ದಿನದ ಸುದ್ದಿ
ಕೋವಿಡ್-19 | ರಾಜ್ಯದಲ್ಲಿ ಒಟ್ಟು 1743 ಪ್ರಕರಣ : ಗುಣಮುಖರಾದವರು 597
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋವಿಡ್19: 22 ಮೇ ಶುಕ್ರವಾರ 2020 ರ ಸಂಜೆಯವರೆಗಿನ ಮಾಹಿತಿ
- ಒಟ್ಟು ಪ್ರಕರಣಗಳು: 1743
- ಮೃತಪಟ್ಟವರು: 41
- ಗುಣಮುಖರಾದವರು: 597
- ಹೊಸ ಪ್ರಕರಣಗಳು: 138
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.
ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.
ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.
ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
ದಿನದ ಸುದ್ದಿ16 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ15 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ1 hour agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ

