ಅಂತರಂಗ
ಅರಿಮೆಯ ಅರಿವಿರಲಿ-41 : ಅತಿಕ್ರಮಣ ಮತ್ತು ಆಕ್ರಮಣ ಪ್ರವೃತ್ತಿ
- ಯೋಗೇಶ್ ಮಾಸ್ಟರ್
ಪ್ರತಿಕ್ರಿಯೆಗಳಿಂದ ಹಣೆಪಟ್ಟಿಗಳು
ಹೊರಗೆ ಆಡಕ್ಕೆ ಹೋಗಿದ್ದ ಮಗುವು ಅಳುತ್ತಾ ಮನೆಗೆ ಬಂದಾಗ, ಕಾರಣ ಕೇಳಲಾಗುವುದು. ಮಗುವು ಅವನ್ಯಾರೋ ಹೊಡೆದ ಎಂದು ಹೇಳುವುದು. ಅದಕ್ಕೆ ಪೋಷಕರು ಕೊಡಬಹುದಾದ ವಿವಿಧ ಪ್ರತಿಕ್ರಿಯೆಗಳು.
- ನೀನೂ ತಿರುಗಿಸಿ ಒಂದು ಬಿಡೋದು ಬಿಟ್ಟು ಅಳುತ್ತಾ ಬಂದಿದ್ದೀಯಲ್ಲಾ. ಅಲ್ಲೇ ಒಂದು ವಾಪಸ್ಸು ಕೊಡಬೇಕಿತ್ತು.
- ಯಾರದು ಹೊಡೆದಿದ್ದು? ಯಾಕೆ ಹೊಡೆದ? ನೀನು ಏನು ಮಾಡಿದೆ? ಅಲ್ಲಿ ಯಾರೂ ಇರಲಿಲ್ಲವಾ?
- ನಡೀ ನೋಡೋಣ ಅವನು ಯಾರೋ? ಎಷ್ಟು ಧೈರ್ಯ ಅವನಿಗೆ ನಿನ್ನ ಮೇಲೆ ಕೈ ಮಾಡಕ್ಕೆ?
- ಸರಿ, ಇನ್ನೊಂದು ಸಲ ಅವನ ಜೊತೆ ಸೇರಬೇಡ. ನೀನು ಬೇರೆಯವರ ಜೊತೆ ಆಡು.
- ಅದಕ್ಕೆ ಹೇಳೋದು. ಹೋಗಬೇಡ, ಆಡಬೇಡಾಂತ. ಮನೇಲಿ ಕೂತ್ಕೊಂಡು ಓದ್ಕೊಂಡು ಬರ್ಕೊಂಡು ಇದ್ದಿದ್ದರೆ ಹೀಗಾಗ್ತಿತ್ತಾ? ಇನ್ನೊಂದು ಸಲ ಆಡಕ್ಕೆ ಹೋಗ್ಬೇಡ, ಹೋಗು ಓದ್ಕೋ ಹೋಗು.
- ನಾನು ಹೇಳಿದರೆ ಎಲ್ಲಿ ಕೇಳ್ತೀಯಾ? ಯಾಕೆ ಹೋಗಬೇಕು? ಹೋಗೋದು, ಅತ್ತುಕೊಂಡು ಬರೋದು. ಈ ಸಂಪತ್ತಿಗೆ ಆಡಕ್ಕೆ ಯಾಕೆ ಹೋಗಬೇಕು?
- ತಿರುಗಿಸಿ ಹೊಡೆಯೋಕೆ ಧೈರ್ಯ ಶಕ್ತಿ ಇದ್ದರೆ ಹೋಗಬೇಕು. ಆಡಬೇಕು. ಇಲ್ಲಾಂದ್ರೆ ಬಾಯಿಮುಚ್ಚಿಕೊಂಡು ಮನೇಲೇ ಇರಬೇಕು.
ಮಗುವಿಗೆ ತನ್ನ ಮನೆಯಲ್ಲಿ ಈ ಎಲ್ಲಾ ತರಹದ ಪ್ರತಿಕ್ರಿಯೆಗಳು ಸಿಗುವುದಿಲ್ಲ. ಯಾವುದಾದರೂ ಒಂದೆರಡು ಮಾದರಿಯ ಪ್ರತಿಕ್ರಿಯೆಗಳು ಸದಾ ಸಿಗುತ್ತಿರುತ್ತವೆ. ಈ ಪ್ರತಿಕ್ರಿಯೆಗಳೋ, ಪೋಷಕರ ಧೋರಣೆ, ಮಾನಸಿಕ ಸ್ಥಿತಿ, ಮನೋಭಾವದ ಮೇಲೆ ನಿರ್ಧರಿತವಾಗಿರುತ್ತದೆ. ಅದು ಮಗುವಿನ ಒರಟುತನವನ್ನು ಅಥವಾ ಹೇಡಿತನವನ್ನು ಅಥವಾ ಹಿಂಜರಿಕೆಯನ್ನು ಅಥವಾ ಸೇಡಿನ ಭಾವವನ್ನು ಅಥವಾ ಅಸಹಾಯಕತೆಯನ್ನು ಅಥವಾ ದೌರ್ಬಲ್ಯವನ್ನು ಅಥವಾ ಪರಾವಲಂಬಿತನವನ್ನು ಬಲಗೊಳಿಸುತ್ತಿರುತ್ತದೆ.
ಈ ಬಗೆಯ ಪ್ರತಿಕ್ರಿಯೆಗಳು ಮಗುವಿಗೆ ತನ್ನ ಬಾಲ್ಯ ಜೀವನದಲ್ಲಿ ಅದೆಷ್ಟು ಸಲ, ಅದೆಷ್ಟು ಸಂದರ್ಭಗಳಲ್ಲಿ ದೊರಕುತ್ತಿರುತ್ತದೆ. ಪ್ರತಿ ಸಲವೂ ಮಗುವಿನ ಯಾವುದೋ ಒಂದು ಮನೋಭಾವವನ್ನು ಅದು ಗಟ್ಟಿಗೊಳಿಸುತ್ತಾಬರುವ ಪ್ರಕ್ರಿಯೆಯಲ್ಲಿರುತ್ತದೆ. ಹೀಗೇ ಗುಣ ಸ್ವಭಾವಗಳು ರೂಪುಗೊಳ್ಳುವುದು. ಅದು ಗಟ್ಟಿಗೊಂಡಾಗ ಪೋಷಕರು ಹೇಳುವುದೇನು? “ಮೊದಲಿಂದಲೂ ಇವನು / ಇವಳು ಇರುವುದೇ ಹೀಗೆ.” ಅಲ್ಲಿಗೆ ಅಚ್ಚಾಯ್ತು ಹಣೆಪಟ್ಟಿ.
ಹಣೆಪಟ್ಟಿ ಬಿದ್ದಾದ ಬಳಿಕ ಅದನ್ನು ಮಗುವೂ ಕೂಡಾ ಉಳಿಸಿಕೊಳ್ಳಲು ತನಗೇ ಅರಿವಿಲ್ಲದಂತೆ ಉಳಿಸಿಕೊಳ್ಳಲು ಹೆಣಗಾಡುತ್ತಿರುತ್ತದೆ. ನೋಡಿ ಇದರ ವಿಪರ್ಯಾಸ. ಮಗುವಿನ ಮನೋಭಾವವನ್ನು ರೂಪಿಸುವಲ್ಲಿ ಹಿರಿಯರೇ ವಸ್ತುಗಳನ್ನು ಒದಗಿಸುವುದು. ನಂತರ ತಾವೇ ಇವನು / ಇವಳು ಹೀಗೆ ಎಂದು ಹಣೆಪಟ್ಟಿ ಕಟ್ಟುವುದು.
ವಾಸ್ತವವಾಗಿ ಒರಟುತನ, ಧೈರ್ಯ, ಹುಂಬತನ, ಆಕ್ರಮಣಕಾರಿ, ಭಯ, ಹಿಂಜರಿಕೆ, ಪರಾವಲಂಬನ, ಸ್ವಾವಲಂಬನ, ಮುಖೇಡಿತನ, ಹಟಮಾರಿತನ, ಸಹನೆ; ಹೀಗೆ ಎಲ್ಲಾ ಬಗೆಯ ಮನೋಭಾವಗಳೂ ಸಾಮಾನ್ಯ ಮಿಶ್ರಣದಲ್ಲಿರುತ್ತದೆ. ಆದರೆ ಹಿರಿಯರು ಪದೇಪದೇ ಕೊಡುವ ಪ್ರತಿಕ್ರಿಯೆಗಳಿಂದಾಗಿ ಯಾವುದಾದರೂ ಕೆಲವು ಮನೋಭಾವಗಳು ಅಭಿವೃದ್ಧಿ ಹೊಂದುತ್ತವೆ. ಅವುಗಳು ಗಟ್ಟಿಗೊಳ್ಳುತ್ತಾ ಸ್ವಭಾವವಾಗಿ ರೂಪುಗೊಳ್ಳುತ್ತವೆ.
ಅಹಂಕಾರವೇ ತಂದೆ, ಹಟವೇ ತಾಯಿ
ಈ ಸರಣಿಯ ಸಾಲನ್ನು ಗಮನಿಸಿ. ಹಟಮಾರಿತನ, ಉದ್ಧಟನ, ಉಲ್ಲಂಘನೆ, ಅತಿಕ್ರಮಣ, ಆಕ್ರಮಣ, ಹಿಂಸೆ, ಇವೆಲ್ಲದರಿಂದ ಪಡೆಯುವ ವಿಲಕ್ಷಣ ತೃಪ್ತಿ. ಹಟಮಾರಿತನ ಎಂಬ ತಾಯಿಯ ಮಕ್ಕಳು ಇವೆಲ್ಲಾ. ಉದ್ಧಟನ ಮತ್ತು ಉಲ್ಲಂಘನೆ ಮಾಡುವ ಮಕ್ಕಳ ಮುಂದಿನ ಹೆಜ್ಜೆಯೇ ಅತಿಕ್ರಮಣ. ಬೇರೆಯವರ ಆಟದಲ್ಲಿ, ಕೆಲಸದಲ್ಲಿ ತನಗೆ ಪ್ರವೇಶವಿರದಿದ್ದರೂ, ಅಗತ್ಯವಿರದಿದ್ದರೂ ಮಧ್ಯೆ ಪ್ರವೇಶಿಸಿ ಅವರ ಕೆಲಸ ಅಥವಾ ಆಟವನ್ನು ಹಾಳುಗೆಡವುವುದು.
ಸ್ವಲ್ಪ ಬೆಳೆದ ಮಕ್ಕಳು ತಮ್ಮ ವಯಸ್ಸಿನ ಸಾಮರ್ಥ್ಯಕ್ಕೆ ತಕ್ಕಂತೆ ಆಟಗಳನ್ನು ಆಡುವಾಗ ಅವರಿಗಿಂತ ಚಿಕ್ಕವರು ಅವರ ಆಟದಲ್ಲಿ ಭಾಗವಾಗಿರಲು ಇಷ್ಟಪಡುತ್ತಾರೆ. ಆಗ ದೊಡ್ಡ ಮಕ್ಕಳು ಸಹಜವಾಗಿ ಇಷ್ಟಪಡುವುದಿಲ್ಲ. ಆದರೆ ಸಣ್ಣ ಮಕ್ಕಳು ದೊಡ್ಡ ದನಿ ಎತ್ತಿ ಅತ್ತು ದೊಡ್ಡವರನ್ನು ಆಕರ್ಷಿಸುತ್ತಾರೆ. ಆಗ ಬಂದ ದೊಡ್ಡವರು ಅವನಿಗೆ ಆಡಕ್ಕೆ ಬರಲ್ಲ ಅಂದ್ರೆ ಹೇಳಿಕೊಡಿ ಅಂತ ಸಣ್ಣ ಮಗುವಿನ ಪರ ವಹಿಸುತ್ತಾರೆ. ಈ ದೊಡ್ಡ ಮಕ್ಕಳಿಗೋ ತಮ್ಮ ಆಟದ ಓಘ ಮತ್ತು ಓಟವನ್ನು ಕಳೆದುಕೊಳ್ಳಲು ಇಷ್ಟವಿರುವುದಿಲ್ಲ. ಚಿಕ್ಕವು ಬಂದರೆ ಸಹಜವಾಗಿ ಆಟವು ವೇಗವನ್ನು ಕಳೆದುಕೊಳ್ಳುತ್ತದೆ.
ಆದರೆ ದೊಡ್ಡವರ ಬೆಂಬಲದಿಂದ ಸಣ್ಣವರು ಗೆದ್ದರಾದರೆ ಅಲ್ಲಿಗೆ ಅತಿಕ್ರಮ ಪ್ರವೇಶದ ರೂಢಿ ಸಣ್ಣವರಿಗಾಗುತ್ತದೆ. ಅವರು ಆಟದಲ್ಲಿ ಪ್ರಾರಂಭವಾದ ಈ ಪ್ರವೇಶವನ್ನು ತಮ್ಮ ಹಕ್ಕಾಗಿ ತೆಗೆದುಕೊಂಡು ದಬ್ಬಾಳಿಕೆಗೆ ದಾರಿ ಮಾಡಿಕೊಳ್ಳುತ್ತಾರೆ. ಆಟದ್ದು ಬರಿಯ ಉದಾಹರಣೆಯಷ್ಟೇ. ಇದು ಬೇರೆಬೇರೆ ಯಾವ ಚಟುವಟಿಕೆಗಳಲ್ಲಾದರೂ ವ್ಯಕ್ತವಾಗಬಹುದು.
ಇದು ಇಲ್ಲಿಗೇ ನಿಲ್ಲುವುದಿಲ್ಲ.ಎಲ್ಲಾ ವಿಷಯಗಳಲ್ಲೂ ಹೀಗೇ ಆಗುತ್ತಿರುತ್ತದೆ. ಮನೆಯಲ್ಲಿ ಆದ ಅಭ್ಯಾಸವನ್ನು ಶಾಲೆಯಲ್ಲಿಯೂ, ತಮ್ಮ ಸ್ನೇಹಿತರ ವರ್ತುಲಗಳಲ್ಲಿಯೂ, ವಯಸ್ಕರಾದ ಮೇಲೆ ತಮ್ಮ ಸಹದ್ಯೋಗಿಗಳಲ್ಲಿಯೂ ಮುಂದುವರಿಸುತ್ತಾರೆ.
ಅವರಿಬ್ಬರೂ ಏಕೋ ಹೇಗೋ ಹತ್ತಿರವಾಗಿದ್ದಾರೆ, ಏನೋ ಮಾತಾಡಿಕೊಳ್ಳುತ್ತಾರೆ ಎಂದರೆ ಇವರಿಗೆ ತಿಳಿದುಕೊಳ್ಳುವ ಹಟ. ಸಾಧ್ಯವಾದರೆ ತಮ್ಮ ಮಾತನ್ನು, ಸಲಹೆಯನ್ನು ಧಾರಾಳವಾಗಿ ಮತ್ತು ಅಧಿಕಾರಯುತವಾಗಿ ನೀಡುವ ಚಟ.
ಒಡಹುಟ್ಟುಗಳಲ್ಲಿ ವಯಸ್ಸಿನ ಅಂತರ ತೀರಾ ಹೆಚ್ಚಾಗಿದ್ದರೆ ಇಂತಹ ಸಮಸ್ಯೆಗಳು ಹೆಚ್ಚು. ಮೂರು, ನಾಲ್ಕು ವಯಸ್ಸಿನ ಅಂತರ ಆದರ್ಶಪ್ರಾಯವಾದದ್ದು. ಸಣ್ಣ ಮಕ್ಕಳು ದೊಡ್ಡ ಮಕ್ಕಳ ಆಟದಲ್ಲಿ ನುಗ್ಗಲು ಹಟ ಮಾಡಿದಾಗ, “ಆಟಕ್ಕುಂಟು ಲೆಕ್ಕಕ್ಕಿಲ್ಲ” ಅಂತ ಸೇರಿಸಿಕೊಳ್ಳಿ ಎಂದು ಹಿರಿಯರು ಪುಸಲಾಯಿಸುತ್ತಾರೆ. ಹೌದು, ಅದನ್ನು ಮಾಡಬಹುದು. ಆದರೆ, ಎಲ್ಲಾ ಆಟಗಳಲ್ಲೂ ಅದು ಆಗದು.
ಆದ್ದರಿಂದ ಸೇರಿಸಿಕೊಳ್ಳಬೇಕಾದ ಕಡೆ ಸೇರಿಸಿಕೊಳ್ಳಲಿ, ಆಗದಿರುವಾಗ “ಬೇಡ, ನಿನಗೆ ಆ ಆಟ ಈಗ ಆಡಲು ಆಗದು. ಸ್ವಲ್ಪ ದೊಡ್ಡವನಾದ ಮೇಲೆ ಅವರ ಜೊತೆ ಆಡಬಹುದು.ಈಗ ನಾನು ನೀನು ಆಡೋಣ” ಎಂದು ವಯಸ್ಸಿಗೆ ಅನುಗುಣವಾಗಿ ಬೇರೆಯ ಆಟದ ಆಯ್ಕೆ ಮಾಡಲು ಹಿರಿಯರು ಮನವೊಲಿಸಬೇಕು. ಹಾಗೆಯೇ ಕೆಲವು ಸಮಯವನ್ನು ದೊಡ್ಡ ಮಕ್ಕಳು ತಮ್ಮ ಚಿಕ್ಕ ಸೋದರ ಅಥವಾ ಸೋದರಿಯರ ಜೊತೆಗೆ ಅವರಿಗೆ ತಕ್ಕನಾಗಿ ಆಡುವುದನ್ನೂ ಪ್ರೋತ್ಸಾಹಿಸಬೇಕು. ದೊಡ್ಡವರು ಆಟದ ಭಾಗವಾದರೆ ದೊಡ್ಡ ಮಕ್ಕಳೂ ಇದನ್ನು ಕಲಿಯುತ್ತಾರೆ.
ಒಟ್ಟಾರೆ ದೊಡ್ಡದಾಗಲಿ, ಸಣ್ಣದಾಗಲಿ ಮಗುವು ಸಲಿಲತೆ ಕಲಿಯದಿದ್ದರೆ, ಸರಿಸಿಕೊಳ್ಳುವುದನ್ನು ಕಲಿಯದೇ ಹೋದರೆ ಸದಾ ತನ್ನ ಹಟವನ್ನು ಗೆಲ್ಲಿಸಿಕೊಳ್ಳಲು ಯತ್ನಿಸುತ್ತಿರುತ್ತದೆ. ಇದರಿಂದ ಅದರ ಅಹಂಕಾರ ಬಲಿಯತೊಡಗುತ್ತದೆ. ವಯಸ್ಕರಾಗುವ ಹೊತ್ತಿಗೆ ಯಾವಾಗ ಅಹಂಕಾರವು ಬಲಿತು ಬಲಿಷ್ಟವಾಗಿರುತ್ತದೋ ಆಗ ತಮ್ಮ ಅತಿಕ್ರಮಣ ಪ್ರವೇಶವನ್ನೆಲ್ಲಾ ತಮ್ಮ ಹಕ್ಕೆಂದೇ ಪ್ರತಿಪಾದಿಸುತ್ತಾರೆ.
ತಮ್ಮ ಪ್ರವೇಶದಿಂದ ಇತರರಿಗೆ ಸಮಸ್ಯೆಯಾಗುತ್ತದೆ ಎಂದರೂ, ಅವರಿಗೆ ಬೇಸರವಾಗುತ್ತದೆ ಎಂದರೂ ಮತ್ತಷ್ಟು ಹಟದಿಂದ ಮುಂದುವರಿಯುತ್ತಾರೆ. ಇದರಿಂದ ಇತರರಿಗೆ ಹಿಂಸೆಯಾಗುತ್ತದೆ ಎಂದರೂ “ಆಗಲಿ” ಎನ್ನುತ್ತಾರೆ. ಇವರಿಂದ ಅವರಿಗೆ ಬಾಧೆ ಎನಿಸಿದರೆ ಅವರನ್ನು ಮಣಿಸಿದ್ದೇವೆ, ಗೆದ್ದಿದ್ದೇವೆ ಎಂದು ಇವರಿಗೆ ಸಂತೋಷವೇ ಆಗುತ್ತದೆ. ಮತ್ತೊಬ್ಬರನ್ನು ಅಗತ್ಯವಿರಲಿ, ಇಲ್ಲದಿರಲಿ ಮಣಿಸುವ ಗೀಳು ಅತಿಕ್ರಮಣದ, ಮತ್ತೊಬ್ಬರ ವ್ಯಕ್ತಿಗತ ವ್ಯಾಪ್ತಿಯನ್ನು ಉಲ್ಲಂಘನೆ ಮಾಡುವ ಗೀಳುರೋಗ. ಇದು ಹಿಂಸಾರತಿ ಅಥವಾ ಕ್ರೌರ್ಯಾಮೋದ ಅಥವಾ ಸ್ಯಾಡಿಸಂಗೂ ದಾರಿ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ1 day agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ1 day agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ12 hours agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ


