Connect with us

ಅಂತರಂಗ

ಅರಿಮೆಯ ಅರಿವಿರಲಿ-58 : ಶಿಶುಪ್ರಧಾನ ಸಮಾಜ

Published

on

  • ಯೋಗೇಶ್ ಮಾಸ್ಟರ್

ಮಾನವ ಸಮಾಜವು ಪ್ರಾರಂಭವಾಗಿ ಬಹಳ ಕಾಲವಾಯಿತು. ಆಗಿನ ಸಮಸ್ಯೆಗಳಿಗೆ, ಸಂಘರ್ಷಗಳಿಗೆ ಮತ್ತು ವೈಫಲ್ಯಗಳಿಗೆ ಪ್ರಾರಂಭಿಕ ಹಂತಗಳಲ್ಲಿನ ಪ್ರಯೋಗಗಳು ಮತ್ತು ಅನುಭವಗಳಿಗೆ ಇದ್ದಂತಹ ಸಂಪನ್ಮೂಲಗಳ ಕೊರತೆ ಎಂದು ಮನ್ನಿಸಬಹುದು.

ಮಾನವ ಸಮಾಜ ಹೊಂದಿರುವ ಅನುಭವದ ಸುದೀರ್ಘ ಅವಧಿಯನ್ನು ಗಣನೆಗೆ ತೆಗೆದುಕೊಂಡರೆ ಈ ಹೊತ್ತಿಗೆ ಇಡೀ ಮಾನವ ಜಗತ್ತು ಆರೋಗ್ಯ, ಸೌಹಾರ್ದ ಮತ್ತು ಆನಂದದಿಂದ ಇರಬೇಕಿತ್ತು. ಕನಿಷ್ಟ ಪಕ್ಷ ಸಮಸ್ಯೆ, ಸಂಘರ್ಷ ಮತ್ತು ವೈಫಲ್ಯಗಳು ಕ್ಷೀಣಿಸಿಬೇಕಿತ್ತು. ಆದರೆ ಇಂದು ನಾವು ಬದುಕುತ್ತಿರುವ ಸಮಾಜದಲ್ಲಿ ಎಲ್ಲವೂ ಸರಿಯಾಗಿಲ್ಲ.

ಇನ್ನೂ ತನ್ನ ಒಟ್ಟಾರೆಯ ಬದುಕಿನಲ್ಲಿ ಸ್ಥಿರತೆ ಕಂಡಿಲ್ಲ. ಆರ್ಥಿಕ ಸಮಸ್ಯೆ, ಮೂಲಭೂತ ಸೌಕರ್ಯಗಳ ಕೊರತೆ, ನಾಗರಿಕ ದಂಗೆ, ಯುದ್ಧ, ಸಾಮಾಜಿಕ ಅಸಮಾನತೆ, ಧಾರ್ಮಿಕ ಸಂಘರ್ಷ, ಜನಾಂಗೀಯ ದ್ವೇಷ, ಸೈದ್ಧಾಂತಿಕ ಸಮರ, ಶ್ರೇಷ್ಟತೆಯ ಪೈಪೋಟಿ, ಮೌಢ್ಯಾಚರಣೆಗಳು, ಪರಿಸರ ನಾಶ, ಜೀವನಮಟ್ಟದ ವೈಫಲ್ಯ, ಸಂಬಂಧಗಳ ಗೊಂದಲ ಮತ್ತು ಇನ್ನೂ ಅನೇಕ ಮನುಷ್ಯ ಕೇಂದ್ರಿತ ಸಮಸ್ಯೆಗಳು ತಾಜಾ ಬೆಂಕಿಯಂತೆಯೇ ಉರಿಯುತ್ತಿವೆ.

ಹೌದು, ಬೆಂಕಿಯ ಜ್ವಾಲೆಗಳಲ್ಲಿ ಹೊಸತು ಹಳತುಗಳಿಲ್ಲ. ಸಮಸ್ಯೆ, ಸಂಘರ್ಷ ಮತ್ತು ವೈಫಲ್ಯಗಳ ಬೆಂಕಿಯಲ್ಲಿ ಬೇಯುತ್ತಿರುವ ಮನುಷ್ಯನು ಇಷ್ಟು ಸುಧೀರ್ಘಕಾಲ ಸಾಮಾಜಿಕ ಜೀವನ ನಡೆಸಿದರೂ ಎಡವಿರುವುದು ಎಲ್ಲಿ ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ಅವನಿಗಿರುವ ಸಾಮಾಜಿಕ ಅನುಭವ ಇನ್ನೂ ಸಾಲದೇ? ಒಬ್ಬ ವ್ಯಕ್ತಿ, ಒಂದು ಕುಟುಂಬ, ಒಂದು ಸಮಾಜ, ಒಂದು ರಾಷ್ಟ್ರ ಮತ್ತು ಇರುವುದೊಂದೇ ಭೂಮಿ; ಆರೋಗ್ಯವಾಗಿ ಆನಂದದಿಂದ ಇರಲು ಇನ್ನೂ ಸಂಪೂರ್ಣ ಸಾಧಿಸಲು ಸಾಧ್ಯವಿಲ್ಲದಿರುವುದು ಮನುಷ್ಯ ತನ್ನ ಆದ್ಯತೆಯನ್ನು ಗುರುತಿಸಿಕೊಂಡಿಲ್ಲದೇ ಇರುವುದು ಎಂದು ನನ್ನ ಅಭಿಪ್ರಾಯ.

ಮಾನವ ಸಮಾಜದ ಆದ್ಯತೆಯ ವಿಷಯಗಳ ಪಟ್ಟಿಯನ್ನು ಪುನರ್ಪರಿಶೀಲನೆ ಮಾಡಬೇಕಿದೆ. ಇದರಿಂದ ಈಗ ಮತ್ತು ನಾಳೆ, ನಾವು ಹಾಗೂ ಮುಂದಿನ ಪೀಳಿಗೆಗಳು, ಕನಿಷ್ಟ ಪಕ್ಷ ಮನುಷ್ಯ ಮಾಡುವ ದುರಂತಗಳಿಂದಾದರೂ ಬಿಡುಗಡೆಯನ್ನು ಪಡೆಯಬಹುದು.

ಮಕ್ಕಳ ಪೋಷಣೆ ಮತ್ತು ಶಿಕ್ಷಣವನ್ನು ಆದ್ಯತೆಯ ಪಟ್ಟಿಯಲ್ಲಿ ಯಾವ ಕ್ರಮದಲ್ಲಿ ಸೂಚಿತವಾಗಿವೆ ಎನ್ನುವುದರ ಮೇಲೆ ಮಾನವ ಸಮಾಜದ ವರ್ತಮಾನದ ಮತ್ತು ಭವಿಷ್ಯದ ಬದುಕು ನಿರ್ಧರಿತವಾಗಿದೆ. ನಿನ್ನೆಗಳ ಸಂಘರ್ಷಗಳು, ಸಮಸ್ಯೆಗಳು, ಸಂಕಷ್ಟಗಳು, ಸಂಕಟಗಳು ಪ್ರಮಾದಗಳಾಗಿ ಇಂದಿನ ಮಕ್ಕಳ ಮನಸ್ಸಿನ ಮೇಲೆ, ಭಾವನೆಗಳ ಮೇಲೆ, ಪೋಷಣೆಯ ಮೇಲೆ ಮತ್ತು ಶಿಕ್ಷಣದ ಮೇಲೆ ಪ್ರಭಾವ ಬೀರಿದರೆ ನಾಳಿನ ಸಮಾಜವು ಅಸ್ಥಿರತೆಯಲ್ಲಿಯೇ ಇರುತ್ತದೆ. ಹಳೆಯ ಎಲ್ಲಾ ಸಂಕಟಗಳು ಹೊಸ ರೂಪಗಳಲ್ಲಿ ಜೀವಂತವಾಗಿಯೇ ಇರುತ್ತದೆ.

ಮಕ್ಕಳ ಮನಸ್ಸನ್ನು ರಕ್ಷಿಸಿದರೆ ಸಾಕು
ಯಾರ ಮಗುತನವನ್ನು ಜತನ ಮಾಡುತ್ತೇವೆಯೋ ಆ ವ್ಯಕ್ತಿಯ ತನ್ನತನವು ನೈತಿಕವಾಗಿಯೂ ಮತ್ತು ಬೌದ್ಧಿಕವಾಗಿಯೂ ಬಲಿಷ್ಟವಾಗಿರಲು ಸಾಧ್ಯ. ಹಾಗಾಗಿ ಶಿಶುವನ್ನು ಉಪಚರಿಸುವ ರೀತಿಯಲ್ಲಿ, ಸಂಸ್ಕರಿಸುವ ವಿಧಾನದಲ್ಲಿ ಮತ್ತು ಶಿಕ್ಷಣ ಕೊಡುವ ವಿಧಾನಗಳಲ್ಲಿ ಶಿಸ್ತು, ಸಂಯಮ ಮತ್ತು ಕ್ರಮವಂತೂ ಅಗತ್ಯವಾಗಿ ಬೇಕು.

ಒಂದು ದೊಡ್ಡದಾದ ಮರವು ತನ್ನ ಭೂತ ಕಾಲದಲ್ಲಿ ಸಣ್ಣ ಬೀಜವೇ ಆಗಿರುತ್ತದೆ. ಪ್ರಕೃತಿಯ ತೆಕ್ಕೆಯಲ್ಲಿರುವ ಮರವಾದರೂ ಒಮ್ಮೊಮ್ಮೆ ಯಾವ ವಿಶೇಷ ಉಪಚಾರ ಮತ್ತು ಸಂಸ್ಕರಣಗಳಿಲ್ಲದೇ ತನ್ನ ನೈಸರ್ಗಿಕ ಪ್ರಭಾವಕ್ಕೇ ತೆರೆದುಕೊಂಡು ವೃಕ್ಷವಾಗುವ ತನ್ನ ಸಾರ್ಥಕತೆಯನ್ನು ಕಂಡುಕೊಳ್ಳಬಹುದು. ಮನುಷ್ಯನ ಸಮಾಜದಲ್ಲಿ ಎಳೆಯ ಸದಸ್ಯನಾಗಿರುವ ಮಗುವಿನ ವಿಚಾರದಲ್ಲಿ ಹಾಗಾಗುವುದಿಲ್ಲ.

ಮಗುವನ್ನು ಅದರ ನೈಸರ್ಗಿಕ ಗುಣಗಳಿಂದ ಬಿಡಿಸಿ ಸಾಮಾಜಿಕ ಪ್ರಾಣಿಯನ್ನಾಗಿಸುವ ತರಬೇತಿಯನ್ನು ಸಮಾಜದ ಹಿರಿಯ ಸದಸ್ಯರು ಕೊಡುತ್ತಾರೆ. ಈ ಮಗುವನ್ನು ಸ್ವತಂತ್ರ ಜೀವನಕ್ಕೆ ಸಜ್ಜುಗೊಳಿಸುವ, ಸಾಮಾಜಿಕ ಜೀವನಕ್ಕೆ ಒಗ್ಗಿಸುವ ಪ್ರಕ್ರಿಯೆಯಲ್ಲಿ ಬಲವನ್ನೂ, ಒಲವನ್ನೂ ಮತ್ತು ನಲಿವನ್ನೂ ರೂಢಿಸಬೇಕು. ಅದು ಹೊಣೆಗಾರಿಕೆಯೂ ಹೌದು ಮತ್ತು ಸವಾಲಿನದೂ ಹೌದು.

ಮಗುತನದ ಬಹುಮುಖ್ಯ ಗುಣಗಳೆಂದರೆ ಅದು ಎಳೆಯದಾಗಿ ಮೆದುವಾಗಿರುವುದು, ಗ್ರಹಿಸುವ ಸಾಮರ್ಥ್ಯದಲ್ಲಿ ಶಕ್ತಿಯಾಗಿರುವುದು ಮತ್ತು ಸ್ವೀಕರಿಸಿದ್ದನ್ನು ಹೆಚ್ಚಿಸುವ, ವಿಕಸಿಸುವ ಹಾಗೂ ಮರುಸೃಷ್ಟಿಸುವ ಫಲವತ್ತಿಕೆಯನ್ನು ಹೊಂದಿರುವುದು. ಆದ್ದರಿಂದ ಈ ಮಗುತನವನ್ನು ಬಹಳ ನೇಮ ನಿಷ್ಟೆಯಿಂದ ಜತನ ಮಾಡಬೇಕಾಗಿರುವುದು.

ಇಂತಹ ಮೆದುತನದ ಮತ್ತು ಫಲವಂತಿಕೆಯ ಮಗುತನವು ಯಾವುದ್ಯಾವುದೋ ಆಕ್ರಮಣಗಳಿಗೆ ಸಿಕ್ಕು ನಾಶವಾಗದಿರಲು ಪ್ರತಿಯೊಬ್ಬ ಹಿರಿಯನೂ, ಅಂದರೆ ಸಮಾಜದ ಹಿರಿಯ ಸದಸ್ಯನು ಕಿರಿಯ ಸದಸ್ಯನಿಗೆ ಕವಚವಾಗಿ ತನ್ನ ಹೊಣೆಗಾರಿಕೆಯನ್ನು ನಿರ್ವಹಿಸಬೇಕು. ಸಂರಕ್ಷಿಸಲ್ಪಟ್ಟ ಶಿಶುತನದ ಸಸಿಯು ನಾಳೆ ಸಶಕ್ತವಾದ ತನ್ನತನವನ್ನು ಹೊಂದಿರುವ ವ್ಯಕ್ತಿಯಾಗಿ ರೂಪುಗೊಳ್ಳುವ ಸಾಧ್ಯತೆ ಇರುವುದು.

ಹಾಗೆಯೇ ಭದ್ರತೆ ಅಥವಾ ರಕ್ಷಣೆಯ ನೆಪದಲ್ಲಿ ಮಗುವಿನ ಸ್ವಾತಂತ್ರ್ಯಹರಣ ಮಾಡುವುದಲ್ಲ. ಹಿರಿಯ ಸದಸ್ಯರ ಜೀವನಾನುಭವ, ಜೀವನ ಕೌಶಲ್ಯ ಮತ್ತು ಜೀವನ ಪಾಠಗಳು ತಮ್ಮ ಮುಂದಿರುವ ಮಗುವಿಗೆ ಒಂದು ಸರಿಯಾದ ಅನುಭವ ಕೊಡದಿದ್ದರೆ, ಕೌಶಲ್ಯವನ್ನು ಕಲಿಸದಿದ್ದರೆ, ತನ್ನ ಜೀವನವನ್ನು ತಾನು ಸಮರ್ಥವಾಗಿ ಪ್ರೀತಿಸಿಕೊಳ್ಳುತ್ತಾ ಎಲ್ಲರೊಡನೆ ಬದುಕಲು ಸಾಧ್ಯವಾಗದಿದ್ದರೆ; ಆ ಹಿರಿ ಬದುಕಿನ ಸಾರ್ಥಕತೆಯೇನು?

ಶಿಶುವೆಂಬ ಮಹಾಬಲ

ಮಗುವು ಆಕಾರದಲ್ಲಿ ಚಿಕ್ಕದೆಂದೂ, ಆಧಾರಕ್ಕೆ ನಮ್ಮನ್ನು ಅವಲಂಬಿಸಿದೆಯೆಂದೂ, ಆಹಾರವನ್ನು ನಾವೇ ನೀಡುತ್ತಾ, ಅಕ್ಷರವನ್ನೂ ಕಲಿಸುವುದರಿಂದ ನಾವೇ ಅದರ ಮಹಾಪೋಷಕರೂ, ಆಧಾರಸ್ತಂಭವೆಂದೂ ಹಿರಿಯರು ತಿಳಿದುಕೊಳ್ಳುವುದರಿಂದ ಎಷ್ಟೋ ಮಕ್ಕಳ ಸಾಮರ್ಥ್ಯ ಬೆಳೆಯುವುದಿಲ್ಲ, ಪ್ರತಿಭೆಗಳು ಅನಾವರಣಗೊಳ್ಳುವುದಿಲ್ಲ, ಮತ್ತು ಬದುಕಿನ ಸ್ಥಿರತೆ ಕಾಣುವುದಿಲ್ಲ. ಮಕ್ಕಳ ಎಳೆಯತನವನ್ನು ಬಲಗೊಳಿಸುತ್ತೇವೆ ಎಂಬ ಭ್ರಮೆಯಿಂದ ಅವರನ್ನು ದುರ್ಬಲಗೊಳಿಸುತ್ತೇವೆ.

ವಾಸ್ತವವಾಗಿ ನಮ್ಮ ಮಕ್ಕಳು ನಮಗಿಂತ ದೂರಗಾಮಿಗಳು, ಸಬಲರು ಮತ್ತು ವಿವೇಚನೆಯುಳ್ಳವರು. ಅವರ ಸಂವೇದನಾಶೀಲತೆಯನ್ನು ಕಂಡುಕೊಳ್ಳಲು ಬಿಡದೇ, ಸೃಜನಶೀಲತೆಯನ್ನು ಮತ್ತು ಕ್ರಿಯಾಶೀಲತೆಯನ್ನು ಪ್ರಯೋಗಕ್ಕೆ ಒಳಪಡಿಸಿಕೊಳ್ಳಲೂ ಬಿಡದೇ ನಮ್ಮ ಪ್ರಯೋಗಳ ಸಾಧನೆ ಮತ್ತು ವೈಫಲ್ಯಗಳನ್ನೇ ಅವರ ಪ್ರಯೋಗಳಿಗೂ ಮಾನದಂಡವಾಗಿಸುವುದರಿಂದ ಅವರ ನಿಜವಾದ ಬಲ ಸಂವರ್ಧನೆಯಾಗುವುದಿಲ್ಲ. ಎಷ್ಟೋ ಸಲ ಅನಾವರಣವೇ ಆಗುವುದಿಲ್ಲ.

ನಮ್ಮ ದೌರ್ಬಲ್ಯವನ್ನು ಅರಿಯುವಲ್ಲಿ ಅವರ ಸಾಮರ್ಥ್ಯವನ್ನು ಅರಿಯುವ ಸಾಧ್ಯತೆಯುಂಟು. ನಮ್ಮ ವೈಫಲ್ಯವನ್ನು ಗುರುತಿಸಿಕೊಳ್ಳುವುದರಲ್ಲಿ ಅವರ ಸಾಫಲ್ಯವಿರಬಹುದು. ನಮ್ಮ ಸಿದ್ಧ ಮಾದರಿಗಳನ್ನು ಮೀರುವುದರಲ್ಲಿ ಅವರ ಸಾಧನೆಯ ಹಾದಿಯು ವಿಸ್ತರಿಸುವ ಸಾಧ್ಯತೆಗಳಿರುತ್ತದೆ. ನಮ್ಮ ಹಿರಿಮೆ ಅವರ ಮುಂದೆ ವಿದೇಯವಾಗಬೇಕು. ನಮ್ಮ ಗುರಿ ಅವರ ಗುರಿಯಲ್ಲ. ಅವರ ದಾರಿಯಲ್ಲಿ ನಾವು ಅವರನ್ನು ಹೊತ್ತೊಯ್ಯಲಾಗದಿದ್ದರೂ ತೊಡಕಾದಿರುವಂತೆ ನಮ್ಮನ್ನು ನಾವು ನಿರ್ಬಂಧಿಸಿಕೊಂಡರೆ ಅವರು ತಮ್ಮ ಬಲವನ್ನು ತಾವು ಸಾಕ್ಷಾತ್ಕರಿಸಿಕೊಳ್ಳಲು ಸಾಧ್ಯವಾಗುತ್ತದೆ.

ಮಗುವೆಂದರೆ ನಮ್ಮ ಅಧೀನದಲ್ಲಿರುವ ಅಧೀರನೆಂಬ ಭ್ರಮೆ ನಮ್ಮಿಂದ ತೊಲಗದ ತನಕ, ಮಗುವಿನ ಅಸಹಾಯಕತೆಗೆ ನಾನೇ ಔದಾರ್ಯದ ಮಹಾ ಸಹಾಯವೆಂಬ ಅಹಂಕಾರ ಕುಸಿಯುವ ತನಕ, ಮಗುವೆಂಬ ಮುಗ್ಧ ಜೀವಕ್ಕೆ ನಾವೇ ವಿಚಾರ ಮತ್ತು ಚಿಂತನೆಗಳನ್ನು ನೀಡಬೇಕು ಎಂಬ ಅವೈಜ್ಞಾನಿಕ ನಿಲುವನ್ನು ತೊರೆಯುವ ತನಕ ಮಗುವು ತನ್ನ ಬಲವನ್ನು ತಾನು ಸಾಕ್ಷಾತ್ಕರಿಸಿಕೊಳ್ಳಲು ನಮ್ಮ ಹಿರಿಯರು ಬಿಡುವುದಿಲ್ಲ.

ಶಿಶುವಿನ ಬಲವು ಹೊತ್ತಿಳಿಯುತ್ತಿರುವ ಹಿರಿಯರಿಗೆ ಬಲ ನೀಡುವುದು. ಈ ಸತ್ಯವನ್ನು ಅರಿಯುವ ಹಿರಿಯರು ಶಿಶುವಿನ ಪೋಷಣೆಯ ಮತ್ತು ಶಿಕ್ಷಣದ ವಿಷಯದಲ್ಲಿ ತಮ್ಮ ದಾರಿ ಮತ್ತು ಗುರಿಯನ್ನು ಸ್ಪಷ್ಟವಾಗಿಸಿಕೊಂಡಿರಲು ಸಾಧ್ಯ. ಶಿಶುಬಲವೇ ಸಮಾಜದ ಮಹಾಬಲ.

ಶಿಶುಮನ

ಮಕ್ಕಳ ಮನಸ್ಸು ಬಹಳ ವಿಶಿಷ್ಟ ಸಂಯೋಜನೆಯಿಂದ ಕೂಡಿರುತ್ತದೆ. ಮೊದಲನೆಯದಾಗಿ ಅದು ಬಹಳ ಸಶಕ್ತವಾಗಿರುತ್ತದೆ. ಎರಡನೆಯದಾಗಿ ಗ್ರಹಿಕೆಯಲ್ಲಿ ಚುರುಕಾಗಿರುತ್ತದೆ. ಮೂರನೆಯದಾಗಿ ಅಗಾಧ ಫಲವತ್ತಿನ ಕ್ಷೇತ್ರವಾಗಿರುತ್ತದೆ. ನಾಲ್ಕನೆಯದಾಗಿ ಸಲಿಲತೆಯಿಂದ ಕೂಡಿರುತ್ತದೆ. ಐದನೆಯದಾಗಿ ಮುಗ್ಧವಾಗಿರುತ್ತದೆ. ಆರನೆಯದಾಗಿ ಸಂವೇದನೆಯಿಂದ ಕೂಡಿರುತ್ತದೆ. ಏಳನೆಯದಾಗಿ ಸೂಕ್ಷ್ಮವಾಗಿರುತ್ತದೆ. ಈ ಏಳೂ ಗುಣಗಳ ಕಾರಣದಿಂದ ಅವರ ಜೊತೆಗೆ ಹಿರಿಯರಾದವರು ವ್ಯವಹರಿಸುವಾಗ ಬಹಳ ಎಚ್ಚರಿಕೆಯಿಂದಲೂ ಮತ್ತು ಜವಾಬ್ದಾರಿಯಿಂದಲೂ ವರ್ತಿಸಬೇಕು.

ಅವರ ಸಂಪರ್ಕದಲ್ಲಿರುವಾಗ ಮತ್ತು ಸಂವಹನ ನಡೆಸುವಾಗ ಹಿರಿಯರ ನಡವಳಿಕೆ ಬಹಳ ಸಂವೇದನೆಯಿಂದ ಕೂಡಿರಬೇಕು. ಸೂಕ್ಷ್ಮದೃಷ್ಟಿ ಮತ್ತುದೂರದೃಷ್ಟಿಯನ್ನು ಹೊಂದಿರದ ಹಿರಿಯರು ಮಕ್ಕಳ ಮನಸ್ಸನ್ನು ಘಾಸಿ ಮಾಡುವುದು ಮಾತ್ರವಲ್ಲದೇ, ತಪ್ಪಾಗಿ ತರಬೇತಿಗಳ ಮೂಲಕ ಪ್ರಮಾದಕರ ವ್ಯಕ್ತಿತ್ವಗಳನ್ನು ರೂಪಿಸುತ್ತಾರೆ.
ಶಕ್ತಿಶಾಲಿಯಾದ ಮನಸ್ಸಿರುವ ಕಾರಣದಿಂದ ಅವರಿಗೆ ಒಲ್ಲದ ಮತ್ತು ಒಗ್ಗದ ವಿಷಯಗಳಿಗೆ ಪ್ರತಿರೋಧವನ್ನು ಒಡ್ಡುತ್ತವೆ.

ಬಂಡಾಯವೇಳುತ್ತವೆ. ಗ್ರಹಣಶಕ್ತಿಯು ಚೆನ್ನಾಗಿರುವುದರಿಂದ ಬೋಧನೆಗಳನ್ನು ಮೀರಿದ ಮಾದರಿಗಳನ್ನು ಗ್ರಹಿಸಿ ತಮ್ಮದಾಗಿಸಿಕೊಳ್ಳುತ್ತವೆ. ಮನಸ್ಸು ಫಲವತ್ತಾದ ಕ್ಷೇತ್ರವಾದ್ದರಿಂದ ಒಳಿತನದೋ, ಕೆಡುಕಿನದೋ, ಬೇಕಾದ್ದೋ, ಬೇಡದ್ದೋ; ಯಾವುದೇ ರೀತಿಯ ಬಿತ್ತನೆಯಾದರೂ ಹುಲುಸಾಗಿ ಬೆಳೆದು ಫಲಕೊಡುತ್ತವೆ. ಸಲಿಲತೆಯು ಮಕ್ಕಳ ಮನಸ್ಸಿನ ಗುಣವಾದ್ದರಿಂದ ಯಾವುದೇ ವಾತಾವರಣದ ಗುಣಾವಗುಣಗಳಿಗೆ ಒಗ್ಗಿಕೊಂಡು ಆಯಾ ಪರಿಸರದ ಪ್ರಭಾವಗಳಿಂದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತವೆ.

ಮುಗ್ಧವಾಗಿರುವುದರಿಂದ ತಾರ್ಕಿಕವಾಗಿ ವಿಷಯಗಳನ್ನು ವಿಶ್ಲೇಷಿಸದೇ ಸುಳ್ಳು, ನಿಜ, ಅಗತ್ಯ, ಅನಗತ್ಯಗಳ ಪರಿವೇ ಇಲ್ಲದೇ, ಮನವೊಲಿಸುವ ಆಧಾರದ ಮೇಲೆ ಎಲ್ಲವನ್ನೂ ನಿಜವೆಂದೇ ಒಪ್ಪಿಕೊಳ್ಳುತ್ತವೆ. ಸಂವೇದನಾಶೀಲಗುಣವೂ ಮಕ್ಕಳ ಮನಸ್ಸಿನ ಸಹಜವಾದ ಗುಣವಾದ್ದರಿಂದ ಅವರಿಗೆ ನಿಲುಕದ, ತರಬೇತಿ ನೀಡಲಾಗದ, ಅರ್ಥ ಮಾಡಿಸಲಾಗದ ವಿಷಯಗಳೇನೂ ಇಲ್ಲ. ಆದರೆ ಅವುಗಳನ್ನು ಮುಟ್ಟಿಸುವ ಕ್ರಮದ ಬಗ್ಗೆ ಹಿರಿಯರಿಗೆ ಅರಿವಿರಬೇಕು. ಕೊನೆಯದಾಗಿ ಮಕ್ಕಳ ಮನಸ್ಸು ಸೂಕ್ಷ್ಮ. ತೆಳುವಾದ ಗಾಜಿನ ಪರೆಯಷ್ಟು ಸೂಕ್ಷ್ಮ. ಅದನ್ನು ಘಾಸಿಗೊಳಿಸಿದರೆ ಅದರ ಪರಿಣಾಮ ಎಷ್ಟು ದಾರುಣವಾಗಿರುತ್ತದೆ ಎಂದು ಹೇಳಲಾಗುವುದಿಲ್ಲ.

ಮಕ್ಕಳ ಮನಸ್ಸಿನ ಸಮಸ್ಯೆ ಹಲವಾರು ಮೂಲಗಳು. ಕೆಲವು ಶಾರೀರಿಕ ಸಮಸ್ಯೆಯಾದರೆ, ಮತ್ತೆ ಕೆಲವಕ್ಕೆ ಕೌಟುಂಬಿಕ ಮತ್ತು ಸಾಮಾಜಿಕ ಕಾರಣಗಳು. ಆದರೆ ಅರಿತವರಿಗೆ ಪರಿಹಾರವಿದೆ.

ಶಿಶುತನ ವರ್ಸಸ್ ತನ್ನತನ

ಮಗುವೊಂದರ ಶಿಶುತನ ಮತ್ತು ವ್ಯಕ್ತಿಯೊಬ್ಬನ ತನ್ನತನಕ್ಕೆ ಒಂದು ಮುಖ್ಯವಾದ ವ್ಯತ್ಯಾಸವಿದೆ. ಶಿಶುತನವು ನೈಸರ್ಗಿಕವಾಗಿ ರೂಪುಗೊಂಡಿರುವುದು. ವ್ಯಕ್ತಿಯ ತನ್ನತನವು ತಾನೇ ರೂಪಿಸಿಕೊಳ್ಳುವುದು. ಮಗುವು ತನ್ನ ಶಿಶುತನದ ಸಹಜತೆಯಿಂದ ವರ್ತಿಸಿದರೆ, ವ್ಯಕ್ತಿಯು ತನ್ನತನವನ್ನು ತನ್ನ ವ್ಯಕ್ತಿತ್ವದ ಮೂಲಕ ಪ್ರಕಟಗೊಳಿಸಬೇಕಾಗುತ್ತದೆ. ಆದರೆ ಎರಡೂ ಸಂಸ್ಕಾರಕ್ಕೆ ಒಳಗಾಗುತ್ತಾ ತಮ್ಮ ಪ್ರಕಟಗೊಳ್ಳುವ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಹೊಂದುತ್ತಾ ಹೋಗುತ್ತದೆ. ಇದು ಅವುಗಳಿಗಿರುವ ಸಾಮ್ಯತೆ.

ಶಿಶುತನದ ಪ್ರಕಟಣೆ ಅನೈಚ್ಛಿಕವಾದ ಪ್ರಕ್ರಿಯೆಯಾದರೆ, ತನ್ನತನ ಐಚ್ಛಿಕ. ಶಿಶುತನದ ಪ್ರಕಟಣೆಯಲ್ಲಿ ಮುಗ್ಧತೆ ಇದ್ದರೆ, ತನ್ನತನದಲ್ಲಿ ಪ್ರಜ್ಞಾವಂತಿಕೆ ಇರುತ್ತದೆ. ಶಿಶುತನದ ಸೌಂದರ್ಯವು ಮುದ ತರುವ ಕಾರಣವೇ ಅದು ಸಹಜವಾಗಿ ಸೂಸುವ ಮುಗ್ಧತೆ. ತನ್ನತನದ ಪ್ರಕಟಣೆಯು ಮೂರ್ಖತೆಯಿಂದಲೂ ಕೂಡಿರಬಹುದು. ಏಕೆಂದರೆ ಅದು ತರ್ಕ, ಲೆಕ್ಕಾಚಾರ, ಉದ್ಧೇಶಿತ ಶ್ರದ್ಧೆ ಮತ್ತು ನಂಬಿಕೆಗಳಿಂದ ಕೂಡಿರುತ್ತದೆ. ಅದು ನಿರ್ಬಂಧಕ್ಕೆ ಒಳಗಾಗಿರುತ್ತದೆ.

ಆದರೆ ಶಿಶುತನಕ್ಕೆ ನಿರ್ಬಂಧವಿರುವುದಿಲ್ಲ. ಯಾವುದೇ ಬಗೆಯ ಪೂರ್ವಾಗ್ರಹಗಳಿರುವುದಿಲ್ಲ. ಸೈದ್ಧಾಂತಿಕ ಅಥವಾ ತಾತ್ವಿಕ ನೆಲೆಗಟ್ಟಿರುವುದಿಲ್ಲ. ಬರಿಯ ಹಿತ ಮತ್ತು ಆನಂದದ ಅಪೇಕ್ಷೆಯಿರುವ ಮಗುವಿಗೆ ಯಾವ ಗೊಂದಲಗಳು ಇರುವುದಿಲ್ಲ. ಅದೇ ಅವರಿಗೆ ವರ. ಹಾಗಾಗಿಯೇ ಯೇಸುಕ್ರಿಸ್ತ ಹೇಳುವುದು. “ನೀವು ಮಕ್ಕಳಂತಾಗದಿದ್ದರೆ ನಿಮಗೆ ಸ್ವರ್ಗಸಾಮ್ರಾಜ್ಯವು ಇರುವುದಿಲ್ಲ.”

ಶಿಶುತನವು ಪಶುತನದಂತೆಯೇ ಪ್ರಕೃತಿಯಲ್ಲಿ ನೈಸರ್ಗಿಕ. ಅವನನ್ನು ಸಾಮಾಜಿಕವಾಗಿ ಸಂಘ ಜೀವನಕ್ಕೆ ಒಳಪಡಿಸುವಾಗ ಆ ಶಿಶುತನದ ಲಾಲಿತ್ಯ ಮತ್ತು ಸೌಂದರ್ಯಕ್ಕೆ ಧಕ್ಕೆಯಾಗದ ಹಾಗೆ ಎಚ್ಚರಿಕೆ ವಹಿಸುವುದರಲ್ಲಿ ಹಿರಿಯರ ಕೌಶಲ್ಯವಿದೆ.
ಹಿರಿಯರ ಸಮಸ್ಯೆ ಎಂದರೆ ರೂಢಿಸಿಕೊಂಡ ಅಥವಾ ರೂಪಿಸಿಕೊಂಡ ತಮ್ಮತನದ ಪ್ರಭಾವದಲ್ಲಿ ತಾವು ದಾಟಿ ಬಂದ ಶಿಶುತನವನ್ನು ಮರೆತಿರುತ್ತಾರೆ. ಆ ವಿಸ್ಮೃತಿಯೇ ತಮ್ಮ ಜೊತೆಗಿರುವ ಮಕ್ಕಳ ಶಿಶುತನದ ನಾಶಕ್ಕೆ ಹಲವು ಕಾರಣಗಳಲ್ಲೊಂದು. ಶಿಶುತನವೆಂಬುದರ ಸೌಂದರ್ಯ, ಪ್ರಾಮಾಣಿಕತೆ, ಮುಗ್ಧತೆ ಮತ್ತು ಸೂಕ್ಷ್ಮತೆಯನ್ನು ತಮ್ಮತನದಲ್ಲಿ ಜೀವಂತವಾಗಿರಿಸಿಕೊಂಡಾಗಲೇ ನಿಜವಾದ ಆನಂದ.

(ಮುಂದುವರಿಯುವುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending