ದಿನದ ಸುದ್ದಿ
ಕೋವಿಡ್ -19 | ಲಾಕ್ ಡೌನ್ ನಿಂದ ಉಂಟಾಗುವ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಮುನ್ನೋಟ..!
- ಕ್ರಾಂತಿರಾಜ್ ಒಡೆಯರ್ ಎಂ, ಸಹಾಯಕ ಪ್ರಾಧ್ಯಾಪಕರು, ಮೈಸೂರು
ಸಂದರ್ಭ 1
ಬೇರೆ ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ವಲಸೆ ಕಾರ್ಮಿಕರು ಕೋವಿಡ್ 19 ಲಾಕ್ ಡೌನ್ ನಿಂದ ಕೆಲಸವಿಲ್ಲದೇ ಜೀವನೋಪಾಯ ಕಷ್ಟವಾಗಿ, ತಮ್ಮ ತಮ್ಮ ಊರುಗಳಿಗೆ ಹೊರಡಲು ರೈಲ್ವೆ ಹಾಗು ಬಸ್ಸು ನಿಲ್ದಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸೇರಿದ್ದ ವಲಸೆ ಕಾರ್ಮಿಕರ ಕುರಿತು ನಮ್ಮ ರಾಜ್ಯದ ಮುಖ್ಯಮಂತ್ರಿ ಯೆಡಿಯೂರಪ್ಪನವರು, ಕಾರ್ಮಿಕರು ವಾಪಸು ಹೋಗದಂತೆ ಕಳಕಳಿಯ ಮನವಿ ಮಾಡಿಕೊಂಡರೂ, ಮುಖ್ಯಮಂತ್ರಿಗಳ ಮನವಿಗೆ ಸ್ಪಂಧಿಸದ ವಲಸೆ ಕಾರ್ಮಿಕರು, ತಾವು 2 ತಿಂಗಳಿನಿಂದ ಅನುಭವಿಸುತ್ತಿರುವ ಯಾತನೆ ಸಾಕು.
ಈಗಲಾದರೂ ತಮ್ಮ ತಮ್ಮ ಊರುಗಳಿಗೆ ಸೇರಿಕೊಳ್ಳೋಣ ಎಂದು ಕೆಲವರು ಈಗಾಗಲೇ ತಮ್ಮ ಊರು ಸೇರಿಕೊಂಡಿದ್ದರೆ, ಹಲವರು ತಮ್ಮ ಗೂಡು ಸೇರಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.
ಸಂದರ್ಭ 2
ಒಂದು ವಾರದ ಹಿಂದೆ ಟಿ ವಿ ಯಲ್ಲಿ ನೋಡಿದ್ದು. ಮುಂಬೈಯಿಂದ ಉತ್ತರ ಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದ ವಲಸೆ ಕಾರ್ಮಿಕನಿಗೆ ಪತ್ರಕರ್ತ ಕೇಳಿದ ಪ್ರಶ್ನೆ, “ಸರ್ಕಾರ ನಿಮಗಾಗಿ ರೈಲಿನ ವ್ಯವಸ್ಥೆ ಮಾಡಿದೆ.
ನೀವು ಏಕೆ ನಡೆದು ಹೋಗ್ತಿದ್ದೀರಾ? ಲಾಕ್ ಡೌನ್ ಮುಗಿದ ಮೇಲೆ ವಾಪಸ್ ಇಲ್ಲಿಗೆ ಬರುತ್ತೀರಾ?” ಎಂಬ ಹಲವಾರು ಪ್ರಶ್ನೆಗಳಿಗೆ ವಲಸೆ ಕಾರ್ಮಿಕ ಕೊಟ್ಟ ಉತ್ತರ, “ನಮಗೆ ಅಕ್ಷರ ಜ್ಞಾನ ಇಲ್ಲ, ಈ ಮೊಬೈಲ್ ಬಳಸಲು ಸಹ ಬರಲ್ಲ, ಅವರ ಇವರ ಬಳಿ ಕಾಡಿ ಬೇಡಿ ಅನ್ ಲೈನ್ ಅರ್ಜಿ ಸಲ್ಲಿಸಿದ್ದೆ ಅದು ರಿಜೆಕ್ಟ್ ಆಗಿದೆ, ಮತ್ತೆ ಯಾರು ಅರ್ಜಿ ಹಾಕಲು ಸಹಾಯ ಮಾಡಲಿಲ್ಲ, ಅದಕ್ಕೆ ನಡೆದುಕೊಂಡೆ ಹೋಗ್ತಿದ್ದಿನಿ.ಊರಲ್ಲಿ ಅಪ್ಪನಿಗೆ ವ್ಯವಸಾಯಕ್ಕೆ ಸಹಾಯ ಮಾಡಿಕೊಂಡು ಇರ್ತೀನಿ ವಿನಾ ಇಲ್ಲಿ ಬಂದು ಇನ್ನೊಮ್ಮೆ ನರಕಯಾತನೆ ಅನುಭವಿಸಲು ಇಷ್ಟ ಇಲ್ಲ”.
ಸಂದರ್ಭ 3
ಮೈಸೂರಿನ ಹೆಮ್ಮೆಯ ಉದ್ದಿಮೆಗಳಾದ ಸಥರನ್ ಸ್ಟಾರ್ ಹೋಟೆಲ್ ಹಾಗು ರೀಡ್ ಅಂಡ್ ಟೇಲರ್ ಕಂಪನಿಗಳು ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿಯು ಅನಿಶ್ಚಿತತೆಯಿಂದ ಕೂಡಿದ್ದು, ಮುಂದೇನು ಮಾಡಬೇಕೆಂಬ ದಾರಿ ತೋಚದೆ, ಉದ್ದಿಮೆಗಳನ್ನು ಮುಚ್ಚಿದ್ದು, ಸುಮಾರು 2000 ಕಾರ್ಮಿಕರು ಬೀದಿಪಾಲಾದಂತಾಗಿದೆ.
ಈ ಸಮಸ್ಯೆ ಕೇವಲ ವಲಸೆ ಕಾರ್ಮಿಕರು ಹಾಗು ಕೆಲವು ಕಂಪೆನಿಗಳದ್ದಲ್ಲ. ದೇಶದ ಎಲ್ಲ ಆರ್ಥಿಕ ವಲಯಗಳಿಗೂ ಹರಡಿರುವ ಸಮಸ್ಯೆ. ಭಾರತದಲ್ಲಿ ಸರಿ ಸುಮಾರು 67% ರಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಹಲವು ಸಂಸ್ಥೆಗಳ ಸಮೀಕ್ಷೆಗಳು ಹೇಳುತ್ತವೆ.
ಈ ಸಂದರ್ಭದಲ್ಲಿ ಆಗಿರುವ ಬದಲಾವಣೆಗಳಿಂದ ದೇಶದಲ್ಲಿ ದೊಡ್ಡ ಮಟ್ಟದ ಆರ್ಥಿಕ ಹಾಗು ಸಾಮಾಜಿಕ ಸಮಸ್ಯೆಗಳು ಉಂಟಾಗಲಿದ್ದು, ನಮ್ಮ ಆಡಳಿತ ವ್ಯವಸ್ಥೆಯು ಸಮಸ್ಯೆ ಹೋಗಲಾಡಿಸಲು ಸರಿಯಾದ ಮಾರ್ಗೋಪಾಯಗಳನ್ನು ಕಂಡುಕೊಳ್ಳದ್ದಿದ್ದರೆ, ದೇಶವು ಸರಿಪಡಿಸಲಾಗದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಲಿದೆ. ಕೋವಿಡ್ 19 ಲಾಕ್ ಡೌನ್ ನಿಂದ ದೇಶದ ಆರ್ಥಿಕ ವಲಯಗಳ ಮೇಲೆ ಉಂಟಾಗುವ ಸಾಮಾಜಿಕ ಹಾಗು ಆರ್ಥಿಕ ಪರಿಣಾಮಗಳನ್ನು ಅವಲೋಕಿಸುವುದಾದರೆ..
ಸಣ್ಣ, ಮಧ್ಯಮ ಹಾಗು ಬೃಹತ್ ಉದ್ದಿಮೆಗಳ ಮೇಲೆ ಉಂಟಾಗುವ ಪರಿಣಾಮ
ಲಾಕ್ ಡೌನ್ ನಿಂದ ಉದ್ದಿಮೆಗಳು ಸಂಪೂರ್ಣ ಮುಚ್ಚಿದ್ದು, ಐಟಿ, ಬಿಟಿ ವಲಯಗಳೇನೋ ಕಾರ್ಮಿಕರಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವ ಸೌಲಭ್ಯವನ್ನು ಕಲ್ಪಿಸಿದ್ದು, ಈ ವ್ಯವಸ್ಥೆ ಇನ್ನೂ 6 ತಿಂಗಳು ಮುಂದುವರೆಯುವ ಮುನ್ಸೂಚನೆಯನ್ನು ಹಲವು ಕಂಪನಿಗಳು ನೀಡಿವೆ.
ಆದರೆ ಉತ್ಪಾದನಾ ವಲಯವು ಬೇಡಿಕೆ ಇಲ್ಲದೇ, ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದು, ಈ ವಲಯದ ಮುಂದಿನ ದಿನಗಳು ಅನಿಶ್ಚಿತತೆಯಿಂದ ಕೂಡಿದೆ. ಕೆಲಸ ಕಳೆದುಕೊಂಡ ಕಾರ್ಮಿಕರಲ್ಲಿ ಹಲವರು ಈಗಾಗಲೇ ತಮ್ಮ ತಮ್ಮ ಊರುಗಳನ್ನು ಸೇರಿಕೊಂಡಿದ್ದು, ಇನ್ನೂ ಹಲವರು ತಮ್ಮ ಊರು ಸೇರಿಕೊಳ್ಳುವ ಪ್ರಕ್ರಿಯೆಯಲ್ಲಿದ್ದು, ತಮ್ಮ ಜೀವನೋಪಾಯಕ್ಕೆ ತಮ್ಮ ತಮ್ಮ ಹಳ್ಳಿಗಳಲ್ಲೇ ಹಲವು ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದು, ಮುಂದೊಂದು ದಿನ ದೇಶದ ಆರ್ಥಿಕ ವ್ಯವಸ್ಥೆ ಸರಿಹೋದರೂ, ಇವರು ತಮ್ಮ ಹಳೇ ಕೆಲಸಗಳಿಗೆ ಮರಳುವುದು ಕಷ್ಟಸಾಧ್ಯ.
ಇದರಿಂದ ಈ ವಲಯಕ್ಕೆ ಕಾರ್ಮಿಕರ ಕೊರತೆ ಉಂಟಾಗಲಿದ್ದು, ಉದ್ದಿಮೆಗಳಿಗೆ ತಗಲುವ ಕಾರ್ಮಿಕರ ವೆಚ್ಚ ಹೆಚ್ಚಾಗಲಿದ್ದು, ಇದರಿಂದ ಈ ವಲಯ ತಯಾರಿಸುವ ಉತ್ಪನ್ನಗಳ ಬೆಲೆ ಹೆಚ್ಚಾಗಲಿದ್ದು, ಗ್ರಾಹಕರ ಮೇಲೆ ಬೆಲೆ ಏರಿಕೆಯ ಬರೆ ಬೀಳುವುದು ಗ್ಯಾರಂಟಿ. ಮತ್ತೊಂದು ಸಮಸ್ಯೆ ಎಂದರೆ, ಕಾರ್ಖಾನೆಗಳ ಮಾಲೀಕರು ಈಗಾಗಲೇ ಅನುಭವಿಸಿರುವ ನಷ್ಟವನ್ನು ಸರಿದೂಗಿಸಿಕೊಳ್ಳಲು, ಬೇರೆ ದಾರಿ ತೋಚದೆ ಇದೇ ಕೆಲಸದಲ್ಲಿ ಉಳಿಯುವ ಕಾರ್ಮಿಕರಿಂದ ಕಡಿಮೆ ಸಂಬಳಕ್ಕೆ ಹೆಚ್ಚು ಕೆಲಸ ಮಾಡಿಸಿ ಶೋಷಣೆ ಮಾಡುವ ದಿನಗಳನ್ನು ಶೀಘ್ರದಲ್ಲೇ ನೋಡುತ್ತೇವೆ.
ಶಿಕ್ಷಣ ವಲಯದ ಮೇಲೆ ಉಂಟಾಗುವ ಪರಿಣಾಮ
ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿನ ಬೇಡಿಕೆ ಕುಂಠಿತದಿಂದಾಗಿ ಉದ್ದಿಮೆಗಳು ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದ್ದು, ಬೇಡಿಕೆ ಮರಳಲು ಇನ್ನೂ 3 ರಿಂದ 4 ವರ್ಷಗಳು ಬೇಕಾಗಬಹುದು. ಈ ಸಂದರ್ಭದಲ್ಲಿ, ಪ್ರಸ್ತುತ ವರ್ಷದಲ್ಲಿ ಹಾಗೂ ಮುಂದಿನ ಕೆಲವು ವರ್ಷಗಳಲ್ಲಿ ಪದವಿ ಪಡೆದು ಉದ್ಯೋಗದ ಕನಸು ಕಟ್ಟಿಕೊಳ್ಳುವ ವಿದ್ಯಾರ್ಥಿಗಳನ್ನು ನೆನೆಸಿಕೊಂಡರೆ ಅಯ್ಯೋ ಎನಿಸುತ್ತದೆ. ಇವರು ಉದ್ಯೋಗ ಪಡೆದು ಜೀವನದಲ್ಲಿ ನೆಲೆಯೂರುವ ದಿನಗಳು ಮುಂದೆ ಹೋದಷ್ಟು, ಇವರ ಸ್ವಾಭಿಮಾನದ ಜೀವನದ ಕನಸು, ಮದುವೆ ಆಸೆಗಳು ಮುಂದೂಡಲಾಗಿ, ಜೀವನದ ಸಹಜ ಪ್ರಕ್ರಿಯೆಗಳಿಗೆ ಹಾಗು ಹಣಕಾಸಿನ ಸಂಪಾದನೆಗೆ ಅಡ್ಡದಾರಿಯನ್ನು ಹಿಡಿಯಬಹುದಾದ ಸಂದರ್ಭ ಬರಬಹುದು.
ಸರ್ಕಾರ ನಿರ್ವಹಿಸಬೇಕಾದ ಪಾತ್ರ
ಜಾನ್ ಮೇನಾರ್ಡ್ ಕೇನ್ಸ್ ಎಂಬ ಇಂಗ್ಲೆಂಡ್ ದೇಶದ ಶ್ರೇಷ್ಠ ಆರ್ಥಿಕ ತಜ್ಞ ಅವನ The theory of Empolyment, Interest and Money ಹಾಗೂ The Role of the Government ಎನ್ನುವ ಪುಸ್ತಕದಲ್ಲಿ ದೇಶಗಳು ಆರ್ಥಿಕ ಸಂಕಷ್ಟದಲ್ಲಿ ಯಾವ ರೀತಿಯ ಆರ್ಥಿಕ ನೀತಿಗಳನ್ನು ರೂಪಿಸಬೇಕು ಎಂದು ಹೇಳುತ್ತಾ, “ಆರ್ಥಿಕ ದುಸ್ಥಿತಿಯಲ್ಲಿ ಆಳುವ ಸರ್ಕಾರಗಳು, ಯಾವುದಾದರೂ ಮೂಲಗಳಿಂದ ಹಣವನ್ನು ತಂದು ಆರ್ಥಿಕ ವ್ಯವಸ್ಥೆಯ ತಳ ಪದರಕ್ಕೆ (ಕುಟುಂಬಗಳಿಗೆ ಹಾಗು ಕಾರ್ಮಿಕ ಸಮೂಹ) ನೇರ ಹಂಚಬೇಕು.ಇದರಿಂದ ಕಾರ್ಮಿಕರನ್ನು ಅವರವರ ಕೆಲಸಗಳಲ್ಲಿ ಜೀವಂತವಾಗಿಟ್ಟುಕೊಳ್ಳುವುದಲ್ಲದೇ, ಉತ್ಪನ್ನಗಳಿಗೆ ಬೇಡಿಕೆಯನ್ನೂ ಹುಟ್ಟಿಸಬಹುದಾಗಿದ್ದು, ದೊಡ್ಡಮಟ್ಟದ ಆರ್ಥಿಕ ಕುಸಿತದಿಂದ ದೇಶವನ್ನು ರಕ್ಷಿಸಬಹುದು” ಎಂದು ಹೇಳುತ್ತಾನೆ. ಇಂದಿನ ಸಂದರ್ಭದಲ್ಲಿ ಜಾನ್ ಮೇನಾರ್ಡ್ ಕೇನ್ಸ್ ನ ಆರ್ಥಿಕ ಸಿದ್ಧಾಂತವು ಪ್ರಸ್ತುತವೆನಿಸುತ್ತದೆ.
ಆದರೆ ನಮ್ಮ ಸರ್ಕಾರದ ಆರ್ಥಿಕ ಪ್ಯಾಕೇಜ್ ನೋಡಿದಾಗ, ಕಡಿಮೆ ಪ್ರಮಾಣದ ಹಣಕಾಸಿನ ಪ್ಯಾಕೇಜ್ ಆರ್ಥಿಕ ವ್ಯವಸ್ಥೆಯ ಕೆಳಸ್ತರಕ್ಕೆ ಮೀಸಲಿಟ್ಟಿದ್ದು, ದೊಡ್ಡ ಮಟ್ಟದ ಹಣ ಮೇಲಿನ ಸ್ತರಕ್ಕೆ ಮೀಸಲಿಟ್ಟಿದೆ.
ಇದರಿಂದ ಇಂದಿನ ಆರ್ಥಿಕ ಸಮಸ್ಯೆ ಬಗೆಹರಿಯದು ಎಂಬುದು ನನ್ನ ಅನಿಸಿಕೆ. ಇಂದು ನಮಗೆ ಬೇಕಿರುವುದು “BOTTOM TO TOP ECONOMIC APPROACH” ಹೊರತು “TOP TO BOTTOM ECONOMIC APPROACH” ಅಲ್ಲ. ಆಳುವ ಸರ್ಕಾರಗಳು ಲಭ್ಯವಿರುವ ಆರ್ಥಿಕ ಸಿದ್ದಾಂತಗಳನ್ನು ಅಧ್ಯಯಿಸಿ ಸಂದರ್ಭಕ್ಕೆ ಸರಿಯಾದ ಆರ್ಥಿಕ ನೀತಿಗಳನ್ನು ರೂಪಿಸಬೇಕೆಂಬುದು ನನ್ನ ಅನಿಸಿಕೆ.
(ಲೇಖಕರು :ಕ್ರಾಂತಿರಾಜ್ ಒಡೆಯರ್ ಎಂ
ಸಹಾಯಕ ಪ್ರಾಧ್ಯಾಪಕರು
ವ್ಯವಹಾರ ನಿರ್ವಹಣಾ ವಿಭಾಗ
ಸೇಪಿಯೆಂಟ್ ಕಾಲೇಜು
ಮೈಸೂರು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


