ಅಂತರಂಗ
ಅರಿಮೆಯ ಅರಿವಿರಲಿ-58 : ಶಿಶುಪ್ರಧಾನ ಸಮಾಜ
- ಯೋಗೇಶ್ ಮಾಸ್ಟರ್
ಮಾನವ ಸಮಾಜವು ಪ್ರಾರಂಭವಾಗಿ ಬಹಳ ಕಾಲವಾಯಿತು. ಆಗಿನ ಸಮಸ್ಯೆಗಳಿಗೆ, ಸಂಘರ್ಷಗಳಿಗೆ ಮತ್ತು ವೈಫಲ್ಯಗಳಿಗೆ ಪ್ರಾರಂಭಿಕ ಹಂತಗಳಲ್ಲಿನ ಪ್ರಯೋಗಗಳು ಮತ್ತು ಅನುಭವಗಳಿಗೆ ಇದ್ದಂತಹ ಸಂಪನ್ಮೂಲಗಳ ಕೊರತೆ ಎಂದು ಮನ್ನಿಸಬಹುದು.
ಮಾನವ ಸಮಾಜ ಹೊಂದಿರುವ ಅನುಭವದ ಸುದೀರ್ಘ ಅವಧಿಯನ್ನು ಗಣನೆಗೆ ತೆಗೆದುಕೊಂಡರೆ ಈ ಹೊತ್ತಿಗೆ ಇಡೀ ಮಾನವ ಜಗತ್ತು ಆರೋಗ್ಯ, ಸೌಹಾರ್ದ ಮತ್ತು ಆನಂದದಿಂದ ಇರಬೇಕಿತ್ತು. ಕನಿಷ್ಟ ಪಕ್ಷ ಸಮಸ್ಯೆ, ಸಂಘರ್ಷ ಮತ್ತು ವೈಫಲ್ಯಗಳು ಕ್ಷೀಣಿಸಿಬೇಕಿತ್ತು. ಆದರೆ ಇಂದು ನಾವು ಬದುಕುತ್ತಿರುವ ಸಮಾಜದಲ್ಲಿ ಎಲ್ಲವೂ ಸರಿಯಾಗಿಲ್ಲ.
ಇನ್ನೂ ತನ್ನ ಒಟ್ಟಾರೆಯ ಬದುಕಿನಲ್ಲಿ ಸ್ಥಿರತೆ ಕಂಡಿಲ್ಲ. ಆರ್ಥಿಕ ಸಮಸ್ಯೆ, ಮೂಲಭೂತ ಸೌಕರ್ಯಗಳ ಕೊರತೆ, ನಾಗರಿಕ ದಂಗೆ, ಯುದ್ಧ, ಸಾಮಾಜಿಕ ಅಸಮಾನತೆ, ಧಾರ್ಮಿಕ ಸಂಘರ್ಷ, ಜನಾಂಗೀಯ ದ್ವೇಷ, ಸೈದ್ಧಾಂತಿಕ ಸಮರ, ಶ್ರೇಷ್ಟತೆಯ ಪೈಪೋಟಿ, ಮೌಢ್ಯಾಚರಣೆಗಳು, ಪರಿಸರ ನಾಶ, ಜೀವನಮಟ್ಟದ ವೈಫಲ್ಯ, ಸಂಬಂಧಗಳ ಗೊಂದಲ ಮತ್ತು ಇನ್ನೂ ಅನೇಕ ಮನುಷ್ಯ ಕೇಂದ್ರಿತ ಸಮಸ್ಯೆಗಳು ತಾಜಾ ಬೆಂಕಿಯಂತೆಯೇ ಉರಿಯುತ್ತಿವೆ.
ಹೌದು, ಬೆಂಕಿಯ ಜ್ವಾಲೆಗಳಲ್ಲಿ ಹೊಸತು ಹಳತುಗಳಿಲ್ಲ. ಸಮಸ್ಯೆ, ಸಂಘರ್ಷ ಮತ್ತು ವೈಫಲ್ಯಗಳ ಬೆಂಕಿಯಲ್ಲಿ ಬೇಯುತ್ತಿರುವ ಮನುಷ್ಯನು ಇಷ್ಟು ಸುಧೀರ್ಘಕಾಲ ಸಾಮಾಜಿಕ ಜೀವನ ನಡೆಸಿದರೂ ಎಡವಿರುವುದು ಎಲ್ಲಿ ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ಅವನಿಗಿರುವ ಸಾಮಾಜಿಕ ಅನುಭವ ಇನ್ನೂ ಸಾಲದೇ? ಒಬ್ಬ ವ್ಯಕ್ತಿ, ಒಂದು ಕುಟುಂಬ, ಒಂದು ಸಮಾಜ, ಒಂದು ರಾಷ್ಟ್ರ ಮತ್ತು ಇರುವುದೊಂದೇ ಭೂಮಿ; ಆರೋಗ್ಯವಾಗಿ ಆನಂದದಿಂದ ಇರಲು ಇನ್ನೂ ಸಂಪೂರ್ಣ ಸಾಧಿಸಲು ಸಾಧ್ಯವಿಲ್ಲದಿರುವುದು ಮನುಷ್ಯ ತನ್ನ ಆದ್ಯತೆಯನ್ನು ಗುರುತಿಸಿಕೊಂಡಿಲ್ಲದೇ ಇರುವುದು ಎಂದು ನನ್ನ ಅಭಿಪ್ರಾಯ.
ಮಾನವ ಸಮಾಜದ ಆದ್ಯತೆಯ ವಿಷಯಗಳ ಪಟ್ಟಿಯನ್ನು ಪುನರ್ಪರಿಶೀಲನೆ ಮಾಡಬೇಕಿದೆ. ಇದರಿಂದ ಈಗ ಮತ್ತು ನಾಳೆ, ನಾವು ಹಾಗೂ ಮುಂದಿನ ಪೀಳಿಗೆಗಳು, ಕನಿಷ್ಟ ಪಕ್ಷ ಮನುಷ್ಯ ಮಾಡುವ ದುರಂತಗಳಿಂದಾದರೂ ಬಿಡುಗಡೆಯನ್ನು ಪಡೆಯಬಹುದು.
ಮಕ್ಕಳ ಪೋಷಣೆ ಮತ್ತು ಶಿಕ್ಷಣವನ್ನು ಆದ್ಯತೆಯ ಪಟ್ಟಿಯಲ್ಲಿ ಯಾವ ಕ್ರಮದಲ್ಲಿ ಸೂಚಿತವಾಗಿವೆ ಎನ್ನುವುದರ ಮೇಲೆ ಮಾನವ ಸಮಾಜದ ವರ್ತಮಾನದ ಮತ್ತು ಭವಿಷ್ಯದ ಬದುಕು ನಿರ್ಧರಿತವಾಗಿದೆ. ನಿನ್ನೆಗಳ ಸಂಘರ್ಷಗಳು, ಸಮಸ್ಯೆಗಳು, ಸಂಕಷ್ಟಗಳು, ಸಂಕಟಗಳು ಪ್ರಮಾದಗಳಾಗಿ ಇಂದಿನ ಮಕ್ಕಳ ಮನಸ್ಸಿನ ಮೇಲೆ, ಭಾವನೆಗಳ ಮೇಲೆ, ಪೋಷಣೆಯ ಮೇಲೆ ಮತ್ತು ಶಿಕ್ಷಣದ ಮೇಲೆ ಪ್ರಭಾವ ಬೀರಿದರೆ ನಾಳಿನ ಸಮಾಜವು ಅಸ್ಥಿರತೆಯಲ್ಲಿಯೇ ಇರುತ್ತದೆ. ಹಳೆಯ ಎಲ್ಲಾ ಸಂಕಟಗಳು ಹೊಸ ರೂಪಗಳಲ್ಲಿ ಜೀವಂತವಾಗಿಯೇ ಇರುತ್ತದೆ.
ಮಕ್ಕಳ ಮನಸ್ಸನ್ನು ರಕ್ಷಿಸಿದರೆ ಸಾಕು
ಯಾರ ಮಗುತನವನ್ನು ಜತನ ಮಾಡುತ್ತೇವೆಯೋ ಆ ವ್ಯಕ್ತಿಯ ತನ್ನತನವು ನೈತಿಕವಾಗಿಯೂ ಮತ್ತು ಬೌದ್ಧಿಕವಾಗಿಯೂ ಬಲಿಷ್ಟವಾಗಿರಲು ಸಾಧ್ಯ. ಹಾಗಾಗಿ ಶಿಶುವನ್ನು ಉಪಚರಿಸುವ ರೀತಿಯಲ್ಲಿ, ಸಂಸ್ಕರಿಸುವ ವಿಧಾನದಲ್ಲಿ ಮತ್ತು ಶಿಕ್ಷಣ ಕೊಡುವ ವಿಧಾನಗಳಲ್ಲಿ ಶಿಸ್ತು, ಸಂಯಮ ಮತ್ತು ಕ್ರಮವಂತೂ ಅಗತ್ಯವಾಗಿ ಬೇಕು.
ಒಂದು ದೊಡ್ಡದಾದ ಮರವು ತನ್ನ ಭೂತ ಕಾಲದಲ್ಲಿ ಸಣ್ಣ ಬೀಜವೇ ಆಗಿರುತ್ತದೆ. ಪ್ರಕೃತಿಯ ತೆಕ್ಕೆಯಲ್ಲಿರುವ ಮರವಾದರೂ ಒಮ್ಮೊಮ್ಮೆ ಯಾವ ವಿಶೇಷ ಉಪಚಾರ ಮತ್ತು ಸಂಸ್ಕರಣಗಳಿಲ್ಲದೇ ತನ್ನ ನೈಸರ್ಗಿಕ ಪ್ರಭಾವಕ್ಕೇ ತೆರೆದುಕೊಂಡು ವೃಕ್ಷವಾಗುವ ತನ್ನ ಸಾರ್ಥಕತೆಯನ್ನು ಕಂಡುಕೊಳ್ಳಬಹುದು. ಮನುಷ್ಯನ ಸಮಾಜದಲ್ಲಿ ಎಳೆಯ ಸದಸ್ಯನಾಗಿರುವ ಮಗುವಿನ ವಿಚಾರದಲ್ಲಿ ಹಾಗಾಗುವುದಿಲ್ಲ.
ಮಗುವನ್ನು ಅದರ ನೈಸರ್ಗಿಕ ಗುಣಗಳಿಂದ ಬಿಡಿಸಿ ಸಾಮಾಜಿಕ ಪ್ರಾಣಿಯನ್ನಾಗಿಸುವ ತರಬೇತಿಯನ್ನು ಸಮಾಜದ ಹಿರಿಯ ಸದಸ್ಯರು ಕೊಡುತ್ತಾರೆ. ಈ ಮಗುವನ್ನು ಸ್ವತಂತ್ರ ಜೀವನಕ್ಕೆ ಸಜ್ಜುಗೊಳಿಸುವ, ಸಾಮಾಜಿಕ ಜೀವನಕ್ಕೆ ಒಗ್ಗಿಸುವ ಪ್ರಕ್ರಿಯೆಯಲ್ಲಿ ಬಲವನ್ನೂ, ಒಲವನ್ನೂ ಮತ್ತು ನಲಿವನ್ನೂ ರೂಢಿಸಬೇಕು. ಅದು ಹೊಣೆಗಾರಿಕೆಯೂ ಹೌದು ಮತ್ತು ಸವಾಲಿನದೂ ಹೌದು.
ಮಗುತನದ ಬಹುಮುಖ್ಯ ಗುಣಗಳೆಂದರೆ ಅದು ಎಳೆಯದಾಗಿ ಮೆದುವಾಗಿರುವುದು, ಗ್ರಹಿಸುವ ಸಾಮರ್ಥ್ಯದಲ್ಲಿ ಶಕ್ತಿಯಾಗಿರುವುದು ಮತ್ತು ಸ್ವೀಕರಿಸಿದ್ದನ್ನು ಹೆಚ್ಚಿಸುವ, ವಿಕಸಿಸುವ ಹಾಗೂ ಮರುಸೃಷ್ಟಿಸುವ ಫಲವತ್ತಿಕೆಯನ್ನು ಹೊಂದಿರುವುದು. ಆದ್ದರಿಂದ ಈ ಮಗುತನವನ್ನು ಬಹಳ ನೇಮ ನಿಷ್ಟೆಯಿಂದ ಜತನ ಮಾಡಬೇಕಾಗಿರುವುದು.
ಇಂತಹ ಮೆದುತನದ ಮತ್ತು ಫಲವಂತಿಕೆಯ ಮಗುತನವು ಯಾವುದ್ಯಾವುದೋ ಆಕ್ರಮಣಗಳಿಗೆ ಸಿಕ್ಕು ನಾಶವಾಗದಿರಲು ಪ್ರತಿಯೊಬ್ಬ ಹಿರಿಯನೂ, ಅಂದರೆ ಸಮಾಜದ ಹಿರಿಯ ಸದಸ್ಯನು ಕಿರಿಯ ಸದಸ್ಯನಿಗೆ ಕವಚವಾಗಿ ತನ್ನ ಹೊಣೆಗಾರಿಕೆಯನ್ನು ನಿರ್ವಹಿಸಬೇಕು. ಸಂರಕ್ಷಿಸಲ್ಪಟ್ಟ ಶಿಶುತನದ ಸಸಿಯು ನಾಳೆ ಸಶಕ್ತವಾದ ತನ್ನತನವನ್ನು ಹೊಂದಿರುವ ವ್ಯಕ್ತಿಯಾಗಿ ರೂಪುಗೊಳ್ಳುವ ಸಾಧ್ಯತೆ ಇರುವುದು.
ಹಾಗೆಯೇ ಭದ್ರತೆ ಅಥವಾ ರಕ್ಷಣೆಯ ನೆಪದಲ್ಲಿ ಮಗುವಿನ ಸ್ವಾತಂತ್ರ್ಯಹರಣ ಮಾಡುವುದಲ್ಲ. ಹಿರಿಯ ಸದಸ್ಯರ ಜೀವನಾನುಭವ, ಜೀವನ ಕೌಶಲ್ಯ ಮತ್ತು ಜೀವನ ಪಾಠಗಳು ತಮ್ಮ ಮುಂದಿರುವ ಮಗುವಿಗೆ ಒಂದು ಸರಿಯಾದ ಅನುಭವ ಕೊಡದಿದ್ದರೆ, ಕೌಶಲ್ಯವನ್ನು ಕಲಿಸದಿದ್ದರೆ, ತನ್ನ ಜೀವನವನ್ನು ತಾನು ಸಮರ್ಥವಾಗಿ ಪ್ರೀತಿಸಿಕೊಳ್ಳುತ್ತಾ ಎಲ್ಲರೊಡನೆ ಬದುಕಲು ಸಾಧ್ಯವಾಗದಿದ್ದರೆ; ಆ ಹಿರಿ ಬದುಕಿನ ಸಾರ್ಥಕತೆಯೇನು?
ಶಿಶುವೆಂಬ ಮಹಾಬಲ
ಮಗುವು ಆಕಾರದಲ್ಲಿ ಚಿಕ್ಕದೆಂದೂ, ಆಧಾರಕ್ಕೆ ನಮ್ಮನ್ನು ಅವಲಂಬಿಸಿದೆಯೆಂದೂ, ಆಹಾರವನ್ನು ನಾವೇ ನೀಡುತ್ತಾ, ಅಕ್ಷರವನ್ನೂ ಕಲಿಸುವುದರಿಂದ ನಾವೇ ಅದರ ಮಹಾಪೋಷಕರೂ, ಆಧಾರಸ್ತಂಭವೆಂದೂ ಹಿರಿಯರು ತಿಳಿದುಕೊಳ್ಳುವುದರಿಂದ ಎಷ್ಟೋ ಮಕ್ಕಳ ಸಾಮರ್ಥ್ಯ ಬೆಳೆಯುವುದಿಲ್ಲ, ಪ್ರತಿಭೆಗಳು ಅನಾವರಣಗೊಳ್ಳುವುದಿಲ್ಲ, ಮತ್ತು ಬದುಕಿನ ಸ್ಥಿರತೆ ಕಾಣುವುದಿಲ್ಲ. ಮಕ್ಕಳ ಎಳೆಯತನವನ್ನು ಬಲಗೊಳಿಸುತ್ತೇವೆ ಎಂಬ ಭ್ರಮೆಯಿಂದ ಅವರನ್ನು ದುರ್ಬಲಗೊಳಿಸುತ್ತೇವೆ.
ವಾಸ್ತವವಾಗಿ ನಮ್ಮ ಮಕ್ಕಳು ನಮಗಿಂತ ದೂರಗಾಮಿಗಳು, ಸಬಲರು ಮತ್ತು ವಿವೇಚನೆಯುಳ್ಳವರು. ಅವರ ಸಂವೇದನಾಶೀಲತೆಯನ್ನು ಕಂಡುಕೊಳ್ಳಲು ಬಿಡದೇ, ಸೃಜನಶೀಲತೆಯನ್ನು ಮತ್ತು ಕ್ರಿಯಾಶೀಲತೆಯನ್ನು ಪ್ರಯೋಗಕ್ಕೆ ಒಳಪಡಿಸಿಕೊಳ್ಳಲೂ ಬಿಡದೇ ನಮ್ಮ ಪ್ರಯೋಗಳ ಸಾಧನೆ ಮತ್ತು ವೈಫಲ್ಯಗಳನ್ನೇ ಅವರ ಪ್ರಯೋಗಳಿಗೂ ಮಾನದಂಡವಾಗಿಸುವುದರಿಂದ ಅವರ ನಿಜವಾದ ಬಲ ಸಂವರ್ಧನೆಯಾಗುವುದಿಲ್ಲ. ಎಷ್ಟೋ ಸಲ ಅನಾವರಣವೇ ಆಗುವುದಿಲ್ಲ.
ನಮ್ಮ ದೌರ್ಬಲ್ಯವನ್ನು ಅರಿಯುವಲ್ಲಿ ಅವರ ಸಾಮರ್ಥ್ಯವನ್ನು ಅರಿಯುವ ಸಾಧ್ಯತೆಯುಂಟು. ನಮ್ಮ ವೈಫಲ್ಯವನ್ನು ಗುರುತಿಸಿಕೊಳ್ಳುವುದರಲ್ಲಿ ಅವರ ಸಾಫಲ್ಯವಿರಬಹುದು. ನಮ್ಮ ಸಿದ್ಧ ಮಾದರಿಗಳನ್ನು ಮೀರುವುದರಲ್ಲಿ ಅವರ ಸಾಧನೆಯ ಹಾದಿಯು ವಿಸ್ತರಿಸುವ ಸಾಧ್ಯತೆಗಳಿರುತ್ತದೆ. ನಮ್ಮ ಹಿರಿಮೆ ಅವರ ಮುಂದೆ ವಿದೇಯವಾಗಬೇಕು. ನಮ್ಮ ಗುರಿ ಅವರ ಗುರಿಯಲ್ಲ. ಅವರ ದಾರಿಯಲ್ಲಿ ನಾವು ಅವರನ್ನು ಹೊತ್ತೊಯ್ಯಲಾಗದಿದ್ದರೂ ತೊಡಕಾದಿರುವಂತೆ ನಮ್ಮನ್ನು ನಾವು ನಿರ್ಬಂಧಿಸಿಕೊಂಡರೆ ಅವರು ತಮ್ಮ ಬಲವನ್ನು ತಾವು ಸಾಕ್ಷಾತ್ಕರಿಸಿಕೊಳ್ಳಲು ಸಾಧ್ಯವಾಗುತ್ತದೆ.
ಮಗುವೆಂದರೆ ನಮ್ಮ ಅಧೀನದಲ್ಲಿರುವ ಅಧೀರನೆಂಬ ಭ್ರಮೆ ನಮ್ಮಿಂದ ತೊಲಗದ ತನಕ, ಮಗುವಿನ ಅಸಹಾಯಕತೆಗೆ ನಾನೇ ಔದಾರ್ಯದ ಮಹಾ ಸಹಾಯವೆಂಬ ಅಹಂಕಾರ ಕುಸಿಯುವ ತನಕ, ಮಗುವೆಂಬ ಮುಗ್ಧ ಜೀವಕ್ಕೆ ನಾವೇ ವಿಚಾರ ಮತ್ತು ಚಿಂತನೆಗಳನ್ನು ನೀಡಬೇಕು ಎಂಬ ಅವೈಜ್ಞಾನಿಕ ನಿಲುವನ್ನು ತೊರೆಯುವ ತನಕ ಮಗುವು ತನ್ನ ಬಲವನ್ನು ತಾನು ಸಾಕ್ಷಾತ್ಕರಿಸಿಕೊಳ್ಳಲು ನಮ್ಮ ಹಿರಿಯರು ಬಿಡುವುದಿಲ್ಲ.
ಶಿಶುವಿನ ಬಲವು ಹೊತ್ತಿಳಿಯುತ್ತಿರುವ ಹಿರಿಯರಿಗೆ ಬಲ ನೀಡುವುದು. ಈ ಸತ್ಯವನ್ನು ಅರಿಯುವ ಹಿರಿಯರು ಶಿಶುವಿನ ಪೋಷಣೆಯ ಮತ್ತು ಶಿಕ್ಷಣದ ವಿಷಯದಲ್ಲಿ ತಮ್ಮ ದಾರಿ ಮತ್ತು ಗುರಿಯನ್ನು ಸ್ಪಷ್ಟವಾಗಿಸಿಕೊಂಡಿರಲು ಸಾಧ್ಯ. ಶಿಶುಬಲವೇ ಸಮಾಜದ ಮಹಾಬಲ.
ಶಿಶುಮನ
ಮಕ್ಕಳ ಮನಸ್ಸು ಬಹಳ ವಿಶಿಷ್ಟ ಸಂಯೋಜನೆಯಿಂದ ಕೂಡಿರುತ್ತದೆ. ಮೊದಲನೆಯದಾಗಿ ಅದು ಬಹಳ ಸಶಕ್ತವಾಗಿರುತ್ತದೆ. ಎರಡನೆಯದಾಗಿ ಗ್ರಹಿಕೆಯಲ್ಲಿ ಚುರುಕಾಗಿರುತ್ತದೆ. ಮೂರನೆಯದಾಗಿ ಅಗಾಧ ಫಲವತ್ತಿನ ಕ್ಷೇತ್ರವಾಗಿರುತ್ತದೆ. ನಾಲ್ಕನೆಯದಾಗಿ ಸಲಿಲತೆಯಿಂದ ಕೂಡಿರುತ್ತದೆ. ಐದನೆಯದಾಗಿ ಮುಗ್ಧವಾಗಿರುತ್ತದೆ. ಆರನೆಯದಾಗಿ ಸಂವೇದನೆಯಿಂದ ಕೂಡಿರುತ್ತದೆ. ಏಳನೆಯದಾಗಿ ಸೂಕ್ಷ್ಮವಾಗಿರುತ್ತದೆ. ಈ ಏಳೂ ಗುಣಗಳ ಕಾರಣದಿಂದ ಅವರ ಜೊತೆಗೆ ಹಿರಿಯರಾದವರು ವ್ಯವಹರಿಸುವಾಗ ಬಹಳ ಎಚ್ಚರಿಕೆಯಿಂದಲೂ ಮತ್ತು ಜವಾಬ್ದಾರಿಯಿಂದಲೂ ವರ್ತಿಸಬೇಕು.
ಅವರ ಸಂಪರ್ಕದಲ್ಲಿರುವಾಗ ಮತ್ತು ಸಂವಹನ ನಡೆಸುವಾಗ ಹಿರಿಯರ ನಡವಳಿಕೆ ಬಹಳ ಸಂವೇದನೆಯಿಂದ ಕೂಡಿರಬೇಕು. ಸೂಕ್ಷ್ಮದೃಷ್ಟಿ ಮತ್ತುದೂರದೃಷ್ಟಿಯನ್ನು ಹೊಂದಿರದ ಹಿರಿಯರು ಮಕ್ಕಳ ಮನಸ್ಸನ್ನು ಘಾಸಿ ಮಾಡುವುದು ಮಾತ್ರವಲ್ಲದೇ, ತಪ್ಪಾಗಿ ತರಬೇತಿಗಳ ಮೂಲಕ ಪ್ರಮಾದಕರ ವ್ಯಕ್ತಿತ್ವಗಳನ್ನು ರೂಪಿಸುತ್ತಾರೆ.
ಶಕ್ತಿಶಾಲಿಯಾದ ಮನಸ್ಸಿರುವ ಕಾರಣದಿಂದ ಅವರಿಗೆ ಒಲ್ಲದ ಮತ್ತು ಒಗ್ಗದ ವಿಷಯಗಳಿಗೆ ಪ್ರತಿರೋಧವನ್ನು ಒಡ್ಡುತ್ತವೆ.
ಬಂಡಾಯವೇಳುತ್ತವೆ. ಗ್ರಹಣಶಕ್ತಿಯು ಚೆನ್ನಾಗಿರುವುದರಿಂದ ಬೋಧನೆಗಳನ್ನು ಮೀರಿದ ಮಾದರಿಗಳನ್ನು ಗ್ರಹಿಸಿ ತಮ್ಮದಾಗಿಸಿಕೊಳ್ಳುತ್ತವೆ. ಮನಸ್ಸು ಫಲವತ್ತಾದ ಕ್ಷೇತ್ರವಾದ್ದರಿಂದ ಒಳಿತನದೋ, ಕೆಡುಕಿನದೋ, ಬೇಕಾದ್ದೋ, ಬೇಡದ್ದೋ; ಯಾವುದೇ ರೀತಿಯ ಬಿತ್ತನೆಯಾದರೂ ಹುಲುಸಾಗಿ ಬೆಳೆದು ಫಲಕೊಡುತ್ತವೆ. ಸಲಿಲತೆಯು ಮಕ್ಕಳ ಮನಸ್ಸಿನ ಗುಣವಾದ್ದರಿಂದ ಯಾವುದೇ ವಾತಾವರಣದ ಗುಣಾವಗುಣಗಳಿಗೆ ಒಗ್ಗಿಕೊಂಡು ಆಯಾ ಪರಿಸರದ ಪ್ರಭಾವಗಳಿಂದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತವೆ.
ಮುಗ್ಧವಾಗಿರುವುದರಿಂದ ತಾರ್ಕಿಕವಾಗಿ ವಿಷಯಗಳನ್ನು ವಿಶ್ಲೇಷಿಸದೇ ಸುಳ್ಳು, ನಿಜ, ಅಗತ್ಯ, ಅನಗತ್ಯಗಳ ಪರಿವೇ ಇಲ್ಲದೇ, ಮನವೊಲಿಸುವ ಆಧಾರದ ಮೇಲೆ ಎಲ್ಲವನ್ನೂ ನಿಜವೆಂದೇ ಒಪ್ಪಿಕೊಳ್ಳುತ್ತವೆ. ಸಂವೇದನಾಶೀಲಗುಣವೂ ಮಕ್ಕಳ ಮನಸ್ಸಿನ ಸಹಜವಾದ ಗುಣವಾದ್ದರಿಂದ ಅವರಿಗೆ ನಿಲುಕದ, ತರಬೇತಿ ನೀಡಲಾಗದ, ಅರ್ಥ ಮಾಡಿಸಲಾಗದ ವಿಷಯಗಳೇನೂ ಇಲ್ಲ. ಆದರೆ ಅವುಗಳನ್ನು ಮುಟ್ಟಿಸುವ ಕ್ರಮದ ಬಗ್ಗೆ ಹಿರಿಯರಿಗೆ ಅರಿವಿರಬೇಕು. ಕೊನೆಯದಾಗಿ ಮಕ್ಕಳ ಮನಸ್ಸು ಸೂಕ್ಷ್ಮ. ತೆಳುವಾದ ಗಾಜಿನ ಪರೆಯಷ್ಟು ಸೂಕ್ಷ್ಮ. ಅದನ್ನು ಘಾಸಿಗೊಳಿಸಿದರೆ ಅದರ ಪರಿಣಾಮ ಎಷ್ಟು ದಾರುಣವಾಗಿರುತ್ತದೆ ಎಂದು ಹೇಳಲಾಗುವುದಿಲ್ಲ.
ಮಕ್ಕಳ ಮನಸ್ಸಿನ ಸಮಸ್ಯೆ ಹಲವಾರು ಮೂಲಗಳು. ಕೆಲವು ಶಾರೀರಿಕ ಸಮಸ್ಯೆಯಾದರೆ, ಮತ್ತೆ ಕೆಲವಕ್ಕೆ ಕೌಟುಂಬಿಕ ಮತ್ತು ಸಾಮಾಜಿಕ ಕಾರಣಗಳು. ಆದರೆ ಅರಿತವರಿಗೆ ಪರಿಹಾರವಿದೆ.
ಶಿಶುತನ ವರ್ಸಸ್ ತನ್ನತನ
ಮಗುವೊಂದರ ಶಿಶುತನ ಮತ್ತು ವ್ಯಕ್ತಿಯೊಬ್ಬನ ತನ್ನತನಕ್ಕೆ ಒಂದು ಮುಖ್ಯವಾದ ವ್ಯತ್ಯಾಸವಿದೆ. ಶಿಶುತನವು ನೈಸರ್ಗಿಕವಾಗಿ ರೂಪುಗೊಂಡಿರುವುದು. ವ್ಯಕ್ತಿಯ ತನ್ನತನವು ತಾನೇ ರೂಪಿಸಿಕೊಳ್ಳುವುದು. ಮಗುವು ತನ್ನ ಶಿಶುತನದ ಸಹಜತೆಯಿಂದ ವರ್ತಿಸಿದರೆ, ವ್ಯಕ್ತಿಯು ತನ್ನತನವನ್ನು ತನ್ನ ವ್ಯಕ್ತಿತ್ವದ ಮೂಲಕ ಪ್ರಕಟಗೊಳಿಸಬೇಕಾಗುತ್ತದೆ. ಆದರೆ ಎರಡೂ ಸಂಸ್ಕಾರಕ್ಕೆ ಒಳಗಾಗುತ್ತಾ ತಮ್ಮ ಪ್ರಕಟಗೊಳ್ಳುವ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಹೊಂದುತ್ತಾ ಹೋಗುತ್ತದೆ. ಇದು ಅವುಗಳಿಗಿರುವ ಸಾಮ್ಯತೆ.
ಶಿಶುತನದ ಪ್ರಕಟಣೆ ಅನೈಚ್ಛಿಕವಾದ ಪ್ರಕ್ರಿಯೆಯಾದರೆ, ತನ್ನತನ ಐಚ್ಛಿಕ. ಶಿಶುತನದ ಪ್ರಕಟಣೆಯಲ್ಲಿ ಮುಗ್ಧತೆ ಇದ್ದರೆ, ತನ್ನತನದಲ್ಲಿ ಪ್ರಜ್ಞಾವಂತಿಕೆ ಇರುತ್ತದೆ. ಶಿಶುತನದ ಸೌಂದರ್ಯವು ಮುದ ತರುವ ಕಾರಣವೇ ಅದು ಸಹಜವಾಗಿ ಸೂಸುವ ಮುಗ್ಧತೆ. ತನ್ನತನದ ಪ್ರಕಟಣೆಯು ಮೂರ್ಖತೆಯಿಂದಲೂ ಕೂಡಿರಬಹುದು. ಏಕೆಂದರೆ ಅದು ತರ್ಕ, ಲೆಕ್ಕಾಚಾರ, ಉದ್ಧೇಶಿತ ಶ್ರದ್ಧೆ ಮತ್ತು ನಂಬಿಕೆಗಳಿಂದ ಕೂಡಿರುತ್ತದೆ. ಅದು ನಿರ್ಬಂಧಕ್ಕೆ ಒಳಗಾಗಿರುತ್ತದೆ.
ಆದರೆ ಶಿಶುತನಕ್ಕೆ ನಿರ್ಬಂಧವಿರುವುದಿಲ್ಲ. ಯಾವುದೇ ಬಗೆಯ ಪೂರ್ವಾಗ್ರಹಗಳಿರುವುದಿಲ್ಲ. ಸೈದ್ಧಾಂತಿಕ ಅಥವಾ ತಾತ್ವಿಕ ನೆಲೆಗಟ್ಟಿರುವುದಿಲ್ಲ. ಬರಿಯ ಹಿತ ಮತ್ತು ಆನಂದದ ಅಪೇಕ್ಷೆಯಿರುವ ಮಗುವಿಗೆ ಯಾವ ಗೊಂದಲಗಳು ಇರುವುದಿಲ್ಲ. ಅದೇ ಅವರಿಗೆ ವರ. ಹಾಗಾಗಿಯೇ ಯೇಸುಕ್ರಿಸ್ತ ಹೇಳುವುದು. “ನೀವು ಮಕ್ಕಳಂತಾಗದಿದ್ದರೆ ನಿಮಗೆ ಸ್ವರ್ಗಸಾಮ್ರಾಜ್ಯವು ಇರುವುದಿಲ್ಲ.”
ಶಿಶುತನವು ಪಶುತನದಂತೆಯೇ ಪ್ರಕೃತಿಯಲ್ಲಿ ನೈಸರ್ಗಿಕ. ಅವನನ್ನು ಸಾಮಾಜಿಕವಾಗಿ ಸಂಘ ಜೀವನಕ್ಕೆ ಒಳಪಡಿಸುವಾಗ ಆ ಶಿಶುತನದ ಲಾಲಿತ್ಯ ಮತ್ತು ಸೌಂದರ್ಯಕ್ಕೆ ಧಕ್ಕೆಯಾಗದ ಹಾಗೆ ಎಚ್ಚರಿಕೆ ವಹಿಸುವುದರಲ್ಲಿ ಹಿರಿಯರ ಕೌಶಲ್ಯವಿದೆ.
ಹಿರಿಯರ ಸಮಸ್ಯೆ ಎಂದರೆ ರೂಢಿಸಿಕೊಂಡ ಅಥವಾ ರೂಪಿಸಿಕೊಂಡ ತಮ್ಮತನದ ಪ್ರಭಾವದಲ್ಲಿ ತಾವು ದಾಟಿ ಬಂದ ಶಿಶುತನವನ್ನು ಮರೆತಿರುತ್ತಾರೆ. ಆ ವಿಸ್ಮೃತಿಯೇ ತಮ್ಮ ಜೊತೆಗಿರುವ ಮಕ್ಕಳ ಶಿಶುತನದ ನಾಶಕ್ಕೆ ಹಲವು ಕಾರಣಗಳಲ್ಲೊಂದು. ಶಿಶುತನವೆಂಬುದರ ಸೌಂದರ್ಯ, ಪ್ರಾಮಾಣಿಕತೆ, ಮುಗ್ಧತೆ ಮತ್ತು ಸೂಕ್ಷ್ಮತೆಯನ್ನು ತಮ್ಮತನದಲ್ಲಿ ಜೀವಂತವಾಗಿರಿಸಿಕೊಂಡಾಗಲೇ ನಿಜವಾದ ಆನಂದ.
(ಮುಂದುವರಿಯುವುದು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ಅಂಕಣ5 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ12 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ



