Connect with us

ಅಂತರಂಗ

ಅರಿಮೆಯ ಅರಿವಿರಲಿ-49 : ತನ್ನತನದ ಪರೀಕ್ಷೆ

Published

on

  • ಯೋಗೇಶ್ ಮಾಸ್ಟರ್

ನ್ನತನದ ಪ್ರತಿಮೆಯು ನಮ್ಮ ವ್ಯಕ್ತಿತ್ವದ ಮೂಲಕ ಪ್ರದರ್ಶನಗೊಳ್ಳುತ್ತದೆ. ಈ ಪ್ರದರ್ಶನವು ಕೆಲವು ಸಲ ಬಯಕೆಯಿಂದಾದರೆ, ಮತ್ತೆ ಕೆಲವು ಸಲ ಸಹಜ ಪ್ರಕಟಣೆಯಾಗಿರುತ್ತದೆ. ಏನಾದರಾಗಲಿ, ತನ್ನತನದ ಪ್ರಜ್ಞೆಯು ನಾನು ಎಂಬ ಭ್ರಮೆಯ ಅಹಂಕಾರಕ್ಕೆ ಜಾರದಿರಲು ಮಾನಸಿಕವಾಗಿ ಕೆಲವು ಚಟುವಟಿಕೆಗಳನ್ನು ಮಾಡಿಕೊಳ್ಳುತ್ತಿರಬೇಕು. ಜೊತೆಗೆ ಕೆಲವು ಅರಿವುಗಳನ್ನು ಜೀವಂತವಾಗಿರಿಸಿಕೊಂಡಿರಬೇಕು.

1. ಮೊದಲನೆಯದಾಗಿ ಯಾರು ಗುರುತಿಸಿದರೂ, ಗುರುತಿಸದಿದ್ದರೂ, ಪರಿಗಣಿಸಿದರೂ, ನಗಣ್ಯ ಮಾಡಿದರೂ ಅದಕ್ಕೆ ಮೌಲ್ಯವಿದೆ ಎಂಬುದರ ಬಗ್ಗೆ ತನ್ನಲ್ಲಿ ಸಮಾಧಾನವಿರಬೇಕು.

2. ತನ್ನ ತನ್ನತನವು ಮತ್ತೊಬ್ಬರ ಆತ್ಮಚಿತ್ರಣ ಅಥವಾ ತಾವು ಇರುವುದು ಹೀಗೆ ಎಂದು ತೋರುವ ಪ್ರದರ್ಶನದೊಂದಿಗೆ ಸ್ಪರ್ಧೆಯನ್ನು ಹೊಂದುವ ಮನೋಭಾವ ಇರಕೂಡದು. ಮತ್ತೊಬ್ಬರ ಅವರತನದೊಂದಿಗೆ ತಮ್ಮತನವನ್ನು ಪೈಪೋಟಿಗಿಡುವುದು ಅತ್ಯಂತ ಬಾಲಿಶವೂ ಮತ್ತು ತನ್ನತನದ ಸಾಕ್ಷಾತ್ಕಾರವಾಗಿಲ್ಲ ಎಂಬುದರ ಸ್ಪಷ್ಟ ಸೂಚನೆಯು. ಹೋಲಿಕೆಗಳು, ತುಲನೆಗಳು ಉಂಟಾಗಬಹುದು.

ಅದರಿಂದ ತಮ್ಮಲ್ಲಿ ಕೆಲವು ಸಲ ಬದಲಾವಣೆಗೆ ಅವಕಾಶವಾಗಬಹುದು.ಉತ್ತಮಗೊಳಿಸಿಕೊಳ್ಳಬಹುದು. ಆದರೆ ಈ ಮನೋಭಾವ ಪ್ರೇರಣೆಯಿಂದ ಆಗುತ್ತದೆಯೇ ಹೊರತು ಸ್ಪರ್ಧೆಯಿಂದಲ್ಲ.
ಪ್ರೇರಣೆಗೊಳ್ಳುವುದಕ್ಕೂ ಮತ್ತು ಪ್ರಚೋದನೆಗೊಂಡು ಸ್ಪರ್ಧೆಗಿಳಿಯುವುದಕ್ಕೂ ವ್ಯತ್ಯಾಸವಿದೆ. ಒಟ್ಟಾರೆ ಸ್ಫೂರ್ತಿ ಮತ್ತು ಸ್ಪರ್ಧೆ ಇವೆರಡರ ವ್ಯತ್ಯಾಸ ತಿಳಿದರೆ ಸಾಕು.

3. ವ್ಯಕ್ತಿಯ ಬೆಳವಣಿಗೆಯ ಹಂತಗಳಲ್ಲಿ ಈ ತನ್ನತನದ ಪ್ರಜ್ಞೆಯು ಪೊರೆ ಕಳಚಿಕೊಂಡು, ಹೊಸಹೊಸ ಸ್ಫೂರ್ತಿಗಳನ್ನು ಬಳಸಿಕೊಂಡು ವಿಕಾಸವಾಗುತ್ತಾ ಬರುತ್ತದೆ. ಈ ವಿಕಾಸದ ಹಂತವು ವ್ಯಕ್ತಿಯು ಜೀವಂತವಾಗಿರುವವರೆಗೂ ಪ್ರಕ್ರಿಯೆಯಲ್ಲಿಯೇ ಇರಬಹುದು. ಆದರೆ ಯೌವನದಿಂದ ವಯಸ್ಕನಾಗುವ ಹೊತ್ತಿಗೆ ಒಂದು ಹಂತಕ್ಕೆ ನಿಗದಿತವಾಗಿರುತ್ತದೆ. ಗಟ್ಟಿಗೊಂಡಿರುತ್ತದೆ. ಪೆಡಸುತನವಲ್ಲದಿದ್ದರೂ ಬಲವಾಗಿರುತ್ತದ್ದೆ. ಎಳಸುತನವನ್ನು ದಾಟಿ ಪ್ರಬುದ್ಧವಾಗಿರುತ್ತದೆ. ದೃಢವಾಗಿದ್ದರೂ ಕೂಡಾ ಸಲಿಲತೆಯನ್ನು (ಫ್ಲೆಕ್ಸಿಬಲಿಟಿ) ಹೊಂದಿರುತ್ತದೆ.

4. ತನ್ನತನವು ರೂಪುಗೊಳ್ಳುವುದು ಅನುಭವ, ಗಮನಿಸುವಿಕೆ ಮತ್ತು ಗ್ರಹಿಕೆಗಳಿಂದಾಗಿ. ಆದ್ದರಿಂದ ತಾನು ಪಡೆಯುವ ಅನುಭವದ ಬಗ್ಗೆ, ಅದನ್ನು ಗಮನಿಸುವ ತನ್ನ ದೃಷ್ಟಿಯ ಬಗ್ಗೆ, ಗ್ರಹಿಸುವ ರೀತಿಯ ಬಗ್ಗೆ ಪ್ರಜ್ಞಾಪೂರ್ವಕವಾಗಿ ಸಾಕ್ಷೀಕರಿಸುತ್ತಿರಬೇಕು. ಸರಳವಾಗಿ ಹೇಳುವುದಾದರೆ ತನ್ನ ತಾನು ನೋಡಿಕೊಳ್ಳುವ ಚಟುವಟಿಕೆಯನ್ನು ಎಂದಿಗೂ ನಿಲ್ಲಿಸಬಾರದು.

5. ತನ್ನತನವು ಜೀವಂತವಾಗಿದೆಯೇ ಇಲ್ಲವೇ ಎಂದು ನೋಡಿಕೊಳ್ಳಲು ತಮ್ಮ ಆಲೋಚನೆ, ವರ್ತನೆ, ಪ್ರತಿಕ್ರಿಯೆ ಮತ್ತು ನಡವಳಿಕೆಗಳ ಮೌಲ್ಯಮಾಪನ ಮಾಡಿಕೊಳ್ಳುತ್ತಿರಬೇಕು. ಕೆಲವೊಮ್ಮೆ ಉಳಿಕೆಯ (ಸರ್ವೈವ್) ಪ್ರಶ್ನೆಯಿಂದಾಗಿ, ಕೆಲವು ಸಾಮಾಜಿಕ ಮತ್ತು ರಾಜಕೀಯ ಒತ್ತಡಗಳಿಂದಾಗಿ ತತ್ಕಾಲಕ್ಕೆ ತನ್ನತನವನ್ನು ಮರೆಯುವಂತಾಗಿ ಆ ಹೊತ್ತಿನ ವ್ಯವಸ್ಥೆಯ ಭಾಗವಾಗುವ ಅನಿವಾರ್ಯತೆ ಒದಗಿಬಿಡುತ್ತದೆ.

ಆದರೆ, ಅಂತಹ ಸಂದರ್ಭದಲ್ಲಿಯೂ ತಾನು ತನ್ನತನದ ಸ್ವರೂಪ ಮತ್ತು ಸ್ವಭಾವಕ್ಕೆ ವಿರುದ್ಧವಾಗಿ ಅಥವಾ ವ್ಯತಿರಿಕ್ತವಾಗಿ ಹೋಗುತ್ತಿದ್ದೇನೆ ಎಂಬ ಅರಿವು, ಸಂಕೋಚ, ಅಳುಕು ಇರಬೇಕು. ಒಂದು ವೇಳೆ ಆ ಹೊತ್ತಿಗೆ ಇರದಿದ್ದರೂ ನಂತರವಾದರೂ ನೆನಪಿಗೆ ಬಂದು ಸಂಕೋಚ, ಅಳುಕು, ಬೇಸರ ಉಂಟಾಗಬೇಕು. ಈ ನಾಚಿಕೆ ಮತ್ತು ಬೇಸರವು ಮತ್ತೆ ಸಾಯಲಿರುವ ತನ್ನತನವನ್ನು ಮತ್ತೆ ಉಜ್ಜೀವನಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಯಂ ಮೌಲ್ಯಮಾಪನದ ಚಟುವಟಿಕೆಯು ತನ್ನತನದ ಉಜ್ಜೀವನಕ್ಕೆ ಬಹಳ ಉಪಯುಕ್ತವಾಗಿರುತ್ತದೆ.

6. ತನ್ನತನದ ವ್ಯಕ್ತಿತ್ವವು ಹೇಗಿರುತ್ತದೆ ಮತ್ತು ಇತರ ವ್ಯವಸ್ಥೆಯಲ್ಲಿ ಅಥವಾ ಇತರರ ಸಹವಾಸಗಳಲ್ಲಿ ಇದೇ ವ್ಯಕ್ತಿತ್ವವು ಹೇಗೆ ವರ್ತಿಸುತ್ತದೆ ಎಂಬ ಹೋಲಿಕೆಯನ್ನು ಮಾಡಿಕೊಳ್ಳಬೇಕು. ತನ್ನತನಕ್ಕೆ ಸಲಿಲತೆಯ ಗುಣವೂ ಇರುವುದರಿಂದ ಅದು ಹೊರಗಿನ ಪ್ರಭಾವಕ್ಕೆ ಸುಲಭವಾಗಿ ಒಳಗಾಗುವ ಸಾಧ್ಯತೆಗಳಿರುತ್ತವೆ. ಆದರೆ ಅವು ತನ್ನತನದ ನೈತಿಕ ಮೌಲ್ಯದ ಪರಿಮಿತಿಯಲ್ಲಿ ಇದೆಯೋ ಇಲ್ಲವೋ ಎಂದು ತಕ್ಷಣಕ್ಕೆ ಗೊತ್ತಾಗದಿರಬಹುದು. ಆದರೆ ಪರೀಕ್ಷಿಸಿ ನೋಡಿಕೊಂಡಾಗ ಆಮೇಲಾದರೂ ಗೊತ್ತಾಗುತ್ತದೆ. ಮುಂದಿನ ದಾರಿಯಲ್ಲಿ ಎಚ್ಚರಿಕೆಯಿಂದ ಇದ್ದರಾಯಿತು.

7. ಸಾಮಾಜಿಕ ಜೀವನದಲ್ಲಿ ನಾವೆಂದಿಗೂ ಸರ್ವತಂತ್ರ ಸ್ವತಂತ್ರರಲ್ಲ ಎಂಬ ಅರಿವು ಸದಾ ಜಾಗೃತರಾಗಿರಬೇಕು. ವ್ಯಕ್ತಿಯೊಬ್ಬನ ನೈಸರ್ಗಿಕ ಸ್ವರೂಪವು, ಸ್ವಭಾವವು ಮತ್ತು ಸ್ವಧರ್ಮವು ಏನೇ ಇರಲಿ, ಅದರಿಂದ ರೂಪಿಸಿಕೊಂಡಂತಹ ತನ್ನತನದ ಪರಿಕಲ್ಪನೆಯು ಹೇಗೇ ಇರಲಿ, ಅದರ ಪೂರ್ಣ ಪ್ರಮಾಣದ ಪ್ರದರ್ಶನಕ್ಕೆ ಮತ್ತು ಪ್ರಕಟಣೆಗೆ ಹಾತೊರೆಯಬಾರದು ಎಂಬ ಸೂಕ್ಷ್ಮತೆಯನ್ನು ಕೂಡಾ ಹೊಂದಿರಬೇಕು. ಅಲ್ಲದೇ ತನ್ನತನದ ವ್ಯಕ್ತಿಗೆ ರಹಸ್ಯ, ಖಾಸಗಿ, ಸಹಜತೆ ಮತ್ತು ಸಾರ್ವಜನಿಕ; ಈ ಮೂರರ ಬಗ್ಗೆ ಸ್ಪಷ್ಟತೆ ಇರುತ್ತದೆ.

8. ವ್ಯಕ್ತಿಯೊಬ್ಬನಿಗಿರುವ ತನ್ನತನದ ಸ್ಪರ್ಷತೆಯು ತನ್ನ ವ್ಯಕ್ತಿತ್ವದ ಪ್ರತಿಮೆಯ ಪ್ರದರ್ಶನ ಅಥವಾ ಪ್ರಕಟಣೆಯ ಬಗ್ಗೆ ಆತ್ಮವಿಶ್ವಾಸವನ್ನು ನೀಡುತ್ತದೆ. ಅದರ ತಾಳಿಕೆ ಮತ್ತು ಬಾಳಿಕೆಗೆ ಸೂಕ್ತವಾದಂತ ಚಟುವಟಿಕೆಗಳನ್ನು ಮಾಡುತ್ತಿರುತ್ತಾನೆ.

ಹೊಣೆಯರಿವ ತನ್ನತನ

ತನ್ನತನದ ಮೂಲದಲ್ಲಿ ಒಪ್ಪಿಕೊಂಡಿರುವ ಮತ್ತು ಅಪ್ಪಿಕೊಂಡಿರುವ ನೈತಿಕ ಮೌಲ್ಯವನ್ನು ಕಾಪಾಡಿಕೊಳ್ಳುವ ವ್ಯಕ್ತಿಯು ತನ್ನ ಪಾತ್ರಗಳ ನಿರ್ವಹಣೆಯ ಜೊತೆಜೊತೆಗೇ ಅವುಗಳ ತಾಳಿಕೆ ಮತ್ತು ಬಾಳಿಕೆಗೆ ಹೊಣೆಯರಿತ ಚಟುವಟಿಕೆಗಳಲ್ಲಿ ತೊಡಗಿರುತ್ತಾನೆ. ಉದಾಹರಣೆಗೆ ಅನಿರ್ಬಂಧಿತ ಪ್ರೇಮದ ಪ್ರತಿಮೆಯ ಪರಿಕಲ್ಪನೆಯೇ ತನ್ನತನವಾಗಿ ಒಬ್ಬ ವ್ಯಕ್ತಿಯು ರೂಪಿಸಿದ್ದಾನೆಂದುಕೊಳ್ಳಿ. ಯಾವ ಪಕ್ಷಪಾತವೂ ಇಲ್ಲದೇ ಎಲ್ಲರನ್ನೂ ಪ್ರೀತಿಸುವ ರೂಢಿಯನ್ನು ಮಾಡಿಕೊಂಡಿದ್ದಾನೆಂದುಕೊಳ್ಳಿ.

ಉಣ್ಣುವ, ಉಡುವ, ಕೊಡುವ ವಿಷಯಗಳು ಬಂದಾಗ ಅವನು ಎಲ್ಲರೊಂದಿಗೂ ತಮ್ಮವರು ಪರಕೀಯರು ಎಂಬ ಬೇಧಭಾವ ಇಲ್ಲದೇ ವರ್ತಿಸಬಹುದು. ಆದರೆ ತನ್ನ ಹೆಂಡತಿ, ಮಗಳು, ತನ್ನ ತಾಯಿ, ತಂದೆ, ತನ್ನ ವಿದ್ಯಾರ್ಥಿಗಳು, ತಮ್ಮ ಮನೆಯ ನಾಯಿ, ಮನೆಗೆ ತರಕಾರಿ ಮಾರುವವನು; ಹೀಗೆ ಪ್ರತಿಯೊಬ್ಬರ ಬಳಿಯೂ ಅವರ ಪಾತ್ರಗಳು ಭಿನ್ನವಾಗಿರುತ್ತವೆ. ಮತ್ತು ಜವಾಬ್ದಾರಿಗಳೂ ಕೂಡಾ ಬೇರೆಬೇರೆಯಾಗಿರುತ್ತದೆ.

ಅವುಗಳೆಲ್ಲದರ ಸ್ಪಷ್ಟತೆ ಅವನಿಗೆ ಇದ್ದು, ಅದಕ್ಕೆ ಸರಿಯಾಗಿ ವರ್ತಿಸುತ್ತಾನೆ. ಹಾಗೆಯೇ ಅವನ ವರ್ತನೆ, ಅವನ ನಿವೇದನೆಯೂ ಕೂಡಾ ಹೆಂಡತಿಯ ಬಳಿ, ಮಗಳ ಬಳಿ, ಸೊಪ್ಪು ಮಾರುವವಳ ಬಳಿ ಒಂದೇ ಆಗಿರುವುದಿಲ್ಲ. ಆದರೆ ಈ ಮೂವರ ಕುರಿತೂ ಒಂದೇ ಬಗೆಯಾಗಿ ಅನಿರ್ಬಂಧಿತ ಪ್ರೇಮವನ್ನು ಹೊಂದಿರಬಲ್ಲ. ಪ್ರೇಮವೆಂಬುದು ಅವನ ಗುಣಸ್ವಭಾವವೇ ಆಗಿರುತ್ತದೆ ಅಷ್ಟೇ. ಅವನ ಸಂಪರ್ಕಕ್ಕೆ ಬಂದವರಿಗೆಲ್ಲರಿಗೂ ಅದರ ಅನುಭವವಾಗಬಹುದು.

ವ್ಯತ್ಯಾಸಗಳ ಅರಿವು

ಒಟ್ಟಾರೆ ಈ ನನ್ನತನವೆಂಬದಕ್ಕೆ ಸ್ವಾಭಿಮಾನ ಮತ್ತು ಅಹಂಕಾರದ ನಡುವಿನ ವ್ಯತ್ಯಾಸ, ಪ್ರೇಮ ಮತ್ತು ಕಾಮದ ನಡುವಿನ ವ್ಯತ್ಯಾಸ, ಸಂಬಂಧ ಮತ್ತು ವ್ಯಾಮೋಹದ ನಡುವಿನ ವ್ಯತ್ಯಾಸ, ಧೋರಣೆಗಳಿಗೂ ಮತ್ತು ಮಾನಸಿಕ ಸಮಸ್ಯೆಗಳಿಗೂ ಇರುವ ವ್ಯತ್ಯಾಸ, ವ್ಯಕ್ತಿತ್ವದ ಸಹಜ ಪ್ರಕಟಣೆಗೂ ಮತ್ತು ವ್ಯಕ್ತಿತ್ವವನ್ನು ಕೃತಕವಾಗಿ ಪ್ರದರ್ಶಿಸುವುದಕ್ಕೂ ಇರುವ ವ್ಯತ್ಯಾಸ; ಇವೆಲ್ಲದರ ಬಗ್ಗೆ ಸ್ಪಷ್ಟವಾದ ಅರಿವು ಮತ್ತು ಅವಲೋಕಿಸಿಕೊಳ್ಳುವ ದೃಷ್ಟಿ ಇರಬೇಕು.

ತನ್ನನ್ನು ತಾನು ಮೌಲ್ಯಮಾಪನ ಮಾಡಿಕೊಳ್ಳುವ ವಿಮರ್ಶಾತ್ಮಕವಾದ ಮನೋಭಾವವನ್ನು ಹೊಂದಿರಬೇಕು. ಯಾವುದೇ ವಿಷಯದಲ್ಲಿ ಸ್ಪಷ್ಟತೆಯನ್ನು ಹೊಂದಿದ್ದಾರೆಂದರೆ ವ್ಯತ್ಯಾಸದ ಅರಿವು ಇರಬೇಕು. ವ್ಯತ್ಯಾಸಗಳ ಸ್ಪಷ್ಟತೆಯೇ ಗೊಂದಲಗಳಿಲ್ಲದ ಮನಸ್ಥಿತಿಗೆ ತಳಹದಿ. ತನ್ನಲ್ಲಿ ತಪ್ಪುಗಳೇನಿವೆ, ಒಪ್ಪುಗಳೇನಿವೆ ಎಂದು ಆತ್ಮವಿಮರ್ಶೆ ಮಾಡಿಕೊಂಡು, ಈ ತಪ್ಪುಗಳು ಹೇಗಾದವು? ಯಾವುದರಿಂದಾದವು? ಎಂದು ಆತ್ಮಾವಲೋಕನವನ್ನೂ ಮಾಡಿಕೊಳ್ಳಬೇಕು. ತನ್ನತನದ ಪರಿಕಲ್ಪನೆಯ ಗಟ್ಟಿತನವೇ ಈ ಆತ್ಮವಿಮರ್ಶೆ ಮತ್ತು ಆತ್ಮಾವಲೋಕನದ ಮೇಲಿದೆ.

ಆತ್ಮಸಾಕ್ಷಾತ್ಕಾರ ಎಂದರೆ ಬೇರೇನಲ್ಲ. ತನ್ನ ತಾನು ಅರಿಯುವುದಷ್ಟೇ. ಮನಶಾಸ್ತ್ರದಲ್ಲಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಪ್ರಾಮಾಣಿಕವಾಗಿ ಅವುಗಳಿಗೆ ಉತ್ತರಿಸುತ್ತಾ ತನ್ನ ವ್ಯಕ್ತಿತ್ವದ ಬಗೆ, ಅರಿಮೆಯ ಅರಿವು, ಮಾನಸಿಕ ಸಮಸ್ಯೆ; ಇತ್ಯಾದಿಗಳನ್ನು ತಿಳಿದುಕೊಳ್ಳುತ್ತೇವೆ. ನಮ್ಮತನದ ಪರೀಕ್ಷೆಯನ್ನು ಕೆಲವು ವೈಜ್ಞಾನಿಕ ಮತ್ತು ತಾರ್ಕಿಕ ಮಾನದಂಡದಿಂದ ಮಾಡಿಕೊಳ್ಳುತ್ತೇವೆ.

ಆಧ್ಯಾತ್ಮದಲ್ಲಿ, ಧಾರ್ಮಿಕತೆಯಲ್ಲಿ ಕೆಲವು ನೈತಿಕ ಮಾನದಂಡವನ್ನು ಮುಂದಿಟ್ಟುಕೊಂಡು ತಮ್ಮತನವನ್ನು ಪರೀಕ್ಷಿಸಿಕೊಳ್ಳಲಾಗುತ್ತದೆ. ಈ ಎರಡರ ಉದ್ದೇಶವೂ ಆರೋಗ್ಯಪೂರ್ಣಾವಾಗಿರುವ ಮನಸ್ಸು ಮತ್ತು ಆ ಮನಸ್ಸು ಉಂಟುಮಾಡುವ ಆರೋಗ್ಯಪೂರ್ಣವಾದ ಸಾಮಾಜಿಕ ಪರಿಸರ. ಇನ್ನುಳಿದ ಸ್ವರ್ಗ, ನರಕಗಳ ಪರಿಕಲ್ಪನೆಗಳು ಮುಗುದ ಮಗುವಿನಂತಹ ಮನಸುಗಳಿಗೆ ಕಲ್ಪಿತ ಚಾಕೊಲೆಟ್‍ಗಳ ಆಮಿಷವಷ್ಟೇ.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending