Connect with us

ರಾಜಕೀಯ

“ವಿಶ್ವಗುರು ಕ್ಯೂಬಾ”ದಂತಾಗಬೇಕೇ ನಮ್ಮ ಭಾರತ ? ಜಗತ್ತನ್ನೇ ಕೊರೋನಾದಿಂದ ರಕ್ಷಿಸುತ್ತಿರೋ ಪುಟ್ಟ ಕಮ್ಯೂನಿಷ್ಟ್ ರಾಷ್ಟ್ರ !

Published

on

  • ನವೀನ್ ಸೂರಿಂಜೆ

ಕೊರೋನಾ ನಿಯಂತ್ರಣದಲ್ಲಿ ಭಾರತವೇ ವಿಶ್ವಗುರು ಎಂದ ಪ್ರಧಾನಿ ಮೋದಿ ಅನುಯಾಯಿಗಳು ಹೇಳುತ್ತಿರುವ ಸಂದರ್ಭದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ವಿಶ್ವದಲ್ಲೇ ಹತ್ತನೇ ಸ್ಥಾನವನ್ನು ಭಾರತ ಪಡೆದುಕೊಂಡಿದೆ. ಭಾರತ ವಿಶ್ವಗುರು ಆಗಬೇಕು ಎಂಬುದು ಎಲ್ಲರ ಆಸೆ. ಹಾಗಾಗಬೇಕಾದರೆ ಭಾರತ ಸರ್ಕಾರವನ್ನು ಜನಪರವಾಗಿ ಕೆಲಸ ಮಾಡಿಸಬೇಕೇ ಹೊರತು ನಾವೇ ವಿಶ್ವಗುರು ಎಂಬ ಕಲ್ಪನೆಯಲ್ಲಿ ಇರಕೂಡದು. ಸಧ್ಯದ ಕೊರೋನಾ ಎಮರ್ಜೆನ್ಸಿ ಟೈಮಲ್ಲಿ ಇಡೀ ವಿಶ್ವಕ್ಕೆ ಗುರುವಾಗಿರೋದು ಜಗತ್ತಿನ ಸಣ್ಣ ದೇಶಗಳಲ್ಲಿ ಒಂದಾದ ಕಮ್ಯೂನಿಷ್ಟ್ ರಾಷ್ಟ್ರ ಕ್ಯೂಬಾ.

ಕ್ಯೂಬಾ ಹೇಗೆ ಅರೋಗ್ಯದ ವಿಷಯದಲ್ಲಿ ವಿಶ್ವಗುರು ಎಂಬುದನ್ನು ಡಬ್ಲ್ಯುಎಚ್ಒ ವರದಿ ಹೇಳುತ್ತದೆ. ಅದನ್ನು ಓದಿದ ಬಳಿಕ ನಮ್ಮ ಭಾರತವೂ ಹೀಗೇ ಆಗಬೇಕು ಎಂದು ಬಯಸಿದರೆ ಭಾರತ ವಿಶ್ವಗುರು ಆಗಬೇಕು ಎಂದು ಆಸೆಪಡುವ ನಿಜವಾದ ದೇಶಪ್ರೇಮಿ ಆಗುತ್ತೀರಿ.

ಕ್ಯೂಬನ್ ಸರ್ಕಾರ ಕಳೆದ 40 ವರ್ಷಗಳಿಂದ ಯಾವುದೇ ರೋಗಗಳನ್ನು ತಡೆಗಟ್ಟುವ, ಪ್ರಾಥಮಿಕ ಆರೈಕೆಗೆ ಒತ್ತು ನೀಡುವ ಆರೋಗ್ಯ ಸೂಚ್ಯಂಕಗಳಿಗೆ ಹೆಚ್ಚಿನ ಮನ್ನಣೆ ನೀಡುತ್ತಿದೆ. ಕ್ಯೂಬಾದ ಆರೋಗ್ಯ ಸೂಚಕದ ಪ್ರಕಾರ ಜಗತ್ತಿನಲ್ಲಿಯೇ ಅತೀ ಕಡಿಮೆ ಸಾವಿನ ಪ್ರಮಾಣವನ್ನು ಕ್ಯೂಬಾ ಹೊಂದಿದೆ. ಕ್ಯೂಬಾದ ನಾಗರಿಕರು ಸರಾಸರಿ 77 ವರ್ಷಗಳ ಜೀವಿತಾವಧಿಯನ್ನು ಹೊಂದಿದ್ದು ಇದು ವಿಶ್ವದ ಅತಿ ಹೆಚ್ಚು ಜೀವಿತಾವಧಿಯಾಗಿದೆ. ಕಡಿಮೆ ವಯಸ್ಸಿನವರ ಸಾವಿನ ಪ್ರಮಾಣ ಇಲ್ಲವೆನ್ನುವಷ್ಟು ಕಡಿಮೆ.‌

ಕ್ಯೂಬಾದ ಜನರ ಆರೋಗ್ಯಕ್ಕೆ ಕಾರಣ, ಸಮುದಾಯ ಆಧಾರಿತ ಪಾಲಿಕ್ಲಿನಿಕ್ ವ್ಯವಸ್ಥೆ. ಪಾಲಿಕ್ಲೀನಿಕ್ ವ್ಯವಸ್ಥೆ ಎಂದರೆ 20 ರಿಂದ 40 ಕುಟುಂಬವಿದ್ದರೆ ಅಲ್ಲೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮಾದರಿಯ ಪಾಲಿಕ್ಲೀನಿಕ್ ವ್ಯವಸ್ಥೆ ಇರುತ್ತದೆ. ಈ ಕ್ಲೀನಿಕ್ ನಲ್ಲಿ ವೈದ್ಯರು, ದಾದಿಯರ ತಂಡವಿರುತ್ತದೆ. ಈ ವ್ಯವಸ್ಥೆಯೇ ಕ್ಯೂಬಾದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಪ್ರತೀ ಪಾಲಿಕ್ಲೀನಿಕ್ ಗಳು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಾಲೇಜ್ ಆಗಿ ಕೂಡಾ ಕಾರ್ಯನಿರ್ವಹಿಸುತ್ತದೆ. ಅಂದರೆ ನಮ್ಮ ಓಣಿಗೊಂದರಂತೆ ಸರಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಇದ್ದಂತೆ ! ಈ ಕಾರಣದಿಂದಾಗಿ ಕಳೆದ 40 ವರ್ಷಗಳಿಂದ ಕ್ಯೂಬಾದ ಪ್ರತೀ ಮನೆ ಮನೆಗಳಲ್ಲಿ ವೈದ್ಯರು ಇರುತ್ತಾರೆ.

1950 ರ ದಶಕದ ಆರಂಭದ ಕ್ಯೂಬನ್ ಕ್ರಾಂತಿಯ ನಂತರ ವೈದ್ಯಕೀಯ ಮತ್ತು ಶಿಕ್ಷಣ ಸೇವೆಗಳಿಗೆ ಸರ್ಕಾರ ಹೆಚ್ಚು ಒತ್ತು ನೀಡಿತ್ತು. ವೈದ್ಯರು ಗ್ರಾಮೀಣಭಾಗದಲ್ಲಿ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಕ್ರಮೇಣ ಪಾಲಿಕ್ಲೀನಿಕ್ ಗಳು ಮತ್ತು ವೈದ್ಯಕೀಯ ಶಿಕ್ಷಣ ಎಲ್ಲರಿಗೂ ಸುಲಭವಾಗಿ ಸಿಕ್ಕಾಗ ಈಗ ವೈದ್ಯರ ಕೊರತೆಯೇ ಇಲ್ಲ.

1978 ರ ಅಲ್ಮಾ-ಅಟಾ ಡಿಕ್ಲರೇಷನ್ ಗೆ ಮುಂಚಿತವಾಗಿ, 1970 ರ ದಶಕದಲ್ಲೇ ಕ್ಯೂಬಾದಾದ್ಯಂತ ಮಲ್ಟಿ-ಸ್ಪೆಷಾಲಿಟಿ ಪಾಲಿಕ್ಲಿನಿಕ್ಸ್ ಅನ್ನು ಸ್ಥಾಪಿಸಲಾಗಿತ್ತು. 1980 ರ ದಶಕದ ಮಧ್ಯಭಾಗದಲ್ಲಿ ಕುಟುಂಬಕ್ಕೊಬ್ಬರು ವೈದ್ಯರು ಮತ್ತು ದಾದಿಯರ ಯೋಜನೆಯ ಭಾಗವಾಗಿ ಪಾಲಿಕ್ಲಿನಿಕ್ ಗಳ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿದವು.

ಇವತ್ತು ಇಡೀ ವಿಶ್ವವೇ ಪುಟ್ಟ ಕಮ್ಯೂನಿಷ್ಟ್ ರಾಷ್ಟ್ರ ಕ್ಯೂಬಾದತ್ತಾ ನೋಡುತ್ತಿದೆ. 22 ರಾಷ್ಟ್ರಗಳಿಗೆ ಕ್ಯೂಬಾ ತನ್ನ ವೈದ್ಯರ ತಂಡವನ್ನು ಕಳಿಸಿದೆ. ಇಡೀ ವಿಶ್ವವನ್ನೇ ಕೊರೋನಾದಿಂದ ರಕ್ಷಿಸುವ ತಾಕತ್ತೇನಾದರೂ ಇದ್ದರೆ ಅದು ಕ್ಯೂಬಾ ಎಂಬ ಪುಟ್ಟ ರಾಷ್ಟ್ರಕ್ಕೆ ಮಾತ್ರ ಎಂಬುದನ್ನು ಜಗತ್ತು ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿಯೇ ಇಟಲಿ ಸರ್ಕಾರವು ನೋಬೆಲ್ ಶಾಂತಿ ಪ್ರಶಸ್ತಿ ಆಯ್ಕೆ ಸಮಿತಿಗೆ ಅಧಿಕೃತ ಪತ್ರ ಬರೆದು, ಕ್ಯೂಬಾ ವೈದ್ಯರ ತಂಡಕ್ಕೆ ನೋಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮನವಿ ಮಾಡಿದೆ‌. ಕ್ಯೂಬಾಗೆ ನೋಬೆಲ್ ಶಾಂತಿ ಪ್ರಶಸ್ತಿ ನೀಡಬೇಕು ಅನ್ನೋ ಇಟಲಿ ಮನವಿಗೆ ಹಲವು ಬಲಿಷ್ಟ ರಾಷ್ಟ್ರಗಳೂ ಧ್ವನಿಗೂಡಿಸಿದೆ. ಇಟಲಿ ಸರ್ಕಾರವು ಸಮಿತಿಗೆ ಬರೆದ ಪತ್ರ ಕ್ಯೂಬಾದ ಪರಿಣಾಮಕಾರಿ ಸೇವೆಯನ್ನು ಮತ್ತು ಶ್ರೇಷ್ಟತೆಯನ್ನು ಸಾರುತ್ತದೆ. ಅದರ ಯಥಾವತ್ತು ಇಲ್ಲಿದೆ.

ರಿಗೆ,
ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಗೆ,

ಈ ದಿನಗಳ ಜಾಗತಿಕ ಸಾಂಕ್ರಾಮಿಕ ತುರ್ತು ಸಮಸ್ಯೆಗಳ ಮಧ್ಯೆ, ಒಂದು ಸಣ್ಣ ದೇಶದಿಂದ ಬಂದ ಒಂದು ಗುಂಪು ಜಗತ್ತಿನಾದ್ಯಂತ ಜನರಿಗೆ ಭರವಸೆ ಮತ್ತು ಸ್ಫೂರ್ತಿ ನೀಡಿದೆ. ಈಗ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಫಿಡಲ್ ಕ್ಯಾಸ್ಟ್ರೋ ಅಂತರರಾಷ್ಟ್ರೀಯ ವೈದ್ಯಕೀಯ ಬ್ರಿಗೇಡ್‌ನ ಭಾಗವಾಗಿರುವ ಕ್ಯೂಬನ್ ವೈದ್ಯರು ಮತ್ತು ದಾದಿಯರು ಕೋವಿಡ್ -19 ವಿರುದ್ಧ 22 ದೇಶಗಳಲ್ಲಿ ಹೋರಾಡುತ್ತಿದ್ದಾರೆ.

ಕ್ಯೂಬಾದ ವೈದ್ಯರ ತಂಡದ ಐಕಮತ ಮತ್ತು ನಿಸ್ವಾರ್ಥ ಸೇವೆ ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲದವು. ತಮ್ಮ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಮೂಲಕ ಸಾವಿರಾರು ಜೀವಗಳನ್ನು ಉಳಿಸಿರುವ ಕ್ಯೂಬಾ ವೈದ್ಯರ ತಂಡಕ್ಕೆ ಈ ವರ್ಷದ ಶಾಂತಿ ನೊಬೆಲ್ ಪ್ರಶಸ್ತಿಯನ್ನು ನೀಡುವಂತೆ ನಾವು ನಿಮ್ಮನ್ನು ಕೋರುತ್ತೇವೆ.

ಈ ಹಿಂದೆ ಕ್ಯೂಬಾದಲ್ಲಿ ಹೆನ್ರಿ ರೀವ್ ಅಂತರರಾಷ್ಟ್ರೀಯ ಮೆಡಿಕಲ್ ಬ್ರಿಗೇಡ್ ಇದ್ದರೆ, 2005 ರಲ್ಲಿ ಕ್ಯೂಬನ್ ನಾಯಕ ಫಿಡೆಲ್ ಕ್ಯಾಸ್ಟ್ರೊ ಅವರ ಹೆಸರಿನ ಬ್ರಿಗೇಡ್ ಅನ್ನು ರಚಿಸಲಾಯಿತು. ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ರಚನೆಯಾದಾಗಿನಿಂದ, ಈಗ 7,400 ಸ್ವಯಂಪ್ರೇರಿತ ಆರೋಗ್ಯ ಕಾರ್ಯಕರ್ತರನ್ನು ಒಳಗೊಂಡ ಬ್ರಿಗೇಡ್‌ನ ವೈದ್ಯಕೀಯ ಸಿಬ್ಬಂದಿ ವಿಪತ್ತು ಪರಿಹಾರವನ್ನು ಒದಗಿಸುವ ಮುಂಚೂಣಿಯಲ್ಲಿದ್ದಾರೆ.

ಕೊರೋನಾಕ್ಕಿಂತ ಮೊದಲು, ಇದು ವಿಶ್ವದ ಅತ್ಯಂತ ಭೀಕರ ನೈಸರ್ಗಿಕ ವಿಪತ್ತುಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಹಾನಿಗೊಳಗಾದ 21 ದೇಶಗಳಲ್ಲಿ 3.5 ದಶಲಕ್ಷಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಿತ್ತು. ಫಿಡಲ್ ಕ್ಯಾಸ್ಟ್ರೋ ಬ್ರಿಗೇಡ್‌ನ ಮುಂಚೂಣಿಯ ತುರ್ತು ವೈದ್ಯಕೀಯ ಚಿಕಿತ್ಸೆಗಳ ನೇರ ಪರಿಣಾಮವಾಗಿ ಅಂದಾಜು 80,000 ಜೀವಗಳನ್ನು ಉಳಿಸಲಾಗಿದೆ.

ಕ್ಯೂಬಾದ ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ನ ಇನ್ನೊಂದು ಸಾಹಸವೆಂದರೆ 2014-2015ರಲ್ಲಿ ಬ್ರಿಗೇಡ್ 400 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರನ್ನು ಪಶ್ಚಿಮ ಆಫ್ರಿಕಾದ ಅಪಾಯಕಾರಿ ಎಬೋಲಾ ಸಾಂಕ್ರಾಮಿಕ ರೋಗವನ್ನು ಎದುರಿಸಲು ಕಳುಹಿಸಿತು. ಆರೋಗ್ಯ ಸೌಲಭ್ಯಗಳು ಮತ್ತು ರಸ್ತೆಗಳು ಮತ್ತು ಸಂವಹನಗಳಂತಹ ಮೂಲಸೌಕರ್ಯಗಳೇ ಇಲ್ಲದ ಪಶ್ವಿಮ ಆಫ್ರಿಕಾದ ದುರ್ಗಮ ಪ್ರದೇಶಗಳಲ್ಲಿ ಫಿಡಲ್ ಕ್ಯಾಸ್ಟ್ರೊ ಬ್ರಿಗೇಡ್ ಕೆಲಸ ಮಾಡುತ್ತದೆ.

ಈ ತಂಡವು ಸಿಯೆರಾ ಲಿಯೋನ್, ಗಿನಿಯಾ ಮತ್ತು ಲೈಬೀರಿಯಾದಲ್ಲಿ ಅತಿದೊಡ್ಡ ವೈದ್ಯಕೀಯ ಕಾರ್ಯಾಚರಣೆಯನ್ನು ರೂಪಿಸಿತು. ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ತಜ್ಞರ ಕಾರ್ಯವನ್ನು ಗುರುತಿಸಿದ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅವರಿಗೆ 2017 ರಲ್ಲಿ ಸಾರ್ವಜನಿಕ ಆರೋಗ್ಯಕ್ಕಾಗಿ ನೀಡುವ ಪ್ರತಿಷ್ಠಿತ ಡಾ. ಲೀ ಜೊಂಗ್-ವೂಕ್ ಸ್ಮಾರಕ ಪ್ರಶಸ್ತಿಯನ್ನು ನೀಡಿತು.

ಫಿಡಲ್ ಕ್ಯಾಸ್ಟ್ರೋ ಮೆಡಿಕಲ್ ಬ್ರಿಗೇಡ್ ಮತ್ತು ಹೆನ್ರಿ ರೀವ್ ಬ್ರಿಗೇಡ್ ಕ್ಯೂಬಾದ ವೈದ್ಯಕೀಯ ವ್ಯವಸ್ಥೆಯ ಒಂದು ಭಾಗವಾಗಿದೆ. ಇದನ್ನು ಕ್ಯೂಬನ್ ಸಾರ್ವಜನಿಕ ಆರೋಗ್ಯ ಸಚಿವಾಲಯ ನಿರ್ವಹಿಸುತ್ತಿದೆ. ಆಶ್ಚರ್ಯವೆಂದರೆ ಇದು ವಿಶ್ವ ಆರೋಗ್ಯ ಸಂಸ್ಥೆಗಿಂತ ಹೆಚ್ಚಿನ ಆರೋಗ್ಯ ಕಾರ್ಯಕರ್ತರನ್ನು ವಿಶ್ವದಾದ್ಯಂತ ಕಳುಹಿಸಿದೆ.

ಈಗಾಗಲೇ ಜಗತ್ತು ವಿನಾಶಕಾರಿ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದೆ. ಕ್ಯೂಬಾದ ಹೆನ್ರಿ ರೀವ್ ಬ್ರಿಗೇಡ್ ಅಥವಾ ಫಿಡಲ್ ಕ್ಯಾಸ್ಟ್ರೋ ಬ್ರಿಗೇಡ್ ಸಾಂಕ್ರಾಮಿಕ ರೋಗ ಜಾಗತಿಕವಾಗಿ ಹರಡುವುದನ್ನು ತಡೆಯಲು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ನೋಡಿಕೊಳ್ಳುವ ಮಹತ್ತರ ಸೇವೆಯನ್ನು ನೀಡುತ್ತಿದೆ. ಜನರ ಜೀವ ಉಳಿಸಲು ಕ್ಯೂಬನ್ನರು ಇಟಲಿಯ ಅತ್ಯಂತ ಹೆಚ್ಚು ಕೊರೋನಾ ಸೋಂಕಿತ ಪ್ರದೇಶವಾದ ಲೊಂಬಾರ್ಡಿಗೆ ಹೋಗಿ ಕೆಲಸ ಮಾಡಿದ್ದನ್ನು ನೋಡಿ ಇಡೀ ವಿಶ್ವವೇ ನಿಬ್ಬೆರಗಾಗಿದೆ‌.

ಮೇ 1 ರ ವೇಳೆಗಾಗಲೇ, 22 ದೇಶಗಳಲ್ಲಿ ಸಾವಿರ ಸಾವಿರ ಸಂಖ್ಯೆಯ ಕ್ಯೂಬನ್ ವೈದ್ಯಕೀಯ ಸಿಬ್ಬಂದಿ COVID-19 ವಿರುದ್ಧ ಹೋರಾಡುತ್ತಿದ್ದಾರೆ. ಆಂಡೊರಾ, ಅಂಗೋಲಾ, ಆಂಟಿಗುವಾ ಮತ್ತು ಬಾರ್ಬುಡಾ, ಬಾರ್ಬಡೋಸ್, ಬೆಲೀಜ್, ಕೇಪ್ ವರ್ಡೆ, ಡೊಮಿನಿಕಾ, ಗ್ರೆನಡಾ, ಹೈಟಿ, ಹೊಂಡುರಾಸ್, ಇಟಲಿ, ಜಮೈಕಾ, ಮೆಕ್ಸಿಕೊ, ನಿಕರಾಗುವಾ, ಕತಾರ್, ಸೇಂಟ್ ಲೂಸಿಯಾ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ದಕ್ಷಿಣ ಆಫ್ರಿಕಾ, ಸುರಿನಾಮ್, ಟೋಗೊ ಮತ್ತು ವೆನೆಜುವೆಲಾ ದೇಶಗಳಲ್ಲಿ ಕ್ಯೂಬಾದ ವೈದ್ಯರು ಪ್ರಾಣದ ಹಂಗು ತೊರೆದು ಉಚಿತ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ.

ನೋಬೆಲ್ ಶಾಂತಿ ಪ್ರಶಸ್ತಿಯ 2020 ರ ನಾಮನಿರ್ದೇಶನ ಅವಧಿ ಮುಗಿದಿದೆ ಎಂದು ನಮಗೆ ತಿಳಿದಿದ್ದರೂ, ಜಾಗತಿಕ ತುರ್ತು ಪರಿಸ್ಥಿತಿಗೆ ಫಿಡಲ್ ಕ್ಯಾಸ್ಟ್ರೋ ಬ್ರಿಗೇಡ್/ ಹೆನ್ರಿ ರೀವ್ ಅಂತರರಾಷ್ಟ್ರೀಯ ವೈದ್ಯಕೀಯ ಬ್ರಿಗೇಡ್ ನೀಡಿದ ಅಸಾಧಾರಣ ಸೇವೆಯನ್ನು ನೋಡಿ, ಅವಧಿಯ ವಿನಾಯಿತಿ ನೀಡುವಂತೆ ನಾವು ನೊಬೆಲ್ ಸಮಿತಿಯನ್ನು ಕೇಳುತ್ತೇವೆ. ಜಗತ್ತನ್ನೇ ಸಾವಿನಂಚಿಗೆ ತಳ್ಳಿದ ಕೊರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕ್ಯೂಬಾ ಸರ್ಕಾರದ ನಿಸ್ವಾರ್ಥತೆ, ಧೈರ್ಯ ಮತ್ತು ಐಕ್ಯಮತ ಯಾರಿಗೂ ಸಾಟಿಯಿಲ್ಲದ್ದು. ಆದ್ದರಿಂದಲೇ ವಿಶ್ವದ ಅತ್ಯಂತ ಪ್ರತಿಷ್ಠಿತ ನೋಬೆಲ್ ಶಾಂತಿ ಪುರಸ್ಕಾರಕ್ಕೆ ಕ್ಯೂಬಾ ಅರ್ಹವಾಗಿದೆ.

ತಮ್ಮ ನಂಬುಗೆಯ,

ಈ ಪತ್ರವನ್ನು ಅನುವಾದಿಸಿದ ಉದ್ದೇಶ ಕ್ಯೂಬಾಗೆ ನೋಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂಬುದಕ್ಕೆ ಬೆಂಬಲ ನೀಡುವುದಕ್ಕಲ್ಲ. ಆ ಪುರಸ್ಕಾರವನ್ನೂ ಮೀರಿ ನಿಂತಿದೆ ಕ್ಯೂಬಾ. “ವಿಶ್ವಗುರು ಭಾರತ” ಎಂಬ ಪುಕ್ಕಟೆ ಶಬ್ದ ಚಾಲ್ತಿಯಲ್ಲಿರುವ ದಿನಗಳಲ್ಲಿ ವಿಶ್ವ ಗುರುವಾಗುವುದೆಂದರೆ ಹೀಗೆ ಎಂದು ತಿಳಿದುಕೊಳ್ಳಲು ಇಟಲಿ ಸರ್ಕಾರದ ಈ ಪತ್ರ ಉಪಯೋಗಕ್ಕೆ ಬರುತ್ತದೆ. ಇರಲಿ,

ಹೀಗೆ ವಿಶ್ವ ಆರೋಗ್ಯ ಸಂಸ್ಥೆಯನ್ನೇ ಮೀರಿಸುವ ರೀತಿಯಲ್ಲಿ ಕ್ಯೂಬಾ ಜಗತ್ತಿಗೆ ಆರೋಗ್ಯ ಸೇವೆ ನೀಡುತ್ತಿದೆ. ಬಡತನ ಮುಕ್ತ, ಹಸಿವು ಮುಕ್ತ, ರೋಗ ಮುಕ್ತ ಕ್ಯೂಬಾ ಎಂಬ ಪುಟ್ಟ ಕಮ್ಯೂನಿಷ್ಟ್ ರಾಷ್ಟ್ರ ಇಡೀ ಜಗತ್ತನ್ನೇ ತನ್ನಂತೆ ಸುಧಾರಿಸಲು ಪ್ರಯತ್ನ ಪಡುತ್ತಿದೆ‌. ಅದಕ್ಕೆ ಕಾರಣ ಅಲ್ಲಿನ ಶಿಕ್ಷಣ ಮತ್ತು ವೈದ್ಯಕೀಯ ವ್ಯವಸ್ಥೆ. ಈ ರೀತಿಯ ವ್ಯವಸ್ಥೆಯನ್ನು ಜಾರಿ ಮಾಡೋ ಸರಕಾರ ಭಾರತದಲ್ಲಿ ಬಾರದೇ ನಾವು ವಿಶ್ವಗುರುವಾಗಲು ಸಾಧ್ಯವಿಲ್ಲ. ಪುರಾಣದ ಕತೆಗಳನ್ನು ಮುಂದಿಟ್ಟುಕೊಂಡು ನಾವೇ ವಿಶ್ವಗುರು ಎಂದು ಸಮಾದಾನ ಪಟ್ಟುಕೊಳ್ಳದೇ ನಾವೂ ಕ್ಯೂಬಾವಾಗುವತ್ತಾ ಹೆಜ್ಜೆ ಇಡಬೇಕಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending