ಅಂತರಂಗ
ಅರಿಮೆಯ ಅರಿವಿರಲಿ-47 : ತನ್ನತನದ ತನ್ನ ಭಾಷೆ
- ಯೋಗೇಶ್ ಮಾಸ್ಟರ್
ಮಾನಸಿಕವಾಗಿಯಾಗಲಿ,ಆಧ್ಯಾತ್ಮಿಕವಾಗಿಯಾಗಲಿ ಅಥವಾ ಸಾಮಾಜಿಕವಾಗಿ ಸಹಜ ಮನುಷ್ಯನಂತೆಯಾಗಲಿ ತನ್ನತನವನ್ನು ಕಂಡುಕೊಂಡವರ ಕೆಲವು ಮುಖ್ಯ ಲಕ್ಷಣಗಳು ಹೀಗಿರುತ್ತವೆ.
ತನಗೆ ತಾನೇ ಸಾಕ್ಷಿ
ತನ್ನನ್ನು ತಾನು ಉನ್ಮತ್ತನಂತೆ ಪ್ರದರ್ಶಿಸಿಕೊಳ್ಳುವುದಿಲ್ಲ. ತನ್ನ ಎಲ್ಲಾ ಪ್ರತಿಕ್ರಿಯೆ ಮತ್ತು ಪ್ರತಿವರ್ತನೆಗಳನ್ನು ತಾನು ರೂಪಿಸಿಕೊಂಡಿರುವ ವ್ಯಕ್ತಿತ್ವದ ಅರಿವಿನಲ್ಲಿ ಪ್ರದರ್ಶನಕ್ಕಿಡುತ್ತಾನೆ. ಮುಖ್ಯವಾಗಿ ತನ್ನ ಪ್ರದರ್ಶನವನ್ನು ತಾನು ನೋಡಲು ಸಮರ್ಥನಿರುತ್ತಾನೆ. ಉದಾಹರಣೆಗೆ ಯಾರೋ ಒಬ್ಬ ವ್ಯಕ್ತಿಯು ತನ್ನ ಜೊತೆಗೆ ವ್ಯತ್ಯಾಸವಾಗಿ ನಡೆದುಕೊಂಡನೆಂದರೆ ಅವನಿಗೆ ಪ್ರತಿಕ್ರಿಯಿಸುವ ತನ್ನ ನಡೆ, ನುಡಿ, ನಡವಳಿಕೆ ಅವನಿಗೆ ಮತ್ತು ತಮ್ಮಿಬ್ಬರನ್ನು ನೋಡುವವರಿಗೆ ಹೇಗೆ ಕಾಣುತ್ತಿರುತ್ತದೆ ಎಂಬುದನ್ನು ತಾನು ನೋಡುತ್ತಿರುತ್ತಾನೆ. ತನ್ನನ್ನು ಪ್ರಕಟಗೊಳಿಸಿಕೊಳ್ಳುವಾಗ ಇದು ಬಹಳ ಮುಖ್ಯವಾದ ಮತ್ತು ಉಪಯುಕ್ತವಾದ ಸಾಧನ.
ತನ್ನ ತಾನು ನೋಡಿಕೊಳ್ಳುವ ತಂತ್ರಗಾರಿಕೆ ಸಿದ್ಧಿಯಾಯಿತೆಂದರೆ ಅವನು ಆಧ್ಯಾತ್ಮಿಕವಾಗಿ ಮತ್ತು ಧಾರ್ಮಿಕವಾಗಿಯೂ ಪ್ರಾಮಾಣಿಕನಾಗಿರುವವನಲ್ಲದೇ, ಮಾನಸಿಕವಾಗಿ ಯಾವುದೇ ಸಮಸ್ಯೆಗಳಿದ್ದರೂ ಅದರಿಂದ ಮುಕ್ತನಾಗಲು ಸಾಧ್ಯ. ಇನ್ನೂ ಚೆಂದದ ವಿಷಯವೆಂದರೆ, ಈ ತನ್ನ ತಾನು ನೋಡಿಕೊಳ್ಳುವ ತಂತ್ರಗಾರಿಕೆಯನ್ನು ಅಭ್ಯಾಸ ಮಾಡುವುದರಿಂದ ಸಾರ್ವಜನಿಕವಾಗಿ ಮಾತಾಡುವವರು, ಭಾಷಣ ಮಾಡುವವರು, ತರಗತಿಗಳನ್ನು ತೆಗೆದುಕೊಳ್ಳುವವರು ತಮ್ಮ ಪ್ರದರ್ಶನಗಳನ್ನು ಉತ್ತಮ ಪಡಿಸಿಕೊಳ್ಳಬಲ್ಲರು.
ಇನ್ನು ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕಲಾವಿದರಿಗೂ ತಮ್ಮ ಪ್ರದರ್ಶನವನ್ನು ಸಂವೇದನಾಶೀಲವನ್ನಾಗಿಸಿಕೊಳ್ಳಲು ಸಾಧ್ಯ.
ತನಗೆ ತಾನೇ ಸಾಕ್ಷಿಯಾಗುವುದು; ಈ ಪರಿಕಲ್ಪನೆಯನ್ನು ಸರಳವಾಗಿ ರಂಗಭೂಮಿ ಭಾಷೆಯಲ್ಲಿ ಹೇಳುವುದಾದರೆ, ನಾನೇ ರಂಗದ ಮೇಲೆ ಅಭಿನಯಿಸುತ್ತಿರುವುದು. ಅದನ್ನು ನಾನೇ ಪ್ರೇಕ್ಷಕರಲ್ಲಿ ಕುಳಿತು ನೋಡುವುದು.
ಅಧೀನನಾಗುವುದಿಲ್ಲ
ತನ್ನತನವನ್ನು ರೂಪಿಸಿಕೊಂಡವನು ಮತ್ತು ಆ ತನ್ನತನದಲ್ಲಿ ಹರಳು ನೆಟ್ಟಿರುವ ಮೌಲ್ಯಗಳ ಜ್ಞಾನೋದಯವಾಗಿರುವವನು ಯಾರನ್ನೂ ತನ್ನ ಅಂತಿಮ ಮಾದರಿ ಎಂದಾಗಲಿ, ಆರಾಧ್ಯ ವ್ಯಕ್ತಿಯೆಂದಾಗಲಿ ಎಂದಿಟ್ಟುಕೊಳ್ಳುವುದಿಲ್ಲ. ಒಟ್ಟಾರೆ ಹಾರ್ಡ್ ಕೋರ್ ಫ್ಯಾನ್ ಅಥವಾ ಕಟ್ಟಾ ಅಭಿಮಾನಿ ಆಗುವುದಿಲ್ಲ. ಅದೇ ರೀತಿಯಲ್ಲಿ ತನ್ನ ಮನೆಯಲ್ಲಾಗಲಿ, ಕೆಲಸ ಮಾಡುವ ಕಡೆಯಲ್ಲಾಗಲಿ ಯಾವುದೇ ಮುಲಾಜಿತೆ ಯಾರೊಬ್ಬರ ಅಧೀನವಾಗಿರುವುದಿಲ್ಲ. ಗೌರವಿಸುವುದು, ವಿನಯವಾಗಿರುವುದು, ಅನುಸರಿಸಿಕೊಳ್ಳುವುದು; ಈ ಎಲ್ಲವೂ ಇರುತ್ತದೆ. ಆದರೆ ಅದು ಕಾರ್ಯಕಾರಣವಾದ ಸರಿಸಿಕೊಳ್ಳುವಿಕೆಯೇ ಹೊರತು ಯಾರಿಗೂ ಅಧೀನವಾಗಿರುವುದಿಲ್ಲ. ತಮ್ಮತನವನ್ನು ಪಣಕ್ಕಿಡುವುದಿಲ್ಲ.
ತನ್ನನ್ನು ತಾನು ಯಾರೋ ಒಬ್ಬ ನಟನ, ರಾಜಕೀಯ ವ್ಯಕ್ತಿಯ, ಧಾರ್ಮಿಕ ಪುರುಷನ, ಸಮಾಜ ಸುಧಾರಕನ ಭಕ್ತನಾಗಿಸಿಕೊಳ್ಳುವುದಿಲ್ಲ. ಯಾರು ತಮ್ಮನ್ನು ಕಟ್ಟಾ ಅಭಿಮಾನಿಗಳು ಎಂದು ಘೋಷಿಸಿಕೊಳ್ಳುತ್ತಾರೋ, ಪ್ರಾಮಾಣಿಕವಾಗಿ ಅವರಲ್ಲಿ ಅಂತಹ ಭಾವ ಇರುತ್ತದೆಯೋ ಅವರಿಗೆ ತಮ್ಮತನದ ಸಾಕ್ಷಾತ್ಕಾರವಾಗಿಲ್ಲವೆಂದೇ ಅರ್ಥ.
ತಮ್ಮತನದ ಅರಿವುಳ್ಳವರು ತಮ್ಮತನವನ್ನು ರೂಪುಗೊಳಿಸಿರುವ ಮೌಲ್ಯ ಮತ್ತು ಗುಣಗಳ ಅನುಸಾರವಾಗಿ ತಾವು ಗಮನಿಸುವ ಮಹಾನ್ ವ್ಯಕ್ತಿಗಳ, ತಮ್ಮ ಸಹಜೀವಿಗಳ, ಗುರುಗಳ ಇತ್ಯಾದಿ ಬೋಧನೆ ಮಾಡುವ ಸ್ಥಾನದಲ್ಲಿರುವವರ ಗುಣಗಳನ್ನು, ಸಲಹೆಗಳನ್ನು, ಉದಾಹರಣೆಗಳನ್ನು ಅನುಮೋದಿಸುತ್ತಾರೆ. ಹಾಗೆ ಅನುಮೋದಿಸುವ ಮೂಲಕ ತಮ್ಮ ತನ್ನತನದಲ್ಲಿ ಇರುವ ಅದೇ ಮಾದರಿಯ ಗುಣ ಸ್ವಭಾವಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.
ತಮ್ಮತನದ ಗುಣ ಸ್ವಭಾವಗಳಿಗೆ ಪೂರಕವಾಗಿರುವ ವಿಷಯಗಳನ್ನು ಅವರು ಎಲ್ಲಿಂದಾದರೂ, ಯಾರಿಂದಲಾದರೂ ಅವರು ಹೆಕ್ಕಿಕೊಳ್ಳುವರು. ಆದರೆ ಯಾವುದೇ ನಿರ್ಧಿಷ್ಟ ವ್ಯಕ್ತಿಗೆ ಅವರು ಸೀಮಿತವಾದರೆ ಅಥವಾ ವ್ಯಕ್ತಿಪೂಜೆ ಮಾಡುತ್ತಿದ್ದಾರೆಂದರೆ ಅವರು ತಮ್ಮತನದ ಸಾಕ್ಷಾತ್ಕಾರವನ್ನು ಪಡೆದಿಲ್ಲವೆಂದೋ ಅಥವಾ ತಮ್ಮತನವನ್ನು ರೂಪಿಸಿಕೊಳ್ಳುವುದರಲ್ಲಿ ಗೊಂದಲದಿಂದ ಕೂಡಿದ್ದಾರೆಂದೋ ತಿಳಿಯಬಹುದು.
ತಮ್ಮತನವೆನ್ನುವುದೇ ನೈತಿಕ ಮೌಲ್ಯ, ನಿರ್ಧಿಷ್ಟ ಗುಣಗಳಿಂದ ರೂಪುಗೊಂಡಿರುವುದು. ಯಾರೋ ಒಬ್ಬ ನಟರಾಗಲಿ, ರಾಜಕಾರಣಿಯಾಗಲಿ, ಸಾಹಿತಿಯಾಗಲಿ, ಕಲಾವಿದನಾಗಲಿ, ಅವರವರತನದ ಅಭಿವ್ಯಕ್ತಿಯಾಗಿ ತಮ್ಮ ಕ್ಷೇತ್ರದಲ್ಲಿ ತಮ್ಮ ಕೆಲಸದ ಮೂಲಕ ವ್ಯಕ್ತಪಡಿಸಿರುತ್ತಾರೆ.ಅವರು ಯಾವುದೇ ರೀತಿಯ ಕೊಡುಗೆಗಳನ್ನು ನಾಡು ನುಡಿ ಮತ್ತು ಸಮಾಜಕ್ಕೆ ಕೊಟ್ಟರೂ ಅವರ ಕೊಡುಗೆಗಳನ್ನು ಸ್ವೀಕರಿಸುವ ರೀತಿಯಲ್ಲಿ ಮತ್ತು ಕೊಟ್ಟಿರುವ ಅವರನ್ನು ಗೌರವಿಸುವ ರೀತಿಯಲ್ಲಿ ಉನ್ಮತ್ತನಾಗಿ ಮಾರು ಹೋಗುವ ಸಾಮೂಹಿಕ ಸನ್ನಿಯನ್ನು ಹೊಂದಿರುವುದಿಲ್ಲ. ಇಷ್ಟು ತಿಳಿದುಕೊಳ್ಳೋಣ.
ತನ್ನತನದ ಸಾಕ್ಷಾತ್ಕಾರವಾಗಿರುವವನು ಸಾಮೂಹಿಕ ಸನ್ನಿಯಿಂದ, ಜನಪ್ರಿಯ ಅನುಸರಣೆಗಳಿಂದ ಮುಕ್ತನಾಗಿರುತ್ತಾರೆ. ಉತ್ಪ್ರೇಕ್ಷೆಗಳ ಅಮಲಿನಲ್ಲಿ ಮೈ ಮರೆಯುವುದಿಲ್ಲ. ಮಾಸ್ತಿ ಕನ್ನಡದ ಆಸ್ತಿ ಎಂಬುದೊಂದು ಮಾತು. ಅದನ್ನು ಕೇಳಿದಾಗ ಈ ತನ್ನತನದ ವ್ಯಕ್ತಿಯೊಬ್ಬ ಲೇಖಕನಾಗಿದ್ದರೆ ಅವನ ಆಂತರಿಕ ಪ್ರತಿಕ್ರಿಯೆಗಳು ಹೀಗಿದ್ದಿರಬಹುದು. “ಕನ್ನಡ ನುಡಿಯ ಅಸ್ತಿತ್ವಕ್ಕೆ ಅವರು ನೀಡಿರುವ ಕೊಡುಗೆಗಳು ನಿಜಕ್ಕೂ ಗೌರವಪೂರ್ಣವೇ. ಆದರೆ ಅವನ್ನು ಪ್ರಶಂಸಿಸುವ ಉತ್ಪ್ರೇಕ್ಷೆಯ ಧ್ವನಿ ಇದು. ಆಸ್ತಿ ಎಂದು ಕರೆಯಿಸಿಕೊಳ್ಳದಿದ್ದರೂ ಇತರ ಅನೇಕಾನೇಕರ ಕೊಡುಗೆಗಳು ಕನ್ನಡಕ್ಕೆ ಇವೆ. ಇದರಲ್ಲಿ ನಾನೂ ಹೊರತಲ್ಲ.”
ಏಕೈಕ, ನ ಭೂತೋ ನ ಭವಿಷ್ಯತಿ, ಹಿಂದೆ ಹುಟ್ಟಿಲ್ಲ ಮುಂದೆ ಹುಟ್ಟುವುದಿಲ್ಲ, ಸಮಸ್ತರ ಹೃದಯ ನಿವಾಸಿ, ನಮ್ಮೆಲ್ಲರ ಆಶಾಕಿರಣ; ಇತ್ಯಾದಿಗಳು ಅವರ ಪದ ಭಂಡಾರದಲ್ಲಿರುವುದಿಲ್ಲ. ಬಸವಣ್ಣಾ ರಾಜಾ ಬಿಜ್ಜಳನ ಗೌರವಿಸಿದರೂ, ಪ್ರೀತಿಸಿದರೂ ಅವನ ಅಧಿಕಾರದ ಹಂಗನ್ನು ತಿರಸ್ಕರಿಸಿದ್ದನ್ನು ನೆನಪಿಸಿಕೊಳ್ಳೋಣ. ಎನಗಿಂತ ಕಿರಿಯರಿಲ್ಲ ಎನ್ನುವ ಬಸವಣ್ಣ ತನ್ನ ಅನ್ನ, ಅಧಿಕಾರ ಮತ್ತು ಅಂತಸ್ತಿಗೆ ಆಶ್ರಯನಾಗಿರುವ ಬಿಜ್ಜಳನ ಓಲೈಸುವ ಹೊಗಳುಭಟ್ಟಂಗಿಯಂತಹ ಕವಿಯಾಗಿ ವಚನಗಳನ್ನು ರಚಿಸಲಿಲ್ಲ. ತಮ್ಮತನವನ್ನು ವ್ಯವಸ್ಥೆಯ ಅಧೀನಕ್ಕೆ ಬಿಟ್ಟುಕೊಡಲು ಸಿದ್ಧರಲ್ಲದ ಬಸವಣ್ಣ ಸಾಯಲೂ ಸಿದ್ಧವಾಗಿ ಮರಣವೇ ಮಹಾನವಮಿ ಎಂದರು.
“ಜೋಳವಾಳಿಯವ ನಾನಲ್ಲ, ವೇಳವಾಳಿಯವ ನಾನಯ್ಯ” ಎನ್ನುವುದು ಅವರತನದ ಧೋರಣೆ.
‘ತನ್ನ ಜೀವಿತಕ್ಕೆ ಆಧಾರವಾಗಿರುವ ಆಹಾರಾದಿಗಳನ್ನು ಕೊಡುವ ಧಣಿಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಪದ್ಧತಿಯನ್ನು ಜೋಳವಾಳಿ ಎಂದೂ, ಯುಕ್ತ ಸಮಯಕ್ಕೆ ಸರಿಯಾಗಿ ನೆರವಿಗೆ ಬರುವ ಪದ್ಧತಿಯನ್ನು ವೇಳವಾಳಿ ಎಂದೂ ಕರೆಯಲಾಗುತ್ತಿತ್ತು.’ ಒಟ್ಟಿನಲ್ಲಿ ಇಷ್ಟು ತಿಳಿಯೋಣ ತನ್ನತನದ ಮನುಷ್ಯರು ವೇಳವಾಳಿಯವರೇ ಹೊರತು ಜೋಳವಾಳಿಯವರಲ್ಲ.
ಗುಂಪಿನ ಧ್ವನಿಯಲ್ಲ
ಎಲ್ಲರ ಮಾತನ್ನು ತನ್ನದು ಎಂಬಂತೆಯೂ, ತನ್ನ ಮಾತೇ ಎಲ್ಲರದು ಎಂಬಂತೆಯೂ ತನ್ನತನದ ಅರಿವುಳ್ಳವರು ಹೇಳುವುದಿಲ್ಲ. ಒಂದು ವೇಳೆ ಸಮೂಹಗಳು, ಸಂಘಟನೆಗಳು ಧ್ವನಿ ಎತ್ತಿದರೆ ಅವು ಸಾಂಘಿಕವಾಗಿವೆ ಎಂದೋ, ಅವರ ಬೆಂಬಲ ತನಗೆ ಬೇಕಾಗುತ್ತದೆ ಎಂದೋ ಧ್ವನಿಗೂಡಿಸುವುದಿಲ್ಲ. ತಾವು ಅದನ್ನು ಒಪ್ಪಿದ್ದರೆ ಮಾತ್ರವೇ ದನಿಗೂಡಿಸುತ್ತಾರೆ ಮತ್ತು ತಮ್ಮದೇ ಆದ ರೀತಿಯಲ್ಲಿ ಅನುಮೋದಿಸುತ್ತಾರೆ. ಸಂಘಟನೆಗಳನ್ನು ಮಾಡಿದರೂ ಅದರಲ್ಲಿ ಪ್ರಜಾತಂತ್ರಾತ್ಮಕ ರೀತಿಯನ್ನು ಅನುಸರಿಸುತ್ತಾರೆ.
ನಾಯಕನೆಂದು ಅವರಿವರೆಂದರೂ ತಾನು ತನ್ನ ವೈಯಕ್ತಿಕ ಬದ್ಧತೆಯಿಂದ ಹೊತ್ತಿರುವ ಸಂಕಲಿತ ಜವಾಬ್ದಾರಿಯ ಮುಂದಾಳು, ಮೊದಲು ಕೆಲಸ ಮಾಡಬೇಕಾಗಿರುವ ಆಳೆಂಬ ಅರಿವಿರುತ್ತದೆಯೇ ಹೊರತು, ಹಲವರನ್ನು ಅಧೀನದಲ್ಲಿಟ್ಟುಕೊಂಡಿರುವ ನಾಯಕ ತಾನು ಎಂಬ ಮೇಲರಿಮೆಯ ಭಾವ ಇರುವುದಿಲ್ಲ. ಅಷ್ಟೇ ಅಲ್ಲ, ತಮ್ಮ ಒಲವು ಮತ್ತು ನಿಲುವುಗಳನ್ನು, ಅಭಿಪ್ರಾಯಗಳನ್ನು ಸಾಮಾನ್ಯೀಕರಿಸುವುದಿಲ್ಲ. ಮತ್ತು ಯಾವುದೇ ಸಾರ್ವಜನಿಕವಾದ ವಿಷಯಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳುತ್ತಾರೆಯೇ ಹೊರತು ನಿರ್ಣಯಗಳನ್ನು ತೆಗೆದುಕೊಳ್ಳುವುದಿಲ್ಲ.
ತಮ್ಮತನದ ಅರಿವಿರುವವರು ಸದಾ ಇತರರಿಗೂ ಅವರತನವೊಂದಿರುತ್ತದೆ ಎಂಬ ಅರಿವಿನಲ್ಲಿ ಜಾಗೃತವಾಗಿರುತ್ತಾರೆ. ತಮ್ಮತನಕ್ಕೆ ಬದ್ಧವಾಗಿರುವವರು ಇತರರ ತಮ್ಮತನವನ್ನೂ ಗೌರವಿಸುತ್ತಾರೆ. ತಮ್ಮದನ್ನೇ ಹೇರುವ ಮತ್ತು ಒಪ್ಪಿಸುವ ಧಾವಂತ ಎಂದಿಗೂ ಅವರಲ್ಲಿ ಇರುವುದಿಲ್ಲ. ಒಂದು ವೇಳೆ ತಮ್ಮ ಮಾತು ಬಿದ್ದು ಹೋಗುವ ಅಥವಾ ನಗಣ್ಯವಾಗುವುದನ್ನು ಕಂಡರೂ ಭಾವೋದ್ರೇಕಗೊಳ್ಳುವುದಿಲ್ಲ.
“ನಾನೆಷ್ಟು ಕಾಳಜಿ ಮತ್ತು ಪ್ರೀತಿಯಿಂದ ವಿಷಯವನ್ನು ಪ್ರಸ್ತುತ ಪಡಿಸಿದ್ದೇನೆ. ಆದರೆ ನೀವು ಅದನ್ನು ಪರಿಗಣಿಸಿಯೇ ಇಲ್ಲ. ನನಗೆ ತುಂಬಾ ನೋವಾಯಿತು. ದಯಮಾಡಿ ಇದನ್ನು ಪರಿಶೀಲಿಸಿ, ಒಪ್ಪಿಕೊಳ್ಳಬೇಕೆಂದು ವಿನಯಪೂರ್ವಕವಾಗಿ ಆಗ್ರಹಿಸುತ್ತೇನೆ.” ಇಂತವೆಲ್ಲಾ ಅವರ ವಾಕ್ಯಗಳಲ್ಲ. ಮನವರಿಕೆ ಮಾಡಿಕೊಡುವ, ಮನದಟ್ಟು ಮಾಡಿಸುವ, ಮನವೊಲಿಸುವ ಸಂದರ್ಭಗಳು ಬಂದಾಗ ಅದಕ್ಕೆ ತಮ್ಮ ಪ್ರಯತ್ನವನ್ನು ಮಾಡುವರು. ಆದರೆ ತಮ್ಮತನವನ್ನು ಒತ್ತೆಯಿಟ್ಟಲ್ಲ. ಸರಳವಾಗಿ ಹೇಳುವುದಾದರೆ ಬಕೆಟ್ ಹಿಡಿಯುವುದಿಲ್ಲ.
ಎಲ್ಲವನ್ನೂ, ಎಲ್ಲರನ್ನೂ ಭಳಿರೇ ಭಳಿರೇ ಎಂದಂತೂ ಮೆಚ್ಚುವ ನಟನೆ ಮಾಡುತ್ತಾ ಅವರ ಮೆಚ್ಚುಗೆಗೆ ಪಾತ್ರರಾಗಲು ಯತ್ನಿಸುವುದಿಲ್ಲ. “ಸೂಳೆಗೆ ಹುಟ್ಟಿದ ಕೂಸಿನಂತೆ ಆರನಾದಡೆಯೂ ‘ಅಯ್ಯಾ ಅಯ್ಯಾ’ ಎನಲಾರೆ” ಎನ್ನುವ ಸ್ವಾಭಿಮಾನ. ಜೊತೆಗೆ, “ಚೆನ್ನಯ್ಯನೆಮ್ಮಯ್ಯನು, ಚೆನ್ನಯ್ಯನ ಮಗ ನಾನು. ಕೂಡಲಸಂಗನ ಮಹಾಮನೆಯಲಿ ಧರ್ಮಸಂತಾನಿ ಭಂಡಾರಿ ಬಸವಣ್ಣನು” ಎಂದು ಹೇಳಿಕೊಳ್ಳುವ ತನ್ನತನದ ಬದ್ಧತೆ.
ನನ್ನ ಭಾಷೆ ನನ್ನದು
ಫೇಸ್ಬುಕ್ ಮತ್ತು ವಾಟ್ಸಾಪ್ಗಳ ಅಂತರ್ಜಾಲ ವೇದಿಕೆಗಳಿಂದಾಗಿ ಸಾಮಾನ್ಯ, ಅಸಮಾನ್ಯ ಎನ್ನದೇ, ಪಂಡಿತ ಪಾಮರ ಎನ್ನದೇ ಯಾರಾದರೂ ತಮ್ಮ ಅಭಿಪ್ರಾಯಗಳನ್ನು ಮತ್ತು ಆಲೋಚನೆಗಳನ್ನು ಪ್ರಕಟಿಸಲು ಮತ್ತು ತಮ್ಮತನವನ್ನು ಪ್ರದರ್ಶಿಸಲು ಅವಕಾಶವಿದೆ. ಸಾಮಾನ್ಯವಾಗಿ ಇತರೇ ವಸ್ತುಗಳಿಗೆ ಮತ್ತು ವ್ಯವಸ್ಥೆಗಳಲ್ಲಿ ಇರುವಂತೆ ಇದರಲ್ಲಿಯೂ ಅನುಕೂಲಗಳು ಅನಾನುಕೂಲಗಳೂ ಇವೆ. ಬಳಸುವ ಬಗೆಯು ಅವರವರ ವಿವೇಚನೆಗೆ ಬಿಟ್ಟಿರುವುದೇ ಆಗಿರುತ್ತದೆ.
ವಿವೇಚನೆ ಎಂದರೇನು? ನಿಶ್ಚಿತವಾದ ತಿಳುವಳಿಕೆ ಮತ್ತು ಸ್ಪಷ್ಟವಾದ ಅರಿವು ಇದ್ದು ಅದನ್ನು ಸಾರಾಸಾರವನ್ನು ತಿಳಿದು, ಉಚಿತ ಅನುಚಿತವಾದುದು ಯಾವುದೆಂದು ಬಗೆದು ಆಲೋಚಿಸುವ, ಗ್ರಹಿಸುವ, ಪ್ರಕಟಗೊಳಿಸುವ, ಪ್ರದರ್ಶಿಸುವ ಒಬ್ಬನ ವಿವೇಕ. ತನ್ನತನದ ಸಾಕ್ಷಾತ್ಕಾರವುಳ್ಳವರಿಗೆ ಈ ವಿವೇಚನೆ ಅಥವಾ ವಿವೇಕ ಎನ್ನುವುದು ಸಹಜವಾದ ಗುಣವಾಗಿರುತ್ತದೆ ಅಥವಾ ಆಗಿರಬೇಕು.
ಫೇಸ್ಬುಕ್ಕಿನಲ್ಲಿ ಕೆಲವು ವಿಷಯಗಳು ಚರ್ಚೆಯಾಗುತ್ತಿರುತ್ತವೆ. ವಿಷಯದ ಪರವಾಗಿರುವವರೂ ಮತ್ತು ವಿರೋಧವಾಗಿರುವವರೂ ತಮ್ಮ ತಮ್ಮ ವಾದಗಳನ್ನು, ವಿಷಯಗಳನ್ನು ಮತ್ತು ಗ್ರಹಿಕೆಗಳನ್ನು ಪ್ರದರ್ಶಿಸುತ್ತಿರುತ್ತಾರೆ. ಆದರೆ ಅವರ ಮಾತುಗಳಲ್ಲಿ ಬಳಕೆಯಾಗುವ ಭಾಷೆಯನ್ನು ನೋಡಿದರೆ ಅವರ ಆಲೋಚನೆ, ಗ್ರಹಿಕೆ ಮತ್ತು ಅಧ್ಯಯನಗಳಿಗಿಂತ, ಅಥವಾ ಒಲವು ಮತ್ತು ನಿಲುವುಗಳಿಗಿಂತ ಅವರವರ ಪೂರ್ವಾಗ್ರಹಗಳು ಮತ್ತು ಮಾನಸಿಕ ಸಮಸ್ಯೆಗಳು ಪ್ರದರ್ಶನವಾಗುತ್ತಿರುತ್ತವೆ. ಆ ಪ್ರದರ್ಶನವಾಗುವುದು ಅವರು ಬಳಸುವ ಭಾಷೆಯಿಂದ.
ಬಹಳಷ್ಟು ಸಂದರ್ಭಗಳಲ್ಲಿ ವಿಷಯದ ವಿರೋಧಿಗಳೂ ಮತ್ತು ಪರವಾಗಿರುವವರಿಬ್ಬರೂ ಒಂದೇ ಭಾಷೆಯಲ್ಲಿ ಮಾತಾಡುತ್ತಿರುತ್ತಾರೆ. ಪರಸ್ಪರ ನಿಂದನೆಗಳಲ್ಲಿ, ಅವಹೇಳನಗಳಲ್ಲಿ ತೊಡಗಿರುವುದಲ್ಲದೇ ಅಭಿಪ್ರಾಯಗಳನ್ನು ಹೇಳುವ ಬದಲು ನಿರ್ಣಯಗಳನ್ನು ನೀಡುತ್ತಿರುತ್ತಾರೆ. ಅವುಗಳಲ್ಲಿ ಅವರು ವಿಷಯದ ಬಗ್ಗೆ ತಳೆದಿರುವ ಒಲವು ನಿಲುವುಗಳಿಗಿಂತ ವ್ಯಕ್ತಿಯಲ್ಲಿರುವ ಮೇಲರಿಮೆ, ಆತ್ಮರತಿ, ಕೀಳರಮೆ, ಬೈಪೋಲಾರ್ ಸಮಸ್ಯೆ, ಬಾರ್ಡರ್ ಲೈನ್ ಡಿಸಾರ್ಡರ್, ತನ್ನತನದ ಅರಿವಿಲ್ಲದೇ ಸಮೂಹ ಸನ್ನಿಗೆ ಒಳಗಾಗಿರುವ ಲಕ್ಷಣಗಳೇ ಪ್ರದರ್ಶಿತವಾಗುತ್ತಿರುತ್ತವೆ.
ಇಲ್ಲಿ ಗಮನಿಸಿ ನೋಡಿ. ಪರ ಅಥವಾ ವಿರೋಧವೇನೂ ಇಲ್ಲದ ಮೂರನೆಯ ವ್ಯಕ್ತಿಯೊಬ್ಬ ಈ ಚರ್ಚೆಯನ್ನು ಗಮನಿಸುತ್ತಿದ್ದಾಗ ಅವನಿಗೆ ಇಬ್ಬರ ಬಗ್ಗೆಯೂ ಒಲವುಂಟಾಗುವುದಿಲ್ಲ. ಬದಲಿಗೆ ಇಬ್ಬರ ಬಗ್ಗೆಯೂ ಜಿಗುಪ್ಸೆ ಹುಟ್ಟುತ್ತದೆ. ಹೀಗಾಗಿ ಅವನು ವಿಷಯದ ಪರವಾಗಿಯೂ ಮನವೊಲಿಯುವುದಿಲ್ಲ, ವಿರುದ್ಧವಾಗಿಯೂ ಮನವರಿಕೆಯಾಗುವುದಿಲ್ಲ. ಒಟ್ಟಾರೆ ಎರಡೂ ವರ್ಗಗಳ ನಡುವಿನ ಒಂದು ಸಂಘರ್ಷವಾಗಿ ಕಾಣುತ್ತದೆ.
ತನ್ನತನದ ಅರಿವಿರುವವರು ಎಂದಿಗೂ ತಮ್ಮ ಭಾಷೆಯನ್ನು ಸಡಿಲಬಿಡುವುದಾಗಲಿ, ತಾವೇ ಏಕಮೇವಾದ್ವಿತೀಯವೆಂಬಂತೆ ನಿರ್ಣಯ ತೆಗೆದುಕೊಂಡಂತೆ ಮಾತಾನಾಡುವುದಾಗಲಿ ಮಾಡುವುದಿಲ್ಲ. ನಿಂದನೆಯಂತೂ ದೂರದ ಮಾತು. ಉದಹರಿಸುವುದಾದರೆ, ಎಡಪಂಥ ಮತ್ತು ಬಲಪಂಥದವರು ಯಾವುದೋ ವಿಚಾರದ ಮೇಲೆ ಚರ್ಚೆ ಮಾಡುತ್ತಿದ್ದಾರೆಂದಿಟ್ಟುಕೊಳ್ಳಿ. ಯಾವ ಪಂಥದವರೂ ಅಲ್ಲದ ಬಹುದೊಡ್ಡ ಸಮೂಹವೊಂದು ಅದನ್ನು ನೋಡುತ್ತಿದೆ ಎಂದಿಟ್ಟುಕೊಳ್ಳಿ. ಇಬ್ಬರೂ ಬಳಸುವ ಭಾಷೆಗಳಲ್ಲಿ ಯಾರದು ಮುತ್ತಿನ ಹಾರದಂತೆ ತಾರ್ಕಿಕವಾಗಿ ಪೋಣಿಸಿಕೊಂಡು ಆಕರ್ಷಕವಾಗಿರುತ್ತದೋ, ಮಾಣಿಕ್ಯದ ದೀಪ್ತಿಯಂತೆ ಪ್ರಜ್ಞೆಯ ಬೆಳಕನ್ನು ಕೊಡುವುದೋ, ಸ್ಫಟಿಕದ ಸಲಾಕೆಯಂತೆ ವಿಷಯ ಸ್ಪಷ್ಟವಾಗಿ ಮತ್ತು ನೇರವಾಗಿರುತ್ತದೋ ಆಗ ಅಹುದಹುದು ಎಂದು ಒಪ್ಪಲಾಗುತ್ತದೆ.
ಅಲ್ಲಿ ಯಾರು ಘನತೆಯನ್ನು ಪ್ರದರ್ಶಿಸುತ್ತಾರೋ ಅವರ ಮಾತು ಘನವಾಗಿರುತ್ತದೆ. ತನ್ನತನದ ಘನತೆಯನ್ನು ಅರಿತವರು ಲಘುವಾದ ಭಾಷೆಗಳಿಂದ ಎದುರಾಳಿಯ ನಿಂದನೆಗಳನ್ನು ಮಾಡುತ್ತಾ ತನ್ನತನದ ಮೌಲ್ಯವನ್ನು, ತನ್ನತನವೆಂಬುದು ಬೆಂಬಲಿಸುವ ಮತ್ತು ಪೋಷಿಸುವ ವಿಷಯದ ಗೌರವವನ್ನು ಕಡೆಗಣಿಸುವುದಿಲ್ಲ.
ಬಹಳ ಎಚ್ಚರಿಕೆಯಿಂದ, ವಿವೇಕ ಮತ್ತು ವಿವೇಚನೆಗಳಿಂದ ಭಾಷೆಯನ್ನು ಬಳಸಲಾಗುತ್ತದೆ. ಏಕೆಂದರೆ ಅವರಿಗೆ ಸ್ಪಷ್ಟವಾಗಿ ಗೊತ್ತಿರುತ್ತದೆ ತಾವು ಗೌರವಿಸುವ ಮೌಲ್ಯವು, ಅವುಗಳಿಂದ ರೂಪುಗೊಂಡಿರುವ ತಮ್ಮತನವು ಅಮೂರ್ತವಾದದ್ದು. ಹಾಗೂ ಅದನ್ನು ಪ್ರಕಟಿಸುವ ಮೂರ್ತಸ್ವರೂಪವೆಂದರೆ ಭಾಷೆ. ವ್ಯಕ್ತಿಯು ಉಪಯೋಗಿಸುವ ಭಾಷೆ ಮತ್ತು ಪರಿಭಾಷೆಗಳ ಆಧಾರದಲ್ಲಿ ಆತನು ತನ್ನತನವನ್ನು ಅದೆಷ್ಟರಮಟ್ಟಿಗೆ ಪ್ರದರ್ಶಿಸುತ್ತಾನೆ, ಗೌರವಿಸಿಕೊಳ್ಳುತ್ತಾನೆ ಎಂಬುದು ನಿರ್ಣಯವಾಗುತ್ತದೆ.
ಬಹಳಷ್ಟು ಸಲ ಹೊಟ್ಟನ್ನು ತೂರುವುದೇ ಆಗಿರುತ್ತದೆ. ಕಾಳನ್ನು ಎರಚುವುದಾಗಿರುವುದೇ ಇಲ್ಲ. ವಿವೇಕಿಯು ಬೀಜಗಳನ್ನು ಅಥವಾ ಕಾಳುಗಳನ್ನು ಎರಚಬೇಕು. ಏಕೆಂದರೆ ಅವು ಮೊಳೆತಾವು, ಬೆಳೆದಾವು, ಮುಂದೊಂದು ದಿನ ಬೆಳೆ ಕೊಟ್ಟಾವು. ತನ್ನತನದ ಸತ್ಯವೆಂಬುದು ಕೂರಲಗಾಗಿದ್ದರೂ ಅದರಿಂದ ತೊಂದರೆ, ನಷ್ಟವಾಗಬಹುದೆಂಬ ಭಯವಿಲ್ಲದೇ ಅದನ್ನು ಹಿಡಿದಿರುವುದೇ ತನ್ನ ಗೆಲುವು ಎಂದು ತನ್ನತನದ ಪ್ರಜ್ಞೆಯುಳ್ಳವರು ಅರಿತಿರುತ್ತಾರೆ. ಅವರಿಗೆ ಸೋಲಿನ ಭಯವೋ ಆತಂಕವೋ ಇರುವುದಿಲ್ಲ. ತನ್ನ ದೌರ್ಬಲ್ಯಗಳ ಪ್ರದರ್ಶನವಾಗುವುದು ಅವರಿಗೆ ಬೇಕಿಲ್ಲ.
ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ ಕೇಳಿರಯ್ಯಾ,
ಎರಡಾಳಿನ ಭಾಷೆಯ ಕೊಲುವೆನೆಂಬ ಭಾಷೆ ದೇವನದು
ಗೆಲುವೆನೆಂಬ ಭಾಷೆ ಭಕ್ತನದು
ಸತ್ಯವೆಂಬ ಕೂರಲಗನೆ ಹಿಡಿದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವಾ.
ಒಟ್ಟಾರೆ ತನ್ನತನವ ಅರಿತವನ ಭಾಷೆ ಕೊಲುವೆನೆಂಬುದಾಗಿರುವುದಿಲ್ಲ. ಬದಲಿಗೆ ಗೆಲುವೆನೆಂದಾಗಿರುತ್ತದೆ. ಈ ಗೆಲುವೆಂಬುದು ಸವಾಲಿಗೆ ಸವಾಲೊಡ್ಡುವುದಲ್ಲ. ತನ್ನತನವನ್ನು ಕಳೆದುಕೊಳ್ಳುವ ಸೋಲನ್ನುಣ್ಣದಿರುವುದು. ಏಕೆಂದರೆ, “ನುಡಿಯೊಳಗಾಗಿ ನಡೆಯದಿದ್ದರೆ” ತಮ್ಮ ಆತ್ಮಸಾಕ್ಷಿಯು ಒಲಿಯುವುದಿಲ್ಲ ಎಂಬ ಅರಿವು ಅವರಿಗಿರುತ್ತದೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ18 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ21 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ22 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ18 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

