ಲೈಫ್ ಸ್ಟೈಲ್
ಮದುವೆ ಎಂದರೆ ಹೆಣ್ಣು-ಗಂಡಿನ ದೈಹಿಕ ಸುಖವಲ್ಲ ಅದು ಕುಟುಂಬ ಕುಟುಂಬಗಳ ಮನಸ್ಸಿನ ಸಂಬಂಧ
- ಶಿವಾನಂದ ಕಲಬುರಗಿ
ಸರಸ ಜನನ ವಿರಸ ಮರಣ ಸಮರಸವೇ ಜೀವನ ಬೇಂದ್ರೆಯವರ ದಿವ್ಯ ವಾಣಿಯಂತೆ ಬದುಕಬೇಕೆಂದರೆ ಮನೆಯೇ ಮೊದಲ ಪಾಠಶಾಲೆ ಆಗಬೇಕು. ತಾಯಿಯೇ ಮೊದಲ ಗುರು ಆಗಬೇಕಾಗಿದೆ. ನೂಲಿನಂತೆ ಸೀರೆ ತಾಯಿಯಂತೆ ಮಗಳು ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಸುಳ್ಳಿಗೆ ಸುಖವಿಲ್ಲ ಸತ್ಯಕ್ಕೆ ಸಾವಿಲ್ಲ.
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಿಸು. ಎಂಬ ಗಾದೆ ಮಾತಿನಂತೆ ಮದುವೆ ಎಂಬುದು ಗಂಡು ಹೆಣ್ಣಿನ ದೈಹಿಕ ಸುಖವಲ್ಲ ಕುಟುಂಬ ಕುಟುಂಬಗಳ ನಡುವಿನ ಮನಸ್ಸಿನ ಸಂಬಂಧ. ಮದುವೆ ಏಳೇಳು ಜನ್ಮದ ಅನುಬಂಧ ಹೆಣ್ಣಿಗೊಂದು ಗಂಡು ಗಂಡಿಗೊಂದು ಹೆಣ್ಣು ಪ್ರಪಂಚದ ಸೃಷ್ಟಿಯಲ್ಲಿ ಇದ್ದೇ ಇರುತ್ತದೆ. ಬಡವರ ಮನೆಯ ಹೆಣ್ಣು ತಂದುಕೊಳ್ಳಬೇಕು ಶ್ರೀಮಂತರ ಮನೆಗೆ ಹೆಣ್ಣು ಕೊಡಬೇಕು. ಇದು ಲೋಕ ರೂಢಿಯ ಸಿದ್ಧಾಂತ.
ಋಣಾನುಬಂಧದ ಸಂಬಂಧ ಕೂಡಿಬಂದಾಗ ಮದುವೆಯೆಂಬ ಶುಭಕಾರ್ಯ ನೆರವೇರುತ್ತದೆ. ಮದುವೆಯಾದ ನವದಂಪತಿಗಳು ಪರಸ್ಪರ ಸ್ನೇಹಭಾವದಿಂದ ಅರಿತು ಬಾಳಬೇಕು. ಯಾರು ಹೆಚ್ಚಲ್ಲ ಯಾರು ಕಡಿಮೆಯೂ ಅಲ್ಲ ಗಂಡನಾದವನು ತನ್ನ ಹೆಂಡತಿಯಲ್ಲಿ ತನ್ನ ಸೋದರಿಯರ ಪ್ರೀತಿ ಕಾಣಬೇಕು. ಹೆಂಡತಿಯಾದವಳು ತನ್ನ ಗಂಡನಲ್ಲಿ ಸಹೋದರನ ಪ್ರೀತಿ ಕಾಣಬೇಕು. ಸೊಸೆಯಾದವಳು ತನ್ನ ಅತ್ತೆಯಲ್ಲಿ ತನ್ನ ತಾಯಿಯ ಪ್ರೀತಿ ಕಾಣಬೇಕು. ಅತ್ತೆಯಾದವಳು ತನ್ನ ಸೊಸೆಯಲ್ಲಿ ತನ್ನ ಮಗಳ ಪ್ರೀತಿ ಕಾಣಬೇಕು. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ. ಕಾಲಾಯ ತಸ್ಮೈ ನಮಃ ಎಂಬ ಮಾತಿನೊಂದಿಗೆ ಅರ್ಥಪೂರ್ಣವಾಗಿ ಬಾಳಬೇಕು.
ಗಂಡ-ಹೆಂಡತಿ ಇಬ್ಬರೂ ಒಂದು ನಾಣ್ಯದ ಎರಡು ಮುಖಗಳಂತೆ. ಎರಡರಲ್ಲಿ ಒಂದು ಇಲ್ಲದಿದ್ದರೂ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತದೆ. ಹೆಣ್ಣು ಜಗದ ಕಣ್ಣು ಎಂದು ಬಿಂಬಿಸಲಾಗುತ್ತದೆ. ನಿಸರ್ಗದ ಶಕ್ತಿಯ ಜೊತೆಗೆ ಹೆಣ್ಣನ್ನು ಹೋಲಿಸುತ್ತೇವೆ. ಜನನ ಮತ್ತು ಮರಣಕ್ಕೂ ನಿಸರ್ಗವೇ ಹೇಗೆ ಕಾರಣವೋ ಹಾಗೆಯೇ ಹೆಣ್ಣು ಕೂಡ ಜನನ ಮರಣದ ನಡುವಿನ ವಿಸ್ಮಯ ಶಕ್ತಿ.
ಹೆಣ್ಣು ವಂಶವನ್ನು ಉದ್ಧಾರ ಮಾಡುವವಳು ಮನೆ ಬೆಳಗುವವಳು ಮನೆಯ ಮಹಾಲಕ್ಷ್ಮಿ ಸೌಭಾಗ್ಯವತಿ ಸುಕಾಂತೆ ಸಕಲ ಸಂಪನ್ನದಾತೆ ಮನೆ ಬೆಳಗುವ ನಂದದೀಪ ಎಂದು ಹೀಗೆ ನಾನಾ ರೀತಿಯಲ್ಲಿ ಅವಳನ್ನು ನಾಮಪದಿಂದ ಗುಣವಾಚಕವಾಗಿ ಪರಿವರ್ತಿಸಿ ಗೌರವಿಸಲಾಗಿದೆ. ಆದರೆ ಈ ಮೇಲಿನ ಎಲ್ಲಾ ಗುಣಗಾನವು ಎಲ್ಲಾ ಹೆಣ್ಣಿನಲ್ಲಿ ಸಾಧಾರಣವಾಗಿ ಕಂಡುಕೊಳ್ಳಲು ಕಷ್ಟಸಾಧ್ಯ. ಸಮಾಜದಲ್ಲಿನ ಬಹುತೇಕ ಸಂಸಾರಗಳಲ್ಲಿ ಗಂಡು-ಹೆಣ್ಣಿನ ಮಧ್ಯೆ ಹೊಂದಾಣಿಕೆ ಇಲ್ಲದೆ ಪವಿತ್ರವಾದ ಮದುವೆಯೆಂಬ ಸಂಬಂಧ ಕ್ಷಣಾರ್ಧದಲ್ಲಿ
ಕಡ್ಡಿ ಮುರಿದಂತೆ ಮುರಿದು ಬೀಳುತ್ತವೆ.
ಇದಕ್ಕೆಲ್ಲ ಕಾರಣ ಗಂಡ-ಹೆಂಡತಿಯರ ಮಧ್ಯ ಹೊಂದಾಣಿಕೆಯ ಎಂಬ ಆತ್ಮವಿಶ್ವಾಸ ಕೊರತೆಯಿಂದ. ನಾವು ಬಳಸುವ ಭಾಷೆ ಇತರರ ಹೃದಯವನ್ನು ಕಲಕಬೇಕು. ಮಾತು ಮೃತ್ಯುವಾಗದೆ ಮೃದುವಾಗಿ ಮನಸ್ಸಿಗೆ ನೆಮ್ಮದಿಯನ್ನು ನೀಡುವಂತಿರಬೇಕು. ಕಪಟತನ ಮೋಸ ವಂಚನೆ ಸುಳ್ಳು ತಮ್ಮ ಆಭರಣವನ್ನಾಗಿ ಮಾಡಿಕೊಂಡು ಮಾತನಾಡುವ ಅಹಂಕಾರಿಗಳು ಸಮಾಜದಲ್ಲಿ ಬೇಕಾದಷ್ಟು ಸಂಖ್ಯೆಯಲ್ಲಿದ್ದಾರೆ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೆ ಹೋಯಿತು. ಆದ್ದರಿಂದ ಅರಿತು ನಡೆಯಬೇಕು ಮರೆತು ನಡೆಯಬಾರದು. ಅರಿವೇ ಗುರು ವಾಗುತ್ತದೆ ಮರುವು ಶಿಕ್ಷೆಯಾಗುತ್ತದೆ.
ನಾವು ನಡೆದು ಬಂದ ಹಾದಿ ಎಂದೆಂದಿಗೂ ಮರೆಯಬಾರದು. ಜೀವನದಲ್ಲಿ ಕಷ್ಟ ಸುಖಗಳನ್ನು ಸಮಾನವಾಗಿ ಸವಿಯಬೇಕು. ನಾನು ನನ್ನದು ನನ್ನಿಂದಲೇ ಎಂಬ ಅಹಂಕಾರ ನಮ್ಮ ವ್ಯಕ್ತಿತ್ವವನ್ನೇ ನಾಶಮಾಡುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಬಹಳ ಮುಖ್ಯವಾಗುತ್ತದೆ. ಸಮಾಜದಲ್ಲಿ ಅಲ್ಪಸುಖಿಗಳು ಸಾಮಾನ್ಯವಾಗಿ ಕಾಣುತ್ತೇವೆ. ಒಂದು ದಿನದ ಗಂಜಿ ಕಾಣದ ಅದೆಷ್ಟೋ ಕುಟುಂಬಗಳಿಗೆ ತದನಂತರ ಬಂದ ಶ್ರೀಮಂತಿಕೆಯಿಂದ ತಮ್ಮ ಇಂದಿನ ಆದಿಯನ್ನು ಮರೆತುಬಿಡುತ್ತಾರೆ. ಹೇಳೋದು ಅದಕ್ಕಾಗಿಯೇ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದನಂತೆ. ಶ್ರೀಮಂತಿಕೆ ನೆತ್ತಿಗೇರಿದಾಗ ಬಸವನ ಹಾಲಿನಿಂದ ಕುಂಡಿ ತೊಳೆದನಂತೆ. ಬಡತನ ಸಿರಿತನ ಗೋಡೆ ಮೇಲಿನ ನೆರಳಿನಂತೆ.
ಒಂದು ತುತ್ತು ಅನ್ನ ಸಿಕ್ಕರೆ ತೊಡೆಯ ಮರೆಮಾಡಿ ಉಣ್ಣಬೇಕು ಎಂಬ ಅನುಭವದ ಮಾತು ನಮ್ಮ ಹಿರಿಯರು ನಮಗೆ ನಿರ್ದೇಶನ ಮಾಡಿದ್ದಾರೆ. ನಮ್ಮ ದೇಹವೆಂಬುದು ತುಂಬಿದ ಬಂಡಿಯಂತೆ ನಮ್ಮ ಕಾಲುಗಳು ಚಕ್ರದಂತೆ ನಡೆಯುವಾಗ ಜಾಗೃತಿಯಿಂದ ಹೆಜ್ಜೆ ಇಡಬೇಕು . ನಮ್ಮ ಪಂಚೇಂದ್ರಿಯಗಳು ಚಂಚಲಕ್ಕೆ ಸಿಕ್ಕಿಕೊಳ್ಳದಂತೆ ಹತೋಟಿಯಲ್ಲಿ ಹಿಡಿದುಕೊಳ್ಳುವುದೇ ಸಾಧನೆ. ಪ್ರತಿಯೊಬ್ಬ ಮನುಷ್ಯನು ತಮ್ಮ ಆತ್ಮ ಅವಲೋಕನದಿಂದ ಬದುಕಬೇಕು. ವಿಚಾರಾತ್ಮಕವು ಮತ್ತು ವಿಮರ್ಶಾತ್ಮಕವೂ ನಮ್ಮ ಸತ್ಯಾ ಅನ್ವೇಷಣೆಯ ಪಥದಲ್ಲಿ ಸಾಗುವಂತೆ ನೋಡಿಕೊಳ್ಳಬೇಕು.
ಮನುಷ್ಯ ಧರ್ಮ ದಲ್ಲಿ ಪಾಲಿಸಬೇಕಾದ ಬಹುದೊಡ್ಡ ಧರ್ಮ ಎಂದರೆ ಹಸಿದವನಿಗೆ ಅನ್ನ ನೀಡುವುದು, ಸೋತವನಿಗೆ ಸ್ಫೂರ್ತಿ ನೀಡಿ ಗೆಲುವಿನ ಕನಸುಗಳನ್ನು ಬಿತ್ತುವುದು, ಕಷ್ಟದಲ್ಲಿದ್ದವರಿಗೆ ಕೈಲಾದ ಸಹಾಯ ಮಾಡುವುದು. ಪರೋಪಕಾರಿಯಾಗಿ ಬದುಕುವುದು , ಮನುಷ್ಯರನ್ನು ಮನುಷ್ಯರೇ ಪ್ರೀತಿಸುವದೇ ಮನುಷ್ಯನ ಒಳಮರ್ಮ. ಪ್ರತಿಯೊಬ್ಬರೂ ತಮ್ಮ ಕಾಯಕದಲ್ಲಿ ಪ್ರಾಮಾಣಿಕತೆ ಸದಾಚಾರ ಹೊಂದಿರುವುದೇ ಧರ್ಮ. ನೀ ದೇವನಾದರೆ ಎನ್ನನೇಕೆ ಸಲಹೇ ಎಂದು ಅಲ್ಲಮ ದೇವರನ್ನು ಪ್ರಶ್ನಿಸುತ್ತಾನೆ. ನಮ್ಮ ಆತ್ಮವೇ ಪರಮಾತ್ಮ ನಮ್ಮ ಸದಾಚಾರವೇ ಸಕಲ ಸೌಭಾಗ್ಯ ನಮ್ಮ ಮಾತುಗಳಿಗೆ ಸತ್ಯವೇ ಸದಾ ಭೂಷಣ ಸತ್ಯವನ್ನು ನುಡಿಯುವುದು. ಸತ್ಯ ಮತ್ತು ಸುಳ್ಳು ಮನುಷ್ಯನ ವ್ಯಕ್ತಿತ್ವವನ್ನು ಅನಾವರಣಮಾಡುತ್ತವೆ. ಮದುವೆಯೆಂಬುದು ಗಂಡು-ಹೆಣ್ಣುಗಳ ಭಾವ ಸಂಬಂಧದಲ್ಲಿ ಲೀನವಾಗುವುದು.
ಸಾಮಾನ್ಯವಾಗಿ ಪ್ರತಿಯೊಂದು ಹೆಣ್ಣು ತಾನು ಮದುವೆಯಾದ ಗಂಡನೊಂದಿಗೆ ಸಂತೋಷದಿಂದ ಇರಬೇಕೆಂದರೆ ಇಬ್ಬರು ಕುಳಿತು ಆಲೋಚಿಸಿ ಪರಸ್ಪರ ಒಬ್ಬರನ್ನೊಬ್ಬರು ಆತ್ಮಸಾಕ್ಷಿಯಾಗಿ ಅರ್ಥಮಾಡಿಕೊಳ್ಳುವುದರಲ್ಲಿ ಸಂತೋಷವನ್ನು ಕಾಣಬೇಕು . ಹೆಣ್ಣಿಗೆ ಗಂಡನ ಶಾಶ್ವತ ಡಾಕ್ಟರ್ ರಾಜ್ ಅವರ ಒಂದು ಹಾಡು ನೆನಪಿಸುತ್ತಾ
ಬಂದು ಕೊಡಿಸೋ ಸೀರೆ ಬಣ್ಣ ಹೋಗುವವರಿಗೆ ತಂದೆ ಕೊಡಿಸೋ ಸೀರೆ ಮದುವೆಯಾಗುವವರೆಗೆ ತಾಯಿ ಕೊಡಿಸುವ ಸೀರೆ ತಾಯಿ ಆಗುವವರೆಗೆ ಗಂಡ ಕೊಡಿಸುವ ಸೀರೆ ಹೆಣ್ಣಿನ ಕುಂಕುಮ ಇರುವವರೆಗೆ ಮಣ್ಣಿನ ಮಮತೆ ಇರುವವರೆಗೂ. ಕೊಟ್ಟ ಹೆಣ್ಣು ಕುಲದ ಹೊರಗು.
ಎಷ್ಟೇ ಪ್ರೀತಿ ಪ್ರೇಮ ವಿಶ್ವಾಸ ಅನನ್ಯತೆಯಿಂದ ಇದ್ದರೂ ಗಂಡ-ಹೆಂಡತಿಯರ ಮಧ್ಯೆ ಒಂದಿಲ್ಲ ಒಂದು ಕಾರಣಕ್ಕೆ ಆಗಾಗ ಸಂಸಾರದಲ್ಲಿ ಜಂಜಾಟಗಳು ಗಲಾಟೆ ಗದ್ದಲಗಳು ಜಗಳಗಳು ಸರ್ವೇ ಸಾಮಾನ್ಯ. ತಮ್ಮಿಬ್ಬರ ಮಧ್ಯೆ ಆದ ಕ್ಷಣಿಕದ ಕಲಹ ತನ್ನ ತವರುಮನೆಗೆ ಎಂದು ದೂರು ನೀಡಬಾರದು. ಗಂಡ ಹೆಂಡರ ಜಗಳ ಗಂಧ ತೀಡಿದಂಗ.
ಗಂಡ ಹೆಂಡರ ಜಗಳ ಉಂಡು ಮಲಗುವತನಕ ಗಂಡ ಹೆಂಡರ ಜಗಳ ಕುಂಡಿ ತಿರುಗುವತನಕ ಅಂತಹ ಪವಿತ್ರವಾದ ತಮ್ಮ ಸಂಬಂಧವನ್ನು ತಾವೇ ಹಾಳು ಮಾಡಿಕೊಳ್ಳುತ್ತಾರೆ. ಚಾಡಿ ಹೇಳಿ ಸಂಸಾರ ಕೆಡಿಸಿಕೊಳ್ಳಬಾರದು. ಕನಕದಾಸರು ಹೇಳುತ್ತಾರೆ. ತಾಯಿ-ತಂದೆ ಇರುವವರೆಗೂ ತವರುಮನೆ. ತಂದೆ ತಾಯಿ ಇಲ್ಲದ ತವರು ಮನೆ ನೀರಿಲ್ಲದ ಕೆರೆಗೆ ಕರು ನೀರಿಗಾಗಿ ಧಾವಿಸಿ ಬಂದಂತೆ. ತಾಯಿ ಇದ್ದರೆ ತವರೆಚ್ಚು ತಂದೆ ಇದ್ದರೆ ಬಳಗ ಹೆಚ್ಚು ಸಾವಿರದಾಗೆಚ್ಚು ಪತಿ ಪುರುಷ. ಗಂಜಿಯ ಕುಡಿದರೂ ಗಂಡನ ಮನೆ ಲೇಸು ಅಂಗಿನ ಬಾನ ತವರೂರು.
ಆಸರಿಕೆ ಬ್ಯಾಸರಿಕೆ ಕಳಿಲ್ಯಾಕಂತ ತವರು ಮನೆಗೆ ಹೋದರೆ ಒಮ್ಮನದ ಜೋಳ ಒಳ್ಮುಂದೆ ಇಟ್ಟರಾ ಅಣ್ಣನ ಮಡದಿಯರು. ಹೆಣ್ಣಿಗೆ ತವರು ಸ್ಥಿರವಲ್ಲ ಕಟ್ಟಿದ ಬುತ್ತಿ ಹೊಟ್ಟಿದ ಬಣವೆ ಶಾಶ್ವತವಲ್ಲ. ಸತಿ-ಪತಿಗಳ ಇಬ್ಬರು ಸಂಸಾರದಲ್ಲಿ ಹಾಲು ಸಕ್ಕರೆಯಂತೆ ಕೂಡಿಬಾಳಿದರೆ ಬದುಕೆ ಒಂದು ನಂದನವನ. ಸತಿಪತಿಗಳಲ್ಲಿ ಒಂದಾಗದ ಭಕ್ತಿ ಹಿತವಪ್ಪುದು ಶಿವಂಗೆ . ಆ ಶಿವನೇ ಅರ್ಧನಾರೇಶ್ವರ ಸತಿ-ಪತಿಯರ ಧರ್ಮ ಎಲ್ಲಾ ಧರ್ಮಗಳಿಗಿಂತಲೂ ಅತ್ಯಂತ ಶ್ರೇಷ್ಠ ಧರ್ಮ. ಹೆಣ್ಣಿಗೆ ಪತಿಯೇ ಪರದೈವ ಗಂಡ ಎಂಬ ದೈವಶಕ್ತಿ ಪತಿವ್ರತೆ ಅನುಸೂಯೆ ತನ್ನ ಪತಿಯ ಪಾದ ಪೂಜದ ನೀರಿನಿಂದ ಪವಾಡ ಮೆರೆದಿದ್ದಾಳೆ. ಪಾರ್ವತಿ ಲಕ್ಷ್ಮಿ ಸರಸ್ವತಿ ಲೋಕಕ್ಕೆ ಮೂರು ಜನ ಪತಿವ್ರತೆಯರು ಎಂದು ತಮಗೆ ತಾವೇ ಬಿರುದು ತಂದುಕೊಂಡಿದ್ದರು.
ತಮಗಿಂತಲೂ ಅನುಸೂಯೆ ಪತಿವ್ರತೆ ಎಂದು ವರ್ತಮಾನ ತಿಳಿದು. ಮೂವರು ತಲೆಗೆ ಬಟ್ಟೆ ಕಟ್ಟಿಕೊಂಡು ತಮ್ಮ ಗಂಡಂದಿರು ಬರುವುದರಲ್ಲಿ ಮಂಚದ ಮೇಲೆ ಬಿಮ್ಮನೆ ಮಲಗಿದ್ದರು. ಸತಿಯರ ಮಲಗಿದ್ದ ಕಾರಣ ಕೇಳಿದ ಬ್ರಹ್ಮ ವಿಷ್ಣು ಮಹೇಶ್ವರರು ದಿಗ್ಭ್ರಾಂತರಾಗುತ್ತಾರೆ. ಮೂರು ಜನ ತಮ್ಮ ಗಂಡಂದಿರಿಗೆ ಚಾಡಿ ಹೇಳುತ್ತಾರೆ. ಲೋಕಕ್ಕೆ ದೊಡ್ಡವರಾದ ನೀವು ನಮಗಾದ ಅಪಮಾನವನ್ನು ಸರಿಪಡಿಸಬೇಕು. ಕೂಡಲೇ ಅನುಸೂಯೆಯ ಅರಮನೆಗೆ ಹೋಗಿ ಅವಳ ಪತಿವ್ರತೆಯನ್ನು ಪರೀಕ್ಷಿಸಬೇಕು ಎಂದು ಸವಾಲು ಹಾಕುತ್ತಾರೆ. ಹೆಂಡತಿಯರ ಮಾತು ಕೇಳಿದ ಬ್ರಹ್ಮ ವಿಷ್ಣು ಮಹೇಶ್ವರರು ಮಾರುವೇಷ ತೊಟ್ಟು ಋಷಿಮುನಿಗಳಾಗಿ ಅನುಸೂಯೆ ಅರಮನೆಯ ಬಾಗಿಲ ಮುಂದೆ ನಿಂತು ಭವತಿ ಭಿಕ್ಷಾಂದೇಹಿ ಎಂದು ಕೂಗುತ್ತಾರೆ. ಅರಮನೆಯ ಒಳಗೆ ಪತಿಯ ಸೇವೆ ಮಾಡುತ್ತಿದ್ದ ಅನುಸೂಯೆ ಹೊರಬಂದು ಸ್ವಾಮಿ ವೇಷಧರಿಸಿದ ಪೂಜ್ಯರನ್ನು ನೋಡಿ ಸಂತೋಷ ಪಡುತ್ತಾಳೆ. ಕೈ ಕಾಲು ತೊಳೆದುಕೊಳ್ಳಲು ಮೀಸಲು ನೀರು ತಂದು ನೀಡಿದಳು. ಒಳಗೆ ರತ್ನಗಂಬಳಿಯ ಗದ್ದಿಗೆ ಹಾಸಿ ಒಳಗೆ ಬನ್ನಿ ಎಂದು ವಿನಂತಿಸಿದಳು.
ಅವಳಲ್ಲಿನ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಎಲ್ಲ ವರ್ತಮಾನ ತನ್ನ ಪತಿರಾಯನಿಗೆ ಹೇಳಿದಳು. ಬಂದಂತಹ ಸ್ವಾಮಿಗಳಲ್ಲಿ ಒಬ್ಬರು ನಮಗೆ ಹಸಿವಾಗಿದೆ ಊಟ ಬಡಿಸು ಎಂದು ಬೇಡಿಕೊಳ್ಳುತ್ತಾರೆ. ಗುರುಗಳ ಆಸೆಯನ್ನು ಪೂರೈಸುವ ಹುಮ್ಮಸ್ಸಿನಲ್ಲಿ ತಮಗೇನು ಊಟಬೇಕು ಹೇಳಿದರೆ ಭಕ್ತಿಯಿಂದ ಮಾಡುತ್ತೇನೆ . ತಾವು ಸಂತೃಪ್ತಿಯಿಂದ ಹಾರೈಸಬೇಕು . ನಮಗೆ ಬೇಕಾದ ಆಹಾರವನ್ನು ಸಿದ್ದ ಪಡಿಸಬಲ್ಲೆಯಾ ಎಂದು ಅಪಹಾಸ್ಯ ಮಾಡುತ್ತಾರೆ. ತಮಗೇನು ಬೇಕು ಮಹಾಪ್ರಭು ತಾವು ಆಸೆಪಟ್ಟದನ್ನೆ ಮಾಡಿ ಬಡಿಸುತ್ತೇನೆ ಎಂದು ಒಪ್ಪಿಕೊಳ್ಳುತ್ತಾಳೆ.
ಹಾಗಾದರೆ ಉಸುಕಿನ ಉಸುಳಿ ಬಸಿಯಬೇಕು ಎಂದು ಹೇಳುತ್ತಾರೆ. ಆಗಲಿ ಎಂದು ಅಡುಗೆ ಮನೆಯವ ಒಳಗೆ ಬಂದು ನೀರು ಕಾಯಿಸಲು ಹಿಟ್ಟು ಬೊಗಸೆ ಮರಳನ್ನು ತಂದು ಪಾತ್ರೆಯಲ್ಲಿ ಹಾಕುತ್ತಾಳೆ. ಆಮೇಲೆ ಗಂಡನ ಪಾದ ಪೂಜೆಯ ಧೂಳಿನ ನೀರು ಅಡುಗೆ ಮಾಡಿದ ಪಾತ್ರೆಯ ಮೇಲೆ ಸಿಂಪಡಿಸಿದಾಗ ಪಾಯಸವಾಗುತ್ತದೆ. ಹೊಟ್ಟೆ ತುಂಬ ಊಟ ಮಾಡಿದ ಋಷಿಮುನಿಗಳು ಹಲಗೆ ತೊಟ್ಟಿಲಲ್ಲಿ ಮಲಗುವ ಇಂಗಿತವನ್ನು ವ್ಯಕ್ತಪಡಿಸುತ್ತಾರೆ. ಅವರ ಆಸೆಯಂತೆ ಹಲಗೆ ತೊಟ್ಟಿಲಿನಲ್ಲಿ ಹಾಸಿಗೆ ಹಾಸಿ ಮಲಗಲು ವಿನಂತಿಸಿದಾಗ ಅಪಹಾಸ್ಯ ಮಾಡುತ್ತಾರೆ.
ಗಂಡನ ಪಾದ ಪೂಜೆದ ಧೂಳಿನ ನೀರು ಮೂವರು ಋಷಿಗಳ ಮೇಲೆ ಸಿಂಪಡಿಸಿದಾಗ ವರ್ಷದ ಕೂಸುಗಳಾಗಿ ಬದಲಾಗುತ್ತಾರೆ. ಅಂತ ಅಗಾಧವಾದ ಶಕ್ತಿ ಗಂಡ-ಹೆಂಡತಿಯರಲ್ಲಿ ಅಡಗಿದೆ.
ದಿನಪೂರ್ತಿ ತಮ್ಮ ಗಂಡಂದಿರು ಬರುವ ಹಾದಿಯನ್ನೇ ಕಾಯುತ್ತಾರೆ. ಭಯಗೊಂಡು ಸರಸ್ವತಿ ಪಾರ್ವತಿ ಲಕ್ಷ್ಮಿಯವರು ಮಾರುವೇಷ ಧರಿಸಿ ಭವತಿ ಭಿಕ್ಷಾಂದೇಹಿ ಎಂದು ಅನುಸೂಯೆ ಅವರ ಮನೆಗೆ ಬರುತ್ತಾರೆ. ಅವರನ್ನು ಪ್ರೀತಿಯಿಂದ ಸ್ವಾಗತಿಸಿದ ಅನುಷಾದೇವಿಗೆ ಅಪಹಾಸ್ಯದ ಮಾತುಗಳಿಂದ ನಾವು ಕುಂದ್ರಲೂ ನಿಂದ್ರಲೂ ಬಂದಿಲ್ಲ ನಮ್ಮ ಗಂಡಂದಿರನ್ನು ಹುಡುಕಿಕೊಂಡು ಬಂದಿದ್ದೇವೆ. ಅವರನ್ನು ನಮಗೆ ಒಪ್ಪಿಸು ಎಂದು ವಿನಂತಿಸುತ್ತಾರೆ.
ಅದಕ್ಕೆ ಪತಿವ್ರತೆಯರಾದ ನೀವು ನಿಮ್ಮ ನಿಮ್ಮ ಗಂಡಂದಿರನ್ನು ನೀವೇ ಕರೆದುಕೊಂಡು ಹೋಗಿ ಎಂದು ಅಲಗಿ ತೊಟ್ಟಿಲಲ್ಲಿ ಮಲಗಿದ್ದ ಕೂಸುಗಳನ್ನು ತೋರಿಸುತ್ತಾಳೆ. ಬ್ರಹ್ಮ ವಿಷ್ಣು ಮಹೇಶ್ವರರು ಒಂದು ವರ್ಷದ ಮಕ್ಕಳಾಗಿ ಒಂದೇ ಮುಖದ ಒಂದೇ ಉಡುಗೆ ತೊಟ್ಟು ಮಲಗಿರುವುದನ್ನು ನೋಡಿ ಸರಸ್ವತಿ ಪಾರ್ವತಿ ಲಕ್ಷ್ಮಿಯವರು ಲೋಕಕ್ಕೆ ನೀನೇ ಮಹಾಪತಿವ್ರತೆ ಎಂದು ಅನುಷಾದೇವಿಯವರ ಕಾಲಿಗೆ ಎರಗುತ್ತಾರೆ. ತಮ್ಮಲ್ಲಿರುವ ಅಹಂಕಾರದ ಬುದ್ಧಿ ಅರಿವಾಗಿ ಅನುಷಾದೇವಿಯವರಿಗೆ ಶರಣಾಗುತ್ತಾರೆ. ಮತ್ತೊಂದು ಉದಾಹರಣೆ ಎಂದರೆ ಜಮದಗ್ನಿಯ ರೂಪ ಸೌಂದರ್ಯಕ್ಕೆ ಮರುಳಾದ ರೇಣುಕಾದೇವಿ ಜಮದಗ್ನಿ ಋಷಿಯನ್ನು ಮದುವೆಯಾಗಲು ಅಪೇಕ್ಷೆ ಪಡುತ್ತಾರೆ.
ಜಮದಗ್ನಿ ಮಹಾಋಷಿಗಳು ಬೇಡ ಎಂದು ಹೇಳಿದರು ಕೇಳದ ರೇಣುಕಾ ಮದುವೆಯಾಗುತ್ತಾರೆ. ಗಂಡನ ಪೂಜೆಗೆ ಮೀಸಲು ನೀರು ತರಲು ಉಸುಕಿನ ಕೊಡವ ಮಾಡಿ ಹಾವಿನ ಸಿಂಬಿ ಮಾಡಿ ನದಿಯ ನೀರಿಗೆ ಹೋಗಿ ಬಿಂದಿಗೆಯಲ್ಲಿ ನೀರು ತುಂಬಿಕೊಂಡು ಬರುವಾಗ ಒಬ್ಬ ಪುರುಷನನ್ನು ನೋಡಿ ಕಾಮೋದ್ರೇಕದ ಭಾವನೆಯ ಮೂಡಿದಾಗ ಪರ ಪುರುಷರನ್ನು ನೋಡಿದ ಶಾಪಕ್ಕೆ ಬಲಿಯಾಗುತ್ತಾಳೆ. ಹಾವಿನ ಸಿಂಬೆ ಹರಿದುಹೋಗುತ್ತದೆ ಮರಳಿನ ಬಿಂದಿಗೆ ಹೊಡೆದು ಹೋಗುತ್ತದೆ.
ಜಮದಗ್ನಿಯ ಕೋಪಕ್ಕೆ ಗುರಿಯಾಗುತ್ತಾಳೆ. ರೇಣುಕಾ ದೇವಿಗೆ ಜಮದಗ್ನಿ ಶಾಪ ಕೊಡುತ್ತಾರೆ. ಶಾಪ ವಿಮೋಚನೆಗಾಗಿ ರೇಣುಕರಾಜ ಜಮದಗ್ನಿಯ ಋಷಿಯ ಪಾದದ ಪೂಜೆಯ ನೀರು ತಂದು ಕುಷ್ಟರೋಗದಿಂದ ಬಳಲುತ್ತಿರುವ ರೇಣುಕಾದೇವಿಯ ಮೈಮೇಲೆ ಸಿಂಪಡಿಸಿದಾಗ ರೋಗದಿಂದ ಗುಣಮುಖಳಾದ ಘಟನೆಗಳು ಪುರಾಣಗಳಲ್ಲಿ ನೋಡುತ್ತೇವೆ.
ಇಂತಹ ಪವಿತ್ರವಾದ ಪತಿಯ ಮತ್ತು ಸತಿಯ ಶಕ್ತಿಯನ್ನು ಅರ್ಥಮಾಡಿಕೊಂಡು ಬಾಳಿದರೆ ಬದುಕು ಬಂಗಾರವಾಗಿ ಸಮಾಜದಲ್ಲಿ ಇತರರಿಗೆ ಮಾದರಿಯಾಗಿ ಬದುಕಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

