Connect with us

ದಿನದ ಸುದ್ದಿ

ಬಾಣಲೆಯಿಂದ ಬೆಂಕಿಗೆ : ಕೊರೊನಾ ರಣವೈದ್ಯ ಬೆಳಕಿಗೆ

Published

on

ಚಿತ್ರ: ಛತ್ತೀಸಗಢದ ಅರಣ್ಯದ ಮಧ್ಯೆ ಅದಾನಿ ಕಂಪನಿಯ ಕಲ್ಲಿದ್ದಲ ಗಣಿಗಾರಿಕೆಯ ದೃಶ್ಯ | ಕೃಪೆ :qz.com
  • ನಾಗೇಶ್ ಹೆಗಡೆ

ಕೊರೊನಾಮಾರಿ ಬರುವ ಮೊದಲು ಭಾರತದ ನದಿಗಳೆಲ್ಲ ಕೊಳಕು ಕೂಪಗಳಾಗಿದ್ದವು. ವಾಯುಮಾಲಿನ್ಯ ದಟ್ಟವಾಗಿತ್ತು. ಟ್ರಾಫಿಕ್ ಗದ್ದಲ ಅತಿಯಾಗಿತ್ತು. ಕಾರ್ಖಾನೆಗಳು, ಗಣಿಗಳು ಲಂಗುಲಗಾಮಿಲ್ಲದೇ ನಿಸರ್ಗ ಸಂಪತ್ತನ್ನು, ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದವು. ಕೊರೊನಾ ಬಂದಮೇಲೆ ಎಲ್ಲಕಡೆ ಶಾಂತಿ ನೆಲೆಸಿತ್ತು. ಲಾಕ್ಡೌನ್ ಎಂಬ ಹಠಾತ್ ಎಡವಟ್ಟಿನಿಂದಾಗಿ ಅದೆಷ್ಟೊ ಲಕ್ಷ ಕಾರ್ಮಿಕರು ನೆಲೆತಪ್ಪಿ ಗುಳೆ ಹೊರಟು, ಘನಘೋರ ಸಂಕಷ್ಟಗಳಿಗೆ ತುತ್ತಾಗಿದ್ದನ್ನು ಬಿಟ್ಟರೆ , ಅಭಿವೃದ್ಧಿಯ ಭರಾಟೆಯಿಂದ ನಲುಗಿದ್ದ ನೆಲ-ನೀರು-ಗಾಳಿ-ವನ್ಯಜೀವ ಎಲ್ಲವೂ ತುಸು ಉಸಿರಾಡತೊಡಗಿದವು.

ಕೊರೊನಾ ನಂತರ ಹೊಸ ಭಾರತ ಉದಯಿಸಲಿದೆ ಎಂದು ನಮ್ಮಲ್ಲಿ ಅನೇಕರು ಸಣ್ಣ ಆಸೆಯನ್ನಿಟ್ಟುಕೊಂಡಿದ್ದರು. ಆದರೆ ಈಗಿನ ಸರಕಾರ ರಣವೈದ್ಯದ ವೈಖರಿ ನೋಡಿದರೆ, ಕಾಯಿಲೆಯ ನೆಪದಲ್ಲಿ ದುರ್ಬಲರನ್ನು (ಅಂದರೆ ಉದ್ಯೋಗ ಕಳಕೊಂಡವರನ್ನು, ನಡೆನಡೆದು ಸುಸ್ತಾದವರನ್ನು, ಹಸಿದವರನ್ನು) ಕಂದಕಕ್ಕೆ ದೂಡಿ ಮಣ್ಣು ಮುಚ್ಚಲು ಹೊರಟಂತೆ ಕಾಣುತ್ತದೆ. ನಮ್ಮಲ್ಲಿ ಹಕ್ಕಿಜ್ವರ ಬಂತೆಂದು ಹ್ಯಾಚರಿಯ ಸಾವಿರಾರು ಕೋಳಿಗಳನ್ನು ಕಂದಕಕ್ಕೆ ಹಾಕಿ ಮಣ್ಣು ಮುಚ್ಚಿದ ಹಾಗೆ.

(ಇಲ್ಲೊಂದು ಕ್ರೂರ ವ್ಯಂಗವಿದೆ: ಪ್ರಧಾನಿ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ಯಾವಯಾವ ಬಾಬ್ತಿಗೆ ಎಷ್ಟೆಷ್ಟು ಎಂಬುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಲ್ಕು ಟ್ರಾಂಚ್‌ (tranche)ಗಳಲ್ಲಿ ಹಂಚಿದ್ದಾರೆ. ನಾಲ್ಕನೆಯ ಕಂತಿನಲ್ಲಂತೂ ಗಣಿಗಾರಿಕೆ ವಿಸ್ತರಣೆಗೆ, ರಕ್ಷಣಾ ಉತ್ಪಾದನೆ, ವಿಮಾನಯಾನ, ಬಾಹ್ಯಾಕಾಶ ಸಾಹಸಕ್ಕೆ ಇತ್ಯಾದಿಯಂತೆ.

ಟ್ರಾಂಚ್ ಎಂದರೆ ಹೋಳು ಅಥವಾ ಭಾಗ. ಆದರೆ ನೀವು ಗೂಗಲ್ ಕನ್ನಡ ನಿಘಂಟಿನಲ್ಲಿ ಅದರ ಅರ್ಥವನ್ನು ಹುಡುಕಿದರೆ ಟ್ರಾಂಚ್ ಎಂದರೆ ‘ಕಂದಕ’ trench ಎಂಬ ತಪ್ಪು ಅರ್ಥವಿದೆ, ಬೇಕಿದ್ದರೆ ನೋಡಿ. ನಿಜಕ್ಕೂ 40 ಕೋಟಿ ಜನರನ್ನು ಕಂದಕಕ್ಕೆ ಬೀಳಿಸಿ ತಪ್ಪನ್ನೇ ಸರಿಯೆಂದು, trancheನ್ನೇ trench ಎಂದು ತೋರಿಸುವ ಹುನ್ನಾರವೆ?.)

ಹಳ್ಳಿಯ ಜನರು ಹಳ್ಳಿಗೇ ಮರಳಿ ವಲಸೆ ಬಂದಾಗ ಎಷ್ಟೊಂದು ವಿಧಗಳಲ್ಲಿ ಅವರಿಗೆ ನೆರವಾಗಲು ಸಾಧ್ಯವಿತ್ತು. ಅದರ ಕೆಲವು ಯಶಸ್ವೀ ಉದಾಹರಣೆಗಳು ನಮ್ಮಲ್ಲಿವೆ: ಮಹಾರಾಷ್ಟ್ರದಲ್ಲಿ ಹೀವ್ಡೆ ಬಝಾರ್ ಎಂಬ ಗ್ರಾಮವಿದೆ. ನಮ್ಮ ಕೋಲಾರದ ಯಾವುದೇ ಊರಿನ ಹಾಗೆ ಬರೀ 430 ಮಿ.ಮೀ. ಮಳೆ ಬೀಳುವ ಹಳ್ಳಿ.

1980ರ ದಶಕದಲ್ಲಿ ಬಹಳಷ್ಟು ಜನ ದಿಕ್ಕೆಟ್ಟು ಉದ್ಯೋಗ ಹುಡುಕಿ ಮುಂಬೈಗೋ ಪುಣೆಗೋ ಹೋದರು. ಆ ಊರಿನ ಪುಣ್ಯಾತ್ಮನೊಬ್ಬ ಸರಪಂಚನೆಂದು ಆಯ್ಕೆಯಾದ. ಮಳೆಕೊಯ್ಲು ಮಾಡಿಸಿದ. ಗಿಡಮರ ನೆಡಿಸಿದ. ಅಂತರ್ಜಲ ಹೆಚ್ಚಿತು. ಊರು ನಳನಳಿಸಿತು. ಕೃಷಿ, ಕುರಿಸಾಕಣೆ, ಡೇರಿ ಎಲ್ಲಕ್ಕೂ ಚೈತನ್ಯ ಬಂತು.

ಗುಳೆ ಹೋದವರು ಮರಳಿ ಬಂದರು. ಇಂದು ಆ ಊರಲ್ಲಿ (ನಂಬಿ ಇದನ್ನು) ಬಡತನದ ರೇಖೆಗಿಂತ ಕೆಳಗಿದ್ದ 135 ಕುಟುಂಬಗಳು ಮೇಲೆದ್ದು ಬಂದಿವೆ, 60 ಜನರು ದಶಲಕ್ಷಾಧೀಶರಾಗಿದ್ದಾರೆ. ಸರಕಾರಿ ಇಲಾಖೆಗಳ ಅಧಿಕಾರಿಗಳಿಗೆ ಈ ಊರೇ ಈಗ ಪ್ರವಾಸೀ ತಾಣವಾಗಿದೆ. ಬೇಕಿದ್ದರೆ Hewre Bazar ಎಂದು ಅಂತರಜಾಲದಲ್ಲಿ ಹುಡುಕಿ ನೋಡಿ.
ನಗರಮುಖೀ ವಲಸೆಯನ್ನು ಹೀಗೆ ಹಿಮ್ಮೊಗ ತಿರುಗಿಸಲು ಸಾಧ್ಯವೆಂದು ಮೊದಲು ತೋರಿಸಿದವರು ಅಣ್ಣಾ ಹಜಾರೆ ಮತ್ತು ರಾಜೇಂದ್ರ ಸಿಂಗ್.

ತಮ್ಮ ಊರಿನ ನೀರು, ನೆಲ, ಗಾಳಿ, ಬೆಳಕನ್ನೇ ಸಂಪತ್ತನ್ನಾಗಿ ಬಳಸಿಕೊಂಡು ಗ್ರಾಮದ ಸಮೃದ್ಧಿಗೆ ಕಾರಣರಾದ ಬೇರೆ ನೂರಾರು ಜನರ ಉದಾಹರಣೆಗಳು ನಮ್ಮಲ್ಲಿವೆ. ಕೊಯಮತ್ತೂರಿನ ಸಮೀಪದ ಒಡಂತ್ತುರೈ ಗ್ರಾಮ ತನ್ನ ಬಿಸಿಲಿನಿಂದ ಬರುವ ವಿದ್ಯುತ್ತನ್ನೇ ಮಾರಾಟ ಮಾಡುತ್ತ ಗ್ರಾಮಪಂಚಾಯತನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಆಮಿರ್ ಖಾನ್ ಆರಂಭಿಸಿದ ವಾಟರ್ ಕಪ್ ಮಳೆಕೊಯ್ಲಿನ ಸ್ಪರ್ಧೆಯಿಂದಾಗಿ ಮಹಾರಾಷ್ಟ್ರದಲ್ಲಿ ಅನೇಕ ಹಳ್ಳಿಗಳಲ್ಲಿ ಜಲ ಸಂವರ್ಧನೆ ಆಗಿದ್ದು, ಊರು ಬಿಟ್ಟು ಹೋದವರು ಮರಳಿ ಬರುತ್ತಿದ್ದಾರೆ. ಟ್ಯಾಂಕರ್ ನೀರನ್ನೇ ಆಧರಿಸಿದ್ದ ಬರಪೀಡಿತ ಹಳ್ಳಿಗಳು ಈಗ ತಮ್ಮ ಬಳಿಯ ಹೆಚ್ಚುವರಿ ನೀರನ್ನು ನಗರಕ್ಕೂ ಪೂರೈಸಲು ಮುಂದಾಗಿವೆ. ಇಂಧನ ವನಗಳನ್ನು ಸೃಷ್ಟಿಸಿ ನಗರಗಳಿಗೆ ಬಯೊಡೀಸೆಲ್ಲನ್ನೂ ಒದಗಿಸುವ ಕನಸು ಕಾಣುತ್ತಿದ್ದಾರೆ.

ಇಂಥ ಸ್ವಾವಲಂಬಿ ಗ್ರಾಮಗಳ ಒಂದು ಉದಾಹರಣೆಯೂ ಸರಕಾರದ ಗಮನಕ್ಕೆ ಬರಲೇ ಇಲ್ಲವೆ? ಗ್ರಾಮೀಣ ಜಲಸಂಪತ್ತನ್ನು ಹೆಚ್ಚಿಸುವ ಸರಳ ವಿಧಾನ ಅದಕ್ಕೆ ಗೊತ್ತೇ ಇಲ್ಲವೆ?
ಸರಕಾರ ಮನಸ್ಸು ಮಾಡಿದರೆ, ತಾಲ್ಲೂಕು ಮಟ್ಟದಲ್ಲೇ ಉತ್ತಮ ಗುಣಮಟ್ಟದ ಸಾಬೂನು, ಟೂಥ್ಪೇಸ್ಟ್, ಸೊಳ್ಳೆಪರದೆ, ಸೊಳ್ಳೆಬತ್ತಿ, ಶಾಂಪೂ, ಸುಗಂಧ ತೈಲ, ಪೇಯ, ಪ್ಯಾರಾಸಿಟೆಮಾಲ್, ಆಯುರ್ವೇದ ಔಷಧಗಳು, ಅಷ್ಟೇಕೆ ಗ್ರಾಮಗಳಿಗೆ ಬೇಕಾದ ಪ್ಲಾಸ್ಟಿಕ್ ಚಪ್ಪಲಿಗಳಿಂದ ಹಿಡಿದು ಕೃಷಿ ಸಲಕರಣೆ, ರಸಗೊಬ್ಬರಗಳ ಉತ್ಪಾದನೆಗೆ ಪ್ರೋತ್ಸಾಹ ನೀಡಬಹುದಿತ್ತು.

ಇವನ್ನೆಲ್ಲ ಬೃಹತ್, ನಗರಕೇಂದ್ರಿತ ಉದ್ಯಮಗಳ ಮುಷ್ಟಿಯಿಂದ ತಪ್ಪಿಸಿ ತಾಲ್ಲೂಕು ಮಟ್ಟಕ್ಕೆ ತಂದು ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಮಾಡಿ, ವಾಣಿಜ್ಯ ರಂಗದ ಅಸಲೀ ಸ್ವಾವಲಂಬನೆ ಸಾಧಿಸಬಹುದಿತ್ತು. ಅದರ ಬದಲಿಗೆ ಖನಿಜ ಮತ್ತು ಕಲ್ಲಿದ್ದಲ ಗಣಿಗಾರಿಕೆಗೆ ಹೆಬ್ಬಾಗಿಲು ತೆರೆಯಲಿದೆ.

ಕಲ್ಲಿದ್ದಲು ಎಂಬುದೇ ಮಹಾ ವಿಷವೃತ್ತ. ನಮ್ಮ ಎಲ್ಲ ಕಲ್ಲಿದ್ದಲ ನಿಕ್ಷೇಪಗಳೂ ಛತ್ತೀಸಗಢ, ಝಾರ್ಖಂಡ್, ಬಿಹಾರ್‌ನ ದಟ್ಟ ಅರಣ್ಯಗಳಲ್ಲಿವೆ. ಅಲ್ಲಿ ಆದಿವಾಸಿಗಳೂ ಮೂಲನಿವಾಸಿಗಳೂ ಇದ್ದಾರೆ. ಅವರನ್ನೆಲ್ಲ ಗುಡಿಸಿ ಒತ್ತಿ, ಜೀವಲೋಕವನ್ನು ಧ್ವಂಸ ಮಾಡಿ, ತೆರೆದ ಗಣಿಗಳ ಮೂಲಕ ಕಲ್ಲಿದ್ದಲನ್ನು ಸ್ಫೋಟಿಸಿ, (ಚಿತ್ರವನ್ನು ಗಮನಿಸಿ) ನೂರಾರು ಉಷ್ಣವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೆ ಹೊಮ್ಮುವ ಕಾರ್ಬನ್ ಡೈಆಕ್ಸೈಡ್‌ ಇಡೀ ಜಗತ್ತಿಗೇ ಮಾರಕ.

ಹಾರುಬೂದಿ, ಸೆಕೆ ಹೆಚ್ಚಳ, ಜಲಮಾಲಿನ್ಯ ಒಂದಲ್ಲ, ಎರಡಲ್ಲ. ಅಲ್ಲಿಂದ ಪಡೆದ ವಿದ್ಯುತ್ತು ನಗರಗಳ ಮಾಲ್‌ಗಳಿಗೆ.ಮತ್ತು ತರಾವರಿ ಯಂತ್ರಗಳಿಗೆ, ಕೊಳ್ಳುಬಾಕ ಶೋಕಿ ವಸ್ತುಗಳ ಉತ್ಪಾದನೆಗೆ ಹೋಗುತ್ತದೆ. ಅದರ ಲಾಭವೆಲ್ಲ ತಿರ್ಗಾ ಕೋಟ್ಯಧೀಶ ಉದ್ಯಮಿಗಳಿಗೆ.

ನಿಸರ್ಗ ಸಂಪತ್ತನ್ನು ಹೀಗೆ ಲೂಟಿ ಮಾಡಲು ದೊಡ್ಡ ಕಂಪನಿಗಳಿಗೆ ಅನುವು ಮಾಡಿಕೊಡಲೆಂದೇ ತೆರಿಗೆದಾರರ 50 ಸಾವಿರ ಕೋಟಿ ಮೀಸಲಿಡುವುದಾಗಿ ಸರಕಾರ ಘೋಷಿಸಿದೆ. ಅದಕ್ಕೆಂದು ಪರಿಸರ ಸಂರಕ್ಷಣೆಯ ಬಿಗಿ ಕಾನೂನುಗಳನ್ನು ಸಡಿಲ ಮಾಡುವ ಸಿದ್ಧತೆ ಆಗಲೇ ನಡೆದಿದೆ.

ನಿಸರ್ಗದ ದುರಂತ ಕತೆ ಹೀಗೆ. ಹಾಗಿದ್ದರೆ ಮನುಷ್ಯರ ಕತೆ? ಈ ರಣವೈದ್ಯ ಮಾಡಿದರೆ 40 ಕೋಟಿ ಬಡ, ಕಡುಬಡವರ ಹಾಗು ಆದಿವಾಸಿಗಳ ಸ್ಥಿತಿಗತಿ ಉತ್ತಮಗೊಂಡೀತೆ? ಅದೂ ಇಲ್ಲ.
ಮೂಲ ನಿವಾಸಿಗಳಿಗೆ ಅರಣ್ಯಾಧಾರಿತ ಉದ್ಯೋಗ ಕೊಡಲೆಂದು 6000 ಕೋಟಿ ಮೀಸಲಿದೆಯಂತೆ. ಅದರ ಕತೆ ಕೇಳಿ. ಅದು ಖಾಸಗಿಯ ಕಂಪನಿಗಳ ಜಂಟಿ ಯೋಜನೆಯಂತೆ. ಅಂದರೆ ಅರಣ್ಯಗಳಿಗೂ ಕೋಟ್ಯಧೀಶರು ಲಗ್ಗೆ ಇಡಲಿದ್ದಾರೆ. ಮೂಲನಿವಾಸಿಗಳ ಜಮೀನನ್ನು ಮುಗಿಸಿದ ನಂತರ ಮುಂದೇನು ಆದೀತೆಂದು ನಾವು ಊಹಿಸಬಹುದು.

ಆದಿವಾಸಿಗಳ ಕಲ್ಯಾಣವೇ ಮುಖ್ಯ ಗುರಿಯಾಗಿದ್ದಿದ್ದರೆ ಈಗಿರುವ ನರೇಗಾ ಸ್ಕೀಮನ್ನೇ ಸುಧಾರಿಸಿ ಅವರಿಗೂ ವಿಸ್ತರಿಸಬಹುದಿತ್ತು. ಗಿಡ ನೆಡುವ, ಬೇಲಿ ಕಂದಕಗಳಂಥ ಭದ್ರತಾ ಕೆಲಸವನ್ನು ಅವರೇ ಮಾಡಬಹುದಿತ್ತು. ಹಳ್ಳಿಗಳಲ್ಲೂ ನರೇಗಾ ದುಡಿಮೆಯ ಅವಧಿಯನ್ನು ಈಗಿನ 100 ದಿನಗಳ ಬದಲು 200-300 ಅಥವಾ ಅಗತ್ಯವಿದ್ದಷ್ಟು ದಿನಗಳಿಗೆ ವಿಸ್ತರಿಬಹುದಿತ್ತು. ಅದರತ್ತ ಆದ್ಯತೆಯೇ ಇಲ್ಲ.

ಅಷ್ಟೊಂದು ಜನರು ಹಳ್ಳಿಗಳಿಗೆ ಹಿಂದಿರುಗಿದ್ದಾರೆ. ಅವರಿಂದ ಎಷ್ಟೊಂದು ಗ್ರಾಮೀಣ ಅಭಿವೃದ್ಧಿಯ ಕೆಲಸ ಮಾಡಿಸಬಹುದಿತ್ತು. ಹಳ್ಳಿಗಳಿಗೆ ಹಿಂದಿರುಗಿದ ಆ ನತದೃಷ್ಟರಿಗೆ ಯಾವ ನೆರವೂ ಇಲ್ಲ. ನಗರ ನಿರ್ಮಾಣದಲ್ಲಿ ತೊಡಗಿದ್ದ ಅವರಲ್ಲಿ ಅನೇಕರು ಹಿಂದೆಲ್ಲ ಚುನಾವಣೆ ಬಂದಾಗ ತಮ್ಮದೇ ಖರ್ಚಿನಲ್ಲಿ ಊರಿಗೆ ಹೋಗಿ ಮತ ಹಾಕಿ ಈ ಸರಕಾರವನ್ನು ನಿಲ್ಲಿಸಿದವರು. ಪ್ರಧಾನಿಯವರ ಒಂದು ಅವಸರದ ಲಾಕ್‌ಡೌನ್‌ ಘೋಷಣೆಯಿಂದಾಗಿ ಇಡೀ ಜಗತ್ತೇ ಕಂಬನಿ ಮಿಡಿಯುವಂಥ ದುರ್ದೆಸೆಗೆ ಈಡಾದವರು. ಅವರ ಕೈ ಹಿಡಿಯುವ ಬದಲು ಬಹುಕೋಟ್ಯಧೀಶರ ಕೈ ಹಿಡಿಯಲು ಸರಕಾರ ಹೊರಟಿದೆ.

ದೇಶದ 20 ಕೋಟಿ ಮಹಿಳೆಯರ ಜನ್‌ಧನ್ ಖಾತೆಗೆ ತಿಂಗಳಿಗೆ 500 ರೂ. ಜೊತೆಗೆ 80 ಕೋಟಿ ಜನರಿಗೆ 6 ಕಿಲೊ ಧಾನ್ಯವನ್ನು ಮೂರು ತಿಂಗಳ ಅವಧಿಗೆ ಕೊಡುವುದಾಗಿ ಸರಕಾರ ಮಾರ್ಚ್‌ನಲ್ಲಿ ಹೇಳಿತ್ತು. ಅದನ್ನು ಇನ್ನೂ ಮೂರು ತಿಂಗಳಿಗೆ ವಿಸ್ತರಿಸಬಹುದಿತ್ತು. ಈ ತೀರಾ ಜುಜುಬಿ ಸಹಾಯದ ಮೊತ್ತವನ್ನು ಹೆಚ್ಚಿಸಬಹುದಿತ್ತು. ಹೆಚ್ಚಿಸುವುದು ಹಾಗಿರಲಿ, ಸರಕಾರದ್ದೇ ದಾಖಲೆಗಳ ಪ್ರಕಾರ ಈ ನೆರವೂ ಶೇ. 25ರಷ್ಟು ಜನರಿಗೆ ಮಾತ್ರ ತಲುಪಿದೆ. ಕೇವಲ 110 ಲಕ್ಷ ಟನ್ ಧಾನ್ಯ ಮಾತ್ರ ವಿತರಣೆಯಾಗಿದೆ.

ಹಾಗೆಂದು ನಮ್ಮ ದೇಶ ಅಷ್ಟೊಂದು ದರಿದ್ರ ಸ್ಥಿತಿಯಲ್ಲೇನೂ ಇಲ್ಲ. ತಜ್ಞರ ಲೆಕ್ಕಾಚಾರದ ಪ್ರಕಾರ ಕೆಲಸ ಕಳೆದುಕೊಂಡವರಿಗೆ ತಿಂಗಳಿಗೆ 7 ಸಾವಿರ ನಗದು ಮತ್ತು ದೇಶದ ಶೇ. 80ರಷ್ಟು ಜನಕ್ಕೆ ತಿಂಗಳಿಗೆ ಹತ್ತು ಕಿಲೊ ಧಾನ್ಯದಂತೆ ಆರು ತಿಂಗಳವರೆಗೆ ಉಚಿತವಾಗಿ ಕೊಟ್ಟಿದ್ದರೂ ನಮ್ಮ ಜಿಡಿಪಿಯ ಕೇವಲ 3%ರಷ್ಟು ವೆಚ್ಚವಾಗುತ್ತಿತ್ತು. ಅದನ್ನಂತೂ ಮಾಡಲಿಲ್ಲ. ತನ್ನ ಬಹುತೇಕ ವೈಫಲ್ಯಗಳಿಗೆ ರಾಜ್ಯಗಳನ್ನು ದೂರುವುದನ್ನು ಬಿಟ್ಟು ಸರಕಾರ ಏನನ್ನೂ ಮಾಡಲಿಲ್ಲ. ರಾಜ್ಯಗಳಿಗೂ ಸಿಗಬೇಕಾದ ಧನಸಹಾಯವನ್ನು ಪೂರ್ತಿ ನೀಡಲಿಲ್ಲ.

ಈಗ ಟ್ರಾಂಚ್ 3ರ ಕತೆ ಕೇಳಿ.
ಸಣ್ಣ ಮತ್ತು ಮಧ್ಯಮ ಉದ್ಯಮ(MSME)ಗಳು ಚೇತರಿಸಿಕೊಳ್ಳಲೆಂದು 3.7 ಲಕ್ಷ ಕೋಟಿ ಸಾಲ ಕೊಡುವುದಾಗಿ ಸರಕಾರ ಹೇಳಿದೆ. ಅದು ಆಮೇಲಾಗಲಿ, ಈವರೆಗೆ ಸಂದಾಯವಾಗಬೇಕಿದ್ದ 5 ಲಕ್ಷ ಕೋಟಿ ಬಾಕಿ ಹಣವನ್ನು ಮೊದಲು ಕೊಡ್ರಪ್ಪಾ ಎಂದು MSME ಗಳು ಕೇಳುತ್ತಿವೆ. ಅದಂತೂ ಬಾಕಿ ಇದೆ. ಈ ಹೊಸ ಸಾಲವನ್ನು ಪಡೆದು ಉತ್ಪಾದನೆ ಆರಂಭಿಸೋಣವೆಂದರೆ ಕಾರ್ಮಿಕರು ಎಲ್ಲಿದ್ದಾರೆ? ಅಂದಾಜು 12 ಕೋಟಿ ಕಾರ್ಮಿಕರು ಕೆಲಸ ಕಳೆದುಕೊಂಡು ತಂತಮ್ಮ ಹಳ್ಳಿಗಳಿಗೆ ಹೋಗಿದ್ದಾರೆ.

ಅವರು ಮರಳಿ ಬಾರದಂತೆ ಮಾಡಲು ಹೊಸ ಕಾರ್ಮಿಕ ನೀತಿಗಳನ್ನು ಜಾರಿಗೆ ತರಲು ಸರಕಾರ ಹೊರಟಿದೆ. ಕೆಲಸಗಾರರ ಹಕ್ಕುಗಳನ್ನೇ ಮೊಟಕುಗೊಳಿಸಿ ಅವರ ದುಡಿಮೆಯ ಅವಧಿಯನ್ನು 50% ಜಾಸ್ತಿ ಮಾಡುತ್ತಾರಂತೆ. ಸರಿ, ಕಾರ್ಮಿಕರು ಹೇಗೋ ಬಂದು ಉತ್ಪಾದನೆ ಆರಂಭಿಸಿದರೂ ಫ್ಯಾಕ್ಟರಿಯ ಉತ್ಪನ್ನಗಳನ್ನು ಖರೀದಿಸಲು ಜನರ ಬಳಿ ಹಣ ಎಲ್ಲಿದೆ? ಅದಕ್ಕೆ ಈಗ ಟ್ರಾಂಚ್‌ 4ನ್ನು ಹಣಕಾಸು ಸಚಿವೆ ಘೋಷಣೆ ಮಾಡಿದೆ.

ಹಣದ ಚಲಾವಣೆ ಹೆಚ್ಚಿಸಲೆಂದೇ ಎಗ್ಗಿಲ್ಲದ ಗಣಿಗಾರಿಕೆ, ಹೊಸ ವಿಮಾನ ನಿಲ್ದಾಣ ನಿರ್ಮಾಣ, ರಕ್ಷಣಾ ಸಾಮಗ್ರಿ ಉತ್ಪಾದನೆ, ಬಾಹ್ಯಾಕಾಶ ಎಲ್ಲವನ್ನೂ ಖಾಸಗಿ ಕಂಪನಿಗಳಿಗೆ ವಹಿಸುತ್ತಾರಂತೆ. ಲಾಕ್‌ಡೌನ್‌ ಸಡಿಲವಾಗುವ ಮೊದಲೇ ದೇಶದ ಹಿತಾಸಕ್ತಿಯನ್ನು ಕಾಯಬೇಕಿದ್ದ ನಿಯಮಗಳನ್ನೇ ಸಡಿಲ ಮಾಡಲಾಗುತ್ತಿದೆ.

ಅದಕ್ಕೇ, ‘ವಲಸಿಗರಿಗೆ ಮನೆ ತಲುಪಲು ಸಾಧ್ಯವಾಗುತ್ತಿಲ್ಲ; ಬಾಹ್ಯಾಕಾಶಕ್ಕೆ ಹೋಗಲು ಧನಿಕರಿಗೆ ಅನುಕೂಲ ಮಾಡುತ್ತಾರಂತೆ’ ಎಂದು ಜೈರಾಮ್ ರಮೇಶ್ ಕುಟುಕಿದ್ದಾರೆ. ಯಾರೆಷ್ಟೇ ಕುಟಕಿದರೂ ಪ್ರಭುತ್ವಕ್ಕೆ ವಂದಿಮಾಗಧರ ಮತ್ತು ಬಹುಕೋಟ್ಯಧೀಶರ ಭೋಪರಾಕ್ ಮಾತ್ರ ಕೇಳಿಸುತ್ತದೆ. ಕಂದಕಕ್ಕೆ ಕುಸಿದವರ ಆಕ್ರಂದನ ಮಾತ್ರ ಕೇಳಿಸುತ್ತಿಲ್ಲ.

ಅರಣ್ಯವಾಸಿಗಳನ್ನು ಹೊರಗಟ್ಟುವ ಗಣಿಗುತ್ತಿಗೆದಾರರ ಷಡ್ಯಂತ್ರದ ವಿರುದ್ಧ ಆದಿವಾಸಿಗಳ ಒಂದು ಸೊಗಸಾದ ಪ್ರತಿಭಟನಾ ಲಾವಣಿಯನ್ನು ಈ ಕೊಂಡಿಯಲ್ಲಿದೆ: ಕ್ಲಿಕ್ ಮಾಡಿ ನೋನೋಡಿ

https://www.youtube.com/watch?v=sFmsl7KrZn8

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.

ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending