
‘ಯೂನಿಫಾರ್ಮ್ ಇದ್ದರೆ ಏನು ಬೇಕಾದರೂ ಮಾಡಬಹುದೇ?’
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಾತ್ರಕ್ಕೆ ಪೊಲೀಸರು ಮನಬಂದಂತೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ಯೂನಿಫಾರ್ಮ್ ಧರಿಸಿರುವ ಕಾರಣಕ್ಕೆ ನಾಗರಿಕರ ಸ್ವಾತಂತ್ರ್ಯ ಕಸಿಯಲು ಸಾಧ್ಯವಿಲ್ಲ ಎಂದು ಕೋರ್ಟ್ ಎಚ್ಚರಿಸಿತು.
ಸಾಮಾಜಿಕ ಜಾಲತಾಣದ ಪೋಸ್ಟ್ಗಳ ಕುರಿತು ಕ್ರಮ ಕೈಗೊಳ್ಳುವಾಗ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪೊಲೀಸರು ತಮ್ಮನ್ನು ತಾವೇ ಕಾನೂನು ಎಂದು ಭಾವಿಸಬಾರದು. ಬಂಧನದ ಅಧಿಕಾರವನ್ನು ವಿವೇಚನೆಯಿಲ್ಲದೆ ಬಳಸಬಾರದು ಎಂದು ನ್ಯಾಯಪೀಠ ತಿಳಿಸಿತು.
ಪೊಲೀಸ್ ಠಾಣೆಗಳಲ್ಲಿ CCTV ಆಡಿಟ್ಗೆ ಸೂಚನೆ
ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಮತ್ತು ಯುಪಿಎಸ್ ಬ್ಯಾಕಪ್ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ರಾಜ್ಯಮಟ್ಟದ ಆಡಿಟ್ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.
ಅಧಿಕಾರ ದುರುಪಯೋಗ ಅಥವಾ ನ್ಯಾಯಾಲಯದ ಆದೇಶ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸಬೇಕು. ಪೊಲೀಸ್ ಠಾಣೆಗಳಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ
ಕುನಾಲ್ ಕಾಮ್ರಾ ಶೋ ವಿರೋಧಿಸಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮೋಹನ್ಗೌಡ ವಿರುದ್ಧ ವೈಟ್ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಉಡುಪಿಯಿಂದ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದ ಕ್ರಮ ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ದಿನದ ಸುದ್ದಿ
ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅರ್ಹ ಫಲಾನುಭವಿಗಳ ಖಚಿತತೆಗೆ ಮನೆ-ಮನೆ ಪರಿಶೀಲನೆ
ಸುದ್ದಿದಿನ,ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಸರ್ಕಾರ ಮಹತ್ವದ ಪರಿಶೀಲನಾ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ತಲುಪಬೇಕು ಎಂಬ ಉದ್ದೇಶದಿಂದ, ಎಲ್ಲಾ ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಮುಖಚಹರೆ ದೃಢೀಕರಣವನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಪ್ರಕ್ರಿಯೆಯನ್ನು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳಲಾಗುತ್ತದೆ.

http://Visit : www.suddidina.com
ಮನೆ-ಮನೆ ಸಮೀಕ್ಷೆಯ ಜತೆಗೆ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮೂಲಕವೂ ಪರಿಶೀಲನಾ ಪ್ರಕ್ರಿಯೆ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಪ್ರಕಾರವೇ ಫಲಾನುಭವಿಗಳ ಮರುಪರಿಶೀಲನೆ ನಡೆಯಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಒಂದು ತಿಂಗಳಲ್ಲಿ ಕ್ಷೇತ್ರ ಪರಿಶೀಲನೆ ಪೂರ್ಣಗೊಳಿಸಲು ಸೂಚನೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಗತ್ಯ ಮಾದರಿ ನಮೂನೆಗಳನ್ನು ಸಿದ್ಧಪಡಿಸಲಿದೆ. ಮಾಸ್ಟರ್ ತರಬೇತುದಾರರ ಮೂಲಕ ಕ್ಷೇತ್ರ ಗಣತಿದಾರರಿಗೆ ತರಬೇತಿ ನೀಡಲಾಗುತ್ತದೆ. ಆಗಸ್ಟ್ 30ರಿಂದ ಒಂದು ತಿಂಗಳೊಳಗೆ ಕ್ಷೇತ್ರ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಸಮಿತಿಗಳು ಮತ್ತು ಸ್ಥಳೀಯ ಮಟ್ಟದ ಸಮಿತಿಗಳು ನಿಗದಿತ ಅವಧಿಯಲ್ಲಿ ಪರಿಶೀಲನೆ ಪೂರ್ಣಗೊಳಿಸಬೇಕು. ನಗರ ಪ್ರದೇಶಗಳಲ್ಲಿ ಕಂದಾಯ ನಿರೀಕ್ಷಕರು, ಬಿಲ್ ಕಲೆಕ್ಟರ್ಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಗಣತಿದಾರರನ್ನಾಗಿ ಬಳಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗುತ್ತದೆ.
ಮನೆ ಬಾಗಿಲಿಗೆ ಬರಲಿದೆ ಪರಿಶೀಲನಾ ತಂಡ
ಫಲಾನುಭವಿಗಳ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿಗೆ ಸೂಚಿಸಲಾಗಿದೆ. ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಗಣತಿ ನಮೂನೆಯನ್ನು ಭರ್ತಿ ಮಾಡಿ ಹಿಂತಿರುಗಿಸಬೇಕು. ಯಾವುದೇ ಕಾರಣಕ್ಕೂ ಮನೆ ಭೇಟಿ ತಪ್ಪಿಸಬಾರದು ಎಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ತಿಳಿಸಲಾಗಿದೆ.
ಗಣತಿದಾರರು ಮೊಬೈಲ್ ಆ್ಯಪ್ ಮೂಲಕ ಫಲಾನುಭವಿಯ ಭಾವಚಿತ್ರ ಅಥವಾ ಮನೆಯ ಫೋಟೊ, ಜಿಪಿಎಸ್ ಮ್ಯಾಪಿಂಗ್, ಮುಖಚಹರೆ ದೃಢೀಕರಣ ಮತ್ತು ಮತದಾರರ ಗುರುತಿನ ಚೀಟಿ ವಿವರಗಳನ್ನು ಸ್ಥಳದಲ್ಲಿಯೇ ದಾಖಲಿಸಬೇಕು. ಈ ಮೂಲಕ ಫಲಾನುಭವಿಯ ಗುರುತು ಹಾಗೂ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸುವ ಉದ್ದೇಶ ಹೊಂದಲಾಗಿದೆ.
ಜಿಲ್ಲಾಧಿಕಾರಿಗಳು, ಸಿಇಒಗಳಿಗೆ ಹೊಣೆ
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರ್ಡ್ ಹಾಗೂ ಗ್ರಾಮವಾರು ಸ್ಪಷ್ಟ ನಿಯೋಜನೆಯೊಂದಿಗೆ ಗಣತಿದಾರರಿಗೆ ಲಿಖಿತ ಆದೇಶ ನೀಡಬೇಕು. ಪರಿಶೀಲನಾ ಪ್ರಕ್ರಿಯೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಮೇಲ್ವಿಚಾರಣೆ ನಡೆಸಬೇಕಿದೆ.
ಒಟ್ಟಿನಲ್ಲಿ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮತ್ತಷ್ಟು ನಿಖರಗೊಳಿಸಿ, ಅರ್ಹರಿಗೆ ಮಾತ್ರ ಸರ್ಕಾರದ ನೆರವು ತಲುಪಿಸುವುದು ಈ ಮರುಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ. ಮನೆ-ಮನೆ ಸಮೀಕ್ಷೆ ಮತ್ತು ಡಿಜಿಟಲ್ ದೃಢೀಕರಣದ ಬಳಿಕ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಲಿವೆಯೇ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

ದಿನದ ಸುದ್ದಿ
ಬೆಂಗಳೂರು ಮೆಟ್ರೋದಲ್ಲಿ ಸುರಕ್ಷತೆಗೆ ಹೊಸ ಕವಚ: PSD ಕಾಮಗಾರಿ ಯಾವಾಗ?
ಸುದ್ದಿದಿನ,ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂಪಿಸಿರುವ ಪ್ಲಾಟ್ಫಾರ್ಮ್ ಸ್ಕ್ರೀನ್ ಡೋರ್ (PSD) ಯೋಜನೆಗೆ ಕೇಂದ್ರದ ಅನುಮೋದನೆಯ ವಿಳಂಬವೇ ದೊಡ್ಡ ಅಡ್ಡಿಯಾಗಿದೆ. ಮೆಟ್ರೋ 3ನೇ ಹಂತದ ಕೆಂಪು ಮಾರ್ಗದ ಡಿಪಿಆರ್ಗೆ ಕೇಂದ್ರ ಸರಕಾರದಿಂದ ಒಪ್ಪಿಗೆ ದೊರೆಯುವವರೆಗೆ PSD ಅಳವಡಿಕೆ ಕಾಮಗಾರಿ ಆರಂಭಿಸುವುದು ಕಷ್ಟವಾಗಲಿದೆ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಪ್ರಸ್ತುತ ಮತ್ತು ಭವಿಷ್ಯದ ಮೆಟ್ರೋ ಯೋಜನೆಗಳನ್ನು ಪರಿಗಣಿಸಿದರೆ ಬೆಂಗಳೂರಿನಲ್ಲಿ ಒಟ್ಟು 191 ನಿಲ್ದಾಣಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ಪೈಕಿ 177 ನಿಲ್ದಾಣಗಳಲ್ಲಿ PSD ಅಳವಡಿಸಲು ಬಿಎಂಆರ್ಸಿಎಲ್ ಯೋಜನೆ ರೂಪಿಸಿದೆ. ಇದಕ್ಕಾಗಿ ಅಂದಾಜು ₹1,274 ಕೋಟಿ ವೆಚ್ಚವಾಗಲಿದೆ.
ಹೈಲೈಟ್ಸ್: |
|
http://Visit : www.suddidina.com
₹1,274 ಕೋಟಿ ಯೋಜನೆ: ಎಲ್ಲಿ ಎಷ್ಟು ಖರ್ಚು?
PSD ಯೋಜನೆಯ ಒಟ್ಟು ವೆಚ್ಚದಲ್ಲಿ ಸಾಮಗ್ರಿ ಖರೀದಿಗೆ ಸುಮಾರು ₹747 ಕೋಟಿ, ಸಿವಿಲ್ ಕಾಮಗಾರಿಗಳಿಗೆ ₹317 ಕೋಟಿ ಹಾಗೂ ಸಿಗ್ನಲಿಂಗ್, ಟೆಲಿಕಾಂ ಮತ್ತು ವಿದ್ಯುತ್ ವ್ಯವಸ್ಥೆಗಳ ಮಾರ್ಪಾಡಿಗೆ ₹210 ಕೋಟಿ ಮೀಸಲಿಡುವ ಪ್ರಸ್ತಾವನೆ ಇದೆ.
ಆದರೆ ಈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಪ್ರತ್ಯೇಕವಾಗಿ ಸಲ್ಲಿಸಲಾಗಿಲ್ಲ. ಹೆಬ್ಬಾಳ–ಸರ್ಜಾಪುರ 3ಎ ಹಂತದ ಡಿಪಿಆರ್ನ ಭಾಗವಾಗಿಯೇ ಕಳುಹಿಸಲಾಗಿದೆ. ಹೀಗಾಗಿ 3ಎ ಹಂತದ ಯೋಜನೆಗೆ ಕೇಂದ್ರದ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅನುಮೋದನೆ ದೊರೆಯುವವರೆಗೆ PSD ಯೋಜನೆಗೂ ಅಂತಿಮ ಒಪ್ಪಿಗೆ ಸಿಗುವುದಿಲ್ಲ.
ಹಾಲಿ ನಿಲ್ದಾಣಗಳಲ್ಲಿ ಕಾಮಗಾರಿ ಸವಾಲು
ಹೊಸ ನಿಲ್ದಾಣಗಳಲ್ಲಿ PSD ಅಳವಡಿಕೆ ತುಸು ಸುಲಭವಾದರೂ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳ ನಿಲ್ದಾಣಗಳಲ್ಲಿ ಕಾಮಗಾರಿ ನಡೆಸುವುದು ಸವಾಲಿನ ಕೆಲಸವಾಗಿದೆ. ತಾಂತ್ರಿಕ ಕಾಮಗಾರಿಗಳನ್ನು ಮುಖ್ಯವಾಗಿ ರಾತ್ರಿ ವೇಳೆ, ರೈಲು ಸಂಚಾರ ಸ್ಥಗಿತಗೊಂಡ ಬಳಿಕ ನಡೆಸಬೇಕಾಗುತ್ತದೆ. ಅಗತ್ಯವಿದ್ದರೆ ರೈಲುಗಳ ವೇಗ ಕಡಿಮೆ ಮಾಡುವುದು ಅಥವಾ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸುವ ಪರಿಸ್ಥಿತಿಯೂ ಎದುರಾಗಬಹುದು.
ಟ್ರ್ಯಾಕ್ಗೆ ಇಳಿಯುವ ಘಟನೆಗಳು ಆತಂಕ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಟ್ರ್ಯಾಕ್ಗೆ ಇಳಿಯುವುದನ್ನು ತಡೆಯಲು ಈಗಾಗಲೇ ಭದ್ರತಾ ಸಿಬ್ಬಂದಿ ಹಾಗೂ ಸ್ಟೀಲ್ ಗ್ರಿಲ್ಗಳಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಟ್ರ್ಯಾಕ್ಗೆ ಇಳಿಯುವ ಘಟನೆಗಳು ಸಂಪೂರ್ಣವಾಗಿ ನಿಂತಿಲ್ಲ. ಈ ಹಿನ್ನೆಲೆಯಲ್ಲಿ PSD ಅಳವಡಿಕೆ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಚ್ಚುವರಿ ಕವಚವಾಗಬಹುದು.
3ಎ ಹಂತದ ಪರಿಷ್ಕೃತ ಡಿಪಿಆರ್
ಹೆಬ್ಬಾಳ–ಸರ್ಜಾಪುರ 37 ಕಿ.ಮೀ. ಕಾರಿಡಾರ್ನ ಪರಿಷ್ಕೃತ ಡಿಪಿಆರ್ ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದೆ. ವೆಚ್ಚ ಪರಿಷ್ಕರಣೆಯ ಬಳಿಕ ಯೋಜನೆಯ ಅಂದಾಜು ₹28,405 ಕೋಟಿಯಿಂದ ₹25,999 ಕೋಟಿಗೆ ಇಳಿಕೆಯಾಗಿದೆ. ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯ ಒಪ್ಪಿಗೆ ದೊರೆತ ಬಳಿಕವೇ ಮುಂದಿನ ಹಂತದ ಕಾಮಗಾರಿಗಳಿಗೆ ವೇಗ ಸಿಗಲಿದೆ.

-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ5 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ4 days agoಡಾಲಿಯ ಕನಸು ಒಂದೇ ಹೀರೋ ಆಗೋದು

