ಅಂತರಂಗ
ಅರಿಮೆಯ ಅರಿವಿರಲಿ -60: ಮಾನಸ ಸರೋವರದಲ್ಲಿ ಶಿಶುವಿಹಾರ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/children_behaviour_Suddidina.jpg&description=ಅರಿಮೆಯ ಅರಿವಿರಲಿ -60: ಮಾನಸ ಸರೋವರದಲ್ಲಿ ಶಿಶುವಿಹಾರ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/children_behaviour_Suddidina.jpg&description=ಅರಿಮೆಯ ಅರಿವಿರಲಿ -60: ಮಾನಸ ಸರೋವರದಲ್ಲಿ ಶಿಶುವಿಹಾರ', 'pinterestShare', 'width=750,height=350'); return false;" title="Pin This Post">
- ಯೋಗೇಶ್ ಮಾಸ್ಟರ್
ಮಾನವ ಸಮಾಜವು ತನ್ನ ನೈಸರ್ಗಿಕವಾದ ಪಶುಪ್ರವೃತ್ತಿಯನ್ನು ತೊರೆದು ಸಂಘಜೀವಿಯಾಗಿ ಸಾಮುದಾಯಿಕವಾಗಿ ಬಾಳಿ ಬದುಕಲು ಕಂಡುಕೊಂಡ ಹಲವು ಮಾರ್ಗಗಳಲ್ಲಿ ಧರ್ಮವೂ ಒಂದು. ಮನುಷ್ಯ ತನ್ನೆಲ್ಲಾ ದುರ್ಗುಣ, ಗುಣದೋಷಗಳಿಂದ ಮುಕ್ತವಾಗಿ, ಪರಸ್ಪರ ಸಾಮರಸ್ಯದಿಂದ ಮೌಲ್ಯವೆಂದು, ಸದ್ಗುಣಗಳೆಂದು ಕರೆಯಲಾಗುವ ಒಪ್ಪಿತ ಗುಣಗಳನ್ನು ಅಳವಡಿಸಿಕೊಂಡು ಬದುಕಲು ಅದು ನೈತಿಕ ಚೌಕಟ್ಟನ್ನು ಕಟ್ಟಿಕೊಟ್ಟಿತು.
ಬೇರೆ ಬೇರೆ ಕಡೆಗಳಲ್ಲಿ ಅಲ್ಲಿನ ಪ್ರಾದೇಶಿಕ ಭಿನ್ನತೆಗಳಿಗೆ, ಸಾಂಸ್ಕೃತಿಕ ಹಿನ್ನೆಲೆಗಳಿಗೆ, ಸಾಮಾಜಿಕ ವ್ಯವಸ್ಥೆಗಳಿಗೆ, ಎದುರಿಸುತ್ತಿದ್ದಂತ ಸಮಸ್ಯೆಗಳಿಗೆ, ಎದೆಗೊಡಬೇಕಾಗಿದ್ದ ಸಂಘರ್ಷಗಳಿಗೆ ತಕ್ಕಂತೆ ಧರ್ಮಗಳು ರೂಪುಗೊಂಡವು. ಈ ಎಲ್ಲಾ ಭಿನ್ನತೆಯ ಹಿನ್ನೆಲೆಗಳನ್ನು ಹೊಂದಿದ್ದ ಧರ್ಮಗಳನ್ನು ಅನುಸರಿಸುವವರು ಆ ಪ್ರದೇಶದಲ್ಲಷ್ಟೇ ಅಲ್ಲದೇ ಇತರ ಕಡೆಗಳಿಗೂ ಕ್ರಮೇಣ ಚದುರಿದರು.
ಹಾಗಾಗಿ ಅವರ ಧಾರ್ಮಿಕತೆಯು ವಿಧಿಸಿದ ನೈತಿಕ ಚೌಕಟ್ಟುಗಳು ಭಿನ್ನ ಪ್ರದೇಶಗಳಿಗೆ ಒಂದಷ್ಟು ಒಗ್ಗುತ್ತಿದ್ದವು, ಮತ್ತೊಂದಷ್ಟು ಒಗ್ಗುತ್ತಿರಲಿಲ್ಲ. ಆದರೆ ಅವರೆಲ್ಲರೂ ಮೂಲಭೂತವಾಗಿ ಹೋಮೋ ಸೇಪಿಯನ್ಸ್ ತಳಿಯವರೇ ಆದ್ದರಿಂದ ಮೂಲಭೂತವಾಗಿ ಅನೇಕಾನೇಕ ವಿಷಯಗಳು ತಾಳೆಯಾಗುತ್ತವೆ. ರೂಢಿಗಳಲ್ಲಷ್ಟೇ ಬೇಧಗಳಿರುತ್ತವೆ.
ಆದರೆ ತಾವೇ ಮನುಷ್ಯರಾಗಿರುವ ಅಂಶವಾಗಲಿ, ತಮ್ಮ ಜೈವಿಕ ಸಂತಾನವನ್ನು ಮುಂದುವರಿಸುವ ಮಕ್ಕಳ ವಿಷಯವಾಗಲಿ, ಪರಸ್ಪರ ಗೌರವ, ಪ್ರೀತಿ, ದಯೆಯೇ ಮೊದಲಾದ ಅಮೂರ್ತ ಮೂಲಭೂತ ಪರಿಕಲ್ಪನೆಗಳಲ್ಲಾಗಲಿ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ. ಎಲ್ಲಾ ಧರ್ಮದ, ಸಂಸ್ಕೃತಿಗಳ ರೂಢಿಯಿರುವವರನ್ನು ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಅಗತ್ಯಗಳು ಬೆಸೆಯುವಂತೆ ಮಾಡಿವೆ.
ವ್ಯಾಣಿಜ್ಯದಲ್ಲಿ, ವ್ಯಾವಹಾರಿಕವಾಗಿ ಮತ್ತು ರಾಜನೈತಿಕವಾಗಿ ಬೆರೆಯಲು ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳು ಕೊಂಡಿಗಳಾಗಿ ಕೆಲಸ ಮಾಡಿದರೂ ಮಾನುಷ ಸಂಬಂಧ ಮತ್ತು ಜೀವಪರ ಕಾಳಜಿಯು ಎಲ್ಲರಲ್ಲಿ ಸಾಮಾನ್ಯವಾಗಿಸಲು ಇರುವ ಒಂದು ಪ್ರತಿನಿಧಿಯೆಂದರೆ ಅದು ಮಗು.
ಶಿಶುಧರ್ಮ
ಮಗುವಿನ ಮಗುತನವು ಧರ್ಮಾತೀತವಾದದ್ದು. ಅದರ ಮೂಲಭೂತ ಅಗತ್ಯಗಳು ಸಾರ್ವತ್ರಿಕವಾದುದು. ಅದರ ಸಮಸ್ಯೆಗಳು ಸಾಮಾಜಿಕವಾದದ್ದು. ಹಾಗಾಗಿ, ಧರ್ಮದ ನೆಲೆಗಳಿಂದಲೂ ಮತ್ತು ಮಗುವಿನ ಮನೋವೈಜ್ಞಾನಿಕ ನೆಲೆಗಟ್ಟಿನಿಂದಲೂ ಸಮಾಜದ ಹಿರಿಯ ಸದಸ್ಯರು ಎಚ್ಚರಗೊಳ್ಳಬೇಕಿದೆ. ನಮ್ಮ ಯಾವುದೇ ಕಾರಣದ ಇಂದಿನ ಸಂಘರ್ಷಗಳು ಅವರಿಗೆ ನೆಮ್ಮದಿಯ ನಾಳೆ ನೀಡುವುದಿಲ್ಲವಲ್ಲ!
ಎಲ್ಲರೂ ನೆಮ್ಮದಿ ಮತ್ತು ಶಾಂತಿಯಿಂದ ಇರುವಂತಹ ಆದರ್ಶ ಸಮಾಜದ ಪರಿಕಲ್ಪನೆ ಬಹಳ ಹಳೆಯದು. ಹಲವಾರು ಸಾಮಾಜಿಕ ಸುಧಾರಕರು, ನಾಯಕರು ಮತ್ತು ನವಸಮಾಜದ ಹರಿಕಾರರು ನಾನಾ ಪ್ರಯೋಗಗಳನ್ನು ಮಾಡಿಕೊಂಡು ಬಂದಿದ್ದಾರೆ. ಸಾಮಾಜಿಕ ಸಂರಚನೆಯಲ್ಲಿ ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ, ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಆಂದೋಲನಗಳು ನಡೆದಿವೆ ಮತ್ತು ಮಾದರಿಗಳನ್ನು ನಿರ್ಮಿಸಿವೆ. ಆದರೆ ಅವ್ಯಾವುವೂ ನಮ್ಮ ನೆಮ್ಮದಿಯ ಸಮಾಜವನ್ನು ಕಟ್ಟಿಕೊಡುವಲ್ಲಿ ಸಂಪೂರ್ಣ ಯಶಸ್ಸನ್ನು ಕಾಣಲಿಲ್ಲ.
ಈಗ ನಮ್ಮ ಈಗಿನ ಮತ್ತು ಮುಂದಿನ ಪೀಳಿಗೆಗಳು ನೆಮ್ಮದಿಯ ಬದುಕನ್ನು ಕಾಣಬೇಕಾದರೆ ಯಾವುದು ನಮ್ಮ ಸಮಾಜದ ಕೇಂದ್ರವಾಗಬೇಕು ಎಂಬ ಪ್ರಶ್ನೆಗೆ ಪ್ರಯೋಗಕ್ಕೆ ಸಾಧ್ಯತೆಗಳಿರುವ ಉತ್ತರವಿದೆ. ಅದು ಶಿಶು ಕೇಂದ್ರಿತ ಸಮಾಜ. ಶಿಶು ಕೇಂದ್ರಿತ ಸಮಾಜದ ಚಟುವಟಿಕೆಗಳು ಒಂದೊಂದು ಕುಟುಂಬವನ್ನೂ, ಒಟ್ಟಾರೆ ಸಮಾಜವನ್ನೂ ಮತ್ತು ಇಡೀ ರಾಷ್ಟ್ರವನ್ನು ನೆಮ್ಮದಿಯಿಂದಿಡಲು ಸಾಧ್ಯ. ನಮ್ಮ ಹಿರಿಯರ ಆದರ್ಶ ಸಮಾಜವನ್ನು ಕಟ್ಟುವ ಕನಸನ್ನು ಶಿಶುಪ್ರಧಾನ ಸಮಾಜ ಪ್ರಯೋಗವು ಒಂದಿಷ್ಟಾದರೂ ಯಶಸ್ವಿಗೊಳಿಸುವುದೇನೋ!
ಶಿಶುವರಳಿ ಹರೆಯವಾಗಿ
ಮಕ್ಕಳ ಮನಸ್ಸು ಮತ್ತು ಅವರ ಒಟ್ಟಾರೆ ಇರುವಿಕೆಯೇ ಬಹಳ ಸೂಕ್ಷ್ಮ ಮತ್ತು ಶಕ್ತಿಶಾಲಿಯಾದದ್ದು. ಪೋಷಕರಿಗೆ ಮತ್ತು ಶಿಕ್ಷಕರಿಗೆ ಮಕ್ಕಳ ಮನಸಿನ ಸೂಕ್ಷ್ಮತೆಯ ಮತ್ತು ಶಕ್ತಿಯ ಅರಿವಿದ್ದರೆ ಎಷ್ಟೋ ಅನಾಹುತಗಳನ್ನು ತಡೆಗಟ್ಟಬಹುದು. ಮಗುವಿನ ವ್ಯಕ್ತಿತ್ವದ ವಿಕಾಸಕ್ಕೆ ಮಹತ್ವಪೂರ್ಣವಾದ ಕಾಣ್ಕೆಗಳನ್ನು ಕೊಡಬಹುದು.
ಪೋಷಕರ ಮತ್ತು ಶಿಕ್ಷಕರ ತಪ್ಪು ನಿರ್ವಹಣೆಯಿಂದಾಗಿ ಮಕ್ಕಳು ಮುಂದೆ ವಯಸ್ಕರಾದಾಗ ಎಷ್ಟೋ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲೂ ಪೋಷಕರು ನಮ್ಮ ಮಗುವನ್ನು ಬೆಳೆಸುವಲ್ಲಿ ನಾವೆಲ್ಲಿ ಎಡವಿದ್ದೇವೆ ಎಂದು ತಿಳಿಯದೇ ತಳಮಳಿಸುವಂತಾಗುತ್ತದೆ.
ಮೊಳಕೆಯಲ್ಲಿಯೇ ಬೆಳೆಯುವ ಪೈರಿನ ಜೋಪಾನ ಮಾಡುವ ಜಾಗೃತಿ ನಮ್ಮ ಪೋಷಕರಿಗೆ ಬೇಕಿದೆ. ಮಕ್ಕಳ ಪೋಷಣೆ ಮಕ್ಕಳಾಟವಲ್ಲ. ಇಂದಿನ ಪುಟ್ಟ ಮತ್ತು ಅಸಹಾಯಕ ಮುದ್ದು ಮಕ್ಕಳು ನಮ್ಮ ಕುಟುಂಬ, ಸಮಾಜ ಮತ್ತು ರಾಷ್ಟ್ರ; ಈ ಎಲ್ಲದರ ಬಹುಮುಖ್ಯವಾದ ಭಾಗವಾಗಿರುತ್ತಾರೆ. ಯಾವುದೇ ವಯಸ್ಕರ ಸಾಧನೆ, ವೇದನೆ, ಸಂವೇದನೆಗಳ ಮೂಲ ಅವರ ಬಾಲ್ಯದಲ್ಲಿ ಪಡೆದ ಅನುಭವಗಳು, ಗ್ರಹಿಕೆಗಳು, ಪ್ರಭಾವಗಳಲ್ಲಿರುತ್ತವೆ.
ಅತ್ಲಾಗೆ ಮಕ್ಕಳೂ ಅಲ್ಲ, ಇತ್ಲಾಗೆ ದೊಡ್ಡವರೂ ಅಲ್ಲ
ಮಗುತನ ಜತನದ ಬಾಧ್ಯತೆ ಮಕ್ಕಳು ಬೆಳೆದಂತೆ ಅವರು ಹದಿಹರೆಯಕ್ಕೆ ಬಂದಾಗಲೂ ಮುಂದುವರೆದಿರುತ್ತದೆ. ಈಗ ಅವರಲ್ಲಿ ದೈಹಿಕ, ಮಾನಸಿಕ ಮತ್ತು ಹಾರ್ಮೋನುಗಳ ಬದಲಾವಣೆಯೂ ಆಗಿದ್ದು, ಬಾಲ್ಯದಲ್ಲಿ ಕಾಣದಿದ್ದ ಎಷ್ಟೋ ವಿಷಯಗಳು ಹದಿಹರೆಯದಲ್ಲಿ ತೋರುತ್ತಾರೆ. ಎಷ್ಟೋ ಮಾನಸಿಕ ಸಮಸ್ಯೆಗಳು ಬಾಲ್ಯದಲ್ಲೇ ಇದ್ದರೂ ಕೂಡ ಮಗುತನದ ಮಿತಿಯಲ್ಲಿ ಅದರ ಸ್ವರೂಪವು ಎಷ್ಟೋ ಬಾರಿ ಹೊರನೋಟದಲ್ಲಿ ಗುರುತಿಸಲಾರದಷ್ಟು ಸೂಕ್ಷ್ಮವಾಗಿರುತ್ತವೆ. ಹಿಂದೆಂದಿಗಿಂತಲೂ ಅವರಿಗೆ ಆಪ್ತತೆ ಮತ್ತು ಮುಕ್ತತೆಯ ಅವಶ್ಯಕತೆ ಇರುತ್ತದೆ.
ಹದಿಹರೆಯದವರ ಸಮಸ್ಯೆ ಎಂದರೆ ಅವರು ಯೌವನಾವಸ್ಥೆಗೆ ಸಂಪೂರ್ಣ ಪ್ರಬುದ್ಧರಾಗಿಯೂ ಇರುವುದಿಲ್ಲ, ಮಕ್ಕಳಾಗಿಯೂ ಉಳಿದಿರುವುದಿಲ್ಲ. ಸಣ್ಣವರೂ ಅಲ್ಲದ, ದೊಡ್ಡವರೂ ಅಲ್ಲದ ಶಾರೀರಿಕ ಸ್ಥಿತಿ ಮಾತ್ರವಲ್ಲದೇ ಮಾನಸಿಕ ಸ್ಥಿತಿಗಳನ್ನೂ ಕೂಡಾ ಹಾಗೆಯೇ ಹದವಾಗಿ ಮತ್ತು ಎಚ್ಚರಿಕೆಯಿಂದ ನಿಭಾಯಿಸಬೇಕಾಗುತ್ತದೆ.
ಹೊಸ ಕನಸುಗಳು, ಹೊಸ ಯೋಜನೆಗಳು ಮತ್ತು ಹೊಸ ಸಹವಾಸಗಳು ಅವರ ಎಷ್ಟೋ ಹಳೆಯ ಆಸೆಗಳನ್ನು ಅಥವಾ ಸುಪ್ತ ಬಯಕೆಗಳನ್ನು ನೆರವೇರಿಸಿಕೊಳ್ಳುವ ಸಾಧ್ಯತೆಗಳನ್ನು ಹುಡುಕಿಕೊಳ್ಳುವ ವಯಸ್ಸಿನಲ್ಲಿ ಕುಟುಂಬದವರು ಮತ್ತು ಸಮಾಜದ ಇತರ ಹಿರಿಯ ಸದಸ್ಯರು ಬಹಳ ಎಚ್ಚರಿಕೆಯಿಂದಲೂ ಮತ್ತು ಆಪ್ತವಾಗಿಯೂ ವರ್ತಿಸುವ ಅಗತ್ಯವಿರುತ್ತದೆ.
ಅವರೊಂದಿಗೆ ವರ್ತಿಸುವಾಗ, ಅವರತನದಲ್ಲಿ ಇಣುಕುವ ದೊಡ್ಡತನವನ್ನು ಮನ್ನಿಸುತ್ತಲೇ ಅವರು ಚಿಕ್ಕವರು ಎಂಬ ಅರಿವು ಇರಬೇಕು. ಹಾಗಾಗಿ ಅವರ ಕ್ರಿಯೆಗೆ ಪ್ರತಿಕ್ರಿಯೆ ನೀಡುವ ವಿಷಯದಲ್ಲಿ, ಅವರ ಹೊಸ ವರ್ತನೆಗೆ ನಮ್ಮ ಪ್ರತಿವರ್ತನೆಗಳನ್ನು ತೋರುವ ವಿಷಯದಲ್ಲಿ ಸಮತೋಲಿತ ಮನಸ್ಥಿತಿ ಹಿರಿಯರಿಗಿರಬೇಕು.
ಮಕ್ಕಳಾಗಿದ್ದಾಗ ಮುದ್ದಿಸುವ ಎಷ್ಟೋ ಹಿರಿಯರು ಅವರು ದೊಡ್ಡವರಾಗುತ್ತಾ ಬಂದಂತೆ ಮುದ್ದಿಸುವುದನ್ನು, ಅಪ್ಪುವುದನ್ನು, ಚುಂಬಿಸುವುದನ್ನು ನಿಲ್ಲಿಸಿಬಿಡುತ್ತಾರೆ.ಈಗಲೂ ನೀನೇನೂ ಮಗುವಾ ಮುದ್ದು ಮಾಡಲು? ಎಂಬ ಮಾತವರದು. ಆದರೆ ಮುದ್ದು ಮಾಡುವುದು ಮಕ್ಕಳಿಗೆ ಮಾತ್ರವೇ ಎಂಬ ಮಿಥ್ ಅನ್ನು ಸೃಷ್ಟಿಸಿದ್ದು ಯಾರೋ ಗೊತ್ತಿಲ್ಲ. ಮುದ್ದು ಮಾಡುವುದು, ಲಲ್ಲೆಗರೆಯುವುದು ಮನುಷ್ಯನಿಗೆ ಆಪ್ತತೆಯನ್ನು ನೀಡುವುದಲ್ಲದೇ ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಭದ್ರತೆಯನ್ನು ಒದಗಿಸುತ್ತದೆ. ಅದು ಹದಿಹರೆಯದ ಮಕ್ಕಳಿಗೆ ಖಂಡಿತ ಬೇಕು.
ಯಾರೂ ಹುಟ್ಟಾ ಅಪರಾಧಿಗಳಲ್ಲ
ವಯಸ್ಕರ ವರ್ತನೆಗಳ ಸಮಸ್ಯೆ, ವೈವಾಹಿಕ ಜೀವನದಲ್ಲಿ ಕಾಣುವಂತಹ ಸಮಸ್ಯೆ, ಸಂಬಂಧಗಳಲ್ಲಿ ತೊಡಕುಗಳು, ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು, ಭ್ರಷ್ಟಾಚಾರ, ಕೊಲೆ, ಸುಲಿಗೆ ಮತ್ತು ಅತ್ಯಾಚಾರಗಳಂತಹ ಅಪರಾಧಗಳು, ಸಮಾಜ ವಿದ್ರೋಹಿ ಚಟುವಟಿಕೆಗಳು, ಗುಂಪು ಘರ್ಷಣೆ, ಭೂಗತದ ಪಾತಕ ಕೃತ್ಯಗಳು, ವಿಕೃತ ಮತ್ತು ವಿಲಕ್ಷಣ ವರ್ತನೆಗಳು; ಇಂತವೆಲ್ಲಾ ಒಮ್ಮಿಂದೊಮ್ಮೆಲೆ ತಲೆದೋರುವುದಲ್ಲ. ಬಾಲ್ಯದಲ್ಲಿ ಗುರುತಿಸದೇ ಹೋದಂತಹ ಶಿಶುಮನದ ಮಹಾಮಾರಿಗಳು ವಯಸ್ಕರಾದಾಗ ತಮ್ಮ ರುದ್ರ ಪ್ರತಾಪವನ್ನು ತೋರುವಂತಹುದು.
ಎಳೆವಯದಲ್ಲೇ ಮಾನಸಿಕ ಸಮಸ್ಯೆಗಳ ಮೂಲವನ್ನು ಗುರುತಿಸಲು ಸಾಧ್ಯ. ಪೋಷಕರು ಮತ್ತು ಶಿಕ್ಷಕರು ಜಾಗೃತರಾದರೆ ನಾಳಿನ ಎಷ್ಟೋ ಸಮಸ್ಯೆಗಳನ್ನು ಇಂದಿಗೇ ಕೊನೆಗಾಣಿಸಬಹುದು. ಮಕ್ಕಳು ಮುಗ್ಧರು ಹಟ ಮಾಡುತ್ತಾರೆ, ಸುಳ್ಳು ಹೇಳುತ್ತಾರೆ, ಹೈಪರ್ ಆ್ಯಕ್ಟೀವ್ ಇದ್ದಾರೆ, ಹಿಡಿಯಲಾಗುವುದಿಲ್ಲ; ಆದರೆ ದೊಡ್ಡವರಾಗುತ್ತಾ ಸರಿ ಹೋಗುತ್ತಾರೆ ಎಂಬುದು ಭ್ರಮೆ. ಗಿಡವಾಗಿ ಬಗ್ಗದ್ದು ಮರವಾದಾಗ ಬಗ್ಗದು. ಮಾನಸಿಕ ಸಮಸ್ಯೆಗಳನ್ನು ಗುರುತಿಸಬೇಕು. ಅದರಿಂದ ಮಕ್ಕಳನ್ನು ಪಾರು ಮಾಡಬೇಕು. ಅವರದನ್ನು ಗುರುತಿಸುವಾಗ ನಮ್ಮದೂ ನಮಗೆ ಗುರುತು ಹತ್ತುತ್ತದೆ. ಹೂವೂ ನಾರೂ ಎರಡೂ ಸ್ವರ್ಗ ಕಾಣಲಿ.
ಭೂತಬಾಧೆ ಇರದ ಮಕ್ಕಳು
ಶಿಶುವೆಂಬ ಚಿಗುರುತ್ತಿರುವ ಸಸಿಗೆ ಭೂತದ ಬಾಧೆಯಿಲ್ಲ ಭವಿಷ್ಯದ ಭ್ರಮೆಯಿರುವುದಿಲ್ಲ. ಅದು ಸದಾ ಹಿತವನ್ನು ಮತ್ತು ಮುದವನ್ನು ಬಯಸುತ್ತಿರುತ್ತದೆ. ತನಗೆ ದೊರಕುವ ಆಪ್ತತೆ ಮತ್ತು ಸಂತೋಷದ ಆಧಾರದಲ್ಲಿ ತಾನಿರುವ ಪರಿಸರವನ್ನು ಮತ್ತು ತನ್ನೊಡನೆ ಇರುವ ಜನರನ್ನು ಅಳೆಯುತ್ತದೆ. ಸಾಮಾನ್ಯವಾಗಿ ಅದರ ಮನಸ್ಸಿನಲ್ಲಿ ಖಿನ್ನತೆಗಳಿರುವುದಿಲ್ಲ, ಹೃದಯದಲ್ಲಿ ಭಾರವಿರುವುದಿಲ್ಲ. ಹಾಗಾಗಿ ಅದು ಹಗುರ ಹಾಗೂ ಮುಕ್ತ. ಅದರ ಮನಸ್ಸನ್ನು ಖಿನ್ನತೆಗೆ ದೂಡದೇ, ಹೃದಯಕ್ಕೆ ಭಾರವೆನಿಸುವಂತೆ ಮಾಡದೇ ಹಿರಿಯರು ಮಗುವಿರುವ ವಾತಾವರಣವನ್ನು ರೂಪಿಸಬೇಕು.
ಆ ವಾತಾವರಣದಲ್ಲಿ ಅವರು ವಿಹರಿಸಬೇಕು. ತಾವು ತಮ್ಮ ವಿಚಾರ, ಧೋರಣೆ, ದೃಷ್ಟಿ, ನಿರೀಕ್ಷೆಗಳನ್ನು ಅವರ ಮೇಲೆ ಹೇರಿ ಅವರ ಮನಸ್ಸನ್ನು, ಹೃದಯವನ್ನು ಭಾರಗೊಳಿಸದಿರುವಂತಹ ಎಚ್ಚರಿಕೆಯನ್ನು ಹಿರಿಯರಾದವರು ವಹಿಸಲೇ ಬೇಕು. ಶಿಶುವು ಎಲ್ಲೆಲ್ಲಿ ಇರುವುದೋ ಅಲ್ಲೆಲ್ಲಾ ಅದು ವಿಹರಿಸುವಂತಾದರೆ ಆ ವಾತಾವರಣದಲ್ಲಿರುವ ಹಿರಿಯಲೆಲ್ಲರೂ ತಮ್ಮ ಜೈವಿಕ ಮತ್ತು ಭಾವನಾತ್ಮಕ ಚೈತನ್ಯವನ್ನು ಪಡೆದುಕೊಳ್ಳುವರು. ಅವರ ಮಾನಸಿಕ ಆರೋಗ್ಯವು ವೃದ್ಧಿಸುವುದು.
ಹೊರತಾಗಿ ಹಾರಾಡಬಹುದಾದ ಹಕ್ಕಿಯ ರೆಕ್ಕೆಗಳನ್ನು ಕಟ್ಟಿ ಬಂಧಿಸಿಟ್ಟರೆ ಅದರ ಬಂಧನದ ಆಕ್ರಂದನ ಇಡೀ ವಾತಾವರಣವನ್ನು ಸೂತಕದ ಗಾಢತೆಗೆ ಒಳಮಾಡುತ್ತದೆ. ಮಕ್ಕಳು ಕಲಿಯುವ ಎಡೆಯಲ್ಲಾಗಲಿ, ನಲಿಯುವ ಕಡೆಯಾಗಲಿ, ನುಡಿಯುವಲ್ಲಿ, ನಡೆಯುವಲ್ಲಿ, ಕಲಿಯುವಲ್ಲಿ, ಬೆಳೆಯುವಲ್ಲಿ ಅವರು ವಿಹರಿಸುವಂತಹ ಶಿಶುಸ್ನೇಹಿ ಪರಿಸರವಿದ್ದಲ್ಲಿ ವರ್ತಮಾನ ಮತ್ತು ಭವಿಷ್ಯದ ಸಂಗತಿಗಳು ಪ್ರಫುಲ್ಲವಾಗಿರುತ್ತವೆ.
ಮಕ್ಕಳಿರುವ ಮನೆ, ಕಲಿಯುವ ಶಾಲೆ, ಆಡುವ ಅಂಗಳ ಎಲ್ಲವೂ ಶಿಶುವಿಹಾರವಾಗಿರಬೇಕು. ಮಕ್ಕಳು ವಿಹರಿಸುವ ಯಾವುದೇ ಜಾಗಗಳಲ್ಲಿ ಹಿರಿಯರು ಒತ್ತಾಸೆ ನೀಡುವ ಅಂಶಗಳೇ ಹೊರತು, ಮಕ್ಕಳ ಇರುವಿಕೆಯೊಂದು ಹಿರಿಯರಿರುವ ಎಡೆಯ ಸಣ್ಣ ಪ್ರಮಾಣದ ಭಾಗವಲ್ಲ.
ಶಿಶುತನದ ಮುಗ್ಧತೆಯ ಸ್ವಭಾವ ವ್ಯಕ್ತಿಯ ಮನದ ಸರಳತೆಯಾದರೆ ಆತನೂ ಕೂಡಾ ಶಿಶುವಿನಂತೆ ಈ ಲೋಕದಲ್ಲಿ ನಲಿಯಬಲ್ಲ. ತನ್ನದೇ ಆದ ಮಾನಸ ಸರೋವರದಲ್ಲಿ ವಿಹರಿಸಬಲ್ಲ. ಶಿಶುವೊಂದು ನಿರ್ಭಯವಾಗಿ, ಸುಖವಾಗಿ, ಹಿತವಾಗಿ, ಆರೋಗ್ಯವಾಗಿ, ಆನಂದವಾಗಿ ವಿಹರಿಸುವಂತಹ ಎಡೆಯಾಗಲಿ ಈ ಜಗ. ಆ ಕಂದಮ್ಮಗಳ ಆನಂದದ ಕಾರುಣ್ಯದಲ್ಲಿ ಹಿರಿಯರೆಲ್ಲರಿಗೂ ನೆಮ್ಮದಿಯಾಗಲಿ. ಲೋಕವೆಲ್ಲವೂ ಹಿತವಾಗಿರಲಿ.
(ಮುಗಿಯಿತು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.




