Connect with us

ದಿನದ ಸುದ್ದಿ

ನನಸಾಗುವುದೇ ಬಾಪೂಜಿ ಕಂಡ ಗ್ರಾಮೀಣಾಭಿವೃದ್ಧಿಯ ಕನಸು..?

Published

on

  • ಕುಮಾರಸ್ವಾಮಿ.ವಿ.ಕೆ

ಭಾರತ ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳು ನಮ್ಮ ದೇಶದ ಹೃದಯವಿದ್ದಂತೆ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಸುಮಾರು 70% ಮಂದಿ ಇಂದು ಗ್ರಾಮೀಣ ಭಾಗಗಳಲ್ಲಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಹಳ್ಳಿ ಮಂದಿಯ ಸಂಸ್ಕøತಿ, ಆಚಾರ – ವಿಚಾರಗಳು ವಿಶಿಷ್ಟ, ಆಹಾರ, ವಿಹಾರ, ಉಡುಗೆ-ತಿಡುಗೆ ಹೀಗೆ ಎಲ್ಲವೂ ವಿಭಿನ್ನ. ಪ್ರಸ್ತುತ ಜಗತ್ತನ್ನ ಮೊದಲುಗೊಂಡು ನಮ್ಮ ಹಿಂದೂಸ್ಥಾನವನ್ನೂ ಕಿತ್ತು ತಿನ್ನುತ್ತಿರುವ ವಿಷಕ್ರಿಮಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇಂದು ನಿಜಕ್ಕೂ ಹಳ್ಳಿಗರ ಸಂಘಟನಾತ್ಮಕ ವರ್ತನೆ ಶ್ಲಾಘನೀಯ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಇಂದು ಅತೀ ಹೆಚ್ಚು ಇಕ್ಕಟ್ಟಿಗೆ ಸಿಲುಕುತ್ತಿರುವುದು ನಗರ ವಾಸಿಗಳೇ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಸಂಬಂಧವಾಗಿ ನಗರ ವಾಸಿಗಳಲ್ಲಿಲ್ಲದ ಬುದ್ಧಿಮತ್ತೆ, ಪ್ರಜ್ಞೆ, ಕಾಲಕ್ಕೆ ತಕ್ಕಂತ ಜ್ಞಾನ ನಮ್ಮ ಹಳ್ಳಿಗರಲ್ಲಿದ್ದು, ಇದು ನಿಜಕ್ಕೂ ಮೆಚ್ಚುವಂತದ್ದು. ಒಂದೆಡೆ ಕೊರೋನಾಕ್ಕಿಂತ ಕೆಲವು ವಿದ್ಯಾವಂತ ಮೂರ್ಖರೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದರೆ, ಮತ್ತೊಂದೆಡೆ ನಮ್ಮ ಹಳ್ಳಿಗರು ನಿರುಮ್ಮಳವಾಗಿ ಮತ್ತು ಯಶಸ್ವಿಯಾಗಿ ಜೀವನದ ರಥ ಎಳೆಯುತ್ತಿದ್ದಾರೆ.

ಜೊತೆ ಜೊತೆಗೇ ಇಡೀ ದೇಶವನ್ನೇ ಪೋಷಿಸಲು ಸಜ್ಜಾಗುತ್ತಿದ್ದಾರೆ. ಇಂದು ಇತರ ಅಗತ್ಯಗಳಿಗಿಂತ ಹೆಚ್ಚಾಗಿ ಜೀವ ಉಳಿಸಿಕೊಳ್ಳಲು ಅಗತ್ಯವಾದ ಮೂರು ಹೊತ್ತಿನ ಊಟ ನಮ್ಮೆಲ್ಲರಿಗೂ ಸಮರ್ಪಕವಾಗಿ ಸಿಗುತ್ತಿದೆಯೆಂದರೆ ಅದಕ್ಕೆ ಕಾರಣಕರ್ತರಾದ ನಮ್ಮೆಲ್ಲರ ಅನ್ನದಾತನನ್ನು ಮರೆಯುವಂತಿಲ್ಲ.

ಹೆಚ್ಚುತ್ತಿದೆ ಗ್ರಾಮೀಣ ವಲಸೆ

ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸಾಗುತ್ತಿದ್ದ ಬಹುತೇಕ ನಗರ ವಾಸಿಗಳ ಇಂದಿನ ಆದ್ಯತೆ ಪ್ರಾಣ ಭಿಕ್ಷೆಯಷ್ಟೇ ಆಗಿದೆ. ಲೋಕದ ಅರಿವೇ ಇಲ್ಲದಂತೆ ಸ್ವಾರ್ಥಕ್ಕಾಗಿಯೇ ಬದುಕುತ್ತಿದ್ದ ಗರಿಷ್ಠ ಮಂದಿ ಇಂದು ಕಂಗಾಲಾಗಿ ಹೋಗಿ, ಪ್ರಾಣ ಉಳಿಸಿಕೊಳ್ಳಲು ಹಳ್ಳಿಗಳತ್ತ ಮುಖ ಮಾಡಿದ್ದಾರೆ.

ಸಾಫ್ಟ್‍ವೇರ್, ಹಾರ್ಡ್‍ವೇರ್‍ಗಳ ಜಂಜಾಟಗಳ ನಡುವೆ ಬೀಗುತ್ತಿದ್ದ ಮಂದಿ ಇಂದು ರೂರಲ್ ವೇರ್ ಆಗಿ ಬದಲಾಗುತ್ತಿದ್ದಾರೆ. ಕಂಪ್ಯೂಟರ್, ಲ್ಯಾಪ್‍ಟಾಪ್, ಟ್ಯಾಬ್‍ಗಳ ಮೇಲೆ ಬೆರಳಾಡಿಸುತ್ತಿದ್ದವರೆಲ್ಲಾ ಈಗ ಗುದ್ದಲಿ, ಹಾರೆ, ಬಾಂಡಲಿಗಳನ್ನು ಹಿಡಯುವ ಕಾಲ ಬಂದಿದೆ.

ನಾವೆಷ್ಟೇ ಮುಂದುವರಿದರೂ ಅನ್ನವನ್ನು ಕಂಪ್ಯೂಟರ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ತಿನ್ನಲು ಸಾಧ್ಯವಿಲ್ಲವೆಂಬ ಕಟುಸತ್ಯದ ಅರಿವಿನ ದರ್ಶನ ಇಂದು ಆಗುತ್ತಿದೆ. ಆದರೆ ಇವರಲ್ಲಿನ ಸಕಾರಾತ್ಮಕ ಬದಲಾವಣೆ ಹೀಗೆಯೇ ಇದ್ದರೆ ಒಳಿತು, ಇಲ್ಲದಿದ್ದರೆ ಹಳ್ಳಿ-ದಿಲ್ಲಿಯ ವ್ಯತ್ಯಾಸವಿಲ್ಲದೆ ಎಲ್ಲವನ್ನೂ ಅತಂತ್ರ ಮಾಡಿಯಾರು ಎಂಬ ಅನುಮಾನ ನಮ್ಮನ್ನು ಕಾಡಲು ಶುರುವಿಟ್ಟಿಕೊಳ್ಳುತ್ತದೆ.

ಕ್ಷೀಣಿಸುತ್ತಿದೆ ತಾತ್ಸಾರ ಮನೋಭಾವ

ಒಂದೆಡೆ ಬೆಳ್ಳಂಬೆಳಗ್ಗೆಯೇ ಎಲ್ಲೆಂದರಲ್ಲಿ ಗೋಬಿ ಮಂಚೂರಿ, ಪಾನಿಪೂರಿ ತಿನ್ನುವ ಮಂದಿ, ಮಾಲ್, ಪಬ್, ಸಿನಿಮಾ ಮಂದಿರಗಳು, ಬಾರ್‍ಗಳ ಮುಂದೆ ಕ್ಯೂ ನಿಲ್ಲುತ್ತಿದ್ದವರ ಗುಂಪು, ಎದುರಿಗೆ ಬಂದವರನ್ನೂ ನೋಡದೆ ಗುದ್ದುಕೊಂಡೇ ಕರ್ತವ್ಯಕ್ಕೆ ಹೊರಟ ಜನರ ಹಿಂಡು, ಎಲ್ಲಕ್ಕೂ ತಾ ಮುಂದು, ನಾ ಮುಂದು ಎಂದು ದುಂಬಾಲು ಬೀಳುತ್ತಿದ್ದ ಸಮುದಾಯ ಇವುಗಳಷ್ಟೇ ನಗರ ವಾಸಿಗಳ ಪ್ರತಿನಿತ್ಯ ಜೀವನದ ಕಥೆಯಾಗಿತ್ತು.

ಇನ್ನೊಂದೆಡೆ ಮನೆಯ ಮುಂದೆ ಸಗಣಿ ನೀರಿನಿಂದ ಸಾರಿಸಿ, ರಂಗವಲ್ಲಿ ಹಾಕಿ, ರೊಟ್ಟಿ, ಮುದ್ದೆ ಹೀಗೆ ಗಟ್ಟಿ ಆಹಾರ ಸೇವಿಸಿ, ನೆರೆ ಮನೆಯವರ ಉಭಯಕುಶಲೋಪರಿಯನ್ನು ವಿಚಾರಿಸಿ, ತಂತಮ್ಮ ಕೆಲಸಗಳಲ್ಲಿ ತೊಡಗುತ್ತಿದ್ದವರು ನಮ್ಮ ಹಳ್ಳಿ ಮಂದಿ. ಈ ಮೊದಲು ಸಿಟಿ ವಾಸಿಗಳಿಗೆ ಹಳ್ಳಿಗಳೆಂದರೆ, ಹಳ್ಳಿಗರ ಜೀವನ ಶೈಲಿ ಎಂದರೆ ಅದೇನೋ ಅಹಂಕಾರ ಮತ್ತು ತಾತ್ಸಾರ ಮನೋಭಾವವೇ ಹೆಚ್ಚು.

ಆದರೀಗ ಬದಲಾದ ಜಾಯಮಾನದಲ್ಲಿ ಎಲ್ಲವೂ ವೈಪರಿತ್ಯವಾಗಿದೆ. ತಮ್ಮ ಮಕ್ಕಳನ್ನು ರಜಾ ದಿನಗಳಲ್ಲಿ ಅಜ್ಜ-ಅಜ್ಜಿಯಂದಿರ ಮನೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದ ಕೆಲವು ಮಂದಿ ಇಂದು ಊರು ಬಿಟ್ಟು ಹೋಗಿ ಎಂದು ಹೇಳುವ ಪರಿಸ್ಥಿತಿ ನಿರ್ಮಿಸಿಕೊಂಡಿದ್ದಾರೆ. ಆದರೆ ನಮ್ಮ ಉದಾರಿ ರೈತ ಬಾಂಧವರು ಯಾವುದೇ ಫಲಾಪೇಕ್ಷೆ ಇಲ್ಲದೆ ಎಲ್ಲರನ್ನೂ ಸಂಭಾಳಿಸುತ್ತದ್ದಾರೆ. ಇದಕ್ಕೇ ಹೇಳುವುದು ‘ಕಾಲಾಯ ತಸ್ಮೈ ನಮಃ’ ಎಂದು.

ಬಲಿಷ್ಠವಾಗಬೇಕಿದೆ ಹಳ್ಳಿಗಳು

ಸ್ವಾತಂತ್ರ್ಯ ನಂತರದ ದಶಕಗಳಲ್ಲೂ ಹಳ್ಳಿಗಳಲ್ಲಿ ಕಾಡುತ್ತಿರುವ ಅತೀ ದೊಡ್ಡ ಸಮಸ್ಯೆ ಎಂದರೆ ಮೂಲಭೂತ ಸೌಕರ್ಯಗಳ ಕೊರತೆ. ನಾವೆಲ್ಲಾ ಚಂದ್ರಯಾನದಂತಹ ಹೆಮ್ಮೆಯ ಗಗನಯಾನವನ್ನು ಕೈಗೊಳ್ಳುವಷ್ಟು ಸಮರ್ಥರಿದ್ದರೂ ಇಂತಹ ಚಿಕ್ಕ ಚಿಕ್ಕ ಸಮಸ್ಯೆಗಳನ್ನು ಬದಿಗಿಡುತ್ತಲೇ ಸಾಗುತ್ತಿರುವುದು ನೋವಿನ ಸಂಗತಿ. ಆದರೆ ಅದೇ ಹಳ್ಳಿಗಳು ಮುಂದೊಂದು ದಿನ ಸಕಲ ಸೌಕರ್ಯಗಳುಳ್ಳ ಸ್ಥಳಗಳಾಗಿ ಮಾರ್ಪಡುವ ಕಾಲ ಸನ್ನಿಹಿತವಾಗುತ್ತಿದೆ.

ಆದರೆ ಇದಕ್ಕೆ ಕೇವಲ ಸರ್ಕಾರದ ಸವಲತ್ತುಗಳನ್ನೇ ಕಾಯದೇ ಅಬೇಧವಾಗಿ ಎಲ್ಲರೂ ಕೈ ಜೋಡಿಸಬೇಕಿದೆ. ಒಂದರ್ಥದಲ್ಲಿ ಇಷ್ಟು ವರ್ಷಗಳ ಕಾಲ ನಮಗೆ ಅನ್ನ ಹಾಕಿ ಶುಶ್ರೂಷೆ ಮಾಡುತ್ತಿದ್ದ ಹಳ್ಳಿಗರಿಗಿಂದು ನಗರ ವಾಸಿಗಳು ಹೊರೆಯಾಗುತ್ತಿದ್ದಾರೆ. ಆದರೆ ಹಳ್ಳಿಗರ ಔದಾರ್ಯದ ಮುಂದೆ ಇದೆಲ್ಲಾ ಮಂಕಾಗುತ್ತಿದೆ.

ಪ್ರಾಯಶಃ ಇಂದು ‘ಜೈ ಕಿಸಾನ್’ ಎಂಬ ಘೋಷವಾಕ್ಯ ಪ್ರತಿಧ್ವನಿಸುತ್ತಿದೆ. ಅದೇನೆ ಇದ್ದರೂ ಹಳ್ಳಿಗಳಿಂದು ಎಲ್ಲ ಕೊರತೆಗಳಿಂದ ಮುಕ್ತವಾಗಬೇಕಿದೆ. ಆರೋಗ್ಯ, ತಂತ್ರಜ್ಞಾನ, ಜಲ ಸಂರಕ್ಷಣೆ, ಶಿಕ್ಷಣ, ರಸ್ತೆಗಳ ನಿರ್ಮಾಣ, ಹೀಗೆ ಹತ್ತು ಹಲವು ಯೋಜನೆಗಳು ಇಂದು ಜಾರಿಯಲ್ಲಿದ್ದರೂ ಯಾವುಗಳು ಪೂರ್ಣ ಪ್ರಮಾಣದಲ್ಲಿ ಫಲಕಾರಿಯಾಗಿಲ್ಲ ಎಂಬುದನ್ನು ಈಗಲಾದರೂ ಮನಗಾಣಬೇಕಿದೆ.

ಬದಲಾದೀತೇ ಕ್ರೂರ ಮನಸ್ಥಿತಿ?

ನಗರಗಳೆಂದರೆ ಹಾಗೆ, ಪ್ರತಿ ಕ್ಷಣವೂ ಟೆನ್ಷನ್, ಭಯ ನಿರ್ಮಿತ ವಾತಾವರಣ, ಕೊಲೆ, ಸುಲಿಗೆ, ದರೋಡೆ, ಸಣ್ಣ ಸಣ್ಣ ವಿಚಾರಗಳಿಗೆಲ್ಲಾ ಗಲಭೆ, ಗಲಾಟೆ, ಮಾಲಿನ್ಯ, ಅನಾರೋಗ್ಯ. ಒಂದರ್ಥದಲ್ಲಿ ‘ಎಲ್ಲ ಇದ್ದು ಏನೂ ಇರದ ಹಾಗೆ’ ಬದುಕು ಸಾಗಿಸುವ ಅನಿವಾರ್ಯತೆ ಅಲ್ಲಿತ್ತು. ಆದರೆ ನಮ್ಮ ಹಳ್ಳಿಗರ ಪರಿಸ್ಥಿತಿ ಹೇಗಿತ್ತೆಂದರೆ ‘ಏನೂ ಇರದಿದ್ದರೂ ಎಲ್ಲ ಇದೆ’ ಎಂದು ಬದುಕುವ ರೀತಿಯಲ್ಲಿತ್ತು.

ಹೀಗೆ ಸದಾ ಆತಂಕದಲ್ಲೇ ಕಾಲ ಕಳೆಯುತ್ತಿದ್ದ ಜನ ಇಂದು ಹಳ್ಳಿಗಳನ್ನು ಸೇರಿ ಒಂದಷ್ಟು ಸಮಾಧಾನಿಸುತ್ತಿದ್ದಾರೆ. ಇದು ಅವರ ಮೂಲಭೂತ ವರ್ತನೆಯಲ್ಲಿ ಬಹುತೇಕ ಬದಲಾವಣೆ ತರುವ ಕಾಲವೂ ಆಗಿದೆ. ಶಾಂತಪ್ರಿಯ ಭಾರತದಲ್ಲಿ ಇವೆಲ್ಲವೂ ಸದ್ದಿಲ್ಲದೆ ನಡೆಯುತ್ತಿತ್ತು ಎಂಬುದನ್ನು ನಾವು ನಂಬಲೇಬೇಕಿದೆ. ಆದರೆ ಈಗ ಸರಳ ಜೀವನದ ಪಾಠ ಕಲಿಸುತ್ತಿರುವ ನಿರಕ್ಷಕರಕುಕ್ಷಿಗಳಿಗೆ ನಾವೊಂದು ಸಲಾಮ್ ಸಲ್ಲಿಸೋಣ.

ಹೆಚ್ಚಳವಾಗಲಿದೆ ನಿರೀಕ್ಷಿತ ಜೀವಿತಾವಧಿ

ನಗರವಾಸಿಗಳಲ್ಲಿ ಸದಾಕಾಲ ಅತೀವ ಅನಾರೋಗ್ಯ ಪೀಡಿತರ ಸಂಖ್ಯೆಯೇ ಹೆಚ್ಚು. ಅಲ್ಲಿನ ಮಾಲಿನ್ಯ, ಜನಜಂಗುಳಿ, ಕ್ರೌರ್ಯ, ಅವರ ಆಹಾರ ಪದ್ಧತಿಗಳು ವಿಚಿತ್ರ ಹಾಗೂ ಅನಾರೋಗ್ಯಕರವಾಗಿವೆ. ಹೀಗಾಗಿ ಬಹುತೇಕ ನಗರ ವಾಸಿಗಳ ನಿರೀಕ್ಷಿತ ಜೀವಿತಾವಧಿ (ಆಯಸ್ಸು) ಕಡಿಮೆಯೇ ಇತ್ತೆಂಬುದು ಆಶ್ಚರ್ಯವೇನಲ್ಲ.

ಬದಲಾದ ಇಂದಿನ ಸನ್ನಿವೇಶದಲ್ಲಿ ನಮ್ಮ ದೇಶವಾಸಿಗಳ ಆಯಸ್ಸು ಹೆಚ್ಚಾಗುವ ನಿರೀಕ್ಷೆಯಿದೆ. ಇದಕ್ಕೆಲ್ಲಾ ಕಾರಣಕರ್ತರಾಗುತ್ತಿರುವ ನಮ್ಮ ಹಳ್ಳಿಗರನ್ನ ನಾವು ಮತ್ತೊಮ್ಮೆ ಗೌರವಿಸದೆ ಇರಬಾರದು. ಜೀವನವನ್ನಷ್ಟೇ ಅಲ್ಲ ಜೀವವನ್ನೂ ವೃದ್ಧಿಸುತ್ತಿರುವುದು ಇಂದು ನಮ್ಮ ಹಳ್ಳಿಗರೆ. ಆದರೆ ಇದಕ್ಕೆ ಪೂರಕವಾದ ಸನ್ನಿವೇಶಗಳು ಗ್ರಾಮೀಣ ಭಾಗದಲ್ಲಿ ಮತ್ತಷ್ಟು ದೊರಕುವ ಅನಿವಾರ್ಯತೆ ಮತ್ತು ಅಗತ್ಯತೆ ಇಂದಿದೆ.

ಕೃಷಿಗೆ ದೊರಬೇಕಿದೆ ಮತ್ತಷ್ಟು ಆದ್ಯತೆ

ಪ್ರಾಥಮಿಕ, ದ್ವಿತೀಯ ಹಾಗೂ ತೃತೀಯ ವಲಯಗಳ ಪೈಕಿ ಈ ಮೊದಲು ನಮ್ಮ ರಾಷ್ಟ್ರೀಯ ಆದಾಯದ ಸಿಂಹಪಾಲು ಕೃಷಿಯದ್ದೇ ಆಗಿತ್ತು. ಆದರೆ ಜಾಗತೀಕರಣ, ಖಾಸಗೀಕರಣ ಮತ್ತು ಉದಾರಿಕರಣಗಳ ಫಲವಾಗಿ ಇತ್ತೀಚೆಗೆ ಕೃಷಿ ವಲಯ ನಿರ್ಲಕ್ಷಕ್ಕೆ ಒಳಪಟ್ಟಿರುವುದು ಬೇಸರ ಹಾಗೂ ಆತಂಕಕಾರಿ ಸಂಗತಿಯಾಗಿದೆ.

ಇಂದಿನ ಪರಿಸ್ಥಿತಿಯಲ್ಲಿ ಅನ್ನ ತಿಂದು ಜೀವ ಉಳಿಸಿಕೊಳ್ಳಲು ಸಾಧ್ಯವೇ ಹೊರತು, ಬೇರೇನೂ ಅಲ್ಲ ಎಂಬಂತಾಗಿದೆ. ಮತ್ತೊಮ್ಮೆ ನಮ್ಮ ಅನ್ನದಾತನಿಗೆ ಬೆಲೆ ಬರುತ್ತಿದೆ. ಆದರೆ ಅನ್ನದಾತನತ್ತ ನಮ್ಮ ಸರ್ಕಾರಳ ಚಿತ್ತ ಬೀಳಬೇಕಿದೆ. ಇತರ ವಲಯಗಳಂತೆಯೇ ಕೃಷಿಯನ್ನೂ ಅಭಿವೃದ್ಧಿಪಡಿಸಬೇಕಿದೆ. ಇಲ್ಲವಾದಲ್ಲಿ ಕೊರೋನಾ ವಿಷ ಕ್ರಿಮಿಯ ಲಗ್ಗೆ ಹೀಗೆಯೇ ಹೆಚ್ಚಾಗುತ್ತಿದ್ದರೆ, ಮುಂದೊಂದು ದಿನ ತಿನ್ನಲು ಅನ್ನವೂ ಇಲ್ಲದಂತಾಗಿ, ಗೆಡ್ಡೆ, ಗೆಣಸುಗಳನ್ನು ತಿಂದು ಆದಿ ಮಾನವರಂತೆ ಬದುಕುವ ಕಾಲ ಬಂದರೂ ಆಶ್ಚರ್ಯವೇನಿಲ್ಲ!

ನನಸಾಗುವುದೇ ಬಾಪೂಜಿ ಕನಸು?

“ಹಳ್ಳಿಗಳ ಉದ್ದಾರದಿಂದಲೇ ದೇಶದ ಉದ್ದಾರ” ಎಂಬ ಮಾತನ್ನು ನಮ್ಮ ರಾಷ್ಟ್ರಪಿತ ಗಾಂಧೀಜಿಯವರು ಸುಮಾರು ವರ್ಷಗಳ ಹಿಂದೆಯೇ ನುಡಿದಿದ್ದಾರೆ. ಮದ್ಯಪಾನಮುಕ್ತ ಗ್ರಾಮಗಳು, ಗುಡಿ ಕೈಗಾರಿಕೆಗಳಿಗೆ ಆದ್ಯತೆ, ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ, ಸ್ವದೇಶಿ ವಸ್ತುಗಳ ಬಳಕೆ, ಅಧಿಕಾರ ವಿಕೇಂದ್ರಿಕರಣದ ಮೂಲಸ್ಥಾನ ಹೀಗೆ ಗ್ರಾಮೀಣಾಭಿವೃದ್ಧಿಯ ಬಗ್ಗೆ ಬಾಪೂಜಿ ಅಂದೇ ದೊಡ್ಡ ದೊಡ್ಡ ಕನಸುಗಳನ್ನು ಕಂಡಿದ್ದರು.

ಇಂದಿನ ಪರಿಸ್ಥಿತಿ ನೋಡಿದರೆ ಆ ಕಾಲ ಬಹುಬೇಗ ಬರುವುದೇ? ಎಂದು ಕಾದು ನೋಡಬೇಕಿದೆ. ಹಾಗೆ ನೋಡಿದರೆ ಇಂದು ನಿಜಕ್ಕೂ ನಗರಳಲ್ಲಿನ ದ್ವಿತೀಯ ಹಾಗೂ ತೃತೀಯ ವಲಯಗಳ ಬಹುತೇಕ ಚಟುವಟಕೆಗಳಲ್ಲಿ ಕೃಷಿಯ ಸಹಕಾರವೇ ಹೆಚ್ಚು. ಈ ಹಿನ್ನೆಲೆಯಲ್ಲಿ ನಮ್ಮ ಗ್ರಾಮೀಣ ಭಾಗಗಳನ್ನು ಮುನ್ನೆಲೆಗೆ ತರುವಂತಹ ಕ್ರಮಗಳು ಇಂದು ಅಪೇಕ್ಷಣಿಯ.

ಕೈಗಾರಿಕೆಗಳ ಮೂಲ ನೆಲೆಯಾದೀತೇ?

ದುಡಿಯುವ ಕೈಗಳಿಗೆ ಉದ್ಯೋಗ ಒದಗಿಸುವಲ್ಲಿ ಕೃಷಿ ಕ್ಷೇತ್ರದ ಸಾಮಥ್ರ್ಯ ಹೆಚ್ಚಿದ್ದರೂ, ವರ್ಷವಿಡೀ ಕೃಷಿಯಲ್ಲಿ ಉದ್ಯೋಗ ಲಭ್ಯತೆ ಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಿರುದ್ಯೋಗಿಗಳಾಗುತ್ತಿದ್ದ ನಮ್ಮ ಗ್ರಾಮೀಣ ಭಾಗದ ಜನರು ನಗರಗಳತ್ತ ವಲಸೆ ಹೋಗುತ್ತಿದ್ದರು. ಆದರೆ ಇಂದು ಅದೇ ವಲಸೆ ಪುನರಾವರ್ತಿತವಾಗುತ್ತಿದೆ.

ಇಂತಹ ಕೃಷಿ ಕಾರ್ಮಿಕತನ್ನು ಒಂದೆಡೆ ಸಂಘಟಿಸಿ ಇಂದು ಅವರಿಗೆ ಸರಿ ಹೊಂದುವ ಉದ್ಯೋಗ ಸೃಷ್ಟಿಗೆ ಸರ್ಕಾರಗಳು ಮುಂದಾಗಬೇಕಿದೆ. ತಾವಿರುವ ಸ್ಥಳಗಳಲ್ಲಿಯೇ ಸಾಧ್ಯವಿರುವ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಿದರೆ ನಿರುದ್ಯೋಗ ಸಮಸ್ಯೆಯ ನಿವಾರಣೆ ಜೊತೆಗೆ ದೇಶದ ಆರ್ಥಿಕತೆಯೂ ಸಹ ಬಲಿಷ್ಠವಾಗಲಿದೆ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಕೃಷಿ ಪದ್ಧತಿಗೆ ಮತ್ತೊಮ್ಮೆ ಜೀವ ತುಂಬಲು ಸಾಧ್ಯವಿದೆ.

(ಕುಮಾರಸ್ವಾಮಿ.ವಿ.ಕೆ
(ಕುಮಾರ್ ಭಾರದ್ವಾಜ್)
ಹವ್ಯಾಸಿ ಬರಹಗಾರರು, ವಿರುಪಾಪುರ,
ಸುಗ್ಗನಹಳ್ಳಿ ಅಂಚೆ, ತಿಪ್ಪಸಂದ್ರ ಹೋಬಳಿ,
ಮಾಗಡಿ ತಾಲ್ಲೂಕು, ರಾಮನಗರ ಜಿಲ್ಲೆ.
ಮೊಬೈಲ್ : 9113906120, 9740840678)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.

ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending