Connect with us

ಅಂತರಂಗ

ಕಾರ್ನಾಡರ ಕೊರಳ ಫಲಕ

Published

on

  • ಡಾ. ರಹಮತ್ ತರೀಕೆರೆ

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು.

ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಸಮಾಜವನ್ನು ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕಗಳನ್ನು ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ.

ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ’ ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ.

ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ.

ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯಾದರು.

ಗೌರಿಲಂಕೇಶ್ ಸ್ಮರಣೆಯ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ.

ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು.

ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು.

ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending