ಅಂತರಂಗ
ಅರಿಮೆಯ ಅರಿವಿರಲಿ-55 : ಭಯಗಳು ಭಾವಗಳಾಗೆ
- ಯೋಗೇಶ್ ಮಾಸ್ಟರ್
ಆಲೋಚನೆಗಳಿಂದ ಭಾವನೆಗಳೋ ಅಥವಾ ಭಾವನೆಗಳಿಂದ ಆಲೋಚನೆಗಳೋ; ಚರ್ಚೆ ಒಂದೊಟ್ಟಿಗಿರಲಿ. ಆದರೆ ವ್ಯಕ್ತಿಯೊಬ್ಬನು ತನ್ನತನದ ಬದ್ಧತೆಯಿಂದ ತನಗೆ ಎದುರಾಗುವ ಸಂಗತಿ, ವ್ಯಕ್ತಿ ಮತ್ತು ಸನ್ನಿವೇಶಗಳನ್ನು ಹೇಗೆ ಗ್ರಹಿಸುತ್ತಾನೆ? ಅದು ಮುಖ್ಯ. ಆ ಗ್ರಹಿಕೆಯಿಂದಲೇ ಆಲೋಚನೆಗಳು ಮೂಡುವವು. ಭಾವನೆಗಳು ಉಂಟಾಗುವವು.
ಈಗ ಹುಟ್ಟುವ ಒಂದು ಬಗೆಯ ಆಲೋಚನೆಗೆ ಅಂದೆಂದೋ ಬಿತ್ತಿರುವ ಆಲೋಚನೆಯು ಬೀಜವಾಗಿ ಮೊಳೆದಿರುತ್ತವೆ. ಇರಲಿ, ಮನುಷ್ಯನ ಮೂಲ ಪ್ರವೃತ್ತಿಗಳು ಆಲೋಚನೆಗಳಿಗೆ ಪ್ರೇರೇಪಿಸುತ್ತವೆ. ಹಾಗೆಯೇ ಆಲೋಚನೆಗಳೂ ಆ ಪ್ರವೃತ್ತಿಗಳನ್ನು ಪ್ರೇರೇಪಿಸುತ್ತವೆ.
ಭಾವನೆಗಳು ಆಲೋಚನೆಗಳನ್ನು, ಆಲೋಚನೆಗಳು ಭಾವನೆಗಳನ್ನು, ಇವೆರಡೂ ಪ್ರವೃತ್ತಿಗಳನ್ನು, ಪ್ರವೃತ್ತಿಗಳು ಇವೆಲ್ಲವನ್ನೂ ಪ್ರೇರೇಪಿಸುತ್ತಿರುತ್ತವೆ. ಒಟ್ಟಾರೆ, ಮನಸ್ಸೆಂಬ ತರಂಗವಿದೆಯಲ್ಲಾ ಅದು ಎಲ್ಲದಕ್ಕೂ ವಾಹಕವಾಗುತ್ತದೆ, ಮಿಡಿಯುತ್ತದೆ ಮತ್ತು ಅಲೆಯಾಗುತ್ತದೆ.
ಆತಂಕಗಳ ಪ್ರಸಂಗಗಳು
ವೇದಿಕೆಯ ಮೇಲೆ ಮಾತಾಡಿ ರೂಢಿ ಇಲ್ಲದಿರುವಾಗ ಅಥವಾ ಮಾತಾಡುವ ವಿಷಯದಲ್ಲಿ ಗೊಂದಲ ಇರುವಾಗ ಅಥವಾ ಸ್ಪಷ್ಟತೆ ಇಲ್ಲದಿರುವಾಗ ಅಥವಾ ಬಹಳಷ್ಟು ಜನ ಸೇರಿರುವ ಸಭೆಯನ್ನು ಎದುರಿಸುವ ಭಯವಿರುವಾಗ ವೇದಿಕೆಗೆ ಹೋಗುವಾಗ ಅಥವಾ ಹೋಗಿ ನಿಂತಾದ ಮೇಲೆ ಹೊಟ್ಟೆಯಲ್ಲಿ ಏನೋ ಒಂದು ತರ ಆಗುತ್ತಿರುತ್ತದೆ.
ಕೆಲವೊಮ್ಮೆ ಧಾರಾಕಾರವಾಗಿ ಬೆವರು ಸುರಿಯುತ್ತಿರುತ್ತದೆ. ಮತ್ತೂ ಕೆಲವೊಮ್ಮೆ ಹೇಳಬೇಕಾದುದೆಲ್ಲಾ ಮರೆತೇ ಹೋಗತ್ತೆ. ನಾಲಿಗೆ ತೊದಲುತ್ತದೆ, ಗಂಟಲು ಒಣಗುತ್ತದೆ. ಕೈ ಕಾಲುಗಳು ನಡುಗುತ್ತಿರುತ್ತದೆ. ಹಾಗಾಗುವುದು ಏಕೆ?
ನಿಮ್ಮ ಮನೆಯವರೋ ಸ್ನೇಹಿತರೋ ಅದ್ಯಾವುದೋ ಸ್ಥಳಕ್ಕೆ ಹೋಗಿದ್ದಾರೆ. ನಿಮಗೆ ಆ ಸ್ಥಳದಲ್ಲಿ ದೊಡ್ಡ ಗಲಭೆಯಾಗಿದೆ, ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ, ವಾಹನಗಳಿಗೆ ಕಲ್ಲು ತೂರುತ್ತಿದ್ದಾರೆ ಎಂದೆಲ್ಲಾ ಸುದ್ಧಿ ಬರುತ್ತದೆ. ನೀವು ಸಂಪರ್ಕಿಸಲು ಯತ್ನಿಸಿದರೆ ನಿಮ್ಮವರ ಫೋನ್ ಸ್ವಿಚ್ ಆಫ್ ಆಗಿದೆ ಅಥವಾ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ ಎಂದು ಕೇಳುತ್ತಿರುತ್ತದೆ. ಆಗ ಹೊಟ್ಟೆಯಲ್ಲಿ ಸಂಕಟ ಪ್ರಾರಂಭವಾಗುತ್ತದೆ.
ಕೆಲವೊಮ್ಮೆ ಅದು ವಿಪರೀತಕ್ಕೆ ಹೋಗಿ ಮಲ ಮೂತ್ರ ವಿಸರ್ಜನೆಗೆ ಅವಸರವಾಗುತ್ತದೆ. ಒಮ್ಮೆ ಹೋಗಿ ಬಂದರೂ ಮತ್ತೆ ಮತ್ತೆ ಹೋಗುವಂತಾಗುತ್ತದೆ. ಏಕೆ?
ತಡೆಯಲಾರದಷ್ಟು ಬೇಸರವಾಗಿದೆ. ಕೋಪ ಬಂದಿದೆ ಅಥವಾ ಆತಂಕವಾಗಿದೆ ಎಂದರೆ ಉಸಿರಾಟ ವಿಪರೀತ ಏರಿಳಿಯುತ್ತಿರುತ್ತದೆ. ಬೆವರುತ್ತಿದೆ. ಕೈ ಕಾಲುಗಳು ನಡುಗುತ್ತವೆ. ಏನು ಮಾಡಬೇಕೆಂದು ತೋಚುವುದಿಲ್ಲ. ಹೀಗೇಕಾಗುತ್ತದೆ?
ನಮಗೆ ಇಷ್ಟವಾದವರೊಬ್ಬರು ಯಾವುದೋ ಊರಿನಿಂದ ಬರುತ್ತಿದ್ದಾರೆ. ನಮ್ಮ ಪ್ರೀತಿಪಾತ್ರರು ನಮಗಾಗಿ ಬರುತ್ತಾರೆ. ಯಾವುದೋ ಹಬ್ಬ. ಕೆಲಸಕ್ಕೆ ರಜೆ ಹಾಕಿ ಎಲ್ಲರೊಟ್ಟಿಗೆ ಮನೆಯಲ್ಲಿರುತ್ತೇವೆ. ಉತ್ಸಾಹ ಮತ್ತು ಆನಂದವಿರುವಾಗ ಮೈ ಮನಸ್ಸು ಪ್ರಫುಲ್ಲವಾಗಿರುತ್ತದೆ. ಇಷ್ಟಪಟ್ಟಿರುವ ಹೊಸ ಬಟ್ಟೆಯೊಂದನ್ನು ಹಾಕಿಕೊಂಡಾಗ ನಮ್ಮಲ್ಲಿ ಉಂಟಾಗುವ ಹುರುಪನ್ನು ಗಮನಿಸಿ.
ಅಂದು ಹೆಚ್ಚು ಕೆಲಸ ಮಾಡಿದರೂ, ಹೆಚ್ಚು ಹೆಚ್ಚು ಓಡಾಡಿದರೂ ಆಯಾಸವಿಲ್ಲ. ಅಂದೇನೋ ಹೊಸಬಲ. ಅದೆಲ್ಲೆಂದ ಬರುವುದು?
ಕೋಪ ಬರುವುದು, ಬೇಜಾರಾಗುವುದು, ಸಂತೋಷವಾಗುವುದು, ಭಯವಾಗುವುದು, ಆತಂಕವಾಗುವುದು; ಇವೆಲ್ಲವೂ ಮನಸ್ಸಿಗೆ ಮತ್ತು ಭಾವನೆಗಳಿಗೆ ಸಂಬಂಧಪಟ್ಟಿರುವುದು. ಆದರೆ ಅದರ ಪರಿಣಾಮವು ದೇಹದ ಮೇಲೂ ಆಗುತ್ತಿರುತ್ತದೆ. ಮನಸ್ಸಿನ ಅಧೀನ ದೇಹವೋ? ಅಥವಾ ದೇಹದ ಭಾಗವು ಮನಸ್ಸಿನದೋ? ಹೇಗಾದರೂ ಆಲೋಚಿಸಿ.
ಆದರೆ ಒಂದು ವಿಷಯ ನಿಜ. ಮನಸ್ಸು ಸಂತೋಷಗೊಂಡಾಗ ದೇಹದಲ್ಲಿ ಕೆಲವು ಬಗೆಯ ರಸಗಳನ್ನು ಉತ್ಪತ್ತಿ ಮಾಡುತ್ತದೆ. ಹಾಗೆಯೇ ಖೇದಗೊಂಡಾಗ, ದುಃಖಿತರಾದಾಗ, ಆತಂಕಗೊಂಡಾಗ, ಕೋಪಗೊಂಡಾಗಲೂ ಹಾಗೆಯೇ ಕೆಲವು ಬಗೆಯ ರಸಗಳು ಉತ್ಪತ್ತಿಯಾಗುತ್ತದೆ. ಹಾಗೆ ಉತ್ಪತ್ತಿಯಾದ ರಸಗಳ ರಾಸಾಯನಿಕ ಕ್ರಿಯೆಗಳು ದೇಹದ ಮೇಲೆ ಪರಿಣಾಮವನ್ನು ಬೀರುತ್ತದೆ. ಈ ರಸಗಳು ಹೆಚ್ಚುಹೆಚ್ಚಾಗಿ ಸ್ರವಿಸುತ್ತಿದ್ದರೆ, ರಾಸಾಯನಿಕ ಕ್ರಿಯೆಯು ತೀವ್ರವಾದರೆ ಸಹಜವಾಗಿ ದೇಹದ ಮೇಲೆಯೂ ಪರಿಣಾಮವನ್ನು ಬೀರುತ್ತದೆ.
ಆತಂಕ, ಉದ್ವೇಗ, ಉದ್ರೇಕಗಳು ಹೃದಯದ ಬಡಿತವನ್ನು ಏರಿಸುತ್ತದೆ. ಸಿಕ್ಕಾಪಟ್ಟೆ ವೇಗವಾಗಿ ಹೊಡೆದುಕೊಳ್ಳಲು ಆರಂಭಿಸುತ್ತದೆ. ರಕ್ತದ ಒತ್ತಡ ಏರುತ್ತದೆ. ರಕ್ತ ಸಂಚಲನ ವೇಗವಾಗುತ್ತದೆ. ವಾಕರಿಕೆ ಬರುವುದು, ಕೆಲವೊಮ್ಮೆ ವಾಂತಿಯಾಗುವುದೂ ಉಂಟು. ನಡುಕ, ಬೆವರುವಿಕೆ, ಬಾಯಿ ಒಣಗುವುದು, ಎದೆಯಲ್ಲಿ ನೋವು, ತಲೆ ನೋವು, ಹೊಟ್ಟೆಯಲ್ಲಿ ಹಿಂಡಿದಂತೆ ನೋವು ಮತ್ತು ಉಸಿರಾಟದಲ್ಲಿ ವಿಪರೀತವಾಗಿ ಏರಿಳಿತ.
ಮೆದುಳು ಆತಂಕವನ್ನು ಗ್ರಹಿಸಿ ಅಥವಾ ಉದ್ವೇಗಗೊಂಡು ದೇಹದ ಇತರ ಭಾಗಗಳಿಗೆ ತನ್ನ ಆತಂಕದ ಸಂದೇಶಗಳನ್ನು ಕಳುಹಿಸುತ್ತದೆ. ಅದರಂತೆ ದೇಹದ ಇತರ ಭಾಗಗಳೂ ಕೂಡಾ ವರ್ತಿಸುತ್ತವೆ. ಈ ಮನೋದೈಹಿಕ ವ್ಯತ್ಯಾಸವು ಬಹಳಷ್ಟು ಸಲ ಸಾಂದರ್ಭಿಕವಾಗಿ ಎದುರಿಸುವ ಸನ್ನಿವೇಶಕ್ಕೆ ಅನುಗುಣವಾಗಿ ಇರುತ್ತದೆ.
ಆಗ ಬರುವ ಶಾರೀರಿಕ ಸಮಸ್ಯೆ ಸನ್ನಿವೇಶವು ಬದಲಾಗುತ್ತಿದ್ದಂತೆ, ವಾತಾವರಣವು ತಿಳಿಯಾಗುತ್ತಿದ್ದಂತೆ ಬಂದಂತೆಯೇ ಹೊರಟೂ ಹೋಗುತ್ತದೆ. ಆದರೆ, ಕೆಲವರಿಗೆ ಕೋಪಗೊಳ್ಳುವುದು ಅಥವಾ ಆತಂಕಗೊಳ್ಳುವುದು, ಖಿನ್ನತೆಗೆ ಒಳಗಾಗುವುದು, ನಕಾರಾತ್ಮಕವಾಗಿಯೇ ಚಿಂತಿಸುವುದು, ಏನಾಗುತ್ತದೋ, ಏನನ್ನು ಎದುರಿಸಬೇಕೋ ಎಂದು ಭಯದಲ್ಲಿಯೇ ಇರುವುದು ವ್ಯಕ್ತಿತ್ವದ ಭಾಗವಾಗಿಟ್ಟಿರುತ್ತದೆ.
ಆಗ ಅವರು ಅವರ ರಕ್ತದೊತ್ತಡವನ್ನು ಸದಾ ಹೊಂದುತ್ತಿರುತ್ತಾರೆ. ಯಾವಾಗಲೂ ಏರಿಳಿತಗಳಾಗುತ್ತಿರುತ್ತದೆ. ಇದರಿಂದ ರಕ್ತದೊತ್ತಡದಿಂದ ಉಂಟಾಗುವ ರೋಗಗಳನ್ನು ಬಳುವಳಿಯಾಗಿ ಪಡೆಯುತ್ತಾರೆ. ಮೆದುಳಿಗೆ ಮತ್ತು ಹೃದಯಕ್ಕೆ ಸಂಬಂಧಪಟ್ಟಂತಹ ತೊಂದರೆಗಳನ್ನು ಪರಿಣಾಮಗಳಾಗಿ ನೋಡಬೇಕಾಗುತ್ತದೆ.
ಕೆಲವರು ಹೇಳುತ್ತಿರುತ್ತಾರೆ, ಅವರಿಗೆ ಬ್ಲಡ್ ಪ್ರೆಷರ್ ಇದೆ ಅದಕ್ಕೆ ಹೆಚ್ಚು ಕೋಪ ಎಂದು. ಆದರೆ ಅದು ಹೀಗೂ ಇರಬಹುದು. ಅವರಿಗೆ ಕೋಪಗೊಳ್ಳುವುದು, ಆತಂಕಗೊಳ್ಳುವುದು ಸತತವಾದ ಅಭ್ಯಾಸವಾಗಿವುದರಿಂದ ರಕ್ತದೊತ್ತಡವು ಖಾಯಿಲೆಯಾಗಿ ಪರಿಣಮಿಸಿದೆ ಎಂದು.
ಏನೇ ಆಗಲಿ, ವಂಶವಾಹಿನಿಯಿಂದ, ಬೇರೆ ಕಾರಣಗಳಿಂದ ಬರುವ ಕಾಯಿಲೆಗಳನ್ನೂ ಕೂಡಾ ಮನೋಭಾವನೆಗಳ ಮತ್ತು ವರ್ತನೆಗಳ ಸರಿಯಾದ ನಿಯಂತ್ರಣ ಮತ್ತು ತರಬೇತಿಯಿಂದ ವಾಸಿ ಮಾಡಲಾಗದಿದ್ದರೂ ಉಲ್ಬಣಗೊಳ್ಳದಿರುವಂತೆ ನೋಡಿಕೊಳ್ಳಬಹುದು.
ಮನೋದೈಹಿಕ ಸಮಸ್ಯೆಗಳು
ಕೌಟುಂಬಿಕವಾಗಿ, ವೃತ್ತಿಯಲ್ಲಿ, ಸಾಮಾಜಿಕವಾಗಿ, ವ್ಯಕ್ತಿಗತವಾಗಿ ಅದೆಷ್ಟೇ ಒತ್ತಡಗಳಿದ್ದರೂ, ಆತಂಕಗಳಿದ್ದರೂ ಅವುಗಳನ್ನು ನೋಡುವ ದೃಷ್ಟಿ ಮತ್ತು ಅವುಗಳೊಂದಿಗೆ ಕೆಲಸ ಮಾಡುವ ಮುಕ್ತ ಮನಸ್ಥಿತಿಯನ್ನು ಹೊಂದಬೇಕು. ಆಗ ಅವು ರೋಗಗಳಾಗಿ ತಿರುಗುವುದಿಲ್ಲ. ಹೊರಗಿನ ಕೆಲಸಗಳು ಎಷ್ಟೇ ಒತ್ತಡಗಳನ್ನು ಹೇರಿದರೂ ಮನಸ್ಸಿನ ಒತ್ತಡಕ್ಕೆ ಬಲಿಯಾಗಲೇಬಾರದು. ಇದನ್ನು ಸ್ಪಷ್ಟವಾಗಿ ತಿಳಿಯೋಣ.
ಮನಸ್ಸಿನ ಸ್ಥಿತ್ಯಂತರಗಳ ನಿರೋಧಕ ಶಕ್ತಿಯು ಶರೀರದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ದುರ್ಬಲ ಮನಸ್ಸಿನವರಿಗೆ ರೋಗ ನಿರೋಧಕ ಶಕ್ತಿಯೂ ಕೂಡಾ ಪರಿಣಾಮಕಾರಿಯಾಗಿ ಕೆಲಸ ಮಾಡಲು ಹಿಂದೆ ಮುಂದೆ ನೋಡುತ್ತದೆ. ಖಿನ್ನತೆಗೊಳಗಾಗುವ ಅಥವಾ ಆತಂಕಕ್ಕೊಳಗಾಗುವ ರೂಢಿಯವರಿಗೆ ಸರಿಯಾಗಿ ಊಟ ಸೇರುವುದಿಲ್ಲ, ನಿದ್ದೆ ಬರುವುದಿಲ್ಲ.
ಸರಿ, ಹೊತ್ತು ಹೊತ್ತಿಗೆ ಸರಿಯಾಗಿ ಆಹಾರ ತೆಗೆದುಕೊಳ್ಳದೇ ಮತ್ತು ನಿದ್ದೆ ಮಾಡದೇ ಇರುವುದರಿಂದ ಆಗುವಂತಹ ಸಮಸ್ಯೆಗಳಿಗೆ ಅದು ಆಹ್ವಾನ ಕೊಟ್ಟಂತಾಗುತ್ತದೆ. ಈ ರೀತಿ ಮನಸ್ಸಿನ ಸ್ಥಿತ್ಯಂತರದ ಕಾರಣಗಳಿಂದ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೆ ಮನೋದೈಹಿಕ ಸಮಸ್ಯೆಗಳು ಅಥವಾ ಸೈಕೋಸೊಮ್ಯಾಟಿಕ್ ಡಿಸಾರ್ಡರ್ ಎನ್ನುತ್ತಾರೆ.
ಈ ಮನೋದೈಹಿಕ ಸಮಸ್ಯೆಗಳು ಎಗ್ಸಿಮಾ, ಹೊಟ್ಟೆಯ ಹುಣ್ಣುಗಳಿಗೆ, ಹೈಪರ್ ಟೆಂನ್ಶನ್, ಸೋರಿಯಾಸಿಸ್ ಮತ್ತು ಹೃದಯದ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು. ಆತಂಕ ಮತ್ತು ಉದ್ವೇಗಗಳನ್ನು ಹೊಂದುವುದರಿಂದ, ಖಿನ್ನತೆಗೆ ಜಾರುವುದರಿಂದ ಅಡ್ರಿನಲ್ ಗ್ರಂಥಿಯಲ್ಲಿ, ಎಪಿನೆಫ್ರಿನ್ ನಲ್ಲಿ ತೀವ್ರಗತಿಯಲ್ಲಿ ಹಾರ್ಮೋನುಗಳ ವ್ಯತ್ಯಯ ಉಂಟಾಗುವುದು.
ಆಗ ಸಹಜವಾಗಿ ಈ ಹಾರ್ಮೋನುಗಳ ವ್ಯತ್ಯಾಸದಿಂದ ಏನು ಶಾರೀರಿಕ ಸಮಸ್ಯೆ ಬರುವುದೋ ಅದನ್ನು ಎದುರಿಸಬೇಕಾಗುವುದು. ಸಾಮಾನ್ಯವಾಗಿ ಕುತ್ತಿಗೆ ನೋವು, ಆಮ್ಲತೆ (ಅಸಿಡಿಟಿ), ಬೆನ್ನು ನೋವು, ಮರೆತುಹೋಗುವುದು, ಪಿತ್ತ ಕೆರಳುವುದು, ಹಠಾತ್ ಕೋಪ ಬರುವುದು ಕೂಡಾ ಮನೋದೈಹಿಕ ಸಮಸ್ಯೆಗಳಾಗಿರುತ್ತವೆ. ಮನೋದೈಹಿಕ ಸಮಸ್ಯೆಗಳಲ್ಲಿ ಮುಖ್ಯವಾಗಿ ಎರಡು ವಿಧವನ್ನು ಗುರುತಿಸಬಹುದು.
ಶರೀರದಲ್ಲಿ ನೋವು, ಆಯಾಸ, ಅಧಿಕವಾಗಿ ನಿದ್ರೆ, ಅಥವಾ ನಿದ್ರೆ ಇಲ್ಲದಿರುವುದು, ಹಸಿವು ಇಲ್ಲದಿರುವುದು, ಆಮ್ಲತೆ (ಅಸಿಡಿಟಿ) ಈ ಬಗೆಯ ಸಮಸ್ಯೆಗಳು ಬರುವುದು ಒಂದಾದರೆ, ನರದೌರ್ಬಲ್ಯ ಸಮಸ್ಯೆಗಳು ಎದುರಾಗುವುದು, ಹೆಂಗಸರಲ್ಲಿ ಋತುಚಕ್ರವು ವ್ಯತ್ಯಾಸಗೊಳ್ಳುವುದು, ಲೈಂಗಿಕತೆಯಲ್ಲಿ ದೌರ್ಬಲ್ಯವನ್ನು ಹೊಂದುವುದು ಇತ್ಯಾದಿಗಳು ಮತ್ತೊಂದು ಬಗೆಯ ಸಮಸ್ಯೆಗಳು.
ಗರ್ಭಿಣಿಯರಾದಾಗಲೂ ಕೂಡಾ ಆ ಬಗೆಯ ಮನೋದೈಹಿಕ ಸಮಸ್ಯೆಗಳನ್ನು ಎದುರಿಸಬಹುದು. ಇದರಿಂದ ವಾಕರಿಕೆ, ಹುಸಿ ಹೆರಿಗೆ ನೋವು, ದೇಹದ ಇತರ ಭಾಗಗಳಲ್ಲಿ ನೋವು; ಇತ್ಯಾದಿಗಳನ್ನು ಕಾಣಬಹುದು.
ಅದೇ ರೀತಿ ಮನೋದೈಹಿಕ ವ್ಯತ್ಯಾಸಗಳು ಇನ್ನೂ ಕೆಲವು ಲಕ್ಷಣಗಳನ್ನು ತೋರುತ್ತವೆ. ಕೆಲವೊಮ್ಮೆ ದಿಢೀರನೆ ಹಾಸಿಗೆ ಹಿಡಿದು ಮಲಗುವಂತೆ ಮಾಡಬಹುದು. ಮೂರ್ಚೆ ಹೋಗುವುದು, ನಿದ್ರೆ ಬರುತ್ತಿರುವಂತೆ ಕಣ್ಣುಗಳು ಭಾರವಾಗಿದ್ದು ಕಣ್ಣೆಳೆಯುತ್ತಿರುವುದು, ಕೆಲವೊಮ್ಮೆ ಕಣ್ಣು ಕಾಣಿಸದೇ ಹೋಗುವುದು. ದೇಹದ ಯಾವುದಾದರೂ ಒಂದೋ, ಎರಡೋ ಭಾಗವನ್ನು ಕಳೆದುಕೊಂಡಂತೆ ಭಾಸವಾಗುವ ರೀತಿಗಳಲ್ಲಿಯೂ ಕಾಣುವುದು.
ಬಯಸಿ ಬರುವ ರೋಗ
ಮನೋದೈಹಿಕ ಸಮಸ್ಯೆಯಿಂದಾಗಿ ಕೆಲವರು ತಮಗೇನೋ ಬಹುದೊಡ್ಡ ರೋಗವೊಂದಿದೆ ಎಂದು ಭಾವಿಸತೊಡಗುತ್ತಾರೆ. ಯಾರಾದರೂ ವೈದ್ಯರ ಬಳಿ ತೋರಿಸಿ ಏನಿಲ್ಲ ಎಂದು ವರದಿ ಬಂದರೂ ಅವರಿಗೆ ಸಮಾಧಾನವಾಗುವುದಿಲ್ಲ. ಮತ್ತೊಬ್ಬ, ಮಗದೊಬ್ಬ ವೈದ್ಯರ ಬಳಿ ಪರೀಕ್ಷೆಗೆ ಒಳಪಡುತ್ತಿರುತ್ತಾರೆ. ನಿಮಗೆ ಏನೂ ಸಮಸ್ಯೆ ಇಲ್ಲವೆಂದರೂ ಅವರು ನಂಬುವುದಿಲ್ಲ.
ವೈದ್ಯರನ್ನು ಬದಲಾಯಿಸುತ್ತಾರೆಯೇ ಹೊರತು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳುವುದಿಲ್ಲ. ಕೆಲವರಿಗೆ ದೇಹದ ಕೆಲವು ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿರುತ್ತದೆ. ಅದಕ್ಕೆ ಯಾವ ಕಾರಣವೂ ಇರುವುದಿಲ್ಲ. ಅದನ್ನು ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ಅವರಿಗೆ ಅಲ್ಲಿ ಏನೂ ತಿಳಿಯುದಿಲ್ಲ. ಆದರೆ ಇವರಿಗೆ ಮಾತ್ರ ಬಹುಕಾಲದಿಂದ ಆ ನೋವು ಕಾಣುತ್ತಿರುತ್ತದೆ. ಇದೂ ಕೂಡಾ ಮನೋದೈಹಿಕ ನೋವಿನ ಸಮಸ್ಯೆಯೇ ಆಗಿರುತ್ತದೆ.
ಕೆಲವರು ತಮ್ಮ ಮುಖದಲ್ಲಿ ಅಥವಾ ದೇಹದಲ್ಲಿ ಯಾವುದೋ ನ್ಯೂನ್ಯತೆ ಇದೆ ಎನಿಸುತ್ತಿರುತ್ತದೆ. ಅದಕ್ಕಾಗಿ ಕಾಸೆಮೆಟಿಕ್ ಚಿಕಿತ್ಸೆ ತೆಗೆದುಕೊಳ್ಳುತ್ತಿರುತ್ತಾರೆ. ಕೆಲವರು ಲಘು ಶಸ್ತ್ರ ಚಿಕಿತ್ಸೆಗಳನ್ನೂ ಕೂಡಾ ಕಾಲದಿಂದ ಕಾಲಕ್ಕೆ ಮಾಡಿಸಿಕೊಳ್ಳುತ್ತಿರುತ್ತಾರೆ. ಅದೆಷ್ಟು ಶಸ್ತ್ರ ಚಿಕಿತ್ಸೆಗಳನ್ನು ಮಾಡಿಸಿಕೊಂಡರೂ ಅಥವಾ ಕಾಸ್ಮೆಟಿಕ್ ಚಿಕಿತ್ಸೆಗಳನ್ನು ತೆಗೆದುಕೊಂಡರೂ ಅವರಿಗೆ ತೃಪ್ತಿಯೇ ಇರದಂತೆ ಮನೋರೋಗವಾಗಿ ಪರಿಣಮಿಸಿರುತ್ತದೆ.
ಉದಾಹರಣೆಗೆ ತಮ್ಮ ಮೂಗು ಸೊಟ್ಟ ಎನಿಸುತ್ತಿರುತ್ತದೆ. ತುಟಿಯಲ್ಲೇನೋ ಸ್ವಲ್ಪ ಸಮಸ್ಯೆ ಎನಿಸುತ್ತಿರುತ್ತದೆ. ಕೆನ್ನೆಯ ಮೇಲ್ಭಾಗದಲ್ಲೇನೋ ವಿನ್ಯಾಸ ಸರಿ ಇಲ್ಲ ಎನಿಸುತ್ತಿರುತ್ತದೆ, ಹೀಗೆ ತಮ್ಮ ಶರೀರ ರಚನೆಯ ಬಗ್ಗೆ ಅವರಿಗೆ ಸದಾ ಅತೃಪ್ತಿ. ಕೆಲವು ಸಿನಿಮಾ ಕಲಾವಿದರು, ಫ್ಯಾಷನ್ ಮತ್ತು ಪಾಪ್ ತಾರೆಯರಿಗೆ ಈ ಗೀಳಿತ್ತು. ತಮ್ಮ ಶರೀರದ ಯಾವುದೋ ಒಂದು ಭಾಗವನ್ನು ಒಂದಲ್ಲಾ ಒಂದು ಕಾರಣಕ್ಕೆ ಚಿಕಿತ್ಸೆಗೆ ಒಳಪಡಿಸಿಕೊಳ್ಳುತ್ತಿದ್ದರು. ಅವರಿಗೆ ತಮ್ಮದೇ ಶರೀರದ ಬಗ್ಗೆ ತೃಪ್ತಿಯೇ ಇರುತ್ತಿರಲಿಲ್ಲ.
ಸಾಮಾನ್ಯವಾಗಿ ಮಾನಸಿಕ ಖಿನ್ನತೆ ಮತ್ತು ಅನಿಯಂತ್ರಿತ ಭಾವೋದ್ವೇಗ ಈ ಬಗೆಯ ಮನೋದೈಹಿಕ ಸಮಸ್ಯೆಗಳಿಗೆ ಕಾರಣವಾಗಿರುತ್ತದೆ. ಒಟ್ಟಾರೆ ಮನಸ್ಥಿತಿಯು ದೇಹದ ಸ್ಥಿತಿಗತಿಗಳ ಮೇಲೆ ನೇರಾನೇರ ಪ್ರಭಾವವನ್ನು ಬೀರುತ್ತದೆ. ಅಂದರೆ ಈ ದೇಹದಲ್ಲಿ ತೊಂದರೆಗಳನ್ನು ಸರಿಪಡಿಸಿಕೊಳ್ಳಬೇಕೆಂದರೆ, ಮನಸ್ಥಿತಿಯನ್ನು ಸರಿಪಡಿಸಿಕೊಳ್ಳಬೇಕೆಂದಾಯಿತು.
ಮನೋದೈಹಿಕ ಸಮಸ್ಯೆಗಳಿಗೆ ಚಿಕಿತ್ಸೆ
ಇಂತಹ ಸಮಸ್ಯೆಗಳಿಗೆ ಚಿಕಿತ್ಸೆ ಎಂಬುದು ವ್ಯಕ್ತಿಯಿಂದ ವ್ಯಕ್ತಿಗೆ, ರೀತಿಯಿಂದ ರೀತಿಗೆ ಬದಲಾಗುತ್ತಿರುತ್ತದೆ. ಏನೇ ಆಗಲಿ, ಮನೋದೈಹಿಕ ಸಮಸ್ಯೆ ಇದೆ ಎಂಬುದನ್ನು ಗುರುತಿಸಿದ ಮೇಲೆ ವ್ಯಕ್ತಿಯು ಪ್ರಶಾಂತತೆಯನ್ನು ಪಡೆಯುವುದರ ಕಡೆಗೆ ಮೊದಲ ಗಮನ ಹರಿಸಬೇಕು.
ವಾತಾವರಣ ಬದಲಾವಣೆ ಬಹಳ ಉತ್ತಮವಾದದ್ದು.
ಯಾಂತ್ರಿಕವಾಗಿ ಕೆಲಸ ಮಾಡಿಕೊಂಡಿರುವ ಮತ್ತು ಒಂದೇ ಸಮನೆ ಅದೇ ಸ್ಥಳದಲ್ಲಿ ಇರುವ ಮೂಲಕ ಉಂಟಾಗಿರುವ ಏಕತಾನತೆಯನ್ನು ಒಡೆಯಲು ಬೇರೆ ವಾತಾವರಣಕ್ಕೆ ಹೋಗಬೇಕು. ಸ್ಥಳ ಬದಲಾವಣೆಯಾಗಬೇಕು. ಹೆಚ್ಚಿನ ಜನ ಸಂಚಾರವಿರದ, ಗದ್ದಲವಿರದ ಸ್ಥಳಗಳಿಗೆ ಪ್ರವಾಸ ಹೋಗುವುದು, ಅಲ್ಲಿ ಇರುವುದು ಮತ್ತು ತಮ್ಮ ಓದು, ಬರಹ, ಅಥವಾ ಇನ್ನಾವುದೇ ಒಬ್ಬರೇ ಮಾಡಿಕೊಳ್ಳುವ ಕೆಲಸ ಮಾಡಿಕೊಳ್ಳುವುದೆಲ್ಲವೂ ಮನೋದೈಹಿಕ ಸಮಸ್ಯೆಗಳಿಂದ ಪಾರಾಗಲು ಒಳ್ಳೆಯದೇ.
ಸುಂದರ ಮತ್ತು ಗದ್ದಲವಿಲ್ಲದಂತಹ ಸುಮಧುರ ಸಂಗೀತವನ್ನು ಕೇಳಬೇಕು. ಹಿಂಸೆ, ಅತಿ ಮಾನುಷಶಕ್ತಿಯ ಪ್ರದರ್ಶನಗಳಿರದ, ತುಂಬಾ ಉತ್ಪ್ರೇಕ್ಷಿತ ವೈಭವಗಳಿರದ ಸಕಾರಾತ್ಮಕವಾದ ಸಿನಿಮಾಗಳಿಗೆ ಹೋಗಬೇಕು. ನಿತ್ಯವೂ ನಿಯಮಿತವಾಗಿ ವ್ಯಾಯಾಮ, ನೃತ್ಯ ಈ ರೀತಿಯಲ್ಲಿ ದೇಹಕ್ಕೆ, ಮನಸ್ಸಿಗೆ ಮತ್ತು ಹೃದಯಕ್ಕೆ ಹದ ನೀಡಬೇಕು.
ಧಾರ್ಮಿಕತೆಯ ರೂಢಿಯಿದ್ದರೆ ಉಪವಾಸ, ಧ್ಯಾನ ಮತ್ತು ಪ್ರಾರ್ಥನೆಗಳನ್ನು ಮಾಡಬೇಕು.
ಒಳ್ಳೆಯ ಧನಾತ್ಮಕವಾದ ಕತೆಗಳನ್ನು ಕೇಳಬೇಕು ಅಥವಾ ಓದಬೇಕು.
ನಮ್ಮನ್ನು ನಾವು ಗಮನಿಸಿಕೊಂಡು, ಆತ್ಮಾವಲೋಕನ ಮಾಡಿಕೊಂಡು ನಮ್ಮ ವರ್ತನೆಗಳಲ್ಲಿ ಉದ್ದೇಶಪೂರ್ವಕವಾದಂತಹ ಬದಲಾವಣೆಗಳನ್ನು ತಂದುಕೊಳ್ಳಬೇಕು. ಇತರರಿಗೆ ಕಷ್ಟಗಳಲ್ಲಿ ನೆರವಾಗುವುದು, ಒತ್ತಡ ಮತ್ತು ಖಿನ್ನತೆ ಇರುವಂತವರನ್ನು ಕೂರಿಸಿಕೊಂಡು ಅವರ ಸಮಸ್ಯೆಗಳನ್ನು ಆಲಿಸುವುದು ಮತ್ತು ಅದರಿಂದ ಹೇಗೆ ಹೊರಗೆ ಬರಬೇಕೆಂಬ ಸಾಧ್ಯತೆಗಳನ್ನು ಅವರಿಗೆ ಅರಿವಾಗುವಂತೆ ತಿಳಿಸಬೇಕು.
ಎಷ್ಟೋ ಸಲ ಈ ರೀತಿ ಇನ್ನೊಬ್ಬರಿಗೆ ಅವರ ಕಷ್ಟದಿಂದ ಹೊರಗೆ ನೆರವಾಗಲು ಹೇಳಿಕೊಡುವಾಗ ನಮ್ಮ ಕಷ್ಟಗಳಿಂದ ನಾವು ಹೊರಗೆ ಬರಲು, ನಮ್ಮ ಒತ್ತಡಗಳಿಂದ ನಾವು ಹಗುರವಾಗಲು ನಮಗೆ ಒಳನೋಟಗಳು, ದಾರಿ ಸಿಗುವುದು. ಮಕ್ಕಳೊಂದಿಗೆ ಆಡುವುದು, ಅವರೊಂದಿಗೆ ಓದುವುದು, ಉದ್ಯಾನವನಗಳಲ್ಲಿ ಓಡಾಡುವುದು ಇವೆಲ್ಲವೂ ಮನೋದೈಹಿಕ ಸಮಸ್ಯೆಗಳಿಗೆ ಚಿಕಿತ್ಸಕ ರೀತಿಯಲ್ಲಿ ಸಹಾಯಕ್ಕೆ ಬರುವುದು.
ಒಟ್ಟಾರೆ ಮನೋಭಾವ, ಏಕಪ್ರಕಾರದ ಯೋಚನೆಗಳು ಮತ್ತು ಮನಸ್ಸಿನ ವಿವಿಧ ಬಗೆಯ ಆಲೋಚನೆಗಳು ಆತಂಕಗಳನ್ನು, ಒತ್ತಡವನ್ನು ಉಂಟುಮಾಡುತ್ತವೆ. ಅವು ದೇಹದ ಮೇಲೂ ಪರಿಣಾಮ ಬೀರುತ್ತದೆ. ನಮ್ಮ ಗಮನಕ್ಕೆ ಬರುವಂತಹ ಆಲೋಚನೆಗಳ ಮನಸ್ಸು ಒಂದಾದರೆ, ನಮ್ಮ ಗಮನಕ್ಕೆ ಬರದೇ ಇರಬಹುದಾದಂತಹ ದೇಹದ ಮನಸ್ಸೊಂದು ಇದೆ. ಅದರಲ್ಲಿಯೂ ಕೂಡಾ ವ್ಯತ್ಯಾಸಗಳಾಗುತ್ತಿರುತ್ತವೆ.
ಇದು ನಾನಾ ರೀತಿಯ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಾಗಿ ಕಾಣುತ್ತವೆ. ಮನೋದೈಹಿಕ ಸಮಸ್ಯೆಗೆ ಎಷ್ಟೋ ಕಾರಣಗಳಿವೆ.
ಕೆಲವು ಜನಕ್ಕೆ ಸುಮ್ಮನೆ ದಿಗಿಲು ಬೀಳುವುದೇ ಒಂದು ಸಮಸ್ಯೆ. ಸಾಮಾಜಿಕ ಆತಂಕದ ಸಮಸ್ಯೆ, ವಿವಿಧ ರೀತಿಯ ಭಯಗಳು, ಏನೇನೋ ಕಾಣುವುದು, ಆರೋಗ್ಯದ ಬಗ್ಗೆಯೇ ಆತಂಕ, ಭಾವನೆಗಳ ವ್ಯತ್ಯಾಸಗಳು, ನಿದ್ರಾಹೀನತೆ, ಒತ್ತಡಗಳು, ಬಾಲ್ಯದ ಆತಂಕಗಳು, ಮದುವೆಯಾಗಿ ಹೊಸ ಮನೆಗೆ ಹೋಗುವ ಹೆಣ್ಣುಮಗುವಿನ ಆತಂಕ ಮತ್ತು ಒತ್ತಡಗಳು, ಸಂಬಂಧಗಳು ಮುರಿದುಹೋಗುತ್ತವೆ ಎಂಬ ಆತಂಕ, ಯಾರನ್ನಾದರೂ ಪ್ರೀತಿಪಾತ್ರರ ಕಳೆದುಕೊಂಡಿರುವ ನೋವು, ವ್ಯಾಪಾರ ವ್ಯವಹಾರ ರಾಜಕೀಯ ಅಥವಾ ಯಾವುದೇ ಉದ್ದಿಮೆಯಲ್ಲಿ ಅಪಾರವಾದ ನಷ್ಟ, ಕಿರುಕುಳ ನೀಡುವ ಸಾಲಗಾರರು, ಲೈಂಗಿಕ ಸಮಸ್ಯೆ, ಹೆಂಗಸರಲ್ಲಿ ಋತು ಸಮಸ್ಯೆ, ಸಾಮಾಜಿಕ ಅಥವಾ ಧಾರ್ಮಿಕತೆಯ ಕಾರಣದಿಂದ ಹತ್ತಿಕ್ಕಲಾಗುವ ಎಷ್ಟೋ ಮನೋಬಯಕೆಗಳು ಮತ್ತುಅವುಗಳಿಂದಾಗುವ ಒತ್ತಡಗಳು; ಹೀಗೆ ಯಾವುದ್ಯಾವುದೋ ಕಾರಣಗಳು ಮನೋದೈಹಿಕ ಸಮಸ್ಯೆಗೆ ಕಾರಣವಾಗುತ್ತವೆ.
ಒಟ್ಟಾರೆ ಕಣ್ಣು, ಕಿವಿ, ಮೂಗುಗಳಿಗೆ ಏನೋ ಸಮಸ್ಯೆ ಬಂದಂತೆ ಮನಸ್ಸಿಗೂ ಸಮಸ್ಯೆ ಬರುತ್ತಿರುತ್ತದೆ. ಹಾಗಾಗಿ ನಮ್ಮ ಮನಸ್ಸಿನ ಸಮಸ್ಯೆಗೆ, ಮೆದುಳಿನ ಸಮಸ್ಯೆಗೆ ಅಥವಾ ನರಗಳ ಸಮಸ್ಯೆಗೆ ಸಂಕೋಚಪಡುವುದು ಬೇಡ. ಮನಸಿನ ಸಮಸ್ಯೆಗೆ ಪರಿಹಾರ ಕಂಡುಕೊಂಡರೆ ಎಷ್ಟೋ ಸಮಸ್ಯೆಗಳು ಇಲ್ಲವಾಗುತ್ತವೆ. ದೈಹಿಕ ಸಮಸ್ಯೆಗಳೂ ಗುಣ ಹೊಂದುತ್ತವೆ.
ಕೊನೆಯ ಎಲೆ
ವಾಸ್ತವಧಾರವಲ್ಲದೇ ಭ್ರಮಾಧೀನವಾದ ಮನಸ್ಸಿಗೂ ಬದುಕನ್ನು ಕಲ್ಪಿಸಿಕೊಡಲು ಸಾಧ್ಯವಾಗುವುದು. ಅದೊಂದು ತಂತ್ರ. ದ ಲಾಸ್ಟ್ ಲೀಫ್ ಅಂದರೆ ಕೊನೆಯ ಎಲೆ ಎಂಬ ಕತೆ ಇದೆ. ಅದನ್ನು ಬರೆದವರು ಓ ಹೆನ್ರಿ ಎಂಬ ಅಮೇರಿಕೆಯ ಕತೆಗಾರ. ಅದರಲ್ಲಿ ಇಬ್ಬರು ಗೆಳತಿಯರಿರುತ್ತಾರೆ. ಅವರಿಬ್ಬರೂ ಚಿತ್ರಕಲಾವಿದೆಯರು. ಒಂದೇ ಸ್ಟುಡಿಯೋ ಮಾಡಿಕೊಂಡಿರುತ್ತಾರೆ. ಅವರಲ್ಲಿ ಒಬ್ಬಳಿಗೆ ನಿಮೋನಿಯಾ ರೋಗ ಬರುತ್ತದೆ.
ಅವಳಿಗೆ ಔಷಧೋಪಚಾರ ಆಗುತ್ತಿದ್ದರೂ, ಅವಳು ಮಲಗಿದ್ದ ಮಂಚದಿಂದ ಹೊರಗೆ ಒಂದು ಮರವನ್ನು ನೋಡುತ್ತಿರುತ್ತಾಳೆ. ಶಿಶಿರ ಕಾಲದಲ್ಲಿ ಆ ಮರದ ಎಲೆಗಳೆಲ್ಲಾ ದಿನದಿನವೂ ಉದುರುತ್ತಿರುತ್ತವೆ. ಅದನ್ನು ನೋಡುತ್ತಿದ್ದ ಅವಳಿಗೆ ಆ ಮರದ ಎಲೆಗಳೆಲ್ಲ ಉದುರುತ್ತಿರುವ ಹಾಗೆ ತನ್ನ ಬದುಕಿನ ದಿನಗಳೂ ಮುಗಿದುಹೋಗುತ್ತಿವೆ. ಆ ಮರದ ಕೊನೆಯ ಎಲೆ ಉದುರಿದ ಮೇಲೆ ತಾನೂ ಇರುವುದಿಲ್ಲ ಎಂದು ಹೇಳುತ್ತಿರುತ್ತಾಳೆ.
ದಿನವೂ ಅದನ್ನು ಕೇಳುತ್ತಿದ್ದ ಗೆಳತಿಯು ನಿಮೋನಿಯಾ ಬಂದಿರುವ ಗೆಳತಿಯ ಹುಚ್ಚು ಕಲ್ಪನೆಯನ್ನು ಒಪ್ಪದೇ ಸಕಾರಾತ್ಮಕವಾಗಿ ಅವಳಿಗೆ ಯೋಚಿಸಲು ಹಚ್ಚಲು ಯತ್ನಿಸುತ್ತಿರುತ್ತಾಳೆ. ಆದರೆ ಆಗುವುದಿಲ್ಲ. ನಿಮೋನಿಯಾದ ಹುಡುಗಿ ತನ್ನ ಕಲ್ಪನೆಯನ್ನೇ ಬಲಗೊಳಿಸಿಕೊಳ್ಳುತ್ತಿರುತ್ತಾಳೆ. ಒಂದು ದಿನ ಕಿಟಕಿ ತೆರೆದಾಗ ಮರದ ಎಲ್ಲಾ ಎಲೆಗಳು ಉದುರಿಬಿದ್ದಿದ್ದರೂ ಒಂದೇ ಒಂದು ಎಲೆ, ಕೊನೆಯ ಎಲೆ ಪಕ್ಕದ ಕಟ್ಟಡದ ಗೋಡೆಯೊಂದಕ್ಕೆ ತಗುಲಿದ್ದು, ಅದು ಉದುರಿರುವುದೇ ಇಲ್ಲ.
ಅದು ಉದುರುವ ಹೊತ್ತಿಗೆ ತಾನೂ ಸಾಯುತ್ತೇನೆ ಎಂದು ಅವಳ ನಂಬಿಕೆ. ಆದರೆ ಎಷ್ಟೇ ದಿನಗಳು ಕಳೆದರೂ ಅದು ಉದುರುವುದೇ ಇಲ್ಲ. ತಾನು ಬದುಕುತ್ತೇನೆ. ಆ ಎಲೆಯು ಅದನ್ನು ಸೂಚಿಸಲೆಂದೇ ಉದುರುತ್ತಿಲ್ಲ ಎಂದು ಅವಳಿಗೆ ಅನಿಸುತ್ತದೆ. ಅವಳು ಬದುಕುತ್ತಾಳೆ. ಆರೋಗ್ಯಕ್ಕೆ ಮರಳುತ್ತಾಳೆ.
ಆ ಎಲೆ ಉದುರುವುದೇ ಇಲ್ಲ. ಏಕೆಂದರೆ, ಈ ಹುಡುಗಿಯ ಹುಚ್ಚು ಭ್ರಮೆಯನ್ನು ಗೆಳತಿಯಿಂದ ತಿಳಿದ ಮುದುಕ ಕಲಾವಿದನೊಬ್ಬ ಮರದ ಕೊಂಬೆ ಮತ್ತು ಕಟ್ಟಡದ ಗೋಡೆ ಸಂಧಿಸುವಂತಹ ಎಡೆಯಲ್ಲಿ ಒಂದು ಎಲೆಯ ಚಿತ್ರವನ್ನು ಬಿಡಿಸಿರುತ್ತಾನೆ. ದೂರದಿಂದ ನೋಡಲು ಕೊಂಬೆಗೆ ಅಂಟಿಕೊಂಡಿರುವ, ಕಟ್ಟಡದ ಗೋಡೆಗೆ ತಗುಲಿಕೊಂಡಿರುವ ಹಳದಿ ಬಣ್ಣಕ್ಕೆ ತಿರುಗಿರುವ ಎಲೆಯಂತೆ ಕಾಣುತ್ತಿರುತ್ತದೆ. ಅದು ಅವಳ ಭ್ರಮೆಯ ಪ್ರಕಾರವೇ ಅವಳ ಜೀವವನ್ನು ಉಳಿಸಿರುತ್ತದೆ.
ಆದರೆ ದುರದೃಷ್ಟವಶಾತ್, ಆ ಕೊನೆಯ ಎಲೆಯ ಮಾಸ್ಟರ್ ಪೀಸ್ ಮಾಡಿದ್ದ ವೃದ್ಧ ಮತ್ತು ಕುಡುಕ ಕಲಾವಿದ ಮಾಗಿಯ ಚಳಿಯ ರಾತ್ರಿಯಲ್ಲಿ ಚಿತ್ರವನ್ನು ಬರೆದು ತಾನು ಚಳಿಗೆ ಸತ್ತಿರುತ್ತಾನೆ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ



