ರಾಜಕೀಯ
“ವಿಶ್ವಗುರು ಕ್ಯೂಬಾ”ದಂತಾಗಬೇಕೇ ನಮ್ಮ ಭಾರತ ? ಜಗತ್ತನ್ನೇ ಕೊರೋನಾದಿಂದ ರಕ್ಷಿಸುತ್ತಿರೋ ಪುಟ್ಟ ಕಮ್ಯೂನಿಷ್ಟ್ ರಾಷ್ಟ್ರ !
- ನವೀನ್ ಸೂರಿಂಜೆ
ಕೊರೋನಾ ನಿಯಂತ್ರಣದಲ್ಲಿ ಭಾರತವೇ ವಿಶ್ವಗುರು ಎಂದ ಪ್ರಧಾನಿ ಮೋದಿ ಅನುಯಾಯಿಗಳು ಹೇಳುತ್ತಿರುವ ಸಂದರ್ಭದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ವಿಶ್ವದಲ್ಲೇ ಹತ್ತನೇ ಸ್ಥಾನವನ್ನು ಭಾರತ ಪಡೆದುಕೊಂಡಿದೆ. ಭಾರತ ವಿಶ್ವಗುರು ಆಗಬೇಕು ಎಂಬುದು ಎಲ್ಲರ ಆಸೆ. ಹಾಗಾಗಬೇಕಾದರೆ ಭಾರತ ಸರ್ಕಾರವನ್ನು ಜನಪರವಾಗಿ ಕೆಲಸ ಮಾಡಿಸಬೇಕೇ ಹೊರತು ನಾವೇ ವಿಶ್ವಗುರು ಎಂಬ ಕಲ್ಪನೆಯಲ್ಲಿ ಇರಕೂಡದು. ಸಧ್ಯದ ಕೊರೋನಾ ಎಮರ್ಜೆನ್ಸಿ ಟೈಮಲ್ಲಿ ಇಡೀ ವಿಶ್ವಕ್ಕೆ ಗುರುವಾಗಿರೋದು ಜಗತ್ತಿನ ಸಣ್ಣ ದೇಶಗಳಲ್ಲಿ ಒಂದಾದ ಕಮ್ಯೂನಿಷ್ಟ್ ರಾಷ್ಟ್ರ ಕ್ಯೂಬಾ.
ಕ್ಯೂಬಾ ಹೇಗೆ ಅರೋಗ್ಯದ ವಿಷಯದಲ್ಲಿ ವಿಶ್ವಗುರು ಎಂಬುದನ್ನು ಡಬ್ಲ್ಯುಎಚ್ಒ ವರದಿ ಹೇಳುತ್ತದೆ. ಅದನ್ನು ಓದಿದ ಬಳಿಕ ನಮ್ಮ ಭಾರತವೂ ಹೀಗೇ ಆಗಬೇಕು ಎಂದು ಬಯಸಿದರೆ ಭಾರತ ವಿಶ್ವಗುರು ಆಗಬೇಕು ಎಂದು ಆಸೆಪಡುವ ನಿಜವಾದ ದೇಶಪ್ರೇಮಿ ಆಗುತ್ತೀರಿ.
ಕ್ಯೂಬನ್ ಸರ್ಕಾರ ಕಳೆದ 40 ವರ್ಷಗಳಿಂದ ಯಾವುದೇ ರೋಗಗಳನ್ನು ತಡೆಗಟ್ಟುವ, ಪ್ರಾಥಮಿಕ ಆರೈಕೆಗೆ ಒತ್ತು ನೀಡುವ ಆರೋಗ್ಯ ಸೂಚ್ಯಂಕಗಳಿಗೆ ಹೆಚ್ಚಿನ ಮನ್ನಣೆ ನೀಡುತ್ತಿದೆ. ಕ್ಯೂಬಾದ ಆರೋಗ್ಯ ಸೂಚಕದ ಪ್ರಕಾರ ಜಗತ್ತಿನಲ್ಲಿಯೇ ಅತೀ ಕಡಿಮೆ ಸಾವಿನ ಪ್ರಮಾಣವನ್ನು ಕ್ಯೂಬಾ ಹೊಂದಿದೆ. ಕ್ಯೂಬಾದ ನಾಗರಿಕರು ಸರಾಸರಿ 77 ವರ್ಷಗಳ ಜೀವಿತಾವಧಿಯನ್ನು ಹೊಂದಿದ್ದು ಇದು ವಿಶ್ವದ ಅತಿ ಹೆಚ್ಚು ಜೀವಿತಾವಧಿಯಾಗಿದೆ. ಕಡಿಮೆ ವಯಸ್ಸಿನವರ ಸಾವಿನ ಪ್ರಮಾಣ ಇಲ್ಲವೆನ್ನುವಷ್ಟು ಕಡಿಮೆ.
ಕ್ಯೂಬಾದ ಜನರ ಆರೋಗ್ಯಕ್ಕೆ ಕಾರಣ, ಸಮುದಾಯ ಆಧಾರಿತ ಪಾಲಿಕ್ಲಿನಿಕ್ ವ್ಯವಸ್ಥೆ. ಪಾಲಿಕ್ಲೀನಿಕ್ ವ್ಯವಸ್ಥೆ ಎಂದರೆ 20 ರಿಂದ 40 ಕುಟುಂಬವಿದ್ದರೆ ಅಲ್ಲೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮಾದರಿಯ ಪಾಲಿಕ್ಲೀನಿಕ್ ವ್ಯವಸ್ಥೆ ಇರುತ್ತದೆ. ಈ ಕ್ಲೀನಿಕ್ ನಲ್ಲಿ ವೈದ್ಯರು, ದಾದಿಯರ ತಂಡವಿರುತ್ತದೆ. ಈ ವ್ಯವಸ್ಥೆಯೇ ಕ್ಯೂಬಾದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಪ್ರತೀ ಪಾಲಿಕ್ಲೀನಿಕ್ ಗಳು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಾಲೇಜ್ ಆಗಿ ಕೂಡಾ ಕಾರ್ಯನಿರ್ವಹಿಸುತ್ತದೆ. ಅಂದರೆ ನಮ್ಮ ಓಣಿಗೊಂದರಂತೆ ಸರಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಇದ್ದಂತೆ ! ಈ ಕಾರಣದಿಂದಾಗಿ ಕಳೆದ 40 ವರ್ಷಗಳಿಂದ ಕ್ಯೂಬಾದ ಪ್ರತೀ ಮನೆ ಮನೆಗಳಲ್ಲಿ ವೈದ್ಯರು ಇರುತ್ತಾರೆ.
1950 ರ ದಶಕದ ಆರಂಭದ ಕ್ಯೂಬನ್ ಕ್ರಾಂತಿಯ ನಂತರ ವೈದ್ಯಕೀಯ ಮತ್ತು ಶಿಕ್ಷಣ ಸೇವೆಗಳಿಗೆ ಸರ್ಕಾರ ಹೆಚ್ಚು ಒತ್ತು ನೀಡಿತ್ತು. ವೈದ್ಯರು ಗ್ರಾಮೀಣಭಾಗದಲ್ಲಿ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಕ್ರಮೇಣ ಪಾಲಿಕ್ಲೀನಿಕ್ ಗಳು ಮತ್ತು ವೈದ್ಯಕೀಯ ಶಿಕ್ಷಣ ಎಲ್ಲರಿಗೂ ಸುಲಭವಾಗಿ ಸಿಕ್ಕಾಗ ಈಗ ವೈದ್ಯರ ಕೊರತೆಯೇ ಇಲ್ಲ.
1978 ರ ಅಲ್ಮಾ-ಅಟಾ ಡಿಕ್ಲರೇಷನ್ ಗೆ ಮುಂಚಿತವಾಗಿ, 1970 ರ ದಶಕದಲ್ಲೇ ಕ್ಯೂಬಾದಾದ್ಯಂತ ಮಲ್ಟಿ-ಸ್ಪೆಷಾಲಿಟಿ ಪಾಲಿಕ್ಲಿನಿಕ್ಸ್ ಅನ್ನು ಸ್ಥಾಪಿಸಲಾಗಿತ್ತು. 1980 ರ ದಶಕದ ಮಧ್ಯಭಾಗದಲ್ಲಿ ಕುಟುಂಬಕ್ಕೊಬ್ಬರು ವೈದ್ಯರು ಮತ್ತು ದಾದಿಯರ ಯೋಜನೆಯ ಭಾಗವಾಗಿ ಪಾಲಿಕ್ಲಿನಿಕ್ ಗಳ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿದವು.
ಇವತ್ತು ಇಡೀ ವಿಶ್ವವೇ ಪುಟ್ಟ ಕಮ್ಯೂನಿಷ್ಟ್ ರಾಷ್ಟ್ರ ಕ್ಯೂಬಾದತ್ತಾ ನೋಡುತ್ತಿದೆ. 22 ರಾಷ್ಟ್ರಗಳಿಗೆ ಕ್ಯೂಬಾ ತನ್ನ ವೈದ್ಯರ ತಂಡವನ್ನು ಕಳಿಸಿದೆ. ಇಡೀ ವಿಶ್ವವನ್ನೇ ಕೊರೋನಾದಿಂದ ರಕ್ಷಿಸುವ ತಾಕತ್ತೇನಾದರೂ ಇದ್ದರೆ ಅದು ಕ್ಯೂಬಾ ಎಂಬ ಪುಟ್ಟ ರಾಷ್ಟ್ರಕ್ಕೆ ಮಾತ್ರ ಎಂಬುದನ್ನು ಜಗತ್ತು ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿಯೇ ಇಟಲಿ ಸರ್ಕಾರವು ನೋಬೆಲ್ ಶಾಂತಿ ಪ್ರಶಸ್ತಿ ಆಯ್ಕೆ ಸಮಿತಿಗೆ ಅಧಿಕೃತ ಪತ್ರ ಬರೆದು, ಕ್ಯೂಬಾ ವೈದ್ಯರ ತಂಡಕ್ಕೆ ನೋಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮನವಿ ಮಾಡಿದೆ. ಕ್ಯೂಬಾಗೆ ನೋಬೆಲ್ ಶಾಂತಿ ಪ್ರಶಸ್ತಿ ನೀಡಬೇಕು ಅನ್ನೋ ಇಟಲಿ ಮನವಿಗೆ ಹಲವು ಬಲಿಷ್ಟ ರಾಷ್ಟ್ರಗಳೂ ಧ್ವನಿಗೂಡಿಸಿದೆ. ಇಟಲಿ ಸರ್ಕಾರವು ಸಮಿತಿಗೆ ಬರೆದ ಪತ್ರ ಕ್ಯೂಬಾದ ಪರಿಣಾಮಕಾರಿ ಸೇವೆಯನ್ನು ಮತ್ತು ಶ್ರೇಷ್ಟತೆಯನ್ನು ಸಾರುತ್ತದೆ. ಅದರ ಯಥಾವತ್ತು ಇಲ್ಲಿದೆ.
ರಿಗೆ,
ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಗೆ,
ಈ ದಿನಗಳ ಜಾಗತಿಕ ಸಾಂಕ್ರಾಮಿಕ ತುರ್ತು ಸಮಸ್ಯೆಗಳ ಮಧ್ಯೆ, ಒಂದು ಸಣ್ಣ ದೇಶದಿಂದ ಬಂದ ಒಂದು ಗುಂಪು ಜಗತ್ತಿನಾದ್ಯಂತ ಜನರಿಗೆ ಭರವಸೆ ಮತ್ತು ಸ್ಫೂರ್ತಿ ನೀಡಿದೆ. ಈಗ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಫಿಡಲ್ ಕ್ಯಾಸ್ಟ್ರೋ ಅಂತರರಾಷ್ಟ್ರೀಯ ವೈದ್ಯಕೀಯ ಬ್ರಿಗೇಡ್ನ ಭಾಗವಾಗಿರುವ ಕ್ಯೂಬನ್ ವೈದ್ಯರು ಮತ್ತು ದಾದಿಯರು ಕೋವಿಡ್ -19 ವಿರುದ್ಧ 22 ದೇಶಗಳಲ್ಲಿ ಹೋರಾಡುತ್ತಿದ್ದಾರೆ.
ಕ್ಯೂಬಾದ ವೈದ್ಯರ ತಂಡದ ಐಕಮತ ಮತ್ತು ನಿಸ್ವಾರ್ಥ ಸೇವೆ ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲದವು. ತಮ್ಮ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಮೂಲಕ ಸಾವಿರಾರು ಜೀವಗಳನ್ನು ಉಳಿಸಿರುವ ಕ್ಯೂಬಾ ವೈದ್ಯರ ತಂಡಕ್ಕೆ ಈ ವರ್ಷದ ಶಾಂತಿ ನೊಬೆಲ್ ಪ್ರಶಸ್ತಿಯನ್ನು ನೀಡುವಂತೆ ನಾವು ನಿಮ್ಮನ್ನು ಕೋರುತ್ತೇವೆ.
ಈ ಹಿಂದೆ ಕ್ಯೂಬಾದಲ್ಲಿ ಹೆನ್ರಿ ರೀವ್ ಅಂತರರಾಷ್ಟ್ರೀಯ ಮೆಡಿಕಲ್ ಬ್ರಿಗೇಡ್ ಇದ್ದರೆ, 2005 ರಲ್ಲಿ ಕ್ಯೂಬನ್ ನಾಯಕ ಫಿಡೆಲ್ ಕ್ಯಾಸ್ಟ್ರೊ ಅವರ ಹೆಸರಿನ ಬ್ರಿಗೇಡ್ ಅನ್ನು ರಚಿಸಲಾಯಿತು. ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ರಚನೆಯಾದಾಗಿನಿಂದ, ಈಗ 7,400 ಸ್ವಯಂಪ್ರೇರಿತ ಆರೋಗ್ಯ ಕಾರ್ಯಕರ್ತರನ್ನು ಒಳಗೊಂಡ ಬ್ರಿಗೇಡ್ನ ವೈದ್ಯಕೀಯ ಸಿಬ್ಬಂದಿ ವಿಪತ್ತು ಪರಿಹಾರವನ್ನು ಒದಗಿಸುವ ಮುಂಚೂಣಿಯಲ್ಲಿದ್ದಾರೆ.
ಕೊರೋನಾಕ್ಕಿಂತ ಮೊದಲು, ಇದು ವಿಶ್ವದ ಅತ್ಯಂತ ಭೀಕರ ನೈಸರ್ಗಿಕ ವಿಪತ್ತುಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಹಾನಿಗೊಳಗಾದ 21 ದೇಶಗಳಲ್ಲಿ 3.5 ದಶಲಕ್ಷಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಿತ್ತು. ಫಿಡಲ್ ಕ್ಯಾಸ್ಟ್ರೋ ಬ್ರಿಗೇಡ್ನ ಮುಂಚೂಣಿಯ ತುರ್ತು ವೈದ್ಯಕೀಯ ಚಿಕಿತ್ಸೆಗಳ ನೇರ ಪರಿಣಾಮವಾಗಿ ಅಂದಾಜು 80,000 ಜೀವಗಳನ್ನು ಉಳಿಸಲಾಗಿದೆ.
ಕ್ಯೂಬಾದ ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ನ ಇನ್ನೊಂದು ಸಾಹಸವೆಂದರೆ 2014-2015ರಲ್ಲಿ ಬ್ರಿಗೇಡ್ 400 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರನ್ನು ಪಶ್ಚಿಮ ಆಫ್ರಿಕಾದ ಅಪಾಯಕಾರಿ ಎಬೋಲಾ ಸಾಂಕ್ರಾಮಿಕ ರೋಗವನ್ನು ಎದುರಿಸಲು ಕಳುಹಿಸಿತು. ಆರೋಗ್ಯ ಸೌಲಭ್ಯಗಳು ಮತ್ತು ರಸ್ತೆಗಳು ಮತ್ತು ಸಂವಹನಗಳಂತಹ ಮೂಲಸೌಕರ್ಯಗಳೇ ಇಲ್ಲದ ಪಶ್ವಿಮ ಆಫ್ರಿಕಾದ ದುರ್ಗಮ ಪ್ರದೇಶಗಳಲ್ಲಿ ಫಿಡಲ್ ಕ್ಯಾಸ್ಟ್ರೊ ಬ್ರಿಗೇಡ್ ಕೆಲಸ ಮಾಡುತ್ತದೆ.
ಈ ತಂಡವು ಸಿಯೆರಾ ಲಿಯೋನ್, ಗಿನಿಯಾ ಮತ್ತು ಲೈಬೀರಿಯಾದಲ್ಲಿ ಅತಿದೊಡ್ಡ ವೈದ್ಯಕೀಯ ಕಾರ್ಯಾಚರಣೆಯನ್ನು ರೂಪಿಸಿತು. ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ತಜ್ಞರ ಕಾರ್ಯವನ್ನು ಗುರುತಿಸಿದ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಅವರಿಗೆ 2017 ರಲ್ಲಿ ಸಾರ್ವಜನಿಕ ಆರೋಗ್ಯಕ್ಕಾಗಿ ನೀಡುವ ಪ್ರತಿಷ್ಠಿತ ಡಾ. ಲೀ ಜೊಂಗ್-ವೂಕ್ ಸ್ಮಾರಕ ಪ್ರಶಸ್ತಿಯನ್ನು ನೀಡಿತು.
ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ಮತ್ತು ಹೆನ್ರಿ ರೀವ್ ಬ್ರಿಗೇಡ್ ಕ್ಯೂಬಾದ ವೈದ್ಯಕೀಯ ವ್ಯವಸ್ಥೆಯ ಒಂದು ಭಾಗವಾಗಿದೆ. ಇದನ್ನು ಕ್ಯೂಬನ್ ಸಾರ್ವಜನಿಕ ಆರೋಗ್ಯ ಸಚಿವಾಲಯ ನಿರ್ವಹಿಸುತ್ತಿದೆ. ಆಶ್ಚರ್ಯವೆಂದರೆ ಇದು ವಿಶ್ವ ಆರೋಗ್ಯ ಸಂಸ್ಥೆಗಿಂತ ಹೆಚ್ಚಿನ ಆರೋಗ್ಯ ಕಾರ್ಯಕರ್ತರನ್ನು ವಿಶ್ವದಾದ್ಯಂತ ಕಳುಹಿಸಿದೆ.
ಈಗಾಗಲೇ ಜಗತ್ತು ವಿನಾಶಕಾರಿ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದೆ. ಕ್ಯೂಬಾದ ಹೆನ್ರಿ ರೀವ್ ಬ್ರಿಗೇಡ್ ಅಥವಾ ಫಿಡಲ್ ಕ್ಯಾಸ್ಟ್ರೋ ಬ್ರಿಗೇಡ್ ಸಾಂಕ್ರಾಮಿಕ ರೋಗ ಜಾಗತಿಕವಾಗಿ ಹರಡುವುದನ್ನು ತಡೆಯಲು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ನೋಡಿಕೊಳ್ಳುವ ಮಹತ್ತರ ಸೇವೆಯನ್ನು ನೀಡುತ್ತಿದೆ. ಜನರ ಜೀವ ಉಳಿಸಲು ಕ್ಯೂಬನ್ನರು ಇಟಲಿಯ ಅತ್ಯಂತ ಹೆಚ್ಚು ಕೊರೋನಾ ಸೋಂಕಿತ ಪ್ರದೇಶವಾದ ಲೊಂಬಾರ್ಡಿಗೆ ಹೋಗಿ ಕೆಲಸ ಮಾಡಿದ್ದನ್ನು ನೋಡಿ ಇಡೀ ವಿಶ್ವವೇ ನಿಬ್ಬೆರಗಾಗಿದೆ.
ಮೇ 1 ರ ವೇಳೆಗಾಗಲೇ, 22 ದೇಶಗಳಲ್ಲಿ ಸಾವಿರ ಸಾವಿರ ಸಂಖ್ಯೆಯ ಕ್ಯೂಬನ್ ವೈದ್ಯಕೀಯ ಸಿಬ್ಬಂದಿ COVID-19 ವಿರುದ್ಧ ಹೋರಾಡುತ್ತಿದ್ದಾರೆ. ಆಂಡೊರಾ, ಅಂಗೋಲಾ, ಆಂಟಿಗುವಾ ಮತ್ತು ಬಾರ್ಬುಡಾ, ಬಾರ್ಬಡೋಸ್, ಬೆಲೀಜ್, ಕೇಪ್ ವರ್ಡೆ, ಡೊಮಿನಿಕಾ, ಗ್ರೆನಡಾ, ಹೈಟಿ, ಹೊಂಡುರಾಸ್, ಇಟಲಿ, ಜಮೈಕಾ, ಮೆಕ್ಸಿಕೊ, ನಿಕರಾಗುವಾ, ಕತಾರ್, ಸೇಂಟ್ ಲೂಸಿಯಾ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ದಕ್ಷಿಣ ಆಫ್ರಿಕಾ, ಸುರಿನಾಮ್, ಟೋಗೊ ಮತ್ತು ವೆನೆಜುವೆಲಾ ದೇಶಗಳಲ್ಲಿ ಕ್ಯೂಬಾದ ವೈದ್ಯರು ಪ್ರಾಣದ ಹಂಗು ತೊರೆದು ಉಚಿತ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ.
ನೋಬೆಲ್ ಶಾಂತಿ ಪ್ರಶಸ್ತಿಯ 2020 ರ ನಾಮನಿರ್ದೇಶನ ಅವಧಿ ಮುಗಿದಿದೆ ಎಂದು ನಮಗೆ ತಿಳಿದಿದ್ದರೂ, ಜಾಗತಿಕ ತುರ್ತು ಪರಿಸ್ಥಿತಿಗೆ ಫಿಡಲ್ ಕ್ಯಾಸ್ಟ್ರೋ ಬ್ರಿಗೇಡ್/ ಹೆನ್ರಿ ರೀವ್ ಅಂತರರಾಷ್ಟ್ರೀಯ ವೈದ್ಯಕೀಯ ಬ್ರಿಗೇಡ್ ನೀಡಿದ ಅಸಾಧಾರಣ ಸೇವೆಯನ್ನು ನೋಡಿ, ಅವಧಿಯ ವಿನಾಯಿತಿ ನೀಡುವಂತೆ ನಾವು ನೊಬೆಲ್ ಸಮಿತಿಯನ್ನು ಕೇಳುತ್ತೇವೆ. ಜಗತ್ತನ್ನೇ ಸಾವಿನಂಚಿಗೆ ತಳ್ಳಿದ ಕೊರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕ್ಯೂಬಾ ಸರ್ಕಾರದ ನಿಸ್ವಾರ್ಥತೆ, ಧೈರ್ಯ ಮತ್ತು ಐಕ್ಯಮತ ಯಾರಿಗೂ ಸಾಟಿಯಿಲ್ಲದ್ದು. ಆದ್ದರಿಂದಲೇ ವಿಶ್ವದ ಅತ್ಯಂತ ಪ್ರತಿಷ್ಠಿತ ನೋಬೆಲ್ ಶಾಂತಿ ಪುರಸ್ಕಾರಕ್ಕೆ ಕ್ಯೂಬಾ ಅರ್ಹವಾಗಿದೆ.
ತಮ್ಮ ನಂಬುಗೆಯ,
ಈ ಪತ್ರವನ್ನು ಅನುವಾದಿಸಿದ ಉದ್ದೇಶ ಕ್ಯೂಬಾಗೆ ನೋಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂಬುದಕ್ಕೆ ಬೆಂಬಲ ನೀಡುವುದಕ್ಕಲ್ಲ. ಆ ಪುರಸ್ಕಾರವನ್ನೂ ಮೀರಿ ನಿಂತಿದೆ ಕ್ಯೂಬಾ. “ವಿಶ್ವಗುರು ಭಾರತ” ಎಂಬ ಪುಕ್ಕಟೆ ಶಬ್ದ ಚಾಲ್ತಿಯಲ್ಲಿರುವ ದಿನಗಳಲ್ಲಿ ವಿಶ್ವ ಗುರುವಾಗುವುದೆಂದರೆ ಹೀಗೆ ಎಂದು ತಿಳಿದುಕೊಳ್ಳಲು ಇಟಲಿ ಸರ್ಕಾರದ ಈ ಪತ್ರ ಉಪಯೋಗಕ್ಕೆ ಬರುತ್ತದೆ. ಇರಲಿ,
ಹೀಗೆ ವಿಶ್ವ ಆರೋಗ್ಯ ಸಂಸ್ಥೆಯನ್ನೇ ಮೀರಿಸುವ ರೀತಿಯಲ್ಲಿ ಕ್ಯೂಬಾ ಜಗತ್ತಿಗೆ ಆರೋಗ್ಯ ಸೇವೆ ನೀಡುತ್ತಿದೆ. ಬಡತನ ಮುಕ್ತ, ಹಸಿವು ಮುಕ್ತ, ರೋಗ ಮುಕ್ತ ಕ್ಯೂಬಾ ಎಂಬ ಪುಟ್ಟ ಕಮ್ಯೂನಿಷ್ಟ್ ರಾಷ್ಟ್ರ ಇಡೀ ಜಗತ್ತನ್ನೇ ತನ್ನಂತೆ ಸುಧಾರಿಸಲು ಪ್ರಯತ್ನ ಪಡುತ್ತಿದೆ. ಅದಕ್ಕೆ ಕಾರಣ ಅಲ್ಲಿನ ಶಿಕ್ಷಣ ಮತ್ತು ವೈದ್ಯಕೀಯ ವ್ಯವಸ್ಥೆ. ಈ ರೀತಿಯ ವ್ಯವಸ್ಥೆಯನ್ನು ಜಾರಿ ಮಾಡೋ ಸರಕಾರ ಭಾರತದಲ್ಲಿ ಬಾರದೇ ನಾವು ವಿಶ್ವಗುರುವಾಗಲು ಸಾಧ್ಯವಿಲ್ಲ. ಪುರಾಣದ ಕತೆಗಳನ್ನು ಮುಂದಿಟ್ಟುಕೊಂಡು ನಾವೇ ವಿಶ್ವಗುರು ಎಂದು ಸಮಾದಾನ ಪಟ್ಟುಕೊಳ್ಳದೇ ನಾವೂ ಕ್ಯೂಬಾವಾಗುವತ್ತಾ ಹೆಜ್ಜೆ ಇಡಬೇಕಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್ಲೈನ್ ವಂಚನೆಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಬಾಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದ ದಾವಣಗೆರೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ತಂತ್ರಜ್ಞಾನ ಆಧಾರಿತ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ‘ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್’ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿದ್ದ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಮಾಹಿತಿ ನೀಡಿ, ಈ ಯೋಜನೆಗಾಗಿ ಸುಮಾರು 20 ಕೋಟಿ ರೂಪಾಯಿಗಳ ಅನುದಾನವನ್ನು ಕೋರಲಾಗಿದ್ದು, ಪ್ರಾಥಮಿಕ ಹಂತವಾಗಿ ಕನಿಷ್ಠ 10 ಕೋಟಿ ರೂಪಾಯಿ ಬಿಡುಗಡೆಯಾದರೂ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು ಎಂದರು. ಈ ಯೋಜನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಐಟಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿವರಿಸಿದರು.
ಪ್ರಸ್ತುತ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೂ, ಮುಂಬರುವ ಹೊಸ ಶೈಕ್ಷಣಿಕ ವರ್ಷಕ್ಕೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನುಮುಂದೆ ಪ್ರತಿ ತಿಂಗಳು ವಸತಿ ನಿಲಯಗಳಲ್ಲಿ ಸಂಜೆ ವೇಳೆ ಅರ್ಧ ಗಂಟೆಗಳ ಕಾಲ ವಚನ ಸಾಹಿತ್ಯ, ದಲಿತ ಸಾಹಿತ್ಯ ಹಾಗೂ ಮಹಿಳಾ ಸಾಹಿತ್ಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಮುಂದಿನ ತಿಂಗಳಿಂದ ಮಾನ್ಯ ಸಂಸದರ ನೇತೃತ್ವದಲ್ಲಿ ಇದಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದ ಸಮಾಜ ಕಲ್ಯಾಣ, ಬಿ.ಸಿ.ಎಂ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ನಿಲಯಗಳಿಗೆ ಸ್ವಂತ ನಿವೇಶನಗಳನ್ನು ಮಂಜೂರು ಮಾಡಲಾಗಿದ್ದು, ಅನುದಾನ ಬಂದ ತಕ್ಷಣ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.
ವಸತಿ ನಿಲಯದ ಮಕ್ಕಳಿಗೆ ‘ಹೆಲ್ತ್ ಕಾರ್ಡ್’ ವಿತರಿಸಲಾಗುತ್ತಿದ್ದು, ಪ್ರತಿ ತಿಂಗಳು ಕಡ್ಡಾಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆ ವಿಶೇಷ ಶ್ರಮವಹಿಸುತ್ತಿದ್ದು, ಫಲಿತಾಂಶದಲ್ಲಿ ಹಿಂದುಳಿದಿರುವ ಶಾಲೆಗಳನ್ನು ಅಧಿಕಾರಿಗಳು ದತ್ತು ಪಡೆದುಕೊಂಡು ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಸಿಇಒ ಸ್ವತಃ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸುತ್ತಿದ್ದು, ಹಿಂದುಳಿದ ವಿದ್ಯಾರ್ಥಿಗಳಿಗೆ ಮುಂಜಾನೆ ಮತ್ತು ಸಂಜೆ ವಿಶೇಷ ತರಗತಿಗಳನ್ನು ಆಯೋಜಿಸುತ್ತಿದ್ದಾರೆ ಎಂದರು.
ಕಳೆದ ವರ್ಷ ಜಿಲ್ಲೆಯಲ್ಲಿ ಯಾವುದೇ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರಲಿಲ್ಲ. ಆದರೆ, ಕಳೆದ ತಿಂಗಳು ಶಾದಿಮಹಲ್ನಲ್ಲಿ ನಡೆಯುತ್ತಿದ್ದ ವಿವಾಹವೊಂದರ ಮೇಲೆ ದಾಳಿ ನಡೆಸಿ, ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹವನ್ನು ಯಶಸ್ವಿಯಾಗಿ ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು. ಇನ್ನು ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಿ.ಇ.ಒ ಅವರು ಜಿಲ್ಲೆಯ ಆಸ್ಪತ್ರೆಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ನರ್ಸಿಂಗ್ ಹೋಂಗಳಲ್ಲಿ ಶೇಕಡಾ 100 ರಷ್ಟು ಸಿಸೇರಿಯನ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ, ವೈದ್ಯರ ಸಭೆ ಕರೆದು ಕಡ್ಡಾಯವಾಗಿ ನೈಸರ್ಗಿಕ ಹೆರಿಗೆಗೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದ್ದು, ಪ್ರಸ್ತುತ ಇದು ರಾಜ್ಯದ ಸರಾಸರಿಗಿಂತ ಕಡಿಮೆ ಇರುವುದು ಜಿಲ್ಲೆಯ ದೊಡ್ಡ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಚರ್ಮರೋಗ ತಜ್ಞರು, ಸ್ತ್ರೀರೋಗ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗಳು ಖಾಲಿ ಇದ್ದು, ಲಭ್ಯವಿರುವ ಸಂಪನ್ಮೂಲಗಳಲ್ಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕೃಷಿ, ನೀರಾವರಿ ಹಾಗೂ ನಾಗರಿಕ ಸೌಲಭ್ಯಗಳು
ಮುಂಬರುವ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಅಡಿಕೆ-ತೆಂಗಿನ ಜೊತೆಗೆ ಹಣ್ಣು ಮತ್ತು ತರಕಾರಿ ಬೆಳೆಗಳಿಗೂ ಉತ್ತೇಜನ ನೀಡಲಾಗುತ್ತಿದ್ದು, ಹನಿ ನೀರಾವರಿ ಯೋಜನೆ ಸಬ್ಸಿಡಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ.
ಗ್ರಾಮೀಣ ಭಾಗದ ‘ಜಲಜೀವನ್ ಮಿಷನ್’ ಯೋಜನೆಯಡಿ ಪೈಪ್ಲೈನ್ ಮತ್ತು ನಲ್ಲಿ ಸಂಪರ್ಕ ಕಾರ್ಯಗಳು ಕೊನೆಯ ಹಂತದಲ್ಲಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ಇಂಜಿನಿಯರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನಗರದ ಪ್ರಮುಖ ರಸ್ತೆಗಳ ನವೀಕರಣ, ಸ್ಮಾರ್ಟ್ ರಸ್ತೆಗಳ ನಿರ್ಮಾಣ ಹಾಗೂ ಒಳಚರಂಡಿ ಆಧುನೀಕರಣ ಪ್ರಗತಿಯಲ್ಲಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸಲು ಸೂಚಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ದಾವಣಗೆರೆಯಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನೇಷನ್ ಮತ್ತು ಸ್ಟೆರಿಲೈಸೇಶನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು, ಈಗಾಗಲೇ ಶೇಕಡಾ 80 ರಷ್ಟು ಯಶಸ್ಸು ಸಾಧಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೇಖರ್ ಹೆಚ್.ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

