Connect with us

ಅಂತರಂಗ

ಅರಿಮೆಯ ಅರಿವಿರಲಿ-44 : ಭಾವನೆ ಮತ್ತು ಮನೋಭಾವ ವ್ಯತ್ಯಾಸವೇನು?

Published

on

  • ಯೋಗೇಶ್ ಮಾಸ್ಟರ್

ಯಾವುದೇ ಮಾನಸಿಕ ಸಮಸ್ಯೆಯಿಂದ ಮತ್ತು ಅರಿಮೆಗಳಿಂದ ಬಿಡುಗಡೆ ಪಡೆಯಲು ಯತ್ನಿಸುವ ವ್ಯಕ್ತಿಗಳು ಮಾಡಬೇಕಾದ ಮೊದಲ ಕೆಲಸವೆಂದರೆ ತಮ್ಮ ಧೋರಣೆ, ವರ್ತನೆ ಮತ್ತು ಪ್ರತಿಕ್ರಿಯೆಗಳನ್ನು ಗಮನಿಸಿಕೊಳ್ಳುವುದು. ನಂತರ ತನ್ನ ಪ್ರತಿಕ್ರಿಯೆ ಅಥವಾ ಪ್ರತಿವರ್ತನೆಗಳು ಉಚಿತವಾಗಿದ್ದವೇ ಅಥವಾ ಆಗ್ರಹ ಪೂರ್ವಕವಾಗಿದ್ದವೇ ಎಂಬುದನ್ನು ಗಮನಿಸಿಕೊಳ್ಳುವಷ್ಟು ಸಂಯಮದ ಆಲೋಚನೆ ಮಾಡುವುದು.

ಅದರ ಬಗ್ಗೆ ಆಲೋಚನೆಯನ್ನು ಮಾಡಿದ ಮೇಲೆ ಇದರಿಂದ ತನ್ನ ಮನಸ್ಥಿತಿಯ ಮೇಲೆ ಮತ್ತು ಇತರರ ಮನಸ್ಸಿಗೆ ಮತ್ತು ಭಾವನೆಗಳ ಮೇಲೆ ಯಾವ ರೀತಿಯ ಪರಿಣಾಮ ಬೀರಿತು ಎಂಬುದನ್ನು ಗಮನಿಸಬೇಕು. ಆಮೇಲೆ ಅದರ ಪರಿಣಾಮವಾಗಿ ತಮ್ಮಲ್ಲಿ ಮತ್ತು ಇತರರಲ್ಲಿ ಮೂಡಿದ ಮನಸ್ಸಿನ ಭಾವನೆಗಳು ಹಿತವಾಗಿದ್ದವೋ ಅಥವಾ ಅಹಿತಕರವಾಗಿದ್ದವೋ ಎಂಬುದನ್ನು ಗ್ರಹಿಸಬೇಕು. ಇಷ್ಟಾದ ಮೇಲೆ ಆ ವ್ಯಕ್ತಿಗೆ ತನ್ನ ಅರಿಮೆಯ ಬಗ್ಗೆ ಒಂದು ಅರಿವು ಬಂದಿರುತ್ತದೆ.

ಬದಲಾಗಲಿ ಕ್ರಮಗಳು

ನನಗೆ ಹೇಯ್ಟಸ್ ಹರ್ನಿಯಾ ಸಮಸ್ಯೆ ಬಂತು. ಗ್ಯಾಸ್ಟ್ರೋಸ್ಕೊಪಿ ಮಾಡಿದರು. ಓಸೋಫೇಗಸ್ ಹೇಯ್ಟಸ್ ಹರ್ನಿಯಾ 2 ಸೆಂಟಿ ಮೀಟರ್ ಇದೆ ಎಂದರು. ಏನೂ ಅಪಾಯವೇನಿಲ್ಲ ಎಂದ ವೈದ್ಯರು ತತ್ಕಾಲಕ್ಕೆ ಔಷಧಿ ಸೂಚಿಸಿ, ಇದು ಹೆಚ್ಚಾಗದಿರಲು ಮತ್ತು ಶಮನವಾಗಲು ಜೀವನ ಕ್ರಮದಲ್ಲಿ ಬದಲಾವಣೆಗಳನ್ನು ಸೂಚಿಸಿದರು. ಈ ಸಮಸ್ಯೆಯು ಬರಲು ಕಾರಣವಾಗಬಹುದಾದಂತಹ ಅಭ್ಯಾಸಗಳನ್ನು ಪ್ರಯತ್ನ ಪೂರ್ವಕವಾಗಿ ತ್ಯಜಿಸಿ, ಅದರ ಬದಲಿಗೆ ಕೆಲವು ಸೂಚಿತ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಹೇಳಿದರು.

ಶಾರೀರಿಕ ಸಮಸ್ಯೆಗಳಿಗೆ ಹೇಗೆ ಉಣ್ಣುವ, ಕುಡಿಯುವ, ಮಲಗುವ, ವ್ಯಾಯಾಮ ಮಾಡುವಂತಹ ಹಲವು ಅಂಶಗಳನ್ನು ಬದಲಿಸಿಕೊಳ್ಳುತ್ತಾ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕಾಗುತ್ತದೆಯೋ ಹಾಗೇ ಅರಿಮೆಯೇ ಮೊದಲಾದ ಮಾನಸಿಕ ಸಮಸ್ಯೆಗಳನ್ನು ಪತ್ತೆಹಚ್ಚಿದ ಮೇಲೆ ಆಲೋಚನಾಕ್ರಮಗಳನ್ನು ಬದಲಾಯಿಸಿಕೊಳ್ಳಬೇಕು.

ಎಂತಹ ಆಲೋಚನಾ ಕ್ರಮಗಳಿಂದ ತಮಗೆ ಸಮಸ್ಯೆ ಬಂದಿದೆ ಎಂಬುದನ್ನು ಪತ್ತೆ ಹಚ್ಚಿದ ಮೇಲೆ ಅದನ್ನು ನಿವಾರಿಸಿಕೊಳ್ಳಲು ಎಂತಹ ಆಲೋಚನಾ ಕ್ರಮಗಳು ಬೇಕು ಎಂಬುದನ್ನು ಮಾನಸಿಕ ತಜ್ಞರ ನೆರವಿನಿಂದ ಅಥವಾ ಸಮಾಲೋಚಕರ ಸಹಾಯದಿಂದ ತಿಳಿದುಕೊಳ್ಳಬೇಕು. ಅದರಂತೆ ತಾನು ಹೇಗೆ ವರ್ತಿಸುತ್ತಿದ್ದೇನೆ, ಹೇಗೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದೇನೆ ಎಂಬುದನ್ನು ಮೂರನೆಯ ವ್ಯಕ್ತಿಯದನ್ನು ಗಮನಿಸಿದಂತೆಯೇ ಗಮನಿಸಬೇಕು.

ಮೊಟ್ಟ ಮೊದಲನೆಯದಾಗಿ ತಮ್ಮ ದೌರ್ಬಲ್ಯ ಅಥವಾ ಸಮಸ್ಯೆಯನ್ನು ಸಾಮಾನ್ಯೀಕರಿಸುವುದನ್ನು ನಿಲ್ಲಿಸಬೇಕು. ಉದಾಹರಣೆಗೆ ನಿಮ್ಮ ಸಂಗಾತಿಯೊಡನೆ ಜಗಳವಾಡಿದಿರಿ. ನೀವು ಕೋಪದಿಂದ ಬಹಳ ಒರಟಾಗಿ ನಡೆದುಕೊಂಡಿದ್ದೀರಿ. ಅವರು ಹಾಗೆ ವರ್ತಿಸಿದ್ದರಿಂದ ನಾನು ಹೀಗೆ ವರ್ತಿಸಿದೆ, ಅವರ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನನ್ನದಾಗಿತ್ತು ಎಂದು ತಮ್ಮದನ್ನು ಸಮರ್ಥಿಸಿಕೊಂಡು, ನನ್ನ ಜಾಗದಲ್ಲಿ ಯಾರೇ ಇದ್ದರೂ ಅವರೂ ಹೀಗೆ ಮಾಡುತ್ತಿದ್ದರು. ಇದು ಸಾಮಾನ್ಯ ಎನ್ನುವುದು. ಮಾನಸಿಕ ಸಮಸ್ಯೆಗಳಿಂದ ಮುಕ್ತವಾಗುವ ಇರಾದೆ ಇದ್ದಲ್ಲಿ ತಮ್ಮ ಆಗ್ರಹ, ಆವೇಶ ಮತ್ತು ಆಕ್ರೋಶಗಳನ್ನು ಸಮರ್ಥಿಸುವ ಮತ್ತು ಸಾಮಾನ್ಯೀಕರಿಸುವ ಕೆಲಸವನ್ನು ಮೊದಲು ನಿಲ್ಲಿಸಬೇಕು.

ಅಸ್ವಾಸ್ಥ್ಯದ ಕೂಪ

ಯಾವುದೇ ಒಂದು ಸಂಘರ್ಷ ಅಥವಾ ಅಹಿತಕರವಾದ ಸಂಗತಿ ನಡೆದಾಗ ಪದೇ ಪದೇ ಅದನ್ನೇ ಯೋಚಿಸುತ್ತಾ, ಒಬ್ಬರೇ ಇರುವಾಗಲೂ ಇದರಿಂದ ತನಗೆ ಅಪಮಾನವಾಯ್ತು, ಇದು ನನ್ನನ್ನು ಕೆಳಕ್ಕೆ ತಳ್ಳಿಬಿಟ್ಟಿತು, ಅವರಿಗೆ ಸರಿಯಾಗಿ ಬುದ್ಧಿ ಕಲಿಸಬೇಕು, ಯಾವಾಗ ನಾನು ಏನು ಮಾಡಿದರೆ, ಯಾರಿಂದ ಏನು ಮಾಡಿಸಿದರೆ ಅವರಿಗೂ ನನ್ನ ಹಾಗೆ ನೋವಾಗುವುದು, ಅಥವಾ ನನ್ನ ನೋವು ಶಮನವಾಗುವುದು; ಹೀಗೆಲ್ಲಾ ಆಲೋಚನೆಗಳು ಪದೇ ಪದೇ ಬರುತ್ತಿದ್ದರೆ ತಕ್ಷಣ ಎಚ್ಚೆತ್ತುಕೊಳ್ಳಿ. ಅಸ್ವಾಸ್ಥ್ಯದ ಕೂಪದಲ್ಲಿ ಜಾರುತ್ತಿದ್ದೀರಿ ಎಂದು ಅರ್ಥ.

ಯಾರೋ ಒಬ್ಬರೊಡನೆ ಸಂಘರ್ಷವಾದ ಮೇಲೆ ಮತ್ತೆ ಅವರನ್ನು ಮುಖಾಮುಖಿಯಾಗುವ ಸಂದರ್ಭ ಬಂದಾಗ ಹಿಂದಿನದೆಲ್ಲಾ ನೆನಪು ಬಂದು, ನಿಮ್ಮ ಮುಖ ಬಾಡುತ್ತಿದೆ, ಒಣಗುತ್ತಿದೆ. ಅವರ ಮುಂದೆ ನಿಮಗೆ ನಡೆಯಲು, ಕೂರಲು ಆಗುತ್ತಿಲ್ಲ. ಆ ಜಾಗ ಬಿಟ್ಟು ಹೋಗಬೇಕು ಎನ್ನಿಸುತ್ತಿದೆ ಎಂದಾಗಲೂ ನೀವು ಎಚ್ಚರಗೊಳ್ಳಬೇಕು. ಯಾವುದೋ ಒಂದು ಸಮಾರಂಭ. ನಿಮ್ಮ ಜೊತೆಗೆ ಮನಸ್ತಾಪ ಇರುವವರಿಗೂ ಮತ್ತು ನಿಮಗೂ ಸಾಮಾನ್ಯವಾಗಿರುವ ಸ್ನೇಹಿತರು ಮಾಡುತ್ತಿರುವ ಕಾರ್ಯಕ್ರಮ.

ಬರುತ್ತಿರುವ ಅತಿಥಿಗಳ ಪಟ್ಟಿ ನಿಮಗೆ ತಿಳಿಯಿತು. ಅಥವಾ ನಿಮ್ಮೊಂದಿಗೆ ಮನಸ್ತಾಪ ಇರುವ ವ್ಯಕ್ತಿಯೂ ಬರುವುದು ನಿಮಗೆ ಖಚಿತ. “ಅವರು ಬರುವ ಹಾಗಿದ್ದರೆ ನಾನು ಬರುವುದಿಲ್ಲ. ನಿನಗೆ ನಾನು ಬರಬೇಕೆಂದಿದ್ದರೆ ಅವರನ್ನು ಕರೆಯಬೇಡ” ಎಂದಿರೋ, ನಿಮ್ಮಲ್ಲಿ ಅರಿಮೆಯ ಅರಿವು ಇನ್ನೂ ಬಂದಿಲ್ಲ ಎಂದು ಅರ್ಥ. ಅಥವಾ “ಖಂಡಿತ ಬರುತ್ತೇನೆ” ಎಂದು ನಗುಮುಖದಿಂದ ಒಪ್ಪಿಕೊಂಡು, ಆಮಂತ್ರಣ ಪತ್ರಿಕೆ ಸ್ವೀಕರಿಸಿ ನಂತರ ಅವತ್ತು ಮನೆಯಲ್ಲಿಯೇ ಟಿವಿ ನೋಡಿಕೊಂಡು ಕಾಲ ಕಳೆದುಕೊಂಡು ನಂತರ ಅವರು ಸಿಕ್ಕಾಗ, “ಸಾರಿ, ನನಗೆ ಅವತ್ತು ತುಂಬಾ ಹುಷಾರಿರಲಿಲ್ಲ” ಅಥವಾ “ಮನೆಗೆ ಇದ್ದಕ್ಕಿದ್ದಂತೆ ಯಾರೋ ಊರಿಂದ ಬಂದುಬಿಟ್ಟರು. ಅದಕ್ಕೆ ಬರಲಾಗಲಿಲ್ಲ. ಸಾರಿ, ಹೇಗಾಯಿತು ಕಾರ್ಯಕ್ರಮ? ಛೇ, ರಿಯಲಿ ಐ ಮಿಸ್ಡ್” ಅಂತ ಓಳು ಬಿಟ್ಟಿರೋ ಗ್ಯಾರಂಟಿ ನಿಮ್ಮಲ್ಲಿ ಕೀಳರಿಮೆ, ಮುಖೇಡಿತನವೇ ಮೊದಲಾದ ಮಾನಸಿಕ ಸಮಸ್ಯೆಗಳು ಇದೆ.

ಲಗಾಮಿರಲಿ ಕುದುರೆಗೆ

ಚೆನ್ನಾಗಿ ನೆನಪಿನಲ್ಲಿಟ್ಟುಕೊಳ್ಳೋಣ. ಯಾರಿಗೆ ತಮ್ಮ ಆಲೋಚನಾ ಕ್ರಮಗಳನ್ನು, ಗ್ರಹಿಸುವ ರೀತಿಗಳನ್ನು ಬದಲಾಯಿಸಿಕೊಳ್ಳಲು ಸಾಧ್ಯವಾಗುತ್ತದೆಯೋ ಅವರಿಗೆ ಖಂಡಿತವಾಗಿ ತಮ್ಮ ಅಸಹನೆ, ಆಕ್ರೋಶ, ಆವೇಗ, ಆಗ್ರಹವೇ ಇತ್ಯಾದಿ ಅಹಿತಕರ ಭಾವನೆಗಳನ್ನು ನಿಯಂತ್ರಿಸುವ ಸಾಮರ್ಥ್ಯವೂ ಕೂಡಾ ಅಭಿವೃದ್ಧಿಗೊಳ್ಳುತ್ತದೆ. ಸಂಯಮದಿಂದ ನೋಡಬಲ್ಲ, ಕೇಳಬಲ್ಲ, ಆಲೋಚಿಸಬಲ್ಲ. ಸಮತೂಕದ ಮಾತುಗಳನ್ನು ಆಡಬಲ್ಲ. ತನ್ನನ್ನು ತಾನು ಸಾಕ್ಷೀಕರಿಸಿಕೊಳ್ಳುವ ಮನುಷ್ಯನು ತನ್ನ ಮನಸ್ಸಿಗೆ ಮತ್ತು ಇತರರ ಮನಸ್ಸಿಗೆ ಗಾಯವಾಗದಂತೆ ಎಚ್ಚರಿಕೆಯಿಂದ ತನ್ನ ನಡೆ, ನುಡಿ ಮತ್ತು ಆಲೋಚನೆಗಳನ್ನು ಬಳಸಬಲ್ಲ. ಹಾಗೆಯೇ ತನ್ನ ಧೋರಣೆ, ಒಲವು ಮತ್ತು ನಿಲುವುಗಳನ್ನು ಎಚ್ಚರಿಕೆಯಿಂದ ನಿಯಂತ್ರಿಸಿಕೊಳ್ಳಬಲ್ಲ.

ಕಠೋಪನಿಷತ್ತೇ ಮೊದಲಾದ ತಾತ್ವಿಕ ಪಠ್ಯಗಳಲ್ಲಿ ಮನುಷ್ಯನ ವಿಷಯ ವಾಸನೆಗಳನ್ನು ಮತ್ತು ಮನೋಭಾವದ ವಸ್ತುಗಳನ್ನು ಕುದುರೆಗಳಿಗೂ ಮತ್ತು ಬುದ್ಧಿಯನ್ನು (ಅಥವಾ ಪ್ರಜ್ಞೆಯನ್ನು) ಸಾರಥಿಗೂ ಹೋಲಿಸುತ್ತಾರೆ. ಬುದ್ಧಿಯು ಮನಸ್ಸಿನ ಭಾವಗಳ ಮೇಲೆ ಲಗಾಮನ್ನು ಹೊಂದಿರಬೇಕು. ಅದನ್ನು ನಿಯಂತ್ರಿಸಬೇಕು ಎಂದು ಸೂಚಿಸುತ್ತಾರೆ. ನಿಜ, ಇದು ಬಹಳ ಸುಂದರವಾದ ಮತ್ತು ಸರಿ ಹೊಂದುವ ರೂಪಕ. ಸವಾರನು ತನ್ನ ಕುದುರೆಯ ಲಗಾಮನ್ನು ತಾನು ಹಿಡಿದುಕೊಂಡು ತನ್ನ ಸವಾರಿಯನ್ನು ತನ್ನ ಗುರಿ ಮತ್ತು ದಾರಿಗೆ ತಕ್ಕಂತೆ ಮಾಡುವುದು ಆತನಿಗಿರುವ ಸಾಮರ್ಥ್ಯ ಮತ್ತು ತರಬೇತಿಯೇ ಸರಿ. ಅದೇ ಮನಸ್ಸಿನ ವಿಷಯಗಳ ಕುದುರೆಗಳನ್ನೂ ಹತೋಟಿಯಲ್ಲಿಡುವ ಲಗಾಮು ನಮ್ಮ ಕೈಯಲ್ಲೇ ಇರಬೇಕು.

ಭಾವನೆಗಳಿಗೂ ಮತ್ತು ಮನೋಭಾವಗಳಿಗೂ ವ್ಯತ್ಯಾಸವಿದೆ. ಅಳು, ನಗು, ಬೇಸರ, ಕೋಪ; ಇತ್ಯಾದಿ ಭಾವನೆಗಳನ್ನು ಹೊರಗಿನ ಒತ್ತಡಗಳಿಂದ ಮತ್ತು ಆಂತರಿಕ ಕಾರಣಗಳಿಂದ ನಿಗ್ರಹಿಸಿಕೊಳ್ಳಬಾರದು. ಅವುಗಳನ್ನು ಅದುಮಿಟ್ಟುಕೊಳ್ಳಬಾರದು, ವ್ಯಕ್ತಪಡಿಸಬೇಕು ನಿಜ. ಆದರೆ, ಈ ರೀತಿಯ ಭಾವನೆಗಳು ಮನೋಭಾವದ ಕಾರಣದಿಂದ ಉಂಟಾದರೆ ಅದು ಸಮಸ್ಯೆಯ ಪರಿಮಿತಿಯಲ್ಲಿ ಬರುತ್ತದೆ.

ಭಾವನೆಗಳಿಗೂ ಮತ್ತು ಮನೋಭಾವಕ್ಕೂ ವ್ಯತ್ಯಾಸವನ್ನು ತಿಳಿದುಕೊಂಡರೆ ಬಹುಶಃ ಇದು ಇನ್ನೂ ಸರಿಯಾಗಿ ಅರ್ಥವಾಗಬಹುದು. ಯಾರಿಗೋ ನೋವಾಯಿತು, ಸಾವಾಯಿತು. ಯಾರೋ ಆಪ್ತರು ಪರಸ್ಪರ ದೂರಾದರು. ಯಾರೋ ಹಸಿವಿನಿಂದ ನರಳಿದರು, ಅಥವಾ ನೀವೇ ಹಸಿವಿನಿಂದಲೋ, ಅಪಮಾನದಿಂದಲೋ ಅಥವಾ ಇನ್ನಾವುದೇ ನೋವಿನಿಂದ ನರಳಿದಿರಿ. ದುಃಖವಾಗುತ್ತದೆ. ಅಳುವಿರಿ.

ಹಾಗೆಯೇ ದೂರಾಗಿದ್ದ ಎರಡು ಜೀವಗಳು ಮತ್ತೆ ಸೇರಿದವು. ಬಹುಕಾಲದ ನಂತರ ನಿಮ್ಮ ಆಪ್ತರನ್ನು ಸಂಧಿಸಿದಿರಿ. ನಿಮಗೆ ಅಥವಾ ಇನ್ನಾರಿಗೋ ಶಿಶುವಿನ ಜನವಾಯಿತು. ಮುದ್ದು ಮಗುವಿನ ಆಟ, ಮುಗ್ಧ ಪ್ರಾಣಿಗಳ ನೋಟ, ಅರಳು ಹೂಗಳು, ಎತ್ತರದ ಮರಗಳು ಖುಷಿ ತಂದವು. ನಗುವಿರಿ. ಹೀಗೆ ಕೆಲವರು ಆ ಹೊತ್ತಿಗೆ ನಡೆದುಕೊಂಡ ಕಾರಣಕ್ಕೆ ನಿಮಗೆ ಕೋಪ ಬಂದಿತು, ಗದರುವಿರಿ. ಗಟ್ಟಿಯಾಗಿ ಮಾತಾಡುವಿರಿ. ಇವೆಲ್ಲವೂ ಕೂಡಾ ಅಲ್ಲಿನ ವಸ್ತುಸ್ಥಿತಿಗಳ ಆಧಾರದಿಂದ ಅಥವಾ ಅವುಗಳು ಪ್ರಚೋದಿಸಿದ್ದರಿಂದ ನೀವು ಅಳುವುದೋ, ನಗುವುದೋ ಅಥವಾ ಕೋಪಿಸಿಕೊಳ್ಳುವುದೋ; ಎಂತದ್ದೋ ಮಾಡಿದಿರಿ. ಇವುಗಳಿಗೆಲ್ಲಾ ವಿಷಯ ವಸ್ತು ಕಾರಣಗಳಿರುತ್ತವೆ.

ಆದರೆ ನಿಮ್ಮ ಅಳು ನಗು ಮತ್ತು ಕೋಪಗಳಿಗೆ ಹೊರಗಿನ ಕಾರಣಗಳೇನೂ ಇಲ್ಲದೇ, ನಿಮ್ಮ ಆಲೋಚನೆಗಳು, ಯೋಚನೆಗಳೇ ಕಾರಣವಾಗಿದ್ದು ಅಳು, ನಗು, ಕೋಪ, ಆಗ್ರಹ, ಆವೇಶಗಳನ್ನು ಉಂಟು ಮಾಡುತ್ತಿದೆ ಎಂದರೆ ಅದು ನಿಮ್ಮ ಮನೋಭಾವ. ಈ ಭಾವನೆಗಳು ಹುಟ್ಟುವುದಕ್ಕೆ ಕಾರಣ ನಿಮ್ಮ ಮನಸ್ಸು. ಅವು ಸಾಮಾನ್ಯವಾಗಿ ಸಹಜವಾಗಿರುವುದಿಲ್ಲ.

ಉದಾಹರಣೆಗೆ ಎಲ್ಲರೂ ಸಂತೋಷವಾಗಿರುವ ಸಮಾರಂಭವೊಂದು ನಡೆಯುತ್ತಿದೆ. ಅಲ್ಲಿ ಕೆಲವರನ್ನು ನೋಡಿ ನಿಮಗೆ ಕಿರಿಕಿರಿಯಾಗುತ್ತಿದೆ. ಯಾವುದೋ ಅಹಿತಕರ ನೆನಪಿನಿಂದ ಅಲ್ಲಿ ಇರಲೂ ಕಷ್ಟವೆನಿಸುತ್ತಿದೆ. ನಗುವ ಮುಖಗಳು ಅಸಹ್ಯವಾಗಿ ಕಾಣುತ್ತಿವೆ. ಅವರೆಲ್ಲಾ ನಗುನಗುತ್ತಾ ದೊಡ್ಡದನಿಯಲ್ಲಿ ಮಾತಾಡಿಕೊಂಡಿರುವುದು ಅಸಹನೀಯವಾಗಿ ಕಿರಿಕಿರಿಯಾಗುತ್ತಿದೆ; ಹೀಗಾದರೆ ನಿಮ್ಮ ಮನೋಭಾವದ ಕಾರಣದಿಂದ ಅನುಚಿತವಾದ ಭಾವನೆಗಳು ಅಲ್ಲಿ ಉಂಟಾಗುತ್ತಿದೆ ಎಂದು ಅರ್ಥ.

ನಿಮ್ಮ ಜೊತೆಗೆ ಜಗಳ ಮಾಡಿದ್ದವರು, ಮನಸ್ತಾಪ ಮಾಡಿಕೊಂಡು ದೂರ ಸರಿದಿರುವವರು ಯಾವುದೋ ತೊಂದರೆಗೆ ಒಳಗಾಗಿ ನೋವುಣ್ಣುತ್ತಿದ್ದಾರೆ ಎಂಬ ಸುದ್ಧಿ ಬಂತು. ಆಗ, ನಿಮಗೆ ಅವರಿಗೆ ಹಾಗೇ ಆಗಬೇಕು. ಸರಿಯಾಗಿ ಆಗಿದೆ. ಅನುಭವಿಸಿಕೊಳ್ಳಲಿ ಎಂದು ಸಂತೋಷದ ಭಾವನೆ ನಿಮ್ಮಲ್ಲಿ ಉಂಟಾದರೆ ಅದು ನಿಮ್ಮ ಮನೋಭಾವದ ಪರಿಣಾಮ ಎಂದು ತಿಳಿಯಬೇಕು. ಹಾಗೆಯೇ ನನ್ನ ಎದುರಾಳಿಗೆ ಯಶಸ್ಸೋ, ಏಳ್ಗೆಯೋ ಉಂಟಾದಾಗ ನನಲ್ಲಿ ನೋವುಂಟಾದರೆ, ನನ್ನಲ್ಲಿ ದುಃಖವಾದರೆ ಅದು ನನ್ನ ಮನೋಭಾವ.

ಸ್ಥೂಲವಾಗಿ ಇಷ್ಟು ತಿಳಿಯೋಣ. ಮನೋಭಾವದ ಕಾರಣ ನಮ್ಮ ಆಲೋಚನಾ ಕ್ರಮಗಳ ಫಲವಾದರೆ, ಭಾವನೆಗಳು ಸಾಮಾನ್ಯವಾಗಿ ಹೊರಗಿನ ಪ್ರೇರಣೆಯಿಂದ ಆಗುವವು. ಹಾಗಾಗಿಯೇ ಬಹಳ ಜನ ಕಾರಣವಿಲ್ಲದೇ ನಗುವ, ಅಥವಾ ಅಳುವವರನ್ನು ಹುಚ್ಚರು ಎಂದು ಹಣೆಪಟ್ಟಿ ಕಟ್ಟುತ್ತಿದ್ದರು. ಆದರೆ, ಕಾರಣಗಳಿರುತ್ತವೆ. ಅವು ಒಳಗೆ ಬಚ್ಚಿಟ್ಟುಕೊಂಡಿರುತ್ತವೆ. ಅದು ಹೊರಗೆ ನಮಗೆ ಗೊತ್ತಾಗುವುದಿಲ್ಲ.

ಕೊಂಚ ಮಟ್ಟಿಗೆ ನಿಯಂತ್ರಣ ಸಾಧಿಸಲು ಶಕ್ಯವಾಗಿರುವವರು ತಮ್ಮ ಎದುರಾಳಿ ಸತ್ತ ಎಂಬ ಸುದ್ಧಿ ಕೇಳಿ ‘ಅಬ್ಬಾ ಸತ್ತನಲ್ಲ!’ ಎನಿಸಿದರೂ ಹೊರಗೆ ‘ಅಯ್ಯೋ ಪಾಪ’ ಎನ್ನಬಲ್ಲ. ತನಗೆ ಆಗದೇ ಇರುವವನು ಅಥವಾ ತನ್ನ ಅಸೂಯೆಗೆ ಪಾತ್ರನಾಗಿರುವವನು ಎದುರಾಗಿ ತನಗೆ ಯಾವುದರಲ್ಲೋ ಗೆಲುವುಂಟಾಯಿತು, ಯಶಸ್ಸಾಯಿತು ಎಂದಾಗ ಕಸಿವಿಸಿಯಾದರೂ, ಹೊಟ್ಟೆಯಲ್ಲಿ ಮೆಣಸು ಅರೆಯುತ್ತಿದ್ದರೂ ಮುಖದಲ್ಲಿ ನಗೆಯನ್ನು ತಂದುಕೊಂಡು ‘ಓ, ಹೌದಾ, ವೆರಿ ನೈಸ್. ಕಂಗ್ರಾಜ್ಯುಲೇಶನ್’ ಎಂದು ಅಭಿನಂದಿಸಬಲ್ಲ.

ಆದರೆ, ಅವುಗಳನ್ನು ನಿಯಂತ್ರಣ ಮಾಡಿಕೊಳ್ಳುವ ಸಾಮರ್ಥ್ಯವಿದೆ ಎಂದ ಮಾತ್ರಕ್ಕೆ ಅವನು ಸ್ವಾಸ್ಥ್ಯ ಮನಸ್ಸಿನವನು ಎಂದೇನಲ್ಲ. ಅವನಲ್ಲಿ ರೋಗವಿದೆ ಆದರೆ ಸ್ಫೋಟವಾಗುವಷ್ಟು ಉಲ್ಬಣಗೊಂಡಿಲ್ಲ ಎಂದು ಅರ್ಥ. ಆದ್ದರಿಂದ ರೋಗಲಕ್ಷಣಗಳು ಕಂಡ ತಕ್ಷಣವೇ ಆಲೋಚನಾ ಕ್ರಮಗಳನ್ನು, ಚಿಂತನಾ ವಿಧಾನವನ್ನು ಬದಲಾಯಿಸಿಕೊಳ್ಳುವ ಉದ್ದೇಶಪೂರ್ವಕ ಪ್ರಯತ್ನವನ್ನು ಮಾಡಬೇಕು.

ಸತತವಾಗಿ ಮಾಡುವ ಅಭ್ಯಾಸವು ಫಲವನ್ನು ಕೊಡುವುದು. ಅದರಲ್ಲಿ ಅನುಮಾನವೇ ಬೇಡ. ತನಗೆ ಅನ್ನಿಸಿದರ ವಿರುದ್ಧವಾಗಿ ಆಲೋಚನೆ ಮಾಡುವುದು ಆತ್ಮದ್ರೋಹವಲ್ಲವೇ? ತಾನು ಅಪ್ರಮಾಣಿಕವಾಗಿ ನಡೆದುಕೊಳ್ಳುತ್ತಿದ್ದೇನಲ್ಲವೇ? ಇನ್ನು ನನ್ನತನದ ಗುರುತೇನು? ಎಂದೇನಾದರೂ ಅಂದುಕೊಂಡರೆ ಅದನ್ನು ಸ್ಪಷ್ಟಪಡಿಸಬೇಕಾದ ಅಗತ್ಯ ಖಂಡಿತ ಇದೆ. ಮುಂದೆ ನೋಡೋಣ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

Trending